Category Archives: ಜಗದೀಶ್ ಕೊಪ್ಪ

ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ – 20)


– ಡಾ.ಎನ್.ಜಗದೀಶ್ ಕೊಪ್ಪ


 

ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲೇ ತಂಗಿದ್ದ ಕಾರ್ಬೆಟ್ ಆ ದಿನ ರಾತ್ರಿ ನರಭಕ್ಷಕ ಮತ್ತೇ ಸುಳಿಯಬಹುದೆಂದು ಕಿಟಕಿಯ ಬಳಿ ಕಾದುಕುಳಿತರೂ ಏನು ಪ್ರಯೋಜನವಾಗಲಿಲ್ಲ, ನರಭಕ್ಷಕ ಚಿರತೆ ತನ್ನ ಮಾರ್ಗ ಬದಲಿಸಿ ಪಕ್ಕದ ಹಳ್ಳಿಯಲ್ಲಿ ಗರ್ಭಿಣಿ ಹೆಂಗಸೊಬ್ಬಳನ್ನು ಬಲಿತೆಗೆದುಕೊಂಡಿತ್ತು. ರಾತ್ರಿ ಊಟವಾದ ನಂತರ ಮನೆಯ ಹಿಂಬಾಗಿಲ ಬಳಿ ಪಾತ್ರೆ ತೊಳೆಯುತ್ತಿದ್ದ ಹೆಂಗಸಿನ ಮೇಲೆ ನರಭಕ್ಷಕ ದಾಳಿ ಮಾಡಿತು. ಆಕೆ ಕಿರುಚಿಕೊಳ್ಳುತ್ತಿದ್ದಂತೆ ಕುತ್ತಿಗೆಯನ್ನು ಬಾಯಲ್ಲಿ ಹಿಡಿದು ಆಕೆಯನ್ನು ಊರಿನ ಕಿರಿದಾದ ಓಣಿಯ ನಡುವೆ ಎಳೆದೊಯ್ದು ಹೊರವಲಯದ ಕಣಿವೆಯಲ್ಲಿ ಅರ್ಧ ತಿಂದು ಆಕೆಯ ಶವವನ್ನು ಅಲ್ಲಿಯೇ ಬಿಟ್ಟು ಹೋಗಿತ್ತು.

ಚಿರತೆಯ ಈ ಅನಿರೀಕ್ಷಿತ ದಾಳಿಗೆ ಬೆಚ್ಚಿದ ಗ್ರಾಮಸ್ಥರು ತಮ್ಮ ಮನೆಯ ಕಿಟಕಿ, ಬಾಗಿಲು ಮುಚ್ಚಿ ಹೊರಬರಲು ಹಿಂದೇಟು ಹಾಕಿದರು. ಮನೆಯೊಳಗೆ ಚುಟ್ಟಾ ಸೇದುತ್ತಾ ಕುಳಿತ್ತಿದ್ದ ಆಕೆಯ ಯಜಮಾನನಿಗೆ ನರಭಕ್ಷಕ ಚಿರತೆಯ ಆಕ್ರಮಣದ ಸಣ್ಣ ಸುಳಿವು ಸಿಕ್ಕಿರಲಿಲ್ಲ. ಪಾತ್ರೆ ತೊಳೆಯುತ್ತಿದ್ದ ಹೆಂಡತಿ ಕಿರುಚಿಕೊಂಡರೂ ಸಹ ಒಳಕ್ಕೆ ಬಾರದಿರುವುದರಿಂದ ಅನುಮಾನಗೊಂಡ ಅವನು ಮನೆಯ ಹಿಂಭಾಗಕ್ಕೆ ಬಂದಾಗ ನರಭಕ್ಷಕ ಆಕೆಯನ್ನು ಎಳೆದೊಯ್ಯುತ್ತಿರುವುದನ್ನು ಅಸಹಾಯಕನಾಗಿ ನೋಡುತ್ತಾ ನಿಲ್ಲಬೇಕಾಯಿತು. ಮಾರನೇ ದಿನ ಬೆಳಗ್ಗೆ ವಿಷಯ ತಿಳಿಯುತ್ತಿದ್ದಂತೆ, ಪ್ರವಾಸಿ ಮಂದಿರದಿಂದ ಸುಮಾರು ನಾಲ್ಕು ಮೈಲಿ ದೂರದ ಪರ್ವತದ ಮೇಲಿದ್ದ ಹಳ್ಳಿಯ ಆಕೆಯ ಮನೆಗೆ ಬಂದ ಕಾರ್ಬೆಟ್ ಆಕೆಯ ರಕ್ತದ ಕಲೆಗಳ ಜಾಡು ಹಿಡಿದು ಚಿರತೆ ಸಾಗಿರುವ ದಾರಿಯನ್ನು ಹಿಂಬಾಲಿಸಿದ. ಅದು ಹೆಂಗಸಿನ ಶವದ ಜೊತೆ ನಾಲ್ಕು ಅಡಿ ಎತ್ತರದ ಗೋಡೆ ಹಾರಿ ಹೋಗಿರುವುದು ಅವನ ಗಮನಕ್ಕೆ ಬಂತು. ಇದು ಬಲಿಷ್ಟ ದೇಹದ ವಯಸ್ಸಾದ ನರಭಕ್ಷಕ ಎಂದು ಆ ಕೂಡಲೇ ಕಾರ್ಬೆಟ್ ನಿರ್ಧರಿಸಿದ.

ಊರಾಚೆಗಿನ ಕಣಿವೆಯೊಂದರ ಬಳಿ ಆ ಹೆಂಗಸಿನ ಶವವನ್ನು ಇಟ್ಟುಕೊಂಡು ಮುಕ್ಕಾಲು ಭಾಗ ತಿಂದು ಮುಗಿಸಿದ ನರಭಕ್ಷಕ ಉಳಿದ ಭಾಗವನ್ನು ಅಲ್ಲಿಯೇ ಉಳಿಸಿ ಹೋಗಿತ್ತು. ಮಹಿಳೆಯ ಶವವಿದ್ದ ಸುತ್ತ ಮುತ್ತಲಿನ ಜಾಗವನ್ನೊಮ್ಮೆ ಕಾರ್ಬೆಟ್ ಅವಲೋಕಿಸಿದ. ಶವವಿದ್ದ ಜಾಗದಿಂದ 40 ಅಡಿ ದೂರದಲ್ಲಿ ಇಳಿಜಾರಿನಲ್ಲಿ ಒಂದು ಮರವಿತ್ತು ಜೊತೆಗೆ ಮರದ ಸುತ್ತ ಕಟ್ಟೆಯಾಕಾರದಲ್ಲಿ ಎತ್ತರದಷ್ಟು ಕಲ್ಲುಗಳನ್ನು ಜೋಡಿಸಿ ಅದರ ಮೇಲೆ ಸುಮಾರು ಆರು ಅಡಿ ಉದ್ದ-ಅಗಲದ ಅಟ್ಟಣಿಗೆಯನ್ನು ನಿರ್ಮಿಸಲಾಗಿತ್ತು. ದನಕರು ಮೇಕೆ ಕಾಯುವ ಹಳ್ಳಿಗರು ಮರದ ನೆರಳಿನಲ್ಲಿ ಕೂರುವುದಕ್ಕೆ ಈ ವ್ಯವಸ್ಥೆ ಮಾಡಿಕೊಂಡಿದ್ದರು.ರಾತ್ರಿ ಮರದ ಮೇಲೆ ಕುಳಿತು ನರಭಕ್ಷಕ ಚಿರತೆಯನ್ನು ಬೇಟೆಯಾಡಲು ಇದು ಸೂಕ್ತವಾದ ಜಾಗ ಎಂದು ಕಾರ್ಬೆಟ್ ನಿರ್ಧರಿಸಿದ.

ಸಂಜೆಯಾಗುತ್ತಿದ್ದಂತೆ ತನ್ನ ಸೇವಕರು, ಗ್ರಾಮಸ್ಥರ ಜೊತೆ ಅಲ್ಲಿಗೆ ಬಂದ ಕಾರ್ಬೆಟ್ ಇದೇ ಮೊದಲ ಬಾರಿಗೆ ಚಿರತೆಯನ್ನು ಬೇಟೆಯಾಡಲು ವಿನೂತನ ಪ್ರಯೋಗಕ್ಕೆ ಮುಂದಾದ. ಬೆಳಿಗ್ಗೆ ಶವ ವೀಕ್ಷಣೆಗೆ ಬಂದಿದ್ದಾಗ ಚಿರತೆ ಶವವನ್ನು ತಿಂದು ಕಣಿವೆಯಲ್ಲಿದ್ದ ಕಾಲುದಾರಿಯಲ್ಲಿ ತೆರಳಿತ್ತು. ಮತ್ತೇ ಇದೇ ದಾರಿಯಲ್ಲಿ ಬರಬಹುದೆಂದು ಊಹಿಸಿದ ಕಾರ್ಬೆಟ್, ಗ್ರಾಮಸ್ಥರು ತಂದಿದ್ದ ಎರಡು ಬಿದರಿನ ಬೊಂಬುಗಳನ್ನು ಆ ಕಾಲುದಾರಿಯ ಎರಡು ಬದಿಗಳಲ್ಲಿ ನೆಡಸಿದ. ತಾನು ತಂದಿದ್ದ ಮೂರು ಬಂದೂಕಗಳ ಪೈಕಿ ಒಂದನ್ನು ಬೊಂಬಿಗೆ ಕಟ್ಟಿ ದಾರಿಗೆ ಅಡ್ಡಲಾಗಿ ಮೀನು ಶಿಕಾರಿಗೆ ಬಳಸುವ ಪ್ಲಾಸ್ಟಿಕ್ ದಾರವನ್ನು ಕಟ್ಟಿದ. ದಾರದ ಇನ್ನೊಂದು ತುದಿಯನ್ನು ಬಂದೂಕದ ಒತ್ತುಗುಂಡಿಗೆ ಕಟ್ಟಿದ. ನರಭಕ್ಷಕ ಕಾಲುದಾರಿಯಲ್ಲಿ ಬಂದು ದಾರವನ್ನು ಸೋಕಿಸಿದರೆ ಸಾಕು ಬಂದೂಕಿನಿಂದ ಗುಂಡು ಸಿಡಿಯುವಂತೆ ವ್ಯವಸ್ಥೆ ಮಾಡಿದ. ಇಂತಹದ್ದೇ ಇನ್ನೊಂದು ವ್ಯವಸ್ಥೆಯನ್ನು ಶವವಿದ್ದ ಹಿಂಬದಿಯ ಭಾಗದಲ್ಲೂ ನಿರ್ಮಿಸಿದ. ನರಭಕ್ಷಕ ಒಂದು ದಾರಿಯಲ್ಲಿ ತಪ್ಪಿಸಿಕೊಂಡರೆ, ಅದು ಇನ್ನೋಂದು ದಾರಿಯಲ್ಲಾದರೂ ಗುಂಡಿಗೆ ಬಲಿಯಾಗಬೇಕು ಇದು ಕಾರ್ಬೆಟ್‌ನ ಆಲೋಚನೆಯಾಗಿತ್ತು.

ಸ್ಥಳದಲ್ಲಿ ಕತ್ತಲು ಆವರಿಸುತ್ತಿದ್ದಂತೆ ಎಲ್ಲರನ್ನು ವಾಪಸ್ ಹಳ್ಳಿಗೆ ಕಳಿಸಿದ ಕಾರ್ಬೆಟ್, ತನ್ನ ಸಹಾಯಕರನ್ನು ಆ ರಾತ್ರಿ ಹಳ್ಳಿಯ ಮುಖಂಡನ ಮನೆಯಲ್ಲಿ ಮಲಗಲು ಹೇಳಿದ. ರಾತ್ರಿಯ ಶಿಕಾರಿಗಾಗಿ ತಾನು ತಂದಿದ್ದ, ಬಿಸ್ಕೇಟ್, ನೀರು, ಸಿಗರೇಟು, ಬಂದೂಕ, ಒಂದು ಪಿಸ್ತೂಲ್, ಚಾಕು, ಎಲ್ಲವನ್ನು ತೆಗೆದುಕೊಂಡು ಮರವೇರಿ ಕುಳಿತ. ಕತ್ತಲು ಆವರಿಸುವ ಸಮಯದಲ್ಲಿ ನಿರ್ಮಲವಾಗಿದ್ದ ಆಕಾಶದಲ್ಲಿ ನಕ್ಷತ್ರಗಳು ಗೋಚರಿಸುತ್ತಿದ್ದವು. ಕ್ರಮೇಣ ಮೋಡಗಳು ಆವರಿಸಿಕೊಂಡು ಕತ್ತಲು ಹೆಪ್ಪುಗಟ್ಟಿತು. ಮುಂಜ್ರಾಗತಾ ಕ್ರಮವಾಗಿ ಕಾರ್ಬೆಟ್ ಮಹಿಳೆಯ ಶವದ ಬಳಿ ಬಿಳಿಯ ಬಣ್ಣದ ಒಂದು ಬೆಣಚು ಕಲ್ಲನ್ನು ಇರಿಸಿದ್ದ. ಚಿರತೆ ಶವದ ಬಳಿ ಬಂದರೆ, ಕತ್ತಲೆಯಲ್ಲಿ ಗುರಿ ಇಡಲು ಬಿಳಿಯ ಬಣ್ಣದ ಕಲ್ಲು ಇರಲಿ ಎಂಬುದು ಅವನ ಮುಂದಾಲೋಚನೆಯಾಗಿತ್ತು. ರಾತ್ರಿ ಒಂಬತ್ತರ ಸಮಯಕ್ಕೆ ಸರಿಯಾಗಿ ಹಿಮ ಪರ್ವತದಿಂದ ಶೀತಗಾಳಿ ಬೀಸಲು ಪ್ರಾರಂಭಿಸುತ್ತಿದ್ದಂತೆ ಆಗಸದಿಂದ ದಪ್ಪನೆಯ ಮಳೆ ಹನಿ ಸಹ ಬೀಳತೊಡಗಿತು.

ಇದೇ ಸಮಯಕ್ಕೆ ಸರಿಯಾಗಿ ಕಣಿವೆಯ ಮೇಲ್ಭಾಗದಿಂದ ಕಲ್ಲುಗಳು ಕೆಳಕ್ಕೆ ಉರುಳತೊಡಗಿ ನರಭಕ್ಷಕನ ಆಗಮನದ ಸೂಚನೆ ನೀಡತೊಡಗಿದವು. ದೂರದಲ್ಲಿ ಜಿಂಕೆಗಳ ಚೀತ್ಕಾರ, ಮಂಗಗಳ ಕಿರುಚುವಿಕೆ, ಪಕ್ಷಿಗಳ ಅಸಹಜವಾದ ಧ್ವನಿ ಇವೆಲ್ಲವೂ ಚಿರತೆಯ ಆಗಮನವನ್ನು ಕಾರ್ಬೆಟ್‌ಗೆ ಧೃಡಪಡಿಸಿದವು. ಬಿರುಸಿನ ಮಳೆಯ ಶಬ್ಧದಿಂದಾಗಿ ಏನೂ ಕಾಣುವಂತಿರಲಿಲ್ಲ, ಕೇಳುವಂತಿರಲಿಲ್ಲ. ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆ ಕಾರ್ಬೆಟ್ ಕುಳಿತ್ತಿದ್ದ ಮರದ ಕೆಳಗಿನ ಚಪ್ಪರದ ಅಡಿಯಲ್ಲಿ ಶಬ್ದವಾದ ಹಾಗೆ ಭಾಸವಾಯ್ತು. ಕುತೂಹಲದಿಂದ ಗಮನಿಸಿದಾಗ, ಆ ನರಭಕ್ಷಕ ಚಿರತೆ ಮಳೆಯಿಂದ ತಪ್ಪಿಸಿಕೊಳ್ಳಲು ಚಪ್ಪರವನ್ನೇ ಆಶ್ರಯಿಸಿತ್ತು. ಚಪ್ಪರದ ಮೇಲೆ ಹುಲ್ಲನ್ನು ದಟ್ಟವಾಗಿ ಹಾಸಿದ್ದ ಪರಿಣಾಮ ಅದು ಅವನಿಗೆ ಕಾಣುವಂತೆ ಇರಲಿಲ್ಲ. ಹತ್ತಿರದಿಂದ ಹೊಡೆದು ಉರುಳಿಸುವ ಅವಕಾಶ ತಪ್ಪಿಹೋದುದಕ್ಕೆ ಕಾರ್ಬೆಟ್ ಕೈ ಕೈ ಹಿಸುಕಿಕೊಳ್ಳುವಂತಾಯಿತು. ಮಳೆ ನಿಂತ ನಂತರ agave ನಿಧಾನವಾಗಿ ಹೆಂಗಸಿನ ಶವವಿದ್ದ ಜಾಗದ ಕಡೆ ನಡೆದು ಹೋಗುತ್ತಿರುವುದು ನೆಲದಲ್ಲಿ ಹರಿಯುತ್ತಿದ್ದ ಮಳೆಯ ನೀರಿನಲ್ಲಿ ಅದರ ಹೆಜ್ಜೆಯ ಶಬ್ದದಿಂದ ಖಚಿತಪಡಿಸಿಕೊಂಡ. ತಾನು ಶವದ ಬಳಿ ಇಟ್ಟಿದ್ದ ಬಿಳಿಯ ಕಲ್ಲು ಕಾರ್ಬೆಟ್‌ಗೆ ಕಾಣದಾಯ್ತು. ಹೆಂಗಸಿನ ಶವದ ಕೆಳಗೆ ಮಳೆಯ ನೀರು ರಭಸದಿಂದ ಹರಿಯುತ್ತಿದ್ದ ಕಾರಣ ಚಿರತೆ ಶವವನ್ನು ಸ್ವಲ್ಪ ದೂರಕ್ಕೆ ಎಳೆದಿತ್ತು. ಇದರಿಂದಾಗಿ, ಕಲ್ಲು ಶವದ ಕೆಳಕ್ಕೆ ಸೇರಿಹೋದ ಕಾರಣ, ಕಾರ್ಬೆಟ್ ನರಭಕ್ಷಕನಿಗೆ ಗುರಿ ಇಡುವುದು ಕಷ್ಟವಾಯ್ತು.

ಆ ಕಗ್ಗತ್ತಲಿನಲ್ಲಿ ಅಂದಾಜಿನ ಮೇಲೆ ಚಿರತೆ ಶವದ ಮೂಳೆ ಅಗಿಯುವ ಶಬ್ಧವನ್ನು ಆಲಿಸುತ್ತಾ ದಿಕ್ಕನ್ನು ಗುರುತಿಸತೊಡಗಿದ. ಮತ್ತೇ ಮಳೆ ಹನಿ ಪ್ರಾರಂಭವಾದ ಹಿನ್ನಲೆಯಲ್ಲಿ ಅದು ಶವವನ್ನು ತಿನ್ನುವುದನ್ನು ನಿಲ್ಲಿಸಿ, ಪೊದೆಯಲ್ಲಿ ಅಡಗಿಕೊಂಡಿತು. ಹೀಗೆ ಸತತ ನಾಲ್ಕು ಗಂಟೆಗಳ ಕಾಲ, ಮಳೆಯ ಕಾರಣ, ಚಿರತೆ ಬರುವುದು, ಹೋಗುವುದು ಮಾಡುತ್ತಲೇ ಇತ್ತು. ಕಾರ್ಬೆಟ್ ಮರಕ್ಕೆ ಕಟ್ಟಿದ್ದ ಕೋವಿಯ ದಾರವನ್ನು ಸಹ ಅದು ತುಳಿಯಲೇ ಇಲ್ಲ. ಮಳೆ ನಿಂತ ಬಳಿಕ ಆಕಾಶ ಸ್ವಲ್ಪ ಮಟ್ಟಿಗೆ ಶುಭ್ರವಾಯಿತು. ಹೆಂಗಸಿನ ಶವದ ಬಳಿ ಇರಿಸಿದ್ದ ಕಲ್ಲು ಕಾರ್ಬೆಟ್ ಕಣ್ಣಿಗೆ ಅಸೃಷ್ಟವಾಗಿ ಗೋಚರಿಸತೊಡಗಿತು. ಮತ್ತೆ ನರಭಕ್ಷಕ ಶವದ ಬಳಿ ಆಗಮಿಸುತ್ತಿರುದನ್ನು ಗಮನಿಸಿದ ಅವನು ಇನ್ನು ಕಾಯುವುದರಲ್ಲಿ ಅರ್ಥವಿಲ್ಲ ಎನಿಸಿ ಕಲ್ಲನ್ನು ಗುರಿಯಾಗಿರಿಸಿಕೊಂಡು ಗುಂಡು ಹಾರಿಸಿಬಿಟ್ಟ. ಅದರ ಪರಿಣಾಮವನ್ನು ತಿಳಿಯಬೇಕಾದರೆ, ಅವನು ಬೆಳಕು ಹರಿಯುವವರೆಗೆ ಕಾಯಲೇಬೇಕಿತ್ತು.

ಬೆಳಗಿನ ಜಾವ ಕಾರ್ಬೆಟ್ ಮರದಿಂದ ಕೆಳಕ್ಕೆ ಇಳಿದು ನೋಡಿದಾಗ ಅವನಿಗೆ ತೀವ್ರ ನಿರಾಶೆಯಾಯಿತು. ಕೂದಲೆಳೆಯ ಅಂತರದಲ್ಲಿ ನರಭಕ್ಷಕ ಗುಂಡಿನಿಂದ ತಪ್ಪಿಸಿಕೊಂಡಿತ್ತು. ಅದರ ಕುತ್ತಿಗೆಯನ್ನು ಸವರಿಕೊಂಡು ಹೋಗಿದ್ದ ಗುಂಡು ನೆಲಕ್ಕೆ ಬಡಿದಿತ್ತು. ಚಿರತೆಯ ಕುತ್ತಿಗೆ ಭಾಗದ ಕೂದಲುಗಳು ನೆಲದ ಮೇಲೆ ಹರಡಿದ್ದವು. ಕಾರ್ಬೆಟ್ ತೀವ್ರ ನಿರಾಶನಾಗಿ ಮರಕ್ಕೆ ಕಟ್ಟಿದ್ದ ಕೋವಿಗಳನ್ನು ಬಿಚ್ಚಿಕೊಂಡು ಪ್ರವಾಸಿ ಮಂದಿರದತ್ತ ಹೆಜ್ಜೆ ಹಾಕಿದನು. ಚಿರತೆಗೆ ಬಲಿಯಾದ ಹೆಂಗಸಿನ ಪತಿ ಆಕೆಯ ಅಳಿದುಳಿದ ಶವದ ಭಾಗಗಳನ್ನು ಅಂತಿಮ ಸಂಸ್ಕಾರಕ್ಕಾಗಿ ಆಯ್ದುಕೊಂಡನು. ಆ ಹಳ್ಳಿಯ ಜನಕ್ಕೆ ನಿರಾಶೆಯಾದರೂ ಕಾರ್ಬೆಟ್ ಬಗ್ಗೆ ಅಗಾಧ ಭರವಸೆ ಇತ್ತು. ಒಂದಲ್ಲ ಒಂದು ದಿನ ಈ ಬಿಳಿಯ ಸಾಹೇಬ ನರಭಕ್ಷಕನಿಂದ ನಮ್ಮನ್ನು ಕಾಪಾಡುತ್ತಾನೆ ಎಂದು ಅವರು ನಂಬಿದ್ದರು. ರಾತ್ರಿಯಲ್ಲಿ ಒಂಟಿಯಾಗಿ ಬಂದೂಕ ಹಿಡಿದು ತಿರುಗುವ ಕಾರ್ಬೆಟ್‌ಗೆ ಅಗೋಚರವಾದ ದೈವಿಶಕ್ತಿ ಇದೆ ಎಂದು ಅವರೆಲ್ಲಾ ನಂಬಿದ್ದರು. ಈ ಕಾರಣಕ್ಕಾಗಿ ಘರ್ವಾಲ್ ಪ್ರಾಂತ್ಯದ ಯಾವುದೇ ಹಳ್ಳಿಗೆ ಕಾರ್ಬೆಟ್ ಹೋದರೂ ಸಹ ಅವನನ್ನು ಅತ್ಯಂತ ಆದರದಿಂದ ಬರಮಾಡಿಕೊಂಡು ಗೌರವಿಸುತ್ತಿದ್ದರು. ಅಮಾಯಕ. ಮುಗ್ಧ ಹಳ್ಳಿಗರ ಪ್ರೀತಿಗೆ ಕಾರ್ಬೆಟ್ ಮನಸೋತ್ತಿದ್ದ. ಇವರ ಪ್ರೀತಿಗೆ ಕಾಣಿಕೆಯಾಗಿ, ನರಭಕ್ಷಕನನ್ನು ಬೇಟೆಯಾಡಲೇ ಬೇಕು ಎಂಬ ದೃಢ ನಿರ್ಧಾರವೊಂದು ಅವನ ಮನದಲ್ಲಿ ಮನೆ ಮಾಡಿತು.

 ( ಮುಂದುವರಿಯುವುದು)

ಎಂದೂ ಮುಗಿಯದ ಯುದ್ಧ (ನಕ್ಸಲ್ ಕಥನ-6)


– ಡಾ.ಎನ್. ಜಗದೀಶ್ ಕೊಪ್ಪ  


 

ಪ್ರಯೋಗ ಮತ್ತು ಸಿದ್ಧಾಂತ ಹಾಗೂ ಸಮಕಾಲೀನ ಸಮಸ್ಯೆಗಳ ವಿಶ್ಲೇಷಣೆ ಜೊತೆ ಜೊತೆಗೆ ಸ್ವಯಂ ವಿಮರ್ಶೆಯನ್ನು ಗುರಿಯಾಗಿಟ್ಟುಕೊಂಡು ರಚಿತವಾದ ನೂತನ ಪಕ್ಷವನ್ನು ಪಕ್ಷದ ಫೈರ್ ಬ್ರಾಂಡ್ ನಾಯಕನೆಂದೇ ಹೆಸರಾಗಿದ್ದ ಕನುಸನ್ಯಾಲ್ ನೇತೃತ್ವದಲ್ಲಿ ಘೋಷಿಸಲಾಯಿತು. ಪಕ್ಷದ ಕಾರ್ಯಕರ್ತರ ಮೊದಲ ರ್‍ಯಾಲಿಯನ್ನು 1969 ರ ಮೇ ಒಂದನೇ ತಾರೀಖು ಕೊಲ್ಕತ್ತ ನಗರದಲ್ಲಿ ಆಯೋಜಿಸಲಾಗಿತ್ತು. ಮಾವೋತ್ಸೆ ತುಂಗನ ವಿಚಾರಧಾರೆಗಳಿಂದ ಪ್ರಣೀತವಾಗಿದ್ದ ನೂತನ ಕಮ್ಯೂನಿಷ್ಟ್ ಪಕ್ಷ, ಇನ್ನು ಮುಂದೆ ಭಾರತದಲ್ಲಿ ಹೊಸ ಸೂರ್ಯ ಮತ್ತು ಚಂದ್ರ ಉದಯಿಸಲಿದ್ದಾರೆ ಎಂದು ಹೆಮ್ಮೆಯಿಂದ ಘೋಷಿಸಿಕೊಂಡಿತ್ತು. ದುರಂತವೆಂದರೆ, ಪಕ್ಷದ ಮೊದಲ ರ್‍ಯಾಲಿ ಗಲಭೆಯಲ್ಲಿ ಆರಂಭಗೊಂಡು, ಹಿಂಸಾಚಾರದ ನಡುವೆ ಮುಕ್ತಾಯಗೊಂಡಿತು. ಪಕ್ಷದ ಕಾರ್ಯಕರ್ತರು ಮತ್ತು ಆಡಳಿತಾರೂಢ ಪಕ್ಷಗಳಾದ ಕಾಂಗ್ರೇಸ್ ಮತ್ತು ಕಮ್ಯೂನಿಷ್ಟ್ ಪಕ್ಷಗಳ ಕಾರ್ಯಕರ್ತರು ರ್‍ಯಾಲಿಯ ಮೇಲೆ ಕಲ್ಲು ಇಟ್ಟಿಗೆ ಮತ್ತು ಪೆಟ್ರೊಲ್ ಬಾಂಬ್ ತೂರುವುದರ ಮೂಲಕ ಹೊಸ ಪಕ್ಷದ ರ್‍ಯಾಲಿಯನ್ನು ವಿಘ್ನಗೊಳಿಸಿದರು. ಗಲಭೆಯಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇವರಲ್ಲಿ ಐವತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾದವು.

ಹೀಗೆ ಹಿಂಸೆಯಲ್ಲಿ ಆರಂಭಗೊಂಡ ನೂತನ ಕಮ್ಯೂನಿಷ್ಟ್ ಪಕ್ಷದ ನಾಯಕರ ನಡುವೆಯೂ ಹಲವು ಬಗೆಯ ಭಿನ್ನಾಭಿಪ್ರಾಯಗಳು ಆರಂಭದಿಂದಲೂ ಇದ್ದವು. ಇವೆಲ್ಲವೂ ಈ ಸಂದರ್ಭದಲ್ಲಿ ಸ್ಪೋಟಗೊಂಡವು. ಹಲವು ಟ್ರೇಡ್ ಯೂನಿಯನ್ ಸಂಘಟನೆಗಳ ನಾಯಕನಾಗಿದ್ದ ಪರಿಮಳ್‌ದಾಸ್ ಗುಪ್ತಾರವರನ್ನು ಯಾವೊಂದು ಸಂದರ್ಭದಲ್ಲೂ ಪಕ್ಷ ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಗೆರಿಲ್ಲಾ ಯುದ್ದ ತಂತ್ರಕ್ಕೆ ದಾಸ್ ಗುಪ್ತಾ ಆಕ್ಷೇಪ ವ್ಯಕ್ತಪಡಿಸಿದರು. ಚೆಗೇವಾರನ ಈ ಗೆರಿಲ್ಲಾ ಯುದ್ಧ ತಂತ್ರ ಎಲ್ಲಾ ರಾಷ್ಡ್ರಗಳಿಗೆ ಅನ್ವಯವಾಗುವುದಿಲ್ಲ ಎಂಬುದು ಗುಪ್ತಾರವರ ನಿಲುವಾಗಿತ್ತು.  ಭಾರತದಂತಹ ಸಂದರ್ಭದಲ್ಲಿ ಗುಡ್ಡಗಾಡು ಇರುವ ಪ್ರದೇಶಗಳನ್ನು ಹೊರತು ಪಡಿಸಿದರೆ, ಬೇರೆಲ್ಲೂ ಇದು ಯಶಸ್ವಿಯಾಗುವುದಿಲ್ಲ ಎಂಬುದು ಹಲವು ನಾಯಕರ ನಂಬಿಕೆಯಾಗಿತ್ತು.

ಕೊಲ್ಕತ್ತ ನಗರದಲ್ಲಿ ನಡೆದ ರ್‍ಯಾಲಿಯ ಅಧ್ಯಕ್ಷತೆವಹಿಸಿದ್ದ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಅಸಿತ್‌ಸೇನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿ, ಪಕ್ಷ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ನನ್ನನ್ನು ಸಂಪೂರ್ಣವಾಗಿ ಕತ್ತಲಲ್ಲಿ ಇಟ್ಟಿತು ಎಂದು ಆರೋಪಿಸಿದರು. ಹೀಗೆ ಹಲವು ಭಿನ್ನಾಭಿಪ್ರಾಯಗಳ ನಡುವೆ ತೀವ್ರಗಾಮಿ ಧೋರಣೆಗಳನ್ನು ಹೊಂದಿದ ನೂತನ ಪಕ್ಷ ಕೊನೆಗೂ ಅಸ್ತಿತ್ವ ತಾಳಿತು.

ಚಾರುಮುಜಂದಾರ್‌ನ ಬೆಂಕಿಯುಂಡೆಯಂತಹ ಮಾತುಗಳು ಪಕ್ಷಕ್ಕೆ ಹಲವಾರು ಬಿಸಿರಕ್ತದ ಯುವಕರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. 1971 ರ ವೇಳೆಗೆ ಈಶಾನ್ಯ ಭಾರತದ ರಾಜ್ಯಗಳು, ಗೋವಾ, ಪಾಂಡಿಚೇರಿ, ಅಂಡಮಾನ್ ನಿಕೋಬಾರ್, ಕೇಂದ್ರಾಡಳಿತ ಪ್ರದೇಶಗಳನ್ನು ಹೊರತುಪಡಿಸಿ. ದೇಶದ ಬಹುತೇಕ ರಾಜ್ಯಗಳಲ್ಲಿ ಮಾವೋವಾದಿ ಕಮ್ಯೂನಿಷ್ಟ್ ಪಕ್ಷ ನೆಲೆಯೂರಿತು. ವರ್ಗ ವ್ಯವಸ್ಥೆಯನ್ನು ಪೋಷಿಸಿಕೊಂಡು ಬರುತ್ತಿರುವ ಧನಧಾಹಿ ಶ್ರೀಮಂತರು ಮತ್ತು ಜಮೀನ್ದಾರರ ಬಿಸಿ ನೆತ್ತರಿನಲ್ಲಿ ಕೈ ಅದ್ದದೆ ಇರುವ ವ್ಯಕ್ತಿ ನಮ್ಮ ಪಕ್ಷದ ಕಾರ್ಯಕರ್ತನಾಗಿ ಇರಲು ಅನರ್ಹ ಎಂಬ ಚಾರು ಮುಜಂದಾರನ ವಿವಾದಾತ್ಮಕ ಹೇಳಿಕೆ ಹಲವು ಆಕ್ಷಪೇಣೆಗಳ ನಡುವೆಯೂ ಕಾರ್ಯಕರ್ತರಿಗೆ ಸ್ಪೂರ್ತಿಯ ಮಾತಾಗಿ ಪರಿಣಮಿಸಿತು.

ಆಂಧ್ರ, ಒರಿಸ್ಸಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ  ಕೃಷಿಕರನ್ನು ಮತ್ತು ಕೂಲಿಗಾರರನ್ನು ಶೋಷಿಸಿಕೊಂಡು ಬಂದಿದ್ದ ಜಮೀನ್ದಾರರು, ಮಾವೋವಾದಿ ಕಮ್ಯೂನಿಷ್ಟರ ಹಿಂಸೆ ಮತ್ತು ಭಯಕ್ಕೆ ಹೆದರಿ ಇರುವ ಆಸ್ತಿಯನ್ನು ಬಿಟ್ಟು ನಗರಗಳಿಗೆ ಪಲಾಯನಗೈದರು. ಅವರ ಗೂಂಡಾಪಡೆ ಹೇಳಹೆಸರಿಲ್ಲದಂತೆ ನಾಶವಾಯಿತು. ಮಾವೋವಾದಿಗಳು ಶಾಖೆ ತೆರದ ಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ, ವರ್ಗವ್ಯವಸ್ಥೆ, ಇದ್ದಕ್ಕಿದ್ದಂತೆ ಕರಗತೊಡಗಿತು. ಶತಮಾನಗಳ ಕಾಲ ವ್ಯವಸ್ಥೆಯ ಕಪಿಮುಷ್ಟಿಯ ಕೈಯಲ್ಲಿ ನಲುಗಿ ಹೋಗಿದ್ದ ಬಡವರು, ಶ್ರಮಿಕರು, ನೆಮ್ಮದಿಯ ಬದುಕು ಕಟ್ಟಿಕೊಂಡು ಬದುಕಲು ಸಾಧ್ಯವಾಯಿತು. ಇಂತಹ ವಾತಾವರಣ ಪರೋಕ್ಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ, ಗ್ರಾಮಾಂತರ ಪ್ರದೇಶಗಳಲ್ಲಿ ಮಾವೋವಾದಿಗಳ ಬಗ್ಗೆ  ರೈತರು, ಕೂಲಿಕಾರ್ಮಿಕರು, ಆದಿವಾಸಿಗಳು, ಅನುಕಂಪ. ಪ್ರೀತಿ ಹುಟ್ಟಲು ಕಾರಣವಾಯಿತು.

ಹಳ್ಳಿಗಳಲ್ಲಿ ಅಧಿಕ ಬಡ್ಡಿಗೆ ಹಣ ನೀಡಿ, ಬಡವರನ್ನು ಶೋಷಿಸುತ್ತಿದ್ದ ಲೇವಾದೇವಿಗಾರರು, ಪೊಲೀಸ್ ಮಾಹಿತಿದಾರರನ್ನು  ಹಿಡಿದು ಗಲ್ಲಿಗೇರಿಸುವ ಮೂಲಕ ಒಂದು ರೀತಿಯಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಮಾವೋವಾದಿಗಳು ನಿರ್ಮಿಸಿದರು. ಘೋಷಿತ ಯದ್ಧದಲ್ಲಿ ಶಾಸ್ತಸ್ತ್ರಗಳು ಅತ್ಯಗತ್ಯ ಎಂಬ ಮಾವೋನ ಮಾತುಗಳನ್ನು ಅಕ್ಷರಶಃ ಪ್ರಯೋಗಕ್ಕೆ ಇಳಿಸಿದರು. ಅಲ್ಲದೆ, ಬಿಲ್ಲು, ಬಾಣ, ಭರ್ಜಿ ಮುಂತಾದ ಸಾಂಪ್ರದಾಯಿಕ ಆಯುಧಗಳನ್ನು ತೈಜಿಸಿ, ಬಂದೂಕುಗಳನ್ನು ಕೈಗೆತ್ತಿಕೊಳ್ಳುವುದರ ಮೂಲಕ ಭಾರತ ಸರ್ಕಾರವೂ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಇವರು ಹೊಸ ಸವಾಲೊಂದನ್ನು ಒಡ್ಡಿದರು.

ಚಾರು ಮುಜಂದಾರ್ ನೇತೃತ್ವದ ಹೋರಾಟವನ್ನು ಚೀನಾದ ಕಮ್ಯುನಿಷ್ಟ್ ಪಕ್ಷದ ಮುಖವಾಣಿ ಪತ್ರಿಕೆಯಾದ “ದ ಲಿಬರೇಷನ್” ಪತ್ರಿಕೆ ಮುಕ್ತ ಕಂಠದಿಂದ ಹೊಗಳುವುವುದರ ಮತ್ತಷ್ಟು ಹುರಿದುಂಬಿಸಿತು. ಚಾರು ಮುಜಂದಾರ್ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಗೆರಿಲ್ಲಾ ಯುದ್ಧತಂತ್ರಕ್ಕೆ ಕಾರ್ಯಕರ್ತರನ್ನು ಸಜ್ಜುಗೊಳಿಸಿದನು. ಭೂರಹಿತ ಬಡ ಗೇಣಿದಾರರು, ಕೃಷಿಕೂಲಿ ಕಾರ್ಮಿಕರನ್ನು ಗುರಿಯಾಗಿರಿಸಿಕೊಂಡು ಸಂಘಟನೆಗೆ ಚಾರು ಮತ್ತು ಅವನ ಸಂಗಡಿಗರು ಮುಂದಾದರು.

ಭೂಮಾಲೀಕರ ದಬ್ಬಾಳಿಕೆ ಅತಿಯಾಗಿದ್ದ ಪ್ರದೇಶಗಳಲ್ಲಿ ಪಕ್ಷದ ಸಂಘಟನೆಗೆ ನಿರೀಕ್ಷೆ ಮೀರಿ ಒಲವು ವ್ಯಕ್ತವಾಯಿತು. ಇದಕ್ಕಾಗಿ ನಾಲ್ಕು ಅಂಶದ ಕಾರ್ಯಕ್ರಮವನ್ನು ರೂಪಿಸಲಾಯಿತು. ಅವುಗಳೆಂದರೆ.

  1. ಭೂಮಾಲೀಕರ ಒಡೆತನ ಮತ್ತು ದಬ್ಬಾಳಿಕೆ ಇರುವ ಪ್ರದೇಶಗಳನ್ನು ಮುಕ್ತಗೊಳಿಸಿ, ಅವುಗಳನ್ನು ಸಣ್ಣ ಹಿಡುವಳಿದಾರರ ಸುಪರ್ದಿಗೆವಹಿಸುವುದು.
  2. ಕೆಂಪು ಭಯೋತ್ಪಾದನೆ ಮೂಲಕ (ಹಿಂಸೆ) ಜಮೀನ್ದಾರರನ್ನು ಮಣಿಸಿ, ನೆಮ್ಮದಿಯ ವಾತಾವರಣ ಸೃಷ್ಟಿ ಮಾಡುವುದು.
  3. ಗ್ರಾಮಾಂತರ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಚಳವಳಿಯ ನಾಯಕತ್ವವನ್ನು ಮಾವೋವಾದಿ ಕಮ್ಯುನಿಷ್ಟ್ ಪಕ್ಷದ ನಾಯಕರಿಂದ ಸ್ಥಳೀಯ ರೈತರು ಮತ್ತು ಕೂಲಿ ಕಾರ್ಮಿಕರಿಗೆ ವರ್ಗಾಯಿಸುವುದು.
  4. ಜನಸಾಮಾನ್ಯನನ್ನು, ಜಮೀನ್ದಾರರು, ಬಡ್ಡಿ ವ್ಯಾಪಾರದ ಲೇವಾದೇವಿದಾರರು ಇವರ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಿ ಭಯದಿಂದ ಮುಕ್ತರಾಗಿ ಬದುಕುವಂತೆ ಪ್ರೇರೇಪಿಸುವುದು.

ಚಾರು ಮತ್ತು ಸಂಗಡಿಗರ ಈ ಕಾರ್ಯಚರಣೆ ಕೆಲವು ವರ್ಗಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯಿತಾದರೂ, ಅದೊಂದು ಸಾಮಾಜಿಕ ಚಳವಳಿಯಾಗಿ ಎಲ್ಲ ವರ್ಗವನ್ನು ಒಳಗೊಳ್ಳುವಲ್ಲಿ ವಿಫಲವಾಯಿತು. ಒಂದು ವರ್ಷದ ನಂತರ ಸ್ವತಃ ಚಾರು ಮುಜಂದಾರ್ ಇದನ್ನು ಒಪ್ಪಿಕೊಂಡನು. ಮಾವೋತ್ಸೆ ತುಂಗನ ವಿಚಾರಗಳನ್ನು ಅನಕ್ಷರಸ್ತ ಕೂಲಿಕಾರ್ಮಿಕರಿಗೆ ಆದಿವಾಸಿಗಳಿಗೆ ತಲುಪಿಸುವಲ್ಲಿ ಪಕ್ಷ ಸೋತಿದೆ ಎಂದು ಸ್ವಷ್ಟೀಕರಣ ನೀಡಿದನು. 1970 ರ ಮೇ ತಿಂಗಳಿನಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾರತ ಸರ್ಕಾರದ ನೀತಿ ಹಾಗೂ ಧೋರಣೆಗಳನ್ನು ಖಂಡಿಸಿ, ಭಾರತವು ಗಳಿಸಿರುವುದು ನಾಚಿಕೆಗೇಡಿನ ಸ್ವಾತಂತ್ರ್ಯಎಂದು ಬಣ್ಣಿಸಿ. ಹೊಸ ಸ್ವಾತಂತ್ರ್ಯವನ್ನು ಗಳಿಸುವ ನಿಟ್ಟಿನಲ್ಲಿ ಪಕ್ಷಕ್ಕೆ ಹೊಸದಾಗಿ ಕೆಲವು ರಾಜಕೀಯ ಗುರಿಗಳನ್ನು ಸೇರಿಸಲಾಯಿತು. ಇದಕ್ಕಾಗಿ ಪ್ರಜಾಸಮರ (peoples War) ಯುದ್ಧ ಘೋಷಿಸಲಾಯಿತು. ಪಕ್ಷದ ಈ ತೀರ್ಮಾನ ಹಲವು ನಾಯಕರಿಗೆ ಒಪ್ಪಿಗೆಯಾಗಲಿಲ್ಲ. ಇವರುಗಳನ್ನು ಹಲವು ಗೊಡ್ಡು ವಿಚಾರಗಳಿಗೆ ಜೋತುಬಿದ್ದ ಕೇಂದ್ರೀಕೃತ ವ್ಯಕ್ತಿಗಳು ಎಂದು ಟೀಕಿಸಿದ ಚಾರು ಮುಜಂದಾರ್, ಸಮಾಜದಲ್ಲಿ ತಾಂಡವವಾಡುತ್ತಿರುವ ವರ್ಗವ್ಯವಸ್ಥೆಯ ವಿರುದ್ಧ ಹೋರಾಟವನ್ನು ಎಲ್ಲಾ ನೆಲೆಗಳಿಗೆ ವಿಸ್ತರಿಸಬೇಕೆಂದು ಕಾರ್ಯಕರ್ತರಿಗೆ ಕರೆನೀಡಿದ. ಅವನ ಸಂದೇಶ, ಮುಂದಿನ ದಿನಗಳಲ್ಲಿ  ಆಂಧ್ರ, ಶ್ರೀಕಾಕುಳಂ, ಪಶ್ಚಿಮ ಬಂಗಾಳದ, ದೇಬ್ರ ಮತ್ತು ಗೋಪಿಬಲ್ಲಬಪುರ ಜಿಲ್ಲೆ, ಬಿಹಾರದ ಮುರ್ಶರಾಯ್ ಜಿಲ್ಲೆ, ಉತ್ತರಪ್ರದೇಶದ ಲಕ್ಷ್ಮೀಪುರ ಜಿಲ್ಲೆಯ ಪುಲಿಯ ಎಂಬಲ್ಲಿ ಅಗ್ನಿಪರ್ವತದಂತೆ ಸ್ಪೋಟಗೊಂಡಿತು.

(ಮುಂದುವರೆಯುವುದು)

ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ – 19)


– ಡಾ.ಎನ್.ಜಗದೀಶ್ ಕೊಪ್ಪ


 

ಜಿಮ್ ಕಾರ್ಬೆಟ್‌ಗೆ ರುದ್ರಪ್ರಯಾಗದ ನರಭಕ್ಷಕ ಚಿರತೆಯನ್ನು ಬೇಟೆಯಾಡಿ ಕೊಲ್ಲಬೇಕು ಎಂದು ಅನಿಸಿದರೂ ಕೂಡ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲಿದ್ದ ಕಾರಣ ಅವನು ಈ ಬಗ್ಗೆ ಮನಸ್ಸು ಮಾಡಿರಲಿಲ್ಲ. ಆ ವೇಳೆಗಾಗಲೇ ಐವತ್ತು ವರ್ಷವನ್ನು ದಾಟಿದ್ದ ಕಾರ್ಬೆಟ್ ಮೊದಲಿನಂತೆ, ನರಭಕ್ಷಕ ಹುಲಿ ಅಥವಾ ಚಿರತೆಗಳನ್ನು ಬೆನ್ನಟ್ಟಿ ವಾರಗಟ್ಟಲೇ ಸರಿಯಾದ ಊಟ ತಿಂಡಿಯಿಲ್ಲದೆ, ರಾತ್ರಿಗಳನ್ನು ಮರದ ಮೇಲೆ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಈ ಬಾರಿ ಸರ್ಕಾರದ ಪರವಾಗಿ ರುದ್ರಪ್ರಯಾಗದ ಚಿರತೆಯನ್ನು ಬೇಟೆಯಾಡಲು ಮನವಿ ಪತ್ರ ಬರೆದ, ಜಿಲ್ಲಾಧಿಕಾರಿ ವಿಲಿಯಮ್ ಇಬ್ಸ್‌ಟನ್ ಕಾರ್ಬೆಟ್‌ನ ಆತ್ಮೀಯ ಗೆಳೆಯನಾಗಿದ್ದ.

ಇಬ್ಸ್‌ಟನ್ ಘರ್ವಾಲ್ ಪ್ರಾಂತ್ಯದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ತನ್ನ ಪತ್ನಿ ಸಮೇತನಾಗಿ ಅಲ್ಲಿಗೆ ಬಂದಿದ್ದ. ಇಂಗ್ಲೆಂಡ್‌ನ ಕೇಂಬ್ರಿಡ್ಜ್ ಕಾಲೇಜಿನ ಪದವೀಧರನಾದ ಆತ 1909 ರಲ್ಲಿ ಭಾರತೀಯ ನಾಗರೀಕ ಸೇವೆಗೆ ಆಯ್ಕೆಯಾಗಿ, ಭಾರತಕ್ಕೆ ಬಂದಿದ್ದ. ವಯಸ್ಸಿನಲ್ಲಿ ಕಾರ್ಬೆಟ್‌‍ಗಿಂತ ಹತ್ತುವರ್ಷ ಚಿಕ್ಕವನಾದರೂ ಆತನಿಗಿದ್ದ, ಮೀನು ಶಿಕಾರಿ, ಕುದುರೆ ಸವಾರಿ, ಮತ್ತು ಬಿಡುವಾದಾಗ ಕಾಡು ಅಲೆಯುವ ಹವ್ಯಾಸ ಇವುಗಳಿಂದ ಕಾರ್ಬೆಟ್‌ಗೆ ತೀರಾ ಹತ್ತಿರದ ಸ್ನೇಹಿತನಾಗಿದ್ದ. ಅಧಿಕಾರಿಗಳಲ್ಲಿ ವಿಂಧಮ್‌ನನ್ನು ಹೊರತುಪಡಿಸಿ, ಇಬ್ಸ್‌ಟನ್‌ನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಕಾರ್ಬೆಟ್ ಅವನನ್ನು ಪ್ರೀತಿಯಿಂದ ಇಬ್ಬಿ ಎಂದು ಕರೆಯುತ್ತಿದ್ದ. ಈತ ಕೂಡ, ವಿಂದಮ್ ರೀತಿಯಲ್ಲಿ ಭಾರತೀಯರನ್ನು ತುಂಬು ಹೃದಯದಿಂದ ಕಾಣುತ್ತಿದ್ದುದ್ದು ಕಾರ್ಬೆಟ್‌ಗೆ ಆತನ ಬಗ್ಗೆ  ಪ್ರೀತಿ ಹೆಚ್ಚಾಗಲು ಕಾರಣವಾಗಿತ್ತು.

ಇಂತಹ ಸನ್ನೀವೇಶದಲ್ಲಿ ಇಬ್ಸ್‌ಟನ್ ಮನವಿಯನ್ನು ನಿರಾಕರಿಸಲಾರದೆ, ಚಿರತೆಯ ಬೇಟೆಗೆ ಹೊರಡಲು ಕಾರ್ಬೆಟ್ ನಿರ್ಧರಿಸಿದ. ಈ ಬಾರಿ ವಯಸ್ಸಿನ ಕಾರಣದಿಂದಾಗಿ ಬೇಟೆಗೆ ಹೋಗಲು ಅವನ ಸಹೋದರಿ ಮ್ಯಾಗಿ ಕೂಡ ಆಕ್ಷೇಪ ವ್ಯಕ್ತಪಡಿಸಿದಳು. ಅವಳನ್ನು ಸಮಾದಾನ ಪಡಿಸಿ. ಆರು ಮಂದಿ ಘರವಾಲ್ ಜನಾಂಗದ ಸೇವಕರು, ಹಾಗೂ ಬೇಟೆಯ ಸಂದರ್ಭದಲ್ಲಿ ತನ್ನ ಜೊತೆಯಿರಲು ನೆಚ್ಚಿನ ಭಂಟ ಮಾಧೂಸಿಂಗ್ ಜೊತೆ ಕಾರ್ಬೆಟ್ ಘರ್‍ವಾಲ್‌ನತ್ತ ಹೊರಟ. ಈ ಬಾರಿ ಜಿಲ್ಲಾಧಿಕಾರಿ ಇಬ್ಸ್‌‌‌ಟನ್ ಪ್ರಯಾಣಕ್ಕಾಗಿ ಕುದುರೆ ವ್ಯವಸ್ಥೆ ಮಾಡಿದ್ದರಿಂದ ಕಾರ್ಬೆಟ್ ಮತ್ತು ಅವನ ಸಂಗಡಿಗರ ಪ್ರಯಾಣ ತ್ರಾಸದಾಯಕವೆನಿಸಲಿಲ್ಲ.

ಕಾರ್ಬೆಟ್ ತನ್ನ ಸೇವಕರ ಜೊತೆ ಕುದುರೆ ಮತ್ತು ಕಾಲ್ನಡಿಗೆ ಮೂಲಕ ರಾಣಿಖೇತ್, ಅದ್‌ಬಾದ್ರಿ ಮತ್ತು ಕರ್ಣಪ್ರಯಾಗದ ಮೂಲಕ ರುದ್ರಪ್ರಯಾಗವನ್ನು ತಲುಪುವುದಕ್ಕೆ ಹತ್ತುದಿನಗಳು ಹಿಡಿಯಿತು. ಆ ವೇಳೆಗಾಗಲೇ ನರಭಕ್ಷಕ ಚಿರತೆ ಮತ್ತೊಬ್ಬನನ್ನು ಬಲಿತೆಗೆದುಕೊಂಡಿತ್ತು. ಕಮೇರ ಎಂಬ ಹಳ್ಳಿಯಲ್ಲಿ ಬದರಿನಾಥ್ ಯಾತ್ರಿಕರಿಗಾಗಿ ಹೊಟೇಲ್ ನಡೆಸುತ್ತಿದ್ದ ಪಂಡಿತನೊಬ್ಬನ ಮನೆಯಿಂದ ರಾತ್ರಿ ವೇಳೆ ಮಲಗಿದ್ದ ಓರ್ವ ಸಾಧುವನ್ನು ನರಭಕ್ಷಕ ಎಳೆದೊಯ್ದು ಕೊಂದುಹಾಕಿತ್ತು. ಆದಿನ ಸಂಜೆ ಇಪ್ಪತ್ತುಕ್ಕೂ ಹೆಚ್ಚು ಮಂದಿ ಇದ್ದ ಯಾತ್ರಿಕರು ಮಳೆಯ ಕಾರಣ ಪ್ರಯಾಣ ಮುಂದುವರಿಸಲಾರದೆ, ಪಂಡಿತನಲ್ಲಿ ವಸತಿ ವ್ಯವಸ್ಥೆಗೆ ಆಶ್ರಯ ಕೋರಿದ್ದರು. ಗುಡ್ಡಗಳ ಒರಟು ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸಿ ಸುಮಾರು ಸುತ್ತಲೂ ಎಂಟು ಅಡಿ ಎತ್ತರದ ಗೋಡೆ ನಿರ್ಮಾಣ ಮಾಡಿ ತಗಡಿನ ಶೀಟ್ ಹೊದಿಸಿದ್ದ ಅವನ ಹೊಟೇಲ್ ಹಿಂಭಾಗದ ಕೋಣೆಯನ್ನು ಪಂಡಿತ ಆ ರಾತ್ರಿ ಯಾತ್ರಿಕರಿಗೆ ತಂಗಲು ನೀಡಿದ್ದ. ಕಿಟಕಿ ಬಾಗಿಲುಗಳಿಲ್ಲದ ಆ ಕೋಣೆಗೆ ಹಲವೆಡೆ ಬೆಳಕು ಬರಲು ಗೋಡೆಯಲ್ಲಿ ದೊಡ್ಡ ಮಟ್ಟದ ರಂಧ್ರಗಳನ್ನು ಹಾಗೇ ಬಿಡಲಾಗಿತ್ತು. ಬಾಗಿಲಿಗೆ ತಗಡಿನ ಒಂದು ಹೊದಿಕೆಯನ್ನು ಮುಚ್ಚಿ ಅದು ಗಾಳಿಗೆ ಬೀಳದಂತೆ ಕಲ್ಲನ್ನು ಅದಕ್ಕೆ ಒರಗಿಸಿ ಇಡಲಾಗಿತ್ತು. ನರಭಕ್ಷಕ ಆ ರಾತ್ರಿ ಯಾವ ಸುಳಿವು ಸಿಗದಂತೆ ಬಾಗಿಲಿನ ಕಲ್ಲನ್ನು ಪಕ್ಕಕ್ಕೆ ಸರಿಸಿ, ಒಳಗೆ ಪ್ರವೇಶ ಮಾಡಿ, ಕೋಣೆಯೊಳಗೆ ಮಲಗಿದ್ದ ಇಪ್ಪತ್ತು ಜನರ ಪೈಕಿ ಸಾಧುವಿನ ಕುತ್ತಿಗೆಗೆ ಬಾಯಿ ಹಾಕಿ ಅವನಿಂದ ಯಾವುದೇ ಶಬ್ಧ ಬರದಂತೆ ಮಾಡಿ ಎತ್ತೊಯ್ದಿತ್ತು. ಹೋಟೇಲ್‌ನ ಅನತೀ ದೂರದಲ್ಲಿ ಹರಿಯುತ್ತಿದ್ದ ನದಿ ತೀರದ ಬಳಿ ಆತನ ದೇಹವನ್ನು ಅರೆ ಬರೆ ತಿಂದು ಬಿಸಾಡಿ ಹೋಗಿತ್ತು.

ಈ ಘಟನೆಯಿಂದ ಎಚ್ಚೆತ್ತು ಕೊಂಡ ಜಿಲ್ಲಾಧಿಕಾರಿ ಇಬ್ಸ್‌ಟನ್ ಚಿರತೆ ಇಲ್ಲೆ ಕಾಡಿನಲ್ಲಿರಬಹುದೆಂದು ಊಹಿಸಿ ಆದಿನ ತೂಗು ಸೇತುವೆಯನ್ನು ಬಂದ್ ಮಾಡಿಸಿ ಎರಡು ಸಾವಿರ ಜನರೊಂದಿಗೆ ಸುತ್ತಮುತ್ತಲಿನ ಕಾಡನ್ನು ಜಾಲಾಡಿದ. ಸ್ವತಃ ನುರಿತ ಶಿಕಾರಿಕಾರನಾದ ಇಬ್ಸ್‌ಟನ್ ನರಭಕ್ಷಕ ಸೇತುವೆ ದಾಟಿ ಆಚೆಕಡೆಗಿನ ಕಾಡು ಸೇರಬಾರದು ಎಂದು ಮುನ್ನೆಚ್ಚರಿಕೆ ವಹಿಸಿದ್ದ. ಆದರೆ, ಅವನು ಒಂದು ವಿಷಯದಲ್ಲಿ ಎಡವಿದ್ದ. ಅದೆನೇಂದರೆ,ಸಾಮಾನ್ಯವಾಗಿ ಹಸಿವಾದಾಗ ಬೇಟೆಯಾಡುವ ನರಭಕ್ಷಕ ಚಿರತೆ ಅಥವಾ ಹುಲಿಗಳು ತಮ್ಮ ಬೇಟೆಯನ್ನು ದೂರದ ಕಾಡಿಗೆ ಒಯ್ದು ಗುಪ್ತ ಸ್ಥಳವೊಂದರಲ್ಲಿ ಇಟ್ಟು ಎರಡರಿಂದ ಮೂರು ದಿನ ತಿನ್ನುವುದು ವಾಡಿಕೆ ಅವುಗಳು ತಾವು ಬೇಟೆಯಾಡಿದ ಪ್ರಾಣಿಗಳನ್ನು ಅಲ್ಲೆ ತಿಂದು ಬಿಸಾಡಿ ಹೋಗಿದ್ದರೆ, ಅವುಗಳು ಆ ಸ್ಥಳಕ್ಕೆ ಮತ್ತೇ ವಾಪಸ್ ಬರುವುದಿಲ್ಲ ಎಂದೇ ಅರ್ಥ. ಇಲ್ಲಿ ಕೂಡ ಚಿರತೆ ಆ ರಾತ್ರಿಯೇ ಸಾಧುವಿನ ಕಳೆಬರವನ್ನು ಅರ್ಧತಿಂದು, ತೂಗುಸೇತುವೆಯನ್ನು ದಾಟಿ ಬಹು ದೂರದವರೆಗೆ ಸಾಗಿಬಿಟ್ಟಿತ್ತು.

ಕಾರ್ಬೆಟ್ ರುದ್ರಪ್ರಯಾಗದ ತಲುಪಿದ ನಂತರ ಅವನಿಗೆ ನರಭಕ್ಷಕ ಬೇಟೆಯಾಡುತ್ತಿರುವ ಪ್ರದೇಶಗಳ ನಕ್ಷೆಯ ಹೊರತಾಗಿ ಬೇರೆ ಯಾವುದೇ ಮಾಹಿತಿ ದೊರಕಲಿಲ್ಲ. ನಕ್ಷೆಯನ್ನು ಮುಂದೆ ಹರಡಿಕೊಂಡು ಜನವಸತಿ ಪ್ರದೇಶಗಳನ್ನು ಕಾರ್ಬೆಟ್ ಗುರುತು ಮಾಡತೊಡಗಿದ. ಅಲಕಾನದಿಗೆ ಎರಡು ತೂಗು ಸೇತುವೆಗಳಿದ್ದದನ್ನು ಅವನು ಗಮನಿಸಿದ. ನದಿಯ ಒಂದು ಬದಿಯಲ್ಲಿ ಯಾವುದೇ ಹಳ್ಳಿಗಳು ಇಲ್ಲದ ಕಾರಣ ಚಿರತೆ ತನ್ನ ಬೇಟೆಗಾಗಿ ಸೇತುವೆ ದಾಟಿ ಜನರಿರುವ ವಸತಿ ಪ್ರದೇಶಕ್ಕೆ ಬರುತ್ತಿದೆ ಎಂದು ಊಹಿಸಿದ. ಅವನ ಈ ಊಹೆಗೆ ಚಿಟ್ಪಾವಲ್ ಹಳ್ಳಿ ಸಮೀಪದ ತೂಗು ಸೇತುವೆಯ ಸಮೀಪದ ಪಂಡಿತನ ಮನೆಯಲ್ಲಿ ಸಾಧು ನರಭಕ್ಷನಿಗೆ ಬಲಿಯಾದದ್ದು ಬಲವಾದ ಕಾರಣ ವಾಗಿತ್ತು. ಈ ಕಾರಣಕ್ಕಾಗಿ ಚಿರತೆ ಜನವಸತಿ ಪ್ರದೇಶದ ಅಂಚಿನ ಕಾಡಿನಲ್ಲೇ ಇರಬೇಕೆಂದು ಅಂದಾಜಿಸಿದ. ಇದಕ್ಕಾ ಗೋಲಬಾರಿ ಎಂಬ ಹಳ್ಳಿ ಸಮೀಪದ ಹೊರವಲಯದ ಕಾಡಿನ ನಡುವೆ ಇದ್ದ ಪ್ರವಾಸಿ ಬಂಗಲೆಯಲ್ಲಿ ತನ್ನ ಸೇವಕರೊಡನೆ ಉಳಿಯಲು ನಿರ್ಧರಿಸಿದ.

ಚಿರತೆಯ ಜಾಡು ಕಂಡು ಹಿಡಿಯುವ ನಿಟ್ಟಿನಲ್ಲಿ ಎರಡು ಮೇಕೆಗಳನ್ನು ಕೊಂಡು ತಂದು ಅವುಗಳಲ್ಲಿ ಒಂದನ್ನು ದಟ್ಟ ಕಾಡಿನ ನಡುವೆ, ಮತ್ತೊಂದನ್ನು ಗೋಲಬಾರಿ ಹಳ್ಳಿಗೆ ಕಾಡಿನಿಂದ ಸಂಪರ್ಕ ಕಲ್ಪಿಸುವ ಹಾದಿಯಲ್ಲಿ ಮರಗಳಿಗೆ ಕಟ್ಟಿ ಹಾಕಿ ಬಂದ. ಮಾರನೇ ದಿನ ಮೇಕೆ ಕಟ್ಟಿ ಹಾಕಿದ ಸ್ಥಳಗಳಿಗೆ ಹೋಗಿ ನೋಡಿದಾಗ. ಕಾಡಿನಲ್ಲಿ ಕಟ್ಟಿ ಹಾಕಿದ್ದ ಮೇಕೆ ಚಿರತೆಗೆ ಬಲಿಯಾಗಿತ್ತು. ಆದರೆ, ಅದನ್ನು ತಿನ್ನದೇ ಹಾಗೆಯೇ ಉಳಿಸಿ ಹೋಗಿರುವುದು ಕಾರ್ಬೆಟ್‌ನ ಜಿಜ್ಙಾಸೆಗೆ ಕಾರಣವಾಯಿತು. ಬೇರೆ ಯಾವುದಾದರೂ ಪ್ರಾಣಿ ದಾಳಿ ಮಾಡಿರಬಹುದೆ? ಎಂಬ ಪ್ರಶ್ನೆಯೂ ಒಮ್ಮೆ ಅವನ ತಲೆಯಲ್ಲಿ ಸುಳಿದು ಹೋಯಿತು. ಆದರೂ ಪರೀಕ್ಷಿಸಿ ಬಿಡೋಣ ಎಂಬಂತೆ ಮೇಕೆಯ ಕಳೇಬರದ ಸ್ಥಳದಿಂದ ಸುಮಾರು ಐವತ್ತು ಅಡಿ ದೂರದಲ್ಲಿ ಮಧ್ಯಾಹದಿಂದ ಸಂಜೆ ಮಬ್ಬು ಕತ್ತಲೆ ಕವಿಯುವವರೆಗೂ ಬಂದೂಕ ಹಿಡಿದು ಕಾದು ಕುಳಿತ. ಆದರೆ, ಮೇಕೆಯ ಕಳೇಬರದ ಹತ್ತಿರಕ್ಕೆಯಾವ ಪ್ರಾಣಿಯೂ ಸುಳಿಯಲಿಲ್ಲ. ಕತ್ತಲು ಆವರಿಸುತಿದ್ದಂತೆ ಇಲ್ಲಿರುವುದು ಅಪಾಯ ಎಂದು ಭಾವಿಸಿದ ಕಾರ್ಬೆಟ್, ಪ್ರವಾಸಿ ಬಂಗಲೆಯತ್ತ ಹಿಂತಿರುಗಿದ. ಕಾಡಿನಲ್ಲಿ ಅದರಲ್ಲೂ ವಿಶೇಷವಾಗಿ ಅಪಾಯಕಾರಿ ಪ್ರಾಣಿಗಳು ಇರುವ ಪ್ರದೇಶದಲ್ಲಿ ಎಡಬಲದ ಪ್ರದೇಶಗಳನ್ನು ಗಮನಿಸದೇ ನೇರವಾಗಿ ನಡೆಯುದು ಅಪಾಯಕಾರಿ ಎಂಬುದನ್ನು ಕಾರ್ಬೆಟ್ ಅರಿತ್ತಿದ್ದ. ಸಾಮಾನ್ಯವಾಗಿ ಹುಲಿ, ಚಿರತೆಗಳು ಹಿಂಬದಿಯಿಂದ ಆಕ್ರಮಣ ಮಾಡುವುದನ್ನು ಅರಿತ್ತಿದ್ದ ಅವನು ಪ್ರತಿ ಎರಡು ಮೂರು ಹೆಜ್ಜೆಗೊಮ್ಮೇ ನಿಂತು ಹಿಂತಿರುಗಿ ನೋಡುತ್ತಿದ್ದ. ನಡೆಯುವಾಗ ಕೂಡ ಎಡ ಬಲ ಗಮನ ಹರಿಸಿ ತನ್ನ ಇಡೀ ಶರೀರವನ್ನು ಕಣ್ಣು ಮತ್ತು ಕಿವಿಯಾಗಿಸಿಕೊಳ್ಳುತ್ತಿದ್ದ. ಅದೃಷ್ಟವೆಂದರೆ, ಅವನ ಈ ಎಚ್ಚರಿಕೆಯೇ ಅಂದು ಅವನನ್ನು ನರಭಕ್ಷಕ ಚಿರತೆಯ ದಾಳಿಯಿಂದ ಪಾರು ಮಾಡಿತ್ತು. ಆದಿನ ರಾತ್ರಿ ಪ್ರವಾಸಿ ಬಂಗಲೆಯಲ್ಲಿ ಮಲಗಿ ಬೆಳಿಗ್ಗೆ ಎದ್ದು ನೋಡುವಾಗ, ಚಿರತೆ, ದಾರಿಯುದ್ದಕ್ಕೂ ಕಾರ್ಬೆಟ್‌‍ನನ್ನು ಹಿಂಬಾಲಿಸಿಕೊಂಡು ಪ್ರವಾಸಿ ಮಂದಿರದವರೆಗೂ ಬಂದು ಇಡೀ ಕಟ್ಟಡವನ್ನು ಎರಡು ಮೂರು ಬಾರಿ ಸುತ್ತು ಹಾಕಿ ವಾಪಸ್ ಹೋಗಿರುವುದನ್ನು ಅದರ ಹೆಜ್ಜೆ ಗುರುತುಗಳು ಹೇಳುತ್ತಿದ್ದವು. ಚಿರತೆಯ ಹೆಜ್ಜೆ ಗುರುತು ಗಮನಿಸಿದ ಕಾರ್ಬೆಟ್ ಇದೊಂದು ಯವ್ವನ ದಾಟಿದ ವಯಸ್ಸಾದ ನರಭಕ್ಷಕ ಚಿರತೆ ಎಂಬುದನ್ನು ಖಚಿತಪಡಿಸಿಕೊಂಡ.

  (ಮುಂದುವರಿಯುವುದು)

 

ಎಂದೂ ಮುಗಿಯದ ಯುದ್ಧ (ನಕ್ಸಲ್ ಕಥನ-5)


– ಡಾ.ಎನ್.ಜಗದೀಶ್ ಕೊಪ್ಪ


 

ಅನಿರೀಕ್ಷಿತವಾಗಿ ಜರುಗಿದ ನಕ್ಸಲ್‌ಬಾರಿ ಹಿಂಸಾಚಾರದ ಘಟನೆ ಕಮ್ಯೂನಿಷ್ಟ್ ಪಕ್ಷವನ್ನು ತನ್ನ ಸಿದ್ಧಾಂತ ಹಾಗೂ ಪ್ರಣಾಳಿಕೆ ಕುರಿತಾದ ವಿಷಯಗಳ ಬಗೆಗಿನ ಆತ್ಮಾವಲೋಕನಕ್ಕೆ ಪ್ರೇರೇಪಿಸಿತು. ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟ್ ಪಕ್ಷಕ್ಕೆ ಸರ್ಕಾರ ರಚಿಸಲು ಸ್ಪಷ್ಟ ಬಹುಮತ ಬಾರದ ಕಾರಣ, ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಇದ್ದ ಕಾರಣಕ್ಕಾಗಿ, ಕಾಂಗ್ರೆಸ್ ಪಕ್ಷಕ್ಕೆ ತನ್ನ ನಿಜವಾದ ನಿಲುವುಗಳನ್ನು ಮನವರಿಕೆ ಮಾಡಿಕೊಡುವ ಜವಬ್ದಾರಿ ಕೂಡ ಕಮ್ಯೂನಿಷ್ಟ್ ಪಕ್ಷದ ಮೇಲೆ ಇತ್ತು. ಇವೆಲ್ಲಕ್ಕಿಂತ ಹೆಚ್ಚಾಗಿ ಹಿಂಸಾಚಾರ ಕುರಿತಂತೆ ಪಕ್ಷದ ಕಾರ್ಯಕರ್ತರಲ್ಲಿ ಹಲವು ಅನುಮಾನಗಳು, ಗೊಂದಲಗಳು ಸೃಷ್ಟಿಯಾಗ ತೊಡಗಿದವು. ಈ ಎಲ್ಲಾ ಗೊಂದಲಗಳಿಂದ ಹೊರಬಂದು ಪಕ್ಷದ ಭವಿಷ್ಯದ ನಿಲುವುಗಳನ್ನು ಸ್ಪಷ್ಟಪಡಿಸಬೇಕಾದ ಅನಿವಾರ್ಯ ಸ್ಥಿತಿಗೆ ನಾಯಕರು ಸಿಲುಕಿದರು ಏಕೆಂದರೆ, ಪಕ್ಷದ ಕಾರ್ಯಕರ್ತರ ಮೇಲೆ ನಾಯಕತ್ವದ ಹಿಡಿತವಿಲ್ಲ ಎಂಬುದನ್ನು ಈ ಘಟನೆ ಅನಾವರಣಗೊಳಿಸಿತ್ತು. ಜೊತೆಗೆ ಡಾರ್ಜಲಿಂಗ್ ಜಿಲ್ಲೆ ಮತ್ತು ಸಿಲಿಗುರಿ ಪ್ರಾಂತ್ಯದ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದು ಮೈತ್ರಿ ಸರ್ಕಾರದ ಅಸಮರ್ಥತೆಯನ್ನು ಸಹ ಎತ್ತಿ ತೋರಿಸಿತ್ತು.

ಪಕ್ಷದಲ್ಲಿ ಶಿಸ್ತು ಹಾಗೂ ತತ್ವ ಸಿದ್ಧಾಂತಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ 1967 ರ ಆಗಸ್ಟ್ 17 ಮತ್ತು 18 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ತಮಿಳುನಾಡಿನ ಮಧುರೈ ನಗರದಲ್ಲಿ ಕರೆಯಲಾಯಿತು. ಪಕ್ಷದಲ್ಲಿ ಬಾಹ್ಯಶಕ್ತಿಗಳು ಮಧ್ಯಪ್ರವೇಶ ಮಾಡಿ ಕಾರ್ಯಕರ್ತರನ್ನು ಹಾದಿ ತಪ್ಪಿಸುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ಅಂತಹ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಯಕರಿಂದ ಒತ್ತಾಯ ಕೇಳಿ ಬಂದ ಹಿನ್ನಲೆಯಲ್ಲಿ ಸಭೆ ಕರೆಯಲಾಯಿತು. ಕೇಂದ್ರ ಸಮಿತಿಯ ಸಭೆಯಲ್ಲಿ, ಪಕ್ಷದ ಕೆಲವರು, ಬಾಹ್ಯ ರಾಷ್ಟ್ರಗಳ (ಚೀನಾ) ಪ್ರೇರಣೆಗಳಿಂದ ಪಕ್ಷವನ್ನು, ಹಾಗೂ ಕಾರ್ಯಕರ್ತರನ್ನು ದಿಕ್ಕು ತಪ್ಪಿಸುತ್ತಿರುವ ಬಗ್ಗೆ ಗಂಭೀರವಾಗಿ ಚರ್ಚಿಸಿ, ಭಾರತದ ಕಮ್ಯೂನಿಷ್ಟ್ ಪಕ್ಷಕ್ಕೆ ಯಾವುದೇ ಹೊರಗಿನ ರಾಷ್ಟ್ರಗಳ ಮಾರ್ಗದರ್ಶನ ಬೇಕಾಗಿಲ್ಲ ಎಂಬ ನಿರ್ಧಾರಕ್ಕೆ ಬರಲಾಯಿತು.

ಪಕ್ಷದ ಭವಿಷ್ಯದ ದೃಷ್ಟಿಯಿಂದ ಮುಂದೆ ಪಕ್ಷದ ಆಂತರೀಕ ವಿಷಯಗಳಲ್ಲಿ ನೇರ ಪ್ರವೇಶಿಸಿ, ಸಲಹೆ ನೀಡುವ ಅಧಿಕಾರವನ್ನು ಸಹ ಪಕ್ಷದ ಕೇಂದ್ರ ಸಮಿತಿಗೆ ನೀಡಲಾಯಿತು. 1960 ರ ದಶಕದ ಕಮ್ಯೂನಿಷ್ಟ್ ಪಕ್ಷದಲ್ಲಿ ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಚೀನಾ ಮತ್ತು ಸೋವಿಯತ್ ರಷ್ಯಾ ಕಮ್ಯೂನಿಷ್ಟ್ ವಿಚಾರಧಾರೆಗಳು ಲಗ್ಗೆ ಇಟ್ಟ ಪರಿಣಾಮ ಈ ರೀತಿಯ ಗೊಂದಲಗಳು ಸಾಮಾನ್ಯವಾಗಿದ್ದವು. ಅಂತಿಮವಾಗಿ 1968 ರ ಏಪ್ರಿಲ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಬರ್ದ್ವಾನ್‌ನಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಚೀನಾ ಮಾದರಿಯ ಹೋರಾಟವನ್ನು ಕೈಬಿಡಲು ನಿರ್ಧರಿಸಲಾಯಿತು.

ಪಕ್ಷದ ಈ ನಿರ್ಧಾರವನ್ನು ಕಟುವಾಗಿ ಟೀಕಿಸಿದ ಚಾರು ಮುಜಂದಾರ್ ಇದು ಪಕ್ಷವನ್ನು ಮತ್ತು ಕಾರ್ಯಕರ್ತರನ್ನು ಮತ್ತೇ ಸಾಮಾನ್ಯ ಸ್ಥಿತಿಗೆ ಎಳೆದೊಯ್ಯುವ ನಿರ್ಧಾರ ಎಂದು ಆರೋಪಿಸಿದನು. ಇಂತಹ ಸ್ಥಿತಿಯಲ್ಲಿ ಅಸಮಾನತೆಯನ್ನು ಬಿತ್ತಿ ಪೋಷಿಸುತ್ತಿರುವ ಸರ್ಕಾರಗಳು ಮತ್ತು ದುಷ್ಟಶಕ್ತಿಗಳ ವಿರುದ್ಧ ಯುದ್ಧ ಅನಿವಾರ್ಯ ಎಂದು ಪ್ರತಿಪಾದಿಸಿದ ಚಾರು ಮತ್ತು ಅವನ ಗೆಳೆಯರು ಮಾರ್ಕ್ಸ್‌‍ವಾದದ ಕಮ್ಯುನಿಷ್ಟ್ ಪಕ್ಷವನ್ನು ತೈಜಿಸಲು ನಿರ್ಧರಿಸಿದರು. ಅಮೇರಿಕಾದ ಬಂಡವಾಳ ನೀತಿಯನ್ನು ಪರೋಕ್ಷವಾಗಿ ಅಪ್ಪಿಕೊಂಡು ದ್ವಂದ್ವ ನೀತಿಯನ್ನು ಅನುಸರಿಸುತ್ತಿರುವ ಸೋವಿಯತ್ ರಷ್ಯಾದ ಕಮ್ಯೂನಿಷ್ಟ್ ಪ್ರಣಾಳಿಕೆಯನ್ನು ಸಹ ತಿರಸ್ಕರಿಸಿದರು.

ತಾವು ಈಗ ಅನುಸರಿಸಬೇಕಾದ ತೀವ್ರಗಾಮಿ ಧೋರಣೆಗಳ ಬಗ್ಗೆ ಚರ್ಚಿಸಿ ಸಭೆಯಲ್ಲಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಅವುಗಳೆಂದರೆ:

  1. ಎಲ್ಲಾ ಹಂತದಲ್ಲೂ ಹೋರಾಟವನ್ನು ತೀವ್ರಗೊಳಿಸುವುದು, ನಕ್ಷಲ್‌ಬಾರಿ ಮಾದರಿಯ ಹೋರಾಟಕ್ಕೆ ರೈತರು ಮತ್ತು ಆದಿವಾಸಿಗಳನ್ನು ಸಜ್ಜುಗೊಳಿಸುವುದು.
  2. ಪ್ರತಿ ಹಳ್ಳಿಯಲ್ಲಿ ತೀವ್ರಗಾಮಿ ಮನೋಭಾವದ ಯುವಕರ ಪಡೆಯನ್ನು ಹುಟ್ಟು ಹಾಕಿ, ರೈತರು, ಕೃಷಿಕೂಲಿ ಕಾರ್ಮಿಕರು, ವ್ಯವಸಾಯ ಕ್ಷೇತ್ರದಲ್ಲಿ ಅನುಭವಿಸುತ್ತಿರುವ ಬವಣೆಗಳನ್ನು ಹೋಗಲಾಡಿಸುವುದು.
  3. ಮಾರ್ಕ್ಸ್ ಮತ್ತು ಲೆನಿನ್ ವಿಚಾರಧಾರೆಯ ಜೊತೆಗೆ ಮಾವೋತ್ಸೆ ತುಂಗನ ವಿಚಾರಗಳನ್ನು ಪಕ್ಷದ ಸಂಘಟನೆಯಲ್ಲಿ ಅಳವಡಿಸಿಕೊಂಡು, ಭಾರತದ ಸಂದರ್ಭಕ್ಕೆ ಅನುಗುಣವಾಗಿ ಕೆಲವು ಮಾರ್ಪಾಡು ಮಾಡಿಕೊಂಡು ಇವುಗಳ ಹಾದಿಯಲ್ಲಿ ಕಟ್ಟುನಿಟ್ಟಾಗಿ ನಡೆಯುವುದು.

ಇವುಗಳನ್ನು  ಆಚರಣೆಗೆ ತರುವ ನಿಟ್ಟಿನಲ್ಲಿ 1968 ಅಂತ್ಯದ ವೇಳೆಗೆ ಕೊಲ್ಕತ್ತ ನಗರದಲ್ಲಿ ಎಲ್ಲಾ ಉಗ್ರ ಕಮ್ಯೂನಿಷ್ಟ್ ವಾದಿಗಳ ಸಭೆಯನ್ನು ಗುಪ್ತವಾಗಿ ಕರೆಯಲಾಗಿತ್ತು. ಕ್ರಾಂತಿಕಾರಕ ವಿಚಾರಗಳನ್ನು ಆಚರಣೆಗೆ ತರಲು ಅಖಿಲ ಭಾರತ ಮಟ್ಟದಲ್ಲಿ ಒಂದು ಸಮನ್ವಯ ಸಮಿತಿಯನ್ನು ಸಹ ರಚಿಸಲಾಯಿತು. ಸಭೆಯ ನಂತರ ಚಾರು ಮುಜಂದಾರ್ ಮಾವೋ ವಿಚಾರಧಾರೆಯ ಅಡಿಯಲ್ಲಿ ಭಾರತದಲ್ಲಿ ಪ್ರಜಾಸತ್ತಾತ್ಮಕವಾದ ಕ್ರಾಂತಿಕಾರಕ ಹೋರಾಟಕ್ಕೆ ಜನರನ್ನು ಸಜ್ಜುಗೊಳಿಸಲಾಗುವುದು ಎಂದು ಘೊಷಿಸಿದನು. ಕೊಲ್ಕತ್ತ ಸಭೆಯ ನಿರ್ಣಯಕ್ಕೆ ಆಂಧ್ರದ ನಾಯಕ ನಾಗಿರೆಡ್ಡಿ ಕೆಲವು ಆಕ್ಷೇಪ ಎತ್ತಿದನು. ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಘಟನೆಯನ್ನು ಒಳಗೊಳ್ಳದ ಯಾವುದೇ ಹೋರಾಟಕ್ಕೆ ಜಯ ಸಿಗಲಾರದು ಎಂಬುದು ಆಂಧ್ರ ನಾಯಕರ ಅಭಿಪ್ರಾಯವಾಗಿತ್ತು. ನೂತನ ಪಕ್ಷದ ಸಂಘಟನೆಯ ಗೊಂದಲ ಹೀಗೆ ಮುಂದುವರಿದಾಗ, 1969 ರ ಫೆಬ್ರವರಿಯಲ್ಲಿ ಸಭೆ ಸೇರಿದ ನಾಯಕರು, ಪಕ್ಷದ ಸಮನ್ವಯ ಸಮಿತಿಯ ನಿಷ್ಕ್ರೀಯತೆಯ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದರು. ಇದೇ ವೇಳೆಗೆ ಚೀನಾ ಸರ್ಕಾರ ಹಾಗೂ ಅಲಿನ್ಲ ಕಮ್ಯೂನಿಷ್ಟ್ ಪಕ್ಷ  ಭಾರತದ ಎಡಪಂಥೀಯ ಪಕ್ಷದ ಆಂತರೀಕ ವಿಷಯಗಳಿಗೆ ತಲೆ ಹಾಕಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದವು. ಈ ಅವಕಾಶವನ್ನು ಬಳಸಿಕೊಂಡು ಭಾರತದಲ್ಲಿ ಮಾರ್ಕ್ಸ್ ವಿಚಾರಧಾರೆಗೆ ಪರ್ಯಾಯವಾಗಿ ಮತ್ತೊಂದು ಸಂಘಟನೆ ಅತ್ಯಾವಶ್ಯಕ ಎಂಬ ಬೀಜವನ್ನು ಇಲ್ಲಿನ ಉಗ್ರಗಾಮಿ ನಾಯಕರ ತಲೆಯೊಳಕ್ಕೆ ಚೀನಾ ಬಿತ್ತನೆ ಮಾಡಿತು. ಜೊತೆಗೆ ಸಂಘಟನೆಗೆ ಅವಶ್ಯಕವಾದ ಹಣ, ಶಸ್ರಾಸ್ತ್ರ ಪೂರೈಸುವ ಭರವಸೆ ನೀಡಿತು. ಅಂದಿನ ಶ್ರೀಲಂಕಾದ ಕಮ್ಯೂನಿಷ್ಟ್ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯನಾದ ಷಣ್ಮುಗದಾಸ್‌ನನ್ನು ನೇಪಾಳ ಮೂಲಕ ಚೀನಾಕ್ಕೆ ಕರೆಸಿಕೊಂಡ ಅಲ್ಲಿನ ಸರ್ಕಾರ ಆತನ ಮೂಲಕ ಎಲ್ಲಾ ಸಂದೇಶಗಳನ್ನು ಭಾರತದ ಉಗ್ರಗಾಮಿ ನಾಯಕರಿಗೆ ರವಾನಿಸಿತು.

ಇದರಿಂದ ಪ್ರೇರಣೆಗೊಂಡ ಇಲ್ಲಿನ ನಾಯಕರು 1969 ರ ಏಪ್ರಿಲ್ 22 ರಂದು ಲೆನಿನ್‌ನ ಶತಮಾನೋತ್ಸವ ಜನ್ಮದಿನಾಚರಣೆಯಂದು ಹೊಸ ಪಕ್ಷದ ಅಸ್ತಿತ್ವವನ್ನು ಘೋಷಿಸಿದರು. ಪಕ್ಷಕ್ಕೆ ಕಮ್ಯೂನಿಷ್ಟ್ ಪಾರ್ಟಿ (ಮಾರ್ಕ್ಸ್ ಮತ್ತು ಲೆನಿನ್) ಬಣ ಎಂದು ಹೆಸರಿಸಲಾಯ್ತು. ಪಕ್ಷವನ್ನು ಹುಟ್ಟು ಹಾಕುವುದರ ಜೊತೆಗೆ ಕ್ರಾಂತಿಕಾರಕ ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಲಾಯಿತು. ಭಾರತ ದೇಶ ಅರೆ ವಸಾಹತುಶಾಯಿ ಮತ್ತು ಅರೆ ದಬ್ಬಾಳಿಕೆಯ ವ್ಯವಸ್ಥೆಯಲ್ಲಿ ನರಳುತ್ತಿದೆ, ಇಲ್ಲಿ ಅಧಿಕಾರಿಗಳು ಮತ್ತು ಭೂಮಾಲೀಕರು, ಬಂಡವಾಳಶಾಹಿಗಳ ಕೈಗೊಂಬೆಯಾಗಿ ವರ್ತಿಸುತ್ತಾ ಬಡಜನತೆಯನ್ನು ಶೋಷಿಸುತ್ತಿದ್ದಾರೆ. ಇಲ್ಲಿ ಈ ವ್ಯವಸ್ಥೆಗೆ ಭಾರತ ಸರ್ಕಾರ ಅಮೇರಿಕಾದ ಬಂಡವಾಳ ನೀತಿಯನ್ನು ಮತ್ತು ಸೋವಿಯತ್ ರಷ್ಯಾದ ಅರೆಬೆಂದ ಸಮಾಜವಾದ ನೀತಿಯನ್ನು ಅನುಸರಿಸುತ್ತಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಣಾಳಿಕೆಯಲ್ಲಿ ಇಲ್ಲಿನ ವ್ಯವಸ್ಥೆಯನ್ನು ಕಟು ವಿಮರ್ಶೆಗೆ ಒಳಪಡಿಸಲಾಗಿತ್ತು. ಭಾರತದ ದುಡಿಯುವ ವರ್ಗ ಮತ್ತು ರೈತರ ದಯನೀಯವಾದ ಈ ಸ್ಥಿತಿಯಲ್ಲಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ಅತ್ಯಗತ್ಯ ಎಂದು ಪಕ್ಷದ ಪ್ರಣಾಳಿಕೆಯಲ್ಲಿ ಬಲವಾಗಿ ಪ್ರತಿಪಾದಿಸಲಾಗಿತ್ತು.

ಸರ್ಕಾರದ ವಿರುದ್ಧ ವ್ಯವಸ್ಥಿತ ಹೋರಾಟಕ್ಕೆ ಗೆರಿಲ್ಲಾ ಯುದ್ಧವೊಂದೇ ಅನಿವಾರ್ಯ ಮಾರ್ಗ ಎಂದು ತಿಳಿಸಿ ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ರೈತರು, ಕೂಲಿಕಾರ್ಮಿಕರು, ಮತ್ತು ಆದಿವಾಸಿಗಳನ್ನು ಸಂಘಟಿಸಿ ಹೋರಾಟಕ್ಕೆ ಸಿದ್ಧವಾಗಬೇಕೆಂದು ಪಕ್ಷ ಕರೆ ನೀಡಿತ್ತು. ಪಕ್ಷದ ಸಂಘಟನೆಯನ್ನು ಅತ್ಯಂತ ಗೋಪ್ಯವಾಗಿ ಮಾಡಬೇಕೆಂದು ಹಾಗೂ ಯಾವ ಕಾರಣಕ್ಕೂ ಸಂಘಟನೆಯಲ್ಲಿ ನಿರತರಾದ ನಾಯಕರ ಮಾಹಿತಿಯನ್ನು ವಿಶೇಷವಾಗಿ ವ್ಯಯಕ್ತಿಕ ಮಾಹಿತಿಯನ್ನು ಪಕ್ಷದ ಕಾರ್ಯಕತ್ರಿಗೂ ತಿಳಿಸಬಾರದೆಂದು ಕಟ್ಟುನಿಟ್ಟಿನ ಸೂಚನೆಯನ್ನು ಹೊರಡಿಸಲಾಯಿತು. ಈ ಕಾರಣಕ್ಕಾಗಿ ಈ ಹಿಂದೆ ಸಿಲಿಗುರಿ ಪ್ರಾಂತ್ಯದಲ್ಲಿ ಕಿಸಾನ್‌ಸಭಾ ಘಟಕಗಳನ್ನು ಸಂಘಟಿಸಿದ ಮಾದರಿಯನ್ನು ಅಂದರೆ, ಬಹಿರಂಗಸಭೆ ಕೈಬಿಟ್ಟು, ಪ್ರತಿಯೊಬ್ಬ ವ್ಯಕ್ತಿಯ ಜೊತೆ ಮಾತುಕತೆ ಮತ್ತು ಸಂಧಾನದ  ಪಕ್ಷವನ್ನು ತಳಮಟ್ಟದಿಂದ ಕಟ್ಟಲು ನಾಯಕರು ನಿರ್ಧರಿಸಿದರು. ಇದು ಭಾರತದ ರಾಜಕೀಯ ಇತಿಹಾಸದ ಎಡಪಂಥೀಯ ವಿಚಾರ ಧಾರೆಗಳ ಸಮಾನ ಮನಸ್ಕ ವ್ಯಕ್ತಿಗಳಲ್ಲಿ ಗೊಂದಲ, ಜಿಜ್ಙಾಸೆ ಮೂಡಿಸಿ, ತಮ್ಮ ಮುಂದಿನ ಮಾರ್ಗ ಯಾವುದು ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿತು.

(ಮುಂದುವರಿಯುವುದು)

ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ-18)


– ಡಾ.ಎನ್.ಜಗದೀಶ್ ಕೊಪ್ಪ


ನರಭಕ್ಷಕ ಹುಲಿಗಳ ಬೇಟೆಯಿಂದಾಗಿ ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಪ್ರಖ್ಯಾತಿ ಹೊಂದಿದ ಜಿಮ್ ಕಾರ್ಬೆಟ್ ಮಾನಸಿಕವಾಗಿ ಪ್ರಾಣಿ ಮತ್ತು ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ. ತನ್ನ ಕಣ್ಣ ಮುಂದೆ ಅರಣ್ಯ ನಶಿಸಿ ಹೋಗುತ್ತಿರುವುದು ಮತ್ತು ಕಾಡಿನ ಪ್ರಾಣಿಗಳು ಶಿಕಾರಿಗಾರರ ತೆವಲಿಗೆ ಬಲಿಯಾಗುತ್ತಿರುವುದರ ಬಗ್ಗೆ ವೈಯಕ್ತಿಕವಾಗಿ ನೊಂದುಕೊಂಡಿದ್ದ. ಈ ಕಾರಣಕ್ಕಾಗಿ ನರಭಕ್ಷಕ ಪ್ರಾಣಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪ್ರಾಣಿಗಳನ್ನು ಬೇಟೆಯಾಡುವುದನ್ನು ಅವನು ನಿಲ್ಲಿಸಿದ್ದ.

ಜಿಮ್ ಕಾರ್ಬೆಟ್ ಬದುಕಿನಲ್ಲಿ, ಹಾಗೂ ಅವನ ಶಿಕಾರಿಯ ಅನುಭವದಲ್ಲಿ ಅತಿ ದೊಡ್ಡ ಸವಾಲು ಎದುರಾದದ್ದು, ರುದ್ರ ಪ್ರಯಾಗದ ನರಭಕ್ಷಕ ಚಿರತೆಯನ್ನು ಕೊಲ್ಲುವ ಸಂದರ್ಭದಲ್ಲಿ ಮಾತ್ರ. ಉತ್ತರ ಭಾರತದ ಹಿಮಾಲಯದ ತಪ್ಪಲಿನಲ್ಲಿ ಸುಮಾರು 800 ಚದುರ ಕಿ. ಮಿ. ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರ ಎಂಟು ವರ್ಷಗಳ ಕಾಲ ನರಮನುಷ್ಯರನ್ನು ಬೇಟೆಯಾಡುತ್ತಾ, ಸರ್ಕಾರವನ್ನು, ಸ್ಥಳೀಯ ಜನತೆಯನ್ನು ಆತಂಕದ ಮಡುವಿಗೆ ನೂಕಿದ್ದ ಈ ಚಿರತೆಯನ್ನು ಕೊಲ್ಲಲು ಜಿಮ್ ಕಾರ್ಬೆಟ್ ನಡೆಸಿದ ಸಾಹಸ, ಪಟ್ಟ ಪಾಡು ಒಂದು ಮಹಾ ಕಾವ್ಯದಂತೆ ರೋಮಾಂಚಕಾರಿಯಾದ ಕಥನ. ಈ ನರಭಕ್ಷಕನ ಬೇಟೆಗಾಗಿ ಅಂದಿನ ದಿನಗಳಲ್ಲಿ ಇಡೀ ಜಗತ್ತು ಎದುರು ನೋಡುತ್ತಿತ್ತು ಏಕೆಂದರೆ, ಪ್ರತಿದಿನ 50 ರಿಂದ 100 ಕಿ.ಮಿ. ದೂರ ಸಂಚರಿಸುತ್ತಾ ಇದ್ದ ಈ ಚಿರತೆಯ ಪ್ರತಿ ನರಬೇಟೆಯೂ ಜಗತ್ತಿನ ಎಲ್ಲಾ ಪ್ರಮುಖ ದಿನಪತ್ರಿಕೆಗಳಲ್ಲಿ ಸುದ್ಧಿಯಾಗಿತ್ತು. ಇಂಗ್ಲೆಂಡಿನ ಪಾರ್ಲಿಮೆಂಟ್‌‌‍ನಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದ ವಿಚಾರದ ಬದಲಿಗೆ, ಈ ನರಭಕ್ಷಕ ಚಿರತೆಯ ಬಗ್ಗೆ ತೀವ್ರತರವಾದ ಚರ್ಚೆಗಳು ನಡೆಯುತ್ತಿದ್ದವು.

ಕಾಡಿನ ಅಪಾಯಕಾರಿ ಪ್ರಾಣಿಗಳಲ್ಲಿ ಒಂದಾದ ಚಿರತೆ ಸಾಮಾನ್ಯವಾಗಿ ಬೇಟೆಯಾಡಿ ಪ್ರಾಣಿಗಳನ್ನು ಕೊಲ್ಲುವ ಸಾಧ್ಯತೆ ಬಹುತೇಕ ಕಡಿಮೆ. ಸಿಂಹ ಅಥವಾ ಹುಲಿ ಬೇಟೆಯಾಡಿ ತಿಂದು ಮುಗಿಸಿದ ಪ್ರಾಣಿಗಳ ಅವಶೇಷ ಅಥವಾ ವಯಸ್ಸಾಗಿ ಸತ್ತು ಹೋದ ಪ್ರಾಣಿಗಳ ಕಳೇಬರಗಳನ್ನು ತಿನ್ನುವುದು ಚಿರತೆಗಳ ಪವೃತ್ತಿ. ಆದರೆ, ರುದ್ರಪ್ರಯಾಗದ ಈ ನರಭಕ್ಷಕ ಚಿರತೆ ಆಕಸ್ಮಾತ್ತಾಗಿ ನರಭಕ್ಷಕ ಪ್ರಾಣಿಯಾಗಿ ಪರಿವರ್ತನೆ ಹೊಂದಿತ್ತು. ಇದಕ್ಕೆ ಸ್ಥಳೀಯ ಜನರ ಸಾಂಸ್ಕೃತಿಕ ಆಚರಣೆಗಳು ಕೂಡ ಪರೋಕ್ಷವಾಗಿ ಕಾರಣವಾಗಿದ್ದವು. ರುದ್ರಪ್ರಯಾಗ ಹಿಮಾಲಯದ ಪವಿತ್ರ ಕ್ಷೇತ್ರಗಳ ನಡುವಿನ ಸಂಗಮ ಕ್ಷೇತ್ರಗಳಲ್ಲಿ ಒಂದು. ಹಿಮಾಲಯದ ತಪ್ಪಲಲ್ಲಿ ಹುಟ್ಟಿ ಉತ್ತರದಿಂದ ದಕ್ಷಿಣ ದಿಕ್ಕಿಗೆ ಹರಿಯುವ ಮಂದಾಕಿನಿ ಹಾಗೂ ಅಲಕನಂದಾ ನದಿಗಳು ರುದ್ರಪ್ರಯಾಗದಲ್ಲಿ ಒಂದುಗೂಡಿ, ಮುಂದೆ ಗಂಗಾನದಿಯಾಗಿ ಹರಿದು, ಮುಂದೆ ಹೃಷಿಕೇಶ ಹರಿದ್ವಾರ, ವಾರಣಾಸಿ ಮುಂತಾದ ಪವಿತ್ರ ಕ್ಷೇತ್ರಗಳ ತಟದಲ್ಲಿ ಹರಿದು ಕೊಲ್ಕತ್ತಾ ಬಳಿ ಹೂಗ್ಲಿ ನದಿಯಾಗಿ ಹೆಸರು ಬದಲಿಸಿಕೊಂಡು ಬಂಗಾಳ ಕೊಲ್ಲಿ ಸೇರುತ್ತದೆ.

ಭಾರತದ ಹಿಂದೂ ಸಮುದಾಯದ ಪಾಲಿಗೆ ಗಂಗಾ ನದಿ ಪುಣ್ಯನದಿ. ಇದು ಇಲ್ಲಿ ಜನಗಳ ಧಾರ್ಮಿಕ ಮನೋಭೂಮಿಯಲ್ಲಿ ಒಂದು ಅಚ್ಚಳಿಯದ ಹೆಸರು. ಹಿಂದು ಭಕ್ತರ ಪಾಲಿಗೆ ಚಾರ್‌ಧಾಮ್ ಎಂದು ಕರೆಸಿಕೊಳ್ಳುವ ಹೃಷಿಕೇಶ, ಹರಿದ್ವಾರ, ಬದರಿನಾಥ್ ಹಾಗೂ ಕೇದಾರನಾಥ ಇವುಗಳನ್ನು ಸಂದರ್ಶಿಸುವುದು ಅವರ ಜೀವಮಾನದ ಕನಸು ಮತ್ತು ಹೆಬ್ಬಯಕೆ. ಹಾಗಾಗಿ ಈ ಸ್ಥಳಗಳು ವರ್ಷಪೂರ್ತಿ ದೇಶದ ವಿವಿಧೆಡೆಗಳಿಂದ ಬರುವ ಭಕ್ತರಿಂದ ತುಂಬಿ ತುಳುಕುತ್ತವೆ. ಹೃಷಿಕೇಶದಿಂದ ಹೊರಟ ಭಕ್ತರು ರುದ್ರಪ್ರಯಾಗದ ಬಳಿ ಕೇದಾರನಾಥ ಮತ್ತು ಬದರಿನಾಥ ಕ್ಷೇತ್ರಗಳಿಗೆ ಬೇರೆ ಬೇರೆ ದಾರಿ ಹಿಡಿದು ಸಾಗಬೇಕು. ಆ ಕಾಲದಲ್ಲಿ ಬಹುತೇಕ ಪ್ರಯಾಣವನ್ನು ಕಾಲು ನಡಿಗೆಯಲ್ಲೇ ಕ್ರಮಿಸಬೇಕಿತ್ತು ಇಂತಹ ಸಂದರ್ಭದಲ್ಲಿ ವಯಸ್ಸಾದ ಭಕ್ತರು ನಡುದಾರಿಯಲ್ಲಿ ಅಸುನೀಗಿದರೆ, ಅವರುಗಳ ಶವವನ್ನು ನದಿಯ ಕೊರಕಲು ಪ್ರದೇಶಕ್ಕೆ ನೂಕಿ ಮುಂದುವರಿಯುವುದು ಅನಿವಾರ್ಯವಾಗಿತ್ತು. ಜೊತೆಗೆ ಹಿಮಾಲಯದ ತಪ್ಪಲಿನ ಬಹುತೇಕ ಹಳ್ಳಿಗಳು ಪರ್ವತದ ಮೇಲಿದ್ದ ಕಾರಣ ಅಲ್ಲಿ ಜನರೂ ಸಹ ಸತ್ತವರ ಬಾಯಿಗೆ ಒಂದಿಷ್ಟು ಬೆಂಕಿಯ ಕೆಂಡವನ್ನು ಹಾಕಿ ಪರ್ವತದ ಮೇಲಿಂದ ಶವವನ್ನು ಹಳ್ಳಕ್ಕೆ ತಳ್ಳುವ ಸಂಸ್ಕೃತಿಯನ್ನು ರೂಢಿಸಿಕೊಂಡಿದ್ದರು. ಇಂತಹ ಒಂದು ಸಂದರ್ಭದಲ್ಲಿ ಸತ್ತ ಪ್ರಾಣಿಗಳ ಆಹಾರವನ್ನು ಅರಸುತ್ತಿದ್ದ ಚಿರತೆ ಮನುಷ್ಯರ ಶವಗಳನ್ನು ತಿನ್ನುವುದರ ಮೂಲಕ ನರಭಕ್ಷಕ ಪ್ರಾಣಿಯಾಗಿ ಅಲ್ಲಿನ ಜನರನ್ನು ಕಾಡತೊಡಗಿತ್ತು.

ಜಿಮ್ ಕಾರ್ಬೆಟ್ ನೈನಿತಾಲ್‌ನಲ್ಲಿ ಇರುವಾಗಲೇ ರುದ್ರಪ್ರಯಾಗದ ನರಭಕ್ಷಕ ಚಿರತೆಯು ಮನುಷ್ಯರನ್ನು ಬೇಟೆಯಾಡುತ್ತಿರುವುದನ್ನು ಪತ್ರಿಕೆಯಲ್ಲಿ ಓದಿ ತಿಳಿದಿದ್ದ, ಬ್ರಿಟಿಷ್ ಸರ್ಕಾರ ಕೂಡ ಇದನ್ನು ಕೊಂದು ಹಾಕಲು ಹವ್ಯಾಸಿ ಬೇಟೆಗಾರರಿಗೆ ಆಹ್ವಾನ ನೀಡಿ 10 ಸಾವಿರ ರೂಪಾಯಿ ಬಹುಮಾನ ಘೋಷಿಸಿತ್ತು, ಜೊತೆಗೆ ಆ ಪ್ರದೇಶದ ಜನರಿಗೆ ಮುಕ್ತವಾಗಿ ಬಂದೂಕಿನ ಪರವಾನಗಿ ನೀಡಿತ್ತು. ಹಿಮಾಲಯದ ಪರ್ವತದ ಪ್ರದೇಶಗಳಿಂದ ಬಂದ ಸೈನಿಕರಿಗೆ ರಜೆಯ ಮೇಲೆ ಊರಿಗೆ ತೆರಳುವಾಗ ಬಂದೂಕವನ್ನು ತೆಗೆದುಕೊಂಡು ಹೋಗಲು ಅನುಮತಿಯನ್ನು ಸಹ ನೀಡಿತು ನರಭಕ್ಷಕ ಚಿರತೆಯನ್ನು ಕೊಲ್ಲಲು ಸರ್ಕಾರ ಇಷ್ಟೇಲ್ಲಾ ವ್ಯವಸ್ಥೆ ಮಾಡಿರುವಾಗ ನಾನು ಮಾಡುವುದಾದರೂ ಏನು? ಎಂಬುದು ಕಾರ್ಬೆಟ್‌ನ ನಿಲುವಾಗಿತ್ತು. ಕಾರ್ಬೆಟ್‌ಗೆ ಈ ನರಭಕ್ಷಕಕನ ಬಗ್ಗೆ ಪ್ರಥಮಬಾರಿಗೆ ಸುದ್ಧಿ ತಿಳಿದಾಗ ಅವನು ನೈನಿತಾಲ್ ಸಿನಿಮಾ ಮಂದಿರದಲ್ಲಿ ಇಂಗ್ಲಿಷ್ ಸಿನಿಮಾವೊಂದನ್ನು ನೋಡುತ್ತಾ ಕುಳಿತಿದ್ದ. ಆರು ವರ್ಷಗಳ ನಂತರವೂ ಯಾರ ಕೈಗೂ ಸಿಗದೆ, ಸೆರೆ ಹಿಡಿಯಬಹುದಾದ ಎಲ್ಲಾ ವಿಧವಾದ ಉಪಾಯಗಳಿಗೂ ಜಗ್ಗದೆ ಚಿರತೆ ತನ್ನ ದಾಳಿಯನ್ನು ಮುಂದುವರಿಸಿತ್ತು. ಎರಡು ಬಾರಿ ಅದೃಷ್ಟವಶಾತ್ ಸಾವಿನ ಕುಣಿಕೆಯಿಂದ ಅದು ಪಾರಾಗಿತ್ತು.

ಒಮ್ಮೆ ರುದ್ರಪ್ರಯಾಗದ ಸಮೀಪದ ಹಳ್ಳಿಯ ಬಯಲಿನಲ್ಲಿ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿದ ಚಿರತೆ ಅವನನ್ನು ಕೊಂದು ಸಮೀಪದ ಹಳ್ಳವೊಂದಕ್ಕೆ ಕೊಂಡೊಯ್ದು ತಿನ್ನುತ್ತಿರುವಾಗ ಇದನ್ನು ಕಂಡ ಕೆಲವು ಗ್ರಾಮಸ್ಥರು ದೊಣ್ಣೆ, ಮಚ್ಚು, ಕೊಡಲಿಗಳಿಂದ, ನರಭಕ್ಷಕನನ್ನು ಬೆನ್ನಟ್ಟಿದ್ದರು. ಅದು ಭಯದಿಂದ ಮನುಷ್ಯನ ಶವದೊಂದಿಗೆ ಓಡಿ ಹೋಗಿ ಸಮೀಪದ ಗುಹೆಯನ್ನು ಹೊಕ್ಕಿತು. ಕೂಡಲೇ ಗ್ರಾಮಸ್ಥರು ಗುಹೆಯ ಬಾಗಿಲಿಗೆ ಮುಳ್ಳು ಕಂಟಿ, ಮರದಬೊಡ್ಡೆ ಹಾಗೂ ಕಲ್ಲುಗಳನ್ನು ಅಡ್ಡ ಇಟ್ಟು ಚಿರತೆ ಹೊರಬಾರದಂತೆ ಭದ್ರಪಡಿಸಿದರು. ಸತತ ಐದು ದಿನಗಳ ಕಾಲ ಗುಹೆಯ ಬಾಗಿಲಲ್ಲಿ ಅವರೆಲ್ಲಾ ಕಾದು ಕುಳಿತರೂ ಸಹ ಗುಹೆಯ ಒಳಗಿನಿಂದ ಯಾವ ಪ್ರತಿಕ್ರಿಯೆ ಬರಲಿಲ್ಲ. ಇದರಿಂದ ಸಂಶಯಗೊಂಡ ಒಬ್ಬಾತ ಗುಹೆಬಾಗಿಲಿಗೆ ಅಡ್ಡಲಾಗಿರಿಸಿದ್ದ ಮುಳ್ಳು ಮತ್ತು ಕಲ್ಲುಗಳನ್ನು ತೆಗೆಯುತಿದ್ದಂತೆ ಬಿಲ್ಲಿನಿಂದ ಬಿಟ್ಟ ಬಾಣದಂತೆ ಕ್ಷಣಾರ್ಧದಲ್ಲಿ ಹೊರಕ್ಕೆ ನೆಗೆದ ನರಭಕ್ಷಕ ಚಿರತೆ ಜನರ ನಡುವೆ ಓಡಿ ಹೋಗಿ ಕಾಡು ಹೊಕ್ಕಿತು. ಅನಿರೀಕ್ಷಿತವಾಗಿ ಜರುಗಿದ ಈ ಘಟನೆಯಿಂದ ಭಯ ಭೀತರಾದ ಅಷ್ಟೂ ಜನ ಗುಂಡಿನ ಶಬ್ಧಕ್ಕೆ ಬೆದರಿ ಮರದಿಂದ ಹಾರುವ ಹಕ್ಕಿಗಳಂತೆ ಚಲ್ಲಾಪಿಲ್ಲಿಯಾಗಿದ್ದರು.

ಇನ್ನೊಮ್ಮೆ ಇಬ್ಬರು ಬ್ರಿಟಿಷ್ ಅಧಿಕಾರಿಗಳ ಗುಂಡಿನ ದಾಳಿಯಿಂದ ಇದೇ ನರಭಕ್ಷಕ ಚಿರತೆ ಕ್ಷಣ ಮಾತ್ರದಲ್ಲಿ ಪಾರಾಗಿತ್ತು. ರುದ್ರಪ್ರಯಾಗ ಪಟ್ಟಣದಿಂದ ಕೇದಾರನಾಥಕ್ಕೆ ಹೋಗುವ ದಾರಿಯಲ್ಲಿ 24 ಕಿ.ಮಿ. ದೂರದಲ್ಲಿ ಕರ್ಣಪ್ರಯಾಗ ಎಂಬ ಜನವಸತಿ ಪ್ರದೇಶವಿದ್ದು ಈ ಎರಡು ಊರುಗಳ ನಡುವೆ ಅಲಕಾನಂದಾ ನದಿ ರಭಸದಿಂದ ಹರಿಯುತ್ತದೆ. ಪ್ರಯಾಣಿಕರು ನದಿ ದಾಟಲು ಅಡ್ಡಲಾಗಿ ತೂಗು ಸೇತುವೆಯೊಂದನ್ನು ಕಟ್ಟಲಾಗಿದೆ. ನರಭಕ್ಷಕ ರುದ್ರಪ್ರಯಾಗಕ್ಕೆ ಬರಬೇಕಾದರೆ, ಈ ಸೇತುವೆ ದಾಟಿ ಬರಬೇಕಿತ್ತು. ಏಕೆಂದರೆ, ಅತ್ಯಂತ ವೇಗವಾಗಿ ರಭಸದಲ್ಲಿ ಹರಿಯುವ ಅಲಕನಂದಾ ನದಿಯನ್ನು ಅದು ಈಜುವುದು ಸಾಧ್ಯವಿರಲಿಲ್ಲ. ಹಾಗಾಗಿ ಇಬ್ಬರೂ ಅಧಿಕಾರಿಗಳು ಸೇತುವೆಯ ಎರಡು ಬದಿಯಿದ್ದ ಗೋಪುರಗಳ ಮೇಲೆ ನಿರಂತರ 60 ದಿನಗಳ ರಾತ್ರಿ ಕಾವಲು ಕುಳಿತರು. ಕಡೆಗೂ ಅವರ ನಿರೀಕ್ಷೆ ಹುಸಿಯಾಗಲಿಲ್ಲ. ಒಂದು ದಿನ ತಡರಾತ್ರಿಯ ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಸೇತುವೆ ಮೇಲೆ ನರಭಕ್ಷಕ ನಡೆದು ಬಂತು. ಸೇತುವೆಯ ಮಧ್ಯದವರೆಗೆ ಬರುವುದನ್ನೇ ಕಾಯುತ್ತಿದ್ದ ಅವರಲ್ಲಿ, ರುದ್ರಪ್ರಯಾಗದ ದಿಕ್ಕಿನ ಗೋಪುರದಲ್ಲಿ ಕುಳಿತಿದ್ದ ಅಧಿಕಾರಿ ತಡಮಾಡದೇ, ನರಭಕ್ಷಕನತ್ತ ಗುರಿಯಿಟ್ಟು ಗುಂಡುಹಾರಿಸಿದ. ಬಂದೂಕಿನಿಂದ ಸಿಡಿದ ಗುಂಡು ಚಿರತೆಗೆ ಬಡಿಯುವ ಬದಲು, ಅದರ ಮುಂಗಾಲಿನ ಸಮೀಪ ಸೇತುವೆಗೆ ಬಿಗಿಯಲಾಗಿದ್ದ ಮರದ ಹಲಗೆಗೆ ತಾಗಿತು. ಆದರೂ ಕೂಡ ಗುಂಡಿನಿಂದ ಸಿಡಿದ ಚೂರೊಂದು ಅದರ ಕಾಲನ್ನು  ಘಾಸಿಗೊಳಿಸಿತ್ತು. ಗುಂಡಿನ  ಶಬ್ಧಕ್ಕೆ ಬೆದರಿದ ಚಿರತೆ ತಾನು ಬಂದ ದಾರಿಯತ್ತ ಹಿಂತಿರುಗಿ ಶರವೇಗದಿಂದ ಓಡುತ್ತಿರುವಾಗ, ಅತ್ತ ಕರ್ಣಪ್ರಯಾಗದ ದಿಕ್ಕಿನ ಗೋಪುರದಲ್ಲಿದ್ದ ಅಧಿಕಾರಿ ತನ್ನ ಪಿಸ್ತೂಲಿಂದ ಆರು ಗುಂಡುಗಳನ್ನು ಹಾರಿಸಿದ ಆದರೆ, ಎಲ್ಲವೂ ಗುರಿತಪ್ಪಿ ನರಭಕ್ಷಕ ಸಾವಿನ ಬಾಯಿಂದ ಪಾರಾಗಿತ್ತು. ನಂತರ ಗೋಪುರದಿಂದ ಕೆಳಗಿಳಿದು ಬಂದ ಇಬ್ಬರೂ ಸ್ಥಳವನ್ನು ಅವಲೋಕಿಸಿ. ಗುಂಡಿನ ದಾಳಿಯಿಂದ ಚಿರತೆ ಗಂಭೀರವಾಗಿ ಗಾಯಗೊಂಡು ಸತ್ತಿರಬಹುದೆಂದು ನದಿಯ ಇಕ್ಕೆಲಗಳಲ್ಲಿ ಬೆಳಕರಿದ ಮೇಲ ಎಲ್ಲೆಡೆ ಜಾಲಾಡಿದರು. ಆದರೆ, ಚಿರತೆಯ ಯಾವ ಸುಳಿವು ಸಿಗಲಿಲ್ಲ. ಈ ಘಟನೆ ಸಂಭವಿಸಿದ ಐದು ತಿಂಗಳವರೆಗೆ ಎಲ್ಲಿಯೂ ನರಭಕ್ಷಕನ ದಾಳಿ ನಡೆಯಲಿಲ್ಲವಾದ್ದರಿಂದ ಎಲ್ಲರೂ ಅದು ಗುಂಡೇಟಿನಿಂದ ಅಸುನೀಗಿದೆ ಎಂದು ಭಾವಿಸಿ ನಿಟ್ಟುಸಿರು ಬಿಟ್ಟಿದ್ದರು, ಆದರೆ, ಐದು ತಿಂಗಳ ತರುವಾಯ ನರಬಲಿಯ ಬೇಟೆಯೊಂದಿಗೆ ನರಭಕ್ಷಕ ಚಿರತೆ ತಾನು ಇನ್ನೂ ಸತ್ತಿಲ್ಲವೆಂದು ಅಪಾಯದ ಸೂಚನೆಯನ್ನು ರುದ್ರಪ್ರಯಾಗದ ಪ್ರಾಂತ್ಯದ ಜನತೆಗೆ ರವಾನಿಸಿ, ಮತ್ತೆ ಎಲ್ಲರನ್ನು ಆತಂಕದ ಮಡುವಿಗೆ ನೂಕಿತು.

ಒಂದು ಸಂಜೆ ನೈನಿತಾಲ್‌ನ ಕ್ಲಬ್‌ನಲ್ಲಿ ಗೆಳೆಯರೊಂದಿಗೆ ವಿಸ್ಕಿ ಕುಡಿಯುತ್ತಾ ಕುಳಿತ್ತಿದ್ದ ಕಾರ್ಬೆಟ್, ನರಭಕ್ಷಕ ಚಿರತೆಯ ಬಗ್ಗೆ ಎಲ್ಲರೂ ಮಾತನಾಡುವುದನ್ನು ಸುಮ್ಮನೇ ಕೇಳಿಸಿಕೊಳ್ಳುತ್ತಾ ಕುಳಿತ್ತಿದ್ದ. ಶಿಕಾರಿ ಹವ್ಯಾಸವಿದ್ದ ಹಲವಾರು ಯೂರೋಪಿಯನ್ನರು ಅಲ್ಲಿದ್ದರು. ಸರ್ಕಾರ ನರಭಕ್ಷಕ ಬೇಟೆಗೆ ಸರ್ಕಾರ ಆಹ್ವಾನವಿತ್ತಿದ್ದರೂ ಯಾರೊಬ್ಬರೂ ಹೋಗಲು ಅಂಜುತ್ತಿದ್ದರು. ಚಿರತೆಯನ್ನು ಕೊಲ್ಲಲು ಸರ್ಕಾರ ಅಂತಿಮವಾಗಿ ಅದು ಬೇಟೆಯಾಡುತ್ತಿದ್ದ ಪ್ರಾಣಿಗಳು ಅಥವಾ ಮನುಷ್ಯರ ಶವಕ್ಕೆ ಸೈನೈಡ್ ಮತ್ತು ಇತರೆ ವಿಷಗಳನ್ನು ಹಾಕಿ ಕೊಲ್ಲಲು ಪ್ರಯತ್ನಿದರೂ ಇದರಿಂದ ಯಾವ ಪ್ರಯೋಜನವಾಗಲಿಲ್ಲ. ಈ ಎಲ್ಲಾ ಘಟನೆಗಳ ನಡುವೆ ಈ ನರಭಕ್ಷಕ ಚಿರತೆಗೆ ದೈವಿಶಕ್ತಿ ಇದೆ ಎಂಬ ಪುಕಾರು ಎಲ್ಲೆಡೆ ಹಬ್ಬಿದ ಪರಿಣಾಮ ಜನರಲ್ಲಿ ಭೀತಿ ಮತ್ತಷ್ಟು ಹೆಚ್ಚಾಯಿತು. ಅಂದು ರಾತ್ರಿ ಕಾರ್ಬೆಟ್ ಕ್ಲಬ್‌ನಿಂದ ಮನೆಗೆ ಬರುವುದರೊಳಗೆ ಘರ್ವಾಲ್ ಪ್ರಾಂತ್ಯದ ಜಿಲ್ಲಾಧಿಕಾರಿ ಇಬ್ಸೋಟನ್‌ನಿಂದ ಕಾಗದದ ಲಕೋಟೆಯೊಂದು ಬಂದಿತ್ತು. ಸರ್ಕಾರದ ಪರವಾಗಿ ಇಬ್ಸೋಟನ್ ನರಭಕ್ಷ ಚಿರತೆಯನ್ನು ಬೇಟೆಯಾಡಲು ಜಿಮ್ ಕಾರ್ಬೆಟ್‌ನನ್ನು ವಿನಂತಿಸಿಕೊಂಡಿದ್ದ. ಈ ಪತ್ರ ಕಾರ್ಬೆಟ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

                                                (ಮುಂದುವರಿಯುವುದು)