– ಶರ್ಮಿಷ್ಠ
ರವಿ ಕೃಷ್ಣಾರೆಡ್ಡಿಯವರ ಲೇಖನ “ವರ್ತಮಾನ.ಕಾಮ್ ನ 2013 ಭೂತಕಾಲ” ಓದುವಾಗ ನನಗನ್ನಿಸಿದ್ದು…
ದೆಹಲಿಯಲ್ಲಿ ನಡೆದಂತಹ ಪವಾಡಸದೃಶ ಘಟನೆ ನನ್ನ ಪ್ರಕಾರ ನಮಗೆ ಅನಿವಾರ್ಯವಾಗಿ, ಅಗತ್ಯವಾಗಿಯೂ ಬೇಕು. ಆದರೆ ನಮ್ಮಲ್ಲಿ ಮನಸ್ಸುಗಳು ಮುಕ್ತವಾಗಿ ಆಲೋಚಿಸುವುದನ್ನೇ ಕಳೆದುಕೊಂಡಿರುವಾಗ ಇದು ಸಾಧ್ಯನಾ? ಕರ್ನಾಟಕದಲ್ಲಿ ನೀವು ಒಂದೋ ಎಡ ಅಥವಾ ಬಲ ಪಂಥೀಯರಾಗಿರಲೇ ಬೇಕು. ನೀವು ಗುರುತಿಸಿಕೊಳ್ಳದಿದ್ದರೂ ನಿಮ್ಮ ಸುತ್ತಲಿನ ಜನ ಇದೆರಡರಲ್ಲಿ ಒಂದಕ್ಕೆ ನಿಮ್ಮನ್ನು ಸೇರಿಸಿ, ನಿಮ್ಮನ್ನು ಹಿಗ್ಗಾಮುಗ್ಗಾ ಎಳೆದಾಡುತ್ತಾರೆ. ನಿಮ್ಮ ಒಲವು ಎಡ ವಿಚಾರಗಳ ಕಡೆಗಿದ್ದರೆ ಸಾಕು, ಅನಾವಶ್ಯಕ ನಿಮ್ಮ ಮೇಲೇ ದ್ವೇಷ ಸಾಧಿಸುತ್ತಾರೆ. ಕಾರಣವೇ ಇಲ್ಲದೆ ನಿಮ್ಮ ಬಳಿ ಮಾತು ಬಿಡುತ್ತಾರೆ, ನಿಮ್ಮ ನೆರಳು ಕಂಡರೂ ಸಾಕು ರೇಗುತ್ತಾರೆ. ಒಟ್ಟಿನಲ್ಲಿ ನಿಮ್ಮ ವಿಚಾರಗಳು ಸರಿಯಿಲ್ಲ.
ಬಲಪಂಥೀಯರೆಂದರೆ ವಿಶ್ವಾಸವಿಲ್ಲದ ಯುವಜನತೆ ಎಡಪಂಥೀಯರೆಡೆಗೆ ಹೋಗೋಣ ಎಂದರೆ ಅಲ್ಲಿರುವುದೆಲ್ಲ ಬರಿಯ ಮುಖವಾಡ, ಹಿಪೋಕ್ರಸಿ. ಹೇಳುವುದು ಒಂದು ಮಾಡುವುದು ಇನ್ನೊಂದು. ಯಾರನ್ನು ಆದರ್ಶ ಅಂಥ ಹೇಳೋಣ? ಆದರ್ಶ ಎನ್ನುವುದು ಅದು ಆದರ್ಶ ಅನ್ನೋದಕ್ಕೆ ನಮಗೆ ಆದರ್ಶಯುತವಾಗಿರಬೇಕೇ ಹೊರತು, ಬೇರೆಯವರ ಅನುಕರಣೆ ಅಲ್ಲ. ಅವರು ಆದರ್ಶವಾಗಿದ್ದರೆ ಎಷ್ಟು, ಬಿಟ್ಟರೆ ಎಷ್ಟು. ಆದರೂ ಕೆಲವೊಮ್ಮೆ ನಾವು ನಮ್ಮ ಹೋರಾಟದಲ್ಲಿ ಸೋಲು ಅನುಭವಿಸುವಾಗ ಜೀವಚೈತನ್ಯ ನೀಡುವುದಕ್ಕಾದರೂ ಆದರ್ಶಪ್ರಾಯ ವ್ಯಕ್ತಿಯೊಬ್ಬ ಸಂತೈಸಲು ಬೇಕಾಗುತ್ತದೆ. ನಮ್ಮ ನಡೆಗೆ ಜೀವ ತುಂಬಲು…
ಜಿಎಸೆಸ್ ತೀರಿಹೋದಾಗ ನನಗನ್ನಿಸಿತ್ತು, ಆದರ್ಶ ಗುರುಪರಂಪರೆಯ ಕಾಲ ಇನ್ನಿಲ್ಲ… ಹಿಂದಿನ ಗುರುಗಳು ಆದರ್ಶಯುತವಾದ ವಿದ್ಯಾರ್ಥಿವೃಂದವನ್ನು ಬೆಳೆಸಿದಂತೆ ಈಗ ಬೆಳೆಸುವವರು ಯಾರಿದ್ದಾರೆ? ಆ ಗುರುವಿನ ಪಟ್ಟಕ್ಕೆ ನಾವು ಬೆಲೆತೆತ್ತು ಹೋಗುತ್ತಿರುವಾಗ, ವಿಸೀ ಪದವಿ ನಡೆಯುತ್ತಿರುವುದು ಆಯ್ಕೆಯಲ್ಲ, ಅನಧಿಕೃತ “ಬಿಡ್” ಅನ್ನುವುದು ಎಲ್ಲರಿಗೂ ಗೊತ್ತಿರುವಾಗ ಆದರ್ಶಯುತ ವಿದ್ಯಾರ್ಥಿವೃಂದ ಬೆಳೆಸೋದು ಸಾಧ್ಯನಾ? ಕಾಲೇಜುಗಳಲ್ಲೇ ವಿದ್ಯಾರ್ಥಿ ಚುನಾವಣೆ ಮೂಲಕ ರಾಜಕೀಯ ಕಾಲಿಟ್ಟು ವಿದ್ಯಾರ್ಥಿ ಸಮುದಾಯವನ್ನೇ ಒಡೆಯುತ್ತಿದೆ. ಸಮಾರಂಭದಲ್ಲಿ ನಮ್ಮ ಅಧ್ಯಾಪಕರ ಆಯ್ಕೆ ಕಾಲೇಜಿಗೆ ಫಂಡ್ ಕೊಡಬಲ್ಲ ಲಂಚಕೋರ ರಾಜಕಾರಣಿಯೇ ಹೊರತು ಆದರ್ಶ ವ್ಯಕ್ತಿ ಅಲ್ಲ.
ಒಳ್ಳೆಯ ಶಿಷ್ಯ ಪರಂಪರೆಯನ್ನು ಕಟ್ಟಬಲ್ಲ ತಾಕತ್ತಿರುವ ಅಧ್ಯಾಪಕರನ್ನು ನಾವು ನಕ್ಸಲ್ ಬೆಂಬಲಿಗ ಎನ್ನುವ ಹಣೆಪಟ್ಟಿ ಹಚ್ಚಿ ಮೂಲೆಗೆ ತಳ್ಳಿಯಾಗಿದೆ. ಸೆಕ್ಯುಲರ್ಗಳು ಎನಿಸಿಕೊಂಡಿರುವವರು ತಪ್ಪು ಯಾರು ಮಾಡಿದರೂ ತಪ್ಪು ಎನ್ನೋ ಧೋರಣೆ ಬಿಟ್ಟು ಯಾವುದೋ ವಾದವನ್ನು ಮುಂದಿಟ್ಟುಕೊಂಡು ಬಲಪಂಥೀಯರನ್ನು ಹೆಚ್ಚು ಹೆಚ್ಚು ತಯಾರು ಮಾಡುತ್ತಿದ್ದಾರೆ. ಅದಕ್ಕೆ ಕರ್ನಾಟಕದ ಯುವಜನತೆ ಮೋದಿಯ ಚುಂಗು ಹಿಡಿದುಕೊಂಡಿದೆ. ಇಲ್ಲಿ ಆಮ್ ಆದ್ಮಿ ಮೋಡಿ ಆಗುತ್ತಿಲ್ಲ.
ಒಮ್ಮೆ ಟಿ.ಪಿ. ಅಶೋಕ ಸಮಾರಂಭವೊಂದರಲ್ಲಿ ಹೇಳಿದ್ದರು `ಲೆಟ್ ಅಸ್ ಅಗ್ರೀ ಟು ಡಿಸಗ್ರೀ’. ಅದು ನಮ್ಮಲ್ಲಿ ಸಾಧ್ಯವೇ ಇಲ್ಲ.
ಯಾದವ್ ತರದ ಒಳ್ಳೆಯ ಆದರ್ಶ ಪ್ರೋಪೆಸರ್ ಇಲ್ಲಾ ಅಂಥಲ್ಲ ಅಂಥವರನ್ನು ಸರ್ಕಾರದ ಅಧೀನದಲ್ಲಿರುವ ವಿವಿಗಳು ಕೈಕಟ್ಟಿ ಕೂರಿಸಿವೆ. ಅಥವಾ ಸಾಧ್ಯತೆ ಇರುವವರು ಮುಂದೆ ಬರುತ್ತಿಲ್ಲ.
ಒಳ್ಳೆಯ ಪತ್ರಕರ್ತರು ಅಂಥ ಇದ್ದರೆ ಅವರು ಬಹುಶ ಮಾಧ್ಯಮದಲ್ಲಿ ಉಳಿಯುವುದಿಲ್ಲ. ಒಳ್ಳೆಯ ಆದರ್ಶಗಳಿದ್ದರೆ, ನೀವು ಅನ್ಫಿಟ್ ಟು ಬಿಕಮ್ ಜರ್ನಲಿಸ್ಟ್.
ಒಳ್ಳೆಯ ಲಾಯರ್ ಅಂಥ ಯಾರಿದ್ದಾರೆ. ಇದ್ದಾರೆ ಒಬ್ಬರು ಮುಕ್ತ, ಮಹಾಪರ್ವದ ಟಿ..ಎನ್. ಸೀತಾರಾಂ ಅಷ್ಟೆ. ಸಂತೋಷ ಹೆಗ್ಡೆಯವರು ಅಷ್ಟು ಕಷ್ಟಪಟ್ಟು ತಯಾರಿಸಿದ ಲೋಕಾಯುಕ್ತ ವರದಿಯನ್ನು ಲೀಕ್ ಮಾಡಿದಾಗ, ಅವರು ಗಳಗಳನೆ ಅತ್ತರಲ್ಲ ಯಾರಿಂದ ಏನು ಮಾಡಲಿಕ್ಕಾಯ್ತು. ಈ ಪ್ರಜಾಪ್ರಭುತ್ವದಲ್ಲಿ ನಮಗೆ ಏನು ಹಕ್ಕಿದೆ? ಒಂದು ಪಿಐಎಲ್ಗೆ ಲಕ್ಷಗಟ್ಟಲೆ ಸುರಿಯಬೇಕಾಗಿರುವಾಗ ಯಾರು ತಾನೇ ಮುಂದೆ ಬಂದು ಜನಪರ ಹೋರಾಟಗಳನ್ನು ಮಾಡುತ್ತಾರೆ. ನಮ್ಮಲ್ಲಿ ಪಠ್ಯಪುಸ್ತಕದಲ್ಲಿ ಜಾತಿ ಹೆಸರಲ್ಲಿ, ಇನ್ನು ಯಾವುದೋ ಹೆಸರಲ್ಲಿ ಎಷ್ಟೆಷ್ಟೂ ಗಲಾಟೆಗಳಾಗುತ್ತದೆ. ಆದರೆ ಯಾರದರೂ ಕಾನೂನನ್ನು ಗಂಭೀರವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರಾ?
ಕೆಲವೊಮ್ಮೆ ಹೋರಾಟಗಾರರು ತಮ್ಮ ಅಹಿಂದ, ದಲಿತ, ಅಲ್ಪಸಂಖ್ಯಾತ ಧೋರಣೆಯಿಂದ ಹೊರಬೇಕಾಗುತ್ತದೆ. ಇಲ್ಲವಾದಲ್ಲಿ ಅದು ಬಹುಸಂಖ್ಯಾತರ ಬೆಂಬಲ ಕಳೆದುಕೊಂಡು ಸಮಾಜವನ್ನು ಇನ್ನೂ ಛಿದ್ರ ಛಿದ್ರ ಮಾಡುತ್ತದೆ ಅಷ್ಟೆ.
ಏನು ಬರೆದರೂ ಏನು ಸಾಧ್ಯವಿಲ್ಲ. ಎಲ್ಲ ಅಕ್ಷರ ಕಸ ಎನಿಸಿಬಿಡುತ್ತದೆ. ಅದಕ್ಕೆ ಸಾಕ್ಷಿ. ಸೌಜನ್ಯಾ ಪರ ಹೋರಾಟ. ಎಲ್ಲರು ಎಷ್ಟು ದನಿಯೆತ್ತಿದರೂ ಏನೂ ಸಾಧ್ಯವಾಗಲಿಲ್ಲ. ಈ ರೀತಿಯ ಘಟನೆ ಮನಸ್ಸನ್ನು ಮತ್ತೆ ಮತ್ತೆ ಕುಗ್ಗಿಸುತ್ತೆ. ಆ ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಕೊಡಿಸಲಿಕ್ಕೆ ಆಗಲೇ ಇಲ್ಲ. ಹಿಂದೂ ಸಮಾಜದ ಏಳಿಗೆಗೆ ಬಲಿದಾನ ಅನಿವಾರ್ಯ ಎಂದು ಹಿಂದೂ ಪರ ಸಂಘಟನೆಗಳು ಕೈಕಟ್ಟಿ ಕುಳಿತವು. ಆದರೆ ಅವಳು ನಮ್ಮ ಮನೆ ಮಗಳಾಗಿದ್ದರೆ…
ಇದನ್ನೆಲ್ಲಾ ಯಾರ ಹತ್ತಿರ ಹೇಳಬೇಕು, ಈ ಅಕ್ಷರ ಕಸ ಯಾಕೆ ಬೇಕು… ಐಯಾಮ್ ಫ್ರಸ್ಟ್ರೇಟೆಡ್.