Daily Archives: March 5, 2013

ಪ್ರಾಮಾಣಿಕ ಪತ್ರಕರ್ತನಿಗೆ ಪತ್ರಕರ್ತರ ಸಂಘದಿಂದ ಬಹಿಷ್ಕಾರ !?

– ದಿನೇಶ್ ಕುಮಾರ್ ಎಸ್.ಸಿ.

ಇದು ನನ್ನ ಮಟ್ಟಿಗಂತೂ ಬೆಚ್ಚಿಬೀಳಿಸುವ ಸುದ್ದಿ.

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ “ದಿ ಹಿಂದೂ” ಪತ್ರಿಕೆಯ ಹಿರಿಯ ವರದಿಗಾರ ಸತೀಶ್ ಜಿ.ಟಿ.ಯವರಿಗೆ ನೋಟೀಸೊಂದು ಹೋಗಿದೆ. ನಿಮ್ಮನ್ನು ಸಂಘದ ಸದಸ್ಯತ್ವದಿಂದ ಉಚ್ಛಾಟಿಸಲಾಗುವುದು, ಯಾವುದೇ ಪತ್ರಿಕಾಗೋಷ್ಠಿ ವರದಿಗೆ ಕರೆಯಲಾಗುವುದಿಲ್ಲ ಮತ್ತು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತನಾಗಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂಬುದು ಈ ನೋಟೀಸಿನ ಒಟ್ಟು ತಾತ್ಪರ್ಯ.

“ದಿ ಹಿಂದೂ” ಪತ್ರಿಕೆ ರಾಷ್ಟ್ರಮಟ್ಟದಲ್ಲಿ ಪತ್ರಿಕಾಮೌಲ್ಯವನ್ನು ಉಳಿಸಿಕೊಂಡು ಬಂದಿರುವ ಕೆಲವೇ ಪತ್ರಿಕೆಗಳಲ್ಲಿ ಒಂದು. The_Hindu_logoಈ ಪತ್ರಿಕೆಯ ಬಹುತೇಕ ವರದಿಗಾರರು ಶುದ್ಧಹಸ್ತರಾಗಿಯೇ ಇರುತ್ತಾರೆ. ಸತೀಶ್ ಹಿಂದೆ ಡೆಕ್ಕನ್ ಹೆರಾಲ್ಡ್‌ನಲ್ಲಿ ಕೆಲಸ ಮಾಡಿದವರು. ಗ್ರಾಮೀಣ ಭಾಗದ ವರದಿಗಾರಿಕೆಯ ಆಸಕ್ತಿಯಿಂದಾಗಿ ಈಗ ಹಾಸನ-ಚಿಕ್ಕಮಗಳೂರು ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಳ್ಳಿಯಿಂದ ನಗರಕ್ಕೆ ಬರುವ ಪತ್ರಕರ್ತರೇ ಹೆಚ್ಚಿರುವ ಸಂದರ್ಭದಲ್ಲಿ ಸತೀಶ್ ಬೆಂಗಳೂರೆಂಬ ಮಾಯಾನಗರಿ ಬಿಟ್ಟು ಹಾಸನಕ್ಕೆ ತೆರಳಿದವರು. ಹಾಸನ-ಚಿಕ್ಕಮಗಳೂರು ಜಿಲ್ಲಾ ವರದಿಗಾರಿಕೆ ಆರಂಭಿಸಿದಾಗಿನಿಂದ ಆ ಎರಡೂ ಜಿಲ್ಲೆಗಳ ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಸೆಳೆದಂತೆ ಬರೆದಿದ್ದಾರೆ. ಯಾರಿಗೂ ಅಂಜದೆ, ಅಳುಕದೆ ತಮ್ಮ ವೃತ್ತಿಧರ್ಮವನ್ನು ಪಾಲಿಸುತ್ತ ಬಂದಿದ್ದಾರೆ.

ಇಂಥ ಸತೀಶ್ ವಿರುದ್ಧ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಯಾಕಾದರೂ ನೋಟೀಸು ಕೊಟ್ಟಿದೆ? Satish_GTಇದರ ಹಿನ್ನೆಲೆ ಏನು ಎಂಬುದಕ್ಕೆ ನೋಟೀಸಿನಲ್ಲೇ ಸ್ಪಷ್ಟ ಉತ್ತರವಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಯೊಬ್ಬರ ವಿರುದ್ಧ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದೂರು ನೀಡಿ ಅಪಮಾನಗೊಳಿಸಲಾಗಿದೆ ಎಂಬುದು ನೋಟೀಸಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಸತೀಶ್ ಯಾಕಾಗಿ ಈ ದೂರನ್ನು ನೀಡಿದರು? ಆ ದೂರಿನಲ್ಲಿ ಏನಿದೆ ಎಂಬುದಕ್ಕೆ ಸತೀಶ್ ಕೊಟ್ಟ ದೂರೇ ಎಲ್ಲ ಉತ್ತರ ಹೇಳುತ್ತದೆ. ಸತೀಶ್ ನೀಡಿದ ದೂರು ಈ ಕೆಳಕಂಡಂತಿದೆ.

ಇಂದ.
ಸತೀಶ್ ಜಿ.ಟಿ.
ವರದಿಗಾರ,
ದಿ ಹಿಂದು,
ಹಾಸನ.

ಗೆ.
ಅಧ್ಯಕ್ಷರು,
ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘ,
ಬೆಂಗಳೂರು.

ಅಧ್ಯಕ್ಷರೆ,

ವಿಷಯ: ಹಾಸನದಲ್ಲಿ ಬೆಳಕಿಗೆ ಬಂದ ‘ಪ್ಯಾಕೆಜ್ ಸಂಸ್ಕೃತಿ’ ಮತ್ತು ಸಂಘದ ಪದಾಧಿಕಾರಿಯೊಬ್ಬರಿಂದ ಮುಖ್ಯವಾಹಿನಿ ಪತ್ರಿಕೆಗಳ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ನಿಮಗೆ ದೂರು ಸಲ್ಲಿಸುವುದು.

‘ಭ್ರಷ್ಟರಿಂದ ಪತ್ರಿಕೋದ್ಯಮವನ್ನು ಮುಕ್ತ ಗೊಳಿಸುವುದು’ – ಈ ಸಂಘದ ಆಶಯಗಳಲ್ಲಿ ಒಂದು ಎಂದು ಭಾವಿಸಿ ಹಾಗೂ ನಾನು ಕೆಲಸ ಮಾಡುತ್ತಿರುವ “ದಿ ಹಿಂದು” ಪತ್ರಿಕೆಯ ಮ್ಯಾನೇಜ್‌ಮೆಂಟ್‌ನವರ ಸೂಚನೆ ಮೇರೆಗೆ ಈ ಪತ್ರವನ್ನು ನಿಮಗೆ ಬರೆಯುತ್ತಿದ್ದೇನೆ.

ದಿನಾಂಕ ಅಕ್ಟೋಬರ್ 3 ರಂದು ಹಾಸನ ನಗರದಲ್ಲಿ ಕಾಂಗ್ರೆಸ್ ಪಕ್ಷ ಮಹಿಳಾ ಸಮಾವೇಶ ಆಯೋಜಿಸಿತ್ತು. ಸಮಾವೇಶದ ಬಗ್ಗೆ ಹಾಸನ ಜಿಲ್ಲೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಶಿವರಾಂ ಕೆಲವೇ ದಿನಗಳ ಹಿಂದೆ ಪತ್ರಿಕಾ ಗೋಷ್ಟಿ ನಡೆಸಿ ಪತ್ರಕರ್ತರಿಗೆ ಮಾಹಿತಿ ನೀಡಿದ್ದರು.

ಸಮಾವೇಶದ ದಿನ (ಅಕ್ಟೋಬರ್ 3ರಂದು) ಬೆಳಗ್ಗೆ 11.01 ಗಂಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೀಲಾವತಿಯವರು ದೂರವಾಣಿ ಮೂಲಕ (ಅವರ ದೂರವಾಣಿ ಸಂಖ್ಯೆ 94486 55043) ನನ್ನನ್ನು ಸಂಪರ್ಕಿಸಿ ‘ನೀವು ದಯಮಾಡಿ ಕಾರ್ಯಕ್ರಮಕ್ಕೆ ಬನ್ನಿ’ ಎಂದರು. ಅದಕ್ಕೂ ಮೊದಲು “ಕಾಂಗ್ರೆಸ್‌ನವರು ನನಗೆ ಮತ್ತು ಕೆಲ ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದಾರಷ್ಟೆ. ಆದರೆ ಸುದ್ದಿವಾಹಿನಿಯ ವರದಿಗಾರರು ಈ ಬಗ್ಗೆ ಏನೇನೋ ಮಾತನಾಡುತ್ತಿದ್ದಾರೆ…” – ಹೀಗೆ ಹೇಳಿದರು. ಅವರ ಮಾತಿನ ಹಿನ್ನೆಲೆ ಗ್ರಹಿಸಲಾಗಲಿಲ್ಲ. ಆದರೆ ಕಾರ್ಯಕ್ರಮಕ್ಕೆ ದಯಮಾಡಿ ಬನ್ನಿ ಎಂದು ಹೇಳಿದ್ದು ಮಾತ್ರ ಸ್ಪಷ್ಟ.

ಇದೇ ರೀತಿ ಇನ್ನೊಂದು ಇಂಗ್ಲಿಷ್ ಪತ್ರಿಕೆ ವರದಿಗಾರನಿಗೂ ದೂರವಾಣಿ ಕರೆ ಮಾಡಿ, ಆ ವರದಿಗಾರ ರಜೆಯ ಮೇಲೆ ಊರಿಗೆ ತೆರಳಿದ್ದರೂ, “ಹೇಗಾದರೂ ಮಾಡಿ ಒಂದೇ ಒಂದು ಸಾಲಿನಷ್ಟಾದರೂ ಈ ಕಾರ್ಯಕ್ರಮದ ವರದಿ ನಿಮ್ಮ ಪತ್ರಿಕೆಯಲ್ಲಿ ಬರುವಂತೆ ಮಾಡು, ಬೇಕಾದರೆ ನಿನ್ನ ಕಾಲಿಗೆ ಬೀಳುತ್ತೇನೆ..” ಎಂದು ಲೀಲಾವತಿಯವರು ಗೋಗರೆದಿದ್ದರು. ವರದಿಗಾರ ಮಿತ್ರ ಈ ಸಂಗತಿಯನ್ನು ಆಪ್ತರ ಬಳಿ ಹಂಚಿಕೊಂಡಿದ್ದಾನೆ.

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ಹೀಗೆ ಇವರು ಆಹ್ವಾನ ನೀಡಿದ್ದು ಮತ್ತು ಗೋಗರೆದಿದ್ದು ತೀರಾ ವಿಚಿತ್ರ ಎನಿಸಿತು. ಕೆಲವೇ ನಿಮಿಷಗಳ ನಂತರ ಈ ವರ್ತನೆ ಮೂಲ ಉದ್ದೇಶ ಸ್ಪಷ್ಟವಾಯಿತು.

ಸುದ್ದಿ ವಾಹಿನಿಯೊಂದರ ವರದಿಗಾರ ಮಿತ್ರನಿಗೆ, ಬಿ.ಶಿವರಾಂ ಪತ್ರಿಕಾಗೋಷ್ಟಿಗೆ ತಡವಾಗಿ ಬಂದಿದ್ದರ ಕಾರಣ, ಕಾಂಗ್ರೆಸ್ ಸಮಾವೇಶದ ಬಗ್ಗೆ ಮಾಹಿತಿ ಇರಲಿಲ್ಲ. ಸಮಾವೇಶದ ದಿನ ಹೈಸ್ಕೂಲ್ ಆವರಣದಲ್ಲಿ ಶಾಮಿಯಾನ ಹಾಕಿದ್ದನ್ನು ನೋಡಿ, ಅಲ್ಲಿಯೇ ಇದ್ದ ಹಾಸನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಲಲಿತಮ್ಮನವರನ್ನು ವಿಚಾರಿಸಿದ್ದಾರೆ. ಆಗ ಅವರಿಂದ ಬಂದ ಉತ್ತರ, “ಯಾಕ್ರಿ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲವಾ? ನಿಮಗೆ ಕೊಡಬೇಕಾದ ಪ್ಯಾಕೇಜನ್ನೆಲ್ಲಾ ನಿಮ್ಮ ಸಂಘದ ಅಧ್ಯಕ್ಷೆ ಲೀಲಾವತಿಯವರಿಗೆ ಕೊಟ್ಟಿದ್ದೇವಲ್ಲ, ಅವರು ಹೇಳಲಿಲ್ಲವಾ? ಇನ್ನು ನಿಮಗೆ ಕೊಡಬೇಕಾದ್ದು ಏನಾದರೂ ಇದ್ದರೆ, ಬನ್ನಿ ತಗೊಂಡು ಹೋಗಿ ಸುದ್ದಿ ಮಾಡಿ..” ಎಂದು ದರ್ಪದಿಂದಲೇ ಮಾತನಾಡಿದ್ದಾರೆ.

ಯಾವ ಸುದ್ದಿಗೂ ಯಾವ ದಿನವೂ ಯಾರ ಬಳಿಯೂ ಪುಡಿಕಾಸು ಕೇಳದ ನಾವು ಪಕ್ಷವೊಂದರ ಸಮಾವೇಶದಲ್ಲಿ ಸಾರ್ವಜನಿಕವಾಗಿ ಹೀಗೆ ಅನ್ನಿಸಿಕೊಳ್ಳಬೇಕಾಯಿತಲ್ಲ ಎಂದು ಕ್ರುದ್ಧನಾದ ವರದಿಗಾರ ತಕ್ಷಣ ಲೀಲಾವತಿಯವರಿಗೆ ದೂರವಾಣಿ ಕರೆ ಮಾಡಿ ಏನಿದರ ಮರ್ಮ ಎಂದು ಕೇಳಿದ್ದಾನೆ. ತಾನು ಕೆಲಸ ಮಾಡುತ್ತಿರುವ ಸುದ್ದಿ ಸಂಸ್ಥೆ ಹೆಸರಿನಲ್ಲಿ ‘ಪ್ಯಾಕೇಜ್’ ಕೇಳುವ ಮತ್ತು ಆ ಮೂಲಕ ಚಾನೆಲ್‌ಗೆ ಮಸಿ ಬಳಿಯುತ್ತಿರುವ ಬಗ್ಗೆ ತನ್ನ ಸಿಟ್ಟು ವ್ಯಕ್ತ ಪಡಿಸಿದ್ದಾನೆ.

ಈ ಘಟನೆಯಿಂದ ವಿಚಲಿತನಾದ ವರದಿಗಾರ ಇತರೆ ಮಿತ್ರರೊಂದಿಗೆ ತನ್ನ ನೋವನ್ನು ಹಂಚಿಕೊಂಡಾಗ ಲೀಲಾವತಿಯವರು ಫೋನ್ ಮಾಡಿದ್ದರ ಹಿಂದಿನ ಉದ್ದೇಶ ಅರ್ಥವಾಯಿತು. ವರದಿಗಾರನೊಂದಿಗೆ ಸಂಭಾಷಣೆ ನಂತರ ಕಾಂಗ್ರೆಸ್ ನಾಯಕಿ ಶ್ರೀಮತಿ ಲಲಿತಮ್ಮನವರು ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೀಲಾವತಿಯವರಿಗೆ ದೂರವಾಣಿ ಕರೆ ಮಾಡಿ ಯಾಕ್ರಿ ಯಾರಿಗೂ ನೀವು ಕಾರ್ಯಕ್ರಮದ ಬಗ್ಗೆ ಹೇಳಿಲ್ಲವೇ ಎಂದು ಕೇಳಿದ್ದಾರೆ. ಆ ನಂತರ ನನಗೂ ಮತ್ತು ಇನ್ನಿತರೆ ಮಿತ್ರರಿಗೂ ಲೀಲಾವತಿಯವರು ದೂರವಾಣಿ ಕರೆ ಮಾಡಿ ಕಾರ್ಯಕ್ರಮಕ್ಕೆ ಬನ್ನಿ ಎಂದು ಗೋಗರೆದಿದ್ದಾರೆ.

ಈ ಸನ್ನಿವೇಶಗಳನ್ನು ಗಮನಿಸಿದಾಗ ನಮ್ಮ (ದಿ ಹಿಂದು) ಪತ್ರಿಕೆಯನ್ನೂ ಸೇರಿದಂತೆ ಮುಖ್ಯವಾಹಿನಿಯ ಪತ್ರಿಕೆಗಳ ಹೆಸರುಗಳನ್ನು ಬಳಸಿಕೊಂಡು ಈ ಘನ ಸಂಘದ ಜಿಲ್ಲಾಧ್ಯಕ್ಷರು ‘ಪ್ಯಾಕೇಜ್’ ಸ್ವೀಕರಿಸಿರುವ ಅನುಮಾನ ಬರುತ್ತದೆ. ಅನುಮಾನಕ್ಕೆ ಕಾರಣಗಳನ್ನು ಹೀಗೆ ಪಟ್ಟಿ ಮಾಡಬಹುದು.

1. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಲಿಲತಮ್ಮನವರು ಸಮಾವೇಶದ ಸ್ಥಳದಲ್ಲಿ ಸುದ್ದಿ ವಾಹಿನಿಯ ವರದಿಗಾರನಿಗೆ ಹೇಳಿರುವ ಮಾತುಗಳು – ‘ಎಲ್ಲರಿಗೂ ಸೇರಿ ಪ್ಯಾಕೇಜನ್ನು ಈಗಾಗಲೇ ನಿಮ್ಮ ಅಧ್ಯಕ್ಷರಿಗೆ ನೀಡಿದ್ದೇವಲ್ಲ, ನಿಮಗೂ ಮತ್ತೇನಾದರೂ ಬೇಕಿದ್ದರೆ ತಗೊಂಡು ಹೋಗಿ ಸುದ್ದಿ ಮಾಡಿ..’ ಈ ಮಾತುಗಳನ್ನು ಕೇಳಿಸಿಕೊಂಡ ವರದಿಗಾರನ ಜೊತೆ ಕೆಮಾರಮನ್ ಕೂಡಾ ಇದ್ದರು. ರಾಷ್ಟೀಯ ಪಕ್ಷವೊಂದರ ಜವಾಬ್ದಾರಿ ಸ್ಥಾನದಲ್ಲಿರುವವರ ಹೇಳಿರುವ ಮಾತನ್ನು ಅಲ್ಲಗಳೆಯಲಾದೀತೆ?

2. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಶ್ರೀಮತಿ ಲೀಲಾವತಿಯವರು ನನಗೆ ಮತ್ತು ಇತರೆ ಪತ್ರಕರ್ತರಿಗೆ ದೂರವಾಣಿ ಕರೆಮಾಡಿ ಕಾಂಗ್ರೆಸ್ ಸಮಾವೇಶಕ್ಕೆ ಬರುವಂತೆ ಆಹ್ವಾನಿಸಿದ್ದು. (ಇವರು ಪ್ಯಾಕೇಜ್ ಲಾಭ ಪಡೆಯದಿದ್ದರೆ ನಮಗೆ ಫೋನ್ ಮಾಡಿ ಆಹ್ವಾನಿಸಲು ಇವರ್ಯಾರು? ಅಥವಾ ಇವರೇನು ಕಾಂಗ್ರೆಸ್ ಕಾರ್ಯಕರ್ತರೆ?)

3. “ಕಾರ್ಯಕ್ರಮದ ವರದಿ ಒಂದು ಸಾಲಿನಷ್ಟಾದರೂ ನಿಮ್ಮ ಪತ್ರಿಕೆಯಲ್ಲಿ ಪ್ರಕಟವಾಗುವಂತೆ ನೋಡಿಕೋ, ಬೇಕಾದರೆ ನಿನ್ನ ಕಾಲಿಗೆ ಬೀಳುತ್ತೇನೆ..” ಎಂದು ಸಂಘದ ಅಧ್ಯಕ್ಷರು ಕೋರುತ್ತಾರೆಂದರೆ ಅದರ ಹಿಂದಿನ ಮರ್ಮವೇನು? ಪತ್ರಕರ್ತರ ಸಂಘದ ಅಧ್ಯಕ್ಷರು ಕಾಂಗ್ರೆಸ್ ಕಾರ್ಯಕ್ರಮ ಪ್ರಮುಖ ಪತ್ರಿಕೆಗಳಲ್ಲಿ ವರದಿಯಾಗುವಂತೆ ನೋಡಿಕೊಳ್ಳುತ್ತೇನೆಂದು ಪಕ್ಷದ ನೇತಾರರಿಗೆ ಭರವಸೆ ನೀಡಿದ್ದರೆ?

ರಾಷ್ಟ್ರಮಟ್ಟದಲ್ಲಿ ‘ಪೇಯ್ಡ್ ನ್ಯೂಸ್’ ವಿರುದ್ಧ ದನಿ ಎತ್ತಿರುವವರ ಪೈಕಿ ದಿ ಹಿಂದು ಪತ್ರಿಕೆ ಪ್ರಮುಖವಾದದ್ದು. ಪ್ರಸ್ತುತ ಘಟನೆಯಲ್ಲಿ ನಮ್ಮ ಪತ್ರಿಕೆಯ ಹೆಸರನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿರುವ ಸಂಶಯಗಳಿವೆ. ಈ ಬಗ್ಗೆ ನಮ್ಮ ಸಂಸ್ಥೆಗೂ ಮಾಹಿತಿ ನೀಡಿದ್ದೇನೆ. ಅವರ ಸೂಚನೆ ಮೇರೆಗೆ ಈ ದೂರನ್ನು ನಿಮಗೆ ಸಲ್ಲಿಸುತ್ತಿದ್ದೇನೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೀರೆಂದು ನಿರೀಕ್ಷಿಸುತ್ತೇನೆ.

ಇತಿ,
ಸತೀಶ್ ಜಿ.ಟಿ
ಹಾಸನ
05-10-2012

• ದೂರು ನೀಡುತ್ತಿರುವುದು ನಮ್ಮ ಸಂಸ್ಥೆಯ ಸೂಚನೆ ಮೇರೆಗೆ. ಮಿತ್ರರು ಪ್ರತಿನಿಧಿಸುವ ಸಂಸ್ಥೆಗಳು ದೂರು ನೀಡುವ ನಿರ್ಧಾರದ ಬಗ್ಗೆ ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದು ಗೊತ್ತಿಲ್ಲ. ಹಾಗಾಗಿ ನಾನು ಈ ಪತ್ರದಲ್ಲಿ ಉಲ್ಲೇಖಿಸಿರುವ ವರದಿಗಾರ ಮಿತ್ರರನ್ನು ಮತ್ತು ಅವರು ಪ್ರತಿನಿಧಿಸುವ ಸುದ್ದಿ ಸಂಸ್ಥೆಗಳನ್ನು ಹೆಸರಿಸಿಲ್ಲ.
• ಈ ದೂರಿನ ಪ್ರತಿಯನ್ನು ಹಾಸನ ಜಿಲ್ಲಾ ಸಂಘದ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರಿಗೂ ಕಳುಹಿಸುತ್ತಿದ್ದೇನೆ. ಅಧ್ಯಕ್ಷರ ಮೇಲೆಯೇ ಆರೋಪ ಇರುವುದರಿಂದ, ಅವರಿಗೆ ಪ್ರತಿ ಕಳುಹಿಸುವುದು ಅರ್ಥಹೀನ ಎಂಬುದು ನನ್ನ ಅನಿಸಿಕೆ.

ಈ ದೂರನ್ನು ನೀಡಿರುವುದು 2012ರ ಅಕ್ಟೋಬರ್ 5ರಂದು. “ದಿ ಹಿಂದೂ” ನಂಥ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವ ಯಾವುದೇ ಪತ್ರಕರ್ತ ತಮ್ಮ ಹೆಸರಲ್ಲಿ, ತಮ್ಮ ಸಂಸ್ಥೆ ವಿಷಯದಲ್ಲಿ ಸುದ್ದಿಗಾಗಿ ಕಾಸು ಎತ್ತುತ್ತಿರುವುದು ಕಂಡುಬಂದರೆ ಏನನ್ನು ಮಾಡಬಹುದೋ ಅದನ್ನೇ ಸತೀಶ್ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕ್ರಮ ಕೈಗೊಳ್ಳುವುದಿರಲಿ, ದೂರು ತಲುಪಿರುವ ಕುರಿತು ಒಂದು ಸಾಲಿನ ಪ್ರತಿಕ್ರಿಯೆಯನ್ನೂ ಸತೀಶ್ ಅವರಿಗೆ ನೀಡಿಲ್ಲ. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳನ್ನು ಗಮನಿಸಿದರೆ ಇಂಥ ಪ್ರತಿಕ್ರಿಯೆ, ಕ್ರಮ ಕೈಗೊಳ್ಳುವ ಸಾಧ್ಯತೆಗಳು ತೀರಾ ಕಡಿಮೆ. ಅದು ಬೇರೆಯ ವಿಷಯ.

ತಮಾಶೆಯೆಂದರೆ ಈಗ ನಾಲ್ಕು ತಿಂಗಳ ಬಳಿಕ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸತೀಶ್ ಅವರ ಸದಸ್ಯತ್ವ ರದ್ದುಗೊಳಿಸುವುದಾಗಿ ಗುಟುರು ಹಾಕುತ್ತಿದೆ. ಪತ್ರಿಕಾಗೋಷ್ಠಿಗಳಿಗೆ ಸೇರಿಸುವುದಿಲ್ಲ ಎಂದು ಯಜಮಾನಿಕೆ ದರ್ಪ ಪ್ರದರ್ಶಿಸಿದೆ.

ಹಾಸನ ಜಿಲ್ಲೆಯ ಪತ್ರಿಕಾರಂಗದ ಇತಿಹಾಸ ದೊಡ್ಡದು. ಇಲ್ಲಿ ತಮ್ಮ ಇಡೀ ಜೀವನವನ್ನೇ ಪತ್ರಿಕಾವೃತ್ತಿಗೆ ಸಮರ್ಪಿಸಿದ ಕೃ.ನ,ಮೂರ್ತಿಯಂಥವರಿದ್ದರು. ಪತ್ರಿಕಾವೃತ್ತಿಯನ್ನೇ ಒಂದು ಚಳವಳಿಯನ್ನಾಗಿಸಿಕೊಂಡ ಆರ್.ಪಿ.ವೆಂಕಟೇಶ್ ಮೂರ್ತಿ, ಮಂಜುನಾಥ ದತ್ತ ಅಂಥವರಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ನಂತರ ಬೆಂಗಳೂರು ಸೇರಿದಂತೆ ಬೇರೆಬೇರೆ ಕಡೆ ಪ್ರತಿಷ್ಠಿತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವರಿದ್ದಾರೆ. ಶೇಷಾದ್ರಿ, ರಂಗನಾಥ್, ಎಚ್.ಬಿ.ಮದನ್ ಗೌಡ, ವೈ.ಪಿ.ರಾಜೇಗೌಡ, ಬಿ.ಜೆ.ಮಣಿ, ಮಂಜುನಾಥ್, ಕೆಂಚೇಗೌಡ, ಪ್ರಸನ್ನ ಕುಮಾರ್, ಬಾಳ್ಳು ಗೋಪಾಲ್, ಡಿ.ಜಿ.ರಾಜೇಶ್, ರವಿ ನಾಕಲಗೋಡು, ವೇಣು, ವೆಂಕಟೇಶ್, ರವಿಕುಮಾರ್, ಹರೀಶ್, ಬಿ.ಮಂಜು ಹೀಗೆ ನೆನಪಿಸಿಕೊಳ್ಳಲು ಹಾಸನದಲ್ಲಿ ಹತ್ತು ಹಲವಾರು ಹೆಸರುಗಳಿವೆ.

ಹೀಗಿರುವಾಗ ಇಂಥ ಅನೈತಿಕವಾದ, ಮುಖೇಡಿಯಾದ ತೀರ್ಮಾನವನ್ನು ಜಿಲ್ಲಾ ಪತ್ರಕರ್ತರ ಸಂಘ ತೆಗೆದುಕೊಳ್ಳುತ್ತದೆ ಎಂದು ನಂಬುವುದಾದರೂ ಹೇಗೆ? ಅಷ್ಟಕ್ಕೂ ಸಂಘದಿಂದ ಉಚ್ಛಾಟಿಸಿದ ಮಾತ್ರಕ್ಕೆ, ಪತ್ರಿಕಾಗೋಷ್ಠಿ ವರದಿಗಾರಿಕೆಗೆ ನಿರ್ಬಂಧಿಸಿದ ಮಾತ್ರಕ್ಕೆ ಸತೀಶ್ ಅವರ ವೃತ್ತಿಜೀವನವನ್ನು ಕಸಿದುಕೊಳ್ಳಲಾದೀತೆ? ಒಂದು ವೇಳೆ ಸತೀಶ್ ವೃತ್ತಿಯನ್ನು ಕಸಿದುಕೊಳ್ಳುವುದು ಸಂಘದ ಹವಣಿಕೆಯಾದರೆ ಇದೆಂಥ ಸಂಘ?

ನಾನು ಹಲವು ವರ್ಷಗಳ ಕಾಲ ಇದೇ ಹಾಸನ ಜಿಲ್ಲೆಯಲ್ಲಿ ಪತ್ರಿಕಾ ವೃತ್ತಿ ನಡೆಸಿದವನು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷನಾಗಿ, ಜಿಲ್ಲಾ ಸಂಘದ ಕಾರ್ಯಕಾರಿಣಿ ಸದಸ್ಯನಾಗಿಯೂ ಕೆಲಸ ಮಾಡಿದ್ದೇನೆ. ಈ ನೋಟೀಸನ್ನು ಗಮನಿಸಿದಾಗ ನಿಜಕ್ಕೂ ನೋವಾಯಿತು. ಸತೀಶ್ ಅವರನ್ನು ಅವಮಾನಿಸುವ ಭರದಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘ ತನ್ನನ್ನು ತಾನು ಅಪಮಾನಿಸಿಕೊಂಡಿದೆ. ಕಾಸಿಗಾಗಿ ಸುದ್ದಿ ವಿರುದ್ಧ ಧ್ವನಿಯೆತ್ತಿದ ಪತ್ರಕರ್ತನ ನ್ಯಾಯಶೀಲತೆಯನ್ನು, ವೃತ್ತಿಧರ್ಮವನ್ನು ಗೌರವಿಸುವ, ಪ್ರಶಂಶಿಸುವ ಬದಲು ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡು ಪಾತಾಳಕ್ಕೆ ಇಳಿದಿದೆ.

ಮೇಲೆ ಉಲ್ಲೇಖಿಸಿದ, ಉಲ್ಲೇಖಿಸದೇ ಇರುವ ಹಾಸನ ಜಿಲ್ಲೆಯ ಎಲ್ಲ ಪತ್ರಕರ್ತ ಮಿತ್ರರಿಗೆ ನನ್ನದೊಂದು ಪ್ರೀತಿಯ ಮನವಿ. ಇದೊಂದು ಕಪ್ಪುಚುಕ್ಕೆ ಅಳಿಸುವುದು ನಿಮ್ಮ ಕೈಯಲ್ಲೇ ಇದೆ. ಸತೀಶ್ ಅವರಿಗೆ ಕಳುಹಿಸಿರುವ ನೋಟೀಸನ್ನು ಬೇಷರತ್ತಾಗಿ ಹಿಂದಕ್ಕೆ ಪಡೆಯುವ ಕೆಲಸ ತುರ್ತಾಗಿ ಆಗಬೇಕಿದೆ. ಕಾಸಿಗಾಗಿ ಸುದ್ದಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಅಭಿಯಾನ ತೀವ್ರಗತಿಯಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಪತ್ರಕರ್ತರು ಈ ನೋಟೀಸಿನ ಕಾರಣಕ್ಕೆ ತಲೆತಗ್ಗಿಸಿ ನಿಲ್ಲುವಂತಾಗಬಾರದು. ಸತೀಶ್ ಅವರಿಗೆ ತಮ್ಮ ವೃತ್ತಿಯನ್ನು ಯಾರ ಅಡ್ಡಿ, ಆತಂಕ, ಹಸ್ತಕ್ಷೇಪ, ಬೆದರಿಕೆಗಳು ಇಲ್ಲದಂತೆ ನಡೆಸಿಕೊಂಡು ಹೋಗುವಂತೆ ಸಹಕರಿಸಬೇಕು.

ಅದು ಸಾಧ್ಯವಾಗದೆ ಹೋದರೆ, ನಾಡಿನ ನ್ಯಾಯಪರವಾದ ಮನಸ್ಸುಗಳು ಅನಿವಾರ್ಯವಾಗಿ ಜಿಲ್ಲಾ ಪತ್ರಕರ್ತರ ಸಂಘದ ಎದುರೇ ಬಂದು ಧರಣಿ ನಡೆಸಿ, ನಿಮ್ಮ ಕಣ್ಣುಗಳನ್ನು ತೆರೆಸಬೇಕಾದೀತು. ವಿಷಯ ದೊಡ್ಡದಾಗುವ ಮುನ್ನ ಜಿಲ್ಲಾ ಪತ್ರಕರ್ತರು ಎಲ್ಲದಕ್ಕೂ ತೆರೆ ಎಳೆದಾರೆಂಬ ನಂಬಿಕೆ ನನ್ನದು. ಯಾಕೆಂದರೆ ಜಿಲ್ಲೆಯ ಪತ್ರಕರ್ತರು ಒಬ್ಬ ಪ್ರಾಮಾಣಿಕ ಪತ್ರಕರ್ತನನ್ನು ಬಲಿ ತೆಗೆದುಕೊಳ್ಳುವಷ್ಟು ಅಮಾನವೀಯರು, ಹೇಡಿಗಳು, ಫ್ಯಾಸಿಸ್ಟ್‌ಗಳು ಅಲ್ಲ ಎನ್ನುವುದು ನನಗೆ ಚೆನ್ನಾಗಿ ಗೊತ್ತು.

ಅಮಲಿನಲ್ಲಿರುವವರಿಗೆ ಕಳಕಳಿಯ ಮನವಿ ಅಣಕದಂತೆ ಕಂಡಿತೆ?

– ರಂಜನ್ ರಾಗಿಗುಡ್ಡ

ಸಿಯೆರಾ ಲಿಯೋನ್ ನಲ್ಲಿ ನಡೆದ (1999) ಬಂಡುಕೋರರ ದಾಳಿಯಲ್ಲಿ ಅನೇಕ ಅಮಾಯಕರು ಸತ್ತರು. ಮಕ್ಕಳನ್ನೂ ಕೊಂದರು. ಬಂಡುಕೋರರ ತಂಡದ ನಾಯಕನೊಬ್ಬ ಬಿಬಿಸಿಗೆ ಸಂದರ್ಶನ ನೀಡಿದ. ಸಂದರ್ಶಕ, ‘ಹೆಣ್ಣು ಮಕ್ಕಳು..ಮಕ್ಕಳು ನಿಮ್ಮನ್ನು ದಯವಿಟ್ಟು ನಮ್ಮನ್ನು ಬಿಟ್ಟುಬಿಡಿ ಎಂದು ಕೇಳಿದಾಗಲೂ ನಿಮಗೆ ಏನೂ ಅನ್ನಿಸುತ್ತಿರಲಿಲ್ಲವೆ’ ಎಂದು ಕೇಳುತ್ತಾನೆ. ಬಂಡುಕೋರ ಹೇಳುತ್ತಾನೆ.. “ನಾವು ದಾಳಿ ಮಾಡುವಾಗ ಮಾದಕ ವಸ್ತು ಸೇವಿಸಿರುತ್ತಿದ್ದ ಕಾರಣ ಅಮಲಿನಲ್ಲಿರುತ್ತಿದ್ದೆವು. ಯಾರಾದರೂ ಪ್ಲೀಸ್ ಎಂದು ಬೇಡಿಕೊಂಡರೆ ನಮಗೆ ಅವರ ಕೋರಿಕೆ ನಮ್ಮನ್ನು ಅಣಕ ಮಾಡಿದಂತೆ ಎನಿಸುತ್ತಿತ್ತು. ನಾವು ಆಗ ಮತ್ತಷ್ಟು ಹಿಂಸೆ ಮಾಡಲು ಪ್ರಚೋದಿತರಾಗುತ್ತಿದ್ದೆವು..”

ಮಂಗಳೂರಿನ ವರದಿಗಾರ ಮಿತ್ರ ನವೀನ್ ಸೂರಿಂಜೆ ವಿರುದ್ದ ದುರುದ್ದೇಶದಿಂದ ಕೇಸು ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ, ದಯವಿಟ್ಟು ಅವನ ವಿರುದ್ಧದ ಸುಳ್ಳು ಕೇಸುಗಳನ್ನು ಹಿಂದಕ್ಕೆ ಪಡೆಯಿರಿ ಎಂದು ಕೇಳುವಾಗಲೂ.. naveen-soorinjeಬಹುಶಃ ಈ ಅಮಲಿನಲ್ಲಿರುವ ವ್ಯವಸ್ಥೆಗೆ ಅಣಕ ಮಾಡಿದಂತೆ ಕಾಣಿಸಬಹುದು. ವ್ಯವಸ್ಥೆ ಎಂದರೆ ಕೇವಲ ಆಡಳಿತದಲ್ಲಿರುವ ಸರಕಾರ ಮಾತ್ರ ಅಲ್ಲ. ಸರಕಾರವನ್ನು ಆಡಿಸುತ್ತಿರುವ ಕೈಗಳು, ಮಹಿಳೆಯರ ಉಡುಪನ್ನು ನಿರ್ಧರಿಸುವ ಸಂಘ ಸಂಸ್ಥೆಗಳು ಮತ್ತು ಇಂಥ ಘಾತುಕ ಶಕ್ತಿಗಳನ್ನು ಬೆಂಬಲಿಸುವ ಮನಸ್ಸುಗಳು – ಎಲ್ಲವೂ ಅಮಲಿನಲ್ಲಿಯೇ ಇವೆ ಎಂದೆನಿಸುತ್ತದೆ.

ಕೃಷ್ಣ ಜೆ. ಪಾಲೆಮಾರ್ ಎಂಬ ಮಾಜಿ ಮಂತ್ರಿಗೆ ನವೀನ್ ಸೂರಿಂಜೆ ವಿರುದ್ಧದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸಮ್ಮತವಲ್ಲ. ಅವರ ಕಡೆಯ ಅನೇಕ ಅಮಾಯಕರೂ ಇದೇ ಪ್ರಕರಣದಲ್ಲಿ ಸಿಕ್ಕಿ ಜೈಲಿನಲ್ಲಿದ್ದಾರಂತೆ..ಅವರ ಬಿಡುಗಡೆಯೂ ಆಗುವುದಾದರೆ ಮಾತ್ರ ಸೂರಿಂಜೆಯನ್ನು ಬಿಡುಗಡೆ ಮಾಡಬೇಕಂತೆ. ಮತ್ತೊಬ್ಬ ಘನ ಮಂತ್ರಿ ತನ್ನ ಅಸಹಾಯಕತೆಯನ್ನು ಆಪ್ತರ ಬಳಿ ತೋಡಿಕೊಂಡಿದ್ದಾರೆ. ಇದೆಲ್ಲದರ ಹಿಂದೆ ಮಂಗಳೂರು ಭಾಗದಲ್ಲಿ ಕೋಮುವಾದದ ಅಮಲನ್ನು ಹಂಚುತ್ತಿರುವ ಕಲ್ಲು ಹೃದಯದವರೊಬ್ಬರ ಪ್ರಭಾವ ನಿಚ್ಚಳವಾಗಿ ಕಾಣುತ್ತಿದೆ.

ಮಂಗಳೂರಿನ ಕಾರಾಗೃಹದಲ್ಲಿ ನವೀನ್ ಸೂರಿಂಜೆ ಬಂಧಿತನಾಗಿರುವುದು ಮುಸಲ್ಮಾನ ಮಿತ್ರರು ಇರುವಂತಹ ಕೋಣೆಯಲ್ಲಿ. ಹೋಮ್ ಸ್ಟೇ ಪ್ರಕರಣದಲ್ಲಿ ಬಂಧಿಗಳಾಗಿರುವ ಇತರರು ಪ್ರತ್ಯೇಕ ಕೋಣೆಯಲ್ಲಿದ್ದಾರೆ. ಹೋಮ್ ಸ್ಟೇ ದಾಳಿಯ ಸಂಚಿನಲ್ಲಿ ಸೂರಿಂಜೆಯ ಪಾತ್ರ ಇಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಲು ನವೀನ್ ಮತ್ತು ಪ್ರಕರಣದ ಇತರರು ಮುಖಾಮುಖಿಯಾಗುವುದನ್ನು ತಡೆಯುವ ಸಲುವಾಗಿ ಬೇರೆ ಬೇರೆ ಕೋಣೆಯಲ್ಲಿ ಇರಿಸಲಾಗಿದೆ ಎಂಬ ಸಂಗತಿಯಷ್ಟೇ ಸಾಕು,

ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಳ್ಳದಷ್ಟು ಮೂರ್ಖರಲ್ಲ ಮಿಸ್ಟರ್ ಜಗದೀಶ್ ಶೆಟ್ಟರ್. Jagadish Shettarಆದರೆ ಅವರು ಬಹುಶಃ ಸಂಘ ಪರಿವಾರ ಹಂಚಿರುವ ಮಾದಕ ಸಿದ್ಧಾಂತದ ಪರಿಣಾಮ ಉಂಟಾಗಿರುವ ಅಮಲಿನಲ್ಲಿದ್ದಾರೆ. ಇಲ್ಲವಾದರೆ ಹಿಂದಿನ ಕ್ಯಾಬಿನೆಟ್ ತೀರ್ಮಾನದ ನಂತರವೂ ಸಹಿ ಹಾಕಲು ಹಿಂಜರಿಯುತ್ತಿರಲಿಲ್ಲ. ಸಚಿವ ಸುರೇಶ್ ಕುಮಾರ್ ಕ್ಯಾಬಿನೆಟ್ ಮೀಟಿಂಗ್ ನಂತರದ ಪತ್ರಿಕಾ ಗೋಷ್ಟಿಯಲ್ಲಿ ಸೂರಿಂಜೆ ವಿರುದ್ಧದ ಪ್ರಕರಣ ಹಿಂಪಡೆಯಲು ಮಂತ್ರಿ ಮಂಡಲ ತೀರ್ಮಾನಿಸಿದೆ ಎಂದು ಘೋಷಿಸಿದ್ದರು. ಆದರೆ ಇದುವರೆಗೂ ಮುಖ್ಯಮಂತ್ರಿ ಅದಕ್ಕೆ ಅಧಿಕೃತ ಮುದ್ರೆ ಒತ್ತಿಲ್ಲ.

ನವೆಂಬರ್ 7 ರಂದು ಜೈಲು ಸೇರಿದ ನವೀನ್ ಸೂರಿಂಜೆ ಈಗಾಗಲೆ ಹತ್ತಿರ ಹತ್ತಿರ ನಾಲ್ಕು ತಿಂಗಳ ಕಾಲ ಶಿಕ್ಷೆ ಅನುಭವಿಸಿದ್ದಾರೆ. ನವೀನ್ ಒಬ್ಬ ವರದಿಗಾರನಾಗಿ ಮುಖವಾಡ ಕಳಚಿದ್ದ ಅನೇಕರಿಗೆ ಇದು ಖುಷಿಯ ಸಂಗತಿ. ಅಷ್ಟೇ ಏಕೆ, ಮಂತ್ರಿಯೊಬ್ಬರು ಆಪ್ತರೊಬ್ಬರ ಹತ್ತಿರ ಮಾತನಾಡುತ್ತಾ ಸರಕಾರದ ಹೆಸರಿಗೇ ಮಸಿ ಬಳಿಯಲು ಪ್ರಯತ್ನಪಟ್ಟವನನ್ನು ಸುಮ್ಮನೆ ಬಿಡಲು ಸಾಧ್ಯವೇ.. ಎಂದಿದ್ದರು.

ಅದಕ್ಕೆ ಪದೇ ಪದೇ ಅನ್ನಿಸುತ್ತೆ – ಇವರೆಲ್ಲಾ ಅಮಲಿನಿಂದ ಹೊರಬರೋದು ಯಾವಾಗ?