– ಹನುಮಂತ ಹಾಲಿಗೇರಿ
ಸಾಮಾಜಿಕ ಜಾಲತಾಣ ಪೆಸ್ಬುಕ್ನಲ್ಲಿ ಮಡೆಸ್ನಾನದ ಬಗ್ಗೆ ಬಹಳಷ್ಟು ಬಿಸಿ ಬಿಸಿಚರ್ಚೆಯಾಗುತ್ತಿದೆ. ಈ ಚರ್ಚೆಯಲ್ಲಿ ಸಧ್ಯ ಮೂರು ವಾದಗಳು ಚಾಲ್ತಿಯಲ್ಲಿವೆ. ಮೊದಲನೆಯದಾಗಿ `ಎಂಜೆಲೆಲೆಯ ಮೇಲೆ ಉರುಳೋದು ಬಿಡೋದು ಉರುಳುವವರ ನಂಬಿಕೆಗೆ ಸಂಬಂಧಪಟ್ಟದ್ದು. ಅದನ್ನು ಬೇಡ ಎನ್ನಲು ನಾವು ಯಾರು’ ಎಂದು ಪ್ರತ್ಯಕ್ಷವಾಗಿಯೆ ಮಡೆಸ್ನಾನವನ್ನು ಬೆಂಬಲಿಸುವ ವಿತಂಡವಾದಿಗಳು. ಎರಡನೆಯದಾಗಿ ‘ಮಡೆಸ್ನಾನ ಅನಾದಿ ಕಾಲದಿಂದ ನಡೆದುಕೊಂಡ ಆಚರಣೆ. ಇದು ನಂಬಿಕೆಗೆ ಸಂಬಂಧಪಟ್ಟದ್ದು. ದಿಡೀರ್ ಎಂದು ನಿಷೇಧಿಸಲಿಕ್ಕೆ ಆಗುವುದಿಲ್ಲ. ಕಾಲ ಉರುಳುವಿಕೆಯಲ್ಲಿ ಅದೆ ನಿಲ್ಲುತ್ತದೆ’ ಎಂದು ಅಪರೋಕ್ಷವಾಗಿ ಬೆಂಬಲಿಸುವವರು. ಇನ್ನು ಕೊನೆಯದಾಗಿ ಮಡೆಸ್ನಾನದಂತಹ ಅಸಹ್ಯ ಆಚರಣೆಯನ್ನು ತಕ್ಷಣವೇ ನಿಲ್ಲಿಸಲೇಬೇಕು ಎಂದು ಕಟುವಾಗಿ ವಿರೋಧಿಸುವವರು.
ಕೇವಲ ಇದು ಕೇವಲ ನಂಬಿಕೆಯ ವಿಷಯವಾಗಿದ್ದರೆ ಬೇರೆ ಮಾತು. ಆದರೆ ಇದು ಮೂಡ ನಂಬಿಕೆ. ಮೌಡ್ಯತೆಯ ಪರಮಾವಧಿ. ಮೇಲುವರ್ಗದವರು ಉಂಡ ಎಂಜೆಲೆಲೆಯ ಮೇಲೆ ಕೆಳವರ್ಗದವರು ಉರುಳಾಡಿದರೆ ಅವರ ಚರ್ಮವ್ಯಾದಿಗಳೆಲ್ಲವೂ ಕಡಿಮೆಯಾಗುತ್ತವೆ ಎಂದರೆ ಮೂಢನಂಬಿಕೆಯಲ್ಲದೆ ಮತ್ತೇನೂ? ಒಬ್ಬರು ಕುಡಿದ ಲೋಟದಿಂದ ಮತ್ತೊಬ್ಬರು ಕುಡಿಯುವುದು ಅಸಹ್ಯ ಎನಿಸುವ, ಅಚಾನಕ್ಕಾಗಿ ಎಂಜಲು ತಾಕಿದರೆ ಸೋಪು ಹಚ್ಚಿ ತೊಳೆದುಕೊಳ್ಳುವವರು ಹೆಚ್ಚಾಗಿರುವ ಈ ಕಾಲದಲ್ಲಿ ಉಂಡ ಎಂಜಲದ ಮೇಲೆ ಉರುಳಾಡುವ ಮನಸ್ಥಿತಿಯನ್ನು ದಲಿತರಲ್ಲಿ ಬಿತ್ತಿದವರು ಯಾರು ಎಂಬುದು ಮುಖ್ಯ ಪ್ರಶ್ನೆ. ಎಂಜಲೆಲೆಯಲ್ಲಿ ಔಷಧೀಯ ಗುಣಗಳಿದ್ದರೆ ಇಷ್ಟೊಂದು ಆಸ್ಪತ್ರೆಗಳೇಕೆ ಹುಟ್ಟಿಕೊಳ್ಳುತ್ತಿದ್ದವು. ಒಂದು ವೇಳೆ ಇದು ನಿಜವೇ ಆಗಿದ್ದರೇ ಉಣ್ಣುವವರು ಬ್ರಾಹ್ಮಣರೇ ಏಕೆಯಾಗಬೇಕು? ಒಂದೊಂದು ವರ್ಷ ಆಚರಣೆ ತಿರುಗುಮುರುಗಾಗಲಿ. ದಲಿತರು ಉಂಡ ಎಲೆಯ ಮೇಲೆ ಬ್ರಾಹ್ಮಣರು ಒಂದೊಂದು ವರ್ಷ ಉರುಳಾಡಲಿ!
ಇರಲಿ, ಇದೆಲ್ಲ ವಿತಂಡವಾದವನ್ನು ಪಕ್ಕಕ್ಕೆ ಇಟ್ಟು ಮೇಲಿನ ಎರಡು ವಾದಗಳ ಬಗ್ಗೆ ಚರ್ಚೆ ಮಾಡೋಣ. `ಮಡೆಸ್ನಾನ ನಂಬಿಕೆಗೆ ಸಂಬಂಧಪಟ್ಟದ್ದು ಉರುಳುವವರಿಗೆ ತಮ್ಮ ಖಾಯಿಲೆಗಳು ಕಡಿಮೆಯಾಗುತ್ತವೆ ಎಂಬ ಸಮಾಧಾನವಾಗುವಂತಿದ್ದರೆ ಉರುಳಲಿ ಬಿಡಿ’ ಎಂದು ವಾದಿಸುವವರು ಬಹಳಷ್ಟು ಜನರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರೆ ಆಗಿದ್ದಾರೆ. ಇದನ್ನು ನಾನು ಪರ್ವಾಗ್ರಹ ಪೀಡಿತನಾಗಿ ಹೇಳುತ್ತಿಲ್ಲ. ಪೇಸ್ಬುಕ್ ತೆಗೆದುನೋಡಿದರೆ ನಿಮಗೆ ಗೊತ್ತಾಗುತ್ತದೆ. ಮಡೆಸ್ನಾನದ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಮಠಾಧಿಪತಿಗಳು ಪೇಜಾವರ ಶ್ರೀಗಳು ಕೂಡ ಇದೆ ಮಾತನ್ನು ಹೇಳಿದ್ದಾರೆ. ಚೋರ್ ಗುರು ಚಂಡಾಲ ಶಿಷ್ಯಂದಿರು!
ಮೊದಲು ಸರಕಾರ ಇದನ್ನು ನಿಷೇಧಿಸಿ ಆದೇಶ ಹೊರಡಿಸಿತು. ಸರಕಾರ ಒಮ್ಮೆಲೆ ನಿಷೇದಿಸಿದ್ದಕ್ಕೆ ನಮ್ಮಂಥವರ ಮನಸ್ಸುಗಳು ನಿರಾಳಗೊಂಡಿದ್ದವು. ನಂತರ ಯಾವದೋ ಹುನ್ನಾರದಿಂದ, ಯಾರದೋ ಒತ್ತಡಕ್ಕೆ ಮಣಿದಂತೆ ನಾಟಕವಾಡಿದ ಸರಕಾರ ನಿಷೇಧವನ್ನು ಮತ್ತೆ ಹಿಂದಕ್ಕೆ ತೆಗೆದುಕೊಂಡಿದ್ದು ನಾಚಿಕೆಗೇಡು. “ಮಲೆಕುಡಿಯರು ನಿಷೇಧ ವಿರೋಧಿಸಿ ಪ್ರತಿಭಟನೆ ಮಾಡಿದ್ದರಿಂದ ಏಕಾಏಕಿ ಮಡೆಸ್ನಾನ ಆಚರಣೆ ನಿಲ್ಲಿಸುವುದು ಬೇಡ. ಈ ಬಗ್ಗೆ ಮುಂದೆ ಮಠದಲ್ಲಿ ಪ್ರಶ್ನೆ’ ಕಾರ್ಯಕ್ರಮದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು,” ಎಂದು ಸಚಿವ ವಿ.ಎಸ್.ಆಚಾರ್ಯ ಹೇಳಿಕೆ ನೀಡಿ ಜಾರಿಕೊಂಡರು. ಮಲೆಕುಡಿಯರ ಪ್ರತಿಭಟನೆಯಲ್ಲಿ ಮೇಲುವರ್ಗದವರ ಕೈವಾಡವಿರಲೇಬೇಕಲ್ಲವೇ. ಏಕೆಂದರೆ ಈ ಆಚರಣೆ ಆರಂಭದಲ್ಲಿ ಪ್ರಾರಂಭವಾಗಲಿಕ್ಕೆ ಪುರೋಹಿತಶಾಹಿಗಳ ಹುನ್ನಾರವೇ ಕಾರಣವಲ್ಲವೇ?
ಅದುದರಿಂದ ಹೀಗೆ ಅಮಾನುಷವಾದ, ಕೆಲವರಲ್ಲಿ ಅಸಹ್ಯ ಮೂಡಿಸುವ ಈ ಆಚರಣೆಯನ್ನು ಬೆಂಬಲಿಸುವ ಮೊದಲವಾದಿಗಳು ದಯವಿಟ್ಟು ತಮ್ಮ ವಾದವನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ನಮ್ಮ ಎಂಜಲದ ಮೇಲೆ ಮತ್ತೊಬ್ಬ ಮನುಷ್ಯ ಉರುಳಾಡುವುದು ಬೇಡ ಎಂಬ ಕನಿಷ್ಠ ಮಾನವೀಯತೆ ನಿಮಗಿದ್ದರೆ ದಯವಿಟ್ಟು ಸುಮ್ಮನಿದ್ದು ಬಿಡಿ. ಮೇಲುವರ್ಗದ ಪ್ರಜ್ಞಾವಂತರೆ ಮುಂದೆ ನಿಂತು ಈ ಆಚರಣೆಯನ್ನು ನಿಷೇಧಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ. ಇದು ನಂಬಿಕೆಗೆ ಸಂಬಂಧಪಟ್ಟದ್ದು ಎಂದು ಜಾರಿಕೊಂಡರೆ ಈ ಹಿಂದೆ ಆಚರಣೆಯಲ್ಲಿದ್ದ ಸತಿಸಹಗಮನ, ಬೆತ್ತಲೆ ಸೇವೆ, ದೇವದಾಸಿ ಪದ್ದತಿ ಮುಂತಾದವುಗಳೆಲ್ಲವೂ ಸಹ ನಂಬಿಕೆಗೆ ಸಂಬಂಧಪಟ್ಟದ್ದು ಎಂದು ಮತ್ತೆ ಆಚರಣೆಗೆ ತರಲು ಸಾಧ್ಯವೆ?
ಇನ್ನೂ ಎರಡನೆ ವಾದದವರು `ಕಾಲ ಪಕ್ವವಾಗಿಲ್ಲ’ ಎಂಬ ನೆಪದಿಂದ ಆಚರಣೆಯ ಪರವಾಗಿಯೆ ನಿಲ್ಲುತ್ತಾರೆ. ಇಂದಿನ ಆಧುನಿಕ ಯುಗದಲ್ಲಿಯೂ ಇಂಥ ಆಚರಣೆ ನಿಲ್ಲಿಸಲು ಕಾಲ ಪಕ್ವವಾಗಿಲ್ಲ ಎಂದು ಜಾರಿಕೊಳ್ಳುವುದು ಹೇಡಿತನ. ಎಂಜಲೆಲೆಯ ಮೇಲೆ ಉರುಳಾಡುವ ಮಲೆಕುಡಿಯರಿಗೆ ನಿಜವಾಗಲೂ ಇದು ಅಸಹ್ಯ ಎನಿಸದಿರಬಹುದು. ಆದರೆ ಇದು ಇಡಿ ಮನುಕುಲಕ್ಕೆ ಅನಾಗರಿಕತೆ, ಅಸಹ್ಯ ಮತ್ತು ಅವಮಾನ. ಮಲೆಕುಡಿಯರಂಥ ದಲಿತರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾದರೆ, ಅವರಲ್ಲಿ ಸ್ವಾಭಿಮಾನ ಮೂಡಿಸಿದರೆ ಖಂಡಿತ ಈ ಆಚರಣೆ ಮುಂದಿನ ವರ್ಷದಿಂದಲಾದರೂ ನಿಲ್ಲುತ್ತದೆ.
ಇದು ಬಿಟ್ಟು ಈ ಆಚರಣೆ ಧಾರ್ಮಿಕ ನಂಬಿಕೆ ಸಂಬಂಧಪಟ್ಟದ್ದು ಈ ಅನಾಗರೀಕ ಆಚರಣೆಗೆ ಅವಕಾಶ ಕಲ್ಪಿಸಿರುವ ಸರಕಾರ ತನ್ನ ಮನೋಇಂಗಿತವನ್ನು ಅನಾವರಣಗೊಳಿಸಿದೆ. ತಪ್ಪು ಎಂದು ಗೊತ್ತಾದ ಮೇಲೂ ನಿಷೇಧಿಸಬೇಕೋ ಬೇಡವೋ ಎಂದು ಅಷ್ಟಮಂಗಲ ಪ್ರಶ್ನೆ ಕೇಳುತ್ತೇವೆ ಎನ್ನುವುದು ಯಾವ ಸೀಮೆ ನ್ಯಾಯ? ಸಾಕ್ಷರರ ಜಿಲ್ಲೆ ಎನಿಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೆ ಮಡೆಸ್ನಾನದಂತಹ ಅನಾಗರಿಕ ಆಚರಣೆಗೆ ಮಣೆ ಹಾಕುತ್ತಿರುವುದು ಪ್ರಜ್ಞಾವಂತ ಸಾಕ್ಷರರಿಗೆ ಒಪ್ಪುವ ಮಾತಲ್ಲ.