ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಹರಿಯುವ ಕಣ್ಣೀರಿಗೆ ಕೊನೆ ಇಲ್ಲವೇ?


-ಇರ್ಷಾದ್


 

 

 

“ ನನ್ನ ಕುರಿತು ಅತೀ ಕೆಟ್ಟ ಶಬ್ಧಗಳ ಬಳಕೆ ಮಾಡಿ ಅವಮಾನ ಮಾಡಿದ್ದಾರೆ. ಮಹಿಳೆಯೆಂದುmodannana-tamma ನೋಡದೇ 30 ರಷ್ಟು ಯುವಕರ ಗುಂಪು ನನ್ನನ್ನು ಸುತ್ತುವರಿದು ಹೀನವಾಗಿ ನಿಂದಿಸಿದ್ದಾರೆ. ನನ್ನ ಸೀರೆಯನ್ನು ಎಳೆಯೋದಕ್ಕೆ ಮುಂದಾಗಿದ್ದಾರೆ. ಈ ಎಲ್ಲಾ ಯುವಕರು ಕ್ರಿಮಿನಲ್ ಹಿನ್ನೆಲೆ ಉಳ್ಳವರು. ಕೆಲ ಯುವಕರು ಹಿಂದೂ ಪರ ಸಂಘಟನೆಯೊಂದರ ಸದಸ್ಯರು. ಅನ್ಯಾಯವಾದ ನನಗೆ ದಯಮಾಡಿ ನ್ಯಾಯ ಕೊಡಿಸಿ” ಹೀಗನ್ನುತ್ತಾ ಕಣ್ಣೀರು ಸುರಿಸುತ್ತಾ ತನ್ನ ಮನದಾಳದ ನೋವನ್ನು ಮಾಧ್ಯಮದ ಮುಂದೆ ತೋಡಿಕೊಂಡಿದ್ದು ಮಂಗಳೂರು ಮಹಾನಗರ ಪಾಲಿಕೆಯ ಕುಳಾಯಿ ವಾರ್ಡ್ ನ ಸದಸ್ಯೆ ಪ್ರತಿಭಾ ಕುಳಾಯಿ. ಅದೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಯ್ದಿನ್ ಬಾವಾ ಸಮ್ಮುಖದಲ್ಲಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ.

ದಕ್ಷಿಣ ಕನ್ನಡ ಜಿಲ್ಲೆಯ ಅನೈತಿಕ ಪೊಲೀಸರಿಗೆ ಇಂಥಹಾ ನೂರಾರು ಹೆಣ್ಣುಮಕ್ಕಳ ಕಣ್ಣೀರ ಸುರಿಸಿದ “ಹೆಗ್ಗಳಿಕೆ” ಯ ಇತಿಹಾಸವಿದೆ. ಪ್ರತಿಭಾ ಕುಳಾಯಿ ಕಣ್ಣೀರಿಟ್ಟ ಹಾಗೆ ಸಾಕಷ್ಟು ಅಮಾಯಕ ಯುವತಿಯರು, ಮಹಿಳೆಯರು ಸಂಸ್ಕೃತಿ ರಕ್ಷಕರ ಕೆಂಗಣ್ಣಿಗೆ ಸಿಲುಕಿ ಕಣ್ಣೀರಿಟ್ಟಿದ್ದಾರೆ. ಸುಶಿಕ್ಷಿತ ಮಹಿಳೆಯಾಗಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯಾಗಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತೆಯಾಗಿ ಪ್ರತಿಭಾ ಕುಳಾಯಿ ಮಾಧ್ಯಮದ ಮುಂದೆ ಬಂದು ತನ್ನ ಅಳಲನ್ನು ತೋಡಿಕೊಂಡು ನ್ಯಾಯ ಕೊಡಿಸಿ ಎಂದು ಕೇಳುವ ಧೈರ್ಯವನ್ನು ತೋರಿಸಿದ್ದಾರೆ. ಆದರೆ ಈ ನೈತಿಕ ಪೊಲೀಸರ ಗುಂಡಾಗಿರಿಗೆ ಬಲಿಯಾಗಿ ಅದೆಷ್ಟೋ ಕಾಲೇಜು ವಿದ್ಯಾರ್ಥಿನಿಯರು, ಅಮಾಯಕ ಮಹಿಳೆಯರು ಮಾನ ಮಾರ್ಯಾದೆಗೆ ಅಂಜಿ ಮನೆಯಲ್ಲೇ ಕುಳಿತು ನಿತ್ಯ ಕಣ್ಣೀರಿಟ್ಟಿದ್ದಾರೆ ಹಾಗೂ ಕಣ್ಣೀರಿಡುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸರ ಕೆಂಗಣ್ಣಿಗೆ ಬಿದ್ದು ಅಸಹಾಯಕ ಹೆಣ್ಮಕ್ಕಳು ಕಣ್ಣೀರಿಟ್ಟಿದ್ದು ದೇಶಕ್ಕೆ ಗೊತ್ತಾಗಿರುವುದು 2008 ರಲ್ಲಿ ನಡೆದ ಪಬ್New ದಾಳಿ ಸಂಧರ್ಭದಲ್ಲಿ. ಹಿಂದೂ ಸಂಘಟನೆಯ ಕಾರ್ಯಕರ್ತರು ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ದಾಳಿ ಮಾಡಿದ್ದರು. ಪಬ್ ಒಳಗಡೆ ಇದ್ದ ಯುವಕ –ಯುವತಿಯರನ್ನು ಎಳೆದಾಡಿ ಹಿಗ್ಗಾ ಮುಗ್ಗಾ ಥಳಿಸಿದ್ದರು. ಅವಮಾನಕ್ಕೀಡಾದ ಯುವತಿಯರು ಕಣ್ಣೀರು ಸುರಿಸುತ್ತಾ ಎದ್ದು ಬಿದ್ದು ನೈತಿಕ ಪೊಲೀಸರಿಂದ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನ ಪಡುತ್ತಿದ್ದರು. ನೈತಿಕ ಪೊಲೀಸರ ದಾಳಿಗೆ ಸುಸ್ತಾಗಿ ಅತ್ತ ಅವಮಾನವನ್ನೂ ಸಹಿಸಿಕೊಳ್ಳಲಾಗದೇ ಇತ್ತ ಅನ್ಯಾಯವನ್ನು ಪ್ರತಿಭಟಿಸಲಾಗದೆ ಕಣ್ಣೀರು ಸುರಿಸಿ ಅಷ್ಟಕ್ಕೆ ಸುಮ್ಮನಾದರು. ದಕ್ಷಿಣ ಕನ್ನಡ ಜಿಲ್ಲೆಯ ಹೆಣ್ಣಿನ ಕಣ್ಣೀರು ಅಷ್ಟಕ್ಕೆ ನಿಲ್ಲಲಿಲ್ಲ. ನಂತರದಲ್ಲಿ ಮತ್ತೊಮ್ಮೆ ಕರಾವಳಿಯ ಹೆಣ್ಣಿನ ಕಣ್ಣೀರನ್ನು ದೇಶ ನೋಡಿದ್ದು 2012 ರಲ್ಲಿ ನಡೆದ ಹೋಂ ಸ್ಟೇ ದಾಳಿಯ ಸಂಧರ್ಭದಲ್ಲಿ. ಪತ್ರಕರ್ತ ನವೀನ್ ಸೂರಿಂಜೆಯ mangalore_moral1ಕ್ಯಾಮರಾ ಕಣ್ಣಿನಲ್ಲಿ ಅಮಾಯಕ ಹೆಣ್ಣುಮಕ್ಕಳ ಕಣ್ಣೀರು ಸೆರೆಯಾಗಿತ್ತು. ಸ್ನೇಹಿತನೊಬ್ಬನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಬಂದಿದ್ದ ಕೆಲವು ಯುವತಿಯರನ್ನು ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಮತ್ತೆ ನೈತಿಕ ಪೊಲೀಸರು ಕಾಡಿದ್ದರು. ಅಲ್ಲಿದ್ದ ಹೆಣ್ಮಕ್ಕಳ ಮೇಲೆ ರಾಕ್ಷಸೀಯ ವರ್ತನೆ ತೋರಿಸಿ ಮನಬಂದಂತೆ ಥಳಿಸಿ ಮಾನಭಂಗ ಮಾಡಿದ್ದರು. ಸಂತಸದ ಪಾರ್ಟಿಗೆ ಆಗಮಿಸಿದ್ದ ಹೆಣ್ಮಕ್ಕಳ ಕಣ್ಣಿನಲ್ಲಿ ಹರಿಯುತ್ತಿದ್ದ ಕಣ್ಣೀರ ಕೋಡಿಯನ್ನು ನಾಗರಿಕ ಸಮಾಜ ನೋಡಿತ್ತು. ಅಲ್ಲಿಯೂ ಹೆಣ್ಣು ಅಸಹಾಯಕಲಾಗಿದ್ದಳು. ಸಮಾಜದ ಮುಂದೆ ಬಂದು ತಮ್ಮ ಮೇಲೆ ಅಮಾನುಷವಾಗಿ ವರ್ತಿಸಿದ ರಾಕ್ಷಸರ ವಿರುದ್ಧ ಸೆಟೆದು ನಿಲ್ಲಲು ಆಕೆಗೆ ಸಾಧ್ಯವಾಗಲಿಲ್ಲ. ಅವಮಾನದ ಕಣ್ಣೀರೇ ಆಕೆಯ ಪಾಲಿಗೆ ಅಂತಿಮವಾಯಿತು. ಈ ಎಲ್ಲಾ ಸಂಧರ್ಭಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸರ ದಾಳಿ ಒಳಗಾಗಿ ಹೆಣ್ಣು ಸುರಿಸಿದ ಅವಮಾನದ ಕಣ್ಣೀರನ್ನು ದೇಶ ನೋಡಿತು. ನಾಗರಿಕ ಸಮಾಜ ಪ್ರತಿಭಟಿಸಿತು. ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿತ್ತು. ಆದರೂ ವ್ಯವಸ್ಥೆಯ ವೈಫಲ್ಯದಿಂದ ಅಸಹಾಯಕರಾದ ಹೆಣ್ಮಕ್ಕಳ ಕಣ್ಣೀರನ್ನು ದೇಶದ ಜನರ ಮುಂದಿಟ್ಟ ತಪ್ಪಿಗೆ ಪತ್ರಕರ್ತ ನವೀನ್ ಸೂರಿಂಜೆ 4 ತಿಂಗಳುಗಳ ಕಾಲ ಜೈಲಲ್ಲಿ ಕೊಳೆಯುವಂತಾಯಿತು.

ಇವುಗಳು ನಾವು ನೀವು ಕಂಡ ದಕ್ಷಿಣ ಕನ್ನಡ ಜಿಲ್ಲೆಯ ಹೆಣ್ಮಕ್ಕಳ ಕಣ್ಣೀರಾಗಿವೆ. ಹೀಗೆ ನಿತ್ಯ ಇಂಥಹಾ ಸಾಕಷ್ಟು ಅಮಾಯಕ ಹೆಣ್ಮಕ್ಕಳು ಉಭಯ ಧರ್ಮಗಳ ಸಂಘಟನೆಗಳ ನೈತಿಕ ಪೊಲೀಸರ ಕಾಟಕ್ಕೆ ಬಲಿಯಾಗಿ ಕಣ್ಣೀರನ್ನು ಸುರಿಸುತ್ತಲೇ ಇದ್ದಾರೆ.

  • ಒಂದು ವರ್ಷದ ಹಿಂದೆ ಮಂಗಳೂರಿನ ಬಜ್ಪೆಯಲ್ಲಿ ಹಿಂದು ಯುವಕನೊಬ್ಬನ ಜೊತೆಯಲ್ಲಿ ಮುಸ್ಲಿಂ ಯುವತಿಯೊಬ್ಬಳು ಕಾರಲ್ಲಿ ತಿರುಗಾಡಿದನ್ನು ಕಂಡು ಮುಸ್ಲಿಂ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಯುವಕರ ಗುಂಪು ಜೋಡಿಗಳ ಮೇಲೆ ಮುಗಿಬಿದ್ದಿತ್ತು. ಹಲ್ಲೆಯನ್ನೂ ನಡೆಸಿತ್ತು. ಆ ಸಂಧರ್ಭದಲ್ಲೂ ಅವಮಾನಕ್ಕೆ ಒಳಗಾದ ಮುಸ್ಲಿಂ ಯುವತಿ ಕಣ್ಣೀರಿಟ್ಟಿದ್ದಳು. ಕೈಮುಗಿದು ಅತ್ತು ಗೋಗರಿದಿದ್ದಳು ಆ ಕತ್ತಲಲ್ಲಿ ಅವಳ ಕಣ್ಣೀರು ಯಾರಿಗೂ ಕಾಣಲಿಲ್ಲ.
  • ಸುರತ್ಕಲ್ ಬೀಚ್ ನಲ್ಲಿ ಮುಸ್ಲಿಂ ಯುವಕನೊಬ್ಬನ ಜೊತೆ ಹಿಂದೂ ಯುವತಿಯೊಬ್ಬಳು ಸುತ್ತಾಡುತ್ತಿದ್ದಿದ್ದನ್ನು ಕಂಡ ಹಿಂದೂ ಸಂಘಟನೆಯ ಕಾರ್ಯಕರ್ತರೆನ್ನಲಾದ ಯುವಕರು ದಾಳಿ ಮಾಡಿದ್ದರು. ಅಲ್ಲಿಯೂ ಇದೇ ಪರಿಸ್ಥಿತಿ. ಧರ್ಮ ರಕ್ಷಣೆಯ ಹೆಸರಲ್ಲಿ ಅವಮಾನಕ್ಕೊಳಗಾದ ಹೆಣ್ಣು ಅಲ್ಲಿಯೂ ಕಣ್ಣೀರಿಟ್ಟಿದ್ದಳು ಸಮುದ್ರ ಗಾಳಿಯ ಹೊಡೆತಕ್ಕೆ ಆಕೆಯ ಕಣ್ಣೀರು ಅಲ್ಲೇ ಆರಿ ಹೋಗಿತ್ತು.
  • ಮಂಗಳೂರಿನ ಸುರತ್ಕಲ್ ನಲ್ಲಿ ಉತ್ತರ ಭಾರತ ಮೂಲದ ಯುವತಿಯೊಬ್ಬಳು ತಾನು ಮದುವೆಯಾಗಲಿರುವ ತನ್ನದೇ ಕೋಮಿನ ಯುವಕನ ಜೊತೆಯಲ್ಲಿದ್ದಾಗ ಅವರ ಮೇಲೂ ನೈತಿಕ ಪೊಲೀಸರ ಕಣ್ಣು ಬಿದ್ದಿತ್ತು. ಹಿಂದೂ ಸಂಘಟನೆಯ ಕಾರ್ಯಕರ್ತರೆನ್ನಲಾದ ಗುಂಪು ಅವರ ಮೇಲೆ ಮುಗಿಬಿದ್ದಿತ್ತು. ಎಲ್ಲರ ಮುಂದೆ ಅವಮಾನಕ್ಕೀಡಾದ ಯುವತಿ ಕಣ್ಣೀರು ಸುರಿಸುತ್ತಿದ್ದಳು. ಪಾಪ ಬಡವರಾದ ದೂರದ ಜಾರ್ಖಂಡ್ ಯುವತಿಯ ಕಣ್ಣೀರು ಜಿಲ್ಲೆಯ ಪೊಲೀಸರಿಗೆ ಕಣ್ಣೀರಾಗಿ ಕಾಣಲೇ ಇಲ್ಲ.
  • ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಮುಸ್ಲಿಂ ಮಹಿಳೆಯೊಬ್ಬಳಿಗೆ ಸಹಾಯಮಾಡುವ ನೆಪದಲ್ಲಿ ಸಲುಗೆಯಿಂದಿದ್ದಾರೆ ಎಂಬ ಕಾರಣವನ್ನಿಟ್ಟು ಸ್ಥಳೀಯ ಪತ್ರಕರ್ತ ವಿ.ಟಿ ಪ್ರಸಾದ್ ಮೇಲೆ ಮುಸ್ಲಿಂ ಸಂಘಟನೆಯೊಂದಕ್ಕೆ ಸೇರಿದ ಯುವಕರ ಗುಂಪು ಹಲ್ಲೆ ನಡೆಸಿತ್ತು. ವಿ.ಟಿ ಪ್ರಸಾದ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಲ್ಪಟ್ಟ ಮುಸ್ಲಿಂ ಮಹಿಳೆಗೆ ಹಲ್ಲೆಕೋರರು ಧರ್ಮದ ಜಾಗೃತಿಯ ಹೆಸರಲ್ಲಿ ಅವಮಾನ ಮಾಡಿದ್ದರು. ಅಲ್ಲಿಯೂ ಆ ಬಡಪಾಯಿ ಮಹಿಳೆ ಕಣ್ಣೀರು ಸುರಿಸಿದ್ದಳು. ಪಾಪ ಆಕೆ ಧರಿಸಿದ ಬುರ್ಖಾ ಪರದೆಯ ಒಳಗಿನ ಕಣ್ಣುಗಳಿಂದ ಸುರಿಯುತ್ತಿದ್ದ ಕಣ್ಣೀರು ಹೊರ ಜಗತ್ತಿಗೆ ಕಾಣಲೇ ಇಲ್ಲ.

ಇವುಗಳು ಕೆಲವೊಂದು ಉದಾಹರಣೆಗಳಷ್ಟೇ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಗೆ ನಿತ್ಯ ಮಹಿಳೆ ಕಣ್ಣೀರು ಸುರಿಯುತ್ತಲೇ ಇದ್ದಾಳೆ. ಈ ಕಣ್ಣೀರು ಕೆಲವು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಇನ್ನು ಕೆಲವು ಪ್ರಕರಣಗಳು ಹೊರ ಪ್ರಪಂಚದ ಗಮನಕ್ಕೆ ಬಾರದೇ ಮುಚ್ಚಿಹೋಗುತ್ತವೆ. ನೈತಿಕ ಪೊಲೀಸ್ ಗಿರಿ ಪದ್ದತಿಯನ್ನು ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸಿದವು. ಅದನ್ನು ಮುಸ್ಲಿಂ ಪರ ಸಂಘಟನೆಗಳು ಚಾಚೂ ತಪ್ಪದೆ ಪಾಲಿಸುತ್ತಾ ಬಂದಿವೆ. ಏಟಿಗೆ ಇದಿರೇಟು ಎಂಬ ಮಾದರಿಯಲ್ಲಿ ಉಭಯ ಕೋಮುಗಳ ಸಂಘಟನೆಗಳು ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯನ್ನು ಮಾಡುತ್ತಾ ಬರುತ್ತಿವೆ. ಇದಕ್ಕೆ ಬಲಿಯಾಗುತ್ತಿರುವವರು ಉಭಯ ಧರ್ಮಗಳ ಅಮಾಯಕ ಯುವಕ –ಯುವತಿಯರು. ಮಾರ್ಚ್ 31 ರಂದು ಮಂಗಳೂರಿನ ಸುರತ್ಕಲ್ ಕೋಡಿಕೆರೆಯಲ್ಲಿ ಮಹಿಳಾ ಕಾರ್ಪೋರೇಟರ್ ಮೇಲೆ ನಡೆದದ್ದು ಇಂಥಹಾ ನೈತಿಕ ಪೊಲೀಸರ ದಾಳಿಯೇ.

ಪಾಲಿಕೆ ಸದಸ್ಯೆ ಪ್ರತಿಭಾ ಮೇಲಿನ ಅಕ್ರಮಣಕ್ಕೆ ಕಾರಣ ಅವರು ಸಂಸ್ಕೃತಿಯ ಚೌಟಕ್ಕಿನ unnamedಎಲ್ಲೆ ಮೀರಿದ್ದಾರೆ ಎಂಬ ನೈತಿಕ ಪೊಲೀಸರ ಸಂಶಯ. ಇದುವೇ ಇವರ ನಿದ್ದೆಗೆಡಲು ಪ್ರಮುಖ ಕಾರಣವಾಗಿರುವುದು. ಪ್ರತಿಭಾ ಕುಳಾಯಿ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂಧರ್ಭದಲ್ಲಿ ಅವರನ್ನು ಅಡ್ಡಗಟ್ಟಿದ ತಂಡ ಅವರನ್ನು ತರಾಟೆಗೆ ತೆಗೆದುಕೊಂಡ ಸಂಧರ್ಭದಲ್ಲಿ ನಿಂದಿಸಿದ ರೀತಿ, ಅದಕ್ಕಾಗಿ ಬಳಸಿದ ಪದಗಳು ಇದನ್ನು ಸಾಬೀತುಪಡಿಸುತ್ತವೆ. ವಿಪರ್ಯಾಸವೆಂದರೆ ಮಹಿಳಾ ಜನಪ್ರತಿನಿಧಿಯ ಮೇಲೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ತಮ್ಮ ಕ್ಷೇತ್ರದ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡುವ ಬದಲಾಗಿ ಆ ಕ್ಷೇತ್ರದ ಶಾಸಕ ಮೊಯ್ದಿನ್ ಬಾವಾ ಪ್ರತಿಭಾ ಅವರ ಜೊತೆ ಮಾಧ್ಯಮದ ಮುಂದೆ ಬಂದು ಹಲ್ಲೆಕೋರನ್ನು ಬಂಧಿಸಿ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸುವಂತೆ ಕೇಳಿಕೊಳ್ಳುವುದರ ಹಾಸ್ಯಾಸ್ಪದ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಾರಿಯ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಸಾಕಷ್ಟು ನೈತಿಕ ಪೊಲೀಸ್ ಗಿರಿ ನಡೆದಿತ್ತು. ಇದು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡುಮಾಡಿತ್ತು. ಜಿಲ್ಲೆಯಲ್ಲಿ ನಡೆಯುತ್ತಿದ್ದ ನೈತಿಕ ಪೊಲೀಸ್ ಗಿರಿಯನ್ನೇ ಪ್ರಮುಖ ಚುನಾವಣಾ ವಿಚಾರವನ್ನಾಗಿಸಿಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿದಿತ್ತು. ಅದರಲ್ಲಿ ಯಶಸ್ಸನ್ನೂ ಗಿಟ್ಟಿಸಿಕೊಂಡಿತ್ತು. ಸರ್ಕಾರ ರಚನೆಯಾದ ಅವಧಿಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ರಮನಾಥ್ ರೈ , ಆರೋಗ್ಯ ಸಚಿವ ಯು.ಟಿ ಖಾದರ್ ಸೇರಿದಂತೆ ಅನೇಕ ಮುಖಂಡರು ನೈತಿಕ ಪೊಲೀಸ್ ಗಿರಿಯ ಕಡಿವಾಣವೇ ನಮ್ಮ ಗುರಿ ಎಂದರು. ಆದರೆ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ಬಿಜೆಪಿ ಆಡಳಿತ ಅವಧಿಯಲ್ಲಿ ಪ್ರಮುಖ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವ ಕಾರ್ಯ ಆಗಿತ್ತು. ಆದರೆ ಇದೀಗ ಕಾಂಗ್ರೆಸ್ ಆಡಳಿತದಲ್ಲಿ ಎಲ್ಲೆ ಮೀರುತ್ತಿರುವ ನೈತಿಕ ಪೊಲೀಸ್ ಗಿರಿಯ ಆರೋಪಿಗಳನ್ನು ಕನಿಷ್ಠ ಪಕ್ಷ ಬಂಧಿಸುವ ಕಾರ್ಯವೂ ನಡೆಯದೇ ಇರುವುದು ವಿಪರ್ಯಾಸ. ಆಡಳಿತ ಯಂತ್ರದ ವೈಫಲ್ಯ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ ಇಲ್ಲಿ ಎದ್ದು ಕಾಣುತ್ತಿದೆ. ಹೀಗೆ ನೈತಿಕ ಪೊಲೀಸರ ಅಟ್ಟಹಾಸಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಈ ಜಿಲ್ಲೆಯ ಇನ್ನೆಷ್ಟು ಅಮಾಯಕ ಹೆಣ್ಮಕ್ಕಳು ಕಣ್ಣೀರು ಸುರಿಸಬೇಕಾಗಿ ಬರುತ್ತೋ ?

11 thoughts on “ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಹರಿಯುವ ಕಣ್ಣೀರಿಗೆ ಕೊನೆ ಇಲ್ಲವೇ?

  1. sanju

    ನೀವು ಹೇಳಿದ್ದು ಸರಿ ಇರ್ಷಾದ್ ಅವರೇ. ಇಂತ ವಿಕೃತಿಗಳು ಯಾವ ಸಮಾಜಕ್ಕೂ ಬೇಡ. ಗಂಡು ಹೆಣ್ಣು ಬೀದಿಯಲ್ಲಿ ಜೊತೆಯಾಗಿ ಓಡಾಡುತ್ತಾರೆ ಎಂದರೆ ಅವರು ಪ್ರೇಮಿಗಳೇ ಆಗಿರಬೇಕಂತಿಲ್ಲ. ಬೇರೆ ಬೇರೆ ಕೋಮುಗಳ ಯುವಕ – ಯುವತಿಯರ ನಡುವೆ ಗೆಳೆತನ ಇರಬಾರದು ಅಂತೇನೂ ಇಲ್ಲ. ಆದರೆ ನೋಡುವ ಕಣ್ಣು ಶುದ್ಧವಾಗಿರಬೇಕು. ಹಿಂದೂ ಸಂಘಟನೆಗಳಾಗಲಿ, ಮುಸ್ಲಿಂ ಸಂಘಟನೆಗಳಾಗಲಿ ಎಲ್ಲೆ ಮೀರಬಾರದು. ಧರ್ಮದ ಹೆಸರಲ್ಲಿ ಬೇರೆ ಮನೆಯ ಹೆಣ್ಣು ಗಂಡುಗಳ ಮೇಲೆಕೇ ಇವರ ಜಾಗ್ರತ ರೋಷ ಅಲ್ಲವೇ… ಇನ್ನು ಕಾಂಗ್ರೆಸ್ ಸರ್ಕಾರ, ಇದು ಮೊದಲಿನಿಂದಲೂ ಹೇಳುವುದು ಒಂದು, ಮಾಡುವುದು ಮತ್ತೊಂದು. ಎಂದಿಗೂ ಸುಳ್ಳು ಹೇಳಿಯೇ ಇದು ಅಲ್ಪಸಂಖ್ಯಾತರ ಮತ ಕೇಳುವುದು. ಯುವತಿಯರ ಮೇಲೆ ಅಬ್ಬರಿಸುವ ಪುಂಡರ ಮೇಲೆ ಧೈರ್ಯ ತೋರುವ ಶಕ್ತಿ ಇವರಿಗಿಲ್ಲ. ಕಾರಣ, ಇವರಿಗೆ ಮತ ತಂದುಕೊಡುವವರೂ ಅವರೇ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಅನ್ವಯಿಸುತ್ತೆ.

    Reply
    1. vasanth

      hello sanju illiyu saha congress antha mathadthidiralree …! paksha, rajakiya bittu ondu henna kanneerina kathe keliyu hegree ege mathadthire yava pakshavu sariyilla hutuvaga olleya udheshadinda prarambhavagi next bartha bartha swarthigala pakshavagi badalagi jathi, kula, dharma antha manushatva ilada pranigala hage varthisuthare ayo ivarige yavaga kannu tereyutho eno aa devarige gothu

      Reply
  2. ಅರುಣ್ ಜೋಳದಕೂಡ್ಲಿಗಿ

    ಇರ್ಷಾದ್ ನಿಮ್ಮ ಪ್ರಶ್ನೆ, ಕಾಳಜಿ, ಆತಂಕ ದುಗುಡ ನಮ್ಮವೂ ಕೂಡ. ಮೊದಲನೆಯದಾಗಿ ಇಂಹತ ಘಟನೆಗಳನ್ನು ಇರುವಂತೆಯೇ ದಾಖಲಿಸುವ ಕೆಲಸವೂ ನಿಮ್ಮಂಥವರಿಂದ ಆಗಬೇಕು. ಈ ಬಗೆಯ ದಾಖಲೆಯು ಇನ್ನಷ್ಟು ಸೂಕ್ಷ್ಮವೂ ಕಾನೂನಾತ್ಮ ಅಗತ್ಯಗಳಿಗೆ ಪೂರಕವಾಗುವಂತೆಯೂ ಇರಬೇಕಾಗುತ್ತದೆ. ಆನಂದ್ ತೇಲ್ ತುಂಬಡೆ ಅವರ ಖೈರ್ಲಾಂಜಿ ಓದಿದರೆ ಈ ಒಂದು ಪುಸ್ತಕವನ್ನು ಆಧರಿಸಿಯೇ ನೂರಾರು ಜನರನ್ನು ಬಂಧಿಸುವ ಸಾಧ್ಯತೆಗಳಿದ್ದವು.ಕಾರಣ ಅವರು ಕಾನೂನು ಮತ್ತದರ ಉಲ್ಲಘನೆಯಲ್ಲಿ ಯಾರ್ಯಾರು ಯಾವ ಯಾವ ಅಪರಾಧದ ಹಿನ್ನೆಲೆಯಲ್ಲಿ ತಪ್ಪಿತಸ್ತರು ಎನ್ನುವ ಕಾನೂನು ಸೂಕ್ಷ್ಮತೆಯಿಂದ ಅಲ್ಲಿನ ವರದಿಗಳನ್ನು ಮಾಹಿತಿಯನ್ನು ಕಲೆಹಾಕಿದ್ದರು. ಬಹುಶಃ ಈ ಮಾದರಿ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದ ಧಾರ್ಮಿಕ ಪೋಲಿಸ್ ಗಿರಿಯನ್ನು ದಾಖಲಿಸಬೇಕಾಗುತ್ತದೆ. ಈ ಮಾದರಿ ಜಿ.ರಾಜಶೇಖರ್ ಮತ್ತು ಫಣಿರಾಜ್ ಅವರ ದಾಖಲಾತಿಯಲ್ಲು ಕಾಣಬಹುದು. ಹಾಗಾಗಿ ಅವರಿಂದಲೂ ಹೊಸ ತಲೆಮಾರು ಕಲಿಯುವುದಿದೆ.

    ಕಾರಣ ಹೊಸ ತಲೆಮಾರಿನ ಯುವಕರು ಧಾರ್ಮಿಕ ಮೂಲಭೂತವಾದದ ನೈತಿಕ ಪೋಲೀಸ್ ಗಿರಿಯ ಬಗ್ಗೆ ಎಚ್ಚೆತ್ತು ಬರೆಯುತ್ತಿರುವುದನ್ನು ನೋಡಿದರೆ ನನಗೇಕೋ ಈ ಮೇಲಿನ ಮಾತನ್ನು ಬರೆಯಬೇಕು ಅನ್ನಿಸಿತು.
    -ಅರುಣ್ ಜೋಳದಕೂಡ್ಲಿಗಿ

    Reply
  3. Nagshetty Shetkar

    “ಹೋಂ ಸ್ಟೇ ದಾಳಿಯ ಸಂಧರ್ಭದಲ್ಲಿ ಸ್ನೇಹಿತನೊಬ್ಬನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಬಂದಿದ್ದ ಕೆಲವು ಯುವತಿಯರನ್ನು ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಮತ್ತೆ ನೈತಿಕ ಪೊಲೀಸರು ಕಾಡಿದ್ದರು. ಅಲ್ಲಿದ್ದ ಹೆಣ್ಮಕ್ಕಳ ಮೇಲೆ ರಾಕ್ಷಸೀಯ ವರ್ತನೆ ತೋರಿಸಿ ಮನಬಂದಂತೆ ಥಳಿಸಿ ಮಾನಭಂಗ ಮಾಡಿದ್ದರು.”

    ಥಳಿಸಿದ್ದು ಸತ್ಯ, ಆದರೆ ಮಾನಭಂಗ?

    Reply
  4. ಇಬ್ರಾಹಿಮ್ ಖಾದಿರ್

    ಪ್ರಿಯ ಅರುಣ್, ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಪಾರ್ಟಿಯ ಹೆಸರಿನಲ್ಲಿ ಸೂಳೆಗಾರಿಕೆ ನಡೆಯುತ್ತಿರುವುದು ಸೂರ್ಯ ಚಂದ್ರರಷ್ಟೇ ಸತ್ಯ. ಈ ರಾಕೆಟ್ ಅನೇಕ ಅಮಾಯಕ ಯುವತಿಯರನ್ನು ವಶ ಪಡಿಸಿಕೊಂಡು ಸೂಳೆಗಾರಿಕೆಗೆ ತಲ್ಲಿರುವುದೂ ಸತ್ಯ. ಇವುಗಳ ಬಗ್ಗೂ ಇರ್ಶಾದ್ ಅವರು ಬರೆಯಬೇಕಲ್ಲವೇ? ಹಾಗೆ ರಾಜಶೇಖರ್ ಮತ್ತು ಫಣಿರಾಜ್ ಕೂಡ ಬರೆಯಬೇಕಿತ್ತಲ್ಲ! ಕಾಲೇಜಿಗೆ ಹೋಗುವ ಹುಡುಗಿಯರು ಪಾರ್ಟಿ ಮೋಜಿನ ಜಾಡಿಗೆ ಬಿದ್ದು ಸೂಳೆಗಾರಿಕೆಗೆ ಬಲಿಯಾಗುವುದು ನಿಮಗೆ ಬೇಕೇ?

    Reply
  5. PRAVEEN

    ಪ್ರಿಯ Nagshetty Shetkar ಅವರೇ ಹೋಂ ಸ್ಟೇ ದಾಳಿ ಸಂಧರ್ಭದಲ್ಲಿ ಹಲ್ಲೆ ನಡೆಸಿದ ಯುವಕರು ಅಲ್ಲಿದ್ದ ಯುವತಿಯರನ್ನು ಹೊಡೆಯುವ ಸಂಧರ್ಭದಲ್ಲಿ ಅವರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹೆಣ್ಣೀನ ಮೈ ಮೇಲೆ ಕೈ ಹಾಕಿದ್ದಾರೆ ಅವರ ಖಾಸಗಿ ಸ್ಥಳಗಳನ್ನು ಮುಟ್ಟಿರುವುದು, ಅವರನ್ನು ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರ ಆಗಿವೆ. ಇದು ಹೆಣ್ಣಿನ ಮಾನ ಭಂಗ ಅಲ್ಲವೆ ( ಮಾನಭಂಗದ ಅರ್ಥ ಗೌರವಕ್ಕೆ ಧಕ್ಕೆ ) ಹಾಗಾದರೆ ನಿಮ್ಮ ಪ್ರಕಾರ ಮಾನ ಭಂಗ ಅಂದರೇನು?
    ದಯಮಾಡಿ ತಿಳಿಸಿ.

    Reply
  6. Salam Bava

    Congrats Mr.Ersad for the article, ನನಗೆ ಅನಿಸುತ್ತದೆ- Mr.Nagshetty and Mr.Praveen Shetty ಇಬ್ಬರ ಹೇಳಿಕೆಯ ತಿರುಳಾರ್ಥ ಒ೦ದೇ,ಮತ್ತು terminology ಬೇರೆ ಎ೦ದು.Mr.Ebrahim Kadir ರವರ ಹೇಳಿಕೆ ತು೦ಬಾ extreme ,. ಅವರು ಹೇಳುವ ವರಸೆ ನೋಡಿದರೆ ಅವರು ಇ೦ಥಾ ಹುಡುಗಿಯರನ್ನು ಹಿ೦ಸಿಸಿದ,ಮಾನ ಭ೦ಗ ಮಾಡಿದ ಹೀನ ಕ್ರತ್ಯವನ್ನು ನ್ಯಾಯೀಕರಿಸುತ್ತಾರೆ ಎ೦ದು ಕಾಣುತ್ತದೆ. ಅವರು ಹೆಸರಿಸಿದ ವ್ರತ್ತಿಗೆ ಹುಡುಗಿಯರನ್ನು ದೂಡುವ ಇದ್ದರೆ Racket ಇದ್ದರೆ ಅವರ ಎದುರಾಗಿ ಶ್ರೀ ಅರುಣ್ ಹೇಳಿದ೦ತೆ ಭಾರತೀಯ ಸ೦ವಿದಾನದನಕ್ಕಣುಗುಣವಾಗಿ ನ್ಯಾಯಾ೦ಗ ಹೋರಾಟ ಮಾಡಲಿಽದು ಬಿಟ್ಟು ಇತರರನ್ನು ಹೊಣೆಯಾಗಿಸುವುದು ಯಾಕೆ?

    Reply
  7. ಗಿರಿ, ಬಜಪೆ

    ಪಾರ್ಟಿಗಳಲ್ಲಿ ಭಾಗವಹಿಸುವ ಮಹಿಳೆಯರೆಲ್ಲರೂ ಸೂಳೆಗಾರಿಕೆ ಮಾಡುವವರಾಗಿರುವುದಿಲ್ಲ… ಹಾಗೆಯೇ ಮಹಾ ಸಭ್ಯರಂತೆ ಸೋಗು ಹಾಕಿರುವ ಮಹಿಳೆಯರೆಲ್ಲರೂ ಸಭ್ಯರೂ ಆಗಿರುವುದಿಲ್ಲ. ಇದು ಅತ್ಯಂತ ಗಂಭೀರ ವಿಚಾರ. ಹುಡುಗಿಯರನ್ನು ಅಥವಾ ಮಹಿಳೆಯರನ್ನು ಎಲ್ಲಿ ಯಾವ ರೀತಿ ‘ಮಾನಭಂಗ’ ಮಾಡಲಾಗುತ್ತಿದೆ, ಅದಕ್ಕೆ ಯಾರೆಲ್ಲಾ ಕಾರಣಕರ್ತರು, ಮಹಿಳೆಯರ ಪಾಲೂ ಇದರಲ್ಲಿ ಎಷ್ಟಿರುತ್ತದೆ ಎನ್ನುವುದು ನಮ್ಮೆಲ್ಲರಿಗೂ ತಿಳಿದ ವಿಚಾರ. ಇನ್ನು ಪ್ರತಿಷ್ಠಿತರೆನಿಸಿಕೋಡವರ ವಲಯ (ರಾಜಕೀಯ ಸಂಬಂಧವಿರುವವರನ್ನೂ ಸೇರಿಸಿ)ದಲ್ಲಿ ನಡೆಯುತ್ತಿರುವ ವಿಶೇಷ ರೀತಿಯ ‘ವ್ಯವಹಾರ’ ಗಳ ಬಗ್ಗೆಯೂ ಹೆಚ್ಚಿನವರಿಗೆ ತಿಳಿದೇ ಇದೆ. ಕೆಲವೇ ಕೆಲವು ಘಟನೆಗಳಷ್ಟೇ ಬೆಳಕಿಗೆ ಬರುತ್ತಿವೆ. ಇಲ್ಲೇಲ್ಲಾ ಯಾವ ನೈತಿಕ ಪೊಲೀಸ್ ಗಿರಿಯೂ ಇಲ್ಲ.

    Reply
  8. Anand Godbole

    “ಪಾರ್ಟಿಗಳಲ್ಲಿ ಭಾಗವಹಿಸುವ ಮಹಿಳೆಯರೆಲ್ಲರೂ ಸೂಳೆಗಾರಿಕೆ ಮಾಡುವವರಾಗಿರುವುದಿಲ್ಲ… ”
    You are right. But every party has 10% who do prostitution.

    “ಮಹಾ ಸಭ್ಯರಂತೆ ಸೋಗು ಹಾಕಿರುವ ಮಹಿಳೆಯರೆಲ್ಲರೂ ಸಭ್ಯರೂ ಆಗಿರುವುದಿಲ್ಲ. ”
    You are right again. But again about 10% of them are indecent.

    “ಇನ್ನು ಪ್ರತಿಷ್ಠಿತರೆನಿಸಿಕೋಡವರ ವಲಯ (ರಾಜಕೀಯ ಸಂಬಂಧವಿರುವವರನ್ನೂ ಸೇರಿಸಿ)ದಲ್ಲಿ ನಡೆಯುತ್ತಿರುವ ವಿಶೇಷ ರೀತಿಯ ‘ವ್ಯವಹಾರ’ ಗಳ ಬಗ್ಗೆಯೂ ಹೆಚ್ಚಿನವರಿಗೆ ತಿಳಿದೇ ಇದೆ.”
    Right. Rajashekhar, Phaniraj, Ershad and others should expose such people.

    Reply

Leave a Reply to Anand Godbole Cancel reply

Your email address will not be published. Required fields are marked *