Category Archives: ಭೂಮಿ ಬಾನು

ಪ್ರಗತಿಪರರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಪಾಸ್ ಪೋರ್ಟ್ ಬೇಕಾ?

ಭೂಮಿ ಬಾನು

“ನೀವು ಉತ್ತರ ಕೊಡ್ರಿ. ನೀವ್ಯಾಕೆ ಇಲ್ಲಿಗೆ ಬಂದ್ರಿ. ನಾನೂರು ಕಿಲೋಮೀಟರ್ ದೂರದಿಂದ ಇಲ್ಲಿಗೆ ಬಂದು ಇಲ್ಲಿಯ ಸ್ಥಳೀಯರ ಭಾವನೆ ಕೆರಳಿಸ್ತೀರಾ…?”

“ನೀವು ಸುಮ್ಮನೆ, ಎಸಿ ಯವರಿಗೆ ಮನವಿ ಕೊಟ್ರಲ್ಲಾ. ಅಷ್ಟು ಸಾಕು. ಮತ್ತೇಕೆ ಇಲ್ಲಿಗೆ ಬಂದಿರಿ…?”

“ನಾನೂ ಈ ಸ್ಟೇಷನ್ ಗೆ ಹೊಸಬ. ನನಗೂ ಮಡೆಸ್ನಾನ ಅಂದರೆ ಗೊತ್ತಿರಲಿಲ್ಲ. ನಾನು ಒಂದು ಗಂಟೆ ನಿಂತು ನೋಡಿದೆ. ಅಲ್ಲಿ ಅವರು ಅವರ ಇಚ್ಛೆಯಂತೆ ಹಾಗೆ ಮಾಡ್ತಾರೆ. ಯಾರ ಒತ್ತಾಯವಿಲ್ಲ. ಎಲ್ಲಾ ಜಾತಿಯವರೂ ಇದ್ದಾರೆ. ಸರಕಾರ, ಪೊಲೀಸ್ ಏನಾದ್ರು ಬಲವಂತದಿಂದ ಹಾಗೆ ಮಾಡಿಸುತ್ತಿದೆಯಾ..?”

“ಇದು ಪೊಲೀಸ್ ಸ್ಟೇಷನ್. ನಿಮ್ಮಪ್ಪನ ಮನೆ ಅಲ್ಲ…”

ಬುಧವಾರ ಮಧ್ಯಾಹ್ನ ಸಮಯ ಸುದ್ದಿ ವಾಹಿನಿಯಲ್ಲಿ ಬಿತ್ತರವಾದ ಸುದ್ದಿಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅಧಿಕಾರಿ ಹಲ್ಲೆಗೊಳಗಾಗ ಕೆ.ಎಸ್ ಶಿವರಾಂ ಮತ್ತಿತತರೊಂದಿಗೆ ಮಾತನಾಡುತ್ತ ಕೇಳಿಬಂದ ವಾಕ್ಯಗಳಿವು. ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮುಖಂಡರಾದ ಶಿವರಾಂ ಈಗಾಗಲೇ ಮಡೆಸ್ನಾನ ಆಚರಣೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ್ದರು. ನ್ಯಾಯಾಲಯದಲ್ಲಿ ಈ ಪದ್ಧತಿ ಆಚರಣೆಯನ್ನು ಪ್ರಶ್ನಿಸುವ ಉದ್ದೇಶದಿಂದ ಪ್ರತ್ಯಕ್ಷವಾಗಿ ದೇವಾಲಯದಲ್ಲಿ ನಡೆಯುವ ಆಚರಣೆ ಬಗ್ಗೆ ತಿಳಿದುಕೊಳ್ಳಲು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು.

ದೇವಾಲಯ ಪ್ರವೇಶಕ್ಕೆ ನಿರ್ಬಂಧವಿಲ್ಲ. ಪ್ರವೇಶ ದ್ವಾರದ ಹತ್ತಿರ ಅವರು ತಮ್ಮನ್ನು ಮಾತನಾಡಿಸಿದ ಸುದ್ದಿ ವಾಹಿನಿ ವರದಿಗಾರರಿಗೆ ಬೈಟ್ ಕೊಡುತ್ತಿರುವಾಗ ಏಳೆಂಟು ಜನ ಅವರ ಮೇಲೆ ಎರಗಿದರು. ಹಿಗ್ಗಾ ಮುಗ್ಗಾ ಥಳಿಸಿದರು. ಒಬ್ಬ ಮಹಾಶಯನಂತೂ ಶಿವರಾಂ ಅವರ ಮುಖಕ್ಕೆ ವಸ್ತ್ರವನ್ನು ಮುಚ್ಚಿ ಅವರ ಮೇಲೆ ದಾಳಿಗೆ ಇಳಿಯುತ್ತಾನೆ.

ಈ ದಾಳಿ ಕೆಲವೇ ಕ್ಷಣಗಳಲ್ಲಿ ಸುದ್ದಿಯಾಯಿತು. ಪ್ರತಿಕ್ರಿಯೆಗಳು ವ್ಯಕ್ತವಾದವು. ಶಿವರಾಂ ಮತ್ತವರ ಸ್ನೇಹಿತರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅಲ್ಲಿದ್ದ ಅಧಿಕಾರಿ ದಾಳಿಗೆ ಒಳಗಾದವರನ್ನೇ ಹೀಯಾಳಿಸಿ ಮಾತನಾಡಿದ್ದೂ ಜಗಜ್ಜಾಹೀರಾಗಿದೆ. ಈ ರಾಜ್ಯದ ಗೃಹಮಂತ್ರಿಗೆ ಒಂದಿಷ್ಟು ಕಾನೂನು ಪ್ರಜ್ಞೆ ಇದ್ದಿದ್ದರೆ ಆ ಅಧಿಕಾರಿ ಈ ಹೊತ್ತಿಗೆ ಅಮಾನತ್ತಾಗಬೇಕಿತ್ತು. ದಾಳಿ ಮಾಡಿದವರನ್ನು ಹಿಡಿಯದೆ, ದೂರು ಕೊಟ್ಟು ರಕ್ಷಣೆ ಕೋರಲು ಬಂದವರನ್ನು ಹೀಗೆ ನಡೆಸಿಕೊಳ್ಳುವುದಾದರೆ, ರಾಜ್ಯದ ಜನತೆ ಅದ್ಯಾವ ಧೈರ್ಯದ ಮೇಲೆ ಪೊಲೀಸ್ ವ್ಯವಸ್ಥೆಗೆ ವಿಶ್ವಾಸ ಇಡಬೇಕು? ಈ ಪೊಲೀಸಪ್ಪ ಹೇಳುವುದನ್ನು ನೋಡಿದರೆ, ಸುಬ್ರಹ್ಮಣ್ಯಕ್ಕೆ ಹೋಗುವ ಯಾವುದೇ ಪ್ರಗತಿಪರ ಚಿಂತಕರಿಗೆ ಪಾಸ್ ಪೋರ್ಟ್ ಬೇಕು, ಪೊಲೀಸರ ವಿಶೇಷ ಅನುಮತಿ ಬೇಕು.

ಮಡೆಸ್ನಾನ (ಎಂಜಲು ಸ್ನಾನ) ಅವಮಾನಕರ. ಪದ್ಧತಿ ಆಚರಣೆ ನಡೆಸುವವರು ಅವರು ಸ್ವ ಇಚ್ಚೆಯಿಂದಲೇ ಮಾಡುತ್ತಿರಬಹುದು. ಕೆಲ ವರ್ಷಗಳ ಹಿಂದೆ ಬೆತ್ತಲೆ ಸೇವೆ ಮಾಡುತ್ತಿದ್ದವರೂ ಇಚ್ಚೆಯಿಂದಲೇ ಮಾಡುತ್ತಿದ್ದರು! ಹಾಗಂತ ಅಂತಹದೊಂದು ಅನಿಷ್ಟ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಬೇಕಾ? ಮತ್ತೊಬ್ಬನ ಎಂಜಲ ಮೇಲೆ ಉರುಳಾಡುವುದೆಂದರೆ ಅದು ಅಸಹ್ಯ, ಅವಮಾನಕರ ಎಂದು ಗ್ರಹಿಸದಷ್ಟು ಮೂಢರೇ ನಾವು? ಮೊದಲು ಬ್ರಾಹ್ಮಣರು ಉಂಡೇಳುತ್ತಾರೆ. ನಂತರ ಬ್ರಾಹ್ಮಣರನ್ನು ‘ಮೊದಲುಗೊಂಡು’ ಇತರರು ಅವರು (ಬ್ರಾಹ್ಮಣರು) ಉಂಡ ಎಲೆಗಳ ಮೇಲೆ ಉರುಳುತ್ತಾರೆ. ಅನೇಕರು ಈ ವಿಚಾರವಾಗಿ ವಾದ ಮಂಡಿಸುವಾಗ ಅನಗತ್ಯ ಗೊಂದಲ ಸೃಷ್ಟಿಸುತ್ತಾರೆ. ಈ ಪದ್ಧತಿ ಪ್ರಕಾರ ಕೇವಲ ದಲಿತರು ಸೇವೆ ಮಾಡುವುದಿಲ್ಲ. ಬ್ರಾಹ್ಮಣರೂ ಮಾಡುತ್ತಾರೆ. ಹಾಗಾಗಿ ಇದು ದಲಿತ, ಹಿಂದುಳಿದವರನ್ನು ಶೋಷಿಸುವ ಕೃತ್ಯ ಅಲ್ಲ ಎಂದು ವಾದಿಸುತ್ತಾರೆ. ಬ್ರಾಹ್ಮಣರೂ ಸೇವೆ ಮಾಡುತ್ತಾರೆ ಎಂದಾಕ್ಷಣ ಉಳಿದವರಿಗೆ ಅದು ಅವಮಾನವಲ್ಲ ಎಂದು ಗ್ರಹಿಸಬೇಕೆ?

ಇಲ್ಲಿ ಸೂಕ್ಷ್ಮವಾಗಿ ಗಮನಿಸಬೇಕಾದ ಅಂಶವೆಂದರೆ, ಅಲ್ಲಿ ಬ್ರಾಹ್ಮಣರು ಉಂಡೆಲೆಗಳ ಮೇಲೆ ಬ್ರಾಹ್ಮಣರೂ ಸೇರಿದಂತೆ ಇತರರು ಉರುಳುತ್ತಾರೆ. ಇದೇ ಬ್ರಾಹ್ಮಣರು, ದಲಿತ ಅಥವಾ ಹಿಂದುಳಿದವರು ಉಂಡೆದ್ದ ಎಲೆಗಳ ಮೇಲೆ ಉರುಳಲು ಸಿದ್ಧರೇ?

ಸುಬ್ರಹ್ಮಣ್ಯದ ವರದಿಗಾರರೊಬ್ಬರ ಪ್ರಕಾರ ಶಿವರಾಂ ಅವರ ಮೇಲೆ ದಾಳಿ ಮಾಡಿದವರು ದಲಿತರಂತೆ. ಇದನ್ನೂ ಒಂದು ತಂತ್ರವಾಗಿಯೇ ನೋಡಬೇಕು. ದಾಳಿಯಂತಹ ದೈಹಿಕ ಶ್ರಮ ಬಯಸುವ ಕೆಲಸಗಳಿಗೆ ಬೇಕಾಗುವವರು ಅವರೇ. ಪಾಪ ಅವರಿಗೆ ಅದರಿಂದ ಉಂಟಾಗುವ ಕಾನೂನು ಪರಿಣಾಮಗಳ ಅರಿವು ಇರುವುದಿಲ್ಲ. ಅವರ ಮುಗ್ಧತೆ, ಅಮಾಯಕತೆಯ ಲಾಭ ಪಡೆಯುವವರು ಬುದ್ದಿವಂತರು.

ದಲಿತರ ಮೇಲೆ ದೌರ್ಜನ್ಯ ನಡೆಸುವ ವ್ಯವಸ್ಥೆಯ ಹೆಸರು – ಸರಕಾರ!

ಭೂಮಿ ಬಾನು

ಇಂದು ಒಂದು ದುರಂತ ನಡೆದು ಹೋಗಿದೆ. ಕೆಜಿಎಫ್ ನಲ್ಲಿ ಮಲದ ಗುಂಡಿ ಶುಚಿಗೊಳಿಸಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಸೋ ಕಾಲ್ಡ್ ನಾಗರಿಕ ಸಮಾಜ ತಲೆ ತಗ್ಗಿಸುವುದಷ್ಟೇ ಅಲ್ಲ, ಮಂಡಿ ಊರಿ ಕೂರಬೇಕು. ಸರಕಾರ, ಉಳ್ಳವರು ಎಲ್ಲರೂ ಇದಕ್ಕೆ ಹೊಣೆ.

ಊರಿನ ರಸ್ತೆ ಸರಿಯಿಲ್ಲ, ಕುಡಿವ ನೀರಿಲ್ಲ, ಬಸ್ ನಿಲ್ದಾಣದಲ್ಲಿ ಶೆಡ್ ಇಲ್ಲ, ಎಂದೆಲ್ಲಾ ಪ್ರತಿಭಟನೆ ಮಾಡುವ ‘ಮರ್ಯಾದಸ್ಥ’ ಜನ ನಮ್ಮೂರಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ, ಮಲದ ಗುಂಡಿಗಳನ್ನು ಶುಚಿಗೊಳಿಸಲು ಯಂತ್ರಗಳಿಲ್ಲ ಎಂದು ದನಿ ಎತ್ತಿದ್ದು ಇಲ್ಲವೇ ಇಲ್ಲ. ಇದೇ ಕಾರಣಕ್ಕೆ ಅಲ್ಲಲ್ಲಿ ಇಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ.

ಬಸವಲಿಂಗಯ್ಯ ಮಲಹೊರುವ ಪದ್ಧತಿಯನ್ನು ರದ್ದು ಮಾಡುವ ಬಗ್ಗೆ ಮಂತ್ರಿ ಮಂಡಲ ಸಭೆಯಲ್ಲಿ ಮಾತೆತ್ತಿದಾಗ ಜೊತೆಯಲ್ಲಿದ್ದ ಕೆಲವರು “ಆ ಅಸಹ್ಯದ ಬಗ್ಗೆ ಎಷ್ಟು ಹೊತ್ತು ಮಾತಾಡ್ತೀರಿ?” ಎಂದು ಮೂದಲಿಸಿದರಂತೆ. ಬಸವಲಿಂಗಯ್ಯ ಪ್ರತಿಕ್ರಿಯಿಸಿ “ಆ ವಿಷಯ ಮಾತನಾಡೋಕೇ ಇಷ್ಟು ಅಸಹ್ಯ ಪಡ್ತೀರಲ್ಲ, ಅದೇ ಅಸಹ್ಯವನ್ನು ತಲೆಯಲ್ಲಿ ಹೊತ್ತು ಸಾಗಿಸೋರ ಪಾಡೇನು”, ಎಂದು ಪ್ರಶ್ನಿಸಿದ್ದರು. ಆ ‘ಕೆಲ ಮಂತ್ರಿಗಳಂಥದೇ’ ಮನಸುಗಳು ಈ ಹೊತ್ತಿನ ಪರಿಸ್ಥಿತಿಗೆ ಕಾರಣ.

ಕೇಂದ್ರ ಸರಕಾರ 1993 ರಲ್ಲಿಯೇ ಮಲ ಹೊರುವ ಪದ್ಧತಿಯನ್ನು ಕಾನೂನು ತಂದು ನಿಷೇಧಿಸಿತು. ವಿಪರ್ಯಾಸ ನೋಡಿ, ಇದುವರೆಗೆ ಯಾವ ಸರಕಾರಗಳೂ ಆ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ಕಾನೂನು ತಂದರಷ್ಟೆ ಸಾಕೆ?

ಮಲ ಹೊರುವ ಪದ್ಧತಿ ನಿಷೇಧ ಎಂದಾಕ್ಷಣ ಮಲದ ಗುಂಡಿಗಳು ತುಂಬುವುದು ನಿಲ್ಲುತ್ತದೆಯೆ? ಒಳ ಚರಂಡಿ ವ್ಯವಸ್ಥೆ ಇಲ್ಲದ ಮಂದಿ ಎಂದಿನಂತೆ ಆ ಕೆಲಸ ಮಾಡುವವರನ್ನು ಹುಡುಕಿ ಹೋಗುತ್ತಾರೆ. ಅವರಿಗೆ ಒಂದಿಷ್ಟು ಹಣ ಕೊಟ್ಟು ಗುಂಡಿ ಖಾಲಿ ಮಾಡಿಸುತ್ತಾರೆ. ಹೊಟ್ಟೆಗೆ ಹಿಟ್ಟಿಲ್ಲದೆ ಬದುಕಬೇಕಾದ ಸ್ಥಿತಿಯಲ್ಲಿರುವ ಅನೇಕ ದಲಿತ ಕುಟುಂಬಗಳು ಅನ್ನಕ್ಕಾಗಿ ಅನಿವಾರ್ಯವಾಗಿ ಆ ಕೆಲಸಕ್ಕೆ ಹೋಗುತ್ತಾರೆ. ಹೀಗೆ ಸಾಯುತ್ತಾರೆ. (ಆದರೆ ಅದೇ ಮೇಲ್ಜಾತಿಯ ಯಾರೇ ಆಗಲಿ ಎಷ್ಟೇ ಬಡತನವಿದ್ದರೂ, ಎಷ್ಟೇ ದುಡ್ಡು ಕೊಡುತ್ತೇನೆಂದರೂ ಈ ಕೆಲಸಕ್ಕೆ ಕೈ ಹಾಕುವುದಿಲ್ಲ ಎನ್ನುವುದು ವಾಸ್ತವ).
ಕಾನೂನು ತಂದು ಒಂದು ದಶಕವಾಯಿತು. ಇನ್ನಾದರೂ ಕರ್ನಾಟಕದ ಬಹುಪಾಲು ನಗರ, ಪಟ್ಟಣಗಳಲ್ಲಿ ಯಂತ್ರಗಳನ್ನು ಬಳಸಿ ಮಲದ ಗುಂಡಿಗಳನ್ನು ಶುಚಿಗೊಳಿಸುವ ಪದ್ಧತಿ ಜಾರಿಯಾಗಿಲ್ಲ.

ಹಾಸನ ಜಿಲ್ಲೆ ಆಲೂರಿನಂತ ತಾಲೂಕು ಕೇಂದ್ರದದಲ್ಲಿ ಒಳ ಚರಂಡಿ ವ್ಯವಸ್ಥೆಯೂ ಇಲ್ಲ, ತುಂಬಿದ ಗುಂಡಿಗಳನ್ನು ಶುಚಿಗೊಳಿಸಲು ಯಂತ್ರಗಳೂ ಇಲ್ಲ. ರಾಜ್ಯದಾದ್ಯಂತ ಇಂತಹ ಅದೆಷ್ಟೋ ತಾಲೂಕುಗಳಿವೆ.

ನೂತನ ಕಾನೂನಿನ ಪ್ರಕಾರ ಮಲದ ಗುಂಡಿಯನ್ನು ಶುಚಿಗೊಳಿಸಲು ದಲಿತರನ್ನು ನಿಯೋಜಿಸಿಕೊಂಡರೆ, ದಲಿತರ ಮೇಲೆ ನಡೆಸಿದ ದೌರ್ಜನ್ಯ ಎಂದು ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬಹುದು. ಆದರೂ ಈ ಪದ್ದತಿ ನಿಲ್ಲದೇ ಇರಲು ಪ್ರಮುಖ ಕಾರಣ ಸರಕಾರದ ನಿರ್ಲಕ್ಷ್ಯ.

ದಲಿತರ ಮೇಲೆ ದೌರ್ಜನ್ಯ ನಡೆಸಿದ ಬಹುದೊಡ್ಡ ವ್ಯವಸ್ಥೆ – ಸರಕಾರ!

ಚಿತ್ರ: persecution.in

ದಲಿತರ ಬಹಿಷ್ಕಾರ ಮತ್ತು ‘ದೊಡ್ಡ ಜನರ’ ಜವಾಬ್ದಾರಿ

– ಭೂಮಿ ಬಾನು

ಅರಕಲಗೂಡು ತಾಲೂಕಿನ ಸಿದ್ದಾಪುರದಲ್ಲಿ ಮುಂದುವರಿದ ಜಾತಿಯವರು ದಲಿತರನ್ನು ಇತ್ತೀಚೆಗೆ ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದರು. ದಲಿತ ಸಮುದಾಯದ ಒಂಭತ್ತೋ-ಹತ್ತು ಕುಟುಂಬಗಳ ಸದಸ್ಯರಿಗೆ ಹಳ್ಳಿಯ ಯಾವುದೇ ಅಂಗಡಿಯ ಮಾಲೀಕ ಏನನ್ನೂ ಮಾರುವಂತಿಲ್ಲ. ಹಿಟ್ಟಿನ ಗಿರಣಿ ಮಾಲಿಕ ದಲಿತರ ದವಸ ಬೀಸುವಂತಿಲ್ಲ. ಕ್ಷೌರಿಕ ದಲಿತರಿಗೆ ಬ್ಲೇಡು ತಾಕಿಸುವಂತಿಲ್ಲ. ಇಂತಹದೇ ಹಲವು ಕಟ್ಟುಪಾಡುಗಳು.

ಸಿದ್ದಾಪುರ, ಸರಗೂರು ಗ್ರಾಮ ಪಂಚಾಯಿತಿಗೆ ಸೇರುವ ಒಂದು ಹಳ್ಳಿ. ಆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇದೇ ಸಿದ್ದಾಪುರದವರು. ಹೆಸರು ಚೆಲುವಯ್ಯ. ಅವರು ಕೂಡ ದಲಿತ ಸಮುದಾಯಕ್ಕೆ ಸೇರಿದವರು. ಬಹಿಷ್ಕಾರ ಘೋಷಣೆಯಾದ ಮಾರನೆಯ ದಿನ ಹಿಟ್ಟಿನ ಗಿರಣಿಗೆ ಅವರು ನಾಲ್ಕು ಕೆಜಿ ರಾಗಿ ತಗೊಂಡು ಹೋಗಿ ಬೀಸಿಕೊಡುವಂತೆ ಕೋರಿದ್ದಾರೆ. ಗಿರಣಿ ಮಾಲಿಕ ಒಬ್ಬ ಮುಸಲ್ಮಾನ. ಅವನಿಗೆ ಚೆಲುವಯ್ಯನ ಬಗ್ಗೆ ವೈಯಕ್ತಿಕ ದ್ವೇಷವೇನೂ ಇಲ್ಲ. “ಕ್ಷಮಿಸಿ, ನಾನು ನಿಮ್ಮ ರಾಗಿ ಬೀಸೋಕೆ ಆಗೋಲ್ಲ. ನೀವೇನೋ ನಾಲ್ಕು ಕೆಜಿ ರಾಗಿ ಬೀಸೋಕೆ ಹತ್ತು ರೂಪಾಯಿ ಕೊಡ್ತೀರಿ. ಆದರೆ, ನಿಮ್ಮ ರಾಗಿ ನಾನು ಬೀಸಿದ್ದಕ್ಕೆ ಊರ ದೊಡ್ಡವರ ಪಂಚಾಯಿತಿಗೆ 1,001 ರೂಪಾಯಿ ದಂಡ ಕಟ್ಟಬೇಕಾಗುತ್ತೆ..” ಎಂದು ಗೋಗರೆದ.

ಆ ಪಂಚಾಯಿತಿಯ ಪ್ರಥಮ ಪ್ರಜೆ ಚೆಲುವಯ್ಯನದು ಈ ಪರಿಸ್ಥಿತಿ. ಹಳ್ಳಿಗೆ ಭೇಟಿ ನೀಡಿದ ಪತ್ರಕರ್ತರ ಎದುರು ತಮ್ಮ ಸಂಕಟ ತೋಡಿಕೊಂಡು ಚೆಲುವಯ್ಯ ಕಣ್ಣೀರು ಹಾಕಿದರು. ತಮ್ಮ ಮಾತಿನಲ್ಲಿ ಅವರು ತಪ್ಪಿಯೂ ತಮ್ಮ ಸಮುದಾಯಕ್ಕೆ ಬಹಿಷ್ಕಾರ ಹಾಕಿದ ಮುಂದುವರಿದವರ ಬಗ್ಗೆ ಒಮ್ಮೆಯೂ ಏಕವಚನ ಬಳಸಲಿಲ್ಲ.

ಇಷ್ಟೆಲ್ಲಕ್ಕೂ ಕಾರಣ, ದಲಿತರು ಕುಲವಾಡಿಕೆ ಮಾಡಲು ನಿರಾಕರಿಸಿದ್ದು. ಹಲವು ವರ್ಷಗಳಿಂದ ದಲಿತ ಸಮುದಾಯದ ಕೆಲ ಕುಟುಂಬಗಳು ಸತ್ತವರಿಗೆ ಗುಳಿ ತೋಡುವುದು, ಹಬ್ಬಗಳಂದು ಊರ ಗುಡಿಗೆ ಚಪ್ಪರ ಹಾಕುವುದು, ನಾಯಿ ಅಥವಾ ಇತರೆ ಪ್ರಾಣಿ ಸತ್ತರೆ ಶುಚಿ ಮಾಡುವ ಕೆಲಸಗಳನ್ನು ಮಾಡಿಕೊಂಡು ಬಂದಿವೆ. ಕ್ರಮೇಣ ಈ ಕೆಲಸ ಮಾಡುತ್ತಿದ್ದವರು ವೃದ್ಧರಾದರು. ಅವರ ಮಕ್ಕಳು ಹಾಗೂ-ಹೀಗೂ ವಿದ್ಯಾವಂತರಾದರು. ವೃದ್ಧರ ಕೈಯಲ್ಲಿ ಕೆಲಸ ಮಾಡಲಾಗೋಲ್ಲ. ವಿದ್ಯಾವಂತ ಮಕ್ಕಳು ಜಾಗೃತರಾಗಿ ನಾವೇಕೆ ಈ ಕೆಲಸ ಮಾಡಬೇಕು ಎಂದು ಪ್ರಶ್ನೆ ಹಾಕಿದರು. ಈ ಬೆಳವಣಿಗೆ ಮುಂದುವರಿದ ಜನಾಂಗದವರಿಗೆ ಸಹಿಸಲಾಗಲಿಲ್ಲ.

ಐನೂರಕ್ಕೂ ಹೆಚ್ಚು ಕುಟುಂಬಗಳಿರುವ ಹಳ್ಳಿಯಲ್ಲಿ ಬೆರಳೆಣಿಕೆಯಷ್ಟು ಕುಟುಂಬಗಳು ಏನು ತಾನೇ ಮಾಡಲು ಸಾಧ್ಯ. ದಲಿತರ ಮನೆ ಮಂದಿ ಪ್ರತಿದಿನ ಕೂಲಿ ಮಾಡುವುದು ಇದೇ ಮುಂದುವರಿದ ಜಾತಿ ಜನರ ಜಮೀನುಗಳಲ್ಲಿ. ಬಹಿಷ್ಕಾರದ ಪರಿಣಾಮ ಕೂಲಿಯೂ ಕಟ್. ಅವರು ಬದುಕುವುದು ಹೇಗೆ?

ಇಂತಹದೇ ಪ್ರಕರಣ ಇದೇ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಕೇವಲ ಮೂರು ತಿಂಗಳ ಹಿಂದೆ ಬೆಳಕಿಗೆ ಬಂದಿತ್ತು. ಕುಲವಾಡಿಕೆ ಮಾಡಲು ನಿರಾಕರಿಸಿದ್ದ ಒಂಭತ್ತು ಕುಟುಂಬಗಳಿಗೆ ಆ ಊರಿನ ಮುಖಂಡರು ಬಹಿಷ್ಕಾರ ಹಾಕಿದ್ದರು. ಈ ಪ್ರಕರಣ ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡ ನಂತರ ಜಿಲ್ಲಾ ಉಸ್ತುವಾರಿ ಮಂತ್ರಿ ವಿ.ಸೋಮಣ್ಣ ಆ ಹಳ್ಳಿಗೆ ಭೇಟಿ ನೀಡಿದರು. ಎರಡೂ ಸಮುದಾಯದ ಮುಖಂಡರನ್ನು ಸೇರಿಸಿ ಊರಿನ ಅಭಿವೃದ್ಧಿ ಬಗ್ಗೆ ಭಾಷಣ ಮಾಡಿ ಆಶ್ವಾಸನೆ ನೀಡಿದರು. ಆ ಹಳ್ಳಿಯನ್ನು ದತ್ತು ತೆಗೆದುಕೊಂಡು ಉದ್ಧಾರ ಮಾಡುತ್ತೇನೆ ಎಂದರು. ಅಲ್ಲಿಯೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣವೇ ಊರಿನ ಅಭಿವೃದ್ಧಿಗೆ ಬೇಕಾದ ಕಾರ್ಯಯೋಜನೆ ಸಿದ್ಧಪಡಿಸಿ ಎಂದು ತಾಕೀತು ಮಾಡಿದರು. ಕಂಡ ಕಂಡವರನ್ನೆಲ್ಲಾ ಅಮಾನತ್ತು ಮಾಡ್ತೀನಿ ಎಂದು ಧಮಕಿ ಹಾಕಿದರು. ಕೆಳಹಂತದ ಇಬ್ಬರ ಅಮಾನತ್ತಿಗೆ ಆದೇಶವನ್ನೂ ನೀಡಿದರು.

ಆದರೆ ನೆನಪಿರಲಿ, ಅಂದಿನಿಂದ ಇದುವರೆಗೆ ಸೋಮಣ್ಣ ಆ ಹಳ್ಳಿ ಕಡೆಗೆ ಮತ್ತೆ ತಿರುಗಿ ನೋಡಿಲ್ಲ. ಆ ನಂತರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭಗಳಲ್ಲೂ ಆ ಬಗ್ಗೆ ಮಾತನಾಡಿಲ್ಲ.
ಒಕ್ಕಲಿಗ, ಲಿಂಗಾಯುತ ಹಾಗೂ ಕುರುಬ ಜನಾಂಗದವರು ಹೆಚ್ಚಿನ ಪ್ರಭಾವಿಗಳಾಗಿರುವ ಅರಕಲಗೂಡು ತಾಲೂಕಿನಲ್ಲಿ ಆಗಾಗ ಇಂತಹ ಪ್ರಕರಣಗಳು ಕೇಳಿ ಬರುತ್ತಿವೆ. ಆದರೆ ಆ ಪ್ರಬಲ ಸಮುದಾಯಗಳ ರಾಜಕೀಯ ನಾಯಕರು ತಮ್ಮ ಜನಾಂಗದವರಿಗೆ ತಿಳಿ ಹೇಳುವಂತಹ ಕೆಲಸ ಒತ್ತಟ್ಟಿಗಿರಲಿ, ಇಂತಹ ಪ್ರಕರಣಗಳನ್ನು ಖಂಡಿಸಲೂ ಆಸಕ್ತಿ ತೋರಿಸಿಲ್ಲ.
ಲೋಕಸಭೆಯಲ್ಲಿ ಹಾಸನವನ್ನು ಪ್ರತಿನಿಧಿಸುವವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಕೆರಗೋಡು ಹಾಗೂ ಸಿದ್ದಾಪುರದ ಘಟನೆಗಳ ಬಗ್ಗೆ ಮಾತನಾಡಲೇ ಇಲ್ಲ. ತಮ್ಮ ಮತಬಾಂಧವರ ಪೈಕಿ ಕೆಲವರು ಅಸ್ಪೃಶ್ಯತೆ ಎಂಬ ಪಿಡುಗಿಗೆ ಬಲಿಯಾಗಿ ಶೋಷಣೆಗೆ ಒಳಗಾಗುವುದನ್ನು ನೋಡಿದಾಗಲೂ ಇವರಿಗೆ ಏನೂ ಅನ್ನಿಸುವುದಿಲ್ಲವೆ?

ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಚಾಲಕ ಎನ್. ಮಹೇಶ್ ಸಿದ್ದಾಪುರದ ಘಟನೆ ತರುವಾಯ ದೌರ್ಜನ್ಯ ಮುಕ್ತ ಸಮಾಜದೆಡೆಗೆ ಎಂಬ ಹೆಸರಿನಡಿ ಸಿದ್ದಾಪುರದಿಂದ ಹಾಸನದವರೆಗೆ ಪಾದಯಾತ್ರೆ ನಡೆಸಿದರು. ಅವರು ತಮ್ಮ ಹೋರಾಟದ ವೇಳೆ ಕೇಳಿದ ಪ್ರಶ್ನೆ ಇಷ್ಟೆ – ಮೇಲ್ಜಾತಿ ಜನ ನಾಯಕರಿಗೆ ಶೋಷಣೆ ಮುಕ್ತ ಸಮಾಜ ಸ್ಥಾಪಿಸುವ ಹೊಣೆ ಇಲ್ಲವೆ?
ದೇವೇಗೌಡ, ಎಚ್.ಡಿ.ರೇವಣ್ಣ – ಹೀಗೆ ಅನೇಕರ ಹೆಸರನ್ನು ಉದ್ಧರಿಸಿ ಅವರು ಪ್ರಶ್ನೆ ಹಾಕಿದರು. ಉತ್ತರ ಕರ್ನಾಟಕದಲ್ಲಿ ಬೆಳಕಿಗೆ ಬಂದ ಇಂತಹ ಪ್ರಕರಣಗಳಲ್ಲಿ ಬಹುತೇಕ ಆರೋಪಿಗಳು ಬಸವಣ್ಣನ ಅನುಯಾಯಿಗಳು ಎಂದು ಹೇಳಿಕೊಳ್ಳುವ ಸಮುದಾಯದವರು. ಆ ಸಮುದಾಯಕ್ಕೆ ನೂರಾರು ಮಠಗಳ ಬೆಂಬಲ, ಮಾರ್ಗದರ್ಶನ ಇದೆ. ಹಾಗಾದರೆ ಆ ಎಲ್ಲಾ ಮಠಗಳ ಸ್ವಾಮಿಗಳು ತಮ್ಮ ಭಕ್ತ ಸಮುದಾಯದವರಿಗೆ ಶೋಷಣೆ ವಿರುದ್ಧ ಜಾಗೃತಿ ಮೂಡಿಸಲು ಸಾಧ್ಯವಿಲ್ಲವೆ? ಅಥವಾ ಕಾರ್ಯ ಚುನಾವಣೆ ವೇಳೆ ಭಕ್ತರಿಗೆ ಅವರು ಅಯ್ಕೆ ಮಾಡಬೇಕಾದ ಅಭ್ಯರ್ಥಿಯನ್ನು ಸೂಚಿಸುವುದಷ್ಟೇ ಸ್ವಾಮೀಜಿಗಳ ಕೆಲಸವೆ?

ಮಂಡ್ಯದಲ್ಲಿ ಇತ್ತೀಚೆಗೆ ದಲಿತರೊಬ್ಬರು ಕ್ಷೌರ ಮಾಡಿಸಿಕೊಳ್ಳಲು ಹೋದಾಗ ಅವನ ಮೂಗಿಗೇ ಕತ್ತರಿ ಹಾಕಿದ ಪ್ರಕರಣ ವರದಿಯಾಗಿದೆ. ವಿಚಿತ್ರ ನೋಡಿ, ಕ್ಷೌರ ಸಮುದಾಯದವರೂ ಹಿಂದುಳಿದವರೇ. ಅವರು ತನ್ನಂತೆ ಅಥವಾ ತನಗಿಂತ ಹಿಂದುಳಿದಿರುವ ಸಮುದಾಯಗಳ ಬಗ್ಗೆ ಹೀಗೆ ನಡೆದುಕೊಳ್ಳುವುದು ಎಷ್ಟು ಸರಿ?
ಕ್ಷೌರ ಸಮುದಾಯ ಹಾಗೂ ದಲಿತರ ನಡುವೆ ಸಾಮರಸ್ಯ ಸಾಧಿಸಲು ಮಂಡ್ಯದಲ್ಲಿ ನಾಲ್ಕು ದಿನಗಳ ಹಿಂದೆ ವಿಶಿಷ್ಟ ಕಾರ್ಯಕ್ರಮ ಏರ್ಪಟ್ಟಿತ್ತು. ಕೆಲ ಪ್ರಜ್ಞಾವಂತರು ಸೇರಿಕೊಂಡು ಏರ್ಪಡಿಸಿದ್ದ ಕಾರ್ಯಕ್ರಮವದು. ಅಲ್ಲಿ ಕ್ಷೌರ ಸಮುದಾಯದವರು ದಲಿತರ ಕ್ಷೌರ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭವಾಯಿತು. ಕಾಂಗ್ರೆಸ್ ನ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು. ಎರಡೂ ಸಮುದಾಯಗಳೂ ಹಿಂದುಳಿದಿವೆ. ಎಲ್ಲರೂ ಒಟ್ಟಾಗಿ ಹೋರಾಡಿದಾಗ ಮಾತ್ರ ಏಳ್ಗೆ ಸಾಧ್ಯ ಎನ್ನುವುದನ್ನು ತಿಳಿ ಹೇಳುವ ಪ್ರಯತ್ನ ಆ ಕಾರ್ಯಕ್ರಮ. ಇಂತಹ ಕಾರ್ಯ ಅಲ್ಲಲ್ಲಿ, ಆಗಾಗ ನಡೆಯುತ್ತಿರಬೇಕು.

Janardhana Swamy – no different from other politicians

-Bhoomi Banu

Janardhana Swamy has proved he is no different from other politicians. He filed a false affidavit to secure a BDA site in a posh locality in Bangalore at a subsidised price (only Rs. 8,62,996 for a 50×80 site). He has openly admitted to his act and he is left with no defence in this case. As per law, filing false affidavit is a crime punishable under Indian law and his case is similar to the circumstances which led to Shimoga MP B.Y Raghavendra to surrender his site and Justice Shivaraj Patil quit his office of the Lokayukta.

People, in particular voters of Chitradurga, expect their representative humble enough to surrender the site he obtained through illegal means. However, Mr. Swamy has not shown signs of remorse. Instead, he has continued to evade the question. He wants to defend his act by stating that the other two sites he already own were insignificant in terms of value. But the copy of the affidavit, which every BDA site applicant has to fill, state that the beneficiary should not own either a residential or agricultural or commercial property in the Bangalore Metropolitan limits. The metropolitan area is beyond the BBMP limits.

Expectations from Swamy, a techie-turned-politician, are obviously high because the intentions (as he himself proclaimed) of entering politics were far more different from others in the same boat.

Straight from the Silicon Valley in California, Swamy entered into election politics in Karnataka. The BJP boasted itself for selecting him as its candidate from Chitradurga Lok Sabha constituency, reserved for the Scheduled Castes. The people supported him in the elections. The party also stood by him. BJP’s tall leaders including L.K. Advani campaigned for him. The efforts did not prove futile.

Astonishingly, within a few days from his election to Lok Sabha, Swamy began to claim responsibility for all good happened to Chitradurga. Be it proposed railway link between Davangere and Tumkur or IISC campus in Challakere or Upper Bhadra project, he claimed himself as the ‘man behind’. A visit to his website (jswamy.com) shows how badly he is after publicity over developments that began even years before he entered into politics. All this showed that he is, like any power-hungry politician, after publicity.

His misdemeanours have not only upset people of Chitradurga, but his one-time supporters too. Many of his software field friends camped in Chitradurga to campaign for him. A few people who put in their efforts for his victory want him surrender his BDA site.

Mr. Yogesh Devaraj, a prominent personality in the India Against Corruption movement, has vent his disappointment over the turn of events in a comment in Churumuri.wordpress.com. Mr. Devaraj has known Swamy for several years in the US. He says Swamy has hurt the prospects of people like him who dreamt of a political career. However, Devaraj has not lost hopes. He wants Swamy rectify his mistake by surrendering the site so that he can get back the credibility he lost. Will he listen to these voices?

ರಾಜಕಾರಣ – ರಜೆಕಾಲದಲ್ಲಿ ಹೋಗಿ ಬರುವ ರಮ್ಯ ತಾಣವಲ್ಲ!

-ಭೂಮಿ ಬಾನು

ಚಿತ್ರ ನಟಿ ರಮ್ಯ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ. ಕಾಂಗ್ರೆಸ್ನ ಕೆಲ ನಾಯಕರಿಗೆ ಇದು ಅರಗಿಸಿಕೊಳ್ಳಲಾಗದ ಬೆಳವಣಿಗೆ. ಅವರು ತಮ್ಮ ಅಸಹನೆಯನ್ನು ಅಲ್ಲಲ್ಲಿ ಹೊರಹಾಕಿದ್ದಾರೆ. ಸಂಸದ ಹೆಚ್.ವಿಶ್ವನಾಥ್ ಲಘುವಾಗಿ ಕಮೆಂಟ್ ಪಾಸ್ ಮಾಡಿದರೆ, ಉಗ್ರಪ್ಪ ತುಸು ಗಂಭೀರವಾಗಿಯೇ ಅಸಮಾಧಾನ ತೆರೆದಿಟ್ಟಿದ್ದಾರೆ.

ಅಸಹನೆ, ಅಸಮಾಧಾನಕ್ಕೆ ಮುಖ್ಯ ಕಾರಣ ರಮ್ಯ ಎಲ್ಲಿಂದಲೋ ಬಂದವರು ಎನ್ನುವ ಕಾರಣಕ್ಕೆ. ಸಿನಿಮಾಗಳಿಂದ ಪಡೆದ ಪಾಪುಲಾರಿಟಿಯ ಲಾಭ ಪಡೆದು ತನ್ನ ರಾಜಕೀಯ ಪ್ರವೇಶವನ್ನು ಕಾಂಗ್ರೆಸ್ ಮಟ್ಟಿಗೆ ಬಹು ಮುಖ್ಯ ಘಟನೆಯೇನೋ ಎನ್ನುವಂತೆ ಮಾಧ್ಯಮಗಳ ಮೂಲಕ ಬಿಂಬಿಸುವಲ್ಲಿ ರಮ್ಯ ಯಶಸ್ವಿಯಾದರು. ಅವರ ಹಿಂದೆ ಟಿವಿ ಸಂದರ್ಶಕಿಯಾದ ತೇಜಸ್ವಿನಿಯನ್ನು ಚುನಾವಣೆಗೆ ನಿಲ್ಲಿಸಿ ದೇವೇಗೌಡರಂತಹ ಪ್ರಬಲ ಸ್ಪರ್ಧಿಯನ್ನು ಸೋಲಿಸಲು ಕಾರಣಕರ್ತರಾಗಿದ್ದ ಡಿ.ಕೆ.ಶಿವಕುಮಾರ್ ಇದ್ದರು ಎನ್ನುವುದೂ ಪಕ್ಷದ ಇತರೆ ನಾಯಕರ ಅಸಮಾಧಾನಕ್ಕೆ ಕಾರಣ. ಕಾಲ ಕ್ರಮೇಣ ಚಿತ್ರನಟಿಗೆ ಪಕ್ಷದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಸಿಕ್ಕಬಹುದು. ಹಾಗೆಲ್ಲ ಆದರೆ, ಎಷ್ಟೋ ವರ್ಷಗಳಿಂದ ಊರಿನ ಹಿರಿಯರಿಗೆ ವೃದ್ಧಾಪ್ಯ ವೇತನ ಮಾಡಿಸಿ, ಗಂಗಾ-ಕಲ್ಯಾಣ ಯೋಜನೆ ಅಡಿ ಬೋರ್ ಕೊರೆಸಿ ಕರೆಂಟು ಕೊಡಿಸಲು ಓಡಾಡಿ, ಚುನಾವಣೆ ಬಂದಾಗ ಬ್ಯಾನರ್ ಕಟ್ಟಿ, ಬಾವುಟ ಹಿಡಿದು ಊರೂರು ಅಲೆದವರ ಪಾಡೇನು ಎನ್ನುವುದು ಸಹಜವಾಗಿಯೇ ಏಳುವ ಪ್ರಶ್ನೆ. ಇದೇ ಪ್ರಶ್ನೆ ಅಪ್ಪ, ಅಜ್ಜ ಮಾಡಿದ ಹೆಸರಿನ ಬಲದ ಮೇಲೆ ಪಕ್ಷ ಸೇರಿ, ಟಿಕೆಟ್ ಗಿಟ್ಟಿಸುವ ಸಂಬರ್ಭಗಳು ಬಂದಾಗೆಲ್ಲಾ ಎದುರಾಗಿದೆ.

ಸಾಮಾನ್ಯ ಕಾರ್ಯಕರ್ತರಿಗೆ ಮತ್ತು ಸಿನಿಮಾ ಪಾಪುಲಾರಿಟಿ ಅಥವಾ ನಾಮ ಬಲದಿಂದ ಪಕ್ಷ ರಾಜಕಾರಣದಲ್ಲಿ ಮನ್ನಣೆಗಳಿಸಿದವರಿಗೆ ಇರುವ ವ್ಯತ್ಯಾಸಗಳೆಲ್ಲಾ ಅವರು ಎದುರಿಸುವ ಮೊದಲ ಚುನಾವಣೆ ನಂತರ ಮುರಿದು ಬೀಳುತ್ತವೆ. ಮೊದಲ ಚುನಾವಣೆಯಲ್ಲಿ ಅವರು ಇತರೆ ಸಾಮಾನ್ಯ ಕಾರ್ಯಕರ್ತರಂತೆ ಪರಿಚಯಿಸಿಕೊಳ್ಳುವ ಅಗತ್ಯ ಬೀಳದೆ ಇರಬಹುದು. ಆದರೆ ನಂತರದ ಚುನಾವಣೆಗಳಲ್ಲಿ ಆತ ಅಥವಾ ಆಕೆ ಕೇವಲ ರಾಜಕಾರಣಿ. ಸಿನಿಮಾ ಖ್ಯಾತಿ, ಟಿವಿ ಆಂಕರ್ ಖ್ಯಾತಿ ಯಾವುದೂ ಲಾಭಕ್ಕೆ ಬರುವುದಿಲ್ಲ. ಅಧಿಕಾರಾವಧಿಯಲ್ಲಿ ಅವರ ನಡೆ, ನುಡಿ ಅಷ್ಟೇ ಮುಖ್ಯ.ಪಕ್ಷ ಅಥವಾ ಆಡಳಿತದಲ್ಲಿ ಮೇಲೇರಲು ಕೂಡಾ ಸಿನಿಮಾ ಜಗತ್ತಿನ ಜನಪ್ರಿಯತೆ ಸಹಾಯಕ್ಕೆ ಬರುವುದಿಲ್ಲ. ಉದಾಹರಣೆಗೆ ಅಂಬರೀಷ್ ಅಥವಾ ಸಿ.ಪಿ ಯೋಗೇಶ್ವರ ಮಂತ್ರಿ ಸ್ಥಾನ ಪಡೆದದ್ದು ಅವರು ಚಿತ್ರನಟರೆಂದಲ್ಲ. ಅದಕ್ಕೆ ಅವರ ಸೀನಿಯಾರಿಟಿ (ಅಂಬರೀಷ್) ಮತ್ತು ಪಕ್ಷಾಂತರ (ಯೋಗೇಶ್ವರ) ಕಾರಣಗಳಿದ್ದವು.

ಕರ್ನಾಟಕದಲ್ಲಿ ಚಿತ್ರನಟರು ಆಗಾಗ ರಾಜಕಾರಣ ಪ್ರವೇಶಿಸಿದ್ದುಂಟು. ಆದರೆ ಪಕ್ಕದ ರಾಜ್ಯಗಳಲ್ಲಿ ನಡೆದಿರುವಂತೆ ಯಾರೊಬ್ಬರೂ ಬಹುಕಾಲ ಅಧಿಕಾರದಲ್ಲಿಲ್ಲ. ಹಾಗೆ ಚುನಾವಣೆ ಎದುರಿಸಿ ಅಧಿಕಾರ ಹಿಡಿದವರು ತಮ್ಮ ಕ್ಷೇತ್ರದಲ್ಲಿ, ತಮಗೆ ಕೊಟ್ಟ ಜವಾಬ್ದಾರಿಯನ್ನು ಶಿಸ್ತಿನಿಂದ ಪೂರೈಸಿದವರೂ ಅಲ್ಲ. ಉದಾಹರಣೆಗೆ ಅಂಬರೀಷ್. ತಾನು ಹಿರಿಯ, ಜನಪ್ರಿಯ ನಾಯಕ ಆದರೂ ಕೇಂದ್ರದಲ್ಲಿ ಮಂತ್ರಿ ಪಟ್ಟ ಕೊಟ್ಟಿಲ್ಲ ಎಂದು ಅಸಮಾಧಾನ ಪಟ್ಟುಕೊಂಡೇ ಇದ್ದವರು, ಮಂತ್ರಿಯಾದಾಗ ಮಾಡಿದ್ದೇನು – ರಾಜೀನಾಮೆಯ ನಾಟಕ. ಅವರು ಆ ಸಂದರ್ಭದಲ್ಲಿ ತಮ್ಮ ನಡೆ ನಾಟಕ ಅಲ್ಲ ಎಂದು ಎಷ್ಟು ಬಾರಿ ಹೇಳಿದರೂ ಅದು ನಾಟಕವೇ ಆಗಿತ್ತು ಎನ್ನಲು ಕಾರಣವೆಂದರೆ ಅವರು ರಾಜೀನಾಮೆಯನ್ನು ಅಂಗೀಕರಣವಾಗುವಂತೆ ನೋಡಿಕೊಳ್ಳಲೇ ಇಲ್ಲ. ತಾಂತ್ರಿಕವಾಗಿ ಮಂತ್ರಿ ಸ್ಥಾನದಲ್ಲಿ, ಸಂಸದರಾಗಿ ಮುಂದುವರಿದರು. ಯಾರಾದರೂ ಕೇಳಿದರೆ ನಾನಾಗಲೇ ರಾಜೀನಾಮೆ ಕೊಟ್ಟಾಗಿದೆ ಎನ್ನುತ್ತಿದ್ದರು. ಆದರೆ ಅದೇ ಸಂದರ್ಭದಲ್ಲಿ ನಡೆದ ರಾಜ್ಯಸಭಾ ಚುನಾವಣೆಗೆ ಮತ ಹಾಕಲು ಬಂದರು. ನೀವು ರಾಜೀನಾಮೆ ನೀಡಿದ್ದೀರಲ್ಲ ಎಂದು ಪತ್ರಕರ್ತರು ಕೇಳಿದಾಗ ಒಂದಿಷ್ಟೂ ಭಿಡೆ ಇಲ್ಲದೆ ‘ನಾನಿನ್ನೂ ಸದಸ್ಯ, ಇಲ್ಲಿದೆ ನೋಡಿ ಐಡೆಂಟಿಟಿ ಕಾರ್ಡ್’ ಎಂದು ಕೆಮರಾ ಮುಂದೆ ಕೈ ತೋರಿದರು.

ಬಹಳ ಕಾಲ ರಾಜಕಾರಣದಲ್ಲಿ ಬೇರು ಮಟ್ಟದಿಂದ ಕೆಲಸ ಮಾಡಿದವರಿಗೆ ಇಂತಹ ನಡೆವಳಿಕೆಗಳು ಬೇಸರ ಹುಟ್ಟಿಸುತ್ತವೆ. ಸಿನಿಮಾದವರು ಸೀರಿಯಸ್ಸಾಗಿ ರಾಜಕಾರಣ ಮಾಡುವುದು ಯಾವಾಗ? ಮತ್ತೊಬ್ಬ ನಟ ಶಶಿಕುಮಾರ್ ದೂ ಇದೇ ನಡವಳಿಕೆ. ಒಂದು ಚಿತ್ರದ ಶೂಟಿಂಗ್ ಗೆಂದು ಚಿತ್ರದುರ್ಗದ ಹತ್ತಿರ ಬಂದಿದ್ದ ಸಮಯದಲ್ಲಿಯೇ ಜೆ.ಎಚ್ ಪಟೇಲರು ಫೋನ್ ಮಾಡಿ ನೀನು ಚಿತ್ರದುರ್ಗ ಲೋಕಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸು ಎಂದರು. ಶಶಿಕುಮಾರ್ ನಾಮಪತ್ರ ಸಲ್ಲಿಸದರು. ಗೆದ್ದೂ ಬಿಟ್ಟರು. ಅಲ್ಲಿವರೆಗೆ ಆ ನಟ ಜೆಡಿ(ಯು) ಸೇರಿರಲಿಲ್ಲ. ಚಿತ್ರನಟನೆಂಬ ಖ್ಯಾತಿ ಮತ್ತು ಮೂರು ಬಾರಿ ಒಂದೇ ವ್ಯಕ್ತಿಯನ್ನು ಆರಿಸಿದ್ದ ಮತದಾರರು ಹೊಸಮುಖಕ್ಕೆ ಮಣೆ ಹಾಕಿದರು. ಮೇಲಾಗಿ ಜಾತಿಬೆಂಬಲವೂ ಇತ್ತು. ಆದರೆ ನಂತರದ ದಿನಗಳಲ್ಲಿ ಈ ಚಿತ್ರನಟನಿಗೆ ಅದೇ ಖ್ಯಾತಿ ಉಳಿಯಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತರು. ಸಂಸದರಾಗಿದ್ದ ವೇಳೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಹಣ ಖರ್ಚು ಮಾಡಿ ಅಲ್ಲಲ್ಲಿ ಸಮುದಾಯ ಭವನ ಕಟ್ಟಿಸಿ ಕಮಿಷನ್ ಪಡೆದರು ಎಂಬ ಆರೋಪಗಳಿವೆ. ಆದರೆ ಅವರೆಂದೂ ಚಿತ್ರದುರ್ಗದ ಜನತೆ ಅನುಭವಿಸುತ್ತಿರುವ ನೀರಾವರಿ ಸಮಸ್ಯೆ ಬಗ್ಗೆ ಗಂಭೀರವಾಗಿ ಮಾತನಾಡಲೇ ಇಲ್ಲ.

ಇನ್ನು ಜಗ್ಗೇಶ್. ಕಾಡಿಬೇಡಿ ಕಾಂಗ್ರೆಸ್ ಟಿಕೆಟ್ ಪಡೆದವರು, ಬೇಡಿ-ಕಾಡಿ ಗೆದ್ದರು. ಆದರೆ ಈ ಕಾಮಿಡಿ ನಟನಿಗೆ ಮತದಾರನ ಬಗ್ಗೆ ಗೌರವ ಇರಲಿಲ್ಲ. ಯಡಿಯೂರಪ್ಪ, ಅಶೋಕ್ ತಮ್ಮ ಕ್ಷೇತ್ರ ಉದ್ಧಾರ ಮಾಡ್ತಾರೆ ಅಂದ್ರು ಎನ್ನುವ ಕಾರಣಕ್ಕೆ ಕೆಲವೇ ದಿನಗಳಲ್ಲಿ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದರು. ಇಂತಹವರಿಂದ ಜನರು ತಾನೇ ಏನು ನಿರೀಕ್ಷಿಸಿಯಾರು? ಈಗ ರಮ್ಯ ರಾಜಕೀಯ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ. ಒಂದು ಪಕ್ಷದ ಕಾರ್ಯಕರ್ತೆ ಎಂದರೆ, ನಾಯಕಿ ಆದರೆ ಅಥವಾ ಜನಪ್ರತಿನಿಧಿ ಯಾದರೆ ದಿನದ ಬಹುಕಾಲ ಜನರ ಮಧ್ಯೆ ಇರಬೇಕು. ಹಿರಿಯ ನಾಯಕರ ಜೊತೆ ಸಭೆಯಲ್ಲಿ ಪಾಲ್ಗೊಳ್ಳಬೇಕು. ತಮ್ಮ ಕ್ಷೇತ್ರದಲ್ಲಿ ಪಕ್ಷ ಸೋತರೆ ಹೊಣೆ ಹೊರಬೇಕು. ಮಗನ ಸ್ಕೂಲ್ ಅಡ್ಮಿಷನ್ ಶಿಫಾರಸ್ಸು ಕೇಳುವವರಿಂದ ಹಿಡಿದು, ರಸ್ತೆ ಮೂಲೆಯಲ್ಲಿ ಕಸದ ಗುಂಡಿ ಕ್ಲೀನ್ ಮಾಡಿಲ್ಲ ಎಂದು ದೂರುವವರನ್ನೂ ತಾಳ್ಮೆಯಿಂದ ಕೇಳಬೇಕು. ಏಕೆಂದರೆ ಡಿ.ಕೆ.ಶಿವಕುಮಾರ್ ಈಗಾಗಲೇ ಸೂಚನೆ ಕೊಟ್ಟಿದ್ದಾರೆ, ಅವರು ರಮ್ಯ ಅವರನ್ನು ಒಕ್ಕಲಿಗ ಡಾಮಿನೆಂಟ್ ಕ್ಷೇತ್ರದಲ್ಲಿ ಲೋಕಸಭೆಗೆ ನಿಲ್ಲಿಸುತ್ತಾರಂತೆ. ಬೆಂಗಳೂರಿನ ಯಾವುದೋ ಒಂದು ಕ್ಷೇತ್ರದಲ್ಲಿ ಮುಂದೆ ನಿಂತರೆ ಅಚ್ಚರಿಯೇನಿಲ್ಲ. (ಅವರು ಸದ್ಯ ಶಾಂತಿನಗರ ಬ್ಲಾಕ್ ಸದಸ್ಯೆ).

ರಾಜಕಾರಣ ರಜೆಕಾಲದಲ್ಲಿ ಹೋಗಿ ಬರುವ ರಮ್ಯತಾಣವಲ್ಲ. ಅದು ಹೊಣೆಗಾರಿಕೆ ಮತ್ತು ಉತ್ತರದಾಯಿತ್ವವನ್ನು ಅಪೇಕ್ಷಿಸುವ ಕ್ಷೇತ್ರ. ರಮ್ಯ ಅವರಾದರೂ ಗಂಭೀರ ರಾಜಕಾರಣಿಯಾಗಲಿ.