Author Archives: Aniketana

ಪೋಲಿಸರೇ ಸಂತ್ರಸ್ತರಾಗುವ ಅಪಾಯ: ಎಡಪಂಥೀಯರ ಕೊಡುಗೆ

Naveen Soorinje


ನವೀನ್ ಸೂರಿಂಜೆ


 

ಅಸಂಖ್ಯ ಹೋರಾಟ, ಚಳುವಳಿಗಳನ್ನು ಕಂಡ ಕರ್ನಾಟಕದಲ್ಲಿ ಇದೀಗ ಪೋಲಿಸರ ಪ್ರತಿಭಟನೆ ದಿನೇದಿನೇ ಸುದ್ದಿಯಾಗುತ್ತಿದೆ. ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ನೇತೃತ್ವದಲ್ಲಿ ಹಲವು ತಳಹಂತದ ಪೋಲಿಸ್ ಸಿಬಂದಿಗಳು ವೇತನ ತಾರತಮ್ಯ, ಸಾಕಷ್ಟು ಸೌಲಭ್ಯಗಳು ಇಲ್ಲದಿರುವುದು, ರಜೆ ನಿರಾಕರಣೆ, ಮೇಲಾಧಿಕಾರಿಗಳ ಕಿರುಕುಳ ಹಾಗೂ ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಇಂತಹ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ಅನ್ಯಾನ್ಯ ಬೇಡಿಕೆಗಳ ಈಡೇರಿಕೆಯ ವಿಚಾರವನ್ನು ಮುಂದಿಟ್ಟುಕೊಂಡು ಸಾವಿರಾರು ಪೊಲೀಸರು ಜೂನ್ 4 ರಂದು ಸಾಮೂಹಿಕ ರಜೆ ಹಾಕಲು ನಿರ್ಧರಿಸುವ ಮೂಲಕ ಸಂಘರ್ಷಾತ್ಮಕ ಹೋರಾಟದ ಮಾರ್ಗವನ್ನು ಹಿಡಿದಿದ್ದಾರೆ. ಅನ್ಯ ಸಂದರ್ಭಗಳಲ್ಲಿ ಪೋಲಿಸ್ ಇಲಾಖೆಯ ಮಟ್ಟದಲ್ಲೇ ಮಂಥನಕ್ಕೆ ಒಳಗಾಗಬಹುದಾಗಿದ್ದ, ಇತ್ಯರ್ಥವಾಗಬಹುದಾಗಿದ್ದ ಪೋಲಿಸರ ಪ್ರತಿಭಟನೆ ಮತ್ತು ಅವರ ಹಕ್ಕೊತ್ತಾಯದ ವಿಚಾರವು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡು ಹೊಸ ಆಯಾಮವನ್ನು ಪಡೆದುಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಕ್ರಿಯಾಶೀಲವಾಗಿರುವ ಯುವ ಕಾರ್ಯಕರ್ತರು ಹಾಗೂ ಲೇಖಕರು ಈ ವಿಚಾರದಲ್ಲಿ ಹೋರಾಟಕ್ಕೆ ಕಟಿಬದ್ಧವಾಗಿರುವ ಪೋಲಿಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ; ಸಹಾನುಭೂತಿ ಹಾಗೂ ಅನುಕಂಪವನ್ನು ಸೂಚಿಸುತ್ತಿದ್ದಾರೆ.

ಪೊಲೀಸರ ಹೆಸರಿನಲ್ಲಿ ನಡೆಯುವ ಪ್ರತಿಭಟನೆಗೆ ಇದೀಗ ದೊರಕುತ್ತಿರುವ ಅಭೂತಪೂರ್ವ ಬೆಂಬಲ ಹಲವು ಅನಪೇಕ್ಷಿತ ಪರಿಣಾಮಗಳಿಗೆ ಆಹ್ವಾನ ನೀಡುವ state-logoರೀತಿಯಲ್ಲಿ ಗೋಚರಿಸುತ್ತಿದೆ. ಯಜಮಾನ ಸ್ವರೂಪಿ ಪ್ರಭುತ್ವದ ಮೂರ್ತ ರೂಪವಾಗಿರುವ ಪೊಲೀಸರನ್ನೇ ಸಂತ್ರಸ್ತರನ್ನಾಗಿ ಬಿಂಬಿಸುವ ಪ್ರಯತ್ನ ಎಡಪಂಥೀಯ ಹೋರಾಟಗಾರರು ಮತ್ತು ಯುವ ಸಾಹಿತಿಗಳಿಂದ ನಡೆಯುತ್ತಿದೆ. ಇಂತಹ ಚಟುವಟಿಕೆಗಳು ಪರೋಕ್ಷವಾಗಿ ಪ್ರಭುತ್ವವನ್ನೇ ಸಂತ್ರಸ್ತರ ಸ್ಥಾನದಲ್ಲಿ ನಿಲ್ಲಿಸುವ ಅಪಾಯಕಾರಿ ಸಾಧ್ಯತೆಗಳನ್ನು ಹೊಂದಿವೆ. ಯುವ ಕಾರ್ಯಕರ್ತರ ಔದಾರ್ಯದ ಫಲವಾಗಿ ಇಂದು ಸಾಂಪ್ರದಾಯಿಕ ಶೋಷಿತ-ಶೋಷಕ ಸಮೀಕರಣದ ಸ್ವರೂಪವೇ ಒಮ್ಮೆಗೆ ಮಾರ್ಪಾಡಾದಂತೆ ಕಂಡುಬರುತ್ತಿದೆ.

ಅದಿರಲಿ. ಪೊಲೀಸರ ಬೇಡಿಕೆಗಳೇನು ಎಂಬುದರ ಬಗ್ಗೆ ಚರ್ಚಿಸೋಣಾ. ಸಾಮಾಜಿಕ ಜಾಲತಾಣದಲ್ಲಿ “ಪೊಲೀಸರ ಪರಿಸ್ಥಿತಿ ತೀರಾ ಹೀನಾಯವಾಗಿದೆ” ಎಂದು ಥರೇವಾರಿ ಬಿಂಬಿಸಲಾಗುತ್ತಿದೆ. ಅದರಲ್ಲೂ ಯುವ ಸಾಹಿತಿಗಳು ಮತ್ತು ಹೋರಾಟಗಾರರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ಪೊಲೀಸರೂ ನಮ್ಮಂತೆ ಮನುಷ್ಯರು!” ಎಂದು ಕೂಗಿ ಹೇಳುತ್ತಿದ್ದಾರೆ. ಆ ಮೂಲಕ ವ್ಯವಸ್ಥೆ ಪೊಲೀಸರನ್ನು ಕನಿಷ್ಠ ಮನುಷ್ಯರಂತೆ ನಡೆಸಿಕೊಳ್ಳುತ್ತಿಲ್ಲ ಎನ್ನುತ್ತಿದ್ದಾರೆ. ಇದನ್ನಂತೂ ಒಪ್ಪಲು ಅಸಾಧ್ಯ.

ಕೆಳ ಹಂತದ ಪೊಲೀಸರಿಗೆ ಸರಕಾರ ತೀರಾ ಕಡಿಮೆ ಸಂಬಳವನ್ನೇನೂ ನೀಡುತ್ತಿಲ್ಲ. ಕೇವಲ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಹೊಂದಿದ ಪೊಲೀಸ್ ಸಿಬಂದಿಯೊಬ್ಬ ಕಾರ್ಯನಿರ್ವಹಿಸುವ ಜಿಲ್ಲೆಯ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯದ ಜೊತೆಗೆ ವೇತನ ಪ್ರಾರಂಭವಾಗುವುದೇ 18 ಸಾವಿರ ರೂಪಾಯಿಗಳಿಂದ. ಸೈನ್ಯ ಹೊರತುಪಡಿಸಿ ಯಾವ ಸರಕಾರಿ ನೌಕರನಿಗೂ ಇಲ್ಲದ ಉಚಿತ ರೇಷನ್ ವ್ಯವಸ್ಥೆ ಪೊಲೀಸರಿಗಾಗಿ ಕರ್ನಾಟಕದಲ್ಲಿ ಜಾರಿಯಲ್ಲಿದೆ. ಪೊಲೀಸ್ ಸಿಬಂದಿಯೊಬ್ಬ ಕರ್ತವ್ಯದಲ್ಲಿ ಇದ್ದಾಗ ಸಾವನ್ನಪ್ಪಿದಲ್ಲಿ ಆತನ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲಾಗುತ್ತದೆ. ಈ ರೀತಿ ಬೇರೆ ಇಲಾಖೆಗಳಲ್ಲಿ ಇದ್ದರೂ ಅದಕ್ಕಾಗಿ ಅಲೆದಾಡಿಸಲಾಗುತ್ತದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಸಲ್ಲಿಸಿದ ಒಂದೇ ಒಂದೇ ಅರ್ಜಿ ಇತ್ಯರ್ಥವಾಗದೆ ಬಾಕಿಯಾಗಿಲ್ಲ. ಒಂದು ವೇಳೆ ಪೊಲೀಸ್ ಪೇದೆಯೊಬ್ಬ ಕರ್ತವ್ಯ ನಿರ್ವಹಿಸುವ ಸಂದರ್ಭ ಮೃತನಾದಲ್ಲಿ ತಕ್ಷಣವೇ ಆತನ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಗಾಯಗಳಾದಲ್ಲಿ 2 ಲಕ್ಷ ರೂಪಾಯಿಗಳನ್ನು ತಕ್ಷಣ ನೀಡಲಾಗುತ್ತದೆ. ಇನ್ನು ಪೊಲೀಸ್ ಸಿಬಂದಿಯೊಬ್ಬ ಯಾವುದೇ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಸೌಲಭ್ಯ ಪಡೆಯುವ ವ್ಯವಸ್ಥೆ ಇದೆ. ಇಷ್ಟು ವ್ಯವಸ್ಥೆಗಳು ಬೇರಾವ ಇಲಾಖೆಯಲ್ಲೂ ಊಹಿಸಲೂ ಅಸಾಧ್ಯ. ಆದುದರಿಂದಲೇ ಈಗೀಗ ನಡೆಯುತ್ತಿರುವ ಪೋಲಿಸ್ ಪೇದೆ ನೇಮಕಾತಿ ಸಂದರ್ಭಗಳಲ್ಲಿ ಲಕ್ಷ ಲಕ್ಷ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇದು ಮನುಷ್ಯನೊಬ್ಬನನ್ನು ನಡೆಸಿಕೊಳ್ಳುವ ರೀತಿಯಲ್ಲದೆ ಇನ್ನೇನು ಅನ್ನಬೇಕು?

ಇಷ್ಟೆಲ್ಲಾ ಸೌಲಭ್ಯಗಳು ಇದ್ದರೂ ಪೊಲೀಸರು ಪ್ರತಿಭಟಿಸೋದ್ಯಾಕೆ? ಕೇವಲ ರಜೆಯ ಕಾರಣಕ್ಕಾಗಿಯಂತೂ ಅಲ್ಲ. ಪೊಲೀಸ್ ಅಥವಾ ಸೈನ್ಯKSP Recruitment 2015 ಸೇರುವಾಗಲೇ ಅಲ್ಲಿನ ರಜಾ ಸೌಲಭ್ಯದ ಬಗ್ಗೆ ಅರಿವು ಇರುತ್ತದೆ. ಹಾಗೆಂದು ಸೈನಿಕರ ರೀತಿ ಪೊಲೀಸರಿಗೆ ರಜೆ ನೀಡುವುದೇ ಇಲ್ಲವೆಂದಲ್ಲ. ಕೆಲವೊಂದು ಕಠಿಣ ಮತ್ತು ಸಹಜ ನಿಯಮಗಳು ಇದ್ದೇ ಇರುತ್ತವೆ. ರಜೆಯಲ್ಲಿ ಅನಿಶ್ಚಿತತೆ ವಿಶೇಷವಾಗಿ ಪೋಲಿಸ್ ಮೊದಲಾದ ರಕ್ಷಣಾ ಪಡೆಗಳ, ಸುರಕ್ಷಾ ಸಂಸ್ಥೆಗಳ ಸೇವಾವೃತ್ತಿಯ ಅನಿವಾರ್ಯ ಲಕ್ಷಣ. ಅಷ್ಟಕ್ಕೂ ಪೋಲಿಸರಿಗೆ ರಜೆ ಇರಲೇಬೇಕು ಅನ್ನುವ ಕಾರಣಕ್ಕಾಗಿ ಈಗ ಅವರಿಗೆ ಬೆಂಬಲ ಕೊಡುವ ಪಕ್ಷಗಳು ಅಥವಾ ಸಾಮಾಜಿಕ ಕಾರ್ಯಕರ್ತರು ವಾರದ ರಜಾದಿನಗಳಲ್ಲಿಲಿ ಪ್ರತಿಭಟನೆ, ಆಂದೋಲನಗಳನ್ನು ಹಮ್ಮಿಕೊಳ್ಳುವುದಿಲ್ಲವೆಂಬ ನಿರ್ಧಾರವನ್ನು ಮಾಡುತ್ತಾರೆಯೇ ಎಂಬ ಪ್ರಶ್ನೆ ವ್ಯಂಗ್ಯವಾಗಿ ಕಂಡರೂ ಇಲ್ಲಿ ಪ್ರಸ್ತುತ. ಹಾಗೆಂದುಕೊಂಡು ಪೊಲೀಸರು ಪ್ರತಿಭಟಿಸಲೇ ಬಾರದೆಂದಲ್ಲ. ವೇತನ ತಾರತಮ್ಯ ಮತ್ತು ರಜೆಯ ಬಗ್ಗೆ ಈವೆರೆಗೂ ಒಂದೇ ಒಂದು ಮನವಿ ಪೊಲೀಸ್ ಇಲಾಖೆಗೆ ತಲುಪಿಲ್ಲ ಎಂಬುದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇತ್ತಿಚೆಗೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕನಿಷ್ಠ ಮನವಿಯನ್ನೂ ಮಾಡದೇ, ಇಲಾಖಾ ಮಟ್ಟದಲ್ಲೇ ಇರತಕ್ಕಂತಹ ಸಾಂಸ್ಥಿಕ ಮಾಧ್ಯಮಗಳನ್ನು ಬಳಸದೇ ಪೊಲೀಸ್ ಮ್ಯಾನುವಲ್ ನಲ್ಲಿ ಅವಕಾಶ ಇಲ್ಲದ, ಸಂವಿಧಾನ ವಿರೋಧಿಯಾಗಿ ಪೊಲೀಸರು ದಿಡೀರನೆ ಪ್ರತಿಭಟನೆ ನಡೆಸುತ್ತಿರೋದ್ಯಾಕೆ ಎಂಬುದರ ಬಗ್ಗೆ ಸಂಶಯಗಳು ಮೂಡಲಾರಂಭಿಸಿದೆ.

ಪೊಲೀಸರ ಪ್ರತಿಭಟನೆಗಿಂತಲೂ ಆತಂಕ ಸೃಷ್ಟಿಸಿರುವುದು ಪ್ರಜಾಸತ್ತಾತ್ಮಕ ಚಳುವಳಿಗಾರರು ಮತ್ತು ಯುವ ಸಾಹಿತಿಗಳ ಮಾತುಗಳು. “ಪೊಲೀಸರು ಹಲವು ಬಾರಿ ಜನಸಾಮಾನ್ಯರ ಮೇಲೆ ನಡೆಸುವ ಹಲ್ಲೆ ದೌರ್ಜನ್ಯಗಳಿಗೆ ಅವರ ಮೇಲಿರುವ ಒತ್ತಡಗಳೇ ಕಾರಣ….” ಈ ರೀತಿಯ ಅಭಿಪ್ರಾಯಗಳನ್ನು ತೇಲಿಸಲಾಗುತ್ತಿದೆ. ಇಂತಹ ವಾದಗಳು ತಮ್ಮ ಕುಟುಂಬದಿಂದ ದೂರ ಇರುವ ಸೈನಿಕರು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರಗಳನ್ನು ನಡೆಸುವುದು ಸಹಜ ಎಂಬಷ್ಟೇ ಆಪಾಯಕಾರಿ.

ಕರ್ನಾಟಕ ಪೊಲೀಸರ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಒಂದೆರಡಲ್ಲ. ಈಗಲೂ ಪ್ರತೀ ಠಾಣೆಯ ಲಾಕಪ್ಪಿನಲ್ಲಿ ನೋಡಿದರೆpolice-brutality ಬರಿಮೈಯ್ಯಲ್ಲಿ, ಕೇವಲ ಚೆಡ್ಡಿ ಹಾಕಿಕೊಂಡು ಕುಳಿತಿರುವ ನ್ಯಾಯಾಂಗದ ಮುಂದೆ ಹಾಜರುಪಡಿಸದ ಆರೋಪಿಗಳು ಕಂಡುಬರುತ್ತಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವ್ಯಾಪ್ತಿ ಮೀರಿ ಮನೆಯ ಯಜಮಾನನ್ನು ಬಂಧಿಸಿ ಆತನ ಮಗನ ಎದುರೇ ವಿವಸ್ತ್ರಗೊಳಿಸಿ, ಮರ್ಮಾಂಗಕ್ಕೆ ಸೂಜಿ ಹಾಕಿಸಿದ್ದು ಯಾವ ಮೇಲಾಧಿಕಾರಿಯಾಗಲೀ, ಐಪಿಎಸ್ ಅಧಿಕಾರಿಯಾಗಲೀ ಅಲ್ಲ. ದನದ ವ್ಯಾಪಾರ ಮಾಡುತ್ತಿದ್ದವರ ಜೊತೆ ಕೆಲಸ ಮಾಡುತ್ತಿದ್ದ ಕಬೀರ್ ನನ್ನು ಗುಂಡು ಹಾಕಿ ಸಾಯಿಸಿದ್ದು ಇದೇ ತಳ ಹಂತದ ಪೊಲೀಸ್ ಸಿಬಂದಿಗಳು. ಮೊನ್ನೆ ಮೊನ್ನೆ ಸಿಎಂ ಮನೆಗೆ ದೂರು ಕೊಡಲು ಬಂದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಠಾಣೆಯಲ್ಲಿ ದೌರ್ಜನ್ಯ ಎಸಗಿದ್ದು ಕುಮಾರಸ್ವಾಮಿ ಹೇಳುವಂತೆ ಸಿಎಂ ಸಿದ್ದರಾಮಯ್ಯ ಅಲ್ಲ; ಯಾವ ಮೇಲಾಧಿಕಾರಿಯ ಅಥವಾ ರಾಜಕಾರಣಿಯ ಕುಮ್ಮಕ್ಕೂ ಇಲ್ಲದ ಪೊಲೀಸ್ ಸಿಬಂದಿಗಳು! ಇಂತಹ ಸಾವಿರ ಸಾವಿರ ಪ್ರಕರಣಗಳು, ನಮ್ಮ ಮನೆಯ, ನೆರೆ ಮನೆಯ ವ್ಯಕ್ತಿಗಳಿಗಾದ ಅನ್ಯಾಯಗಳು ಕೇವಲ ಪೊಲೀಸ್ ಸಿಬಂದಿಗಳ ಅಮಾನವೀಯತೆಯಿಂದ ಕಾನೂನುಬಾಹಿರ ವರ್ತನೆಯಿಂದ ಆಗಿವೆಯೇ ಹೊರತು ಮೇಲಾಧಿಕಾರಿಗಳು ಮತ್ತು ರಾಜಕರಣಿಗಳ ಕುಮ್ಮಕ್ಕಿನಿಂದಲೋ ಅಥವಾ ವೇತನ ತಾರತಮ್ಯ, ರಜಾ ನಿರಾಕರಣೆಯಿಂದ ಅಲ್ಲ ಎಂಬುದಂತೂ ಸತ್ಯ.

ಹಾಗೆಯೇ ಈಗ ಪೊಲೀಸರ ಪ್ರತಿಭಟನೆಯನ್ನು ಬೆಂಬಲಿಸುವವರು ಎಡಪಂಥೀಯ ಹೋರಾಟಗಾರರು ಹೇಳುತ್ತಿರುವ “ನಾವು ಪ್ರತಿಭಟನೆ ಮಾಡುವ ಸಂದರ್ಭ ನಿಮ್ಮಿಂದ ಎಷ್ಟೇ ಹಲ್ಲೆಗೊಳಗಾದರೂ ನಿಮ್ಮ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೇವೆ” ಎಂಬ ಮಾತುಗಳೇ ಸಿನಿಕತನದ್ದು. ದಲಿತ ಅಥವಾ ಮುಸ್ಲೀಮನೊಬ್ಬ ತನ್ನ ಜಾತಿ ಧರ್ಮದ ಕಾರಣಕ್ಕಾಗಿಯೋ, ಕೇಳುವವರಿಲ್ಲ ಎನ್ನುವ ಕಾರಣಕ್ಕೋ ಲಾಕಪ್ಪಿನಲ್ಲಿ ಚಡ್ಡಿಯಲ್ಲಿ ಕುಳಿತು ಹಲ್ಲೆಗೊಳಗಾಗುವುದಕ್ಕೂ, ದಲಿತ ಮಹಿಳೆಯರು ವಿವಸ್ತ್ರಕ್ಕೊಳಗಾಗುವುದಕ್ಕೂ, ರಾಜಕೀಯ ಉದ್ದೇಶದ ಪ್ರತಿಭಟನೆಯ ಸಂದರ್ಭದ ಲಾಠಿಚಾರ್ಜ್ನ ಹಲ್ಲೆಗೂ ವ್ಯತ್ಯಾಸ ಇದೆ. ಕೇವಲ ಮುಸ್ಲೀಮರೆನ್ನುವ ಕಾರಣಕ್ಕೆ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಿಲುಕಿಸಲ್ಪಟ್ಟು ಹತ್ತು ವರ್ಷ ಜೈಲಿನಲ್ಲಿ ಕೊಳೆತು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಯಾದ ಒಂಬತ್ತು ದನಿಯಿಲ್ಲದ ನಿರಪರಾಧಿಗಳ ಜೈಲುವಾಸವೂ ರಾಜಕೀಯ ಪಕ್ಷಗಳು ಸಂಘಸಂಸ್ಥೆಗಳು ನಡೆಸುವ ಜೈಲ್ ಭರೋ ಆಂದೋಲನಗಳು ಏಕರೂಪದ್ದೇ? ಇದು ಸಮಸ್ಯೆಯನ್ನು ಸರಳೀಕರಿಸುವ ಪ್ರಯತ್ನವಲ್ಲವೇ?

ಅಷ್ಟಕ್ಕೂ ಪೊಲೀಸರ ಬೇಡಿಕೆಗಳ ಬಗ್ಗೆ ಯಾವ ಆಕ್ಷೇಪಗಳೂ ಇಲ್ಲ. ಸೌಲಭ್ಯಗಳನ್ನು ಹೊಂದಿರುವವರು ಮತ್ತಷ್ಟೂ ಸೌಲಭ್ಯಗಳು ಬೇಕು ಎನ್ನುವುದಕ್ಕೆ ಯಾರflowers in gun ಆಕ್ಷೇಪವೂ ಇಲ್ಲ. ಪೋಲಿಸರೇ ಖುದ್ದು ತಮಗೆ ಅದು ಬೇಕು ಇದು ಬೇಕು, ನಮ್ಮ ಸೇವಾಸ್ಥಿತಿ ಹಾಗಿರಬೇಕು ಹೀಗಿರಬೇಕು ಅನ್ನಲಿ. ಹಾಗೆಂದು ಜವಾಬ್ಧಾರಿಯುತ ರಾಜಕೀಯ ಪಕ್ಷಗಳು ಅಥವಾ ಸಾಮಾಜಿಕ ಕಾರ್ಯಕರ್ತರು “ಪೊಲೀಸರಿಗೆ ಮೂಲಭೂತ ಸೌಲಭ್ಯಗಳು ಇಲ್ಲದ ಕಾರಣಕ್ಕಾಗಿ ಅವರು ದೌರ್ಜನ್ಯ ಎಸಗುತ್ತಾರೆ” ಎಂಬಂತಹ ಮಾತುಗಳನ್ನು ಆಡುವುದು, “ಅವರೂ ಮನುಷ್ಯರೇ” ಎಂದು ಘೋಷಣೆ ಕೂಗುವುದು ಅನುಚಿತ. ಅವರ ಸದ್ಯದ ತುರ್ತು ಪೋಲಿಸ್ ವ್ಯವಸ್ಥೆಯನ್ನು ಹೆಚ್ಚು ಹೆಚ್ಚು ಮಾನವೀಯಗೊಳಿಸುವುದು ಹಾಗು ಅದನ್ನು ಪೂರ್ಣವಾಗಿ ಸಂವಿಧಾನ ಮತ್ತು ನೆಲದ ಕಾನೂನಿನ ಪರಿಧಿಗೆ ತರುವ ಕೆಲಸವಾಗಿದೆ. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶಿ ಸೂತ್ರಗಳನ್ನು ಅನುಷ್ಠಾನ ಮಾಡುವಂತೆ ಪೋಲಿಸ್ ಇಲಾಖೆ ಹಾಗೂ ಸರಕಾರಗಳನ್ನು ಒತ್ತಾಯಿಸುವ ಕಾರ್ಯವನ್ನು ನಾವು ಮೊದಲು ಮಾಡಬೇಕಾಗಿದೆ. ಮಾನವ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟೀಯ ಮಾನವ ಹಕ್ಕು ಆಯೋಗಗಳು ಸಲ್ಲಿಸಿದ ಶಿಫಾರಸ್ಸುಗಳ ಜಾರಿಗೆ ಒತ್ತಡ ಸೃಷ್ಟಿಸುವುದು ಎಡಪಂಥೀಯ ಹೋರಾಟಗಾರರ ಮೊದಲ ಕಾರ್ಯವಾಗಬೇಕೇ ಹೊರತು ಪೋಲಿಸರ ಆಂತರಿಕ ಪ್ರತಿಭಟನೆಗಳಲ್ಲಿ ಭಾಗಿಯಾಗುವುದಲ್ಲ.

ಜಾತ್ರೆಯ  ಆಮಂತ್ರಣ ಪತ್ರಿಕೆಯಲ್ಲಿ  ಮುಸ್ಲಿಮ್  ಡಿಸಿಯ  ಹೆಸರು ವಿವಾದ ಹಾಗೂ ಕರಾವಳಿಯ  ಕೋಮು ಸಾಮರಸ್ಯದ  ಇತಿಹಾಸ


-ಇರ್ಷಾದ್ ಉಪ್ಪಿನಂಗಡಿ


ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರಿನ ಮಹಾಲಿಂಗೇಶ್ವರ  ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ  ಪತ್ರಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ  ಇಬ್ರಾಹಿಂ ಅವರ  ಹೆಸರನ್ನು  ಉಲ್ಲೇಖಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. “ಜಿಲ್ಲಾಧಿಕಾರಿ  ಎ.ಬಿ ಇಬ್ರಾಹಿಂ ಮುಸ್ಲಿಮ್  ಸಮುದಾಯದವರಾಗಿದ್ದು ಅವರ ಹೆಸರನ್ನುsri-mahalingeshwara-temple_1409380877 ಆಮಂತ್ರಣ ಪತ್ರಿಕೆಯಲ್ಲಿ  ಮುದ್ರಿಸಿರುವುದು ಹಿಂದೂಗಳ ಭಾವನೆ ಧಕ್ಕೆ ಉಂಟಾಗುತ್ತದೆ ಮಾತ್ರವಲ್ಲ ಇದು 1997ರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 7 ವಿಧಿಯ ಉಲ್ಲಂಘನೆ” ಎಂಬುವುದು ಸಂಘಪರಿವಾರದ ಸಂಘಟನೆಗಳ ವಾದ. ಇದರ ಮುಂದುವರಿದ ಭಾಗವಾಗಿ ಮಾಜಿ ಬಿಜೆಪಿ ಶಾಸಕಿ ಹಾಗೂ ಹಾಲಿ ಪುತ್ತೂರು ವಿಧಾನಸಭಾ ಕ್ಷೇತ್ರದ  ಕಾಂಗ್ರೆಸ್ ಶಾಸಕಿ ಶಕುಂತಲಾ ಶೆಟ್ಟಿಯವರು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ “ಮುಸ್ಲಿಮ್” ಜಿಲ್ಲಾಧಿಕಾರಿಯ  ಹೆಸರನ್ನು  ಆಮಂತ್ರಣ  ಪತ್ರಿಕೆಯಿಂದ ಕೈಬಿಟ್ಟು ಮರುಮುದ್ರಣ ಮಾಡಲು ಸೂಚಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಸಂಘಪರಿವಾರ ದೇವಸ್ಥಾನದ ಮುಂಭಾಗದ ಜಾತ್ರೆ ನಡೆಯುವ ಸ್ಥಳದಲ್ಲಿ ಹಿಂದೂಗಳ ಹೊರತಾಗಿ ಇತರ ಧರ್ಮೀಯರಿಗೆ ಅಂಗಡಿ ತೆರೆಯಲು ಅವಕಾಶ ನೀಡುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಈ ಬೆಳವಣಿಗೆ ನಿಜಕ್ಕೂ ಆತಂಕಕಾರಿ. ಜಿಲ್ಲೆಯ ದಂಡಾಧಿಕಾರಿಯಾಗಿರುವರು ಜಿಲ್ಲಾಧಿಕಾರಿಗಳು. ಅವರು ಅಲಂಕರಿಸಿರೋ ಹುದ್ದೆ  ಧರ್ಮಾತೀತವಾದುದು. ಜಿಲ್ಲಾಧಿಕಾರಿಯನ್ನೇ ಧರ್ಮದ ಆಧಾರದಲ್ಲಿ ಪರಿಗಣಿಸುವುದಾದರೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ಎಲ್ಲಿಗೆ ಬಂದು ತಲುಪುತ್ತಿದೆ ಎಂಬುವುದು ಸ್ಪಷ್ಟಗೊಳ್ಳುತ್ತಿದೆ. ಇಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆರೆಯುತ್ತಿರುವ ಸಂಘಪರಿವಾರದ ಕೋಮುವಾದ ಹಾಗೂ ಅದಕ್ಕೆ ಪರ್ಯಾಯವಾಗಿ ಬೆಳೆಯುತ್ತಿರೋ ಮುಸ್ಲಿಮ್ ibrahim-iasಕೋಮುವಾದ ಜಿಲ್ಲೆಯ ಜನರನ್ನು ಸಂಪೂರ್ಣವಾಗಿ ಧರ್ಮದ ಆಧಾರದಲ್ಲಿ  ಬೇರ್ಪಡಿಸುವ ಕಾರ್ಯದಲ್ಲಿ ನಿರತವಾಗಿವೆ. ದಕ್ಷಿಣ  ಕನ್ನಡ ಜಿಲ್ಲೆ ಒಂದು  ಕಾಲದಲ್ಲಿ ಧಾರ್ಮಿಕ ಸೌಹಾರ್ದತೆಗೆ  ಹೆಸರಾದ ಜಿಲ್ಲೆಯಾಗಿತ್ತು. ಇಂದು  ಜಾತ್ರೆಯ  ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಮ್ ಜಿಲ್ಲಾಧಿಕಾರಿಯ ಹೆಸರು ಉಲ್ಲೇಖವಾಗಿರುವುದಕ್ಕೆ ವಿವಾದ ಎಬ್ಬಿಸುವ ಕೋಮುವಾದಿಗಳು, ಜಾತ್ರೆಯಲ್ಲಿ ಮುಸ್ಲಿಮರು ಅಂಗಡಿ  ತೆರೆಯಬಾರದು ಎಂದು ಫರ್ಮಾನು  ಹೊರಡಿಸುವ ಸಂಘಪರಿವಾರಿಗಳು ಜಿಲ್ಲೆಯ  ಸಾಮರಸ್ಯ  ಇತಿಹಾಸದತ್ತ  ಒಮ್ಮೆ ಕಣ್ಣು ಹಾಯಿಸಬೇಕು. ದಕ್ಷಿಣ ಕನ್ನಡ  ಜಿಲ್ಲೆಯ ಮೂಲ  ಪೂಜಾ ಪದ್ಧತಿ ಭೂತಾರಾಧನೆ ಮತ್ತು ನಾಗಾರಾಧನೆ. ಈ ನಾಡಿಗೆ ವೈದಿಕ ಹಿಂದೂ ಧರ್ಮ ಕಾಲಿಟ್ಟ ತರುವಾಯ ಇಸ್ಲಾಮ್  ಧರ್ಮ ಅರಬ್  ವರ್ತಕರ ಮೂಲಕ ಇಲ್ಲಿಗೆ ಕಾಲಿಟ್ಟಿತು. ನಂತರ ಪೋರ್ಚುಗೀಸ್ ಪ್ರವಾಸಿ ವಾಸ್ಕೋಡಗಾಮನ ಆಗಮನದೊಂದಿಗೆ ಕ್ರೈಸ್ತ ಧರ್ಮ ಕೂಡಾ ತುಳುನಾಡನ್ನ ಪ್ರವೇಶಿಸಿತು. ಈ ನಾಡಿನ ಮೂಲಧರ್ಮಕ್ಕೆ  ಭಿನ್ನವಾದ ಎರಡೂ ಮತಗಳನ್ನ ಇಲ್ಲಿಯ ಮೂಲನಿವಾಸಿಗಳು ಸ್ವಾಗತಿಸಿ ಅವರನ್ನು ತಮ್ಮದಾಗಿಸಿಕೊಂಡರು. ಅದೇ  ರೀತಿ ಇಲ್ಲಿ ನೆಲೆವೂರಿದ ಅರಬ್ ಮುಸ್ಲಿಮರೂ, ಪೂರ್ಚ್ ಗೀಸ್ ಕ್ರೈಸ್ತರೂ ತಮ್ಮ ಧರ್ಮ, ಸಂಸ್ಕೃತಿಯನ್ನು ಕಟ್ಟಿ ಬೆಳೆಸುವುದರೊಂದಿಗೆ ಈ  ನಾಡಿನ ಜನ , ಸಂಸ್ಕೃತಿಯೊಂದಿಗೆ  ಬೆರೆತು ತುಳುವರಾದರು ಎಂಬುವುದನ್ನು ಇತಿಹಾಸ ತಿಳಿಸಿಕೊಡುತ್ತದೆ. ತುಳುನಾಡಿದ ಭೂತಕೋಲದ  ಪಾಡ್ದನಗಳಲ್ಲಿ ಮುಸ್ಲಿಮರು ಪ್ರಮುಖಪಾತ್ರಗಳಲ್ಲಿ ಮಿಂಚುತ್ತಾರೆ. ಜುಮಾದಿ ದೈವ ಪಾಡ್ದನ, ಸಿರಿ ಪಾಡ್ದನ ಹಾಗೂ ಅತ್ತಾವರ ದೈವಗಳ ಪಾಡ್ದನಗಳಲ್ಲಿ ಮುಸ್ಲಿಮ್ ಪಾತ್ರದಾರಿಗಳು ಕಂಡುಬರುತ್ತಾರೆ. ಮುಸ್ಲಿಮ್ ಮಂತ್ರವಾದಿ ಅಲಿಭೂತ, ಸಮುದ್ರ ಬೀಭತ್ಸದಿಂದ ರಕ್ಷಣೆ ಕೊಡುತ್ತಿದ್ದ ಬಬ್ಬರ್ಯ ಯಾನೆ ಬಪ್ಪ  ಬ್ಯಾರಿಯನ್ನ ತುಳುವರು  ದೈವೀ  ಪುರುಷರನ್ನಾಗಿ  ಆರಾಧನೆ ಮಾಡುವ ಸಂಸ್ಕೃತಿ  ಈ ತುಳುನಾಡಿದ್ದು.  ಉಡುಪಿ  ಮಠಗಳ ಪರ್ಯಾಯ ಉತ್ಸವಗಳಲ್ಲಿ ಮುಸ್ಲಿಮ್ ಕುಟುಂಬವೊಂದು ರಥ ಅಲಂಕರಿಸುವುದು, ಪ್ರಭಾವಳಿ ರಚಿಸುವುದು, ದುರುಸು ಬಾಣಗಳನ್ನು ಬಿಡುವುದೇ ಮೊದಲಾದ ಶತಮಾನಗಳಿಂದ ನಡೆದುಕೊಂಡ ಬಂದ ಸಂಪ್ರದಾಯಗಳು ಇಲ್ಲಿಯ ಧಾರ್ಮಿಕ ಸಾಮರಸ್ಯಕ್ಕೆ ಉದಾಹರಣೆಗಳಾಗಿವೆ.

ಜಿಲ್ಲೆಯನ್ನು ಕೆಳದಿರಾಜ ವೆಂಕಟಪ್ಪ ನಾಯಕ  ಆಳುತ್ತಿದ್ದಾಗ ಭುವನಗಿರಿ ದುರ್ಗವೆನ್ನುವಲ್ಲಿ ಮುಸ್ಲಿಮರಿಗೆ ಮಸೀದಿ ಕಟ್ಟಿಸಿಕೊಟ್ಟ. ಆತನ ಮೊಮ್ಮಗ  ವೀರಭದ್ರನಾಯಕ  ತಾವರೆಕೆರೆಯ ಮಸೀದಿಗೆ  ಎಡಹಳ್ಳಿ ಗ್ರಾಮವನ್ನು ದತ್ತು ನೀಡಿದನಂತೆ. ಕೆಳದಿರಾಣಿ ಚೆನ್ನಮ್ಮಾಜಿ ದಕ್ಷಿಣ ಕನ್ನಡ  ಜಿಲ್ಲೆಯ ಕಿನ್ನಿಕಂಬಳ ಹಾಗೂ  ಗಂಜಿ ಮಠವೆನ್ನುವಲ್ಲಿ  ಮುಸ್ಲಿಮ್ ಸೂಫಿ ಸಂತರಿಗೆ 101  ಎಕರೆ ಜಮೀನು ದಾನ  ನೀಡಿದ ಉಲ್ಲೇಖಗಳು ಇತಿಹಾಸದ ಪುಟ ತಿರುಗಿಸಿದಾಗ  ತಿಳಿದುಬರುತ್ತದೆ. ದಕ್ಷಿಣ ಕನ್ನಡ  ಜಿಲ್ಲೆ ಮೈಸೂರು ಅರಸರಾದ  ಹೈದರಾಲಿ ಹಾಗೂ ಟಿಪ್ಪು ಸುಲ್ತಾನದ ಆಡಳಿತದಲ್ಲಿದ್ದ  ಸಂದರ್ಭದಲ್ಲಿ ಹಿಂದೂ ಧರ್ಮೀಯರ ಆರಾಧನಾ ಕೇಂದ್ರಗಳಿಗೆ ಭೂಮಿ ಹಾಗೂ ಆರ್ಥಿಕ ಸಹಕಾರವನ್ನು ನೀಡಿರುವ ಅನೇಕ  ಉದಾಹರಣೆಗಳಿವೆ. ಟಿಪ್ಪು ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನಕ್ಕೆ ಮೂಡುಶೆಡ್ಡೆ ಗ್ರಾಮವನ್ನು ದತ್ತುವಾಗಿ ನೀಡಿ, ಅಲ್ಲಿಯ ಪೂಜಾ ವಿಧಿಗಳಿಗೆ ದಿನಕ್ಕೆ ನಾಲ್ಕು ರೂಪಾಯಿಯಂತೆ  ತಸ್ತಿಕ್  ನೀಡಿದ್ದ. ಗುರುಪುರದ ಲಿಂಗಾಯಿತ  ಮಠ , ಮಂಜೇಶ್ವರದ ಮದನಂತೇಶ್ವರ ದೇವಾಲಯ  ಹಾಗೂ ಬಂಟ್ವಾಳ ತಾಲೂಕಿನ ಶಂಬೂರು  ಎಂಬಲ್ಲಿ ಹಿಂದೂ ದೇವಾಲಯಗಳಿಗೆ ಭೂಮಿ ಹಾಗೂ  ಆರ್ಥಿಕ ಸಹಾಯ ನೀಡಿರುವ  ಅನೇಕ ಉಲ್ಲೇಖಗಳು ದಕ್ಷಿಣ ಕನ್ನಡ  ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲೆಯ  ಇತಿಹಾಸದ ಕುರಿತಾಗಿ ಬೆಳಕು  ಚೆಲ್ಲುವ  ಪುಸ್ತಕವೊಂದರಲ್ಲಿ ವಹಾಬ್ ದೊಡ್ಡಮನೆ  ಬರೆದಿರುವ  ಲೇಖನದಲ್ಲಿ ಇಂಥಹಾ ಸಾಮರಸ್ಯದ  ಅನೇಕ ಉಲ್ಲೇಖಗಳಿವೆ. ಬಹುಷಃ ಈ ಎಲ್ಲಾ  ವಿಚಾರಗಳು ಧರ್ಮದ  ಹೆಸರಲ್ಲಿ ಮನಸ್ಸನ್ನು  ಒಡೆಯೋ ಕೆಲಸದಲ್ಲಿ   ನಿರತರಾಗಿರುವ ಧರ್ಮರಕ್ಷಕರಿಗೆ  ತಿಳಿದಿರಲಿಕ್ಕಿಲ್ಲ. ಒಂದು ವೇಳೆ  ತಿಳಿದಿದ್ದರೂ ಇಂಥಹಾ  ಸಾಮರಸ್ಯವನ್ನು ಅವರು ಬಯಸೋದಿಲ್ಲ  ಎಂಬುವುದು  ಜಿಲ್ಲೆಯಯಲ್ಲಿ  ಪದೇ  ಪದೇ ನಡೆಯುತ್ತಿರುವ ಘಟನೆಗಳಿಂದ ಸಾಬೀತಾಗುತ್ತಾ   ಬಂದಿರುವ  ಸತ್ಯ.

ಇಂದಿಗೂ  ದಕ್ಷಿಣ  ಕನ್ನಡ  ಜಿಲ್ಲೆಯಲ್ಲಿ ಕೂಡುಬಾಳುವಿಕೆ ಹಾಗೂ  ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿರುವ ಅನೇಕ ಧಾರ್ಮಿಕ ಕೇಂದ್ರಗಳು  ನಮ್ಮ ಮುಂದಿವೆ. ಮಂಗಳೂರಿನ ಬೈಲು ಪೇಟೆಯೆಂಬಲ್ಲಿ  ಸೂಫಿ  ಸಂತರ ದರ್ಗಾವೊಂದಿದೆ. ಅದರ  ಹೆಸರು ಶೈಖ್ ಸೈಯದ್ ಮೆಹಮೂದ್  ಜಲಾಲುದ್ದೀನ್ ಮತ್ತು ಅಶೈಖ್  ಸೈಯದ್ ಹಯಾತ್ ವಲಿವುಲ್ಲಾಹಿ ದರ್ಗಾ. ಈ  ದರ್ಗಾದಲ್ಲಿರುವ ಸಂತ ಮೂಲತಃ  ಬಾಗ್ದಾದ್ ನಿಂದ ಬಂದು ಇಲ್ಲಿ ನೆಲೆನಿಂತವರು. ಸ್ಥಳೀಯರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆತು  ಅವರ ಮನಗೆದ್ದರು.20160121_130438 ಈ ಸೂಫಿ ಸಂತ ಕೊನೆಉಸಿರೆಳೆದ ನಂತರ ಬೈಲು ಪೇಟೆಯಲ್ಲೇ ಅವರನ್ನು ಸಮಾಧಿ ಮಾಡಲಾಯಿತು.  ನಂತರ ಗ್ರಾಮಸ್ಥರ ಪಾಲಿಗೆ ಪುಣ್ಯಪುರುಷರ ಈ ಸಮಾಧಿ ಪವಿತ್ರ ಸ್ಥಳವಾಗಿ ಮಾರ್ಪಟ್ಟಿತು. ಇಂದಿಗೂ ಈ ದರ್ಗಾಕ್ಕೆ ಮುಸ್ಲಿಮರಿಗಿಂತ ಅಧಿಕ ಸಂಖ್ಯೆಯಲ್ಲಿ ಹಿಂದೂಗಳೇ ಭೇಟಿನೀಡುತ್ತಾರೆ. ಈ ಗ್ರಾಮ  ಹಿಂದೂ ಕೃಷಿಕರು ತಾವು ಬೆಳೆದ ಮೊದಲ  ಬೆಳೆಯನ್ನು ಸಂತರ ದರ್ಗಾಕ್ಕೆ ತಂದು ಭಕ್ತಿಯಿಂದ ಅರ್ಪಿಸುತ್ತಾರೆ. ದರ್ಗಾದಲ್ಲಿ ಪೂಜೆ ಸಲ್ಲಿಸಿ ನಂತ್ರ  ತಾವು  ಬೆಳೆದ ಬೆಳೆಯನ್ನ ಮಾರಾಟ ಮಾಡುತ್ತಾರೆ. ಇಂದಿಗೂ ಈ ಪದ್ದತಿ ಇಲ್ಲಿ ಚಾಲ್ತಿಯಲ್ಲಿದೆ. ಈ ಗ್ರಾಮದ ಹಿಂದೂಗಳು ಇಲ್ಲಿರುವ ಸೂಫಿ ಸಂತರನ್ನು  “ಶೇಖರ್ ಪಂಡಿತೆರ್” ಎಂದು ಕರೆಯುತ್ತಾರೆ. “ಶೇಖರ್  ಪಂಡಿತೆರ್” ಕುರಿತಾಗಿ ಗ್ರಾಮದ  ಹಿಂದೂಗಳ ಮನಸ್ಸಿನಲ್ಲಿ   ಗೌರವ, ಭಕ್ತಿ.  ಪ್ರತಿ ವಾರ ದರ್ಗಾಕ್ಕೆ ಬೆಲ್ಲ, ಅಕ್ಕಿ ಕೊಡುವ ಪದ್ದತಿಯನ್ನು ಸ್ಥಳೀಯ ಹಿಂದೂಗಳು ಪಾಲಿಸಿಕೊಂಡು ಬರುತ್ತಿದ್ದಾರೆ. ಇನ್ನು  ಮೂರು  ವರ್ಷಕ್ಕೊಮ್ಮೆ ನಡೆಯುವ ಊರೂಸ್ ಸಮಾರಂಭವನ್ನೂ ಇಲ್ಲಿ ಹಿಂದೂ ಮುಸ್ಲಿಮರು ಜೊತೆಗೂಡಿ ಆಚರಿಸುತ್ತಾರೆ.  “ ಮಂಗಳೂರಿನಲ್ಲಿ  ಏನೇ ಗಲಾಟೆ  ಆದ್ರೂ  ನಮಗಿಲ್ಲಿ  ಯಾವ ಭಯವೂ ಇಲ್ಲ . ಈ ದರ್ಗಾದ ಬಳಿ ಇರೋದು ಕೇವಲ ಎರಡು ಮುಸ್ಲಿಮರ ಮನೆ .ಆದ್ರೂ ಸ್ಥಳೀಯ ಬಹುಸಂಖ್ಯಾತ ಹಿಂದೂಗಳಿಂದ ನಮಗ್ಯಾವ  ಭಯವೂ ಇಲ್ಲ. ನಾವೆಲ್ಲರೂ  ಜೊತೆಗಿದ್ದೇವೆ, ಅದಕ್ಕೆ ಶೇಖ್  ಸೈಯದ್ ಮೆಹಮೂದ್ ಜಲಾಲುದ್ದೀನ್ ಸಂತರ ದರ್ಗಾ  ಕಾರಣ” ಎನ್ನುತ್ತಾರೆ ಸ್ಥಳೀಯ ನಿವಾಸಿ  ಅಬ್ದುಲ್ ಖಾದರ್ . ಇಲ್ಲಿಗೆ  ಭೇಟಿ  ನೀಡಿದಾಗ ಗ್ರಾಮಸ್ಥರ ಮೂಲಕ ಮತ್ತೊಂದು  ಸೌಹಾರ್ದದ ಕಥೆ  ಕೇಳಲ್ಪಟ್ಟೆ. ಬೈಲು ಪೇಟೆಯ ಜುಮ್ಮಾ ಮಸೀದಿಯಲ್ಲಿ  ಧರ್ಮ ಗುರುವೊಬ್ಬರಿದ್ದರು. ದಿನಂಪ್ರತಿ ಐದು  ಹೊತ್ತಿನ ಅಜಾನ್ (ನಮಾಜಿಗೆ ಕರೆಯುವ )  ಕರೆಯನ್ನು ಇವರೇ  ನೀಡುತ್ತಿದ್ದರು. ಮಸೀದಿಯ ಅಲ್ಪ ಸನಿಹದಲ್ಲೇ ಜುಮಾದಿ ದೈವದ ಭಂಡಾರದ  ಮನೆಯಿದೆ. ಪ್ರತಿನಿತ್ಯ ಮಸೀದಿಯಯಲ್ಲಿ ಕೊಡುತ್ತಿರುವ  ಆಜಾನ್  ಕರೆ  ಪಕ್ಕದ  ಜುಮಾದಿ ದೈವದ   ಬಂಡಾರದ  ಮನೆಯ ಪೂಜಾರಿಗೂ  ಕೇಳುತಿತ್ತು. ಆದರೆ, ರಂಜಾನ್ ತಿಂಗಳ ಒಂದು ದಿನ ಮಸೀದಿಯ ಧರ್ಮಗುರು ಕೂಗುತ್ತಿದ್ದ ಆಜಾನ್ ಕರೆ ಎಂದಿನಂತಿರಲಿಲ್ಲ. ಅವರ ಧ್ವನಿ ತುಂಬಾನೇ ಕ್ಷೀಣವಾಗಿತ್ತು. ಇದರಿಂದ  ವಿಚಲಿತರಾದ ಜುಮಾದಿ ದೈವದ ಭಂಡಾರ ಮನೆಯ ಪುಜಾರಿ ಮಸೀದಿಗೆ ಹೋಗಿ ಧರ್ಮಗುರುವನ್ನು ವಿಚಾರಿಸಿದಾಗ, ಧರ್ಮಗುರು ರಂಜಾನ್ ಉಪವಾಸದಲ್ಲಿದ್ದು  ವೃತ ತೊರೆಯಲು ಅವರ ಬಳಿ  ಆಹಾರವಿಲ್ಲ ಎಂಬ ಸಂಗತಿ ತಿಳಿದುಬರುತ್ತದೆ. ಕೂಡಲೇ ಭಂಡಾರದ ಮನೆಗೆ ಬಂದ ಪೂಜಾರಿ ಜುಮಾದಿ ದೈವದ ಚಿನ್ನದ ನಾಲಗೆಯನ್ನು ಕೊಯ್ದು ಧರ್ಮಗುರುವಿಗೆ ನೀಡಿ ಅದನ್ನು ಸ್ಥಳೀಯ ದೋಂದಜ ಗುತ್ತಿನ ಮನೆಗೆ ಮಾರಿ ಉಪವಾಸ ತೊರೆಯಲು ಬೇಕಾದ ಆಹಾರ ಪದಾರ್ಥಗಳನ್ನು ತಂದುಕೊಳ್ಳುವಂತೆ ಸೂಚಿಸಿದರು. ನಂತರ ಊರ ಜನರಿಗೆ ಜುಮಾದಿ ದೈವದ ಚಿನ್ನದ  ನಾಲಗೆ ಕಾಣೆಯಾಗಿರುವ  ಸುದ್ದಿ ತಿಳಿಯಿತು.ಈ ಕುರಿತಾಗಿ ಭಂಡಾರದ ಮನೆಯ ಪೂಜಾರಿಯ  ಬಳಿ ಗ್ರಾಮಸ್ಥರು ವಿಚಾರಿಸಿದಾಗಲೂ ಪೂಜಾರಿಗೆ ಏನೂ  ತಿಳಿದಿರಲಿಲ್ಲ. ಕೆಲ ಹೊತ್ತಿನಲ್ಲೇ ಜುಮಾದಿ ದೈವ ಪೂಜಾರಿಗೆ ದರ್ಶನದಲ್ಲಿ  ಬಂದು ತಾನೇ ಮಸೀದಿಯ ಧರ್ಮಗುರುಗಳಿಗೆ ಚಿನ್ನದ ನಾಲಗೆಯನ್ನ  ನೀಡಿದ್ದೇನೆಂದು ತಿಳಿಸಿತು. ಅಂದು ಧರ್ಮಗುರುಗಳಿಗೆ ಚಿನ್ನದ ನಾಲಗೆಯನ್ನು ಕೊಯ್ದು ಕೊಟ್ಟಿದ್ದು ಪೂಜಾರಿಯಲ್ಲ  ಬದಲಾಗಿ ಪುಜಾರಿಯ ರೂಪವನ್ನು ತಾಳಿದ ಜುಮಾದಿ ದೈವ ಎಂಬುವುದು  ಇಲ್ಲಿನ ಎರಡೂ  ಸಮುದಾಯದ  ಗ್ರಾಮಸ್ಥರ ನಂಬಿಕೆ. ಇಂಥಹಾ ಹತ್ತಾರು ಧರ್ಮಮೀರಿದ ಮನುಷ್ಯ ಪ್ರೀತಿಯ ಕಥೆಗಳು ಇಲ್ಲಿ ಸಾಮಾನ್ಯ.

ಧಾರ್ಮಿಕ ಕೂಡುಬಾಳುವಿಕೆಗೆ ಸಾಕ್ಷಿಯಾಗಿರುವ ಮತ್ತೊಂದು ಕ್ಷೇತ್ರ ದಕ್ಷಿಣ  ಕನ್ನಡ ಜಿಲ್ಲೆಯ ಪಕ್ಕದ ಜಿಲ್ಲೆ ಕಾಸರಗೋಡಿನ ಉದ್ಯಾವರ ಅಸಯ್ಯದ್  ಶಹೀದ್  ದರ್ಗಾ ಹಾಗೂ ಮಾಡಾ ಅರಸು  ದೈವಗಳ ದೈವಸ್ಥಾನ. ಇತ್ತೀಚೆಗೆ ಅತ್ಯಂತ ಕೋಮುಸೂಕ್ಷ್ಮ ಪ್ರದೇಶವಾಗಿ  ಮಾರ್ಪಡುತ್ತಿರುವ ಈ ಗ್ರಾಮದಲ್ಲಿ ಹಿಂದೂ-ಮುಸ್ಲಿಮ್ ಭಾಂಧವ್ಯವನ್ನು  ಕಟ್ಟಿಬೆಳೆಸಿದ  ಕ್ಷೇತ್ರವಿದು. ಇಲ್ಲೊಂದು ಅಪರೂಪದ ಹಾಗೂ ವಿಶಿಷ್ಟ ಸಂಪ್ರದಾಯವಿದೆ. ವರ್ಷಂಪ್ರತಿ ಎಪ್ರಿಲ್ ತಿಂಗಳಲ್ಲಿ ಬಿಸು ಹಬ್ಬದ ಬಳಿಕ ಅಂದರೆ, ಎಪ್ರಿಲ್ 14 ಕ್ಕೆ ಮಾಡ ಅರಸು ದೈವಗಳ ಜಾತ್ರಾಮಹೋತ್ಸವ ನಡೆಯುತ್ತದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಮರು ಅಂಗಡಿ ಅಥವಾ ಸಂತೆ ಇಡಬಾರದು ಎಂದು ಸಂಘಪರಿವಾರಿಗಳು ಫರ್ಮಾನು ಹೊರಡಿಸಿದ್ದಾರೋ ಅದಕ್ಕೆ ವಿರುದ್ಧ ಎಂಬುವಂತೆ  ಮಾಡಾ ಅರಸು ದೈವಗಳ  ಜಾತ್ರೆ ಆರಂಭಕ್ಕೂ ಮುನ್ನ  ಗ್ರಾಮದ  ಮುಸ್ಲಿಮರು ಅರಸು ದೈವಗಳ  ದೈವಸ್ಥಾನದ  ಆವರಣಕ್ಕೆ ಬಂದು ಸಂತೆ ಇಡುವ ಪದ್ದತಿ ಇಂದಿಗೂ ಇದೆ. ಊರ ಮುಸ್ಲಿಮ್  ಕುಟುಂಬ ವೀಳ್ಯದೆಳೆ ತೆಂಗಿನಕಾಯಿ  ಜೊತೆಗೆ ಬಂದು ಅರಸು ದೈವಗಳ  ಆರ್ಶೀರ್ವಾದ ಪಡೆದುಕೊಂಡು ಮೊದಲು ದೈವಸ್ಥಾನದ ಆವರಣದಲ್ಲಿ ಸಂತೆ  ನಡೆಸುತ್ತಾರೆ. ನಂತರ ಇತರರಿಗೂ ಸಂತೆ ನಡೆಸಲು  ಅವಕಾಶ ನೀಡಲಾಗುತ್ತದೆ.

ನಂತರ  ಗ್ರಾಮದ  ಮುಸ್ಲಿಮರನ್ನು ಅರಸು ದೈವಗಳ  ಜಾತ್ರೆಗೆ  ಆಹ್ವಾನಿಸಲು ದೈವಸ್ಥಾನದ  ಪ್ರಮುಖರು ಉದ್ಯಾವರ ಮಸೀದಿಗೆ ತೆರಳುತ್ತಾರೆ. ದರ್ಗಾದ ಮುಂದೆ  ಮಸೀದಿಯ ಜಮಾತ್ ಮುಖಂಡರಿಗೆ  ಜಾತ್ರೆಗೆ  ಆಹ್ವಾನ  ನೀಡುತ್ತಾರೆ. ಈ ಸಂಪ್ರದಾಯ ಹುಟ್ಟಲು ಒಂದು ಕಾರಣವಿದೆ. ಶತಮಾನಗಳ  ಹಿಂದೆ  ಈ ಗ್ರಾಮಕ್ಕೆ  ಬಂದ ಅರಸು ಸಹೋದರರಿಗೆ  ಉದ್ಯಾವರ ದರ್ಗಾದ  ಪುಣ್ಯ ಪುರುಷ  ಇದೇ  ಊರಲ್ಲಿ ನೆಲೆನಿಲ್ಲುವಂತೆ ವಿನಂತಿ ಮಾಡ್ತಾರೆ. ಅದರಂತೆ ಅರಸು  ಸಹೋದರರು ಈ ಗ್ರಾಮದಲ್ಲಿ ನೆಲೆನಿಲ್ತಾರೆ. ಗ್ರಾಮದ ಮುಸ್ಲಿಮ್ ಪುಣ್ಯ ಪುರುಷ  ಹಾಗೂ  ಅರಸು  ಸಹೋದರರ  ನಡುವೆ ಉತ್ತಮ ಭಾಂದವ್ಯವಿತ್ತು. ಈ ಪ್ರಕಾರ ಮುಸ್ಲಿಮ್ ಸಂತ  ಹಾಗೂ  ಅರಸು ಸಹೋದರರ ನಡುವೆ ಒಂದು ಒಪ್ಪಂದವಾಗುತ್ತದೆ. ಈ  ಪ್ರಕಾರ ಪ್ರತಿ ವರ್ಷ ನಡೆಯೋ ಉತ್ಸವಕ್ಕೆ  ಗ್ರಾಮದ ಮುಸ್ಲಿಮರು ಆಹ್ವಾನದ ಮೇರೆಗೆ ಬಂದು ಪಾಲ್ಗೊಳ್ಳಬೇಕು ಹಾಗೂ  ಊರೂಸ್ ಕಾರ್ಯಕ್ರಮಕ್ಕೆ ನಾಡಿನ ಹಿಂದೂಗಳು  ಭಾಗವಹಿಸಬೇಕೆಂದು. ಇದರಂತೆ  ಈ  ಸಂಪ್ರದಾಯ ಇಂದಿಗೂ ಆಚರಿಸಲ್ಪಡುತ್ತಾ  ಬಂದಿದೆ ಎನ್ನುತ್ತಾರೆ ಗ್ರಾಮದ ಹಿರಿಯರು.

ವರ್ಷಂಪ್ರತಿ ಮಾಡ ಅರಸು ದೈವಗಳ 5 ದಿನಗಳ  ಜಾತ್ರೆ ಹಾಗೂ  ಎರಡು  ದಿನಗಳ  ಬಂಡಿ ಉತ್ಸವ ಕಾರ್ಯಕ್ರಮ ನಡೆಯುತ್ತದೆ. ಜಾತ್ರೆಗೆ  ಗ್ರಾಮದ 20160211_165540 ಮುಸ್ಲಿಮರು ಬರುತ್ತಾರೆ. ದೈವಸ್ಥಾನದ  ಅಂಗಳದಲ್ಲಿರೋ ಸಿಂಹಾಸನ  ಕಟ್ಟೆಯಲ್ಲಿ  ಬ್ರಾಹ್ಮಣರಿಗೆ ಹಾಗೂ ಮುಸ್ಲಿಮರಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ. ಜಾತ್ರೆಯಲ್ಲಿ ಪಾಲ್ಗೊಳ್ಳುವ  ಮುಸ್ಲಿಮರನ್ನು ಬಹಳ ಗೌರವದಿಂದ ನೋಡಿಕೊಳ್ಳಲಾಗುತ್ತಿದೆ. ಇನ್ನು 5 ವರ್ಷಕ್ಕೊಮ್ಮೆ ನಡೆಯೋ ದರ್ಗಾದ ಉರೂಸ್ ಗೂ ಇಲ್ಲಿಯ  ಗ್ರಾಮದ ಹಿಂದೂಗಳು ಹೊರೆಕಾಣಿಕೆಯನ್ನ ನೀಡ್ತಾರೆ. ಉರೂಸ್ ಗೆ  ಆಗಮಿಸಿದ ಎಲ್ಲಾ ಹಿಂದೂಗಳಿಗೆ ಊಟೋಪಚಾರ ಗೌರವಗಳನ್ನ ನೀಡಲಾಗುತ್ತೆ. ಮಾಡಾ ಅರಸು ದೈವಗಳ ದೈವಸ್ಥಾನ ನಿರ್ಮಾಣಕ್ಕೆ ಇಲ್ಲಿಯ ಮುಸ್ಲಿಮ್ ಜಮಾತ್ ವತಿಯಿಂದ 15,000  ಧನ ಸಹಾಯ  ನೀಡಲಾಗಿದೆ. ಈ ರೀತಿಯ ಧಾರ್ಮಿಕ ಸೌಹಾರ್ದತೆಯ ಕುರಿತಾಗಿ ಗ್ರಾಮದ ಎರಡೂ ಸಮುದಾಯಗಳ ಹಿರಿಯರಿಗೆ ಉತ್ತಮ ಅಭಿಪ್ರಾಯವಿದೆ. “ಈ ಗ್ರಾಮದಲ್ಲಿರೋ ಅರಸು ದೈವ ಹಾಗೂ ದರ್ಗಾದ ಶೇಖರು ಊರಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ಇಂಥಹಾ ಸೌಹಾರ್ದತೆ ಉಳಿಯಬೇಕು ಬೆಳಿಯಬೇಕು. ಇದುವರೆಗೂ ನಾವೆಲ್ಲಾ ಈ ಸೌಹಾರ್ದ ಪರಂಪರೆಯನ್ನು ಉಳಿಸಿಕೊಂಡು  ಬಂದಿದ್ದೇವೆ, ಇದನ್ನು ಮುಂದುವರಿಸುವ  ಜಾವಾಬ್ದಾರಿ ಇಂದಿನ ಯುವ ಸಮೂಹದ್ದು”  ಎನ್ನುತ್ತಾರೆ ಅರಸು ದೈವದ ಮುಂಡತ್ತಾಯ  ದೇವರ  ಪಾತ್ರದಾರಿ ಮಂಜು ಬೆಲ್ಚಡ. “ನಾವು ಈ ರೀತಿಯ ಮತ ಸೌಹಾರ್ದತೆಯನ್ನು ಬಯಸ್ತೇವೆ. ಇದು ಹೀಗೆ ಮುಂದುವರಿಯಲಿ ಎಂದು ದೇವರಲ್ಲಿ  ಪ್ರಾರ್ಥನೆ ಮಾಡ್ತೇನೆ. ನಮ್ಮ ಮಕ್ಕಳನ್ನು ಅರಸು ದೈವಗಳ ಜಾತ್ರಾಮಹೋತ್ಸವಕ್ಕೆ ಕಲಿಸಿಕೊಡುತ್ತೇನೆ” ಎನ್ನುತ್ತಾರೆ ಗ್ರಾಮಸ್ಥ ಯು.ಕೆ ಮುಹಮ್ಮದ್.  ಉದ್ಯಾವರ-ಮಾಡ ಅರಸು ದೈವಗಳ ಸ್ಥಾನ ಹಾಗೂ ಅಸೈಯದ್ ಶೇಖ್ ದರ್ಗಾಗಳು ಈ ಗ್ರಾಮದಲ್ಲಿ ಮತಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿವೆ.

ದಕ್ಷಿಣ ಕನ್ನಡ  ಜಿಲ್ಲೆಯ ಅಜಿಲಮೊಗೆರು  ಗ್ರಾಮದಲ್ಲಿರು  ಮುಸ್ಲಿಮ್ ಸಂತನ ಉರೂಸ್ ಕಾರ್ಯಕ್ರಮಕ್ಕೆ ಸ್ಥಳೀಯ  ಹಿಂದೂಗಳು ತುಪ್ಪ ಕೊಡುವುದು  ಹಾಗೂ ಆ ಗ್ರಾಮದ ದೇವಸ್ಥಾನದ  ಜಾತ್ರಾಮಹೋತ್ಸವಕ್ಕೆ ಮುಸ್ಲಿಮರು ಎಣ್ಣೆ ಕೊಡುವ  ಸಂಪ್ರದಾಯ ಆಚರಣೆಯಲ್ಲಿತ್ತು. ಉರೂಸ್ ಕಾರ್ಯಕ್ರಮಕ್ಕೆ ಊರ  ಹಿಂದೂಗಳೂ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಮುಸ್ಲಿಮರೂ ಹೋಗಿಬರುತ್ತಾ ಪರಸ್ಪರ ಸಹಕಾರ ನೀಡುತ್ತಾ ಸಾರಮಸ್ಯ ಸಾರುವ ಪದ್ದತಿ  ಇಂದಿಗೂ ಗ್ರಾಮದಲ್ಲಿ  ಕಾಣಸಿಗುತ್ತದೆ. ಇವತ್ತು ಮುಸ್ಲಿಮ್ ಜಿಲ್ಲಾಧಿಕಾರಿಯ  ಹೆಸರಿನಲ್ಲಿ ವಿವಾದಕ್ಕೆ ಕಾರಣವಾಗಿರುವ ಪುತ್ತೂರು ಮಹಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಅಧಿಕ  ಸಂಖ್ಯೆಯ  ಮುಸ್ಲಿಮರು ಭಾಗವಹಿಸುತ್ತಿದ್ದರು. ಜಾತ್ರೆಗದ್ದೆಯಲ್ಲಿ ವ್ಯಾಪಾರ ಮಾಡುವವರೂ ಬಹುತೇಕ  ಮುಸ್ಲಿಮರೇ ಆಗಿದ್ದರು. ಜಾತ್ರೆಗೆ ಅಗತ್ಯವಿರುವ ಬಾಳೆಕಾಯಿ, ತೆಂಗಿನಕಾಯಿಯನ್ನು ಮುಸ್ಲಿಮ್ ವರ್ತಕರು ನೀಡುತ್ತಿದ್ದರು. ಇನ್ನು ಜಾತ್ರಾಮಹೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ ಮಾಡುತ್ತಿದ್ದವನು ಬದಿಯಡ್ಕ ಮೂಲದ ಮುಸ್ಲಿಮ್ ಸುಡುಮದ್ದು  ವ್ಯಾಪಾರಿ. ಆದರೆ ಬಾಬರೀ  ಮಸೀದಿ  ಧ್ವಂಸ ಘಟನೆಯ ನಂತರ ಜಾತ್ರೆಗೆ ಬರುವ ಮುಸ್ಲಿಮರ ಸಂಖ್ಯೆ ಕಡಿಮೆಯಾಯಿತು. ಕೋಮುವಾದಿ  ಸಂಘಟನೆಗಳು ಅನ್ಯಧರ್ಮಿಯರು ಜಾತ್ರೆಗೆ ಬರದಂತೆ ಹಾಗೂ  ಜಾತ್ರೆಯಲ್ಲಿ ಮುಸ್ಲಿಮರು  ವ್ಯಾಪಾರ ನಡೆಸದಂತೆ ಫರ್ಮಾನು ಹೊರಡಿಸಿದರು. ಇವೆಲ್ಲದರ ನಡುವೆಯೂ ಇಂದಿಗೂ ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ದೇವಸ್ಥಾನಗಳ ವಾರ್ಷಿಕ ಮೇಳಗಳಲ್ಲಿ, ಭೂತಕೋಲ ಆಚರಣೆಗಳಲ್ಲಿ, ಕಾರ್ಕಳದ ಆತ್ತೂರ್ ಚರ್ಚ್ ಉತ್ಸವಗಳಲ್ಲಿ, ಸೈದಾನ್ ಬೀಬಿ ದರ್ಗಾ, ಉಳ್ಳಾಲ ಸೈಯದ್ ಮದನಿ ದರ್ಗಾಗಳ ಉರೂಸ್ ಗಳಲ್ಲಿ ಹಿಂದೂ, ಮುಸ್ಲಿಮ್, ಕ್ರೈಸ್ತರು ಕೂಡಿ ಆಚರಣೆ ಮಾಡೋ ಇಂಥಹಾ ಸಾಕಷ್ಟು ಉದಾಹರಣೆಗಳು  ಜಿಲ್ಲೆಯಲ್ಲಿ ಕಾಣಸಿಗುತ್ತದೆ. ಆದ್ರೆ  ಇಂದು ಎರಡೂ ಧರ್ಮಗಳ ಕೋಮುವಾದಿಗಳು ಮೂಲಭೂತವಾದಿಗಳು ಇಂಥಹಾ ಕೂಡುಬಾಳುವಿಕೆಯ ಸಂಸ್ಕೃತಿಗೆ ಕೊಳ್ಳಿ ಇಡುತ್ತಿದ್ದಾರೆ. ಈ ಮೂಲಕ  ಕರಾವಳಿಯಲ್ಲಿ  ಹಿಂದೂ ಮುಸ್ಲಿಮ್  ಸಮುದಾಯಗಳ ನಡುವೆ ಸೃಷ್ಟಿಯಾಗಿರುವ ಕಂದಕವನ್ನು ಇನ್ನಷ್ಟು ವಿಸ್ತರಿಸೋ  ದುರುದ್ದೇಶ ಇವರದ್ದು. ಜಿಲ್ಲೆಯ  ಜಿಲ್ಲಾಧಿಕಾರಿ ಮುಸ್ಲಿಮ್ ಸಮುದಾಯದವರೆಂಬ ಕಾರಣಕ್ಕಾಗಿ  ಜಾತ್ರೆಯ  ಆಮಂತ್ರಣ  ಪತ್ರದಿಂದ ಹೆಸರು ಕಿತ್ತುಹಾಕುವಂತೆ ಒತ್ತಾಯಿಸುವುದು, ಜಾತ್ರೆಗದ್ದೆಯಲ್ಲಿ ಮುಸ್ಲಿಮರು ಅಂಗಡಿ  ತೆರೆಯದಂತೆ ಫರ್ಮಾನು ಹೊರಡಿಸುತ್ತಿರುವುದು ಇದರ ಮುಂದುವರಿದ ಭಾಗವಷ್ಟೇ. ಕರಾವಳಿಯ ಸಾರಮಸ್ಯ ಬಯಸೋ ಜನಸಮುದಾಯ ಎಚ್ಚೆತ್ತುಕೊಂಡು ಮನಸ್ಸುಗಳನ್ನು ವಿಭಜಿಸೋ  ಸನಾತನವಾದಿಗಳ ಇಂಥಹಾ ಪ್ರಯತ್ನಗಳನ್ನು ಸೋಲಿಸಬೇಕಿದೆ.

ಮುಸ್ಲಿಮ್ ಸಮುದಾಯ ಹಾಗೂ ಉಮ್ಮರ್ ಖಾಲಿದ್ ಮತ್ತು ಶೆಹ್ಲಾ ರಶೀದ್ ರಂಥ ಪ್ರಗತಿಪರ ನಾಯಕತ್ವ


-ಇರ್ಷಾದ್ ಉಪ್ಪಿನಂಗಡಿ


“ನನ್ನ ಹೆಸರು ಉಮ್ಮರ್ ಖಾಲಿದ್. ಆದರೆ ನಾನು ಭಯೋತ್ಪಾದಕನಲ್ಲ. ಒಂದು ವಿಷಯವನ್ನು ನಾನಿಲ್ಲಿ ಹೇಳಲೇ ಬೇಕು. ನಾನು ಕಳೆದ ಆರು ವರ್ಷಗಳಿಂದ ಈ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ರಾಜಕಾರಣವನ್ನು ಮಾಡುತ್ತಾ ಬಂದಿದ್ದೇನೆ. ನಾನು ಇಲ್ಲಿಯವರೆಗೂ ನನ್ನನ್ನು ನಾನು ಮುಸ್ಲಿಮನೆಂದು ಅಂದುಕೊಂಡಿಲ್ಲ. ಈ ಸಮಾಜದಲ್ಲಿ ಮುಸ್ಲಿಮರು ಮಾತ್ರ ದಮನಕ್ಕೊಳಗಾಗಿಲ್ಲ. ದಲಿತರು, ಆದಿವಾಸಿಗಳು ಈ ಸಮಾಜದ ಶೋಷಿತರಾಗಿದ್ದಾರೆ. ಇವರೆಲ್ಲರ ಪರವಾಗಿ ಹೋರಾಟ ಮಾಡಿದ್ದೇನೆ. ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡಿದಷ್ಟೇ ಶೋಷಿತ ಮುಸ್ಲಿಮರ ಪರವಾಗಿ ಮಾತನಾಡಿದ್ದೇನೆ ”. ಸದ್ಯ ದೇಶದ್ರೋಹದ ಆರೋಪ ಹೊತ್ತು ಜೈಲು ಸೇರಿರುವ ಜೆ.ಎನ್.ಯು ವಿದ್ಯಾರ್ಥಿ ಮುಖಂಡ ಉಮ್ಮರ್ ಖಾಲಿದ್ ತನ್ನ ಶರಣಾಗತಿಗಿಂತ ಮೊದಲು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಡಿದ ಮಾತುಗಳಿವು. ಸಂಘಪರಿವಾರದ ಕೋಮುವಾದ ಹಾಗೂ ಅದಕ್ಕೆ ಪ್ರತಿಯಾಗಿ ಮುಸ್ಲಿಮ್ ಸಮಾಜದಲ್ಲಿ ಧಾರ್ಮಿಕ ಮೂಲಭೂತವಾದ ಆಳವಾಗಿ ಇಂದು ಬೇರೂರುತ್ತಿವೆ. ಒಂದು ಕಡೆಯಲ್ಲಿ ಬಹುಸಂಖ್ಯಾತ ಕೋಮುವಾದ ಮುಸ್ಲಿಮರಲ್ಲಿ ಅಭದ್ರತೆಯ ಭಾವವನ್ನು ಉಂಟುಮಾಡುತ್ತಿದ್ದರೆ ಇನ್ನೊಂದೆಡೆ ಇದಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮುಸ್ಲಿಮ್ ಕೋಮುವಾದ ಸಮುದಾಯವನ್ನು ಮತ್ತಷ್ಟು ಅಭದ್ರತೆಗೆ ತಳ್ಳುತ್ತಿದೆ. ಪ್ರಸಕ್ತ ಈ ಸನ್ನಿವೇಶದಲ್ಲಿ ಮುಸ್ಲಿಮ್ ಸಮಾಜವನ್ನು ಪ್ರತಿನಿಧಿಸುವ ಉದಾರವಾದಿ ಮುಸ್ಲಿಮ್ ನಾಯಕರ ಅಗತ್ಯತೆಯ ಚರ್ಚೆಯನ್ನ ಹುಟ್ಟುಹಾಕಿದೆ. ಬಹುಷಃ ಜೆ.ಎನ್.ಯು ಕ್ರಾಂತಿ ಕನ್ನಯ್ಯನಂತಹಾ ದಮನಿತ ಸಮುದಾಯಗಳ ಪರ ಧ್ವನಿ ಎತ್ತುವ ಮನೋಭಾವದ ಯುವನಾಯಕನನ್ನು ದೇಶಕ್ಕೆ ಪರಿಚಯಿಸುವುದರ ಜೊತೆಗೆ ಉಮ್ಮರ್ ಖಾಲಿದ್ ಹಾಗೂ ಶೆಹ್ಲಾ ರಶೀದ್ ನಂತಹಾ ಪ್ರಗತಿಪರ ಯುವ ಮುಸ್ಲಿಮ್ ವಿದ್ಯಾರ್ಥಿ ನಾಯಕತ್ವವನ್ನೂ ಪರಿಚಯಿಸಿದೆ.

ಉಮ್ಮರ್ ಖಾಲಿದ್ ಜೆ.ಎನ್.ಯು ಡೆಮೋಕ್ರಟಿಕ್ ಸ್ಟುಡೆಂಟ್ ಯೂನಿಯನ್ (DSU) ಎಂಬ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಮುಖಂಡ.Ummar_Khalid ಉಮ್ಮರ್ ಖಾಲಿದ್ ಕಳೆದ 6 ವರ್ಷಗಳಿಂದ ಜೆ.ಎನ್.ಯು ಕ್ಯಾಂಪಸ್ ನಲ್ಲಿ ಎಡ ಪ್ರಗತಿಪರ ಚಳುವಳಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡವರು. ಸಂಪ್ರದಾಯ ಕುಟುಂಬದಲ್ಲಿ ಹುಟ್ಟಿ ಬೆಳೆದ ಉಮ್ಮರ್ ಖಾಲಿದ್ ತಂದೆ ಜಮಾತೇ- ಇಸ್ಲಾಮೀ-ಹಿಂದ್ ಮುಸ್ಲಿಮ್ ಮೂಲಭೂತವಾದಿ ಸಂಘಟನೆಯ ಶೂರಾ ಕಮಿಟಿ ಸದಸ್ಯ. ಆದರೆ ತಂದೆಯ ಇಸ್ಲಾಮಿ ಮೂಲಭೂತವಾದಿ ಚಿಂತನೆಗೆ ವಿರುದ್ಧವಾಗಿ ಉದಾರವಾದಿ ಹಾಗೂ ಪ್ರಗತಿಪರ ಚಿಂತನೆಯನ್ನು ಮೈಗೂಡಿಸಿಕೊಂಡು ಬೆಳೆದವರು ಉಮ್ಮರ್ ಖಾಲಿದ್. “ಉಮ್ಮರ್ ಎಡಪಂಥೀಯ ಹಾಗೂ ಪ್ರಗತಿಪರ ವಿಚಾರಧಾರೆಗಳಿಂದ ಪ್ರಭಾವಿತವಾಗಿದ್ದ. ಮುಸ್ಲಿಮ್ ಸಮಾಜದಲ್ಲಿ ಬೇರೂರಿರುವ ಮೂಲಭೂತವಾದ, ಧಾರ್ಮಿಕ ಕಟ್ಟರ್ ವಾದ ಹಾಗೂ ಮಹಿಳಾ ಶೋಷಣೆಯನ್ನು ಖಂಡಿಸುತ್ತಿದ್ದ. ಇವುಗಳನ್ನೆಲ್ಲಾ ಪ್ರಶ್ನಿಸುವ ಮನೋಭಾವ ಆತನದ್ದಾಗಿತ್ತು. ಈ ಕಾರಣಕ್ಕಾಗಿ ನಮ್ಮ ನಡುವೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು” ಎನ್ನುತ್ತಾರೆ ಉಮ್ಮರ್ ಖಾಲಿದ್ ತಂದೆ ಸೈಯದ್ ಖಾಲಿದ್ ರಸೂಲ್ ಇಲ್ಯಾಸ್. ಇಲ್ಲಿ ನಾವು ಗಮನಿಸಬೇಕಾದ ಅಂಶವೇನೆಂದರೆ, ಉಮ್ಮರ್ ಖಾಲಿದ್ ಇಸ್ಲಾಮ್ ಧಾರ್ಮಿಕ ಕಟ್ಟರ್ ವಾದದ ವಿರೋಧಿಸುತ್ತಾ ಶೋಷಿತ ಮುಸ್ಲಿಮರ ಪರವಾಗಿ ಧ್ವನಿ ಎತ್ತುತ್ತಿದ್ದರು. ಜೊತೆಗೆ ಜಾತಿವಾದ, ಮಹಿಳಾ ಶೋಷಣೆ, ಆದಿವಾಸಿ ಹಾಗೂ ದಲಿತರ ಮೇಲಾಗುತ್ತಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ದದ ಹೋರಾಟದಲ್ಲೂ ಉಮ್ಮರ್ ಮುಂಚೂಣಿಯಲ್ಲಿದ್ದರು.

ಇತ್ತೀಚೆಗೆ ಪ್ರಭಾವಿ ಮುಸ್ಲಿಮ್ ಧಾರ್ಮಿಕ ಮುಖಂಡರೊಬ್ಬರು ತಮ್ಮ ಭಾಷಣದಲ್ಲಿ ಮಹಿಳೆಯರ ಶಕ್ತಿ ಸಾಮರ್ಥ್ಯದ ಕುರಿತಾಗಿ ಕೇವಲವಾಗಿ ಮಾತನಾಡಿದ್ದರು. ಮಹಿಳೆ ಸ್ವತಂತ್ರವಾಗಿ ಹೋರಾಡಲು ಅಶಕ್ತಳು ಎಂದಿದ್ದರು. ಮುಸ್ಲಿಮ್ ಸಮಾಜದಲ್ಲಿ ಇಂದಿಗೂ ಮಹಿಳೆಯರನ್ನು ಈ ದೃಷ್ಟಿಕೋನದಲ್ಲಿ ನೋಡುವ ಧಾರ್ಮಿಕ ಪಂಡಿತರೇ ಅಧಿಕ. ಪರಿಣಾಮ ಸಮಾಜದ ಮುಖ್ಯವಾಹಿನಿಯಲ್ಲಿ ಮುಸ್ಲಿಮ್ ಮಹಿಳೆಯರ ಪಾಲ್ಗೊಳ್ಳುವಿಕೆ ತೀರಾ ನಗಣ್ಯ. ಈ ಸಂಧರ್ಭದಲ್ಲಿ ನಮ್ಮ ಕಣ್ಣ ಮುಂದೆ ಬರುವ ದಿಟ್ಟ ಯುವ ನಾಯಕಿ ಶ್ರೀನಗರ ಮೂಲದ ಶೆಹ್ಲಾ ರಶೀದ್. ಜೆ.ಎನ್.ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ನಯ್ಯ ದೇಶದ್ರೋಹದ ಆರೋಪದಲ್ಲಿ ಜೈಲು ಸೇರಿದಾಗ ಅದನ್ನು ವಿರೋಧಿಸಿ ನಡೆದ ಬೃಹತ್ ಹೋರಾಟಕ್ಕೆ ನಾಯಕತ್ವವನ್ನು ನೀಡಿದವರು ಶೆಹ್ಲಾ ರಶೀದ್. ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆಯಾಗಿರುವ ಶೆಹ್ಲಾ ರಶೀದ್ ಎಡ-ಪ್ರಗತಿಪರ ಚಳುವಳಿಯಲ್ಲಿ ಮುಂಚೂಣಿಯಲ್ಲಿರುವ ವಿದ್ಯಾರ್ಥಿ ಮುಂದಾಳು. ಮಧ್ಯಮ ವರ್ಗದ ಕಾಶ್ಮೀರಿ ಕುಟುಂಬದಲ್ಲಿ ಹುಟ್ಟಿ ಬೆಳೆದು ಜೆ.ಎನ್.ಯುನ AISA ಎಡ ವಿದ್ಯಾರ್ಥಿ ಚಳುವಳಿಯಲ್ಲಿ ತನ್ನನ್ನು ಗುರುತಿಸಿಕೊಂಡು ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ನಾಯಕಿ. ಜೆ.ಎನ್.ಯು ಹೋರಾಟದ ಸಂದರ್ಭದಲ್ಲಿ ಕ್ಯಾಂಪಸ್ ನ ಮೂರು ಸಾವಿರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಈಕೆ ಮಾಡಿದ ಭಾಷಣ ಹಾಗೂ ಆ ಹೋರಾಟಕ್ಕೆ ನೀಡಿದ ನಾಯಕತ್ವ ನಿಜಕ್ಕೂ ಶೆಹ್ಲಾ ರಶೀದ್ ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿ. ಪ್ರಗತಿಪರ ಚಿಂತನೆಗಳೊಂದಿಗೆ ತನ್ನ ಸಮುದಾಯದೊಳಗಿನ ಮೂಲಭೂತವಾದ, ಮುಸ್ಲಿಮ್ ಮಹಿಳೆಯರ ತವಕ – ತಲ್ಲಣಗಳನ್ನು ಪ್ರಶ್ನಿಸುವುದರ ಜೊತೆಗೆ ತನ್ನ ಸಮುದಾಯದ ಶೋಷಿತ ಜನರ ಪರವಾಗಿ ದನಿಯಾಗುತ್ತಿರುವ ಈಕೆಯ ನಾಯಕತ್ವ ಮುಸ್ಲಿಮ್ ಮಹಿಳೆಯರಿಗೆ ಮಾದರಿ.

ಬಹುಷಃ ಉಮ್ಮರ್ ಖಾಲಿದ್ ಹಾಗೂ ಶೆಹ್ಲಾ ರಶೀದ್ ರಂತಹಾ ಯುವ ನಾಯಕರ ಕುರಿತಾಗಿ ಮುಸ್ಲಿಮ್ ಯುವ ಸಮೂಹದಲ್ಲಿ ಹೊಸShehla_Rashid ಚರ್ಚೆ ಹುಟ್ಟಬೇಕಿತ್ತು. ವಿಪರ್ಯಾಸವೆಂದರೆ ಮುಸ್ಲಿಮ್ ಯುವ ಸಮೂಹಕ್ಕೆ ಇಂಥಹ ಪ್ರಗತಿಪರ ಧೋರಣೆಯ ಮುಖಂಡರು ಹೀರೋ ಆಗಿ ಗುರುತಿಸಲ್ಪಡುವುದಿಲ್ಲ. ಬದಲಾಗಿ ಧಾರ್ಮಿಕ ಮೂಲಭೂತವಾದಿ, ಕೋಮುವಾದಿ ರಾಜಕಾರಣವನ್ನು ಪ್ರತಿನಿಧಿಸುವ ಉವೈಸಿ ಸಹೋದರರಂತಹ ನಾಯಕರು ಮುಸ್ಲಿಮ್ ಸಮಾಜದ ಬಹುತೇಕ ಯುವ ಮನಸ್ಸುಗಳ ಪಾಲಿಗೆ ಹೀರೋ ಆಗಿ ನೆಲೆ ನಿಲ್ಲುತ್ತಿದ್ದಾರೆ. ಉಮ್ಮರ್ ಖಾಲಿದ್ ಹಾಗೂ ಶೈಲಾ ರಶೀದ್ ಶೋಷಿತ ಮುಸ್ಲಿಮರ ಪರವಾಗಿ ಧ್ವನಿ ಎತ್ತಿದರೂ ಮುಸ್ಲಿಮ್ ಸಮಾಜದ ಮೂಲಭೂತವಾದಿಗಳು ಇವರ ನಾಯಕತ್ವವನ್ನು ಒಪ್ಪಲು ತಯಾರಿಲ್ಲ. ಕಾರಣ, ಇವರ ಪ್ರಗತಿಪರ ಧೋರಣೆ. ಸಂಘಪರಿವಾರದ ಕೋಮುವಾದದ ಜೊತೆಗೆ ಮುಸ್ಲಿಮ್ ಸಮಾಜದ ಮೂಲಭೂತವಾದವನ್ನು ಪ್ರಶ್ನಿಸುತ್ತಿರುವ ಇವರುಗಳ ನಡೆಯೇ ಈ ಬಿನ್ನಾಭಿಪ್ರಾಯಕ್ಕೆ ಕಾರಣ. “ಉಮ್ಮರ್ ಖಾಲಿದ್ ಚಿಂತನೆಯ ಕುರಿತಾಗಿ ಧಾರ್ಮಿಕ ಬಿನ್ನಾಭಿಪ್ರಾಯಗಳಿವೆ. ಅವರ ಸಾಮಾಜಿಕ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ ಮುಸ್ಲಿಮ್ ಮೂಲಭೂತವಾದ, ಕೋಮುವಾದದ ಕುರಿತಾದ ಅವರ ನಿಲುವಿನಲ್ಲಿ ನಮಗೆ ಸಹಮತ ಕಂಡುಬಂದಲ್ಲಿ ಮಾತ್ರ ಅಂಥವರ ನಾಯಕತ್ವವನ್ನು ನಾವು ಒಪ್ಪುತ್ತೇವೆ” ಎನ್ನುತ್ತಾರೆ ಜಮಾತೇ- ಇಸ್ಲಾಮೀ-ಹಿಂದ್ ಸಂಘಟನೆಯ ಯುವ ಮುಖಂಡ ಶಬ್ಬೀರ್ ಅಹಮ್ಮದ್.

ಭಾರತದಲ್ಲಿ ಸಂಘಪರಿವಾರದ ಕೋಮುವಾದದಿಂದ ಅಭದ್ರತೆಯಲ್ಲಿ ಬದುಕುತ್ತಿರುವ ಶೋಷಿತ ಮುಸ್ಲಿಮ್ ವರ್ಗದ ಪ್ರತಿನಿಧಿಗಳಾಗಿ ಮುಸ್ಲಿಮ್ ಧಾರ್ಮಿಕ ಮೂಲಭೂತವಾದಿ ಸಂಘಟನೆಗಳು ಹಾಗೂ ಅದರ ನಾಯಕರು ಹೊರಹೊಮ್ಮುತ್ತಿದ್ದಾರೆ. ಸಮುದಾಯದ ರಕ್ಷಣೆ ಹಾಗೂ ಸಬಲೀಕರಣದ ಪರವಾಗಿ ಧ್ವನಿ ಎತ್ತುತ್ತಿರುವ ಮೂಲಭೂತವಾದಿ ಸಂಘಟನೆಗಳು ಸಮುದಾಯದ ಯುವ ಮನಸ್ಸುಗಳಲ್ಲಿ ಧಾರ್ಮಿಕ ಕಟ್ಟರ್ ವಾದವನ್ನು ಬಿತ್ತುತ್ತಿವೆ. ಪರಿಣಾಮ ಶೋಷಿತ ಮುಸ್ಲಿಮರ, ಬಡವರ, ದಮನಿತರ, ಶೋಷಿತರ, ಮಹಿಳೆ, ಆದಿವಾಸಿ ಹಾಗೂ ದಲಿತರ ಪರವಾಗಿ ಆಡುವ ಉದಾರವಾದಿ ಮುಸ್ಲಿಮ್ ನಾಯಕರ ಮಾತುಗಳಿಗಿಂತ ಸಂಘಪರಿವಾರದ ಪರಿಭಾಷೆಯಲ್ಲಿ ಮಾತನಾಡುವ ಕೋಮುವಾದಿ ಮುಸ್ಲಿಮ್ ನಾಯಕರ ಮಾತುಗಳು ಮುಸ್ಲಿಮ್ ಯುವಮನಸ್ಸುಗಳಿಗೆ ಹತ್ತಿರವಾಗುತ್ತಿವೆ.

“ಎಡಪಂಥೀಯ ಚಿಂತನೆ ಹಾಗೂ ಎಡ ಹೋರಾಟಗಾರರ ಕುರಿತಾಗಿ ಮುಸ್ಲಿಮ್ ಸಮುದಾಯದ ನಡುವೆ ಪೂರ್ವಾಗ್ರಹಗಳನ್ನು ಮೂಲಭೂತವಾದಿಗಳು ವ್ಯವಸ್ಥಿತವಾಗಿ ಸೃಷ್ಟಿ ಮಾಡುತ್ತಿದ್ದಾರೆ. ಈ ಕಾರಣಗಳಿಂದಾಗಿ ಬಡತನ, ಸಮಾನತೆ, ಸ್ತ್ರೀ ಸ್ವಾತಂತ್ಯ್ರ, ಕೋಮುವಾದ , ಮೂಲಭೂತವಾದದ ಕುರಿತಾಗಿ ಮಾತನಾಡುವ ಮುಸ್ಲಿಮ್ ಪ್ರಗತಿಪರ ಹೋರಾಟಗಾರರನ್ನು ಸ್ವೀಕರಿಸಲು ಮುಸ್ಲಿಮ್ ಸಮಾಜ ಹಿಂದೇಟು ಹಾಕುತ್ತಿದ್ದಾರೆ. ಈ ಬೆಳವಣಿಗೆಗಳ ಪರಿಣಾಮವೇ ಎಡ ಚಿಂತನೆಯ ಧ್ವನಿಯಾಗಿರುವ ಉಮ್ಮರ್ ಖಾಲಿದ್ ಹಾಗೂ ಶೆಹ್ಲಾ ರಶೀದ್ ನಂತಹಾ ಯುವ ವಿದ್ಯಾರ್ಥಿ ಮುಖಂಡರು ಮುಸ್ಲಿಮ್ ಯುವಕರ ಪಾಲಿಗೆ ಹೀರೋಗಳಾಗುವುದಿಲ್ಲ. ಇವರ ಹೋರಾಟ ಹಾಗೂ ನಾಯಕತ್ವದ ಕುರಿತಾಗಿ ಮುಸ್ಲಿಮ್ ಸಮಾಜದಲ್ಲಿ ಚರ್ಚೆ ಆಗೋದಿಲ್ಲ. ಬದಲಾಗಿ ಉವೈಸಿ ಸಹೋದರರಂತಹಾ ಕೋಮುವಾದಿ ನಾಯಕತ್ವ ಮುಸ್ಲಿಮ್ ಯುವ ಮನಸ್ಸುಗಳಲ್ಲಿ ಹೀರೋ ಸ್ಥಾನ ಪಡೆದುಕೊಳ್ಳುತ್ತಿರುವುದು ವಿಪರ್ಯಾಸ ಹಾಗೂ ಆತಂಕಕಾರಿ” ಎನ್ನುತ್ತಾರೆ ಡಿ.ವೈ.ಎಫ್.ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ.

ಭಾರತೀಯ ಮುಸ್ಲಿಮರು ಸಂಘಪರಿವಾರದ ಕೋಮುವಾದಿಗಳನ್ನು ಕೋಮುವಾದದ ಪರಿಭಾಷೆಯಲ್ಲೇ ಮುಖಾಮುಖಿಯಾಗಲು ಹೊರಟಿದ್ದಾರೆ.Owaisi ಆದರೆ ಭಾರತದಲ್ಲಿ ಬಹುಸಂಖ್ಯಾತ ಕೋಮುವಾದವನ್ನು ಎದುರಿಸುವ ಬಗೆ ಇದಲ್ಲ. ಬದಲಾಗಿ ಇಲ್ಲಿಯ ಶೋಷಿತ ವರ್ಗಗಳು ಜೊತೆಗೂಡಿ ಚಳುವಳಿ ಕಟ್ಟಬೇಕಾದ ಅಗತ್ಯವಿದೆ. ಈ ಸಂಧರ್ಭದಲ್ಲಿ ಚಳುವಳಿಯ ನಾಯಕತ್ವ ಮುಸ್ಲಿಮ್ ಕೋಮುವಾದಿಗಳ ಪಾಲಾದರೆ ಕೋಮುವಾದದ ವಿರುದ್ದದ ಹೋರಾಟ ಅರ್ಥ ಕಳೆದುಕೊಳ್ಳುತ್ತದೆ. ಒಂದು ವರ್ಗದ ಕೋಮುವಾದದ ವಿರುದ್ಧದ ಹೋರಾಟ ಮತ್ತೊಂದು ಕೋಮುವಾದಿಗಳ ಹುಟ್ಟಿಗೆ ಕಾರಣವಾಗಬಾರದು. ಇಂದು ಮುಸ್ಲಿಮ್ ಸಮುದಾಯದ ಬೆಳವಣಿಗೆಯನ್ನು ಗಮನಿಸುತ್ತಿದ್ದರೆ ಮೂಲಭೂತವಾದ, ಧಾರ್ಮಿಕ ಕಟ್ಟರ್ ವಾದ ಸಮುದಾಯದ ಯುವ ಸಮೂಹದದೊಳಗೆ ಹೇಗೆ ಬೆರೂರುತ್ತಿದೆ ಎಂಬುವುದು ಸ್ಪಷ್ಟಗೊಳ್ಳುತ್ತದೆ. ಇದು ಆತಂಕಕಾರಿ ವಿಚಾರವೂ ಹೌದು. ಶೋಷಿತ ಮುಸ್ಲಿಮರ ಪರ ನಡೆಸುತ್ತಿರುವ ಮುಸ್ಲಿಮ್ ಸಮುದಾಯದ ಹೋರಾಟಕ್ಕೆ ಸಮುದಾಯದ ಉದಾರವಾದಿಗಳ ಹಾಗೂ ಪ್ರಗತಿಪರರ ನಾಯಕತ್ವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮುದಾಯದೊಳಗಿನಿಂದ ಉದಾರವಾದಿ, ಪ್ರಗತಿಪರ ನೆಲೆಯಲ್ಲಿ ಚಿಂತಿಸುವ ನೂರಾರು ಯುವ ಮುಂದಾಳುಗಳು ಬೆಳೆದು ಬರಬೇಕಿದೆ. ದೇಶದಲ್ಲಿ ಕ್ರಾಂತಿಯ ತಂಗಾಳಿ ಎಬ್ಬಿಸಿದ ಉಮ್ಮರ್ ಖಾಲಿದ್ ಹಾಗೂ ಶೆಹ್ಲಾ ರಶೀದ್ ನಂತಹಾ ವಿದ್ಯಾರ್ಥಿ ಮುಖಂಡರು ಮುಸ್ಲಿಮ್ ಯುವ ಸಮೂಹಕ್ಕೂ ಸ್ಪೂರ್ತಿಯಾಗಲಿ. ಯುವ ನಾಯಕರನ್ನು ಈ ನಾಡಿಗೆ ನೀಡಿದ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯಕ್ಕೆ ಧನ್ಯವಾದಗಳು.

ಕಾಶ್ಮೀರ ಪ್ರತ್ಯೇಕತಾವಾದ, ಪಾಕಿಸ್ತಾನ್ ಜಿಂದಾಬಾದ್ ಮತ್ತು ಸಂವಿಧಾನ

Naveen Soorinje


ನವೀನ್ ಸೂರಿಂಜೆ


 

 

ಒಂದು ವೇಳೆ ಜೆಎನ್ ಯು ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ಆದಲ್ಲಿ ಅದು ದೇಶದ್ರೋಹ ಆಗುತ್ತದೆಯೇ? ಅಷ್ಟಕ್ಕೂJNU ಪಾಕಿಸ್ತಾನವು ಭಾರತದ ಅಧಿಕೃತ ಶತ್ರು ರಾಷ್ಟ್ರ ಎಂದು ಭಾರತದ ಸಂವಿಧಾನವೇನೂ ದಾಖಲಿಸಿಲ್ಲ. ಅಂತಹ ಕಾನೂನುಗಳೂ ಇಲ್ಲ. ಪಾಕಿಸ್ತಾನದ ಜೊತೆ ನಮ್ಮ ಸಂಬಂಧ ಸಮಸ್ಯಾತ್ಮಕವಾಗಿದೆ ಎಂಬುದೇನೋ ನಿಜ. ಅಂದಮಾತ್ರಕ್ಕೆ ಆ ದೇಶ ಶಾಶ್ವತವಾಗಿ ನಮ್ಮ ಅಹಿತ ನೆರೆಹೊರೆಯಾಗಿಯೇ ಇರುತ್ತದೆ ಎಂದು ಕಲ್ಪಿಸಿಕೊಳ್ಳುವುದು ಕೇವಲ ಭ್ರಾಂತಿಯಾಗುತ್ತದೆ. ಸುಧಾರಣೆಗೆ ಅವಕಾಶಗಳು ಇದ್ದೇ ಇರುತ್ತವೆ. ಪ್ರಧಾನಿ ಮೋದಿಯವರು ಪಾಕ್ ನೇತಾರ ನವಾಜ್ ಶರೀಫರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಹಠಾತ್ತನೆ ಆ ದೇಶಕ್ಕೆ ಭೇಟಿ ನೀಡಿರುವುದು ಅಂತಹ ಸಹಜ ಭವಿಷ್ಯದ ಅಪೇಕ್ಷೆಯಿಂದಲೇ.

ಒಂದುವೇಳೆ ಸಧ್ಯೋಭವಿಷ್ಯದಲ್ಲಿ ಸಂಬಂಧಗಳು ಸುಧಾರಣೆಗೊಂಡು, ಸಹಜತೆ ನೆಲೆಸಿದಲ್ಲಿ ಮತ್ತು ಅಂತಹ ಸಂದರ್ಭದಲ್ಲಿ ಪಾಕ್ ಪರ ಘೋಷಣೆಗಳು ಕೂಗಲ್ಪಟ್ಟರೆ ಅವುಗಳ ಸ್ವೀಕರಣೆ ಹೇಗಿರುತ್ತದೆ? ನಮ್ಮಲ್ಲಿ ಅಮೇರಿಕಾ ಪರ, ಇಸ್ರೇಲ್ ಪರ ಅಥವಾ ಇಂಗ್ಲಂಡ್ ಪರ ಘೋಷಣೆ ಕೂಗಿದ್ದು ಎಂದಾದರೂ ದೇಶದ್ರೋಹವೆಂದು ಪರಿಗಣಿತವಾಗಿದ್ದಿದೆಯೇ? ಬೇರೆ ದೇಶಗಳ ಮಾನವ ಹಕ್ಕುಗಳಿಗೆ ಧಕ್ಕೆಯಾದಾಗ ಭಾರತ ಸೇರಿದಂತೆ ಯಾವುದೇ ರಾಷ್ಟ್ರವು ಸಂತ್ರಸ್ತ ದೇಶದ ಪರ ವಹಿಸುವುದು ವಾಡಿಕೆಯಲ್ಲವೇ? ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಾಸೀಂ ಅಕ್ರಮ್ ಅಥವಾ ಶಾಹಿದ್ ಅಫ್ರೀದಿ ಮಿಂಚುತಿದ್ದಾಗ ಅಭಿಮಾನದಿಂದ ಚಪ್ಪಾಳೆ ತಟ್ಟುವುದು, ಘೋಷಣೆ ಕೂಗುವುದು ಅಥವಾ ಕೇಕೆ ಹಾಕುವುದು ದೇಶದ್ರೋಹವಾಗುತ್ತದೆಯೇ? ಕೆಲ ದಿನಗಳ ಹಿಂದೆ ಭಾರತದ ಕ್ರಿಕೆಟಿಗ ವಿರಾಟ್ ಕೋಹ್ಲಿಯ ಪಾಕ್ ಅಭಿಮಾನಿಯೊಬ್ಬ ಅಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ, ಅಭಿಮಾನ ವ್ಯಕ್ತಪಡಿಸಿದ್ದಕ್ಕಾಗಿ ಪೋಲಿಸರಿಂದ ಬಂಧಿಸಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ. ಇದು ಜೆ.ಎನ್.ಯು ಕ್ಯಾಂಪಸ್ಸಿನಲ್ಲಿ ನಮ್ಮ ಪೋಲೀಸರು ವರ್ತಿಸಿದ ರೀತಿ ಅಥವಾ ನಂತರದಲ್ಲಿ ಇಲ್ಲಿಯ ಬಲಪಂಥೀಯ ಸಂಘಟನೆಗಳು ಮತ್ತು ಅರ್ನಾಬ್ ಗೋಸ್ವಾಮಿ ಥರದ ಹೈಪರ್ ರಾಷ್ಟ್ರೀಯವಾದಿಗಳ ಅತಿರೇಕದ ವರ್ತನೆಗಳಿಗಿಂತ ಭಿನ್ನವಾಗಿದೆಯೇ? ಅಂದರೆ ಒಂದು ಘೋಷಣೆಗೆ ಕುಸಿದು ಬೀಳುವಷ್ಟು ದುರ್ಬಲವಾಗಿವೆಯೇ ಆಧುನಿಕ ರಾಷ್ಟ್ರಗಳು?

ಅಷ್ಟಕ್ಕೂ ಒಂದು ದೇಶದಲ್ಲಿ ಮತ್ತೊಂದು ದೇಶದ ಪರ ಘೋಷಣೆ ಕೂಗುವ ಕನಿಷ್ಠ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲವೇ? ಯಾವುದೇ ದೇಶದKanhaiya-Kumar-JNU ಆಡಳಿತೆ ನಡೆಯುವುದು ಆ ನೆಲದ ಕಾನೂನಿಗೆ ಅನುಗುಣವಾಗಿಯೇ ಹೊರತು ಅಲ್ಲಿಯ ಯಾವುದೇ ಪುಂಡು ದೇಶಭಕ್ತರ ಅಥವಾ ಮೀಡಿಯಾ ಜಡ್ಜುಗಳ ಖಯಾಲಿಗೆ ಅನುಗುಣವಾಗಿ ಅಲ್ಲ. ಮಾನಹಾನಿ, ರಾಷ್ಟ್ರದ್ರೋಹ ಅಥವಾ ಭಾವನೆಗಳಿಗೆ ಘಾಸಿ ಮೊದಲಾದ ನೆಪಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾಂವಿಂಧಾನಿಕ ಉಪಬಂಧಗಳನ್ನು ಮೀರಿ ಮಿತಿಗಳನ್ನು ಹೇರುವ ಪ್ರಯತ್ನಗಳು ನಮ್ಮ ದೇಶದಲ್ಲಿ ನಡೆಯುತ್ತಲೇ ಇವೆ. ಜೆ.ಎನ್.ಯು ಪ್ರಕರಣವೂ ಅಂತಹದ್ದೇ ಪ್ರಯತ್ನದ ಒಂದು ಭಾಗವಾಗಿದೆ. ದೇಶದ ಖ್ಯಾತ ಕಾನೂನು ತಜ್ಞ ಮತ್ತು ಮಾಜಿ ಅಟಾರ್ನಿ ಜನರಲ್ ಶ್ರೀ ಸೋಲಿ ಸೊರಾಬ್ಜಿಯವರು ಜೆ.ಎನ್.ಯು ಕ್ಯಾಂಪಸ್ಸಿನಲ್ಲ ಕೂಗಲ್ಪಟ್ಟ ಘೋಷಣೆಗಳು ಸಮಸ್ಯಾತ್ಮಕವಾಗಿದ್ದರೂ ಅವು ದೇಶದ್ರೋಹದ ಆಪಾದನೆಯ ಪರಿಧಿಯಲ್ಲಿ ಬರುವುದಿಲ್ಲ ಎಂಬುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ಕೇದಾರನಾಥ್ ಪ್ರಕರಣ (1962) ದಲ್ಲಿ ಸೆಕ್ಷನ್ ೧೨೪ ರ ಸಾಂವಿಧಾನಿಕ ಅನ್ವಯಿಕತೆಯನ್ನು ಸ್ಪಷ್ಟಪಡಿಸಿದೆ. ಅಲ್ಲಿಯ ತೀರ್ಪಿನಲ್ಲಿ, ಸರ್ವೋಚ್ಚ ನ್ಯಾಯಲಯವು ಸೆಡೀಶನ್ ವಿಧಿಯ ವ್ಯಾಪ್ತಿಯನ್ನು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆjnu-kanhaiya-kumar-arrest-protest ಮತ್ತು ಹಿಂಸೆಗೆ ಪ್ರಚೋದನೆ ನೀಡಬಲ್ಲ ಮಾತು ಅಥವಾ ಕೃತ್ಯಗಳಿಗೆ ಮಾತ್ರವೇ ಸೀಮಿತಗೊಳಿಸಿ ಆದೇಶ ಹೊರಡಿಸಿದೆ. ಅಂದರೆ, ಸೋರಾಬ್ಜಿಯವರು ಅಭಿಪ್ರಾಯ ಪಡುವಂತೆ, ಕೇವಲ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗುವುದು ನಾವೇ ಒಪ್ಪಿಕೊಂಡಿರತಕ್ಕಂತಹ ಕಾನೂನು ಕಟ್ಟಳೆಗಳ ಪ್ರಕಾರ ರಾಷ್ಟ್ರದ್ರೋಹ ಅಲ್ಲ. ಹೆಚ್ಚೆಂದರೆ ಅದು ಒಂದು ಗುಂಪಿಗೆ ಸಿಟ್ಟು ತರಬಹುದಾದ, ಅಸಮಾಧಾನ ಉಂಟುಮಾಡಬಹುದಾದ ಆದರೆ ಸಹಜವಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಒಂದು ಸ್ವರೂಪ ಅಷ್ಟೇ. ‘ನೋವುಂಟುಮಾಡುತ್ತದೆ’ ಎಂಬುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯ ನಿರ್ಧಾರಕ್ಕೆ ಒಂದು ಮಾನದಂಡ ಅಗುವುದು ಸ್ಪಷ್ಟವಾಗಿ ಅಪ್ರಜಾಸತ್ತಾತ್ಮಕ. ದಕ್ಷಿಣ ಆಫ್ರಿಕಾದ ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರ ಹೇಳಿಕೆಯೊಂದನ್ನು ಘನವೆತ್ತ ಕಾನೂನು ಚಿಂತಕ ಫಾಲಿ ಎಸ್ ನಾರಿಮನ್ ಹೀಗೆ ಉಲ್ಲೇಖಿಸುತ್ತಾರೆ: “Speech is really free only when it hurts”.

ಪ್ರಜೆಗಳು ತಮ್ಮ ರಾಷ್ಟ್ರದ ವಿರುದ್ಧ ಘೋಷಣೆ ಕೂಗುವಂತಹ ಘಟನೆಗಳು, ಚಳುವಳಿಗಳು ವಿಶ್ವದಾದ್ಯಂತ ನಡೆಯುತ್ತಲೇ ಇವೆ. ಅದನ್ನು ಜಗತ್ತಿನ ನಾಗರಿಕ ರಾಷ್ಟ್ರಗಳು ಬಹಳ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ ಬಂದಿವೆ. ಅಂಥ ವರ್ತನೆಗಳನ್ನು ಅಭಿವ್ಯಕ್ತಿ ಸ್ವಾಂತಂತ್ರ್ಯದ ಭಾಗವಾಗಿಯೇ ಅವು ಪರಿಗಣಿಸುತ್ತಿವೆ. ಸ್ಕಾಟ್ಲಂಡ್ ಪ್ರಾಂತ್ಯದಲ್ಲಿ ಅದು ಬ್ರಿಟನ್ ದೇಶದಿಂದ ಪ್ರತ್ಯೇಕವಾಗುವ ದಿಕ್ಕಿನಲ್ಲಿ ಹೋರಾಟಗಳು ನಡೆಯುತ್ತಲೇ ಇವೆ. ಕೆನಾಡದಿಂದ ಕ್ಯೂಬೆಕ್, ಸ್ಪೇಯ್ನ್ ದೇಶದಿಂದ ಬಾಷ್ಕ್ ಪ್ರಾಂತ್ಯ ಬೇರೆಯಾಗಲು ಯತ್ನಿಸುತ್ತಿವೆ. ಇಂತಹ ಸಂದರ್ಭದಲ್ಲಿ ಆ ದೇಶಗಳು ವರ್ತಿಸುತ್ತಿರುವ ರೀತಿ ಭಾರತಕ್ಕೆ ಒಂದು ಮಾದರಿ. ಆ ದೇಶಗಳು ಸೆಡೀಷನ್ ವಿಧಿಯನ್ನು ನಮ್ಮಂತೆ ಸ್ವೇಚ್ಚೆಯಿಂದ ಬಳಸುತ್ತಿವೆಯೇ ಎಂಬುವುದನ್ನು ನಮ್ಮ ಮೀಡಿಯಾದ ಪ್ರಭೃತಿಗಳು,jnu-agitation ಬಲಪಂಥೀಯ ಸಂಘಟನೆಗಳು ನೋಡಬೇಕು. ಸ್ಕಾಟ್ಲೆಂಡ್ ಚಳುವಳಿಯ ಮಾದರಿಯಲ್ಲಿ, ನಮ್ಮ ದೇಶದಲ್ಲಿ ಕಾಶ್ಮೀರ ಪ್ರಾಂತ್ಯವು ಪ್ರತ್ಯೇಕವಾಗಬೇಕೆಂದು ಕೆಲವರು ಪ್ರತಿಪಾದಿಸುತ್ತಿದ್ದಾರೆ. ಅಂತಹ ಸಂಧರ್ಭದಲ್ಲಿ ಸ್ಕಾಟ್ಲಂಡಿನಲ್ಲಿ ಬ್ರಿಟನ್ ವಿರುದ್ಧ ಘೋಷಣೆಗಳು ಮೊಳಗಿದಂತೆ ಇಲ್ಲಿ ಭಾರತ ವಿರೋಧಿ ಕೂಗುಗಳು ಕೇಳಬಹುದು. ಮತ್ತು ಅದು ಪ್ರತ್ಯೇಕತಾ ಚಳುವಳಿಗಳ ಸಹಜ ಪ್ರವೃತ್ತಿಯೇ ಆಗಿರುತ್ತದೆ. ಪ್ರತ್ಯೇಕತೆಯ ಬೇಡಿಕೆಗಳನ್ನು, ಅಲ್ಲಿಯ ಜನರ ಆಶೋತ್ತರಗಳನ್ನು ನಾವು ವಸ್ತುನಿಷ್ಠ ನೆಲೆಯಲ್ಲಿ ನಾವು ಅನುಸಂಧಾನ ಮಾಡಬೇಕೇ ಹೊರತು ರಾಷ್ಟ್ರದ್ರೋಹದ ಪ್ರಕರಣಗಳಂತಹ ಕ್ಷುಲ್ಲಕ ವಿಧಾನಗಳಿಂದ ಅಲ್ಲ. ಅಂತಹ ಪ್ರಾಂತ್ಯದ ಸರ್ವತೋಮುಖ ಅಭಿವೃಧ್ಧಿಗೆ ನಾವು ಮಾಡಿರುವ, ಮಾಡುತ್ತಿರುವ ಅಥವಾ ಮಾಡಬಹುದಾದ ನಮ್ಮ ಪ್ರಯತ್ನಗಳು ಪ್ರತ್ಯೇಕತಾ ಬೇಡಿಕೆಗಳಿಗೆ ಉತ್ತರವಾಗಬೇಕು. ಅವಾಗಲೇ ಸ್ಕಾಟ್ಲಂಡ್ ನಲ್ಲಿ ನಡೆದ ಜನಮತಗಣನೆಯಲ್ಲಿ ಹೇಗೆ ಬಹು ಸಂಖ್ಯೆಯ ಸ್ಕಾಟಿಷ್ ಜನರು ಪ್ರತ್ಯೇಕತೆಯ ವಿರುದ್ಧ ಮತ ಹಾಕಿದರೋ ಅಂತಹ ಬೆಳವಣಿಗೆಗಳು ನಮ್ಮಲ್ಲೂ ನಡೆಯುತ್ತವೆ. ಆದರೆ ಕಾಶ್ಮೀರ ಪ್ರಾಂತ್ಯದ ಅಭಿವೃದ್ಧಿ ಹಾಗೂ ಅಲ್ಲಿಯ ಮಾನವ ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಅಂತಹ ಕಲ್ಪನೆಗಳನ್ನು ಇಟ್ಟುಕೊಳ್ಳಬಹುದೇ?

ಸದ್ಯ, ‘ಜೆಎನ್ ಯು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ, ಅಫ್ಜಲ್ ಪರ ಘೋಷಣೆ ಕೂಗಿಲ್ಲ’ ಎಂದು ಮಾನವ ಹಕ್ಕು ಕಾರ್ಯಕರ್ತರು, ಪ್ರಗತಿಪರರು ಮತ್ತು ಚಿಂತಕರು ವಾದಿಸುತ್ತಿದ್ದಾರೆ. ಅದಕ್ಕಾಗಿ ಬಂಧಿತ ವಿದ್ಯಾರ್ಥಿ ಸಂಘದ ನಾಯಕ ಕನ್ನಯ್ಯರ ಭಾಷಣವನ್ನು ಮತ್ತೆ ಮತ್ತೆ ಪ್ರಸ್ತುತಪಡಿಸಿ “ನೋಡಿ, ಇದರಲ್ಲಿ ದೇಶವಿರೋಧಿ ಘೋಷಣೆ ಏನಿದೆ? ಪಾಕ್ ಪರ ಘೋಷಣೆ ಇದರಲ್ಲಿ ಇಲ್ಲ. ಅಫ್ಜಲ್ ಗುರು ಬಗ್ಗೆ ಭಾಷಣದಲ್ಲಿ ಉಲ್ಲೇಖವೇ ಇಲ್ಲ” ಎಂಬಂತಹ ಮಾತುಗಳನ್ನು ಆಡುತ್ತಿದ್ದಾರೆ. ಇದು ಬಹಳ ಅಪಾಯಕಾರಿಯಾದ ವಾದ. ಅಂತಹ ಪ್ರತಿಪಾದನೆಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಯನ್ನು ಕುಗ್ಗಿಸುವ ಬಲಪಂಥೀಯರ ಪಿತೂರಿಗೆ ಇಂಬು ಕೊಟ್ಟಂತೆ. ಜೆ.ಎನ್.ಯು ಹೋರಾಟ ಬಲಪಂಥೀಯರನ್ನು ಹಿಮ್ಮೆಟ್ಟುವ ವಿಚಾರದಲ್ಲಿ ತಕ್ಕ ಮಟ್ಟಿಗೆABVP ಯಶಸ್ವಿಯಾಗಬಹುದು. ಆದರೆ ಪ್ರತ್ಯೇಕತೆಯ ಬಗ್ಗೆ ಅಥವಾ ಘೋಷಣೆಯಂತಹ ಕ್ಷುಲ್ಲಕ ವಿಚಾರಗಳಲ್ಲಿ ಬಲಪಂಥೀಯ ಸಂಘಟನೆಗಳು ನಿರ್ಣಯಿಸಿರುವ ಕುತ್ಸಿತ ಸ್ವರೂಪದ ರಾಷ್ಟ್ರೀಯತೆಯ ವ್ಯಾಖ್ಯಾನಗಳಿಗೆ ಮಾನ್ಯತೆ ದೊರತಂತೆ ಕಾಣುತ್ತದೆ. ಇದು ಆತಂಕದ ವಿಚಾರ. ನಾವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅದರ ಪೂರ್ಣ ಸಾಂವಿಧಾನಿಕ ನೆಲೆಯಲ್ಲಿ ಸಾಕ್ಷತ್ಕರಿಸುವ ದಿಶೆಯಲ್ಲಿ ಕಾರ್ಯಶೀಲರಾಗುವುದು ಅವಶ್ಯ. ಅದನ್ನು ಹರಣಮಾಡುವ, ಮಿತಿಗೊಳಿಸುವ ಪ್ರತಿಗಾಮಿಗಳ ಟ್ರ್ಯಾಪ್ ಗೆ ಬೀಳಲೇಬಾರದು. ಯಾವುದೇ ದೇಶದಲ್ಲಿ ಆ ದೇಶದ ಪ್ರಭುತ್ವ ಜೀವ ವಿರೋಧಿಯಾಗಿ ವರ್ತಿಸಿದಾಗ ಅದನ್ನು ಪ್ರಶ್ನಿಸುವ, ಅದರ ವಿರುದ್ಧ ಗಟ್ಟಿ ದ್ವನಿಯಲ್ಲಿ ಮಾತನಾಡುವ ಸ್ವಾತಂತ್ರ್ಯ ಇರಲೇಬೇಕು. ಕಾಶ್ಮೀರ ಸ್ವಾತಂತ್ರ್ಯವಾಗಬೇಕು ಎಂಬಂಥ ಅಹಿಸಾತ್ಮಕ ಘೋಷಣೆಗಳು ಅಥವಾ ಅಂತಹ ವಿಚಾರದ ಕುರಿತಾದ ಕಮ್ಮಟ, ಶಿಬಿರ ಹಾಗೂ ಚರ್ಚಾಕೂಟಗಳು ಕೂಡಾ ಸದ್ಯದ ಕಾನೂನುಗಳ ಪ್ರಕಾರ ದೇಶವಿರೋಧಿ ಆಗೋದಿಲ್ಲ. ಪ್ರಜಾಪ್ರಭುತ್ವದಲ್ಲಿ ಭಿನ್ನ ಮತೀಯರಿಗೆ ನಿರ್ಭೀತ ಅವಕಾಶ ಸಹಜವಾಗಿಯೇ ಇರುತ್ತದೆ. ಮುಕ್ತ ಸಮಾಜಗಳು ಅಹಿಂಸಾತ್ಮಕ ಪ್ರತ್ಯೇಕತಾವಾದಿಗಳನ್ನು ಜೈಲಿಗೆ ಹಾಕುವುದಿಲ್ಲ (Free societies do not jail non-violent secessionists) ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ ಮತ್ತು ಚಿಂತಕ ಸ್ವಾಮಿನಾಥನ್ ಅಯ್ಯರ್ ಅಭಿಪ್ರಾಯ ಪಡುತ್ತಾರೆ. ಅಂತಹ ಮುಕ್ತ ಸಮಾಜದ ನಿರ್ಮಾಣಕ್ಕೆ ನಾವು ತುಡಿಯಬೇಕು. ಇಲ್ಲವಾದಲ್ಲಿ ಮುಂದೆ ಕಾಶ್ಮೀರದ ಬಗ್ಗೆ ಮಾತಾಡುವ ಪ್ರತಿಯೊಬ್ಬ ಚಿಂತಕನೂ ದೇಶದ್ರೋಹದ ಅಪಾದನೆಯ ಅಡಿಯಲ್ಲಿ, ಪ್ರಭುತ್ವದ ಕೈಯಲ್ಲಿ ಬಂಧಿಯಾಗುವ ಅಪಾಯವಿರುತ್ತದೆ. ಮತ್ತು ಅಂತಹ ಸಂದರ್ಭದಲ್ಲಿ ಇಂದಿನ ನಮ್ಮ ವರ್ತನೆ ವಿರೋಧಾಭಾಸವಾಗಿ ಅಂದು ನಮ್ಮನ್ನು ಭೂತದಂತೆ ಕಾಡುತ್ತದೆ.

 

ಉಮರ್ ಖಾಲಿದ್ ಭಾಷಣದ ಬರಹ ರೂಪ

Naveen Soorinje


-ಅನುವಾದ : ನವೀನ್ ಸೂರಿಂಜೆ


 

 

ಲಾಲ್ ಸಲಾಂ, ಲಾಲ್ ಸಲಾಂ, ವೀರ್ ಸೆಲ್ಯೂಟ್, ರೆಡ್ ಸೆಲ್ಯೂಟ್, ರೆಡ್ ಸೆಲ್ಯೂಟ್ ಟು ಕಾಮ್ರೇಡ್ ಎಂದು ವಿದ್ಯಾರ್ಥಿಗಳ ಭಾರೀ ಉದ್ಘೋಷದ ಜೊತೆ ದೇಶದ್ರೋಹಿ ಆರೋಪ ಹೊತ್ತ ಜೆ ಎನ್ ಯು ವಿದ್ಯಾರ್ಥಿ ಉಮ್ಮರ್ ಖಾಲಿದ್ ಮಾತನಾಡುತ್ತಿದ್ದಾರೆ. ಕೇಳಿ.

ಸ್ನೇಹಿತರೇ,

ನನ್ನ ಹೆಸರು ಉಮರ್ ಖಾಲಿದ್. ಆದರೆ ನಾನು ಭಯೋತ್ಪಾದಕ ಅಲ್ಲ.

ಮೊದಲನೆಯದಾಗಿ ಈ ಹೋರಾಟದಲ್ಲಿ ಭಾಗವಹಿಸಿದ ಮತ್ತು ವಿದ್ಯಾರ್ಥಿಗಳಾದ ನಮಗೆ ಬೆಂಬಲವನ್ನು ನೀಡಿದ ಪ್ರತಿಯೊಬ್ಬ ಜೆಎನ್ ಯು ಪ್ರಾಧ್ಯಾಪಕರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಈ ಹೋರಾಟ ಕೇವಲ ನಮ್ಮ ನಾಲ್ಕೈದು ಜನರದ್ದಾಗಿರಲಿಲ್ಲ. ಈ ಹೋರಾಟ ನಮ್ಮೆಲ್ಲರ ಹೋರಾಟವಾಗಿದೆ. ಈ ಹೋರಾಟ ಕೇವಲ ಈ ಜೆಎನ್ ಯು ವಿಶ್ವವಿದ್ಯಾನಿಲಯದ ಹೋರಾಟ ಮಾತ್ರವೇ ಇಲ್ಲ, ಇದೊಂದು ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳ ಹೋರಾಟವಾಗಿದೆ. ಅಷ್ಟಕ್ಕೇ ಸೀಮಿತವಾಗದೆ ಇದು ಇಡೀಯ ಸಮಾಜದ ಹೋರಾಟವಾಗಿದೆ. ಮುಂದಿನ ಪೀಳಿಗೆಯ ಸಮಾಜ ಹೇಗಿರಬೇಕೆಂಬುದರ ಸೂಚಕ ಈ ಹೋರಾಟ.

ಗೆಳೆಯರೇ

ಈ ಕೆಲ ದಿನಗಳಲ್ಲಿ ನನ್ನ ಬಗ್ಗೆ ನನಗೇ ಗೊತ್ತಿಲ್ಲದ ಹಲವಾರು ವಿಷಯಗಳನ್ನು ತಿಳಿದುಕೊಂಡೆ. ನಾನು ಎರಡು ಬಾರಿ ಪಾಕಿಸ್ತಾನ ಹೋಗಿ ಬಂದಿದ್ದೇನೆ ಎಂದು ನನಗೇ ಇತ್ತಿಚೆಗೆೆ ತಿಳಿಯಿತು. ನನ್ನ ಬಳಿ ಪಾಸ್ ಪೋರ್ಟೇ ಇಲ್ಲ. ಹಾಗಿದ್ದರೂ ನಾನು ಪಾಕಿಸ್ತಾನ ಹೋಗಿ ಬಂದೆ ಎಂಬುದು ನನಗೇ ಆಶ್ಚರ್ಯ ತರುವ ವಿಚಾರ. ನನಗೆ ಆನಂತರ ಮತ್ತೊಂದು ವಿಚಾರವೂ ತಿಳಿಯಿತು. ನಾನು ಮಾಸ್ಟರ್ ಮೈಂಡ್ ಎಂದು. ಜೆಎನ್ ಯು ವಿದ್ಯಾರ್ಥಿಗಳೇ ವಂಡರಫುಲ್ ಮೈಂಡ್ ಇರುವವರು. ಅವರಲ್ಲೇ ನಾನು ಮಾಸ್ಟರ್ ಮೈಂಡ್. ಇದು ತುಂಬಾ ಚೆನ್ನಾಗಿದೆ. ನಾನು ಇಂತಹ ಕಾರ್ಯಕ್ರಮವನ್ನು ದೇಶದ 70 ರಿಂದ 80 ವಿಶ್ವವಿದ್ಯಾನಿಲಯಗಳಲ್ಲಿ ಆಯೋಜಿಸಲು ಪ್ಲ್ಯಾನ್ ಮಾಡಿದ್ದೆನಂತೆ. ನಿಜವಾಗಲೂ ನನ್ನ ಲೀಡರ್ ಶಿಫ್ ಇಷ್ಟೊಂದು ವಿಸ್ತಾರವಾಗಿ ಬೆಳೆದಿದ್ದು ನನಗೇ ಗೊತ್ತಿರಲಿಲ್ಲ. ಈ ಕಾರ್ಯಕ್ರಮ ಆಯೋಜಿಸಲು ನಾವು ನಾಲ್ಕೈದು ತಿಂಗಳು ತಯಾರಿ ಮಾಡಿದ್ದೆವಂತೆ. ಜೆಎನ್ ಯು ನಲ್ಲಿ ಒಂದೊಂದು ಕಾರ್ಯಕ್ರಮ ಸಂಘಟಿಸಲು ಐದು-ಹತ್ತು ತಿಂಗಳು ಪಡೆದುಕೊಂಡರೆ ಜೆಎನ್ ಯು ಕತೆ ಏನಾಗಬಹುದು? ಅದೂ ಇರಲಿ. ನಾನು ಕೆಲ ದಿನಗಳಿಂದ 800 ಕರೆಗಳನ್ನು ಮಾಡಿದ್ದೇನಂತೆ. ಈ ಮಾಧ್ಯಮಗಳಿಗೆ ಯಾವ ನಾಚಿಕೆಯೂ ಇಲ್ಲ. ಸುದ್ದಿ ಪ್ರಸಾರಕ್ಕೆ ಮುನ್ನ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಯಾವುದೇ ದಾಖಲೆಯಿಲ್ಲದೆ, ಸತ್ಯಾಂಶವಿಲ್ಲದ ಸುದ್ದಿಗಳನ್ನು ಮಾಡಿದ್ರು. ನನಗೆ ಜೈಶ್ ಎ ಮಹಮ್ಮದ್ ಸಂಘಟನೆಯ ಕೈವಾಡ ಇದೆ ಎಂದು ಹೇಳಿದ್ರು. ಅದಕ್ಕೂ ಯಾವುದೇ ದಾಖಲೆ ಇಲ್ಲ. ನನಗೆ ನಿಜಕ್ಕೂ ಆಗ ನಗು ಬಂದಿತ್ತು. ನಿಜವಾಗಿಯೂ ಆ ಸಂಧರ್ಭದಲ್ಲಿ ಜೈಶ್ ಎ ಮಹಮ್ಮದ್ ಸಂಘಟನೆಯವರು ಪ್ರತಿಭಟನೆ ಮಾಡಬೇಕಿತ್ತು. ನನ್ನಂತವನನ್ನು ಅವರ ಸಂಘಟನೆಯವನು ಎಂದು ಹೇಳಿದ್ದಕ್ಕಾದರೂ ಅವರು ಪ್ರತಿಭಟಿಸಬೇಕಿತ್ತು. ಕೊನೆಗೆ ಕೇಂದ್ರ ಸರಕಾರದ ಗುಪ್ತಚರ ಇಲಾಖೆಯೇ ಸ್ಪಷ್ಟಪಡಿಸಿ, ಜೈಶ್ ಎ ಮಹಮ್ಮದ್ ಸಂಘಟನೆಗೂ ಈ ಹೋರಾಟಕ್ಕೂ ಸಂಬಂಧ ಇಲ್ಲ ಎಂದು ಹೇಳಿದರೂ ಮಾಧ್ಯಮಗಳು ಕ್ಷಮೆ ಕೇಳಲಿಲ್ಲ. ಈ ಮೀಡಿಯಾಗಳು ನಮ್ಮನ್ನು ಮೂರ್ಖರನ್ನಾಗಿಸುತ್ತಿವೆ. ಮೀಡಿಯಾಗಳು ಪೂರ್ವನಿರ್ಧರಿತವಾಗಿ ನಮ್ಮನ್ನು ಮಿಡಿಯಾ ಟ್ರಯಲ್ ಗೆ ಒಳಪಡಿಸಿದ್ವು. ಯಾವ ನಾಚಿಕೆಯೂ ಇಲ್ಲದೆ ವರ್ತಿಸಿದ್ರು.

ಮಾಧ್ಯಮಗಳ ಈ ರೀತಿಯ ವರ್ತನೆ ಇದೇ ಮೊದಲಲ್ಲ. ಅವುಗಳು ಏನು ಮಾಡಿದ್ರೂ ನಡೀತದೆ ಅಂದುಕೊಂಡಿದ್ದಾರೆ. ಮುಸ್ಲೀಮರನ್ನು ಭಯೋತ್ಪಾದಕರನ್ನಾಗಿಯೂ, ಆದಿವಾಸಿಗಳನ್ನು ನಕ್ಸಲರನ್ನಾಗಿಯೂ ಚಿತ್ರಿಸಿ ಅವರಿಗೆ ಅಭ್ಯಾಸವಾಗಿ ಬಿಟ್ಟಿದೆ. ಆದರೆ ಈ ಬಾರಿ ನೀವು ತಪ್ಪು ಜನರಿಗೆ ತಗಳ್ಳಾಕ್ಕೊಂಡಿದ್ದೀರಿ. ನಾವು ಪ್ರತೀ ಚಾನೆಲ್ ಗಳು ನಮ್ಮ ಬಗ್ಗೆ ಮಾಡಿದ ಸುದ್ದಿಗೆ ವಿವರಣೆ ನೀಡುವಂತಹ ಸಂಧರ್ಭ ಸೃಷ್ಠಿ ಮಾಡುತ್ತೇವೆ.

ಈ ಪ್ರಕರಣ ಈ ರೀತಿ ಸುದ್ದಿಯಾದ ನಂತರ ನಂತರ ನನ್ನ ತಂಗಿ, ತಂದೆಗೆ ಬೆದರಿಕೆ ಒಡ್ಡಲಾಯ್ತು. ತಂಗಿಗೆ ಅತ್ಯಾಚಾರದ ಬೆದರಿಕೆ ಒಡ್ಡಲಾಯ್ತು. ಕೊಲೆ ಬೆದರಿಕೆಯನ್ನೂ ನೀಡಲಾಯ್ತು. ಈ ಜನಗಳು ಏನೂ ಮಾಡಲೂ ಹೇಸದವರು. ತಂಗಿಗೆ ಅತ್ಯಾಚಾರದ ಬೆದರಿಕೆ ನೀಡಿದ ಈ ದೇಶಪ್ರೇಮಿಗಳ ಕಂದಮಾಲ್ ಘಟನೆ ಆ ಸಂಧರ್ಭ ನನಗೆ ನೆನಪಿಗೆ ಬಂದಿತ್ತು. ನಿಮಗೂ ನೆನಪಿರಬಹುದು. ಕಂದಮಾಲ್ ನಲ್ಲಿ ಭಜರಂಗದಳದವರು ಕ್ರಿಶ್ಚಿಯನ್ ಸನ್ಯಾಸಿನಿ ಮೇಲೆ ಅತ್ಯಾಚಾರ ಮಾಡಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದರು. ಆದುದರಿಂದ ನನಗೆ ತಂಗಿಯ ಬಗ್ಗೆ ಆತಂಕ ಉಂಟಾಗಿತ್ತು. ಇವರು ಅತ್ಯಾಚಾರ ಮಾಡಿಯೂ ಭಾರತ ಮಾತೆಗೆ ಜೈ ಎನ್ನುವವರು. ಇಂತಹ ಮಾತೆ ನಮಗೆ ಬೇಕಾಗಿಲ್ಲ. ಇಂತಹ ಮಾತೆ ನಮ್ಮದಲ್ಲ.

ನನ್ನ ತಂದೆಯನ್ನು ಕೆಲವು ಮಾಧ್ಯಮಗಳು ಮಾತನಾಡಿಸಿದ್ವು. ಅದನ್ನು ಸಂದರ್ಶನ ಅನ್ನೋದಕ್ಕಿಂತ ಮಾಧ್ಯಮಗಳ ವಿಚಾರಣೆ ಅನ್ನಬಹುದು. ನಮ್ಮಲ್ಲಿ ಕೆಲವು ಪತ್ರಕರ್ತರಿದ್ದಾರೆ. ಟೈಮ್ಸ್ ನೌ ನಲ್ಲಿ ಒಬ್ಬ ಪತ್ರಕರ್ತ ಇದ್ದಾರೆ. ಅವರ ಹೆಸರು ಹೇಳಲು ನಾನು ಬಯಸೋದಿಲ್ಲ. ಈ ಪತ್ರಕರ್ತರಿಗೆಲ್ಲಾ ನಮ್ಮ ವಿಚಾರದಲ್ಲಿ ಇಷ್ಟೊಂದು ಕೋಪ ಯಾಕೆ ಎಲ್ಲಿಂದ ಬರುತ್ತದೆ ಎಂಬುದೇ ಗೊತ್ತಾಗ್ತಾ ಇಲ್ಲ. ಆ ರೀತಿಯಲ್ಲಿ ಮಾಧ್ಯಮಗಳ ಕೋರ್ಟ್ ನಡೆಸಿದ್ವು.

ಒಂದು ವಿಷಯವನ್ನು ನಾನಿಲ್ಲಿ ಹೇಳಲೇ ಬೇಕು. ಕಳೆದ ಆರು ವರ್ಷಗಳಿಂದ ಈ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದೇನೆ. ನಾನು ಇಲ್ಲಿಯವರೆಗೂ ನನ್ನನ್ನು ನಾನು ಮುಸ್ಲೀಮನೆಂದು ಅಂದುಕೊಂಡಿಲ್ಲ. ಈ ಸಮಾಜದಲ್ಲಿ ಮುಸ್ಲೀಮರು ಮಾತ್ರ ದಮನಕ್ಕೊಳಗಾಗ್ತಿಲ್ಲ. ಆದಿವಾಸಿಗಳು, ದಲಿತರು ಈ ಸಮಾಜದ ಶೋಷಿತರಾಗಿದ್ದಾರೆ. ನಾನು ಇವರೆಲ್ಲರ ಪರವಾಗಿ ಹೋರಾಟ ಮಾಡಿದ್ದೇನೆ. ದಲಿತರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡಿದಷ್ಟೇ ಶೋಷಿತ ಮುಸ್ಲೀಮರ ಪರವಾಗಿ ಮಾತನಾಡಿದ್ದೇನೆ. ಆದರೆ ಕಳೆದ ಹತ್ತು ದಿನಗಳಿಂದ ನಾನು ಮುಸ್ಲೀಂ ಎಂದು ನನಗೆ ಗೊತ್ತಾಯಿತು. ಈ ಮಾಧ್ಯಮಗಳಿಗೆ ನಾಚಿಕೆಯಾಗಬೇಕು.

ನಾನು ಪಾಕಿಸ್ತಾನಿ ಏಂಜೆಂಟ್ ಅಂತ ಹೇಳಿದ್ರು. ಈ ಸಂಧರ್ಭದಲ್ಲಿ ನನಗೆ ಒಂದು ಶಾಹಿರಿ ನೆನಪಾಗ್ತಿದೆ.

ಹಿಂದೂಸ್ತಾನವೂ ನನ್ನದೇ,
ಪಾಕಿಸ್ತಾನವೂ ನನ್ನದೇ….
ಹಿಂದೂಸ್ತಾನ ಪಾಕಿಸ್ತಾನದಲ್ಲಿ ಅಮೇರಿಕಾ ಟೆಂಟ್ ಹಾಕಲು ಬಯಸುತ್ತಿದೆ.
ನೀವೆಲ್ಲರೂ ಆ ಅಮೇರಿಕಾದ ಏಜೆಂಟರು.

ನಮ್ಮ ಸರಕಾರ ಕೂಡಾ ಅಮೇರಿಕಾದ ಏಜೆಂಟರಂತೆ ವರ್ತಿಸುತ್ತಿದೆ. ಮಲ್ಟಿ ನ್ಯಾಶನಲ್ ಕಂಪನಿಗಳಿಗೆ ಜನ ಪೂರೈಸೋ ಕೆಲಸವನ್ನು ಸರಕಾರ ಮಾಡುತ್ತಿದೆ. ಅದಕ್ಕಾಗಿ ಶಿಕ್ಷಣವನ್ನು ಸರಕಾರ ಮಾರಿದೆ. ಅದನ್ನು ಪ್ರಶ್ನಿಸಿದ್ರೆ ನಾವು ದೇಶದ್ರೋಹಿಗಳಾಗ್ತಿವೆ. ಈಗ ನಾವು ನೀವೆಲ್ಲಾ ದೇಶದ್ರೋಹಿಗಳು. ಜನರನ್ನು ಅಗಾಧವಾಗಿ ಪ್ರೀತಿಸುವ ನಾವುಗಳು ದೇಶದ್ರೋಹಿಗಳು. ನಮ್ಮ ಪ್ರೀತಿಗೆ ಗಡಿಗಳು ಇಲ್ಲ. ಈ ದೇಶ ಮಾತ್ರ ಅಲ್ಲ. ಇಡೀನ ಜಗತ್ತಿನ ಜನರನ್ನು ನಾವು ಪ್ರೀತಿಸುತ್ತೇವೆ. ನಾನು ಈ ನ್ಯಾಶನಿಲಿಸಂ ಅನ್ನು ನಂಬೋದಿಲ್ಲ. ಭಾರತದ ನ್ಯಾಶನಲಿಸಂ ಮಾತ್ರವಲ್ಲ. ಅಮೇರಿಕಾ ಸೇರಿದಂತೆ ಯಾವುದೇ ದೇಶದ ನ್ಯಾಶನಲಿಸಂ ಅನ್ನು ನಾನು ಒಪ್ಪೋದಿಲ್ಲ. ಇಡೀ ವಿಶ್ವವೇ ನಮ್ಮದು. ವಿಶ್ವದ ಎಲ್ಲರೂ ನಮ್ಮವರು.

ನಾವು ಈ ಜನರಿಗೆಲ್ಲಾ ಹೆದರಬೇಕಿಲ್ಲ. ಅವರ ಬಳಿ ಬಹುಮತ ಇರಬಹುದು. ಮೀಡಿಯಾಗಳೂ, ಪೊಲೀಸರೂ ಇರಬಹುದು. ಆದರೆ ಅವರು ಹೆದರುಪುಕ್ಕಲರು. ಅವರು ನಮ್ಮ ಜನರಿಗೆ ಹೆದರುತ್ತಾರೆ. ಆವರು ನಮ್ಮ ಹೋರಾಟಗಳಿಗೆ ಹೆದರುತ್ತಾರೆ. ಅದಕ್ಕಾಗಿಯೇ ನೀವು ಜನರ ಪರವಾಗಿ ಯೋಚಿಸಲು ಶುರು ಮಾಡಿದ್ರೆ ನಿಮ್ಮನ್ನು ದೇಶದ್ರೋಹಿ ಎನ್ನುವ ಮೂಲಕ ಹೆದರಿಸಲಾಗ್ತಿದೆ.

ನಮ್ಮ ಜನರಿಗೆ ಹೆದರಿಯೇ ಈ ಜನರು ಹಲವು ವಿಶ್ವವಿದ್ಯಾನಿಲಯಗಳಿಗೆ ತೆರಳಿ ಗಲಭೆ ಎಬ್ಬಿಸಲು ಯಶಸ್ವಿಯಾದ್ರು. ಆದರೆ ಈ ವಿದ್ವವಿದ್ಯಾಲಯಕ್ಕೆ ಮಾತ್ರ ತಪ್ಪಾಗಿ ಬಂದ್ರಿ. ಇಲ್ಲಿ ನಿಮ್ಮ ಆಟ ನಡೆಯಲ್ಲ.

ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ರೋಹಿತ್ ವೆಮೂಲ ಹತ್ಯೆಯಾಯ್ತು. ಬನರಾಸ್ ವಿಶ್ವವಿದ್ಯಾನಿಲಯದಲ್ಲಿ ಸಂದೀಪ್ ಪಾಂಡೆ ಮೇಲೆ ದೌರ್ಜನ್ಯವಾಯಿತು. ಅ ಸಂಧರ್ಭದಲ್ಲಿ ನಡೆದ ಪ್ರತೀ ಹೋರಾಟದಲ್ಲಿ ಜೆ ಎನ್ ಯು ವಿದ್ಯಾರ್ಥಿಗಳು ಹೆಗಲು ಕೊಟ್ಟು ಸಾಥ್ ನೀಡಿದ್ದೇವೆ. ಅದು ನಮ್ಮ ಜವಾಬ್ದಾರಿ ಕೂಡಾ. ನೀವೇನಾದ್ರೂ ಜೆಎನ್ ಯು ವನ್ನು ಮುಗಿಸುತ್ತೇವೆ ಎಂದು ಒಂದಿರೋದಾದ್ರೆ ಒಂದಂತೂ ತಿಳಿದುಕೊಳ್ಳಿ. ಈ ಹಿಂದೆಯೂ ಈ ರೀತಿ ಯೋಚನೆ ಇಟ್ಟುಕೊಂಡು ತುಂಬಾ ಜನ ಇಲ್ಲಿಗೆ ಬಂದಿದ್ದರು. ಅಂತಹ ಹಲವು ಪ್ರಯತ್ನಗಳಾಗಿತ್ತು. ಅದನ್ನು ಅಷ್ಟೇ ನಾಜೂಕಾಗಿ ನಾವು ನಿಭಾಯಿಸಿ ನಾವು ಗೆದ್ದಿದ್ದೇವೆ.

ಬಹುಶಃ ನೀವು ಇಂದಿರಾಗಾಂಧಿಯನ್ನು ಮರೆತಿದ್ದೀರಿ. ತುರ್ತು ಪರಿಸ್ಥಿತಿ ನಂತರ ಅವರು ಜೆ ಎನ್ ಯು ಕಡೆಗೆ ಬಂದಿದ್ದರು. ನಾವು ಅವರನ್ನು ಬರಲು ಬಿಟ್ಟಿರಲಿಲ್ಲ. ನಂತರ ನೀವು ಮನಮೋಹನ ಸಿಂಗ್ ರನ್ನೂ ಮರೆತಿದ್ದೀರಿ. ದೇಶವನ್ನು ಮಾರಾಟ ಮಾಡಲು ಹೊರಟ ಮನಮೋಹನ ಸಿಂಗ್ ಇಲ್ಲಿಗೆ ಬಂದಾಗ ಅವರಿಗೂ ಕಪ್ಪು ಬಾವುಟ ತೋರಿಸಿದ್ವಿ. ನಂತರ ಚಿದಂಬರಂ ಬಂದ್ರು. ಆಗ ಇಲ್ಲಿನ ವಿದ್ಯಾರ್ಥಿಗಳು ಚಿದಂಬರಂ ಅನ್ನು ಸ್ವಾಗತ ಮಾಡ್ತಾರೆ ಅಂದುಕೊಂಡಿದ್ರು. ಆದರೆ ಇಲ್ಲಿನ ವಿದ್ಯಾರ್ಥಿಗಳು ಯಾರ ಜೊತೆ ಇರ್ತೀವಿ ಎಂಬುದನ್ನು ತೋರಿಸಿಕೊಟ್ಟರು. ಇಲ್ಲಿನ ವಿದ್ಯಾರ್ಥಿಗಳು ಯಾವತ್ತೂ ಶೋಷಿತ ಜನರ ಜೊತೆ ಇರ್ತಾರೆ. ಈಗಿನ ಸರಕಾರ ನಾವು ಹೆದರುತ್ತೇವೆಯೋ ಎಂದು ಪರೀಕ್ಷೆ ಮಾಡುತ್ತಿದೆ. ನಾವು ಹೆದರುವುದಿಲ್ಲ. ನಾವು ಸಂಘರ್ಷ ಮಾಡುತ್ತೇವೆ.

ಗೆಳೆಯರೇ,

ನಾವು ಈ ಜನಗಳಿಗೆಲ್ಲಾ ಹೆದರುವ ಅಗತ್ಯವೇ ಇಲ್ಲ. ಈ ಕ್ಯಾಂಪಸ್ಸಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಎಂಬ ವಾನರ ಸೇನೆ ಇದೆ. ಇಲ್ಲೂ ಕೂಡಾ ಹೈದರಾಬಾದ್ ನ ದತ್ತಾತ್ರೆಯ ರೀತಿಯವರು ಇದ್ದಾರೆ. ಆದರೆ ಇಲ್ಲಿ ಮತ್ತೊಬ್ಬ ರೋಹಿತನನ್ನು ನಾವು ನಿಮ್ಮ ಕೈಗೆ ಕೊಡೋದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ನಾವು ಸಂಘರ್ಷಕ್ಕೆ ಸಿದ್ದರಿದ್ದೇವೆ. ರೋಹಿತನ ಸಾವಿಗೆ ಉತ್ತರ ಕೊಡಲು ಸಿದ್ದರಿದ್ದೇವೆ.

ಅವರಿಗೆ ಜನರ ಬಳಿ ಹೋಗಿ ಸಂಘಟನೆ ಮಾಡಲು ಆಗುವುದಿಲ್ಲ. ಅವರೇನಿದ್ದರೂ ಮಧ್ಯಮಗಳನ್ನು ಬಳಸಿಕೊಂಡು ದೇಶಪ್ರೇಮ ಉಕ್ಕುವಂತೆ ಮಾಡುತ್ತಾರೆ. ಅಷ್ಟೊಂದು ಮಾಧ್ಯಮಗಳನ್ನು ಬಳಸಿಯೂ ಅವರು ಸಾವಿರ ಜನ ಸೇರಿಸಲು ಕಷ್ಟಪಟ್ಟರು. ಆದರೆ ಇಲ್ಲಿ ನಮ್ಮವರು 15 ಸಾವಿರಕ್ಕೂ ಮಿಕ್ಕಿ ಜಮಾವಣೆಗೊಂಡರು. ಆದರೆ ಚೀ ನ್ಯೂಸ್ ಮಾತ್ರ ಸುಳ್ಳೇ ಸುದ್ದಿ ಪ್ರಸಾರ ಮಾಡ್ತು. ನಾಚಿಗೆ ಇಲ್ಲದೆ ಸುಳ್ಳು ಹೇಳ್ತಾರೆ ಈ ಜನಗಳು.

ಜೆ ಎನ್ ಯು ನಲ್ಲಿ ಅವರು ನಡೆಸಿದ ದೌರ್ಜನ್ಯಕಾರಿ ತಂತ್ರಗಾರಿಕೆಯನ್ನು ಬೇರೆಡೆಯಲ್ಲೂ ಯಶಸ್ವಿಯಾಗಿ ಮಾಡಿದ್ದಾರೆ. ಈ ರೀತಿಯ ತಂತ್ರಗಾರಿಕೆ ನಮ್ಮಲ್ಲಿ ನಡೆಯಲ್ಲ. ಇದೇ ರೀತಿಯ ದೌರ್ಜನ್ಯವನ್ನು ಹೋಂಡಾ ಕಾರ್ಮಿಕರ ಮೇಲೆ, ಸೋನಿ ಸೋರಿ ಆದಿವಾಸಿ ಮೇಲೆ ಪ್ರಯೋಗಿಸಿದ್ರು. ಇವೆಲ್ಲವನ್ನೂ ನೋಡಿದ್ರೆ ಇದು ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಹೋರಾಟ ಮಾತ್ರವಲ್ಲ. ಈ ಹೋರಾಟವು ಇಡೀ ದೇಶದ ಹೋರಾಟವನ್ನು ಸಂಧಿಸಬೇಕು.

ಧನ್ಯವಾದಗಳು
ಇಂಕ್ವಿಲಾಬ್ ಜಿಂದಾಬಾದ್