Daily Archives: February 17, 2012

ಕೃಷ್ಣ ಪಾಲೇಮಾರ್ ಮತ್ತು ಮಂಗಳೂರಿನ ಪತ್ರಕರ್ತರು

– ಸದಾನಂದ ಕೋಟ್ಯಾನ್

ಮಂಗಳೂರಿನಲ್ಲಿ ಪತ್ರಿಕಾ ಭವನದ ಮೂರನೇ ಮಹಡಿ ಉದ್ಘಾಟನೆ ಆಗಿದೆ. ಕರಾವಳಿಯವರೇ ಆದ ಮುಖ್ಯಮಂತ್ರಿ ಸದಾನಂದ ಗೌಡರು ಭವನ ಉದ್ಘಾಟಿಸಿದ್ದಾರೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕೋದ್ಯಮ ರಾಜ್ಯಾಂಗಕ್ಕೆ ದಾಸನಾಗಿರುವುದಕ್ಕೆ ಇಡೀ ಉದ್ಘಾಟನಾ ಸಮಾರಂಭವೇ ಸಾಕ್ಷಿ ಎಂಬಂತೆ ಕಾರ್ಯಕ್ರಮ ನಡೆಯಿತು. ವೇದಿಕೆಯ ತುಂಬ ರಾಜಕಾರಣಿಗಳು. ಅವರ ಅಕ್ಕಪಕ್ಕದಲ್ಲಿ ರಾಜಕಾರಣಿಗಳು ನೀಡಿದ ಕೊಡುಗೆಯನ್ನು ಪ್ರಶಂಸಿಸುವ ಆಸ್ಥಾನ ಭಟರ ಪಾತ್ರಧಾರಿಗಳಾಗಿ ಪರಿವರ್ತನೆ ಹೊಂದಿದ ಪತ್ರಕರ್ತರು. ಇಡೀ ಸಮಾರಂಭ ಮಂಗಳೂರಿನಲ್ಲಿ ಮಾಧ್ಯಮ ಎತ್ತ ಸಾಗಿದೆ ಎಂಬುದಕ್ಕೆ ಕನ್ನಡಿ ಹಿಡಿಯುವಂತಿತ್ತು.

ಸೋರುತ್ತಿರುವ ಸ್ಥೈರ್ಯ, ರಾಜ್ಯಾಂಗ ಮತ್ತು ಕಾರ್ಯಾಂಗವನ್ನು ತರಾಟೆಗೆ ತೆಗೆದುಕೊಳ್ಳುವ, ವಿಮರ್ಶಿಸುವ ಸಾಮರ್ಥ್ಯ ಕಳೆದುಕೊಂಡ ಲೇಖನಿಗಳಿಗೆ ಪ್ರಸ್ತುತ ಅಗತ್ಯವಾಗಿ ಶಕ್ತಿ ತುಂಬಬೇಕಾಗಿದೆ. ಪತ್ರಿಕಾ ಭವನದಲ್ಲಿ ಅಪಾರ ಹಣವಿದೆ. ದೇಶದಲ್ಲಿ ಅಪಾರ ಸಾಧನೆಗಳನ್ನು ಮಾಡಿದ ಪತ್ರಕರ್ತರು ಇದ್ದಾರೆ. ಅವರ ಸ್ಫೂರ್ತಿಯ ಗೊಡವೆಗೆ ಹೋಗದ, ಲೋಕಲ್ ದಾಸ್ಯಕ್ಕೆ ಶರಣಾದ ಪತ್ರಕರ್ತರು ಭವನದ ನೆಪದಲ್ಲಿ ಮತ್ತಷ್ಟು ಕೆಳಗಿಳಿದರು. ಅದಕ್ಕೆ ಪಕ್ಕಾ ಸಾಕ್ಷಿ ಉದ್ಘಾಟನಾ ಆಹ್ವಾನ ಪತ್ರದಲ್ಲಿರುವ ಕಳಂಕಿತ ಶಾಸಕರೊಬ್ಬರ ಹೆಸರು.

ಹಾಗೆ ನೋಡಿದರೆ ಮಂಗಳೂರಿನ ಪತ್ರಕರ್ತ ಗೆಳೆಯರಿಗೆ ಈಗ ಕಡು ಕಷ್ಠದ ಕಾಲ. ಅವರನ್ನು ಕಷ್ಟದಿಂದ ಪಾರು ಮಾಡುವ ಕೃಷ್ಣಣ್ಣ ಅಧಿಕಾರ ಕಳೆದುಕೊಂಡಿದ್ದಾರೆ. ರಾಜ್ಯ ರಾಷ್ಟ್ರ ಮಟ್ಟದ ಪತ್ರಿಕೆಗಳು ವಿದ್ಯುನ್ಮಾನ ಮಾಧ್ಯಮಗಳು ಈ ನೀಲಿಚಿತ್ರದ ಪೊಲೀ ಹುಡುಗನ ಕೃಷ್ಣ ಲೀಲೆಗಳನ್ನು ವರದಿ ಮಾಡುತ್ತಾ ಛೀ ಥೂ ಎಂದು ಉಗಿಯುತ್ತಿದ್ದರೆ ಮಂಗಳೂರಿನ ಮಾಧ್ಯಮದ ಗೆಳೆಯರು ತಮ್ಮ ಪತ್ರಕರ್ತರ ಸಂಘದ ಮೂರನೇ ಮಹಡಿಯ ಸಭಾಂಗಣದ ಉದ್ಘಾಟಣೆಗೆ ಕೃಷ್ಣ ಲೀಲೆ ಬಹಿರಂಗಗೊಂಡ ಮರು ದಿವಸವೇ ಕಾರ್‍ಯಕಾರಿ ಸಮಿತಿಯ ಸಭೆ ಸೇರಿ ಆಹ್ವಾನಿಸಿದ್ದಾರೆ.

ಆಹ್ವಾನ ಪತ್ರಿಕೆಯಲ್ಲಿ ಬಹಳ ನೋವಿನಿಂದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಂದು ಕೃಷ್ಣ ಪಾಲೇಮಾರ್ ಹೆಸರಿನ ಕೆಳಗೆ ನಮೂದಿಸಿದ್ದಾರೆ. ನೀಲಿಚಿತ್ರ ಸರಬರಾಜುದಾರ ಎಂದು ಇಡೀ ರಾಜ್ಯ ಮತ್ತು ದೇಶದ ಜನತೆ ಟೀಕಿಸುತ್ತಿದ್ದರೆ ಮಂಗಳೂರಿನ ಕಾರ್‍ಯನಿರತ ಪತ್ರಕರ್ತರಿಗೆ ಕೃಷ್ಣ ಜೆ ಪಾಲೇಮಾರ್ “ಮುಖ್ಯ ಅತಿಥಿ”. ಅಷ್ಟು ಮಾತ್ರವಲ್ಲದೆ ತಾವು ಕೆಲಸ ಮಾಡುವ ಮಾಧ್ಯಮಗಳಲ್ಲಿ ತಮ್ಮ ಋಣ ತೀರಿಸುವ ಜವಾಬ್ದಾರಿಯನ್ನು ಹೊತ್ತುಕೊಂಡು ಕೃಷ್ಣಣ್ಣನಿಗೆ ಮೊಬೈಲ್ ಬಳಸಲೇ ಗೊತ್ತಿಲ್ಲ, ಯಾರೋ ಅಪಾಪೋಲಿಗಳು ಕಳುಹಿಸಿರುವ ಎಂಎಂಎಸ್ ಎಂದು ವೈಭವೀಕರಿಸಿ ಬರೆಯುವುದರ ಜೊತೆಗೆ ಕೃಷ್ಣಣ್ಣ ನೈತಿಕ ಹೊಣೆ ಹೊತ್ತು (ಹಿಂದೆ ರೈಲು ಅಪಘಾತವಾದಾಗ ಲಾಲ್ ಬಹುದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದಂತೆ) ರಾಜೀನಾಮೆ ನೀಡಿದ್ದಾರೆ ಎಂದು ಹುತಾತ್ಮ ಪಟ್ಟವನ್ನು ಕಟ್ಟಲು ಹೆಣಗಾಡಿ ನಗೆಪಾಟೀಲಿಗೀಡಾಗುತ್ತಿದ್ದಾರೆ.

ಹೀಗೆ ಮಂಗಳೂರು ಪತ್ರಕರ್ತರ ಕಾರುಬಾರು ಪಟ್ಟಿ ಮಾಡುವುದಾದರೆ :

  • ಇಡೀ ಕರ್ನಾಟಕ ರಾಜ್ಯದಲ್ಲಿ ಕೆಐಎಡಿಬಿ ಹಗರಣಗಳು ಹೊರಬೀಳುತ್ತಿದ್ದರೆ ಮಂಗಳೂರಿನ ಪತ್ರಕರ್ತರು ಕಿಂಚಿತ್ತೂ ತಲೆಕೆಡಿಸಿಕೊಳ್ಳಲಿಲ್ಲ.
  • ವರದಿಗಾರಿಕೆಯಲ್ಲಿ ಪ್ರಾಯೋಜಕರತ್ತಲೇ ನಿಷ್ಠೆ ಹೊರತು ಸ್ಥಳೀಯ ಸಮಸ್ಯೆಗಳತ್ತ ಗಮನ ಹರಿಸಿಲ್ಲ
  • ನೈತಿಕ ಪೊಲೀಸ್‌ಗಿರಿಗೆ ಸದಾ ಬೆಂಬಲಿಸುತ್ತಿದ್ದ ಮಾಧ್ಯಮ, ರಾಷ್ಟ್ರೀಯ ಮಾಧ್ಯಮಗಳು ಪ್ರಸಾರ ಆರಂಭಿಸಿದ ನಂತರವಷ್ಟೇ ಬಹಿರಂಗ ಬೆಂಬಲವನ್ನು ನಿಲ್ಲಿಸಿ, ನಿಜವಾದ ಸುದ್ದಿಯತ್ತ ಪ್ರಾಮುಖ್ಯತೆ ಕೊಟ್ಟರು.
  • ಬ್ರಹ್ಮಕಲಶ, ನಾಗಮಂಡಲಗಳ ಜಾಹೀರಾತಿಗೇ ಕಾಯುವ ಪತ್ರಿಕೆಗಳು ದೇವರ ಆರಾಧನೆಗಿಂತಲೂ ಜಾಹೀರಾತು ಆರಾಧನೆಗೇ ಒತ್ತು ಕೊಡುತ್ತಿರುವುದು ಇಂದಿಗೂ ವಾಸ್ತವ.

ಇನ್ನು  ಕೃಷ್ಣ ಜೆ. ಪಾಲೇಮಾರ್ ಕೃಪಾಪೋಷಿತ ಮಾಫಿಯಾಗಳ ವಿಚಾರ ಕೇಳಬೇಕೇ? ನಗರದಲ್ಲಿರುವ ಅಕ್ರಮ ಮಾಲ್ ಒಂದರ ಪಾಲುದಾರರೊಬ್ಬರಿಗೆ ಪಾಲೇಮಾರ್ ಪರವಾದ ಪ್ರತಿಭಟನೆ ಮಾಡಲು ಐಡಿಯಾ ಕೊಟ್ಟವರೂ ಪತ್ರಕರ್ತರು. ನಾವೇ ನಮ್ಮಷ್ಟಕ್ಕೆ ಬರೆದರೆ ಜನ ತಪ್ಪು ತಿಳಿದುಕೊಳ್ಳುತ್ತಾರೆ, ನಮ್ಮ ವರದಿಗೆ ಪೂರಕವಾಗಿ ನಿಮ್ಮ ದ್ವನಿಯೂ ಇದ್ದರೆ ಚೆನ್ನ ಎಂಬ ಅಭಿಪ್ರಾಯ ಪತ್ರಕರ್ತರದ್ದು. ಬಳ್ಳಾರಿಯಿಂದ ಗಣಿ ಮಂಗಳೂರು ಬಂದರು ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದ ಮಾಫಿಯಾದ ಹಿಂದೆ ಬಂದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಕೈ ಕೆಲಸ ಮಾಡಿತ್ತು. ಆದರೆ ಮಂಗಳೂರಿನ ಪತ್ರಕರ್ತರು ಈ ಬಗ್ಗೆ ವರದಿಗಳನ್ನು ಮಾಡಿದ್ದೇ ಇಲ್ಲ. ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರಾಜೀನಾಮೆಗೆ ಪಾಲೇಮಾರ್ ಕಾರಣರಾಗಿದ್ದ ಸಂಧರ್ಭ ಬೆಂಗಳೂರು ಮತ್ತು ಕಾರವಾರದಿಂದ ಪಾಲೇಮಾರ್ ವಿರುದ್ಧ ವರದಿಗಳು ಪ್ರಕಟಗೊಂಡವು. ಆದರೆ ಮಂಗಳೂರಿನ ಶಾಸಕ, ಸಚಿವರಾಗಿದ್ದ ಪಾಲೇಮಾರ್ ಬಗ್ಗೆ ಪತ್ರಕರ್ತರು ಆಸಕ್ತಿ ವಹಿಸಿ ಪ್ರಕರಣವನ್ನು ಫಾಲೋ ಮಾಡಲೇ ಇಲ್ಲ. ಕೆಐಎಡಿಬಿ ಹಗರಣ ರಾಜ್ಯಾಧ್ಯಂತ ಸುದ್ಧಿಯಾದಾಗ ಮಂಗಳೂರು ಕೆಐಎಡಿಬಿ ಹಗರಣಗಳ ಹೂರಣವನ್ನು ಕೆದಕಲು ಹೋಗಲೇ ಇಲ್ಲ. ಕೆಐಎಡಿಬಿ ಕಡತಗಳ ಯಾವುದೋ ಒಂದು ಮೂಲೆಯಲ್ಲಿ ಪಾಲೇಮಾರ್ ಹೆಸರು ಇರಲೇ ಬೇಕು ಎಂಬುದು ಕರಾವಳಿಯ ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಇರುವ ಸರಕಾರಿ ಜಮೀನುಗಳನ್ನು ಅತಿಕ್ರಮಿಸಿ ಫ್ಲ್ಯಾಟು, ಲೇಔಟ್, ಮಾಲ್, ಬಹುಮಹಡಿ ಕಟ್ಟಡಗಳ ನಿರ್ಮಾಣದ ಹಿಂದೆ ಪಾಲೇಮಾರ್ ಪಾಲುದಾರಿಕೆ ಇದೆ. ಪಾಲೇಮಾರ್ ಜಮೀನಿನಲ್ಲಿ ಪತ್ತೆಯಾದ ಅಕ್ರಮ ಮರಳು ಶೇಖರಣೆಗೆ ಜಿಲ್ಲಾಧಿಕಾರಿ ತಂಡ ದಾಳಿ ಮಾಡಿದಾಗಲೂ ಮಂಗಳೂರಿನ ಕೆಲವೊಂದು ಪತ್ರಿಕೆಗಳಿಗೆ ಅದು ಸುದ್ಧಿಯೇ ಆಗಿರಲಿಲ್ಲ. ಸಚಿವರೊಬ್ಬರ ವ್ಯವಹಾರಕ್ಕೆ ಅಧಿಕಾರಿಗಳು ತಂಡ ದಾಳಿ ಮಾಡಿ ಮರಳನ್ನು ವಶಪಡಿಸಿಕೊಳ್ಳುವುದು ಸುದ್ಧಿಯೇ ಅಲ್ಲ ಎಂಬುದು ಪಾಲೇಮರ್ ಮತ್ತು ಪತ್ರಕರ್ತರ ಮಧ್ಯದ ಸಂಬಂಧವನ್ನು ಎತ್ತಿ ತೋರಿಸುತ್ತದೆ.

ಸದನದಿಂದ ಮಾಧ್ಯಮಗಳನ್ನು ಹೊರಗಿಡುವುದು ಬುದ್ಧಿವಂತಿಕೆಯಲ್ಲ, ಬಡತನ…

– ಚಿದಂಬರ ಬೈಕಂಪಾಡಿ

ಪ್ರಜಾಪ್ರಭುತ್ವದ ಕಾವಲುಗಾರ ಮಾಧ್ಯಮ ಎನ್ನುವ ಮಾತು ನಿಜ ಎನ್ನುವುದನ್ನು ರಾಜಕಾರಣಿಗಳು ಸಾರ್ವಜನಿಕ ಭಾಷಣಗಳಲ್ಲಿ ಹೇಳಿದರೂ ಆಂತರಿಕವಾಗಿ ಅವರು ಹಾಗೆ ಯೋಚಿಸುತ್ತಾರೆಂದು ಭಾವಿಸಬೇಕಾಗಿಲ್ಲ. ಯಾಕೆಂದರೆ ವಿಧಾನ ಸಭಾ ಕಲಾಪ ನಡೆಯುತ್ತಿದ್ದಾಗ `ಅಶ್ಲೀಲ ವೀಡಿಯೋ’ ನೋಡಿದರೆಂಬುದು ಜಗಜಾಹೀರಾಗುತ್ತಿದ್ದಾಂತೆಯೇ ಇಡೀ ರಾಜಕೀಯ ಕ್ಷೇತ್ರದಲ್ಲಿ ತಲ್ಲಣಗಳು ಕಾಣಿಸಿಕೊಂಡವು.

ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಕಂಡ ದೃಶ್ಯಗಳು ಮತ್ತೆ ಮತ್ತೆ ಕಣ್ಣೊರೆಸಿಕೊಂಡು ನೋಡುವಷ್ಟರಮಟ್ಟಕ್ಕೆ ದಿಗಿಲುಂಟು ಮಾಡಿದವು. ವಿಧಾನ ಸಭೆಯ ಇತಿಹಾಸದಲ್ಲಿ ಗದ್ದಲಗಳು ನಡೆದಿವೆ, ಕುರ್ಚಿ, ಮೈಕ್ ಬಿಸಾಡಿದ ಘಟನೆಗಳು ನಡೆದಿವೆ, ಅನೇಕ ಕಾರಣಗಳಿಗಾಗಿ ಅನೇಕ ರೀತಿಯ ರಂಪಾಟಗಳು ಘಟಿಸಿವೆ, ಸದನದೊಳಗೇ ರಾತ್ರಿಯೆಲ್ಲ ಧರಣಿ ನಡೆಸಿರುವುದು, ಹೀಗೆ ಹತ್ತು ಹಲವು ಘಟನೆಗಳು ಈ ಪ್ರಜಾಮಂದಿರದೊಳಗೆ ನಡೆದಿವೆ. ಆದರೆ `ಅಶ್ಲೀಲ ವೀಡಿಯೋ’ ನೋಡಿ ಸಿಕ್ಕಿಬಿದ್ದ ಮೊಟ್ಟಮೊದಲ ಘಟನೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು.

ಅಶ್ಲೀಲ ಮಾತುಗಳನ್ನು ಅಥವಾ `ಅನ್‌ಪಾರ್ಲಿಮೆಂಟರಿ’ ಪದಬಳಕೆ ಮಾಡುವುದೇ ತಪ್ಪು ಎನ್ನುವಷ್ಟರಮಟ್ಟಿಗೆ ಸದನಕ್ಕೆ ಘನತೆಯಿದೆ. ಈ ಕಾರಣಕ್ಕಾಗಿಯೇ ಅಂಥ ಪದಗಳನ್ನು ಆಡಿದವರು ಕ್ಷಮೆಯಾಚಿಸಿರುವುದು, ಅಂಥ ಪದಗಳನ್ನು ಕಡತದಿಂದ ಕಿತ್ತು ಹಾಕಿಸಿದಂಥ ನೂರಾರು ಉದಾಹರಣೆಗಳಿವೆ. ಆದರೆ `ಅಶ್ಲೀಲ ವೀಡಿಯೋ’ ಪ್ರಕರಣದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕಿತ್ತು ಮತ್ತು ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಸನ್ನಡತೆಯನ್ನು ಸದನದೊಳಗಿರುವವರು ಪಾಲಿಸುವಂತೆ ಮಾಡುವುದು ಜವಾಬ್ದಾರಿಯುತವಾದ ಹಾಗೂ ಸುಧಾರಣೆಯ ಕ್ರಮ. `ಅಶ್ಲೀಲ ವೀಡಿಯೋ’ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿಲ್ಲ, ನಿಜಕ್ಕೂ ತಪ್ಪಾಗಿರುವುದು ಎಲ್ಲಿ? ಎನ್ನುವ ಶೋಧವೂ ಆಗಿಲ್ಲ. ಅತ್ಯಂತ ಆತುರವಾಗಿ ರಾಜಕಾರಣಿಗಳ ಮನಸ್ಸು (ಸಾಮೂಹಿಕವಾಗಿ ಅಲ್ಲ, ಕೆಲವೇ ಕೆಲವು) ಮಾಧ್ಯಮಗಳನ್ನು ಸದನದಿಂದ ಹೊರಗಿಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದು ನಿಜಕ್ಕೂ ಆಘಾತಕಾರಿ. `ಅಶ್ಲೀಲ ವೀಡಿಯೋ’ ನೋಡಿದ ಅಪರಾಧಕಿಂತಲೂ ಘೋರವಾದ ಅಪರಾಧವನ್ನು ಮಾಡಲು ಕರ್ನಾಟಕದಲ್ಲಿ ಸಂಚು ಹೆಣೆಯುತ್ತಿರುವುದು ನಿರೀಕ್ಷಿತವೂ ಹೌದು.

ಸದನದೊಳಗೆ ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲು ತಮಗೆ ಅನುಕೂಲಕರವಾದ ಸೂತ್ರ ಹೆಣೆದು ಯಾರನ್ನು ಬಿಡಬೇಕು, ಯಾರನ್ನು ಬಿಡಬಾರದು ಎನ್ನುವ ತೀರ್ಮಾನಕ್ಕೆ ಬರುವಂಥ ದಡ್ಡ ಕೆಲಸವನ್ನು ಬುದ್ಧಿವಂತರು ಮಾಡುತ್ತಿರುವುದು ಮೂರ್ಖತನ ಮತ್ತು ಅವಿವೇಕಿತನ ಕೂಡಾ. ಸರ್ಕಾರಿ ಕೃಪಾಪೋಷಿತ ಮಾಧ್ಯಮಗಳಿಗೆ ಸದನದೊಳಗೆ ಮಣೆಹಾಕಿ ಹುಳುಕನ್ನು ಎತ್ತಿತೋರಿಸುವ ಮಾಧ್ಯಮಗಳ ಕತ್ತುಹಿಚುಕುವ ದಡ್ದತನ ಇದರ ಹಿಂದಿದೆ. ಬೆಳಕೇ ಇಲ್ಲದ ಸ್ಥಿತಿಯನ್ನು ನೆನಪಿಸಿಕೊಂಡಂತಾಗುತ್ತದೆ ಮಾಧ್ಯಮಗಳಿಲ್ಲದ ಸದನವನ್ನು ಊಹಿಸುವುದು ಎನ್ನುವ ಸಾಮಾನ್ಯ ಅರಿವೂ ಇಲ್ಲದಷ್ಟು ಬುದ್ಧಿ ಬಡತನವೇ ನಮ್ಮ ರಾಜಕಾರಣಿಗಳಿಗೇ?.

ಮಾಧ್ಯಮಗಳ ಕತ್ತು ಹಿಚುಕುವ, ತಮಗೆ ಬೇಕಾದಂತೆ ಕುಣಿಸುವ ತಂತ್ರಗಳನ್ನು ದಶಕಗಳ ಹಿಂದೆಯೂ ಅನೇಕರು ರೂಪಿಸಿದ್ದರು ಮತ್ತು ತಮ್ಮದೇ ಆದ ತಂತ್ರಗಾರಿಕೆಯಿಂದ ಕಾರ್ಯಗತ ಮಾಡುವ ದುಸ್ಸಾಹಸವನ್ನು ಮಾಡಿ ಇತಿಹಾಸದ ಪುಟ ಸೇರಿಕೊಂಡಿರುವ ದೊಡ್ಡ ರಾಜಕಾರಣಿಗಳನ್ನು ಈಗಿನವರು ನೆನಪು ಮಾಡಿಕೊಂಡರೆ ಅರ್ಥವಾಗಿ ಬಿಡುತ್ತದೆ ತಾವೇನು ಮಾಡಲು ಹೊರಟಿದ್ದೇವೆಂಬುದು. ನಿರ್ಮಲವಾಗಿದ್ದ ಮಾಧ್ಯಮ ಕ್ಷೇತ್ರವನ್ನು `ಪೇಯ್ಡ್ ನ್ಯೂಸ್’ ಮೂಲಕ ಕಲುಷಿತಗೊಳಿಸಿದವರು ಯಾರು?.

ಪತ್ರಕರ್ತನ ಹುದ್ದೆ ನಿರ್ವಹಿಸಿದರೆ ಹೊಟ್ಟೆಗೇನು ಗತಿ? ಎನ್ನುವ ಕಾಲ ಬದಲಾಗಿದೆ, ರಾಜಕಾರಣಿಯ ಮನಸ್ಸಿನ ಹಿಂದೆ ಮಾಧ್ಯಮಗಳು ಮತ್ತು ಮಾಧ್ಯಮ ಮಂದಿಯ ಬುದ್ಧಿ ಕೆಲಸ ಮಾಡುವಂತಾಗಿರುವ ಸ್ಥಿತಿಗೆ ಹೊಣೆ ಯಾರು? ವೃತ್ತಿಯ ಘನತೆ ಎತ್ತಿಹಿಡಿಯುವುದೇ ಪರಮಧರ್ಮವೆಂದು ಬದುಕಿದ ಮಾಧ್ಯಮ ಮಂದಿಯ ನಿಜವಾದ ಬದುಕು ಹಿಂದೆ ಹೇಗಿತ್ತು? ಈಗ ಹೇಗಿದೆ? ಇಂಥ ಬದಲಾವಣೆಯ ಬಿರುಗಾಳಿಯ ಸುಳಿಯನ್ನು ಅರ್ಥಮಾಡಿಕೊಳ್ಳಿ.

ಸದನದೊಳಗೆ ಪ್ರವೇಶಿಸುವುದೆಂದರೆ ದೇವಮಂದಿರಕ್ಕೆ ಪ್ರವೇಶಿಸಿದಂತೆ ಎನ್ನುವ ಕಲ್ಪನೆ ಜೀವಂತವಾಗಿದೆ. ಈ ಕಾರಣಕ್ಕಾಗಿಯೇ ಇತ್ತೀಚಿನ ದಿನಗಳಲ್ಲಿ ಸದನದೊಳಗಿನ ಕಲಾಪಗಳ ಗುಣಮಟ್ಟ ಕುಸಿಯುತ್ತಿದೆ, ಮೌಲ್ಯಗಳು ಇಳಿಮುಖವಾಗುತ್ತಿವೆ ಎನ್ನುವ ಸ್ವರವನ್ನು ಹಿರಿಯ ಪತ್ರಕರ್ತರು ಬಹಿರಂಗವಾಗಿ ಎತ್ತುತ್ತಿರುವುದು. ತಮ್ಮ ಅನೂಕೂಲಕ್ಕೆ ಮಾಧ್ಯಮಗಳನ್ನು ತೆಕ್ಕೆಯಲ್ಲಿಟ್ಟುಕೊಂಡು, ಮಾಧ್ಯಮ ಮಂದಿಯನ್ನು ಮಡಿಲಲ್ಲಿಟ್ಟುಕೊಂಡು ಮುದ್ದಾಡಿದವರು ಈಗ ಕೈಚೆಲ್ಲಿದರೆ ಹೇಗೆ? ಎನ್ನುವುದು ಇಲ್ಲಿ ಪ್ರಶ್ನೆಯಲ್ಲ.

ಒಬ್ಬ ಶಾಸಕನ ಸರಿಸಮಾನಕ್ಕೆ ಅಧಿಕಾರಿಗಳು ನಿಂತು ಮಾತನಾಡುವುದೇ ತಪ್ಪು ಎನ್ನುವ ದಿನಗಳಿದ್ದವು. ಮಂತ್ರಿಯ ಜೊತೆಯಲ್ಲಿ ವೇದಿಕೆ ಹತ್ತುವುದೇ ಸಲ್ಲದು ಎನ್ನುವ ನಿರ್ಬಂಧದ ದಿನಗಳಿದ್ದವು. ಈಗ ಅಧಿಕಾರಿಗಳೇ ರಾಜಕಾರಣಿಗಳ ಹೆಗಲಮೇಲೆ ಕೈ ಹಾಕಿಕೊಂಡು ನಡೆಯುವಂಥ ಸ್ಥಿತಿ ನಿರ್ಮಾಣವಾಗಿದೆ ಅಂತಾದರೆ ಕಳೆದುಹೋಗಿರುವ ಮೌಲ್ಯಗಳನ್ನು ಎಲ್ಲಿ ಹುಡುಕುವಿರಿ?. ಮಡೆಸ್ನಾನ, ಪಂಕ್ತಿಭೇದ ಭೋಜನ, ತಲೆಮೇಲೆ ಮಲಸುರಿದುಕೊಂಡು ಪ್ರತಿಭಟಿಸುವಂಥ ಘಟನೆಗಳು ನಿಮ್ಮ ಸುತ್ತಲೂ ನಡೆಯುತ್ತಿವೆಯಲ್ಲ ಅವುಗಳ ವಿರುದ್ಧ ತಾರ್ಕಿಕವಾದ ಹೋರಾಟ ಮಾಡಲು ಸಾಧ್ಯವಾಯಿತೇ? ಖಾಸಗೀಕರಣಕ್ಕೆ ಮುಚ್ಚಿದ್ದ ಬಾಗಿಲುಗಳನ್ನು ತೆರೆದು ಎಂಥ ಅನಾಹುತವಾಗುತ್ತಿದೆ ಎನ್ನುವ ಅರಿವಾದರೂ ಬೇಡವೇ?.

ದೇಹಕ್ಕೆ ಮುಪ್ಪು ಬಂದರೆ ಒಪ್ಪಿಕೊಳ್ಳಬಹುದು, ಬುದ್ಧಿಗೆ ಮುಪ್ಪು ಬರಬಾರದು. ಮಾಧ್ಯಮಗಳನ್ನು ಸದನದಿಂದ ದೂರವಿಡುವ ಪ್ರಯತ್ನವೆಂದರೆ ಬುದ್ಧಿಗೆ ಮುಪ್ಪು ಬಂದಿದೆ ಎಂದೇ ಅರ್ಥ. ಇಂಥ ತಪ್ಪು ಕೆಲಸವನ್ನು ಮಾಡಿದ ಅಪಕೀರ್ತಿಗೆ ಕರ್ನಾಟಕ ಒಳಗಾಗುವುದು ನಿಜಕ್ಕೂ ಆಘಾತಕಾರಿ. ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್, ಕೆಡಿಪಿ ಸಭೆಗಳನ್ನು ನೋಡಿದರೆ ಸಾಕು ನಿದ್ದೆ ಗೊರಕೆ, ಆಕಳಿಕೆ, ಮೊಬೈಲ್‌ನಲ್ಲಿ ಸರಸ-ಸಲ್ಲಾಪದ ಲೋಕವೇ ಅನಾವರಣಗೊಳ್ಳುತ್ತದೆ. ಅಲ್ಲೂ ಮಾಧ್ಯಮಗಳಿವೆ, ಆದರೆ ಎಚ್ಚೆತ್ತುಕೊಂಡಿಲ್ಲ, ಈಗ ವಿಧಾನ ಸಭೆಯ ಕಲಾಪದ ಹಿನ್ನೆಲೆಯಲ್ಲಿ ಮಾಧ್ಯಮಗಳು ಚುರುಕಾಗುವ ಕಾಲ ಸನ್ನೀಹಿತವಾಗಿದೆ.

ವಿಧಾನ ಸಭೆಯ ಕಲಾಪದಿಂದ ಮಾಧ್ಯಮಗಳನ್ನು ಹೊರಗಿಡುವ ಪ್ರಯತ್ನ ಸಫಲವಾದರೆ ಅದು ಕೆಳಹಂತಕ್ಕೂ ಅನ್ವಯವಾಗುವ ಅಪಾಯವಿದೆ. ಸದನದ ಕಲಾಪ ಗೌಪ್ಯ ಅಲ್ಲ, ಅದನ್ನು ಸಾರ್ವಜನಿಕರು ಅರ್ಥಾತ್ ಪ್ರಜೆಗಳು ತಿಳಿದುಕೊಳ್ಳುವ ಮೂಲಭೂತ ಹಕ್ಕೂ ಕೂಡಾ. ಅಂತೆಯೇ ಮಾಧ್ಯಮಗಳು ಕೂಡಾ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂಬುದರಲ್ಲಿ ತಪ್ಪಿಲ್ಲ. ರಾಜಕಾರಣಿಗಳು ಅದರಲ್ಲೂ ಮಾಧ್ಯಮಗಳ ಬೆಳಕಲ್ಲೇ ಹೊಳಪುಕಂಡುಕೊಂಡವರು ಬುದ್ಧಿಗೆ ಕವಿದಿರುವ ಮುಸುಕನ್ನು ಸರಿಸಿಕೊಳ್ಳುವುದು ಒಳ್ಳೆಯದು. ಅವಿವೇಕತನ ಎಂದೂ ಬುದ್ಧಿವಂತಿಕೆಯೆನಿಸಿಕೊಳ್ಳುವುದಿಲ್ಲ, ಇಲ್ಲೂ ಹಾಗೆಯೇ.