Daily Archives: March 6, 2012

ನಾಡಿನ ನಕ್ಸಲ್ ನಿಗ್ರಹ ದಳದಿಂದ ಕಾಡಿನ ಅಮಾಯಕ ವಿದ್ಯಾರ್ಥಿಯ ಬಂಧನ

-ನವೀನ್ ಸೂರಿಂಜೆ

ಕರ್ನಾಟಕದ ನಕ್ಸಲ್ ನಿಗ್ರಹ ದಳದ ಅಟ್ಟಹಾಸಕ್ಕೆ ಇದೀಗ ಅಮಾಯಕ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಬಲಿಪಶುವಾಗಿದ್ದಾನೆ. ನಕ್ಸಲ್ ಬೆಂಬಲಿಗರೆಂಬ ಆರೋಪದಲ್ಲಿ ನಕ್ಸಲ್ ನಿಗ್ರಹ ದಳದ ಪೊಲೀಸರು ಬೆಳ್ತಂಗಡಿಯ ಕುತ್ಲೂರು ಪರಿಸರದಲ್ಲಿ ಕಳೆದ ಶನಿವಾರ ಬಂಧಿಸಿರುವ ಮೂವರಲ್ಲಿ ಓರ್ವನಾದ ವಿಠ್ಠಲ ಪ್ರಸಕ್ತ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ. ನೂರು ಶೇಕಡಾ ತರಗತಿ ಹಾಜರಾತಿಯನ್ನು ಹೊಂದಿರುವ ಬುದ್ದಿವಂತ ವಿದ್ಯಾರ್ಥಿ ನಕ್ಸಲ್ ಪೀಡಿತ ಗ್ರಾಮದ ಮಲೆಕುಡಿಯ ಎಂಬ ಆದಿವಾಸಿ ಜನಾಂಗಕ್ಕೆ ಸೇರಿದವನು ಎಂಬ ಒಂದೇ ಕಾರಣಕ್ಕೆ ಜೈಲಲ್ಲಿ ಕೊಳೆಯುವಂತಾಗಿದೆ.

ನಕ್ಸಲ್ ವಿರೋಧಿ ಎಡಪಕ್ಷವಾದ ಸಿಪಿಐಎಂನ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐನಲ್ಲಿ ಸಕ್ರಿಯನಾಗಿದ್ದ ವಿಠ್ಠಲ ಕಳೆದ ಆಗಸ್ಟ್ ತಿಂಗಳಿನಿಂದ ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸವನ್ನು ಆರಂಭಿಸಿದ್ದ. ತನ್ನ ಹುಟ್ಟೂರಿನಲ್ಲಿ ನಕ್ಸಲ್ ಚಟುವಟಿಕೆಗಳಿಂದ ಬೇಸತ್ತಿದ್ದ ವಿಠ್ಠಲ್, ಎಡ ಪಕ್ಷದ ಅಂಗ ಸಂಘಟನೆಯಾದ ದಲಿತ ಹಕ್ಕುಗಳ ಸಮಿತಿಯಲ್ಲಿ ಸಕ್ರಿಯನಾಗಿಸಿಕೊಂಡಿದ್ದ. ವಿಶೇಷವೆಂದರೆ ಮಲೆಕುಡಿಯ ಜನಾಂಗಕ್ಕೆ ಸೇರಿದ ವಿಠ್ಠಲ ಕುತ್ಲೂರಿನ ಮಲೆಕುಡಿಯ ಸಮುದಾಯದಲ್ಲಿ ಎಸ್ಎಸ್ಎಲ್‌‍ಸಿಗಿಂತ ಮೇಲ್ಮಟ್ಟದ ವಿದ್ಯಾಭ್ಯಾಸದ ಹಂತವನ್ನು ತಲುಪಿರುವ ಏಕೈಕ ಯುವಕ. ಕಾಡಿನಲ್ಲಿ ಶತ ಶತಮಾನಗಳಿಂದ ಬದುಕಿದ್ದವರನ್ನು ಒಕ್ಕಲೆಬ್ಬಿಸಲು ಪ್ರತೀ ಕುಟುಂಬಕ್ಕೆ ಹತ್ತು ಲಕ್ಷ ನೀಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದಾಗ ಅದನ್ನು ವಿರೋಧಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿರುವಲ್ಲಿ ವಿಠ್ಠಲ್ ಪಾತ್ರ ಪ್ರಮುಖವಾದುದು. ಅಲ್ಲಿಯವರೆಗೆ ಅಧಿಕಾರಿಗಳು ತೋರಿಸಿದ ಕಾಗದಕ್ಕೆ ಹೆಬ್ಬೆಟ್ಟು ಒತ್ತುತ್ತಿದ್ದವರು ವಿಠ್ಠಲ್‍ನ ವಿದ್ಯಾಬ್ಯಾಸದ ನಂತರ ಚಿತ್ರಣ ಬದಲಾಗಿತ್ತು. ಈ ಕಾರಣದಿಂದಾಗಿಯೇ ಇಂದಿಗೂ ನಲ್ವತ್ತು ಕುಟುಂಬಗಳನ್ನು ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದಿಂದ ಬಲವಂತವಾಗಿ ಒಕ್ಕಲೆಬ್ಬಿಸಲು ಸಾಧ್ಯವಾಗಿಲ್ಲ. ಇದು ಎಎನ್ಎಫ್ ಮತ್ತು ಜಿಲ್ಲಾಡಳಿತಕ್ಕೆ ನುಂಗಲಾರದ ತುತ್ತಾಗಿತ್ತು.

ಮಂಗಳೂರು ವಿವಿಯ ಬಾಯ್ಸ್ ಹಾಸ್ಟೆಲ್‍ನಲ್ಲಿದ್ದುಕೊಂಡು ಕಳೆದ ಒಂದು ವರ್ಷದಿಂದೀಚೆಗೆ ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿದ್ದ ವಿಠ್ಠಲನಿಗೆ ಪತ್ರಿಕೋಧ್ಯಮ ಕ್ಷೇತ್ರವನ್ನು ಆಯ್ದುಕೊಳ್ಳುವಂತೆ ಸಲಹೆ ನೀಡಿದ್ದೇ ಮಂಗಳೂರಿನ ಪತ್ರಕರ್ತರು. ನಾನೂ ಸೇರಿದಂತೆ ಮಂಗಳೂರಿನ ಪತ್ರಕರ್ತ ಮಿತ್ರರೆಲ್ಲಾ ನಕ್ಸಲ್ ಪೀಡಿತ ಪ್ರದೇಶಕ್ಕೆ ವರದಿಗಾಗಿ ತೆರಳಿದ್ದ ಸಂದರ್ಭ ಪದವಿ ಶಿಕ್ಷಣ ಮುಗಿಸಿದ್ದ ವಿಠ್ಠಲ ಕಣ್ಣಿಗೆ ಬಿದ್ದಿದ್ದ. ನಂತರ ಹಲವಾರು ಬಾರಿ ಕುತ್ಲೂರು ಪ್ರದೇಶಕ್ಕೆ ವರದಿಗಾಗಿ ನಾವು ತೆರಳಿದ್ದ ಸಂಧರ್ಭ ನಮಗೆಲ್ಲಾ ಕಾಡಿನಲ್ಲಿ ಆಶ್ರಯ ನೀಡಿದ್ದು ಇದೇ ವಿಠ್ಠಲ್ ಮನೆ. ನಂತರ ವಿಠ್ಠಲ್ ನಮ್ಮವನಾಗಿದ್ದ. ನಮ್ಮ ವರದಿಗಾರಿಕೆಯ ಕೆಲಸಗಳನ್ನು ಮೌನವಾಗಿ ಗಮನಿಸುತ್ತಿದ್ದ ವಿಠ್ಠಲ್‍ಗೆ ತಾನೂ ಪತ್ರಕರ್ತನಾಗಬೇಕು ಎಂಬ ಆಶೆ ಮೊಳಕೆಯೊಡೆದಿತ್ತು. ಅದನ್ನು ನಮ್ಮ ಬಳಿ ಹೇಳಿಕೊಂಡಿದ್ದ. ನಾವು ತಕ್ಷಣ ಅದಕ್ಕಾಗಿ ವ್ಯವಸ್ಥೆಗಳನ್ನು ಮಾಡಿದೆವು. ನೇರ ಮಂಗಳೂರಿಗೆ ಕರೆಸಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗಕ್ಕೆ ಪ್ರವೇಶಾತಿ ವ್ಯವಸ್ಥೆಗಳನ್ನು ಮಾಡಿದ್ದೆವು.

ಪತ್ರಕರ್ತ ಮಿತ್ರರೆಲ್ಲಾ ಸೇರಿ ಪುಸ್ತಕಗಳ ವ್ಯವಸ್ಥೆಯನ್ನೂ ಮಾಡಿಕೊಟ್ಟೆವು. ನಂತರ ವಿಠ್ಠಲ್ ತಿರುಗಿ ನೋಡಿದ್ದೇ ಇಲ್ಲ. ಕಾಲೇಜಿನಲ್ಲಿ ನೀಡೋ ಎಸೈನ್‍ಮೆಂಟ್‍ಗಳನ್ನು ಅಸ್ಥೆಯಿಂದ ನಿರ್ವಹಿಸುತ್ತಿದ್ದ. ಯಾವುದೇ ಸುದ್ಧಿಯ ಎಸೈನ್‍ಮೆಂಟ್ ನೀಡಿದರೂ ನೇರ ನನ್ನಲ್ಲಿಗೆ ಬಂದು ಸಲಹೆಗಳನ್ನು ಪಡೆದುಕೊಂಡು ಪರಿಪೂರ್ಣ ವರದಿ ತಯಾರಾಗುವಂತೆ ನೋಡಿಕೊಳ್ಳುತ್ತಿದ್ದ. ಆತ ಕಾಲೇಜಿಗೆ ಸೇರಿದ ದಿನದಿಂದ ಒಂದೇ ಒಂದು ತರಗತಿಯನ್ನೂ ತಪ್ಪಿಸಿಲ್ಲ. ನೂರು ಶೇಕಡಾ ಹಾಜರಾತಿ ಇದೆ ಎಂದು ಕಾಲೇಜು ದಾಖಲೆಗಳು ದೃಢೀಕರಿಸುತ್ತದೆ. ರಜೆಯ ಸಂಧರ್ಭದಲ್ಲಿ ಎಲ್ಲೆಲ್ಲಿ ವಿಚಾರ ಸಂಕಿರಣಗಳಿವೆ ಎಂದು ನನ್ನಲ್ಲಿ ತಿಳಿದುಕೊಂಡು ಹಾಜರಾಗುತ್ತಿದ್ದ. ಒಟ್ಟಾರೆ ಆತನೊಬ್ಬ ಭರವಸೆಯ ಪತ್ರಕರ್ತನಾಗಿ ಎಲ್ಲಾ ರೀತಿಯಲ್ಲೂ ರೂಪುಗೊಳ್ಳುತ್ತಿದ್ದ ಎಂದು ನನಗನ್ನಿಸುತ್ತಿತ್ತು.

ಕಳೆದ ಎರಡು ವಾರದಿಂದ ನಕ್ಸಲ್ ಪೀಡಿತ ಗ್ರಾಮಗಳಲ್ಲಿ ಕೂಂಬಿಕ್ ಕಾರ್ಯಾಚರಣೆ ನಡೆಯುತ್ತಿದೆ. ಕುತ್ಲೂರಿನಲ್ಲಿ ಕೂಂಬಿಕ್ ನಡೆಸಿದ ಎಎನ್ಎಫ್ ತಂಡವು ಚೀಂಕ್ರ ಮಲೆಕುಡಿಯನನ್ನು ವಶಕ್ಕೆ ತೆಗೆದುಕೊಂಡು ಬಿಡುಗಡೆ ಮಾಡಿತ್ತು. ನಂತರ ಎಎನ್ಎಫ್ ತಂಡವು ನೇರವಾಗಿ ವಿಠ್ಠಲ್ ಮನೆಗೆ ತೆರಳಿ ವಿಠ್ಠಲ್ ತಂದೆ ಲಿಂಗಣ್ಣ ಮಲೆಕುಡಿಯರನ್ನು ವಿಚಾರಣೆ ನಡೆಸಿತು. ರಾತ್ರಿಯಿಡೀ ಗೃಹ ಬಂಧನದಲ್ಲಿರಿಸಿದ ಎಎನ್ಎಫ್ ತಂಡವು ವೃದ್ಧ ಲಿಂಗಣ್ಣರಿಗೆ ಬೇಕಾಬಿಟ್ಟಿ ಥಳಿಸಿತ್ತು. ಇದನ್ನು  ಮರುದಿನ ಬೆಳಿಗ್ಗೆ ಪಕ್ಕದ ಮನೆಯ ಪೂವಪ್ಪ ಮಲೆಕುಡಿಯ ವಿಠ್ಠಲ್‍ಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತನ್ನ ತಂದೆಯನ್ನು ಆಸ್ಪತ್ರೆಗೆ ದಾಖಲಿಸುವುದಕ್ಕಾಗಿ ಮರುದಿನ ಬೆಳಗ್ಗೆ ಕುತ್ಲೂರಿಗೆ ಹೊರಟು ನಿಂತ ವಿಠ್ಠಲ ಈ ಬಗ್ಗೆ ನನಗೆ ಮತ್ತು ಆತನ ಪರಿಚಯದ ಕೆಲ ಮಾಧ್ಯಮ ಮಿತ್ರರಿಗೂ ತನ್ನ ತಂದೆಯ ಬಗ್ಗೆ ಮಾಹಿತಿ ನೀಡಿದ್ದ. “ತಂದೆಯನ್ನು ನೋಡಲೇ ಬೇಕೆಂದಿದ್ದರೆ ಹೋಗು. ಇಲ್ಲದೆ ಇದ್ದರೆ ಪೂವಪ್ಪ ಮತ್ತು ಇತರರು ತಂದೆಯನ್ನು ಆಸ್ಪತ್ರೆಗೆ ದಾಖಲಿಸುವಂತೆ ನಾನು ಹೇಳುತ್ತೇನೆ” ಎಂದು ಅವನಿಗೆ ನಾನೇ ಹೇಳಿದ್ದೆ. ಆದರೂ ಆತನ ಮನಸ್ಸು ತಂದೆ ಮತ್ತು ತಾಯಿಯನ್ನು ನೋಡಬೇಕು ಎಂದು ಹಂಬಲಿಸುತ್ತಿರುವುದನ್ನು ನಾನು ಬಲ್ಲವನಾದೆ.” ಸರಿ ಹೋಗು. ಆದರೆ ನಿನ್ನ ಕಾಲೇಜಿನ ಗುರುತು ಪತ್ರವನ್ನು ತೆಗೆದುಕೊಂಡು ಹೋಗು. ಮತ್ತು ಕಾಡಿನಲ್ಲಿ ಎಎನ್ಎಫ್ ಪೊಲೀಸರು ಎದುರಾದರೆ ನೀನಾಗಿಯೇ ಗುರುತು ಪತ್ರ  ತೋರಿಸಿ ಮಾತನಾಡು. ನಂತರ ತಂದೆಯನ್ನು ಆಸ್ಪತ್ರೆಗೆ ಸೇರಿಸಲು ಅವಕಾಶ ನೀಡುವಂತೆ ಕೇಳಿಕೊ” ಎಂದು ಅತನಿಗೆ ಸಲಹೆಗಳನ್ನು ನೀಡಿದ್ದೆ.

ಬಸ್ಸು ಇಳಿದು ಎರಡು ಗಂಟೆಗಳ ಕಾಲ ದಟ್ಟ ಅರಣ್ಯದಲ್ಲಿ ಎಲ್ಲೂ ಕೂಡಾ ಎಎನ್ಎಫ್ ಸಿಬ್ಬಂದಿಗಳು ವಿಠ್ಠಲ್‍ಗೆ ಸಿಕ್ಕಿಲ್ಲ. ಎತ್ತರದ ಗುಡ್ಡ ಸಿಕ್ಕಾಗೆಲ್ಲಾ ಆತನ ಮೊಬೈಲ್ ನೆಟ್‍ವರ್ಕ್ ಸಿಗುತ್ತಿತ್ತು. ಆಗೆಲ್ಲಾ ಕರೆ ಮಾಡಿ ಮಾತನಾಡುತ್ತಿದ್ದ. ನಾನು ಇನ್ನಷ್ಟೂ ಸಲಹೆಗಳನ್ನು ನೀಡುತ್ತಿದ್ದೆ. ಮಧ್ಯಾಹ್ನದ ವೇಳೆಗೆ ಕುತ್ಲೂರಿನ ದಟ್ಟ ಅರಣ್ಯದ ನಡುವಿನ ತನ್ನ ಮನೆಗೆ ತಲುಪಿದ್ದ ವಿಠ್ಠಲನನ್ನು ವಿಚಾರಣೆಯ ನೆಪದಲ್ಲಿ ತಂದೆ ಲಿಂಗಣ್ಣನ ಜೊತೆ ಎಎನ್ಎಫ್ ತಂಡ ಬಂಧಿಸಿ ಕರೆದೊಯ್ದು ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದೆ.

ಎಎನ್ಎಫ್ ತಂಡವು ಬಂಧಿತ ವಿಠ್ಠಲನ ಮನೆಯಲ್ಲಿ ಕರಪತ್ರ, ಬೈನಾಕ್ಯುಲರ್‌ನಂತಹ ಸಲಕರಣೆಗಳು ದೊರಕಿವೆ ಎಂಬುದಾಗಿ ಹೇಳಿಕೊಂಡಿದೆ. ವಿಠ್ಠಲನ ಬಳಿ ನಕ್ಸಲ್ ಪರವಾದ ಲೇಖನಗಳು, ನಕ್ಸಲ್ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಹಾಗೂ ನಕ್ಸಲರು ಮೃತರಾದ ವರದಿಗಳ ಪತ್ರಿಕಾ ಸಂಗ್ರಹ ಕೂಡಾ ಇತ್ತು ಎಂಬ ಆರೋಪವನ್ನೂ ಹೊರಿಸಿದೆ. (ಮಾಮೂಲಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ಮಂಗಳೂರು ನಗರದಲ್ಲಿರುವ ಮೂನ್ಶೈನ್ ಎಂಬ ಬ್ಯೂಟಿ ಪಾರ್ಲರಿನ ಡ್ರಾವರ್‌‌‌‌‌‌ನಲ್ಲಿ ಕಾಂಡೋಮ್ ಪ್ಯಾಕೇಟ್ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಮಹಿಳಾ ಕಾರ್ಮಿಕರನ್ನು ಅರೆಸ್ಟ್ ಮಾಡಿದವರಿಗೆ ಕರಪತ್ರ ಇಡೋದೇನೂ ಮಹಾಸಂಗತಿಯಲ್ಲ ಬಿಡಿ.)

ಈ ನಡುವೆ, ವಿಠ್ಠಲ ಮತ್ತು ಆತನ ತಂದೆಯ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಬೆಳ್ತಂಗಡಿಯ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಎನ್ಎಫ್ ತಂಡವು ಸುಳ್ಳು ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದೆ. ವಿಠ್ಠಲನನ್ನು ಹತ್ತಿರದಿಂದ ಬಲ್ಲ ಸಹಪಾಠಿಗಳು ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಚಿನ್ನಪ್ಪ ಗೌಡರಿಗೆ ವಿವಿ ಮಧ್ಯೆ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ವಿಠ್ಠಲನ ತಂದೆ ವಯೋವೃದ್ಧರಾದ ಲಿಂಗಣ್ಣ ಮಲೆಕುಡಿಯರಿಗೆ ಪೊಲೀಸರು ನೀಡಿರುವ ದೈಹಿಕ ದೌರ್ಜನ್ಯದಿಂದಾಗಿ ಕಾಲಿನ ಮಣಿಗಂಟಿನಲ್ಲಿ ಬಿರುಕು ಕಾಣಿಸಿಕೊಂಡಿದೆ. ಅವರನ್ನೀಗ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ವಿವಿ ಬಾಯ್ಸ್ ಹಾಸ್ಟೆಲ್‍ನಲ್ಲಿದ್ದು ತರಗತಿಯಲ್ಲಿ ನೂರು ಶೇಕಡಾ ಹಾಜರಾತಿಯನ್ನು ಹೊಂದಿದ್ದ ವಿಠ್ಠಲ್ ಮೇಲೆ ಪೊಲೀಸರು ಸೆಕ್ಷನ್ 10 ಮತ್ತು 13(2) ಅನ್ಲಾಫುಲ್ ಆ್ಯಕ್ಟಿವಿಟೀಸ್ (ಪ್ರಿವೆನ್ಷನ್) ಆ್ಯಕ್ಟ್ ಮೂಲಕ ರಾಜದ್ರೋಹದ ಆರೋಪ ಹೊರಿಸಿ ಜೈಲಿಗಟ್ಟಿದ್ದಾರೆ. ಸಮಾಜದ ಮುಖ್ಯವಾಹಿನಿಯಲ್ಲಿದ್ದುಕೊಂಡು ಉಜ್ವಲ ಭವಿಷ್ಯದ ಕನಸು ಹೊತ್ತಿದ್ದ ಯುವಕ ಮತ್ತಾತನ ಮನೆಯವರಿಗೆ ಇದೀಗ ಎಎನ್ಎಫ್ ತಂಡವು ನಕ್ಸಲ್ ಬೆಂಬಲಿಗ ಎಂಬ ಹಣೆಪಟ್ಟಿ ಕಟ್ಟಿರುವುದು ನಿಜಕ್ಕೂ ವಿಷಾದನೀಯ.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಧರ್ಮದ ಸವಾರಿ – ಮತದಾರರು ಎಚ್ಚೆತ್ತುಕೊಳ್ಳಬೇಕು

-ಆನಂದ ಪ್ರಸಾದ್

ಕರ್ನಾಟಕ ಕಂಡ ಮುಖ್ಯ ಮಂತ್ರಿಗಳ ಪೈಕಿ ಯಡಿಯೂರಪ್ಪನವರು ಅತ್ಯಂತ ಭ್ರಷ್ಟ, ಸ್ವಜನ ಪಕ್ಷಪಾತಿ ಹಾಗೂ ನಿರ್ಲಜ್ಜ ಮುಖ್ಯಮಂತ್ರಿಯೆಂದು ಹೇಳಲು ಹೆಚ್ಚಿನ ಪಾಂಡಿತ್ಯವೇನೂ ಬೇಕಾಗಿಲ್ಲ ಎನಿಸುತ್ತದೆ. ಈವರೆಗೆ ಈ ರೀತಿ ರಾಜ್ಯದಲ್ಲಿ ಮುಖ್ಯಮಂತ್ರಿಯೊಬ್ಬರ ಮೇಲೆ ಪ್ರಕರಣಗಳು ದಾಖಲಾಗಿ ಜೈಲಿಗೆ ಹೋದ ಉದಾಹರಣೆ ಇಲ್ಲ. ಹೀಗಿದ್ದರೂ ಯಡಿಯೂರಪ್ಪನವರು ಮಹಾ ನಾಯಕ ಎಂದು ರಾಜ್ಯದ ಲಿಂಗಾಯತ ಮಠಾಧೀಶರು ಅವರನ್ನು ಬೆಂಬಲಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ವಿದ್ಯಮಾನವಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದದ್ದು ಯಡಿಯೂರಪ್ಪ ಎಂಬ ಮಾತು ಪದೇ ಪದೇ ಕೇಳಿ ಬರುತ್ತಿದೆ. ಆದರೆ ವಾಸ್ತವವಾಗಿ ಯಡಿಯೂರಪ್ಪ ಬಿಜೆಪಿಯನ್ನು ಅಧಿಕಾರಕ್ಕೆ ತಂದದ್ದು ಅನ್ನುವುದಕ್ಕಿಂತ, ರಾಜ್ಯದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿದ್ದ ಜನತಾ ಪರಿವಾರದ ಒಡಕು ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವುದು ಎಂಬುದು ಹೆಚ್ಚು ಸೂಕ್ತವಾಗುತ್ತದೆ. ಇಲ್ಲಿ ಜನತಾ ಪರಿವಾರ ಒಡೆಯದೆ ಗಟ್ಟಿಯಾಗಿದ್ದಿದ್ದರೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಧ್ಯವೇ ಇರಲಿಲ್ಲ. ಈ ನಿಟ್ಟಿನಲ್ಲಿ ದೇವೇಗೌಡರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪರೋಕ್ಷವಾಗಿ ಕೊಡುಗೆಯನ್ನು ನೀಡಿದ್ದಾರೆ ಎಂದೇ ಹೇಳಬೇಕಾಗುತ್ತದೆ.

ಯಡಿಯೂರಪ್ಪ ಅವರು ಕರ್ನಾಟಕ ಈವರೆಗೆ ಕಂಡ ಅತ್ಯಂತ ಮೂಢನಂಬಿಕೆಯ ಮುಖ್ಯಮಂತ್ರಿಯಾಗಿಯೂ ಕಂಡು ಬರುತ್ತಾರೆ. ದೇಶದ ಹಲವಾರು ದೇವಸ್ಥಾನಗಳಿಗೆ ಎಡತಾಕಿದ ಇನ್ನೊಬ್ಬ ಮುಖ್ಯಮಂತ್ರಿಯನ್ನು ಕರ್ನಾಟಕ ಕಂಡಿಲ್ಲ. ‘ಯಜ್ಞ, ಯಾಗ, ಮಾಟ ಮಂತ್ರ’ಗಳ ಮೊರೆಹೋದ ಇನ್ನೊಬ್ಬ ಮುಖ್ಯಮಂತ್ರಿಯನ್ನೂ ಕರ್ನಾಟಕ ಕಂಡಿಲ್ಲ. ಇಷ್ಟೆಲ್ಲಾ ದೈವ ಭಕ್ತಿ ಇರುವ, ಸ್ವಾಮೀಜಿಗಳ ಮುದ್ದಿನ ಕೂಸಾದ ಯಡಿಯೂರಪ್ಪನವರನ್ನು ಅವರ ಧರ್ಮ ಶ್ರದ್ದೆ, ದೈವ ಭಕ್ತಿ ಅಡ್ಡ ದಾರಿಯಲ್ಲಿ ನಡೆಯದಂತೆ ತಡೆಯಲಿಲ್ಲ. ಹೀಗಾದರೆ ಧರ್ಮ ಶ್ರದ್ಧೆ, ಮಹಾನ್ ದೈವಭಕ್ತಿಯ ಸಾಧನೆಯಾದರೂ ಏನು ಎಂಬ ಪ್ರಶ್ನೆ ಏಳುತ್ತದೆ. ಕರ್ನಾಟಕಕ್ಕೆ ವಿಶ್ವಾದ್ಯಂತ ಕೆಟ್ಟ ಹೆಸರು ತಂದ ಯಡಿಯೂರಪ್ಪನವರು ಸದಾ ವಿರೋಧ ಪಕ್ಷಗಳನ್ನು ದೂರುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದರು. ಪದೇ ಪದೇ ವಿರೋಧ ಪಕ್ಷಗಳು ಆಡಳಿತ ನಡೆಸಲು ಬಿಡಲಿಲ್ಲ ಎಂಬುದು ಅವರ ಅತ್ಯಂತ ಬಾಲಿಶ ಹೇಳಿಕೆಯಾಗಿತ್ತು. ಆಡಳಿತ ಪಕ್ಷದ ಬಳಿ ಎಲ್ಲ ಸಂಪನ್ಮೂಲ, ಅಧಿಕಾರಿ ವರ್ಗ, ಅಧಿಕಾರ ಇರುವಾಗ ವಿರೋಧ ಪಕ್ಷಗಳು ಅಭಿವೃದ್ಧಿ ಕೆಲಸ ಮಾಡಲು ಬಿಡಲಿಲ್ಲ ಎಂಬುದು ಅತ್ಯಂತ ಹಾಸ್ಯಾಸ್ಪದವಾಗಿ ಕಾಣುತ್ತದೆ. ಈವರೆಗಿನ ಕರ್ನಾಟಕದ ಇತಿಹಾಸದಲ್ಲಿ ನೋಡಿದರೆ ಯಾವ ಮುಖ್ಯಮಂತ್ರಿಯೂ ಇಂಥ ಬಾಲಿಶ ಹೇಳಿಕೆಗಳನ್ನು ನೀಡುತ್ತಿರಲಿಲ್ಲ.

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಸಾಕಷ್ಟು ಬಲಿದಾನ ಹಾಗೂ ಹೋರಾಟಗಳ ಫಲವಾಗಿ ಲಭಿಸಿರುವುದು. ಹೀಗಾಗಿ ನಮ್ಮ ಮತದಾರರು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸ್ವಾಮೀಜಿಗಳ ಅವಲಂಬಿತ ಪಾಳೆಗಾರಿಕೆ ವ್ಯವಸ್ಥೆಯಾಗಲು ಬಿಡಬಾರದು. ಜಾತಿ ನೋಡಿ ಮತ್ತು ಸ್ವಾಮೀಜಿಗಳ ಸೂಚನೆಯಂತೆ ಮತ ಹಾಕುವ ಪ್ರವೃತ್ತಿ ಬೆಳೆದರೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತದೆ. ಹೀಗಾಗಿ ನಮ್ಮ ಮತದಾರರು ಸ್ವಾಮೀಜಿಗಳ ಗುಲಾಮರಾಗದೆ ಸ್ವಾತಂತ್ರ್ಯ ಮನೋಭಾವದಿಂದ ಮತ ಹಾಕುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ. ಹಾಗಾದಾಗ ಸ್ವಾಮೀಜಿಗಳನ್ನು ಒಲಿಸಿ ಭ್ರಷ್ಟರು ಅಧಿಕಾರಕ್ಕೆ ಏರಲು ಹವಣಿಸುವುದು ನಿಲ್ಲಬಹುದು. ಇತ್ತೀಚೆಗಿನ ವರ್ಷಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಹರಿಸುವ ರೀತಿಯಲ್ಲಿ ಸ್ವಾಮೀಜಿಗಳ ಗುಂಪು ಕರ್ನಾಟಕದ ರಾಜಕೀಯ ವ್ಯವಸ್ಥೆಯಲ್ಲಿ ತಲೆ ಹಾಕುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಸ್ವಾಮೀಜಿಗಳು ರಾಜಕೀಯ ವ್ಯವಸ್ಥೆಯನ್ನು ನಿರ್ಧರಿಸುವುದಾದರೆ ಚುನಾವಣೆಗಳನ್ನು ನಡೆಸುವ ಅಗತ್ಯವೇ ಇಲ್ಲ.

ಯಡಿಯೂರಪ್ಪನವರು ಅಪರೇಷನ್ ಕಮಲ ಎಂಬ ಅತ್ಯಂತ ಲಜ್ಚೆಗೇಡಿ ಕೆಲಸವನ್ನು ಮಾಡಿದಾಗ ಯಾವುದೇ ಸ್ವಾಮೀಜಿಗಳು ಅದನ್ನು ಖಂಡಿಸಲಿಲ್ಲ. ಬಹುತೇಕ ಕರ್ನಾಟಕದ ಮಾಧ್ಯಮಗಳೂ ಅದನ್ನು ಖಂಡಿಸಿ ಜನಜಾಗೃತಿ ಮಾಡಿದ್ದು ಕಾಣಲಿಲ್ಲ. ಹೀಗಾಗಿಯೇ ಯಡಿಯೂರಪ್ಪನವರಿಗೆ ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಯೋಚನೆ ಬಂದಿರಬೇಕು. ಅದಕ್ಕೆ ಸರಿಯಾಗಿ ಮತದಾರರೂ ಭ್ರಷ್ಟರಾಗಿ ಅಪರೇಷನ್ ಕಮಲಕ್ಕೆ ಒಳಗಾದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಲೇ ಬಂದರು. ಹೀಗಾಗಿ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಚುನಾವಣೆಗಳು ಎಂಬುದು ಒಂದು ಅಣಕವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಎಚ್ಚರಿಸಲು ಕರ್ನಾಟಕದ ಮಾಧ್ಯಮಗಳು ಮುಂದಾಗಲಿಲ್ಲ. ಇದರ ದುಷ್ಫಲ ಇಂದು ನಾವು ಕಾಣುತ್ತಿದ್ದೇವೆ.

ಯಡಿಯೂರಪ್ಪನವರಿಗೆ ಸಾಹಿತ್ಯಿಕ, ಸಾಂಸ್ಕೃತಿಕ ಅಭಿರುಚಿಗಳೂ ಇರುವಂತೆ ಕಾಣುವುದಿಲ್ಲ. ಒಬ್ಬ ಉತ್ತಮ ನಾಯಕನು ಬಹಳಷ್ಟು ಓದಿಕೊಂಡಿರುತ್ತಾನೆ. ಹೀಗಾಗಿ ಅವನಲ್ಲಿ ಚಿಂತನಶಕ್ತಿ ಬೆಳೆದಿರುತ್ತದೆ. ಇಂಥ ನಾಯಕನು ಎಂಥ ಸಂದರ್ಭಗಳಲ್ಲೂ ಭ್ರಷ್ಟನಾಗುವುದಿಲ್ಲ. ಯಡಿಯೂರಪ್ಪನವರಲ್ಲಿ ಕಾಣುವುದು ಹಳ್ಳಿಯ ಗೌಡಿಕೆಯ ಠೇ೦ಕಾರ, ಸೇಡು ತೀರಿಸಿಕೊಳ್ಳಬೇಕೆಂಬ ತವಕ ಹಾಗೂ ಇನ್ನಷ್ಟು ಮತ್ತಷ್ಟು ಸಂಪತ್ತು ಕೂಡಿ ಹಾಕಬೇಕೆಂಬ ದುರಾಶೆ. ಇದರಿಂದಾಗಿಯೇ ಅಧಿಕಾರ ದೊರಕಿದಾಗ ಅದನ್ನು ಜನಕಲ್ಯಾಣಕ್ಕಾಗಿ ಬಳಸದೆ ತನ್ನ ಪರಿವಾರದ ಸಂಪತ್ತು ಬೆಳೆಸಲು ಬಳಸಿಕೊಂಡರು. ತನ್ನ ಸುತ್ತಮುತ್ತ ಹೊಗಳುಭಟರ ಪಡೆಯನ್ನು ಕಟ್ಟಿಕೊಂಡು ವಾಸ್ತವದಿಂದ ವಿಮುಖರಾದರು. ಕರ್ನಾಟಕದ ಪತ್ರಕರ್ತರನ್ನೂ ಭ್ರಷ್ಟಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ತಮ್ಮ ಪರವಾಗಿ ಬರೆಯಲು ಮತ್ತು ವರದಿ ಮಾಡಲು ಪತ್ರಕರ್ತರಿಗೆ ಅವರು ಸಾಕಷ್ಟು ಆಮಿಷಗಳನ್ನು ಒಡ್ಡಿ ವಿಮರ್ಶೆಯೇ ಬರದಂತೆ ನೋಡಿಕೊಂಡರು. ಇದರ ಪರಿಣಾಮ ಏನೆಂದರೆ ತಪ್ಪು ದಾರಿಯಲ್ಲಿ ಹೋಗುತ್ತಿದ್ದರೂ ಎಚ್ಚರಿಸದ ಮಾಧ್ಯಮಗಳು ಇನ್ನಷ್ಟು ತಪ್ಪು ದಾರಿಯಲ್ಲಿ ಹೋಗಲು ಅವರನ್ನು ಪ್ರೇರೇಪಿಸಿತು. ಮಾಧ್ಯಮಗಳನ್ನು ಭ್ರಷ್ಟಗೊಳಿಸುವುದು ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದು ಸರ್ವಾಧಿಕಾರಿ ಪ್ರವೃತ್ತಿಯನ್ನು ಬೆಳೆಸಲು ಕಾರಣವಾಗುತ್ತದೆ. ಕರ್ನಾಟಕದಲ್ಲಿ ಆದದ್ದೂ ಅದೇ. ಹೀಗಾಗಿ ಮಾಧ್ಯಮಗಳನ್ನು ಒಬ್ಬ ಉತ್ತಮ ನಾಯಕ ಎಂದೂ ಭ್ರಷ್ಟಗೊಳಿಸಲು ಹೋಗುವುದಿಲ್ಲ.