ಆತಂಕದಲ್ಲಿ ತಲ್ಲಣಿಸುತ್ತಿದೆ ಹೆಣ್ಣುಜೀವ

– ರೂಪ ಹಾಸನ

ಹಳ್ಳಿಯ ಬಡಕುಟುಂಬವೊಂದರ 11 ವರ್ಷಗಳ ಎಳೆಬಾಲೆ ಅವಳು. ಋತುಮತಿಯಾಗಿ ಆರು ತಿಂಗಳೂ ಕಳೆದಿಲ್ಲ. ಲೈಂಗಿಕತೆ ಎಂದರೇನೆಂದು ಇರಲಿ, ಪ್ರೀತಿ-ಪ್ರೇಮವೆಂದರೆ ಏನೆಂದೂ ಅರಿಯದ ಮುಗ್ಧಳು. ಶಾಲೆಗೆ ಬಿಡಲು ಕರೆದುಕೊಂಡು ಹೋದ ಸಂಬಂಧಿಯಿಂದಲೇ ಕಳೆದ ವಾರವಷ್ಟೇ ಅವಳ ಅತ್ಯಾಚಾರವಾಗಿದೆ. ಮೈಮನಸುಗಳೆರಡೂ ಜರ್ಜರಿತವಾಗಿ ನಡುಗುತ್ತಿರುವ ಆ ಕಂದಮ್ಮ ಇದನ್ನು, ಅವನು ಕೊಟ್ಟ ಶಿಕ್ಷೆ ಎಂದೇ ಭಾವಿಸಿದ್ದಾಳೆ. rape-illustration‘ನಾನೇನೂ ತಪ್ಪು ಮಾಡಿಲ್ಲದಿದ್ದರೂ, ಮಾಮ ನನಗೆ ಈ ಶಿಕ್ಷೆ ಯಾಕೆ ಕೊಟ್ಟರು?’ ಎಂಬ ಪ್ರಶ್ನೆಗೆ ಏನು ಉತ್ತರಿಸುವುದೆಂಬ ಅರಿವಿಲ್ಲದೇ ಕಂಗಳು ತುಂಬುತ್ತವೆ. ಆ ವ್ಯಕ್ತಿಗೆ ರಾಜಕೀಯ ಪ್ರಮುಖರ ನಿಕಟ ಸಂಪರ್ಕವಿರುವುದರಿಂದ ಕೇಸು ದಾಖಲು ಮಾಡಿಕೊಳ್ಳಲೇ ಪೊಲೀಸರು ಹಿಂದೆಗೆದಿರುವುದರಿಂದ ಮಗುವನ್ನು ಒಳಗೊಂಡು ಕುಟುಂಬದವರು ಇನ್ನೂ ಆತಂಕದಿಂದ ತಲ್ಲಣಿಸುತ್ತಿದ್ದಾರೆ. ಈಗ ಆ ಮಗು ಅನುಭವಿಸಿದ ವಿನಾ ಕಾರಣದ ಮಾನಭಂಗದ ಶಿಕ್ಷೆಗೆ ನ್ಯಾಯ ಯಾರು ಕೊಡುತ್ತಾರೆ?

ವೈದ್ಯಕೀಯ ನಿಯತಕಾಲಿಕವೊಂದರಲ್ಲಿ ವೈದ್ಯರೊಬ್ಬರು ಬರೆದುಕೊಂಡ ಸ್ವಾನುಭವದಂತೆ, 12 ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ, ಅಕ್ರಮ ಮಾರಾಟದ ದಂಧೆಗೆ ಸಿಕ್ಕು ನಾಲ್ಕು ವರ್ಷ ಕಳೆಯುವುದರೊಳಗೆ ಅನೇಕ ಮಾರಕ ಲೈಂಗಿಕ ರೋಗಗಳಿಗೆ ತುತ್ತಾಗಿ ನಿತ್ರಾಣಳಾಗಿ, ವೈದ್ಯರೊಂದಿಗೆ, ಆ ‘ಭಾಗವನ್ನೇ’ ದೇಹದಿಂದ ತೆಗೆದು ಹಾಕಿ ಬಿಡಿ ಡಾಕ್ಟರ್, ಅದಿದ್ದರೆ ತಾನೇ ಏನೆಲ್ಲ ಹಿಂಸೆ ಅನುಭವಿಸಬೇಕು ಎಂದುದನ್ನು ಕೇಳಿದ ನಂತರವೂ, ಹೆಣ್ಣು ತನ್ನದೇ ದೇಹದ ಬಗೆಗೆ ಹೇಸುವಂತೆ ಮಾಡಿರುವ ಈ ವ್ಯವಸ್ಥೆಯನ್ನು ಹೇಗೆ ಕ್ಷಮಿಸುವುದು?

ಅವಳು 14 ವರ್ಷದ ಬಡ ಅಂಧ ಬಾಲೆ. ವಸತಿಯುತ ಶಾಲೆಯಲ್ಲಿ ಓದುತ್ತಿರುವ ಆ ಮಗುವಿನ ಮೇಲೆ ಮತ್ತೆ ಮತ್ತೆ ನಡೆದ ಬಲಾತ್ಕಾರದಿಂದಾಗಿ, ಎರಡು ಬಾರಿ ಗರ್ಭಪಾತಮಾಡಿಸಿದಾಗ, ವೈದ್ಯ ಮಹಾಶಯ ‘ಗರ್ಭಕೋಶವನ್ನೇ ತೆಗೆಸಿಬಿಡಿ, ಹೇಗೋ ಉಪಯೋಗ ಆಗ್ತಾಳೆ. ಇವೆಲ್ಲ ಮಾಮೂಲು. ಸುಮ್ಮನೆ ಪದೇ ಪದೇ ರಗಳೆ ಯಾಕೆ ಅನುಭವಿಸ್ತೀರಾ?’ ಎಂದರೆ, ರೋಗಿಯನ್ನು ರಕ್ಷಿಸುವ ದಯಾಳುವಾಗಿರಬೇಕೆಂದು ನಾವು ಭಾವಿಸುವ ವೈದ್ಯನೂ, ಅಸಹಾಯಕ ಹೆಣ್ಣುಮಕ್ಕಳ ಅತ್ಯಾಚಾರವನ್ನು ಜನಸಾಮಾನ್ಯರು ಇಂದು ‘ಮಾಮೂಲು’ ಎಂದು ತಿಳಿದುಬಿಟ್ಟಿರುವಂತೆ ಇವರೂ ಭಾವಿಸುವುದಾದರೆ, ನಂಬಿಕೆ ಎಂಬ ಪದಕ್ಕೆ ಅರ್ಥವುಳಿದೀತೆ?

ಜಾಗತೀಕರಣದೊಂದಿಗೆ ಭಾರತವನ್ನು ಪ್ರವೇಶಿಸಿರುವ ವಿದೇಶಿ ಮಾರುಕಟ್ಟೆಯು, ಹೆಣ್ಣಿನ ದೇಹವನ್ನೇ ‘ಸರಕ’ನ್ನಾಗಿ ವಿಜೃಂಭಿಸಲು ನಮ್ಮ ಮಾಧ್ಯಮಗಳನ್ನು ಯಶಸ್ವಿಯಾಗಿ ಅನುವು ಗೊಳಿಸಿದೆ. ಅದರ ಪ್ರಭಾವದಿಂದಾಗಿ, ಹೆಣ್ಣಿನ ದೇಹದ ಮೇಲೆ ‘ಪ್ರಭುತ್ವ’ ಸ್ಥಾಪಿಸಲು, ಅದನ್ನು ‘ಉಪಯೋಗಿಸಿಕೊಳ್ಳಲು’ ಅನೇಕ ಅನೈತಿಕ ಮಾರ್ಗಗಳನ್ನು ನಮ್ಮ ಪುರುಷ ಪ್ರಧಾನ ವ್ಯವಸ್ಥೆ, ತನ್ನ ಮೂಗಿನ ನೇರಕ್ಕೆ ರೂಪಿಸಿಕೊಳ್ಳುತ್ತಿದೆ. sowjanya-rape-murderಹೆಣ್ಣಿನ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ, ಬಲಾತ್ಕಾರದ ಜೊತೆಗೆ ಕಣ್ಮರೆ, ಮಾರಾಟದ ಪ್ರಮಾಣದ ಸೂಚಿ ದಿನದಿಂದ ದಿನಕ್ಕೆ ಏರುತ್ತಿರುವುದೇ ಇದಕ್ಕೆ ಸಾಕ್ಷಿ. ‘ಹೆಣ್ಣುಮಕ್ಕಳ ಮೇಲೆ ಪ್ರತಿ 20 ನಿಮಿಷಕ್ಕೊಂದು ಅತ್ಯಾಚಾರ ನಡೆಯುತ್ತಿದೆಯೆಂಬ ಅಧ್ಯಯನ ವರದಿ ಸುಳ್ಳಾಗಲಿ’ ಎಂದು ನಾವೆಷ್ಟು ಬೇಡಿಕೊಂಡರೂ, ಇನ್ನೂ ದಾಖಲಾಗದ ಪ್ರಮಾಣವನ್ನು ನೆನೆದು ಉಸಿರು ಕಟ್ಟಿ, ಜೀವ ನಡುಗುತ್ತದೆ. ಭಾರತ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೊನೆಯಿಂದ ಎರಡನೆಯ ಸ್ಥಾನವನ್ನು ಪಡೆದಿರುವ, ವಿಶ್ವ ಮಟ್ಟದಲ್ಲಿ 80 ದೇಶಗಳಲ್ಲಿ ನಡೆದ ಅಧ್ಯಯನ ವರದಿಯನ್ನಂತೂ ನಾವು ಸುಳ್ಳೆನ್ನುವುದು ಸಾಧ್ಯವಿಲ್ಲವಲ್ಲ!

ವಿಶ್ವವಿದ್ಯಾಲಯವೊಂದರಲ್ಲಿ ಉನ್ನತ ಹುದ್ದೆಯಲ್ಲಿರುವ ‘ಸಾರ್ವಜನಿಕ ಗಣ್ಯ’ರೋರ್ವರು, ‘ಪತ್ನಿಯಾದವಳು ಯಾವ ಸಮಾನತೆ, ಸ್ವಾತಂತ್ರ್ಯವನ್ನಾದರೂ ಪಡೆಯಲಿ ಆದರೆ ಗಂಡ ಬಯಸಿದಾಗ ಅವನ ಬಯಕೆ ಪೂರೈಸಬೇಕು’ ಎನ್ನುತ್ತಾರೆ! ಪತ್ನಿಗೆ ಇಷ್ಟವಿಲ್ಲದಿದ್ದಾಗ ಕಾಮ ತೃಪ್ತಿಗಾಗಿ ಪೀಡಿಸುವುದನ್ನೂ ಅತ್ಯಾಚಾರವೆನ್ನುತ್ತದೆ ನಮ್ಮ ಕಾನೂನು. ಹೆಣ್ಣಿಗೂ ಒಂದು ಮನಸ್ಸಿದೆ. ಅದಕ್ಕೂ ತನ್ನದೇ ಇಷ್ಟಾನಿಷ್ಟಗಳಿವೆ ಎಂದು ಗೌರವಿಸದ ಯಾವನೇ ಮಹಾನ್ ಪುರುಷನಾದರೂ ಅವನು ಹೆಣ್ಣಿನ ಕಣ್ಣಲ್ಲಿ ಅನಾಗರಿಕನೇ! ವಿವಾಹ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ಇಂಥಹ ಅಸಂಖ್ಯ ಅತ್ಯಾಚಾರಗಳನ್ನು ಇಂದಿಗೂ ಯಾವ ಹೆಣ್ಣುಮಗಳೂ ಕೇಸು ದಾಖಲಿಸಿ ಪ್ರಶ್ನಿಸಿಲ್ಲ. ಇದಕ್ಕೆ ವಿರುದ್ಧವಾಗಿ ಸರಸ್ವತಿಯಿಂದ ಸಮ್ಮಾನಿತರೆಂದು ಬಿರುದು ಪಡೆದ ನಮ್ಮ ಮಹಾನ್ ಸಾಹಿತಿಗಳೊಬ್ಬರು ಮಾತ್ರ, ಭಾರತದ ಯಾವ ಮೂಲೆಯಲ್ಲೂ ಇಂತಹ ದಾಖಲೀಕರಣ ನಡೆದಿರದಿದ್ದರೂ, ಅಸಲಿಗೆ ಇಂತಹದೊಂದು ಕಾನೂನಿದೆ ಎಂದೂ 99% ಹೆಣ್ಣುಮಕ್ಕಳಿಗೆ ತಿಳಿದಿಲ್ಲದಿರುವಾಗ, ತಮ್ಮ ಕಾದಂಬರಿಯಲ್ಲಿ ಹೆಂಡತಿಯು ಗಂಡ ತನ್ನ ಕಾಮತೃಷೆ ತೀರಿಸಲಿಲ್ಲವೆಂದು ಅವನ ವಿರುದ್ಧವಾಗಿ ನ್ಯಾಯಾಲಯದ ಮೊರೆ ಹೋದ ಘಟನೆಯನ್ನು ವಿಜೃಂಭಿಸಿ ಚಿತ್ರಿಸುವಂತಾ ವಿಕೃತಿಯನ್ನು ಹೊಂದಿದ್ದಾರೆಂದರೆ ಅವರಿಗೆ ಯಾವ ಸನ್ಮಾನ ಮಾಡಿ ಗೌರವಿಸಬೇಕೋ ಅರ್ಥವಾಗುತ್ತಿಲ್ಲ!

ಯೂನಿಸೆಫ್‌ನ ಸ್ಟೇಟ್ ಆಫ್ ದಿ ವರ್ಲ್ಡ್ ಚಿರ್ಲ್ಡನ್-2009 ರ ವರದಿ, ‘47% ಭಾರತೀಯ ಹೆಣ್ಣುಮಕ್ಕಳ ವಿವಾಹ, ಕಾನೂನಿಗೆ ವಿರುದ್ಧವಾಗಿ 18 ವರ್ಷದೊಳಗೇ ನಡೆಯುತ್ತಿದೆ. ಇದರಲ್ಲಿ 56% ರಷ್ಟು ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಮತ್ತು ವಿಶ್ವದಲ್ಲಿ ನಡೆಯುವ ಬಾಲ್ಯ ವಿವಾಹಗಳಲ್ಲಿ 40% ಭಾರತದಲ್ಲೇ ನಡೆಯುತ್ತವೆ’ ಎಂದು ಹೇಳುತ್ತದೆ. ಬಾಲ್ಯ ವಿವಾಹ ಕಾನೂನಿನ ಕಣ್ಣಿನಲ್ಲಿ ಅಪರಾಧ. IndiaRapeಏಕೆಂದರೆ ಹೆಣ್ಣಿನ ದೇಹ ಆ ವಯಸ್ಸಿಗೆ ಲೈಂಗಿಕ ಕ್ರಿಯೆಗಾಗಲಿ, ಬಸಿರು, ತಾಯ್ತನದ ಬಲವಂತದ ಹೊರೆಗಳನ್ನು ಹೊರಲು ಸಮರ್ಥವಾಗಿರುವುದಿಲ್ಲ. ಹೀಗಿದ್ದೂ ನಮ್ಮ ದೇಶದಲ್ಲಿ ಈ ಪ್ರಮಾಣದಲ್ಲಿ ಬಾಲ್ಯವಿವಾಹಗಳು ನಡೆಯುತ್ತಿವೆ ಎಂದರೆ ಈ ಪ್ರಮಾಣದ ‘ಸಾಮಾಜಿಕ ಅತ್ಯಾಚಾರ’ಗಳು ನಮ್ಮ ದೇಶದಲ್ಲಿ ಅತ್ಯಂತ ಸಹಜವಾಗಿ ನಡೆಯುತ್ತಿವೆ! ಈ ಅಪರಾಧ ಕಾನೂನಿನಡಿ ದಾಖಲಾಗಿರುವುದೇ ವಿರಳಾತಿ ವಿರಳ! ಹಾಗಿದ್ದ ಮೇಲೆ ನಾವು ನಮ್ಮ ಹೆಣ್ಣುಮಗುವಿನ ದೇಹವನ್ನು ಏನೆಂದು ಭಾವಿಸಿದ್ದೇವೆ ಎಂದು ವಿವರಿಸುವ ಅಗತ್ಯವಿಲ್ಲ ಅಲ್ಲವೇ?

ಹಳೆಯ ಮದ್ಯವನ್ನು ಹೊಸ ಬಾಟಲಿಯಲ್ಲಿ ಹಾಕಿದಂತೆ ಇದುವರೆಗೆ ಧಾರ್ಮಿಕ ಕಟ್ಟು ಪಾಡುಗಳ ಸಂಕೋಲೆಯೊಳಗೆ ನಿಕೃಷ್ಟವಾಗಿ ನರಳುತ್ತಿದ್ದ ಹೆಣ್ಣು ದೇಹ, ಇಂದು ಶೋಷಣೆಯ ಅನೇಕ ಹೊಸ ರೂಪಗಳಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಹೊರಟಿರುವುದಕ್ಕಿಂಥಾ ಘೋರ ದುರಂತ ಮತ್ತಿನ್ನೇನಿದೆ? ಇಂದು ದೇವದಾಸಿ ಪದ್ಧತಿ, ಬಸವಿ, ಬೆತ್ತಲೆ ಸೇವೆ, ಜೋಗತಿಯಂಥಾ ಅನಿಷ್ಟ ಪದ್ಧತಿಗಳು ನಿಧಾನಕ್ಕೆ ಕಣ್ಮರೆಯಾಗುತ್ತಿವೆ ಎನ್ನುತ್ತಿರುವಾಗಲೇ, ಅದರ ಅವಳಿ ರೂಪವಾಗಿ ವೇಶ್ಯಾವಾಟಿಕೆಯ ಜಾಲ ವಿಸ್ತೃತವಾಗಿ ನಗರ-ಪಟ್ಟಣವೆನ್ನದೇ ವ್ಯಾಪಕವಾಗಿ ಹಬ್ಬುತ್ತಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ವಿವರಣೆಯಂತೆ ಸಧ್ಯಕ್ಕೆ ದೇಶದಲ್ಲಿ 6.8 ಲಕ್ಷ ‘ದಾಖಲಾದ’ ಲೈಂಗಿಕ ಕಾರ್ಯಕರ್ತೆಯರಿದ್ದಾರೆಂದು ಭಾರತ ಸರ್ಕಾರ ವಿವರಣೆ ನೀಡಿದೆ. ಇದರಲ್ಲಿ ಶೇಕಡ 40 ರಷ್ಟು ಅಪ್ರಾಪ್ತ ಹೆಣ್ಣುಮಕ್ಕಳು! ‘ದಾಖಲಾಗದೇ’ ಹೊರಗುಳಿದವರ ಸಂಖ್ಯೆ ಇದರ ಮೂರರಷ್ಟಿದೆ ಎಂಬ ಅಂದಾಜಿದೆ. ಇದರಲ್ಲಿ ಕಾಲ್‌ಗರ್ಲ್‌ಗಳು, ಹೈಟೆಕ್ ವೇಶ್ಯಾವಾಟಿಕೆ, ವ್ಯಾಪಾರಿಕರಣದ ಲೇಬಲ್ ಇಲ್ಲದ ‘ಸಭ್ಯ-ನಾಗರಿಕ’ ವ್ಯಭಿಚಾರವೂ ಸೇರುತ್ತದೆ.

ಎಳೆಯ ಬಾಲೆಯರನ್ನು, ಹದಿಹರೆಯದವರನ್ನು, ಮಹಿಳೆಯರನ್ನು ಅಪಹರಿಸಿ ಅವರನ್ನು ಅವರ ದೇಹ ಸಂಬಂಧಿ ವ್ಯಾಪಾರಗಳಲ್ಲಿ ತೊಡಗಿಸುವ ದಂಧೆ ಇಂದು ಬೃಹತ್ತಾಗಿ ಬೆಳೆದು ನಿಂತಿದೆ. ಈ ದಂಧೆಗೆ ಇಂತಹುದೇ ಎಂದು ನಿರ್ದಿಷ್ಟ ಹೆಸರಿಲ್ಲ. ಇದಕ್ಕೆ ಸೇವೆ, ಮನೆಗೆಲಸ, ಪಬ್, ಬಾರ್, ಡಾನ್ಸ್‌ಬಾರ್, ಮಸಾಜ್‌ಪಾರ್ಲರ್, ಪ್ರವಾಸೋದ್ಯಮ ಇತ್ಯಾದಿಗಳ ಮುಖವಾಡವಿದ್ದರೂ ಕೊನೆಗಿದು ವೇಶ್ಯಾವಾಟಿಕೆಯ ದಂಧೆ! ಬೇರೆ ಬೇರೆ ಹೆಸರಿದ್ದರೂ ಸೇವೆಯ ಸ್ವರೂಪ ಮಾತ್ರ ಲೈಂಗಿಕ ಸೇವೆ! ಭಾರತದ ಆರು ಮಹಾನಗರಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಅಪ್ರಾಪ್ತ ಬಾಲೆಯರು ವೇಶ್ಯಾವಾಟಿಕೆಯಲ್ಲಿ ತೊಡಗಬೇಕಾಗಿ ಬಂದಿರುವುದು ನಮ್ಮ ಕಾನೂನು, ಪೊಲೀಸ್ ಇಲಾಖೆಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ. ವಿಶ್ವದಲ್ಲಿ ಮೂರನೆ ಅತಿ ಹೆಚ್ಚು ವ್ಯಾಪಾರಿ ವಹಿವಾಟನ್ನು ಹೊಂದಿರುವ ದಂಧೆ ಎಂದರೆ ಸೆಕ್ಸ್ ದಂಧೆ! [ಮೊದಲನೆಯದು ಮಾರಕಾಸ್ತ್ರ, ಎರಡನೆಯದು ಮಾದಕದ್ರವ್ಯ.] ಈ ಆದ್ಯತೆಗಳೇ ಮನುಷ್ಯ ಸಂಕುಲ ಎತ್ತ ಸಾಗುತ್ತಿದೆ ಎಂಬುದರ ದಿಕ್ಸೂಚಿಯಾಗಿದೆ. ನಾವು ‘ಮಾನವ ಹಕ್ಕುಗಳ ರಕ್ಷಣೆ’ಯ ಬಗ್ಗೆ ಹೆಣ್ಣನ್ನು ಪಕ್ಕಕ್ಕಿಟ್ಟು, ಗಂಟಲು ಹರಿಯುವಂತೆ ಭಾಷಣ ಮಾಡುತ್ತಿದ್ದೇವೆ. ಹೆಣ್ಣುಮಕ್ಕಳ ದೇಹ ಸದ್ದಿಲ್ಲದೇ ಬಿಕರಿಗೆ ಬಿದ್ದಿದೆ!

ಒಂದೆಡೆ ವೇಶ್ಯಾವಾಟಿಕೆ ಕಾನೂನುಬಾಹಿರವಾದರೂ ಪ್ರತಿ ಜಿಲ್ಲೆಯಲ್ಲೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೇ ನಡೆಯುತ್ತಿರುವ ಅಡ್ಡಾಗಳಲ್ಲಿ ಹೆಣ್ಣುಮಕ್ಕಳ ಪ್ರಮಾಣ ಮಿತಿಮೀರಿ ಏರುತ್ತಿದೆ. ವೃತ್ತಿನಿರತ ಲೈಂಗಿಕ ಕಾರ್ಯಕರ್ತೆಯರಿಗೆ ನಿಯಮಿತ ಆರೋಗ್ಯ ತಪಾಸಣೆ, ಕಾಂಡೊಂಗಳ ವಿತರಣೆ, ಹೆಚ್‌ಐವಿ, ಏಡ್ಸ್, ಇತರ ಲೈಂಗಿಕ ಗುಪ್ತ ರೋಗಗಳ ಕುರಿತು ತಿಳಿವಳಿಕೆ ನೀಡಿ ಸಮಾಜಕ್ಕೆ ಈ ಸೋಂಕು ಹರಡದಂತೆ ‘ಸುರಕ್ಷಿತ ಲೈಂಗಿಕತೆ’ಯ ಪಾಠ ಕಲಿಸಲು ಜಿಲ್ಲಾ ಆರೋಗ್ಯ ಇಲಾಖೆಯಡಿ ದಾಖಲಿಸಿಕೊಳ್ಳಲಾಗುತ್ತಿದೆ. ಸರ್ಕಾರದ ದಾಖಲಿಸುವ ಈ ಕ್ರಮವೇ ಪ್ರಶ್ನಾರ್ಹವಾದುದು! ಅಸಹಾಯಕತೆಗೆ, ಅನಿವಾರ್ಯತೆಗೆ, ಆಕಸ್ಮಿಕಕ್ಕೆ, ವಂಚನೆಯ ಜಾಲಕ್ಕೆ, ಪರಿಸ್ಥಿತಿಯ ಒತ್ತಡಕ್ಕೆ ಸಿಕ್ಕಿ ಬಡ-ಗ್ರಾಮೀಣ ಪ್ರದೇಶದ ಮಹಿಳೆಯರು ಬೇರೆ ದಾರಿಯಿಲ್ಲದೇ ವೇಶ್ಯಾವಾಟಿಕೆಗೆ ಇಳಿಯಬೇಕಾಗಿ ಬಂದಿರುವುದು, ನಮ್ಮ ರೋಗಿಷ್ಟ ಸಮಾಜದ ದ್ಯೋತಕವಲ್ಲದೇ ಮತ್ತಿನ್ನೇನು? ಮೋಜಿಗಾಗಿ ಸ್ವಇಚ್ಛೆಯಿಂದ ಈ ದಂಧೆಗೆ ಇಳಿಯುತ್ತಿರುವವರದು ಬೇರೆಯದೇ ಕಥೆ.

ಲೈಂಗಿಕ ಕಾರ್ಯಕರ್ತೆಯರ ಹಿತಾಸಕ್ತಿಗಾಗಿ ದುಡಿಯುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಕೆಲವು ಎನ್‌ಜಿಒಗಳು prostitution-indiaವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿವೆ. ‘ನನ್ನ ದೇಹ ನನ್ನ ಹಕ್ಕು’ ಎಂಬ ಕಲ್ಪನೆಯನ್ನು ಬಿತ್ತುತ್ತಿವೆ. ಈಗಾಗಲೇ ಹೆಣ್ಣುಮಕ್ಕಳ ಅಕ್ರಮ ಮಾರಾಟದ ದಂಧೆ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು, ವ್ಯಾಪಕವಾಗಿರುವ ಹೆಣ್ಣುಮಕ್ಕಳ ಕಣ್ಮರೆ ಪ್ರಕರಣಗಳು ಎತ್ತಿ ತೋರುತ್ತಿವೆ. ಅದರಲ್ಲೂ ತನ್ನ ದೇಹವನ್ನು ಗೌರವಿಸಿಕೊಳ್ಳುವ ಯಾವ ಹೆಣ್ಣು, ಅದು ಮಾರಾಟದ ಸರಕಾಗಬೇಕು ಎಂದು ಬಯಸುತ್ತಾಳೆ? ಬಯಸುವುದೇ ಆದರೆ ಅದಕ್ಕೆ ಕಾರಣ ಅವಳನ್ನು ಹಾಗೆ ರೂಪಿಸಿದ ವ್ಯವಸ್ಥೆಯದೇ ಹೊರತು ಹೆಣ್ಣಿನದಲ್ಲ ಅಲ್ಲವೇ? ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿ ಸಾಧ್ಯತೆಗಳ ಕುರಿತು ಉನ್ನತ ಆರೋಗ್ಯ ಅಧಿಕಾರಿಯೊಡನೆ ಚರ್ಚಿಸುತ್ತಿದ್ದಾಗ, ‘ಎಲ್ಲಿಯವರೆಗೆ ಡಿಮ್ಯಾಂಡ್ ಇರುತ್ತದೋ ಅಲ್ಲಿಯವರೆಗೆ ಸಪ್ಲೈ ಇರಲೇಬೇಕು’ ಎನ್ನುತ್ತಾ ಪುನರ್ವಸತಿ ಎಂಬ ಪರಿಕಲ್ಪನೆಯನ್ನೇ ಅಲ್ಲಗಳೆದುಬಿಟ್ಟರು! ಇದು ನಮ್ಮ ವ್ಯವಸ್ಥೆಯ ರಕ್ಷಣೆಯ ನೀತಿಗೊಂದು ಉದಾಹರಣೆ!

ಹೆಣ್ಣುಮಕ್ಕಳ ಕಣ್ಮರೆ ಪ್ರಕರಣಗಳನ್ನು ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೆಣ್ಣುಮಕ್ಕಳಿಗೆ ನೈತಿಕ ಶಿಕ್ಷಣ ನೀಡಿ ಅವರನ್ನು ‘ಹದ್ದುಬಸ್ತಿನಲ್ಲಿಡುವುದು’ ಮಾತ್ರ ಅವರ ಮೇಲಿನ ಎಲ್ಲ ರೀತಿಯ ದೌರ್ಜನ್ಯ ತಡೆಗೆ ಪರಿಹಾರ ಎಂದು ಹೇಳಿ ಕೈ ತೊಳೆದುಕೊಂಡು ಬಿಟ್ಟರು! ‘ಗಂಡ ಹೆಂಡತಿಗೆ ಎರಡೇಟು ಕೊಡುವುದು ವೈವಾಹಿಕ ಬದುಕಿನಲ್ಲಿ ಸಾಮಾನ್ಯ, ಅದು ದೌರ್ಜನ್ಯವಲ್ಲ’ ಎಂದು ನಮ್ಮ ಕಾರವಾರದ ತ್ವರಿತ ನ್ಯಾಯಾಲಯವೊಂದು ಮೊನ್ನೆಯಷ್ಟೇ ಆದೇಶದಲ್ಲಿ ಉಲ್ಲೇಖಿಸಿದೆ! ‘ಭೂಗತ ಜಗತ್ತಿನ ಮುಖಂಡರೂ ಮಹಿಳೆಯರನ್ನು ಗೌರವದಿಂದ ಕಾಣಲು ಬಯಸುತ್ತಾರೆ. ಗೌರವಯುತ ಮಹಿಳೆ ಮೇಲೆ ಅತ್ಯಾಚಾರ ನಡೆಯುವುದಿಲ್ಲ’ ಇದು ದೆಹಲಿ ಸಾಮೂಹಿಕ ಅತ್ಯಾಚಾರದ ಪಾತಕಿಗಳ ಪರ ವಕಾಲತ್ತು ವಹಿಸಿರುವ ನ್ಯಾಯವಾದಿ ಮನೋಹರಲಾಲ್ ಶರ್ಮಾ ಅವರ ಹೇಳಿಕೆ. ಇಂತಹ ಅಸೂಕ್ಷ್ಮ ಹೇಳಿಕೆಗಳು, ಯಾರ್‍ಯಾರಿಂದಲೋ! ಅದಿನ್ನೆಷ್ಟೋ! ಖಾಪ್ ಪಂಚಾಯಿತಿ, ಮತೀಯವಾದಿ ಸ್ವಯಂಘೋಷಿತ ಸಂಸ್ಕೃತಿಯ ರಕ್ಷಕರ ಹೇಳಿಕೆಗಳಿಗೂ, ಇವುಗಳಿಗೂ ಹೆಚ್ಚು ವ್ಯತ್ಯಾಸವೇನಾದರೂ ಇದೆಯೇ? ಅವರಂತೂ ನಮ್ಮ ಸಂವಿಧಾನದ ಆಶಯಗಳಿಗೆ ಬದ್ಧರಾಗಿಲ್ಲದವರು, ವಸ್ತುಸ್ಥಿತಿಯನ್ನು ವೈಚಾರಿಕವಾಗಿ ವಿವೇಚಿಸಲರಿಯದ ಮೂರ್ಖರು ಎಂದು ನಿರ್ಲಕ್ಷಿಸಿ ಪಕ್ಕಕ್ಕಿಟ್ಟುಬಿಡಬಹುದು. ಆದರೆ……..

ಇಂದು ಕಾನೂನು, ಪೊಲೀಸ್, ಆರೋಗ್ಯ……ಹೀಗೆ ರಕ್ಷಣೆ ನೀಡಬೇಕಾದ ಎಲ್ಲ ವ್ಯವಸ್ಥೆಗಳೂ ಯಥಾಸ್ಥಿತಿಯನ್ನು ನಾಜೂಕಾಗಿ ಕಾಯ್ದುಕೊಳ್ಳುತ್ತಾ, police-atrocity-womenಒಂದೆಡೆ ಹೆಣ್ಣನ್ನು ಸರಕೆಂಬಂತೆ ಬಳಸಿಕೊಳ್ಳಲು ಅನುವು ಮಾಡಿಕೊಡುತ್ತಾ, ಇನ್ನೊಂದೆಡೆ ಅವಳಿಗೆ ನೈತಿಕತೆಯ ಬೋಧೆ ನೀಡುತ್ತಾ, ಮತ್ತೊಂದೆಡೆ ಅವಳನ್ನು ಉದ್ಧರಿಸುವ, ರಕ್ಷಿಸುವ ನಾಟಕವಾಡುತ್ತಿರುವಾಗ, ಈ ವ್ಯವಸ್ಥೆಯ ಕಣ್ಣು ತೆರೆಸುವುದು ಹೇಗೆ? ‘ಮಹಿಳಾ ಸ್ನೇಹಿ’ ಹಾಗೂ ‘ಲಿಂಗ ಸೂಕ್ಷ್ಮತೆ’ಯ ಎಚ್ಚರವನ್ನು ಸಮಾಜ ಕಲಿತುಕೊಳ್ಳುವ ಮೂಲಕ ಮಾತ್ರ ಮಹಿಳಾ ಸಮಾನತೆಯ ಕನಸಿನೆಡೆಗೆ ಮೊದಲ ಹೆಜ್ಜೆಯನ್ನು ಇಡಲು ಸಾಧ್ಯ ಎಂದು ನಂಬಿರುವ ಎಚ್ಚೆತ್ತ ಹೆಣ್ಣುಮಕ್ಕಳಿಂದು, ಮೊದಲಿಗೇ ಸಂವಿಧಾನಬದ್ಧವಾದ ಆಶಯಗಳಡಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ನಮ್ಮ ನ್ಯಾಯಾಂಗಕ್ಕೆ, ಮಾಧ್ಯಮಕ್ಕೆ, ಸರ್ಕಾರಿ ಆಡಳಿತ ಯಂತ್ರಕ್ಕೆ ಈ ಪಾಠವನ್ನು ಹೇಳಿಕೊಡಬೇಕಾಗಿ ಬಂದಿರುವುದನ್ನು ಯಾವ ಕರ್ಮವೆನ್ನೋಣ? ನಾವು ಪುರುಷರಿಗೆ ಸಮಾನವಾದ ಹಕ್ಕುಗಳನ್ನು ಪಡೆದಿರುವ ಪ್ರಜಾಪ್ರಭುತ್ವವಾದಿ ದೇಶದಲ್ಲಿರುವ ಪ್ರಜೆಗಳೆಂದು ಹೇಳಿಕೊಳ್ಳಲೂ ನಾಚಿಕೆಯಾಗುತ್ತಿದೆ! ಇಂತಹುದ್ದೊಂದು ವ್ಯವಸ್ಥೆಯ ಬಗ್ಗೆ ಹೆಣ್ಣುಮಕ್ಕಳು ಸಂಪೂರ್ಣವಾಗಿ ‘ನಂಬಿಕೆ’ ಕಳೆದುಕೊಳ್ಳುವ ಮೊದಲು ಸಮಾಜ ಎಚ್ಚೆತ್ತುಕೊಳ್ಳುವುದೇ?

ಗರ್ಭಕ್ಕೇ ದಾಳಿಯಿಟ್ಟ ವೈದ್ಯಕೀಯ ಕ್ರೌರ್ಯ!

ಹೊರಗಿನ ಅತ್ಯಾಚಾರ ಕಣ್ಣಿಗೆ ಕಾಣುವಂತದ್ದು. ಆದರೆ ಆಧುನಿಕ ವೈದ್ಯಕೀಯ ಆವಿಷ್ಕಾರಗಳು ಹೆಣ್ಣಿನ ಗರ್ಭಕ್ಕೇ ನೇರವಾಗಿ ದಾಳಿಯಿಟ್ಟು ಹೆಣ್ಣು ಸಂತತಿಯನ್ನು ಬೇರು ಸಹಿತ ನಾಶ ಮಾಡುವ ಅಮಾನುಷ ಅತ್ಯಾಚಾರದಲ್ಲಿ ನಿರತವಾಗಿರುವ ವೈದ್ಯಕೀಯ ಅಪರಾಧದಲ್ಲಿ ತೊಡಗಿರುವವರು ಮುಗ್ಧರೋ, ಮೂಢರೋ ಅಲ್ಲ. ನಾವು ದೇವರ ಸಮಾನವೆಂದು ನಂಬಿರುವ ಸಾಕ್ಷಾತ್ ವೈದ್ಯರು! ಈ ಕೃತ್ಯದ ನೇರ ಹೊಣೆಗಾರರು ಅವರೇ. ಜೀವ ರಕ್ಷಕನೇ, ಹೆಣ್ಣನ್ನು ಭ್ರೂಣದಲ್ಲೇ ಹೊಸಕಿ ಕೊಲೆ ಮಾಡಲು ನಿಂತರೆ ಅಸಹಾಯಕ ಹೆಣ್ಣು ಜೀವವನ್ನು ಇನ್ನಾರು ರಕ್ಷಿಸಬೇಕು?

ಪ್ರಕೃತಿ ತನ್ನ ಸಮತೋಲನ ಕಾಯ್ದುಕೊಳ್ಳಲು ಗಂಡು ಸಂತತಿಗಿಂತ ಹೆಣ್ಣು ಸಂತತಿಯ ಪ್ರಮಾಣವನ್ನು ಹೆಚ್ಚಾಗಿ ಸೃಷ್ಟಿಸಿರುತ್ತದೆ. ಏಕೆಂದರೆ ವಂಶಾಭಿವೃದ್ಧಿ ಮಾಡುವ ಜವಾಬ್ದಾರಿ ಹೆಣ್ಣು ಜೀವದ ಮೇಲಿರುತ್ತದೆ. ಇದು ಎಲ್ಲ ಪ್ರಾಣಿ ಸಂತತಿಗೂ ಅನ್ವಯವಾಗುತ್ತದೆ. ಮನುಷ್ಯ ಶಿಕ್ಷಿತನೂ ನಾಗರಿಕನೂ ಆದಷ್ಟೂ ತನ್ನ ಸಹಜೀವಿಯೊಂದಿಗಿನ ಸಹೃದಯತೆ ಹೆಚ್ಚಾಗಬೇಕು. ಪ್ರಕೃತಿಯ ಈ ಆಶಯವನ್ನು ಅರ್ಥಮಾಡಿಕೊಳ್ಳಬೇಕು. ಆದರೆ ಆಗುತ್ತಿರುವುದೇನು? ‘ಹೆಣ್ಣು ಸಂಗಾತಿಯಾಗಿ ಬೇಕು. ಆದರೆ ಮಗಳಾಗಿ ಬೇಡ.’ ಎಂಬ ಮನೋಭಾವ ಸಮಾಜದಲ್ಲಿ ಹೆಚ್ಚುತ್ತಾ ಸಾಗಿದಂತೆ ವರ್ಷದಿಂದ ವರ್ಷಕ್ಕೆ ಹೆಣ್ಣುಮಕ್ಕಳ ಸಂತತಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕ ಹುಟ್ಟಿಸುತ್ತಿದೆ. ಅದರಲ್ಲೂ 0-6 ವರ್ಷದ ಹೆಣ್ಣುಮಕ್ಕಳು 2011 ರಲ್ಲಿ ದೇಶದಲ್ಲಿ ಪ್ರತಿ 1000 ಪುರುಷರಿಗೆ 914 ಕ್ಕೆ ಇಳಿದಿದ್ದು, foeticideಕರ್ನಾಟಕದಲ್ಲಿ 943 ಕ್ಕೆ ಇಳಿದಿದ್ದಾರೆ. ಅಂದರೆ ಒಂದು ವರ್ಷದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳು ಭೂಮಿಗೇ ಬರದೇ ಕಣ್ಮರೆಯಾಗುತ್ತವೆ. ಒಂದು ಅಂದಾಜಿನಂತೆ ಪ್ರತಿ ವರ್ಷ 6 ಲಕ್ಷ ಹೆಣ್ಣು ಜೀವಗಳು ಭ್ರೂಣದಲ್ಲೇ ಹತವಾಗುತ್ತಿವೆ. ಈ ಅಗಾಧ ಪ್ರಮಾಣದ ಗಂಡು ಹೆಣ್ಣಿನ ನಡುವಿನ ವ್ಯತ್ಯಾಸದಿಂದ ಸಂಗಾತಿಯಾಗಿ ಹೆಣ್ಣು ದೊರಕದೇ, ಈಗಾಗಲೇ ರಾಜಸ್ಥಾನ, ಹರಿಯಾಣ ಮುಂತಾದ ರಾಜ್ಯಗಳು ಹೆಣ್ಣು ವಧುಗಳನ್ನು ಇತರ ರಾಜ್ಯಗಳಿಂದ ಆಮದು ಮಾಡಿಕೊಳ್ಳುತ್ತಿವೆ. ಒಂದೇ ಹೆಣ್ಣು ಹಲವು ಪುರುಷರ ಕಾಮನೆಗಳನ್ನು ತಣಿಸುವ ‘ವಸ್ತು’ವಾಗಿ ಬಳಸುವಂತಾ ಸ್ಥಿತಿ ನಿರ್ಮಾಣವಾಗುತ್ತಿದೆ. ಹೆಣ್ಣು ಮಕ್ಕಳ ಮೇಲಿನ ಎಲ್ಲ ರೀತಿಯ ಲೈಂಗಿಕ ದೌರ್ಜನ್ಯ ಹೆಚ್ಚಳಕ್ಕೆ ಭ್ರೂಣ ಹತ್ಯೆಯೂ ಒಂದು ಮುಖ್ಯ ಕಾರಣವೆಂದು ಸಮಾಜ ವಿಜ್ಞಾನಿಗಳು ಗುರುತಿಸುತ್ತಿದ್ದಾರೆ. ಹೆಣ್ಣಿನ ಹೊರ ದೇಹದ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಈಗ ಗರ್ಭಕ್ಕೇ ಇಳಿದು, ಅನೈಸರ್ಗಿಕವಾಗಿ ಅವಳ ಸಂತತಿಯನ್ನು ಹೊಸಕಿ ಸಾಯಿಸುತ್ತಿದೆ!

ಗರ್ಭಧಾರಣೆ ಮತ್ತು ಪ್ರಸವ ಪೂರ್ವ ರೋಗ ನಿದಾನ ತಂತ್ರಗಳ [ಲಿಂಗ ಆಯ್ಕೆ ನಿಷೇಧ] ಅಧಿನಿಯಮ 1994 ಕಾಯ್ದೆ ಇದ್ದರೂ, ಅದರ ಪರಿಣಾಮಕಾರಿ ಜಾರಿಯಾಗದೇ, ಅಕ್ರಮ ಹೆಣ್ಣು ಭ್ರೂಣ ಹತ್ಯೆಗೆ ತಡೆ ಒಡ್ಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಇಂದು ರಾಜ್ಯಾದ್ಯಂತ ಸುಮಾರು 4000 ಅಲ್ಟ್ರಾಸೌಂಡ್ ಸ್ಕ್ಯಾಂನಿಗ್ ಮೆಷಿನ್‌ಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಬೆಂಗಳೂರೊಂದರಲ್ಲೇ ಈಗ 1200 ಇಂತಹ ಮೆಷಿನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದಲ್ಲಿ ಕಳೆದ 2-3 ದಶಕಗಳಿಂದ ಅವ್ಯಾಹತವಾಗಿ ಸಾಗಿರುವ ಈ ಭ್ರೂಣಹತ್ಯೆಯ ‘ಸಾಂಸ್ಕೃತಿಕ ಅತ್ಯಾಚಾರ’ ತಡೆಯಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಸಂಪೂರ್ಣ ವಿಫಲವಾಗಿವೆ. ಈಗ ಅವಳನ್ನು ಇನ್ಯಾರು ರಕ್ಷಿಸುವವರು?

ಬಹುಶಃ ಹೆಣ್ಣುಮಕ್ಕಳೇ ಎಚ್ಚೆತ್ತು ತಮ್ಮ ಸಂತತಿಯನ್ನು ಉಳಿಸಿಕೊಳ್ಳುವ ದೃಢ ಸಂಕಲ್ಪ ಮಾಡದಿದ್ದರೆ, ‘ಅವಳ’ನ್ನು ಉಳಿಸಲು ಯಾವ ದೇವರಿಗೂ ಸಾಧ್ಯವಿಲ್ಲವೇನೋ!

Leave a Reply

Your email address will not be published. Required fields are marked *