Category Archives: ರವಿ ಕೃಷ್ಣಾರೆಡ್ಡಿ

ಯಡ್ಡ್‌ಯೂರಪ್ಪ ಬಂಧನ – ವ್ಯವಸ್ಥೆ ಸುಧಾರಿಸುತ್ತಿರುವ ಭ್ರಮೆ ಬೇಡ

-ರವಿ ಕೃಷ್ಣಾ ರೆಡ್ಡಿ

ಒಂದೆರಡು ತಿಂಗಳ ಹಿಂದೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜನಾರ್ಧನ ರೆಡ್ಡಿ ವಿಚಾರಣಾಧೀನ ಕೈದಿಗಳಾಗಿ ಬಂಧಿತರಾಗಿದ್ದು, ಈಗ ಯಡ್ದ್‌ಯೂರಪ್ಪ ಮತ್ತು ಕೃಷ್ಣಯ್ಯ ಶೆಟ್ಟಿ ಬಂಧನಕ್ಕೊಳಗಾಗಿರುವುದು, ಇವು ಯಾವುವೂ ಅನಿರೀಕ್ಷಿತವಾಗಿಲ್ಲ. ಆದರೆ ಇದು ಇಷ್ಟು ತಡವಾಗಿ ಆಗುತ್ತಿರುವುದೇ ಒಂದು ಅವಮಾನ. ಇನ್ನೂ ಹತ್ತು-ಹಲವಾರು ಶಾಸಕರು/ಸಂಸದರು/ಸಚಿವರು/ಮಾಜಿ ಸಚಿವರು/ಮುಖ್ಯಮಂತ್ರಿಗಳೂ ಬಂಧನಕ್ಕೆ ಮತ್ತು ವಿಚಾರಣೆಗೊಳಪಡದೇ ಇರುವುದೇ ಸದ್ಯಕ್ಕೆ ಆತಂಕಕಾರಿ ವಿಷಯ. ಆ ಆತಂಕಗಳು ಬೇಗ ನಿವಾರಣೆಯಾಗಿ ಭ್ರಷ್ಟರೆಲ್ಲರಿಗೂ ಶಿಕ್ಷೆಯಾದರೆ ಮಾತ್ರ ಆ ಆತಂಕ ಕಮ್ಮಿಯಾಗಬಹುದು.

ಈ ಸಂದರ್ಭದಲ್ಲಿ ನಮ್ಮ ರಾಜಕೀಯ ವ್ಯವಸ್ಥೆ ಸರಿ ಹೋಗುತ್ತಿದೆ ಎಂಬ ಭ್ರಮೆಗಳನ್ನು ನಾವು ಇಟ್ಟುಕೊಳ್ಳುವುದು ಬೇಡ. ಇತ್ತೀಚೆಗೆ ಬಂಧನಕ್ಕೊಳಗಾಗುತ್ತಿರುವ ಯಾವ ರಾಜಕಾರಣಿಗೂ, ಆತನ ಮನೆಯವರಿಗೂ, ಆತನ ಹಿಂಬಾಲಕರಿಗೂ, ಇದೊಂದು ಅವಮಾನದ ಪ್ರಶ್ನೆ; ನಾವು ತಪ್ಪಿಮಾಡಿದೆವು; ಮುಂದಕ್ಕಾದರೂ ತಿದ್ದಿಕೊಳ್ಳಬೇಕು, ಎಂಬ ಭಾವನೆ ಹುಟ್ಟಿದೆ/ಹುಟ್ಟುತ್ತದೆ ಎಂಬ ಅವಾಸ್ತವಿಕೆ ಕಲ್ಪನೆಗಳನ್ನು ನಾವು ಇಟ್ಟುಕೊಳ್ಳಬಾರದು. ಇವೆಲ್ಲಾ ತಾತ್ಕಾಲಿಕ ರಾಜಕೀಯ ಅಥವ ವೈಯಕ್ತಿಕ ಬದುಕಿನ ಹಿನ್ನಡೆ ಎಂದು ಅವರು ಭಾವಿಸುತ್ತಿದ್ದಾರೆಯೇ ಹೊರತು ಬೇರೆ ರೀತಿ ಅವರ್ಯಾರೂ ಪರಿಭಾವಿಸುತ್ತಿಲ್ಲ.. ಬಹುಶಃ ಕರ್ನಾಟಕದ ಜನಸಾಮಾನ್ಯರೂ ಸಹ ಮೆರೆದವರ ಅಹಂಕಾರಕ್ಕೆ ಪೆಟ್ಟು ಬಿತ್ತು ಎಂದು ಬಾವಿಸುತ್ತಿದ್ದಾರೆಯೇ ಹೊರತು, ಇಡೀ ಸಮಾಜ ತನ್ನ ನಡೆಯನ್ನು ಬದಲಾಗಿಸಿಕೊಳ್ಳಬೇಕು, ಈ ಭ್ರಷ್ಟಾಚಾರ ಒಂದು ಕೆಟ್ಟ ಮೌಲ್ಯ ಮತ್ತು ಅದನ್ನು ತಾವೂ ಪ್ರತಿರೋಧಿಸಬೇಕು ಎಂಬ ತೀರ್ಮಾನಕ್ಕೆ/ಹಂತಕ್ಕೆ ಬಂದಿದೆ ಎಂದು ನನಗನ್ನಿಸುವುದಿಲ್ಲ. ಹಗಲುದರೋಡೆ ಕಮ್ಮಿಯಾಗಬಹುದು. ಆದರೆ ದರೋಡೆ ಕೆಟ್ಟದ್ದು ಎಂಬ ಮೌಲ್ಯ ಪುನ: ಮುಂಚೂಣಿಗೆ ಬಂದಿದೆ ಎನ್ನುವುದನ್ನು ನಾನು ಒಪ್ಪಲಾರೆ.

ಬಿಜೆಪಿಯ ನಡವಳಿಕೆಯನ್ನೇ ಗಮನಿಸಿ. ಆ ಪಕ್ಷದ ಮುಖಂಡರೆಲ್ಲ ಒಬ್ಬೊಬ್ಬರಾಗಿ ಬಂಧನಕ್ಕೊಳಗಾಗುತ್ತಿದ್ದು, ಆ ಬಂಧಿತರ ಮೇಲಿನ ಆರೋಪಗಳೆಲ್ಲ ಮೇಲ್ನೋಟಕ್ಕೆ ಸಾಬೀತಾಗುವಷ್ಟು ಸ್ಪಷ್ಟವಾಗಿ ಕಾಣಿಸುತ್ತಿದ್ದರೂ, ಆ ಪಕ್ಷದ ರಾಜ್ಯ ನಾಯಕತ್ವ ಈಗಲೂ ಅವರ ಪರ ವಹಿಸಿಯೇ ಮಾತನಾಡುತ್ತಿದೆ. ಐದಾರು ಶಾಸಕರು ಬಂಧಿತರ ಜೊತೆಗೆ ಜೈಲಿನ ಬಾಗಿಲಿನ ತನಕ ಹೋಗಿ ಬೀಳ್ಕೊಟ್ಟು ಬರುತ್ತಾರೆ. ಕೇಂದ್ರ ನಾಯಕತ್ವ ಅವರ ಪರ ನಿಲ್ಲುತ್ತೇವೆ ಎನ್ನುತ್ತದೆ. ದೇಶದ ಎರಡನೇ ದೊಡ್ಡ ಪಕ್ಷಕ್ಕೆ ತನ್ನ ಪಕ್ಷದಲ್ಲಿನ ಭ್ರಷ್ಟರನ್ನು disown ಮಾಡಬೇಕು ಎನ್ನುವ ಭಾವನೆಯೇ ಬರುತ್ತಿಲ್ಲ. ತನ್ನ ಪಕ್ಷದ ಸ್ಥಿತಿಯನ್ನೇ ಲೇವಡಿ ಮಾಡುವಂತಿದೆ ಅದ್ವಾನಿಯವರ ಇತ್ತೀಚಿನ ರಥಯಾತ್ರೆ.

ಇನ್ನು, ಲೋಕಾಯುಕ್ತರ ವರದಿಯನ್ನು ಒಪ್ಪಿಕೊಳ್ಳಲಾಗದ ಬಿಜೆಪಿ ಸರ್ಕಾರ ತಾಂತ್ರಿಕ ಕಾರಣಗಳ ಮೊರೆ ಹೋಗಿದೆ. ಇದು ದಾರಿ ತಪ್ಪಿಸುವ ಭ್ರಷ್ಟ ನಡವಳಿಕೆ. ಆದರೆ, ಸರ್ಕಾರದ ಈ ಭಂಡ ತೀರ್ಮಾನಕ್ಕೆ ಜನರ ಮತ್ತು ರಾಜಕಾರಣಿಗಳ ಪ್ರತಿಕ್ರಿಯೆ ನೋಡಿ. ಇಂದು ಈ ವಿಷಯದ ಬಗ್ಗೆ ಸಂತೋಷ ಹೆಗಡೆಯವರು ಮಾತನಾಡಿರುವುದು ಬಿಟ್ಟರೆ ಮಿಕ್ಕ ಯಾವ ಜನಪ್ರತಿನಿಧಿಗಳೂ, ನಾಗರಿಕ ಸಮಾಜದ ನಾಯಕರೂ, ಗಟ್ಟಿಯಾಗಿ ಮಾತನಾಡಿದ್ದು ಕಾಣಿಸುತ್ತಿಲ್ಲ. ಈ ವರದಿಯ ಮಂಜೂರಾತಿಗೆ ಆಗ್ರಹಿಸಿ ಜನಾಂದೋಲನ ರೂಪಿಸಬೇಕಿದ್ದ ಕಾಂಗ್ರೆಸ್‍ ತನ್ನ ಜವಾಬ್ದಾರಿಯನ್ನೇ ಮರೆತಿದೆ. ಇನ್ನು ಆ ಕೆಲಸ ಜೆಡಿಎಸ್ ಮಾಡಲಾರದು. ಮಿಕ್ಕವರೆಲ್ಲ ಕರ್ನಾಟಕದ ಮಟ್ಟಿಗೆ ನಗಣ್ಯ ಮತ್ತು ಅವರು ಸಶಕ್ತ ಜನಾಂದೋಲನ ರೂಪಿಸುವ ಸ್ಥಿತಿಯಲ್ಲಾಗಲಿ, ಜನ ಅದಕ್ಕೆ ಬೆಂಬಲಿಸುವ ಪರಿಸ್ಥಿತಿಯಾಗಲಿ ಕರ್ನಾಟಕದಲ್ಲಿಲ್ಲ.

ಇವೆಲ್ಲವನ್ನೂ ನೋಡಿದರೆ, ಯಡ್ಡ್‌ಯೂರಪ್ಪನವರ ಬಂಧನ ಈ ವ್ಯವಸ್ಥೆ ಸುಧಾರಿಸುತ್ತಿರುವ ಲಕ್ಷಣ ಎಂದೇನೂ ನನಗೆ ಅನ್ನಿಸುತ್ತಿಲ್ಲ. ಇದು ಕೆಲವೇ ಕೆಲವು ದಡ್ಡ ಅಥವ ಅಹಂಕಾರಿ ಭ್ರಷ್ಟರಿಗೆ ಆದ ಹಿನ್ನಡೆ ಅಷ್ಟೇ. ಇದು ಸಮಾಜದಲ್ಲಿನ ಭ್ರಷ್ಟಾಚಾರಕ್ಕೆ ಆದ ಹಿನ್ನಡೆ ಅಲ್ಲ.

ಇವತ್ತಿನ ವಿಷಯದ ಮಟ್ಟಿಗೆ ಹೇಳುವುದಾದರೆ, ಕೃಷ್ಣಯ್ಯ ಶೆಟ್ಟಿಯ ನಡವಳಿಕೆ ಮಾನಗೇಡಿಯದ್ದು. (ಇನ್ನು ಯಡ್ಡ್‌ಯೂರಪ್ಪನವರ ಇಂದಿನ ನಗುಮೊಗ ಬಹುಶ: ಆ ವ್ಯಕ್ತಿಗೆ ತಾನು ಚರಿತ್ರೆಯಲ್ಲಿ ದಾಖಲಾಗುತ್ತಿದ್ದೇನೆ ಎಂಬ ಹೆಮ್ಮೆಯಲ್ಲಿ ಇರುವ ಹಾಗೆ ತೋರುತ್ತಿತ್ತು. ಈ ವ್ಯಕ್ತಿಯ ಮಾನಸಿಕ ಸ್ಥಿತಿ ಖಂಡಿತವಾಗಿ ಸಹಜವಾಗಿದ್ದಂತಿಲ್ಲ.) ಕೃಷ್ಣ್ಯಯ್ಯ ಶೆಟ್ಟಿಗೆ ಯಾರೋ ತನಗೆ ವಂಚನೆ ಮಾಡಿದ ಹಾಗೆ ಎನ್ನಿಸಿರಬಹುದೇ ಹೊರತು ಅವರಿಗೆ ತಾನೊಬ್ಬ ಪ್ರಜಾಪ್ರತಿನಿಧಿಯಾಗುವ ಅರ್ಹತೆಯಿಲ್ಲ ಕ್ಷುದ್ರ ವಂಚಕ ಎಂಬ ತಿಳಿವಳಿಕೆಯೇ ಇದ್ದಂತಿಲ್ಲ. ಯಡ್ಡ್‌ಯೂರಪ್ಪನವರ ಸರ್ಕಾರದಲ್ಲಿ ಎಲ್ಲರಿಗಿಂತ ಮೊದಲು ಜೈಲು ಸೇರಬೇಕಾಗಿದ್ದರೆ ಅದು ಶೆಟ್ಟಿಯೇ ಆಗಿದ್ದರು. ಆದರೆ ನಮ್ಮ ಪೋಲಿಸ್-ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆಗಳು-ಕಾನೂನು-ವಿರೋಧ ಪಕ್ಷಗಳು, ಇವು ಯಾವುವೂ ಕೃಷ್ಣಯ್ಯ ಶೆಟ್ಟಿ ರಾಜೀನಾಮೆ ನೀಡಿದ ಕೇಸಿಗೆ ಸಂಬಂಧಿಸಿದಂತೆ ತಮ್ಮ ಕಾರ್ಯ ಸಂಪೂರ್ಣವಾಗಿ ನಿರ್ವಹಿಸಲೇ ಇಲ್ಲ. ಆಗಲೇ ಶೆಟ್ಟಿಯ ಬಂಧನವಾಗಿ ಶಿಕ್ಷೆಯಾಗಿದ್ದರೆ ಇವತ್ತಿನ ಈ ಮಹಾದ್ರೋಹಗಳು ಈ ಮಟ್ಟಿಗೆ ಬೆಳೆಯುತ್ತಿರಲಿಲ್ಲ. ಎಲ್ಲರಿಗಿಂತಲೂ ಮೊದಲು ಬಂಧನವಾಗಿ, ಶಿಕ್ಷೆಯೂ ಪಡೆಯಬೇಕಿದ್ದ ವ್ಯಕ್ತಿಯ ಆ ಹಗರಣ ಮರೆತುಹೋಗಿರುವುದೇ ಒಂದು ಅವಮಾನ. ಆ ಮನುಷ್ಯ ಅಂತಹುದರಲ್ಲೆಲ್ಲ ಬಚಾವಾಗಿ ಬಂದ ಭಂಡತನವೇ ನಮ್ಮ ರಾಜಕೀಯ ನಾಯಕರಿಗೆ ಇನ್ನೂ ಹೆಚ್ಚಿನ ಭಂಡರೂ ಭ್ರಷ್ಟರೂ ಆಗುವುದಕ್ಕೆ ಧೈರ್ಯ ಕೊಟ್ಟಿತು ಎನ್ನಿಸುತ್ತದೆ. ಆ ಹಗರಣದ ಬಗ್ಗೆ 2009ರಲ್ಲಿ ಬರೆದ ಈ ಲೇಖನ ಈಗಲೂ ಪ್ರಸ್ತುತ ಎಂದು ಇಲ್ಲಿ ಕೊಡುತ್ತಿದ್ದೇನೆ.

ಮಾರ್ಥಾ ಸ್ಟುವರ್ಟಳೂ, ಕೃಷ್ಣಯ್ಯ ಶೆಟ್ಟಿಯೂ…
[ವಿಕ್ರಾಂತ ಕರ್ನಾಟಕದ ಆಗಸ್ಟ್ 7, 2009ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ.]

ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ಸರ್ಕಾರದ ಒಳಗೆ ಮತ್ತು ಅದರ ಸುತ್ತಮುತ್ತ ನಡೆದ ಹಗರಣಗಳನ್ನು ನೆನಪಿಸಿಕೊಳ್ಳಿ… ಹೇಗೆ ತಾನೆ ಅಷ್ಟು ಸುಲಭವಾಗಿ ನೆನಪಾದೀತು? ಇಲ್ಲ, ನಾನು Public memory is short ಎಂಬ ಗಾದೆಯ ಆಧಾರದ ಮೇಲೆ ನಿಮ್ಮನ್ನು ಚುಡಾಯಿಸುತ್ತಿಲ್ಲ. ನಿಜಕ್ಕೂ ನಮಗೆ ಗೊತ್ತಾದ, ಜನಮಾನಸಕ್ಕೆ ಗಂಭೀರ ಎನ್ನಿಸಿದಂತಹ, ಸರ್ಕಾರವೆ ಬೀಳುವಂತಹ ಹಗರಣಗಳು ನಡೆದದ್ದು ಕಮ್ಮಿಯೆ. ಛಾಪಾ ಕಾಗದದ ಹಗರಣ, ಅಕ್ಕಿ ಹಗರಣ,… ದೊಡ್ಡ ಹಗರಣಗಳನ್ನು ನೆನಪಿಸಿಕೊಳ್ಳುತ್ತ ನನ್ನ ನೆನಪೂ ಅಲ್ಲಿಗೇ ನಿಲ್ಲುತ್ತದೆ.

ಈಗ ಕಳೆದ ಹತ್ತೇ ವರ್ಷಗಳಲ್ಲಿ ಶ್ರೀಮಂತಿಕೆಯ ಅನೇಕ ಮಜಲುಗಳನ್ನು ದಾಟಿದ ಕರ್ನಾಟಕದ ರಾಜಕಾರಣಿಗಳ ವಿಚಾರಕ್ಕೆ ಬರೋಣ. ಇವತ್ತಿನ ಯಾವುದೆ ಪ್ರಸಿದ್ಧ ರಾಜಕಾರಣಿಯನ್ನು, ಶಾಸಕನನ್ನು, ಮಂತ್ರಿಯನ್ನು ತೆಗೆದುಕೊಂಡರೂ ಅವರು ತಾವು ರಾಜಕೀಯಕ್ಕೆ ಅಥವ ಅಧಿಕಾರಕ್ಕೆ ಬರುವ ಮೊದಲು ಇದ್ದ ಆರ್ಥಿಕ ಸ್ಥಿತಿಯಲ್ಲಿ ಇವತ್ತು ಇಲ್ಲ. ಇಲ್ಲಿ ಬೆರಳೆಣಿಕೆಯಷ್ಟು ಅಪವಾದಗಳಿರಬಹುದು. ಅವನ್ನು ಸದ್ಯದ ಚರ್ಚೆಯಲ್ಲಿ ಉಪೇಕ್ಷಿಸೋಣ. ಇವತ್ತು ಕನಿಷ್ಠ ಹತ್ತಿಪ್ಪತ್ತು ರಾಜಕಾರಣಿಗಳಾದರೂ ಒಬ್ಬೊಬ್ಬರೂ ಸಾವಿರ ಕೋಟಿಗಿಂತ ಬೆಲೆ ಬಾಳುತ್ತಾರೆ. ಒಂದಿಬ್ಬರು (ವ್ಯಕ್ತಿ ಅಥವ ಕುಟುಂಬಗಳು) ಡಾಲರ್ ಲೆಕ್ಕದಲ್ಲೂ ಬಿಲಿಯನೇರ್‌ಗಳಾಗಿರಬಹುದು (ಸುಮಾರು 5000 ಕೋಟಿ ರೂಪಾಯಿ.) ಇನ್ನು ರೂಪಾಯಿ ಬಿಲಿಯನೇರ್ (ಶತಕೋಟಿ) ಗಳಂತೂ ಸುಲಭವಾಗಿ ನೂರು ದಾಟಬಹುದು. ಇವರಲ್ಲಿ ಬಹುಪಾಲು ಜನ ಸಾಮಾನ್ಯ ಹಿನ್ನೆಲೆಯಿಂದ ಬಂದವರು. ಒಂದಷ್ಟು ಜನ ಆಗರ್ಭ ಶ್ರೀಮಂತರೂ ಇರಬಹುದು. ಆದರೆ ಅವರ ಉದ್ದಿಮೆ ಅಥವ ಆದಾಯಗಳು ನೂರಾರು ಕೋಟಿ ಮುಟ್ಟುವ ಹಾಗೇನೂ ಇದ್ದಿರಲಾರದು.

ಇಷ್ಟಾದರೂ, ಅದು ಹೇಗೆ ನಮ್ಮ ಹಾಲಿ-ಮಾಜಿ ಶಾಸಕರು, ಮಂತ್ರಿಗಳು, ಸಂಸದರು ಈ ಪರಿಯಲ್ಲಿ ಶ್ರೀಮಂತರಾದರು? ಆಗುತ್ತಿದ್ದಾರೆ? ಯಾವುದೊ ಸರ್ಕಾರಿ ಯೋಜನೆಯಲ್ಲಿ ಅಥವ ಇನ್ಯಾವುದೊ ಇಲಾಖೆಯಲ್ಲಿ ಜನರ ದುಡ್ಡಿಗೆ ಮೋಸ ಮಾಡಿದ್ದಾರೆ ಎಂದು ಹೇಳೋಣ ಎಂದರೆ, ಅಂತಹ ಹಗರಣಗಳೂ ಕಾಣಿಸುತ್ತಿಲ್ಲ. ಹಾಗಾದರೆ, ಇನ್ಯಾವ ಪವಾಡಗಳನ್ನು ಮಾಡಿ, ಜಾದೂ ಮಾಡಿ, ಇವರು ಇಷ್ಟು ಹಣ ಗಳಿಸಿದ್ದು, ಗಳಿಸುತ್ತಿರುವುದು?

ಮಾರ್ಥಾ ಸ್ಟುವರ್ಟ್ ಎನ್ನುವ ಅಮೆರಿಕನ್ ಮಹಿಳೆ ಇವತ್ತು ಸುಮಾರು 3000 ಕೋಟಿ ರೂಪಾಯಿಗೂ ಮೀರಿದ ಸಂಪತ್ತಿನ ಒಡತಿ. ಹಲವು ಪುಸ್ತಕಗಳನ್ನು ಬರೆದಿರುವ, ಟಿವಿಯಲ್ಲಿ ಟಾಕ್ ಷೋ ನಡೆಸುತ್ತಿದ್ದ, ಮ್ಯಾಗಝೀನ್ ಒಂದರ ಮತ್ತು ಹಲವಾರು ವ್ಯವಹಾರ-ಉದ್ದಿಮೆಗಳ ಒಡತಿಯೂ ಆಗಿರುವ ಈಕೆ ಅಮೆರಿಕದ ಪ್ರಸಿದ್ಧ ಹೆಂಗಸರಲ್ಲಿ ಒಬ್ಬಳು. ಫ್ಯಾಷನ್ ಉದ್ದಿಮೆಯಲ್ಲೂ ದೊಡ್ಡ ಹೆಸರು. 1999ರಲ್ಲಿ ಷೇರು ಮಾರುಕಟ್ಟೆಗೆ ಬಿಟ್ಟ ತನ್ನ ಕಂಪನಿಯ ಷೇರುಗಳ ಲೆಕ್ಕಾಚಾರದಲ್ಲಿ ರಾತ್ರೋರಾತ್ರಿ ಬಿಲಿಯನೇರ್ ಸಹ ಆಗಿದ್ದಳು. ಆದರೆ ನಾನು ಈಗ ಪ್ರಸ್ತಾಪಿಸಲಿರುವುದು ಆಕೆಯ ಸಾಧನೆ ಅಥವ ಯಶಸ್ಸುಗಳ ಕತೆಯನ್ನಲ್ಲ. ತನ್ನ ಯಶಸ್ಸಿನ ಉತ್ತುಂಗದಲ್ಲಿ, ಸಾವಿರಾರು ಕೋಟಿಗಳ ಒಡತಿಯಾಗಿದ್ದ ಸಮಯದಲ್ಲಿ, ಕೇವಲ 20 ಲಕ್ಷ ರೂಪಾಯಿಯ ನಷ್ಟ ಸರಿದೂಗಿಸಿಕೊಳ್ಳಲು ಆಕೆ ಒಂದು ತಪ್ಪು ಮಾಡಿದಳು. ಅದಕ್ಕಾಗಿ 2004 ರಲ್ಲಿ ಐದು ತಿಂಗಳು ಜೈಲಿನಲ್ಲಿದ್ದಳು. ಬಿಡುಗಡೆಯಾದ ನಂತರ ಮತ್ತೆ ಐದು ತಿಂಗಳು ತನ್ನದೆ ಮನೆಯಲ್ಲಿ ಗೃಹಬಂಧನದಲ್ಲಿದ್ದಳು ಮತ್ತು ಆ ಸಮಯದಲ್ಲಿ ಆಕೆಯ ಕಾಲಿಗೆ ಆಕೆ ಯಾವ ಸಮಯದಲ್ಲಿ ಎಲ್ಲಿ ಇದ್ದಾಳೆ ಎಂದು ಟ್ರ್ಯಾಕ್ ಮಾಡಬಲ್ಲ ಎಲೆಕ್ಟ್ರಾನಿಕ್ ತಾಯಿತವೊಂದನ್ನು ಕಟ್ಟಲಾಗಿತ್ತು. ಅದಾದ ನಂತರವೂ ಆಕೆ ಐದು ವರ್ಷಗಳ ಕಾಲ ಯಾವುದೆ ಕಂಪನಿಯ ಮುಖ್ಯಸ್ಥೆ ಆಗದಂತೆ ಅಥವ ಯಾವುದೆ ಕಂಪನಿಯ ನಿರ್ದೇಶಕ ಹುದ್ದೆ ಒಪ್ಪಿಕೊಳ್ಳಲಾಗದಂತೆ ನಿರ್ಬಂಧ ಹೇರಲಾಯಿತು. ಈಗಲೂ ಸುಮಾರು 3000 ಕೋಟಿ ರೂಪಾಯಿಗೂ ಮೀರಿದ ಆಸ್ತಿಯ ಒಡತಿಯಾಗಿರುವ ಈ ಪ್ರಸಿದ್ಧ ಮಹಿಳೆಗೆ ಕಳೆದ ವರ್ಷ ತಾನೆ ಬ್ರಿಟಿಷ್ ಸರ್ಕಾರ ತನ್ನ ದೇಶಕ್ಕೆ ವೀಸಾ ಸಹಾ ನಿರಾಕರಿಸಿತ್ತು.

ಇಷ್ಟಕ್ಕೂ ಆಕೆ ಮಾಡಿದ ತಪ್ಪಾದರೂ ಏನು?

ಷೇರು ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಕಂಪನಿಗಳು ತಮ್ಮ ಹಿರಿಯ ಅಧಿಕಾರಿಗಳಿಗೆ, ಮುಖ್ಯ ನೌಕರರಿಗೆ, ಮತ್ತು ನಿರ್ದೇಶಕ ಮಂಡಳಿಯ ನಿರ್ದೇಶಕರಿಗೆ ಕೇವಲ ಸಂಬಳವನ್ನಷ್ಟೆ ಅಲ್ಲದೆ ಬೋನಸ್ ರೀತಿಯಲ್ಲಿ ಒಂದಷ್ಟು ಷೇರುಗಳನ್ನೂ ನೀಡಿರುತ್ತದೆ. ಇದು ಸಾವಿರಗಳಿಂದ ಲಕ್ಷಗಳನ್ನು ದಾಟುತ್ತದೆ; ಅವರವರ ಯೋಗ್ಯತೆಯ ಮೇಲೆ. ತಮ್ಮದೇ ಕಂಪನಿಯ ಆ ಷೇರುಗಳನ್ನು ಕಂಪನಿಯ ಲಾಭನಷ್ಟದ ಬಗ್ಗೆ ಅರಿವಿರುವ ಹಿರಿಯ ಅಧಿಕಾರಿಗಳು ಮತ್ತು ನಿರ್ದೇಶಕರು ಯಾವಾಗಲೆಂದರೆ ಆಗ ಮಾರಾಟ ಮಾಡುವ ಹಾಗೆ ಇಲ್ಲ. ‘ಕಂಪನಿ ಈ ತ್ರೈಮಾಸಿಕದಲ್ಲಿ ಲಾಭ ಮಾಡಿದೆ, ಆ ವಿಚಾರ ಇನ್ನೂ ಹೊರಗಿನವರಿಗೆ ಗೊತ್ತಿಲ್ಲ, ಗೊತ್ತಾದ ನಂತರ ಷೇರುಗಳ ಬೆಲೆ ಮೇಲೆ ಹೋಗುತ್ತದೆ, ಲಾಭ ಮಾಡಿಕೊಳ್ಳಲು ಇದೇ ಸಮಯ, ಹಾಗಾಗಿ ಒಂದಷ್ಟು ಷೇರುಗಳನ್ನು ಈಗಿನ ಕಮ್ಮಿ ಬೆಲೆಗೆ ಕೊಂಡುಕೊಳ್ಳೋಣ,’ ಎಂದೆಲ್ಲ ಲೆಕ್ಕ ಹಾಕಿ ಅವರು ತಕ್ಷಣವೆ ಷೇರುಗಳನ್ನು ಕೊಳ್ಳುವ ಹಾಗೆ ಇಲ್ಲ. ಅದೇ ರೀತಿ ತಮ್ಮ ಕಂಪನಿ ನಷ್ಟದ ಹಾದಿಯಲ್ಲಿರುವ ಲಕ್ಷಣಗಳು ಗೊತ್ತ್ತಾದರೆ ಮತ್ತು ಅವರಿಗೆ ಗೊತ್ತಿರುವ ವಿಚಾರಗಳು ಬಹಿರಂಗವಾದ ಮೇಲೆ ಅವರ ಕಂಪನಿಯ ಷೇರಿನ ಬೆಲೆ ಇಳಿಯುತ್ತದೆ ಎನ್ನುವ ಸೂಕ್ಷ್ಮಗಳು ಗೊತ್ತಾದಾಗಲೂ ತಮ್ಮಲ್ಲಿರುವ ಷೇರುಗಳನ್ನು ಕೂಡಲೆ ಮಾರುವ ಹಾಗೂ ಇಲ್ಲ. ಅದು ಅನೈತಿಕ. ತಮ್ಮ ಸ್ಥಾನದ ಬಲದಿಂದ ತಮಗೆ ಗೊತ್ತಾದ ವಿಚಾರವೊಂದನ್ನು ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುವ ಹೀನ, ಮೌಲ್ಯರಹಿತ, ಅನೈತಿಕ ನಡವಳಿಕೆ (Unethical) ಅದು. ಕಂಪನಿಯೊಂದರ ಷೇರುಗಳನ್ನು ಕೊಂಡುಕೊಂಡಿರುವ ಸಾರ್ವಜನಿಕರಿಗೆ ಎಸಗುವ ಮಹಾವಂಚನೆ. ಅದನ್ನು ಬ್ಯುಸಿನೆಸ್ ಪ್ರಪಂಚದ ಪರಿಭಾಷೆಯಲ್ಲಿ Insider Trading ಎನ್ನುತ್ತಾರೆ. ಯಾರಾದರೂ ಹಾಗೆ ಮಾಡಿದ್ದು ಸಾಬೀತಾದರೆ ಅದೊಂದು ಕ್ರಿಮಿನಲ್ ಅಪರಾಧ. ಅದಕ್ಕೆ ಜೈಲು ಶಿಕ್ಷೆಯೂ ಆಗುತ್ತದೆ.

ಮಾರ್ಥಾ ಸ್ಟುವರ್ಟ್ ಎಸಗಿದ ಅಪರಾಧವೂ ಅದೇನೆ. 2001ನೇ ಇಸವಿಯ ಸುಮಾರಿನಲ್ಲಿ ಇಮ್ಕ್ಲೋನ್ ಎನ್ನುವ ಕಂಪನಿಯ ಬೋರ್ಡಿನಲ್ಲಿ ಆಕೆ ನಿರ್ದೇಶಕಿ ಆಗಿದ್ದಳು. ಅದೊಂದು ದಿನದ ಮೀಟಿಂಗ್‌ನಲ್ಲಿ ಆ ಕಂಪನಿಯ ವೈದ್ಯಕೀಯ ಉತ್ಪನ್ನವೊಂದಕ್ಕೆ ಸರ್ಕಾರದ ಪರವಾನಗಿ ಸಿಕ್ಕಿಲ್ಲ ಎಂಬ ವಿಚಾರ ಆಕೆಗೂ ಸೇರಿದಂತೆ ಆ ಕಂಪನಿಯ ಮುಖ್ಯ ಮಂದಿಗೆಲ್ಲ ಗೊತ್ತಾಯಿತು. ಅದರಲ್ಲಿ ಒಂದಷ್ಟು ಜನ ಅಂದೇ ತಮ್ಮ ಷೇರುಗಳನ್ನು ಮಾರಿಕೊಂಡರು. ತನಗೆ ಆಗಬಹುದಾಗಿದ್ದ 45 ಸಾವಿರ ಡಾಲರ್‌ಗಳ ನಷ್ಟವನ್ನು ನಿವಾರಿಸಿಕೊಳ್ಳಲು ಸ್ವತಃ ಬಿಲಿಯನೇರ್ ಆಗಿದ್ದ ಮಾರ್ಥಾಳೂ ಆ ಕಂಪನಿಯ ತನ್ನ ಷೇರುಗಳನ್ನು ಮಾರಿಬಿಡಲು ಕೂಡಲೆ ತನ್ನ ಏಜೆಂಟನಿಗೆ ತಿಳಿಸಿದಳು. ಮಾರನೆಯ ದಿನ ಆ ಕಂಪನಿಯ ಉತ್ಪನ್ನಕ್ಕೆ ಪರವಾನಗಿ ಸಿಕ್ಕಿಲ್ಲದ ವಿಚಾರ ಬಹಿರಂಗವಾಯಿತು. ಒಂದೇ ದಿನದಲ್ಲಿ ಆ ಕಂಪನಿಯ ಷೇರುಗಳ ಬೇಲೆ ಶೇ.18 ರಷ್ಟು ಬಿದ್ದು ಹೋಯಿತು. ಅಂದಿನ ಹಿಂದಿನ ದಿನ ಕೆಲವು Insiders ತಮ್ಮ ಷೇರುಗಳನ್ನು ಮಾರಾಟ ಮಾಡಿರುವ ವಿಚಾರ ನಂತರದ ದಿನಗಳಲ್ಲಿ ಬಯಲಿಗೆ ಬಂತು. ಮಾರ್ಥಾ ಏನೇನೊ ನಾಟಕ ಆಡಿದಳು. ಆದರೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಆಕೆಯಿಂದಾಗಲಿಲ್ಲ. ತನ್ನ ಆ ಅನೈತಿಕ ಕೃತ್ಯಕ್ಕೆ ಈಗಲೂ ಆಕೆ ಶಿಕ್ಷೆ ಅನುಭವಿಸುತ್ತಿದ್ದಾಳೆ. ದುಡ್ಡಿನ ವಿಚಾರದಲ್ಲಿ ಅದೊಂದು ಸಣ್ಣ ಮೊತ್ತದ ತಪ್ಪು. ಆದರೆ ಮೌಲ್ಯ, ನೀತಿ, ಮತ್ತು ನೈತಿಕತೆಯ ದೃಷ್ಟಿಯಿಂದ ಅದೊಂದು ಗಂಭೀರ ಅಪರಾಧ. ತಮ್ಮ ಸ್ಥಾನಬಲವನ್ನು ಸ್ವಂತಲಾಭಕ್ಕೆ ಬಳಸಿಕೊಳ್ಳುವ ಹೀನಾತಿಹೀನ ನಡವಳಿಕೆ. (ನಮ್ಮಲ್ಲಿ ಕೆಲವರಿಗೆ ಈ ಪದಬಳಕೆ ಮತ್ತು ಈ ಅಭಿಪ್ರಾಯ ಕಠೋರವೆಂದೂ, ಮಾರ್ಥಾ ಸ್ಟುವರ್ಟ್ ಮಾಡಿದ್ದು ಅಂತಹ ದೊಡ್ಡ ತಪ್ಪೇನೂ ಅಲ್ಲವೆಂದೂ ಅನ್ನಿಸಿದರೆ, ಹಾಗೆ ಅನ್ನಿಸುವುದು ಅಸಹಜ ಎಂದೇನೂ ನಾನು ಭಾವಿಸುವುದಿಲ್ಲ. ದುರದೃಷ್ಟಕರ ವಾತಾವರಣ ಇದು. ಅದಕ್ಕೆ ಕಾರಣಗಳನ್ನು ನ್ಯಾಯ-ಮೌಲ್ಯ-ನೈತಿಕತೆಯನ್ನು ನಮ್ಮಲ್ಲಿ ಪರಿಭಾವಿಸಿರಬಹುದಾದ ಮತ್ತು ಶಿಕ್ಷಣದ ಗುಣಮಟ್ಟದ ನೆಲೆಯಲ್ಲಿ ಗುರುತಿಸಬೇಕು.)

ಈಗ, ಮಾರ್ಥಾ ಸ್ಟುವರ್ಟ್‌ಳ ಹಗರಣವನ್ನು ಮೂಲವಾಗಿ ಇಟ್ಟುಕೊಂಡು ನಮ್ಮಲ್ಲಿ ಒಂದೆರಡು ವಾರದ ಹಿಂದೆ ತಾನೆ ಬಯಲಿಗೆ ಬಂದ ಕೃಷ್ಣಯ್ಯ ಶೆಟ್ಟಿ ಮತ್ತು ಶಿಡ್ಲಘಟ್ಟ ಭೂಹಗರಣವನ್ನು ವಿಶ್ಲೇಷಿಸೋಣ. ಸರ್ಕಾರದಲ್ಲಿ ಯಾವಯಾವ ಯೋಜನೆಗಳು ಯಾವಯಾವ ಸ್ಥಳದಲ್ಲಿ ಎಂತಹ ಸಮಯದಲ್ಲಿ ಅನುಷ್ಠಾನಕ್ಕೆ ಬರಲಿವೆ ಎನ್ನುವ ವಿಚಾರಗಳು ಕೆಲವು ಹಿರಿಯ ಅಧಿಕಾರಿಗಳಿಗೂ, ಮಂತ್ರಿಗಳಿಗೂ, ಮುಖ್ಯಮಂತ್ರಿಗಳಿಗೂ, ಅವರ ಹಿಂಬಾಲಕರಿಗೂ, ಮತ್ತು ಒಂದಷ್ಟು ಶಾಸಕರಿಗೂ ನಿಖರವಾಗಿ ಗೊತ್ತಾಗುತ್ತದೆ. ತಕ್ಷಣವೆ ಈ ಗುಂಪಿನಲ್ಲಿರುವ ಖದೀಮರು ಯೋಜನೆಯೊಂದು ಅನುಷ್ಠಾನಕ್ಕೆ ಬರಲಿರುವ ಸುತ್ತಮುತ್ತಲ ಸ್ಥಳವನ್ನು ತುಂಬ ಅಗ್ಗವಾಗಿ ರಾತ್ರೋರಾತ್ರಿ ತಮ್ಮ ಸಂಬಂಧಿಗಳ ಹೆಸರಿನಲ್ಲಿ, ಹಿಂಬಾಲಕರ ಹೆಸರಿನಲ್ಲಿ, ಬೇನಾಮಿ ಹೆಸರಿನಲ್ಲಿ, ಕೊಂಡುಕೊಂಡುಬಿಡುತ್ತಾರೆ. ನಂತರ ಅದೇ ಜಮೀನನ್ನು ತಮ್ಮದೆ ಸುಪರ್ದಿಯಲ್ಲಿರುವ ಸರ್ಕಾರಕ್ಕೆ ಅಸಹಜವಾದ ಬೆಲೆಗೆ, “ಮಾರುಕಟ್ಟೆ ಬೆಲೆ” ಎಂಬ ಹೆಸರಿನಲ್ಲಿ ಮಾರಿಬಿಡುತ್ತಾರೆ. ವಿಶ್ವವಿದ್ಯಾಲಯಗಳು, ವಿಮಾನ ನಿಲ್ದಾಣಗಳು, ಕೈಗಾರಿಕಾ ಪ್ರದೇಶಗಳು, ಗೃಹಮಂಡಳಿ ಭೂಸ್ವಾಧೀನಗಳ ಜಮೀನೆಲ್ಲ ಸ್ವಾಧೀನದ ಸಮಯಕ್ಕೆ ಈ ಖದೀಮ ಗುಂಪಿನವರದೇ ಆಗಿರುತ್ತದೆ. ಮತ್ತೆ ಎಷ್ಟೋ ಸಲ ಸರ್ಕಾರಿ ಯೋಜನೆಗಳು ಕಾರ್ಯರೂಪಕ್ಕೆ ಬರುವುದೆ ಕೆಲವು ಪಟ್ಟಭದ್ರರ ಜಮೀನು ಕೆಲವು ಆಯಕಟ್ಟಿನ ಸ್ಥಳಗಳಲ್ಲಿ ಇರುವ ಕಾರಣದಿಂದ. ಶಿಡ್ಲಘಟ್ಟದಲ್ಲಾಗಿದ್ದೂ ಇದೆ. ಅಣ್ಣನ ಇಲಾಖೆಗೆ ಜಮೀನು ಬೇಕಾದ ವಿವರ ತಮ್ಮನಿಗೆ ತಿಳಿಸಲಾಯಿತು ಅಥವ ಗೊತ್ತಾಯಿತು. ಮಂತ್ರಿಯ ತಮ್ಮ ಸ್ವತಃ ತಾನೇ ಹೋಗಿ ವ್ಯಾಪಾರಕ್ಕೆ ನಿಂತರು. ರೈತನಿಂದ ಆರು ಕಾಸಿಗೆ ಕೊಂಡು ಅರವತ್ತು ಕಾಸಿಗೆ ಅಣ್ಣನ ಇಲಾಖೆಗೆ ಮಾರಿದರು. ನೈತಿಕತೆ ಮತ್ತು ಅಧಿಕಾರದುರುಪಯೋಗದ ಹಿನ್ನೆಲೆಯಿಂದ ಇದನ್ನು ನೀವು ಗಮನಿಸದೆ ಹೋದರೆ ಈ ಇಡೀ ಪ್ರಕರಣದಲ್ಲಿ ತಪ್ಪಾದರೂ ಎಲ್ಲಿದೆ?

ಇಂತಹ ಅನೈತಿಕ ಕೆಲಸಗಳನ್ನು ಮಾಡುವ Insiderಗಳನ್ನು ದಾಖಲೆಯ ಸಮೇತ ಕಂಡುಹಿಡಿಯುವಂತಹ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಜೊತೆಗೆ, ಇಂತಹ ಕೃತ್ಯಗಳು ಅನೈತಿಕ ಹಾಗೂ ಶಿಕ್ಷಿಸಲು ಅರ್ಹವಾದವು ಎಂದು ನಮ್ಮ ಬಹುಸಂಖ್ಯಾತ ಸಮಾಜ ಇನ್ನೂ ಭಾವಿಸಿಲ್ಲ. ಹಾಗಾಗಿ ಇಂತಹುದೆ ಹಗಲುದರೋಡೆಗಳು ಕಳೆದ ಹತ್ತಿಪ್ಪತ್ತು ವರ್ಷಗಳ “ಅಭಿವೃದ್ಧಿ ಶಕೆ”ಯಲ್ಲಿ ನಿರ್ಬಾಧಿತವಾಗಿ ನಡೆದುಕೊಂಡು ಬರುತ್ತಿವೆ. ಈ ಭೂವ್ಯವಹಾರಗಳು ಅಧಿಕಾರಸ್ಥರು ಅಕ್ರಮವಾಗಿ ಹಣ ಮಾಡುವ ಒಂದು ಮಾರ್ಗವಷ್ಟೆ. ತಮ್ಮ ಸ್ಥಾನಬಲವನ್ನು Unethical ಆಗಿ ಬಳಸಿಕೊಂಡು ಕಾನೂನಿನ ಕೈಗೆ ಸಿಕ್ಕಿಹಾಕಿಕೊಳ್ಳದೆ ದುಡ್ಡು ಮಾಡುವ ಅನೇಕ ಮಾರ್ಗಗಳು ಸರ್ಕಾರದ ಒಳಗೆ ಮತ್ತು ಹೊರಗೆ ಇವೆ. ಹಾಗಾಗಿಯೆ, ಸಿಕ್ಕಿಹಾಕಿಕೊಳ್ಳುವಂತಹ ಹಗರಣಗಳನ್ನು ಮಾಡದೆ ಇವತ್ತಿನ ನಮ್ಮ ರಾಜಕಾರಣಿಗಳು ತಮ್ಮ ಅಧಿಕಾರ ದುರುಪಯೋಗದ ಖದೀಮತನದಿಂದ ಕೋಟ್ಯಾಂತರ ದುಡ್ಡು ಮಾಡುತ್ತಲೆ ಇದ್ದಾರೆ. ಅದೇ ದುಡ್ಡಿನ ಬಲದಿಂದ ಪ್ರಜಾಪ್ರಭುತ್ವವನ್ನು ಮತ್ತು ಸಮಾಜದ ಮೌಲ್ಯಗಳನ್ನು ದುರ್ಬಲಗೊಳಿಸುತ್ತಲೆ ಹೋಗುತ್ತಿದ್ದಾರೆ.

ವಿಪರ್ಯಾಸವೇನೆಂದರೆ, ಇದನ್ನೆಲ್ಲ ಘಟ್ಟಿಸಿ ಕೇಳಬೇಕಾದ, ಜನತೆಯನ್ನು Educate ಮಾಡಬೇಕಾದ ವಿರೋಧಪಕ್ಷದವರೂ ಅದೇ ಮಾರ್ಗದಲ್ಲಿ ಸಾಗಿ ಬಂದಿದ್ದಾರೆ.

(ಚಿತ್ರಕೃಪೆ: ವಿಕಿಪೀಡಿಯ ಮತ್ತು ಶೋಭಾಕರಂದ್ಲಾಜೆ.ಕಾಮ್)

ಸ್ಟೀವ್ ಜಾಬ್ಸ್, Apple, ಮತ್ತು ಅಮೇರಿಕ…

-ರವಿ ಕೃಷ್ಣಾ ರೆಡ್ಡಿ.

ಸ್ಟೀವ್ ಜಾಬ್ಸ್ ಇಂದು ತೀರಿಕೊಂಡ ಸುದ್ದಿ ಬಹಳಷ್ಟು ಜನರಿಗೆ ಅನಿರೀಕ್ಷಿತವಾಗಿರಲಿಲ್ಲ. ಕಳೆದ ಒಂದೆರಡು ವರ್ಷದಿಂದ ಇಂತಹುದನ್ನು ಆಗಾಗ ನಿರೀಕ್ಷಿಸಲಾಗುತ್ತಿತ್ತು. ಕೇವಲ ಊಹಾಪೋಹಗಳನ್ನು ಹಬ್ಬುವ ವೆಬ್‌ಸೈಟುಗಳಷ್ಟೇ ಅಲ್ಲದೆ, ನಂಬಿಕೆಗೆ ಪಾತ್ರವಾದ ವೆಬ್‌ಸೈಟುಗಳೂ ಈ ಬಗ್ಗೆ ಬರೆಯುತ್ತಿದ್ದವು. ಮಾರಣಾಂತಿಕ ಕ್ಯಾನ್ಸರ್‌ಗೆ ಸಿಲುಕಿದ್ದ ಸ್ಟೀವ್ ಜಾಬ್ಸ್ ಕಾಯಿಲೆಯ ನಂತರ ಇಷ್ಟು ದಿನ ಬದುಕಲು ಸಾಧ್ಯವಾಗಿದ್ದೇ ಬಹುಶಃ ಆಧುನಿಕ ವೈದ್ಯಕೀಯದಿಂದ ಇರಬೇಕು. ಬಿಲ್ ಗೇಟ್ಸ್ ಮತ್ತು ಸ್ಟೀವ್ ಜಾಬ್ಸ್, ಪ್ರತ್ಯೇಕವಾಗಿ ಮತ್ತು ಸವಾಲಿನಿಂದೆಂಬಂತೆ ಜಾಗತಿಕ ಜೀವನಶೈಲಿಗಳನ್ನು ಮತ್ತು ತಂತ್ರಜ್ಞಾನ ಬಳಕೆಯನ್ನು ಬದಲಾಯಿಸಿದ್ದು ಚಾರಿತ್ರಿಕವಾದದ್ದು. ಈ ಶತಮಾನದಿಂದ ಇತಿಹಾಸ ಕೇವಲ ರಾಜರಿಗೆ, ಆಡಳಿತಗಾರರಿಗೆ, ರಾಜಕಾರಣಿಗಳಿಗೆ, ಮತ್ತು ಯುದ್ದಗಳಿಗೆ ಸಂಬಂಧಿಸಿದುದಷ್ಟೇ ಅಲ್ಲ, ಇಂತಹ ವ್ಯಕ್ತಿಗಳದೂ ಮತ್ತು ಅವರು ಜನಜೀವನದ ಮೇಲೆ ಬೀರುವ ಪ್ರಭಾವದ್ದೂ ಆಗಿರುತ್ತದೆ.

ಐದು ದಿನಗಳ ಪ್ರವಾಸದಿಂದ ಸ್ವಲ್ಪ ದಣಿದಿದ್ದ ನಾನು ರಾತ್ರಿ ಮನೆಗೆ ಬಂದಿದ್ದೇ ಹತ್ತರ ನಂತರ. ಮಲಗುವುದಕ್ಕೆ ಮೊದಲು iPadನಲ್ಲಿ ಸ್ವಲ್ಪ “ವರ್ತಮಾನ”ದ ಕೆಲಸ ಮಾಡಿದ್ದೆ. iOS ಆಪರೇಟಿಂಗ್ ಸಿಸ್ಟಮ್‌ ಇರುವ iPad/iPhoneಗಳಲ್ಲಿ ಸುಂದರವಾಗಿ ಯೂನಿಕೋಡ್ ಕನ್ನಡ ಮೂಡುತ್ತದೆ. ಇಂದು ಬೆಳಿಗ್ಗೆ ಎದ್ದ ತಕ್ಷಣ iPhone ನಲ್ಲಿ ಸುದ್ದಿ ನೋಡಿ ಕೂಡಲೆ ಅದೇ ಫೋನಿನಲ್ಲಿ New York Times ಪತ್ರಿಕೆಯ ವೆಬ್‌ಸೈಟಿಗೆ ಹೋಗಿ ಭರ್ತಿ ಐದು ಪುಟಗಳ ಲೇಖನ ಓದಿದೆ. ಆತನ ಜೀವನ ಮತ್ತು ಸಾಧನೆಯನ್ನು ಚೆನ್ನಾಗಿ ಹಿಡಿದಿರುವ ಲೇಖನ ಇದು. ನಿಮಗೂ ಇಷ್ಟವಾಗಬಹುದು ಎಂದು ಅದರ ಕೊಂಡಿ ಇಲ್ಲಿ ಕೊಡುತ್ತಿದ್ದೇನೆ.

http://www.nytimes.com/2011/10/06/business/steve-jobs-of-apple-dies-at-56.html?_r=1&hp

Apple ಕಂಪನಿ ಹೇಗೆ ಬೇರೆ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಕಂಪನಿಗಳಿಗಿಂತ ಭಿನ್ನ ಎಂದು ನಾನು “ವಿಕ್ರಾಂತ ಕರ್ನಾಟಕ” ವಾರಪತ್ರಿಕೆಯ ಡಿಸೆಂಬರ್ 22, 2006 ರ ಸಂಚಿಕೆಗೆ ಬರೆದ ಲೇಖನದಲ್ಲಿ ಪ್ರಸ್ತಾಪಿಸಿದ್ದೆ. ಈ ಸಂದರ್ಭದಲ್ಲಿ ಅದು ಸೂಕ್ತವಾಗಬಹುದು ಎಂದು ಇಲ್ಲಿ ಕೊಡುತ್ತಿದ್ದೇನೆ. ಈ ಲೇಖನದಲ್ಲಿ ಸ್ಟೀವ್ ಜಾಬ್ಸ್ ಮತ್ತು ಆತನ ಕಂಪನಿ ಅಪ್ರಾಸಂಗಿಕವಾಗಿ ಬಂದಿದ್ದರೂ, ಇಲ್ಲಿ ಅದು ಅಪ್ರಸ್ತುತವೇನೂ ಅಲ್ಲ ಎಂದು ಭಾವಿಸುತ್ತೇನೆ. (ಹಾಗೆಯೇ, ಈ ಲೇಖನವನ್ನು iMac ಕಂಪ್ಯೂಟರ್‌ ಮೇಲೆ, VirtualBox VM ಸಾಫ್ಟ್‌ವೇರ್ ಮೇಲೆ ಅನುಸ್ಥಾಪಿಸಿರುವ Windows 7 ನಲ್ಲಿ ಟೈಪ್ ಮಾಡುತ್ತ, ಸ್ಟೀವ್ ಜಾಬ್ಸ್ ಸ್ಥಾಪಿಸಿದ ಮತ್ತೊಂದು ಕಂಪನಿ NeXT Computer ನ ಕಂಪ್ಯೂಟರ್‌ನಿಂದ ಆರಂಭವಾದ www ಗೆ ಏರಿಸುತ್ತಿದ್ದೇನೆ. ನನ್ನ ಮತ್ತು ನಿಮ್ಮಂತಹವರ ಜೀವನ ಮತ್ತು ಜೀವನಶೈಲಿಯ ಮೇಲೆ ಈ ತಂತ್ರಜ್ಞಾನ ಹೇಗೆಲ್ಲಾ ಪರಿಣಾಮ ಬೀರಿದೆ, ಅಲ್ಲವೇ?)

ಅಮೇರಿಕ ಎಂದರೆ ಭುವಿಯ ಮೇಲಿನ ಸ್ವರ್ಗವೇನಲ್ಲ!

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಡಿಸೆಂಬರ್ 22, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು)

ಮೂರು ವಾರದ ಹಿಂದೆ, (2006ರ) ನವೆಂಬರ್ ಹದಿನಾಲ್ಕರಂದು ಮೈಕ್ರೊಸಾಫ್ಟ್ ಕಂಪನಿ Zune ಎಂಬ ಒಂದು ಹೊಸ ಡಿಜಿಟಲ್ ಮ್ಯೂಸಿಕ್ ಪ್ಲೇಯರ್ ಅನ್ನು ಬಿಡುಗಡೆ ಮಾಡಿತು. ಆಪಲ್ ಕಂಪನಿಯ ಐಪಾಡ್‌ಗೆ ಉತ್ತರವಾಗಿ ಕಳೆದೆರಡು ವರ್ಷಗಳಿಂದ ಈ ಪ್ಲೇಯರ್ ಅನ್ನು ಮೈಕ್ರೊಸಾಫ್ಟ್ ಸಿದ್ದಪಡಿಸುತ್ತಿತ್ತು. ಕಂಪ್ಯೂಟರ್ ಪ್ರಪಂಚದ ಆಗುಹೋಗುಗಳು ಬಹಳಷ್ಟು ಗೊತ್ತಿಲ್ಲದವರಿಗೆ ಗೊತ್ತಿರದೆ ಇರಬಹುದಾದ ವಿಚಾರ ಏನೆಂದರೆ, ಆಪಲ್ ಕಂಪನಿ ಕೆಲವರ ದೃಷ್ಟಿಯಲ್ಲಿ ಮೈಕ್ರೋಸಾಫ್ಟ್‌ನ ವಿಂಡೋಸ್ ಆಪರೇಟಿಂಗ್ ಸಿಸ್ಟಂಗಿಂತ ಉತ್ಕೃಷ್ಟವಾದ ಮ್ಯಾಕ್ ಆಪರೇಟಿಂಗ್ ಸಿಸ್ಟಮ್ ಅನ್ನು ತಯಾರಿಸುತ್ತದೆ ಎನ್ನುವುದು. ಆದರೆ ಮೈಕ್ರೊಸಾಫ್ಟ್ ಮಾಡದ ಒಂದನ್ನು ಹೆಚ್ಚುವರಿಯಾಗಿ ಆಪಲ್ ಮಾಡುತ್ತದೆ. ಅದೇನೆಂದರೆ, ತನ್ನ ಆಪರೇಟಿಂಗ್ ಸಿಸ್ಟಮ್ ತಂತ್ರಾಂಶವನ್ನು ಅದು ತಾನು ಸಿದ್ದಪಡಿಸಿದ ಕಂಪ್ಯೂಟರ್ ಹಾರ್ಡ್‌ವೇರ್‌ನೊಂದಿಗೆ ಮಾತ್ರ ಮಾರುತ್ತದೆ. ಮೈಕ್ರೋಸಾಫ್ಟ್‌ನ ವಿಂಡೋಸ್ ಅನ್ನು x86 ಪ್ರೊಸೆಸರ್ ಆಧಾರಿತವಾದ ಯಾವ ಕಂಪ್ಯೂಟರ್ ಮೇಲಾದರೂ ಉಪಯೋಗಿಸಬಹುದು. ನಮ್ಮಲ್ಲಿಯೆ ಎಚ್.ಸಿ.ಎಲ್, ವಿಪ್ರೊ, ಝೆನಿತ್, ಮುಂತಾದ ಹಾಗು ವಿದೇಶಗಳಲ್ಲಿ ಡೆಲ್, ಎಚ್.ಪಿ., ಟೊಷಿಬ, ಏಸರ್ ಮುಂತಾದ ಕಂಪನಿಗಳು ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್ ಹಾರ್ಡ್‌ವೇರ್ ಸಿದ್ಧಪಡಿಸಿ, ಅದಕ್ಕೆ ಮೈಕ್ರೋಸಾಫ್ಟ್‌ನ ವಿಂಡೋಸ್ ಅನುಸ್ಥಾಪಿಸಿ ಮಾರುತ್ತಾರೆ. ಇನ್ನೂ ಸುಲಭವಾಗಿ ಹೇಳಬೇಕೆಂದರೆ ಎಲೆಕ್ಟ್ರಾನಿಕ್ಸ್ ಡಿಪ್ಲೊಮ ಮಾಡಿರುವವವರೂ ಸಹ ಇದಕ್ಕೆ ಬೇಕಾದ ಮದರ್ ಬೋರ್ಡ್, ಮೆಮೊರಿ, ಮುಂತಾದವುಗಳನ್ನು ಬೆಂಗಳೂರಿನ ಎಸ್.ಪಿ. ರೋಡಿನಲ್ಲಿ ಕೊಂಡುಕೊಂಡು ತಾವೆ ಅಸೆಂಬ್ಲ್ ಮಾಡಿ, ವಿಂಡೋಸ್ ಅನ್ನು ಇನ್ಸ್‌ಟಾಲ್ ಮಾಡಬಹುದು. ಆದರೆ ಆಪಲ್‌ನ ಮ್ಯಾಕ್ ಕಂಪ್ಯೂಟರ್ ಅನ್ನು ಮಾಡುವುದು, ಮಾರುವುದು, ಆಪಲ್ ಕಂಪನಿ ಮಾತ್ರ.

ಆದರೂ ಹಲವಾರು ಕಾರಣಗಳಿಗೆ ಟೆಕ್ನಾಲಜಿ ಪ್ರಪಂಚದಲ್ಲಿ ಆಪಲ್‌ನ ಪ್ರಭಾವ ಮೈಕ್ರೋಸಾಫ್ಟ್‌ಗಿಂತ ಕಮ್ಮಿ ಇಲ್ಲ. ಯಾವುದೆ ಹಾಲಿವುಡ್ ಸಿನೆಮಾದಲ್ಲಿ ಕಂಪ್ಯೂಟರ್ ಅನ್ನು ಉಪಯೋಗಿಸುತ್ತಿರುವ ಸೀನ್ ಇದ್ದರೆ ಆ ಸೀನ್‌ನಲ್ಲಿ ಆಪಲ್ ಕಂಪ್ಯೂಟರ್ ಕಾಣಿಸುವ ಸಾಧ್ಯತೆಗಳೆ ಹೆಚ್ಚು. ಆದರೆ ಪರ್ಸನಲ್ ಕಂಪ್ಯೂಟರ್ ಉಪಯೋಗಿಸುವವರಲ್ಲಿ ಶೇ.90 ಕ್ಕೂ ಹೆಚ್ಚು ಜನ ಮೈಕ್ರೊಸಾಫ್ಟ್ ಬಳಸಿದರೆ, ಪ್ರಪಂಚದ ಕಂಪ್ಯೂಟರ್ ಬಳಕೆದಾರರಲ್ಲಿ ಆಪಲ್ ಬಳಸುವವರು ಶೇ. 2 ರಿಂದ 3 ಮಾತ್ರ. ಆದರೆ ಈ ಆಪಲ್ ಬಳಸುವ ಬಹುಪಾಲು ಜನರ ಆಪಲ್‌ನೆಡೆಗಿನ ನಿಷ್ಠೆ ಮತ್ತು ಮೈಕ್ರೋಸಾಫ್ಟ್‌ನೆಡೆಗಿನ ದ್ವೇಷ ವಿಶ್ವಪ್ರಸಿದ್ಧವಾದದ್ದು! ಇದೊಂದು ಕಲ್ಟ್ ಸಂಸ್ಕೃತಿ! ಐದಾರು ವರ್ಷಗಳ ಹಿಂದೆ ಈ ಆಪಲ್ ಕಂಪನಿ ಹೋಗಿಯೇ ಬಿಟ್ಟಿತು ಎಂದು ಎಲ್ಲರೂ ಬೊಬ್ಬಿಡುತ್ತಿದ್ದಾಗ ಅದರ ಸ್ಥಾಪಕ ಮತ್ತು ಸಿ.ಇ.ಒ. ಸ್ಟೀವ್ ಜಾಬ್ಸ್ ಬಯಲಿಗೆ ಬಿಟ್ಟ ಅಸ್ತ್ರ “Apple iPod” ಎಂಬ ಪುಟ್ಟ, ಮುದ್ದಾದ, ಡಿಜಿಟಲ್ ಮ್ಯೂಸಿಕ್ ಪ್ಲೇಯರ್. ಇದು ಆಪಲ್ ಕಂಪನಿಯನ್ನು ಮತ್ತೆ ಲಾಭಕ್ಕೆ ತಂದಿದ್ದೆ ಅಲ್ಲದೆ ಪರೋಕ್ಷವಾಗಿ ಆಪಲ್ ಕಂಪ್ಯೂಟರ್‌ನ ಮಾರಾಟ ಹೆಚ್ಚಾಗುವುದಕ್ಕೂ ಕಾರಣವಾಯಿತು. ಇಂದು ಐಪಾಡ್‌ನಷ್ಟು ಪ್ರಸಿದ್ಧವಾದ, ಲಾಭದಾಯಕವಾದ ಇನ್ನೊಂದು ಉತ್ಪನ್ನವಿಲ್ಲವೇನೊ! ಇಂತಹ ಉತ್ಪನ್ನಗಳನ್ನು ಬ್ಯುಸಿನೆಸ್ ಪರಿಭಾಷೆಯಲ್ಲಿ Killer Product ಎನ್ನುತ್ತಾರೆ.

ಮೈಕ್ರೊಸಾಫ್ಟ್‌ನವರು ಹೆಚ್ಚಾಗಿ ಹಾರ್ಡ್‌ವೇರ್ ತಯಾರಿಸುವುದಿಲ್ಲ. ಹಲವಾರು ವರ್ಷಗಳ ಹಿಂದಿನ ತನಕ ಮೌಸು, ಕೀಬೋರ್ಡ್ ನಂತಹ ಸಣ್ಣಪುಟ್ಟವನ್ನು ಮಾತ್ರ ಮಾಡುತ್ತಿದ್ದರು. ಅದು ಹಾರ್ಡ್‌ವೇರ್ ಉತ್ಪನ್ನಗಳಲ್ಲಿ ಸ್ವಲ್ಪ ಗಂಭೀರವಾಗಿ ತೊಡಗಿಸಿಕೊಂಡಿದ್ದು ವಿಡಿಯೋ ಗೇಮ್ ಕನ್ಸೋಲ್ ಆದ Xbox ತಯಾರಿಕೆಯಲ್ಲಿ ಮಾತ್ರ. ಇಲ್ಲಿ ಗಮನಿಸಬೇಕಾದ ಒಂದು ಅಂಶ ಇದೆ. Xboxನ ಹಾರ್ಡ್‌ವೇರ್ ಮಾರಾಟದಿಂದ ಮೈಕ್ರೊಸಾಫ್ಟ್‌ನವರಿಗೆ ಏನೇನೂ ಲಾಭವಿಲ್ಲ. ಅದಕ್ಕೆ ಬೀಳುವ ಖರ್ಚಿಗಿಂತ ಅರ್ಧಕ್ಕೂ ಕಮ್ಮಿ ಬೆಲೆಗೆ ಅದನ್ನು ಮಾರುತ್ತಾರೆ. ಆದರೆ ದುಡ್ಡಿರುವುದು ಸಾಫ್ಟ್‌ವೇರ್‌ನಲ್ಲಿ. ಅಂದರೆ Xboxಗೆಂದು ಮೈಕ್ರೋಸಾಫ್ಟ್ ಸಿದ್ದಪಡಿಸುವ ಗೇಮ್‌ಗಳಲ್ಲಿ. ಈ ಗೇಮ್‌ಗಳನ್ನು ಒಂದು ಸಲ ಡಿಸೈನ್ ಮಾಡಿ, ಡೆವಲಪ್ ಮಾಡಿದರೆ ಸಾಕು; ಆಮೇಲೆ ಒಂದೊಂದು ಕಾಪಿಗೆ ಬೀಳುವ ಖರ್ಚು ಹತ್ತಿಪ್ಪತ್ತು ರೂಪಾಯಿ ಮಾತ್ರ–ಸೀಡಿ ಅಥವ ಡಿವಿಡಿ ಬರ್ನ್ ಮಾಡಲಿಕ್ಕಾಗಿ ಹಾಗೂ ಅದನ್ನು ಪ್ಯಾಕ್ ಮಾಡಲಿಕ್ಕಾಗಿ. ಆದರೆ ಅದರ ಮಾರಾಟ ಬೆಲೆ ಸಾವಿರ ರೂಪಾಯಿಂದ ಮೂರು ಸಾವಿರ ರೂಪಾಯಿ ತನಕ ಇರುತ್ತದೆ. ವಿಡಿಯೊ ಗೇಮ್ ಮಾರುಕಟ್ಟೆಯಲ್ಲಿ ಸೋನಿ ಕಂಪನಿಯ PlayStation ನ ಏಕಸ್ವಾಮ್ಯ ಮುರಿಯಲು ಹಾಗೂ ತನಗಾಗಿ ಮತ್ತೊಂದು ಮಾರುಕಟ್ಟೆ ಸೃಷ್ಟಿ ಮಾಡಿಕೊಳ್ಳುವ ಮೈಕ್ರೊಸಾಫ್ಟ್ ಆ ರಂಗಕ್ಕೆ ಇಳಿತು. ಹೆಚ್ಚುಕಮ್ಮಿ ಅದೇ ಉದ್ದೇಶದಿಂದಲೆ ಆಪಲ್ ಐಪಾಡ್‌ಗೆ ಪ್ರತಿಸ್ಪರ್ಧಿಯಾಗಿ Zune ಮ್ಯೂಸಿಕ್ ಪ್ಲೇಯರ್ ಅನ್ನು ಮೈಕ್ರೊಸಾಫ್ಟ್ ತಿಂಗಳ ಹಿಂದೆ ಬಿಡುಗಡೆ ಮಾಡಿದ್ದು.

ಈ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುವುದಕ್ಕೆ ಮುಂಚೆ ಬಹಳ ಪ್ರಚಾರ ಮಾಡಲಾಗಿತ್ತು. ಹಾಗಾಗಿ ಜನರಲ್ಲಿಯೂ ಕುತೂಹಲವಿತ್ತು. CNETNews.com ಎನ್ನುವುದು ಟೆಕ್ನಾಲಜಿ ವಿಷಯಗಳಿಗೆ ಬಹಳ ಜನಪ್ರಿಯವಾದ ವೆಬ್‌ಸೈಟ್. ಆ ವೆಬ್‌ಸೈಟಿನಲ್ಲಿ ಇಂತಹ ಉತ್ಪನ್ನಗಳನ್ನು ಪರೀಕ್ಷಿಸಿ, ಒಂದೆರಡು ನಿಮಿಷಗಳ ರಿವ್ಯೂ ವಿಡಿಯೊ ಹಾಕುತ್ತಾರೆ. ಈ ಕಂಪನಿ ಇರುವುದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ. Zune ಮಾರುಕಟ್ಟೆಗೆ ಬರುವ ಎರಡು ವಾರಗಳ ಹಿಂದೆಯೆ ಅದನ್ನು ಪಡೆದುಕೊಂಡು, ಅದರ ಗುಣಾವಗುಣಗಳನ್ನು ವಿಶ್ಲೇಷಿಸಿ ಅದರ ವಿಡಿಯೊ ಅನ್ನು ಇದರ ವೆಬ್‌ಸೈಟಿನಲ್ಲಿ ಪೋಸ್ಟ್ ಮಾಡಿದ್ದರು. ವಿಶ್ಲೇಷಿಸಿದಾತನ ಹೆಸರು ಜೇಮ್ಸ್ ಕಿಮ್. ಈತ ಇಂತಹ ಅತ್ಯಾಧುನಿಕ ಡಿಜಿಟಲ್ ಉತ್ಪನ್ನಗಳನ್ನು ವಿಶ್ಲೇಷಿಸುವ CNET ನ ಹಿರಿಯ ಸಂಪಾದಕ. Zune ನ ಬಗ್ಗೆ ಸಹಜವಾಗಿಯೆ ಕುತೂಹಲ ಬೆಳೆಸಿಕೊಂಡಿದ್ದ ನಾನು ಆ ವಿಡಿಯೋವನ್ನು ಮೊದಲ ವಾರವೆ ನೋಡಿದ್ದೆ.

ನವೆಂಬರ್‌ನ ನಾಲ್ಕನೆ ಗುರುವಾರವನ್ನು ಅಮೇರಿಕದಲ್ಲಿ ಥ್ಯಾಂಕ್ಸ್‌ಗಿವಿಂಗ್ ದಿನ ಎಂದು ಆಚರಿಸುತ್ತಾರೆ. ನಾಲ್ಕು ಶತಮಾನಗಳ ಹಿಂದೆ ಯೋರೋಪಿನಿಂದ ವಲಸೆ ಬಂದ ಕೆಲವು ಬಿಳಿಯರು ಇಲ್ಲಿನ ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿ, ರೋಗರುಜಿನಗಳಿಗೆ ತುತ್ತಾಗಿ ಊಟಕ್ಕಿಲ್ಲದೆ ಸಾಯುವಂತಹ ಸ್ಥಿತಿ ಕೆಲವು ಕಡೆ ಉದ್ಭವಿಸಿದಾಗ ರೆಡ್ ಇಂಡಿಯನ್ನರು, ಅಂದರೆ ಕೆಂಪಗಿರುವ ಭಾರತೀಯರು ಎಂದು ಕೊಲಂಬಸ್‌ನಿಂದ ಕರೆಸಿಕೊಂಡ ಇಲ್ಲಿನ ಮೂಲನಿವಾಸಿಗಳು, ಅವರಿಗೆ ಆಹಾರ ಪದಾರ್ಥಗಳನ್ನು ಒದಗಿಸಿ ಸಹಾಯ ಮಾಡಿದರು. ಆ ಕಾರಣಕ್ಕಾಗಿ ಕೃತಜ್ಞತಾಪೂರ್ವಕವಾಗಿ ಆಚರಿಸುವ ಹಬ್ಬ ಥ್ಯಾಂಕ್ಸ್‌ಗಿವಿಂಗ್ ಡೆ. ಮಾರಾಟದ ಅಂಗಡಿಗಳನ್ನು ಬಿಟ್ಟು ಇನ್ನೆಲ್ಲರಿಗೂ ಶುಕ್ರವಾರವೂ ರಜಾ ಇರುತ್ತದೆ. ಹೇಗೂ ಇಲ್ಲಿ ಶನಿವಾರ, ಭಾನುವಾರ ರಜಾ ಇದ್ದೇ ಇರುತ್ತದೆ. ಹಾಗಾಗಿ ಬಹಳ ಜನ ಆ ಲಾಂಗ್ ವೀಕೆಂಡ್‌ನಲ್ಲಿ ಪ್ರವಾಸಕ್ಕೆ ಹೋಗುತ್ತಾರೆ. ಇಡೀ ವರ್ಷದಲ್ಲೆಲ್ಲ ಜನ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣ ಮಾಡುವುದು ಈ ನಾಲ್ಕು ದಿನಗಳಲ್ಲಿಯೆ.

ಈ ಬಾರಿಯ ರಜಾದಲ್ಲಿ ಮೇಲೆ ಹೇಳಿದ CNET News.com ನ ಜೇಮ್ಸ್ ಕಿಮ್ ತನ್ನ ಹೆಂಡತಿ ಕೇಟಿ ಹಾಗು ತಮ್ಮ ಇಬ್ಬರು ಪುಟ್ಟ ಹೆಣ್ಣು ಮಕ್ಕಳೊಂದಿಗೆ ಸ್ಯಾನ್ ಫ್ರಾನ್ಸಿಸ್ಕೊದಿಂದ ನಾಲ್ಕೈದು ನೂರು ಮೈಲಿ ದೂರ, ಉತ್ತರಕ್ಕೆ ಪ್ರವಾಸ ಹೊರಟ. ಒಂದೆರಡು ದಿನ ಒರೆಗಾನ್ ರಾಜ್ಯದಲ್ಲೆಲ್ಲ ಸುತ್ತಾಡಿಕೊಂಡು, ಹಿಮ ತುಂಬಿದ ದಟ್ಟ ಕಾಡುಬೆಟ್ಟಗಳ ರಸ್ತೆಯೊಂದರಲ್ಲಿ ಹೋಗುತ್ತಿದ್ದಾಗ ಆತನ ಕಾರು ಹಿಮದಲ್ಲಿ ಸಿಕ್ಕಿಹಾಕಿಕೊಂಡು ಹೂತು ಹೋಯಿತು. ಹಿಮ ಬೀಳುವ ಋತುವಿನಲ್ಲಿ ಆ ರಸ್ತೆಯಲ್ಲಿ ಸಂಚಾರ ಇರುವುದಿಲ್ಲ. ಅದು ಜೇಮ್ಸ್‌ಗೆ ಗೊತ್ತಿರಲಿಲ್ಲ. ಸೆಲ್ ಪೋನ್ ಸಿಗ್ನಲ್ ಬೇರೆ ಇರಲಿಲ್ಲ. ಕೇವಲ ಏಳು ತಿಂಗಳಾಗಿದ್ದ ಒಂದು ಪುಟ್ಟ ಮಗು, ನಾಲ್ಕು ವರ್ಷದ ಇನ್ನೊಂದು ಮಗು, ಮಗುವಿಗೆ ಹಾಲೂಡಿಸುತ್ತಿರುವ ತಾಯಿ ಹಾಗೂ ಜೇಮ್ಸ್ ಯಾರಾದರು ಆ ರಸ್ತೆಯಲ್ಲಿ ಬರುತ್ತಾರೆ ಎಂದು ಕಾಯಲಾರಂಭಿಸಿದರು. ಹೀಗಾಗುತ್ತದೆ ಎಂದು ಮೊದಲೆ ಊಹಿಸಿಲ್ಲದ ಕಾರಣವಾಗಿ ಕಾರಿನಲ್ಲಿ ಹೆಚ್ಚಿನ ನೀರಾಗಲಿ, ಆಹಾರವಾಗಲಿ ಇರಲಿಲ್ಲ. ಹೊರಗೆ ರಾತ್ರಿ ಹೊತ್ತು ನೀರು ಮಂಜುಗಡ್ಡೆಯಾಗುವಷ್ಟು ಚಳಿ. ಜನಸಂಪರ್ಕ ಸಾಧ್ಯವೆ ಇಲ್ಲದಷ್ಟು ದೂರ ಇವರು ಹೋಗಿಬಿಟ್ಟಿದ್ದಾರೆ.

ಹೀಗಾಗಿದ್ದೆ, ಪೆಟ್ರೋಲ್ ಮುಗಿಯುವ ತನಕವೂ ಕಾರನ್ನು ಆನ್ ಮಾಡಿಟ್ಟುಕೊಂಡು, ಅದರಲ್ಲಿನ ಹೀಟರ್ ಹಾಕಿಕೊಂಡು ಕಾಲ ಹಾಕಿದ್ದಾರೆ. ಪೆಟ್ರೋಲ್ ಒಂದು ದಿನಕ್ಕೆಲ್ಲ ಮುಗಿದಿರಬೇಕು. ಸಾಲದೆಂದು ಆಗಾಗ ಹಿಮ ಮತ್ತು ಮಳೆ ಬೀಳುತ್ತಲೆ ಇದೆ. ಎಲ್ಲಿಯೂ ಸಹಾಯದ ಸುಳಿವಿಲ್ಲ. ಆ ರಸ್ತೆಯಲ್ಲಿ ಯಾವ ವಾಹನವಾಗಲಿ, ನರಪಿಳ್ಳೆಯಾಗಲಿ ಸುಳಿಯಲಿಲ್ಲ. ಕಾರಿನಲ್ಲಿ ಇದ್ದಬದ್ದ ಸ್ನ್ಯಾಕ್ಸ್ ಎಲ್ಲ ಮುಗಿದವು. ಹೆಂಡತಿಗೆ, ಜೇಮ್ಸ್‌ಗೆ ಊಟವಿಲ್ಲ. ಬೇಬಿ ಪುಡ್ ಸಹ ಮುಗಿದ ಮೇಲೆ ತಾಯಿ ಏಳು ತಿಂಗಳ ಕೂಸಿನ ಜೊತೆಗೆ ನಾಲ್ಕು ವರ್ಷದ ಮಗಳಿಗೂ ಹಾಲೂಡಿಸಲು ಪ್ರಾರಂಭಿಸಿದಳು. ಬೆಚ್ಚಗಿರಲು ನಾಲ್ಕೂ ಜನ ತಬ್ಬಿಕೊಂಡು ಕಾರಿನಲ್ಲಿ ಮಲಗುತ್ತಿದ್ದರು. ತೀರಾ ಚಳಿಯಾದಾಗ ಕಾರಿನ ಒಂದೊಂದೆ ಚಕ್ರವನ್ನು ಕಳಚಿ ಅದರ ಟೈರನ್ನು ಸುಟ್ಟರು. ನಾಲ್ಕು ಚಕ್ರಗಳ ಜೊತೆಗೆ ಸ್ಪೇರ್ (ಹೆಚ್ಚುವರಿ) ಟೈರನ್ನೂ ಸುಟ್ಟರು. ಜೇಮ್ಸ್ ಸುತ್ತಮುತ್ತಲಿನ ಕಾಡುಹಣ್ಣುಗಳನ್ನು ತಿನ್ನಲು ಪ್ರಯತ್ನಿಸಿದ. ಕೊನೆಕೊನೆಗೆ ಯಾವುದು ವಿಷ ಯಾವುದು ವಿಷವಲ್ಲ ಎಂಬುದು ಗೊತ್ತಾಗದ್ದರಿಂದಾಗಿ ಅವುಗಳನ್ನು ತಿನ್ನುವುದನ್ನು ನಿಲ್ಲಿಸಿದ. ರಾತ್ರಿ ಹಗಲುಗಳು ಉರುಳಿದವು. ಮೂರಾಯಿತು, ಐದಾಯಿತು, ಕೊನೆಗೆ ಏಳು ದಿನಗಳಾದವು! ಜೇಮ್ಸ್ ಧೈರ್ಯ ಮಾಡಿ, ಇದ್ದಬದ್ದ ಶಕ್ತಿಯೆನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೆಂಡತಿಮಕ್ಕಳನ್ನು ಕಾರಿನಲ್ಲಿಯೆ ಬಿಟ್ಟು ಸಹಾಯ ತರುತ್ತೇನೆಂದು ಹೊರಟ.

ಜೇಮ್ಸ್ ಹೋಗಿ ಎರಡು ದಿನಗಳಾದರೂ ವಾಪಸು ಬರಲಿಲ್ಲ. ದಟ್ಟವಾದ ಕಾಡು. ಮೈಕೊರೆಯುವ ಚಳಿ. ಕೇಟಿಯ ಎರಡು ಕಾಲ್ಬೆರಳುಗಳು ಶೀತದಿಂದಾಗಿ ಪ್ರಾಸ್ಟ್‌ಬೈಟ್‌ಗೆ ತುತ್ತಾಗಿದ್ದವು. ತನ್ನ ಹೊಟ್ಟೆಗೆ ಏನಿಲ್ಲದಿದ್ದರೂ ಈ ತಾಯಿ ಎರಡೂ ಮಕ್ಕಳಿಗೆ ಎದೆ ಬಸಿದು ಹಾಲೂಡಿಸುತ್ತಿದ್ದಳು. ಒಂಬತ್ತನೆ ದಿನ ತಾವಿದ್ದ ಜಾಗದ ಮೇಲೆ ಹೆಲಿಕಾಪ್ಟರ್ ಒಂದು ಸುತ್ತು ಹಾಕುತ್ತಿರುವುದನ್ನು ಗಮನಿಸಿ ತಮ್ಮಲ್ಲಿದ್ದ ಕೊಡೆಯನ್ನು ಹಿಡಿದುಕೊಂಡು ಹೊರಗೆ ಬಂದು ಅದನ್ನು ಅತ್ತ ಇತ್ತ ಬೀಸಲಾರಂಭಿಸಿದಳು. ಆ ಹೆಲಿಕಾಪ್ಟರ್ ಸ್ಯಾನ್ ಫ್ರಾನ್ಸಿಸ್ಕೊದ ಜೇಮ್ಸ್‌ನ ಮನೆಯವರು ಅವರನ್ನು ಹುಡುಕಲು ಬಾಡಿಗೆಗೆ ಪಡೆದದ್ದಾಗಿತ್ತು. ಪೈಲಟ್ ಕಣ್ಣಿಗೆ ಕೊಡೆ ಬೀಸುತ್ತಿರುವುದು ಕಾಣಿಸಿತು. ಮುಂದಿನ ಒಂದೆರಡು ಗಂಟೆಗಳಲ್ಲಿ ತಾಯಿ ಮತ್ತು ಮಕ್ಕಳಿಬ್ಬರೂ ಸುರಕ್ಷಿತ ಸ್ಥಾನ ಸೇರಿಕೊಂಡರು.

ನಂತರ ಎರಡು ದಿನಗಳ ಕಾಲ ಕುದುರೆಗಳ ಮೇಲೆ, ಸ್ನೋಮೊಬೈಲ್‌ಗಳ ಮೇಲೆ, ಹೆಲಿಕಾಪ್ಟರ್ ಬಳಸಿ, ಕೊನೆಗೆ ಉಪಗ್ರಹಗಳನ್ನು ಸಹ ಬಳಸಿ ಜೇಮ್ಸ್‌ನನ್ನು ಹುಡುಕುವ ಕಾರ್ಯ ಮೊದಲಾಯಿತು. ನಾನಿರುವ ಸಿಲಿಕಾನ್ ಕಣಿವೆಯ ಟಿವಿಗಳಲ್ಲಿ, ಪತ್ರಿಕೆಗಳಲ್ಲಿ, ಇಲ್ಲಿನವರು ಓದುವ ವೆಬ್‌ಸೈಟ್‌ಗಳಲ್ಲಿ ಇದೇ ಸುದ್ದಿ. ಕೊನೆಕೊನೆಗೆ ರಾಷ್ಟ್ರೀಯ ಸುದ್ದಿಯೂ ಆಗಿಬಿಟ್ಟಿತು. ಒಂದು ದಿನದ ನಂತರ ಜೇಮ್ಸ್‌ನ ಪ್ಯಾಂಟೊಂದು ಸಿಕ್ಕ ಸುದ್ದಿ ಬಂತು. ಇದು ಆತ ತಮ್ಮನ್ನು ಹುಡುಕುವವರಿಗಾಗಿ ಬಿಟ್ಟಿರುವ ಕ್ಲೂ ಇರಬಹುದು ಎಂದರು ಪೋಲಿಸರು. ಇನ್ನೊಂದು ದಿನ ಅಲ್ಲೆಲ್ಲ ಅಂಗುಲಂಗುಲ ಜಾಲಾಡಿಸಿದ ಮೇಲೆ ಕಡಿದಾದ ಆಳವಾದ, ದುರ್ಗಮವಾದ ಕಮರಿಯೊಂದರಲ್ಲಿ ಜೇಮ್ಸ್‌ನ ಶವ ಸಿಕ್ಕಿತು. ಜೇಮ್ಸ್‌ನ ಶವ ಸಿಕ್ಕಿದ ಜಾಗ ಆತನ ಕಾರು ಇದ್ದ ಸ್ಥಳದಿಂದ ಕೇವಲ ಅರ್ಧ ಮೈಲಿ ಮಾತ್ರ ದೂರವಿತ್ತು. ಆದರೂ, 40 ಕ್ಕಿಂತ ಹೆಚ್ಚು ಪೋಲಿಸರು ಆತನ ಹೆಂಡತಿಮಕ್ಕಳು ಸಿಕ್ಕ ಎರಡು ದಿನಗಳ ನಂತರ ಆತನನ್ನು ಹುಡುಕಲು ಸಾಧ್ಯವಾಯಿತು ಅಂದರೆ ಅ ಬೆಟ್ಟಗುಡ್ಡಗಳ ಕಾಡಿನ ದಟ್ಟತೆ, ಅಲ್ಲಿನ ಕಡಿದಾದ ಕಮರಿಗಳು, ಹಿಮ, ಇವೆಲ್ಲವನ್ನೂ ನಾವು ಊಹಿಸಿಕೊಳ್ಳಬಹುದು! ಆಷ್ಟೇ ದೂರದಲ್ಲಿ ಆತನ ಶವ ಸಿಕ್ಕರೂ, ಅಲ್ಲಿ ಹೆಣವಾಗಿ ಬೀಳುವುದಕ್ಕಿಂತ ಮೊದಲು ಜೇಮ್ಸ್ 17 ಕಿ.ಮಿ. ದೂರ ಹಿಮಾವೃತ ಬೆಟ್ಟಗುಡ್ಡಗಳನ್ನೆಲ್ಲ ಅಲೆದಿದ್ದನಂತೆ!

ಅಮೇರಿಕ ಎಂದ ತಕ್ಷಣ ಅದೊಂದು ಸಮೃದ್ಧವಾದ, ಅವಕಾಶಗಳು ಎಲ್ಲೆಂದರಲ್ಲಿ ಹುಡುಕಿಕೊಂಡು ಬರುವ, ಸುಲಭವಾಗಿ ಜೀವನ ಸಾಗಿಸಬಹುದಾದ ಶ್ರೀಮಂತ ದೇಶ ಎಂಬ ಕಲ್ಪನೆ ಹೊರಗಿನ ಬಹಳ ಜನರಿಗೆ ಇರುವುದು ಸುಳ್ಳಲ್ಲ. ಭಾರತಕ್ಕಿಂತ ಸುಮಾರು ಮೂರ್ನಾಲ್ಕು ಪಟ್ಟು ದೊಡ್ಡದಾದ ಈ ದೇಶದ ಕೆಲವು ಕಡೆಗಳಲ್ಲಿ ಜೀವನ ಬಹಳ ಸವಾಲಿನದ್ದು. ಇದು ಜನರೊಡ್ಡುವ ಅಪಾಯವಾಗಲಿ, ಸವಾಲಾಗಲಿ ಅಲ್ಲ–ಪ್ರಕೃತಿ ಒಡ್ಡುವುದು. ನಮ್ಮಲ್ಲಿಯೇ ಯಾಕೆ, ಇಲ್ಲಿಯೂ ಸಹ ಪ್ರತಿ ವರ್ಷ ಬೇಸಿಗೆಯ ಕಡುಬಿಸಿಲಿಗೆ ಜನ ಸಾಯುತ್ತಿರುತ್ತಾರೆ. ಕೇವಲ 50 ಲಕ್ಷ ಜನಸಂಖ್ಯೆಯ ಅರಿಜೋನಾ ರಾಜ್ಯದಲ್ಲಿ ಕಡುಬಿಸಿಲಿನ ಝಳಕ್ಕೆ ಸಿಕ್ಕಿ ಪ್ರತಿ ವರ್ಷ 30 ರಿಂದ 50 ಜನ ಸಾಯುತ್ತಾರೆ. ಬೇಸಿಗೆ ಕೊನೆಯಾದ ತಕ್ಷಣ ಬರುವ ಟೊರ್ನೆಡೊಗಳು, ಅಂದರೆ ಭಯಂಕರ ಸುಂಟರಗಾಳಿಗಳು, ಊರೂರುಗಳನ್ನೆ ಬುಡಮೇಲು ಮಾಡಿ ಹತ್ತಾರು ಜನರ ಜೀವ ತೆಗೆಯುವುದಲ್ಲದೆ ಸಾವಿರಾರು ಜನರ ಜೀವಮಾನದ ದುಡಿಮೆಯನ್ನೆ ನಾಶ ಮಾಡುತ್ತವೆ. ಟೊರ್ನೆಡೋಗಳನ್ನು ಆಧರಿಸಿದ ಪ್ರಸಿದ್ಧ ಚಲನಚಿತ್ರ ಟ್ವಿಸ್ಟರ್‌ನಲ್ಲಿ ಬರುವ ದೃಶ್ಯಗಳು ಅವಾಸ್ತವಿಕವೇನಲ್ಲ! ಅದೇ ಸಮಯದಲ್ಲಿ ಪೂರ್ವದಲ್ಲಿ ಮತ್ತು ಆಗ್ನೇಯದ ಕರಾವಳಿಯಲ್ಲಿ ಅಪ್ಪಳಿಸುವ ಚಂಡಮಾರುತಗಳದ್ದು ಇನ್ನೂ ಭೀಕರ ಆಟಾಟೋಪ. ಜನ ಎದ್ದುಬಿದ್ದು ಮನೆಮಠ ತೊರೆದು ನೂರಾರು ಮೈಲಿ ಹೋಗುವ ಸ್ಥಿತಿ ಬಂದು ಬಿಡುತ್ತದೆ ಕೆಲವೊಮ್ಮೆ. ಕಳೆದ ವರ್ಷ ಅಪ್ಪಳಿಸಿದ ಕತ್ರೀನಾ ಅಮೇರಿಕವನ್ನು ಮೊಣಕಾಲ ಮೇಲೆ ನಿಲ್ಲಿಸಿದ್ದೆ ಇದಕ್ಕೆ ತಾಜಾ ಉದಾಹರಣೆ.

ಇನ್ನು ಹಿಮ ಬೀಳುವ ಕತೆ. ಉತ್ತರದ ಕಡೆಗಿರುವ ರಾಜ್ಯಗಳಲ್ಲಿ ಚಳಿಗಾಲದಲ್ಲಿ ಒಂದೆರಡು ಗಂಟೆಗಳಲ್ಲಿ ಒಂದೆರಡು ಅಡಿಯಷ್ಟು ಎತ್ತರದ ಹಿಮ ಬಿದ್ದು ಬಿಡುತ್ತದೆ. ಕೆಲವು ಸಲ ಮೂರ್ನಾಲ್ಕು ಅಡಿ ಬಿದ್ದು ಮನೆಯ ಬಾಗಿಲು ತೆರೆದು ಹೊರಬರಲಾಗದ ಹಾಗೆ ಮಾಡಿಬಿಡುತ್ತದೆ. ಕಾರಿನಲ್ಲಿ ಕುಳಿತಿದ್ದರೂ ಶೀತಚಳಿ ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಅಂತಹ ಹಿಮದಲ್ಲಿ ಸಂಪೂರ್ಣವಾಗಿ ಅನೇಕ ಪದರುಗಳ ಬಟ್ಟೆಗಳನ್ನು ಧರಿಸಿ ಸಂಪೂರ್ಣವಾಗಿ ಮೈಮುಚ್ಚಿಕೊಳ್ಳದೆ ಹೊರಗೇನಾದರೂ ಬಂದರೆ ಹತ್ತಾರು ನಿಮಿಷಗಳಲ್ಲಿ frostbite ಬರುತ್ತದೆ. ಇದೇನೆಂದರೆ, ಶೀತಕ್ಕೆ ಸಿಕ್ಕಿದ ಭಾಗಕ್ಕೆ ರಕ್ತಚಲನೆ ಸ್ಥಗಿತಗೊಂಡು, ಆಮ್ಲಜನಕವಿಲ್ಲದೆ, ಅಲ್ಲಿನ ಜೀವಕೋಶಗಳೆಲ್ಲ ಸತ್ತು ಹೋಗಿ ಆ ಭಾಗ ಕಪ್ಪು ಬಣ್ಣಕ್ಕೆ ತಿರುಗಿ, ಸಂಪೂರ್ಣ ಸ್ವಾಧೀನತೆ ಕಳೆದುಕೊಳ್ಳುತ್ತದೆ. ಹಿಮದಲ್ಲಿ ಗಾಡಿ ಸಿಕ್ಕಿ ಹಾಕಿಕೊಂಡರೆ ನಮ್ಮಲ್ಲಿ ಹಳ್ಳಿಗಾಡಿನ ಕೆಸರಿನಲ್ಲಿ ತುಂಬಿದ ಲಾರಿ ಹೂತುಕೊಂಡ ಹಾಗೆ. ಸ್ಟ್ಯಾಂಡ್ ಹಾಕಿದ ಸೈಕಲ್‌ನ ಹಿಂದಿನ ಚಕ್ರ ತಿರುಗುವಷ್ಟು ಸರಾಗವಾಗಿ ಚಕ್ರಗಳು ತಿರುಗುತ್ತವೆ, ಅಷ್ಟೆ. ಮೇಲಕ್ಕೆಳೆಯಲು ಇನ್ನೊಂದು ಗಾಡಿಯೆ ಬರಬೇಕು. ಭೂಕಂಪವಾಗಿ ವಾರದ ಬಳಿಕವೂ ಬದುಕುಳಿದವರ ಕತೆಗಳಂತೆ ಹಿಮದಲ್ಲಿ ಎಲ್ಲೊ ಕಳೆದುಹೋಗಿ ಬದುಕಿದವರ, ಸತ್ತವರ ಕತೆಗಳು ಪ್ರತಿ ವರ್ಷವೂ ಇಲ್ಲಿ ಕೇಳಿಬರುತ್ತಿರುತ್ತವೆ.

ಇಂತಹ ಹಿಮ ಸುರಿಯುವ ವಿಸ್ಕಾನ್ಸಿನ್ ರಾಜ್ಯದಲ್ಲಿ ಒಂದು ಚಳಿಗಾಲವನ್ನು ನಾನು ಕಳೆದಿದ್ದೆ. ಆಗ ಅಲ್ಲಿದ್ದ ಅಮೇರಿಕನ್ ಸಹೋದ್ಯೋಗಿಗಳೆಲ್ಲರು ನನಗೆ ಒಂದು ಹಿತವಚನ ಹೇಳುತ್ತಿದ್ದರು: “ಕಾರಿನಲ್ಲಿ ಯಾವಾಗಲು ಒಂದು ಬ್ಲ್ಯಾಂಕೆಟ್ ಇಟ್ಟಿರು, ಲೈಟರ್ ಇಟ್ಟಿರು, ಒಂದಷ್ಟು ಸ್ನ್ಯಾಕ್ಸ್ ಮತ್ತು ಚಾಕೊಲೆಟ್ ಇಟ್ಟಿರು, ಯಾವಾಗ ಎಲ್ಲಿ ಸಿಕ್ಕಿಹಾಕಿಕೊಳ್ಳುತ್ತೇವೊ ಗೊತ್ತಿಲ್ಲ, ಎಲ್ಲಾದರು ಹೀಗೆ ಕಳೆದುಹೋದರೆ ಸಹಾಯ ಬರುವ ತನಕ ಕಾರಿನಲ್ಲೆ ಇರಬೇಕಾಗುತ್ತದೆ, ಮೊದಲೆ ಸಿದ್ಧವಾಗಿರುವುದು ಒಳ್ಳೆಯದು,” ಇತ್ಯಾದಿ. ನಾನು ಇದ್ದದ್ದು ಕೇವಲ ಹತ್ತು ಸಾವಿರ ಜನಸಂಖ್ಯೆ ಇದ್ದ ಪಟ್ಟಣದಲ್ಲಿ. ಅಂತಹ ಊರುಗಳಿಂದ ಹತ್ತಾರು ಮೈಲಿ ದೂರ ಹೋದರೆ ಸಾಕು ಗಂಟೆಗಟ್ಟಲೆ ಜನ ಸಂಚಾರ ಕಾಣಿಸುವುದಿಲ್ಲ. ಕಾರು ಓಡಿಸುವಾಗ ಸ್ವಲ್ಪ ಯಾಮಾರಿ ಬದಿಯಲ್ಲಿರುವ ಹಿಮದ ಮೇಲೇನಾದರು ಚಕ್ರ ಹತ್ತಿದರೆ ಕಾರು ಕಂಟ್ರೋಲಿಗೆ ಸಿಗುವುದಿಲ್ಲ. ಕಾರಿನ ಚಕ್ರಗಳು ಸ್ನೋಟೈರ್ ಆಗಿಲ್ಲದಿದ್ದಲ್ಲಿ, ಅವುಗಳಿಗೆ ಸ್ಟೀಲ್ ಚೈನ್ಸ್ ಹಾಕಿಲ್ಲದಿದ್ದಲ್ಲಿ, ಅಥವ ಆ ಕಾರು 4-ವ್ಹೀಲರ್ ಆಗಿಲ್ಲದಿದ್ದಲ್ಲಿ, ಮತ್ತೆ ರಸ್ತೆಯ ಮೇಲಕ್ಕೆ ಬರುವುದು ಕನಸೇ ಸರಿ. ಸೆಲ್ ಫೋನ್ ಇದ್ದು, ಅದು ಕೆಲಸ ಮಾಡುತ್ತಿದ್ದರೆ ಪರವಾಗಿಲ್ಲ. ಇಲ್ಲದಿದ್ದಲ್ಲಿ ಆಗ ಮಾಡಬಹುದಾದದ್ದೇನೆಂದರೆ ಆ ರಸ್ತೆಯಲ್ಲಿ ಓಡಾಡುವ ಯಾರ ಕಣ್ಣಿಗಾದರೂ ಬೀಳುವ ಆಸೆಯಿಟ್ಟುಕೊಂಡು, ಹಾಕಿಕೊಂಡಿರುವ ಜಾಕೆಟ್ ಸಾಲದೆ ಇದ್ದರೆ ಚಾದರವನ್ನು ಹೊದ್ದಿಕೊಂಡು, ಕಾರಿನಲ್ಲಿರುವುದನ್ನು ತಿಂದುಕೊಂಡು, ಆದಷ್ಟು ಬೆಚ್ಚಗಿರಲು ಎಲ್ಲಾ ಪ್ರಯತ್ನ ಮಾಡುತ್ತ ಕಾಲ ತಳ್ಳುವುದು. ಅಲ್ಲೇನಾದರು ಮತ್ತೆ ಜೋರಾಗಿ ಹಿಮ ಸುರಿಯಲು ಪ್ರಾರಂಭವಾದರೆ ಐದತ್ತು ಅಡಿಗಿಂತ ಮುಂದಕ್ಕೆ ಏನಿದೆ ಎಂದೇ ಕಾಣಿಸುವುದಿಲ್ಲ. ರಸ್ತೆಯಿಂದ 20-30 ಅಡಿ ದೂರಕ್ಕೆ ಇಳಿದುಬಿಟ್ಟಿದ್ದರೆ ಕೆಲವೊಮ್ಮೆ ಆ ರಸ್ತೆಯಲ್ಲಿ ನಿಧಾನಕ್ಕೆ ಚಲ್ಲಿಸುವ ವಾಹನಗಳ ಕಣ್ಣಿಗೂ ಬೀಳುವುದು ಕಷ್ಟ. ಪರಮ ಅದೃಷ್ಟ ಹೀನತೆ ಎಂದರೆ ಇದೇನೆ.

ಜೀವನವನ್ನು ಹಿಮ ಇಷ್ಟು ಕಠೋರವಾಗಿಸುವ ಭಾಗಗಳಿಂದ ಬಂದವರು ಬೇಕಾದಷ್ಟು ಮುಂಜಾಗರೂಕತೆ ತೆಗೆದುಕೊಂಡಿರುತ್ತಾರೆ. ಜೇಮ್ಸ್‌ನ ಅನುಭವ ಮತ್ತು ಆತನ ಹಿಂದಿನ ಪ್ರವಾಸಾನುಭವಗಳನ್ನು ನೋಡಿದರೆ ಇವೆಲ್ಲ ಗೊತ್ತಿರುವ ಸಾಧ್ಯತೆ ಇದ್ದೇ ಇದೆ. ಆದರೆ ಆತ ತಾನು ಹೋಗುತ್ತಿರುವ ರಸ್ತೆಯಲ್ಲಿ ಕಾರು ಸಿಕ್ಕಿಹಾಕಿಕೊಳ್ಳುವುದನ್ನು ಊಹಿಸಿರದೆ ಇರಬಹುದು. ಯಾಕೆಂದರೆ ಹಿಮ ಋತು ಈಗ ತಾನೆ ಪ್ರಾರಂಭವಾಗಿದೆ. ಆತ ಹೋದ ಭಾಗದಲ್ಲಿ ಇಲ್ಲಿಯತನಕ ಒಂದೆರಡು ಸಾರಿ ಮಾತ್ರ ಹಿಮ ಬಿದ್ದಿರಬಹುದು. ಬಿದ್ದದ್ದು ಕರಗಿ ಹೋಗಿರಬಹುದು. ಹಾಗೆಂದು ಧೈರ್ಯ ಮಾಡಿ ಹೋಗಿದ್ದೆ ಜೇಮ್ಸ್‌ನ ಸಾವಿಗೆ ಮತ್ತು ಆತನ ಕುಟುಂಬ ಅನುಭವಿಸಿದ ಆ 9 ದಿನಗಳ ನರಕಾನುಭವಕ್ಕೆ ಕಾರಣವಾಯಿತೇನೊ. ಎಷ್ಟೊ ಸಲ ನಮ್ಮ ಲೆಕ್ಕಾಚಾರಗಳು ಕೈಕೊಡುತ್ತವೆ. ಆದರೆ ಸಣ್ಣಪುಟ್ಟ ಎಂದು ಭಾವಿಸುವ ಇಂತಹವುಗಳೆ ಜೀವ ತೆಗೆಯುವ ದುಬಾರಿ ಲೆಕ್ಕಾಚಾರಗಳಾಗಿ ಬಿಡುವುದೊಂದು ದೌರ್ಭ್ಯಾಗ್ಯ.

ಅಮೇರಿಕ ಎಲ್ಲಾ ಕಾಲದಲ್ಲಿಯೂ ಸ್ವರ್ಗವೇನಲ್ಲ. ಇಲ್ಲೂ ಅಪಾಯಗಳಿವೆ. ಈ ದೇಶದಲ್ಲಿಯೂ, ಅರ್ಧ ಮೈಲಿ ದೂರದಲ್ಲಿರುವವನನ್ನು 40 ಕ್ಕೂಹೆಚ್ಚು ಜನ ಹಿಮದ ಮೇಲೆ ಓಡುವ ಸ್ನೋಮೊಬೈಲ್ ವಾಹನ ಬಳಸಿ, ಕುದುರೆಗಳನ್ನು ಉಪಯೋಗಿಸಿ, ಹೆಲಿಕಾಪ್ಟರ್ ಏರಿ, ಉಪಗ್ರಹಗಳ ಸಹಾಯ ಪಡೆದು, ಮೈಶಾಖವನ್ನು ಕಂಡುಹಿಡಿಯುವ ಹಾಟ್‌ಸ್ಪಾಟ್‌ನಂತಹ ಓದಿಬರೆದರೂ ಅರ್ಥವಾಗದಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿಯೂ ಎರಡು ದಿನಗಳ ನಂತರವಷ್ಟೆ ಕಂಡುಹಿಡಿಯಲು ಸಾಧ್ಯವಾಯಿತು. ಇದೇನೂ ಉತ್ಪ್ರೇಕ್ಷೆಯಲ್ಲ! ಪ್ರಕೃತಿಯ ಮುಂದೆ ಮಾನವ ಕುಬ್ಜಾತಿಕುಬ್ಜ, ಅಲ್ಲವೆ?

(ಚಿತ್ರಕೃಪೆ: ವಿಕಿಪೀಡಿಯ)

“ವರ್ತಮಾನ”ದ ಇಂದಿನ ವರ್ತಮಾನ…

ಸ್ನೇಹಿತರೆ,

“ವರ್ತಮಾನ” ನಾನು ಅಂದುಕೊಂಡಷ್ಟು ವೇಗದಲ್ಲಲ್ಲದಿದ್ದರೂ ಸಮಾಧಾನಕರವಾಗಿ ವಿಕಾಸವಾಗುತ್ತಾ ಹೋಗುತ್ತಿದೆ. ಬಹುಶಃ ಇದು ನಿಮ್ಮ ಗಮನಕ್ಕೂ ಬಂದಿರಬಹುದು. ಈಗಾಗಲೆ ಮೂರು ಸರಣಿ ಲೇಖನಗಳು ಪ್ರಕಟವಾಗುತ್ತಿವೆ. ನಾಲ್ಕನೆಯದು ಈ ವಾರ ಆರಂಭವಾಗಲಿದೆ. ರಾಜ್ಯದ ವಿವಿಧ ಭಾಗಗಳಿಂದ ಸಮಾನಮನಸ್ಕರು ಪಾಲ್ಗೊಳ್ಳುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಸುಮಾರು ಹತ್ತು ದಿನಗಳನ್ನು ನಾನು ಕರ್ನಾಟಕದ ಬೇರೆಬೇರೆ ಕಡೆ ಪ್ರವಾಸದಲ್ಲಿಯೇ ಕಳೆದದ್ದರಿಂದಾಗಿ ವೈಯಕ್ತಿಕವಾಗಿ ಏನನ್ನೂ ಬರೆಯಲಾಗಲಿಲ್ಲ. ಆದರೆ, ಹೊಸಹೊಸ ಸ್ನೇಹಿತರು ಮತ್ತು ಸಮಾನಮನಸ್ಕರು, ನಮ್ಮಂತಹುದೇ ಆಶಯವುಳ್ಳವರು ಪರಿಚಯವಾಗುತ್ತಲೇ ಹೋಗುತ್ತಿದ್ದಾರೆ. ಯಾವುದೇ ಹಣಕಾಸಿನ ಅಪೇಕ್ಷೆಯಿಲ್ಲದೆ ವಾರಕ್ಕೆ ನಾಲ್ಕಾರು ಗಂಟೆಗಳನ್ನು ನಾವು ಒಪ್ಪಿಕೊಂಡ ಮೌಲ್ಯ ಮತ್ತು ನೀತಿಗಳಿಗಾಗಿ ನೀಡಲು ಜನ ಜೊತೆಯಾಗುತ್ತಲೇ ಇದ್ದಾರೆ.

ಈ ಮಧ್ಯೆ, ಅನಾಮಿಕರು ನಡೆಸುವ “ಸಂಪಾದಕೀಯ” ಬ್ಲಾಗ್ ವರ್ತಮಾನದ ಬಗ್ಗೆ ಬರೆದು ಒಂದೆರಡು ಮಾತು ಬರೆದು ನಮಗೆ ಬೆಂಬಲ, ಪ್ರೋತ್ಸಾಹ, ಮತ್ತು ಪ್ರಚಾರ ನೀಡಿದೆ. ಅವರಿಗೆ ಧನ್ಯವಾದಗಳು. ಕೆಲವು ತುಡಿತಗಳುಳ್ಳ ಜನರಿಗೆ ಅನಾಮಿಕರಾಗಿ ಅಲ್ಲದೆ ಕೆಲವೊಂದು ವಿಚಾರಗಳನ್ನು ಹೇಳಲಾಗದ ಅನಿವಾರ್ಯತೆ ನಮ್ಮಲ್ಲಿದೆ. ಇದಕ್ಕೆ ನನ್ನ ಸಂಪೂರ್ಣ ಬೆಂಬಲ ಇಲ್ಲದಿದ್ದರೂ, ಅವರ ಅನಿವಾರ್‍ಯತೆ ಮತ್ತು ಪರಿಸ್ಥಿತಿ ನನಗೆ ಅರ್ಥವಾಗುತ್ತದೆ. ಅವರ ಅನಿವಾರ್ಯತೆಗಳು ಕ್ರಮೇಣ ಕಳಚಿಕೊಳ್ಳಲಿ ಎಂದು ಹಾರೈಸುತ್ತೇನೆ.

“ಸಂಪಾದಕೀಯ” ಬ್ಲಾಗ್ ಯಾರದು ಎನ್ನುವ ಬಗ್ಗೆ ನನಗೆ ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ. ಅದನ್ನು ತಿಳಿದುಕೊಳ್ಳಬೇಕೆಂಬ ಕುತೂಹಲವೂ ಈಗ ಇಲ್ಲ. (ಅದು ಎಂದೂ ಇರಲಿಲ್ಲ ಎಂದು ಹೇಳಲಾರೆ.) ಆದರೆ ಒಂದು ಮಾತಂತೂ ಹೇಳಬೇಕು: ಹಲವಾರು ಸಂದರ್ಭಗಳಲ್ಲಿ “ಸಂಪಾದಕೀಯ” ಬರೆಯುವವರು, ಅನಾಮಿಕವಾಗಿದ್ದರೂ ಸಹ, ಬಹಳ ಸಂಯಮದಿಂದ ಮತ್ತು ಪ್ರಬುದ್ಧತೆಯಿಂದ ಬರೆದಿದ್ದಾರೆ. ತಮ್ಮ ಒಲವು-ನಿಲುವುಗಳನ್ನು ಒಪ್ಪದಿದ್ದವರನ್ನು ವಿಮರ್ಶಿಸುವಾಗಲೂ ಸಹ ಅವರು ಇಂತಹ ಅನಾಮಿಕ ಬ್ಲಾಗ್‌ಗಳಿಗೆ ಹೊರತಾದ ಸಂಯಮ ಸಾಧಿಸಿದ್ದಾರೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ತಮ್ಮ ಇತರೆ ಮಾಧ್ಯಮ ಸಹೋದ್ಯೋಗಿಗಗಳನ್ನು ವಿಮರ್ಶಿಸುವಾಗ ಮತ್ತು ಮಾಧ್ಯಮಸಂಸ್ಥೆಗಳ ಹಗರಣಗಳನ್ನು ಬರೆಯುವಾಗ ನಮ್ಮ ಪತ್ರಕರ್ತರು ಈ ಮಟ್ಟದ ಸಂಯಮ ತೋರಿಸಿ ಅಂತಹ ವಿಚಾರಗಳನ್ನೂ ಎತ್ತಿಕೊಳ್ಳುವ ಧೈರ್ಯ ತೋರಿಸಿದರೆ, ನಮ್ಮ ಕನ್ನಡ ಮಾಧ್ಯಮರಂಗ ತನ್ನ ಹೊಲಸನ್ನು ಕ್ರಮೇಣ ಕಳೆದುಕೊಳ್ಳುತ್ತದೆ. ಆದರೆ, ಆ ಆಶಾವಾದ ಈಗ ಸದ್ಯಕ್ಕೆ ಅವಾಸ್ತವವಾದದ್ದು. “ವರ್ತಮಾನ” ಇಂತಹುದನ್ನು ಮಾಡಬೇಕು. ನಮಗೆ ಸರಿಯಾದ ಜನ ಸಿಗಬೇಕು ಅಷ್ಟೆ. ಆಧಾರಸಹಿತವಾಗಿ ಇರುವುದನ್ನು, ಅದು ಯಾರ ವಿರುದ್ಧವೇ ಆಗಲಿ, ಪ್ರಕಟಿಸುವ ಪ್ರಾಮಾಣಿಕತೆ “ವರ್ತಮಾನ” ಎಂದಿಗೂ ಉಳಿಸಿಕೊಳ್ಳುತ್ತದೆ.

ಅಂದ ಹಾಗೆ, ಮುಖ್ಯವಾದ ವಿಷಯ ಇದೇನೆ, “ವರ್ತಮಾನ”ದ ಜೊತೆ ಕೈಜೋಡಿಸುವ ಜನ ಈಗ ಹಿಂದೆಂದಿಗಿಂತ ಹೆಚ್ಚಿಗೆ ಬೇಕಾಗಿದ್ದಾರೆ. ನೀವು ಲೇಖಕರೇ ಆಗಬೇಕಿಲ್ಲ. ನಮ್ಮ ಲೇಖಕ ಮಿತ್ರರು ನುಡಿ ಇಲ್ಲವೆ ಬರಹದಲ್ಲಿರುವ ಲೇಖನಗಳನ್ನು ಕಳುಹಿಸುತ್ತಾರೆ. ನಾವು ಅದನ್ನು ಯೂನಿಕೋಡ್‌ಗೆ ಪರಿವರ್ತಿಸಿ ಪ್ರಕಟಿಸಬೇಕಾಗುತ್ತದೆ. ಅದು ಒಮ್ಮೊಮ್ಮೆ ಒಂದಷ್ಟು ಸಮಯ ಬೇಡುತ್ತದೆ. ಒಂದು ಲೇಖನವನ್ನು ಪ್ರಕಟಿಸಲು (ಯೂನಿಕೋಡ್ ಪರಿವರ್ತನೆ, ಕೋಟ್ಸ್‌ಗಳನ್ನು, ಸಂಖ್ಯೆಗಳನ್ನು ಉಳಿಸಿಕೊಳ್ಳುವುದು, ಲೇಖನವನ್ನು ಫಾರ್ಮ್ಯಾಟ್ ಮಾಡುವುದು, ಫೋಟೋಗಳನ್ನು ಸೇರಿಸುವುದು, ಇತ್ಯಾದಿ) ಕನಿಷ್ಟ ಸರಾಸರಿ ಅರ್ಧ ಘಂಟೆಯಾದರೂ ಹಿಡಿಯುತ್ತದೆ. ಇಂತಹ ಕೆಲಸಕ್ಕೆ ನಮಗೆ ಒಂದಿಷ್ಟು ಕಾಯಕದಾನಿಗಳ ಅವಶ್ಯಕತೆ ಇದೆ. ಹಾಗೆಯೆ, ಈಗ ನನ್ನ ಬಳಿ ಸುಮಾರು ಮೂರು ಗಂಟೆಗಳ ವಿಡಿಯೋ ಇದೆ. ಮ್ಯಾಗ್ಸೆಸೇ ಪುರಸ್ಕೃತ ಹರೀಶ್ ಹಂದೆಯವರೊಡನೆ ಮಾತನಾಡಿರುವುದೇ ಸುಮಾರು ಎರಡು ಗಂಟೆಗಳದಿದೆ. ಇದನ್ನು ಹತ್ತು-ಹದಿನೈದು ನಿಮಿಷಗಳ ಸೆಗ್ಮೆಂಟ್‌ಗಳಿಗೆ ಎಡಿಟ್‌ ಮಾಡಿ, ಯೂಟ್ಯೂಬ್‌ಗೆ ಏರಿಸುವ ಕೆಲಸದಲ್ಲಿ ಸಹಾಯ ಬೇಕಿದೆ. ಇದೇನೂ ಹೆಚ್ಚಿನ ತಾಂತ್ರಿಕ ಪರಿಣತಿ ಬೇಡುವುದಿಲ್ಲ. ಇದನ್ನು ವಿಂಡೋಸ್ ಮೂವಿ ಮೇಕರ್ ಬಳಸಿಕೊಂಡು ಮಾಡುವುದು ಹೇಗೆ ಎಂದು ಹತ್ತು-ಹದಿನೈದು ನಿಮಿಷದಲ್ಲಿ ನಾನೇ ಹೇಳಿಕೊಡಬಲ್ಲೆ. ಆಸಕ್ತ ಗೆಳೆಯರು ದಯವಿಟ್ಟು ಸಂಪರ್ಕಿಸಿ. ಬಹಳ ಸಹಾಯವಾಗುತ್ತದೆ. ಇಂತಹ ಕೆಲಸಗಳಿಗೆ ಸ್ನೇಹಿತರು ಕೈಜೋಡಿಸುತ್ತ ಹೋದಂತೆ ಈ ವೆಬ್‌ಸೈಟ್ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ, ಸಾಂಘಿಕವಾಗಿ, ಸಮುದಾಯದ ವೇದಿಕೆಯಾಗಿ, ಸ್ವತಂತ್ರವಾಗಿ ಮೂಡಿಬರಲು ಸಾಧ್ಯವಾಗುತ್ತದೆ. ನಿಮಗೆ ಇದು ಸಾಧ್ಯ ಎಂದಾದರೆ, ಈ ವಿನಂತಿಯನ್ನೇ ನಿಮಗೆಂದೇ ಬರೆದ ವೈಯಕ್ತಿಕ ಪತ್ರ ಎಂದುಕೊಳ್ಳಿ. ಸಂಪರ್ಕಿಸಿ.

ಹಾಗೆಯೇ, ಕನ್ನಡದಲ್ಲಿ ಬರೆಯುವ ನಮ್ಮ ಬರಹಗಾರ ಮಿತ್ರರು ತಮ್ಮ ಲೇಖನಗಳನ್ನು ಯೂನಿಕೋಡ್‌ನಲ್ಲಿ ಬರೆದು ಕಳುಹಿಸಿದರೆ, ಮತ್ತೂ ಉಪಕಾರವಾಗುತ್ತದೆ.

ಕಳೆದ ವಾರ ಆಲಮಟ್ಟಿ-ಬಾಗಲಕೋಟೆ-ಮುಧೋಳ-ಜಮಖಂಡಿ-ಬಿಜಾಪುರಗಳ ಪ್ರವಾಸದಲ್ಲಿದ್ದೆ. ಅಲ್ಲಿ ಕಂಡದ್ದು ಮತ್ತು ಕೇಳಿದ್ದರ ಬಗ್ಗೆ ಈಗಾಗಲೆ ಬರೆಯಬೇಕಾಗಿತ್ತು. ಕನಿಷ್ಠ ಪಕ್ಷ ಮುಧೋಳ ತಾಲ್ಲೂಕಿನ ಚಾರಿತ್ರಿಕ ಸ್ಥಳವಾದ ಹಲಗಲಿ ಊರಿನ ಬಗ್ಗೆಯಾದರೂ ಬರೆಯಬೇಕಿತ್ತು. ಕೆಲಸದ ಒತ್ತಡದಿಂದಾಗಿ ಮತ್ತು ಬರವಣಿಗೆಗೆ ಬೇಕಾದ ಮಾನಸಿಕ ಸ್ಥಿತಿಯ ಅಭಾವದಿಂದಾಗಿ ಇನ್ನೂ ಆಗಿಲ್ಲ. ಆದಷ್ಟು ಬೇಗ ಬರೆಯಬೇಕು ಎಂದುಕೊಳ್ಳುತ್ತಿದ್ದೇನೆ. ಹೆಚ್ಚಿನ ಸಮಯ ಮಾತು ಮತ್ತು ಭೇಟಿಯಲ್ಲಿ ಕಳೆಯುತ್ತಿದೆ.

ಈ ಶನಿವಾರ ಮತ್ತೆ ಪ್ರವಾಸ ಹೋಗುತ್ತಿದ್ದೇನೆ. ಈ ಬಾರಿ ಉಡುಪಿ-ಮಂಗಳೂರು, ಮತ್ತು ನಂತರ ಬೇಲೂರು-ಹಳೇಬೀಡು-ಹಾಸನದ ಸುತ್ತಮುತ್ತ. ಭಾನುವಾರ, ಗಾಂಧಿ ಜಯಂತಿಯಂದು ಉಡುಪಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವುದಿದೆ. ಅದಕ್ಕಿಂತ ಮೊದಲು ದಾರಿಯಲ್ಲಿ ಅರವಿಂದ ಚೊಕ್ಕಾಡಿಯವರ ಭೇಟಿ ಆಗಬಹುದು. ಕಾರ್ಕಳದಲ್ಲಿ ಒಂದಿಬ್ಬರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದೇನೆ. ಮಂಗಳೂರಿನಲ್ಲೂ ಸ್ನೇಹಿತರ ಭೇಟಿಗೆ ವ್ಯವಸ್ಥೆ ಆಗುತ್ತಿದೆ. ಈ ಬಾರಿ ಕುಟುಂಬದವರೊಂದಿಗೆ ಹೋಗುತ್ತಿರುವುದರಿಂದ ಸಾಕಷ್ಟು ಸಮಯ ಕಳೆಯಲು ಆಗದಿದ್ದರೂ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ಸಮಯದಲ್ಲಿ ಸಮಯ ಇದ್ದೇ ಇರುತ್ತದೆ.

ಕೊನೆಯದಾಗಿ, ಲೇಖನಗಳನ್ನು ಕಳುಹಿಸುತ್ತೇವೆ ಎಂದ ಮಿತ್ರರಿಗೆ ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ. ನನ್ನ ಒಂದಷ್ಟು ಒತ್ತಡಗಳು ಕಮ್ಮಿಯಾದರೆ, ಈ ವೆಬ್‌ಸೈಟ್‌ನ ಇತರೆ ಆಡಿಯೊ-ವಿಡಿಯೋ ಸಾಧ್ಯತೆಗಳತ್ತ, ಇಂಗ್ಲಿಷ್‌ನಲ್ಲಿ ಬರೆಯಬಲ್ಲ ಸ್ನೇಹಿತರನ್ನು ವರ್ತಮಾನಕ್ಕೆ ಪರಿಚಯಿಸುವುದರತ್ತ, ಮತ್ತು ಕೆಲವೊಂದು ದಾಖಲೆ ಸಮೇತ ಪ್ರಕಟಿಸಬಹುದಾದ ಪ್ರಕಟಣೆಗಳತ್ತ ಒಂದಷ್ಟು ಗಮನ ಹರಿಸಬಹುದು.

ನಮಸ್ಕಾರ,
ರವಿ…

ಇವು ಕಳೆದ ವಾರದ ಪ್ರವಾಸದ ಕೆಲವು ಚಿತ್ರಗಳು:

http://www.facebook.com/media/set/?set=a.193219764084030.49338.100001880229123&l=0af359f1e1&type=1

ಭವಿಷ್ಯದ ಬಗ್ಗೆ ಆಸೆ ಬಿಟ್ಟಿದ್ದವರಿಗೆ ಇದು ವಸಂತಕಾಲ ???

ನೆನ್ನೆ (5/9/2011) ಆದದ್ದು ಎಂದೋ ಆಗಬೇಕಿತ್ತು. ರಾತ್ರಿಯಲ್ಲಿ ಕಳ್ಳತನ ಮಾಡಿದವರನ್ನು ಹಿಡಿಯಲು ಆಗದೇ ಇರುವುದಕ್ಕೆ ಹಲವಾರು ಕಾರಣಗಳು, ಅಸಾಮರ್ಥ್ಯಗಳು ಕಾರಣ ಆಗಿರಬಹುದು. ಆದರೆ ಅದು ಇಡೀ ಸಮಾಜದ ಸ್ವಾಸ್ಥ್ಯವನ್ನು ಪ್ರಶ್ನಿಸುವುದಿಲ್ಲ. ವ್ಯವಸ್ಥೆಯ ಯಾವುದೋ ಒಂದು ಅಂಗಸಂಸ್ಥೆಯ ಅಸಾಮರ್ಥ್ಯವನ್ನಷ್ಟೇ ಅದು ಪ್ರಶ್ನಿಸುತ್ತದೆ. ಆದರೆ ಹಗಲುಕಳ್ಳರನ್ನು ಯಾರೂ ಹಿಡಿಯುವವರೇ ಇಲ್ಲದೇ ಹೋದಾಗ, ಮತ್ತು ಅವರೇ ಜನನಾಯಕರಾಗಿ ಹೋದಾಗ, ಅದು ವರ್ತಮಾನದ ಭೀಕರತೆಯನ್ನು ತೋರಿಸುತ್ತದೆ. ಜೊತೆಗೆ ಭವಿಷ್ಯದ ಬಗ್ಗೆ ಇಟ್ಟುಕೊಳ್ಳಬಹುದಾದ ಎಂತಹ ಆಶಾವಾದವನ್ನೂ ನಗೆಪಾಟಲಾಗಿಸುತ್ತದೆ.

ಈ ನನ್ನ ದೇಶದ ಬಗ್ಗೆ ಈಗಲೂ ನನಗೆ ಅಪರಿಮಿತ ಆಶಾವಾದವಿದೆ. ಬಳ್ಳಾರಿ ಮತ್ತು ಅದರ ಸುತ್ತಮುತ್ತ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಕೊಂಡಿರುವವರು ಇಂದಲ್ಲ ನಾಳೆ ಜನಾರ್ದನನ ಜನ್ಮಸ್ಥಾನ ಸೇರುತ್ತಾರೆ ಎಂಬ ವಿಷಯದಲ್ಲಂತೂ ನಾನು ಬಹಳವೇ ಎನ್ನುವಷ್ಟು ಆಶಾವಾದಿಯಾಗಿದ್ದೆ. ಅವರದು ಕೇವಲ ಅಕ್ರಮ ಗಣಿಗಾರಿಕೆಯಾಗಿರಲಿಲ್ಲ. ಅದರಾಚೆಗೂ ಅವರ ಪ್ರಭಾವವಿತ್ತು. ಆಟಾಟೋಪ ಭಯಭೀಕರವಾಗಿತ್ತು. ಅದು ಕಳೆದ ಐದಾರು ವರ್ಷಗಳಿಂದ ಕರ್ನಾಟಕ ಮತ್ತು ಆಂಧ್ರದ ರಾಜಕೀಯವನ್ನು ಅನೈತಿಕಗೊಳಿಸಿದ್ದೇ ಅಲ್ಲದೆ ಸಾಮಾಜಿಕ ಮೌಲ್ಯಗಳನ್ನೂ ನಾಶಗೊಳಿಸುತ್ತಾ ಬಂದಿತ್ತು. ಆದರೆ ಇಂತಹ ಕೃತ್ಯಗಳ ಆಯಸ್ಸು ಬಹಳ ವರ್ಷಗಳಿರುವುದಿಲ್ಲ ಎಂದು ಇತ್ತೀಚಿನ ಘಟನೆಗಳು ಮತ್ತೊಮ್ಮೆ ಸಾಬೀತು ಮಾಡುತ್ತಿವೆ.

ಹಗಲುಕಳ್ಳರು ಒಬ್ಬೊಬ್ಬರೇ ವಿಚಾರಣೆಗೆ ಒಳಪಡುತ್ತಿದ್ದಾರೆ. ಜೈಲಿಗೆ ಹೋಗುತ್ತಿದ್ದಾರೆ.

ದೇಶದ ರಾಜಕೀಯ ನಾಯಕರ ಸ್ಥಿತಿ ನೋಡಿ: ಈಗಾಗಲೆ ಇಬ್ಬರು ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯೆ ವಿಚಾರಣಾಧೀನ ಕೈದಿಗಳಾಗಿದ್ದಾರೆ. ಒಬ್ಬ ಲೋಕಸಭಾ ಸದಸ್ಯ ಮತ್ತು ಮತ್ತೊಬ್ಬ ರಾಜ್ಯಸಭಾ ಸದಸ್ಯ ಇಷ್ಟರಲ್ಲೇ ವಿಚಾರಣಾಧೀನ ಕೈದಿಗಳಾಗುವ ಎಲ್ಲಾ ಸಾಧ್ಯತೆಗಳೂ ಇವೆ.

ಇದೇ ಸಂದರ್ಭದಲ್ಲಿ ಕರ್ನಾಟಕದ ಸ್ಥಿತಿ ನೋಡಿ: ಒಬ್ಬ ವಿಧಾನಸಭಾ ಶಾಸಕ ಮತ್ತು ಮತ್ತೊಬ್ಬ ವಿಧಾನಪರಿಷತ್ ಶಾಸಕ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ನಿರೀಕ್ಷಣಾ ಜಾಮೀನಿಗೆ ಅಲೆಯುತ್ತಿದ್ದಾರೆ. ಇದ್ದಕ್ಕಿದ್ದಂತೆ ಕಾಯಿಲೆ ಬೀಳುತ್ತಿದ್ದಾರೆ. ಮತ್ತೊಬ್ಬ ಶಾಸಕಿಯೂ ಮಾಜಿ ಮುಖ್ಯಮಂತ್ರಿಯೊಬ್ಬರೊಂದಿಗೆ ನಿರೀಕ್ಷಣಾ ಜಾಮೀನಿಗೆ ಓಡಾಡುತ್ತಿದ್ದಾರೆ. ಬೇರೆ ಇಬ್ಬರು ಶಾಸಕರು ಮತ್ತೊಬ್ಬ ಮಾಜಿ ಮುಖ್ಯಮಂತ್ರಿಯ ಕೇಸಿನಲ್ಲಿ ಸಹ ಆರೋಪಿಗಳಾಗಿದ್ಡಾರೆ. ಲೋಕಾಯುಕ್ತ ವರದಿಯ ಪರಿಣಾಮವಾಗಿ ಸಚಿವರೊಬ್ಬರ ಮಕ್ಕಳು ಅಪ್ಪನೊಡಗೂಡಿ ವಿಚಾರಣೆಗೊಳಪಡುವ ಸಾಧ್ಯತೆ ಇದೆ. ಮತ್ತೆ ಇನ್ನೂ ಎರಡು-ಮೂರು ಬಳ್ಳಾರಿ ಕಡೆಯ ಶಾಸಕರು CBI ನವರಿಂದ ಬಂಧನಕ್ಕೊಳಗಾಗಬಹುದು, ಇಲ್ಲವೇ ಲೋಕಾಯುಕ್ತ ವರದಿಯ ಆಧಾರದ ಮೇಲೆ ವಿಚಾರಣೆಗೊಳಪಡಬಹುದು. ಸಚಿವೆಯೊಬ್ಬರು ಸಹ ಈಗಾಗಲೆ ಬಂಧನದಲ್ಲಿರುವ ಮಾಜಿ ಸಚಿವರ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಗೊಳಪಡುವ ಅಥವ ನ್ಯಾಯಾಂಗ ಬಂಧನಕ್ಕೊಳಪಡುವ ಸಾಧ್ಯತೆಯೂ ಇದೆ. ಒಬ್ಬ ರಾಜ್ಯಸಭಾ ಸದಸ್ಯನಿಗೂ ಕಾನೂನು ಕೋಳ ತೊಡಿಸಬಹುದಾಗಿದೆ.

ರಾಜಕೀಯ ನಾಯಕರಿಂದ ಭಯಾತಂಕಗಳಿಲ್ಲದೆ ನಡೆದ ಹಗಲುದರೋಡೆಗಳು, ಕಾನೂನುಬಾಹಿರ ಅಕ್ರಮಗಳು, ನ್ಯಾಯ ಕೊಡಿಸದ ಪೋಲಿಸು ಮತ್ತು ನ್ಯಾಯಾಂಗ ವ್ಯವಸ್ಥೆ, ಈ ಇಡೀ ದುಷ್ಟತನದಲ್ಲಿ ಪಾಲುದಾರರೇನೋ ಎನ್ನುವಂತೆ ಇಂತಹ ಕೃತ್ಯಗಳನ್ನೆಲ್ಲ ತಮ್ಮ ಓಟಿನ ಮೂಲಕವೆ ಬೆಂಬಲಿಸಿಕೊಂಡು ಬರುತ್ತಿದ್ದ ಬಹುಸಂಖ್ಯಾತ ಮತದಾರರು; ಇಂತಹವುಗಳೆಲ್ಲದರಿಂದ ಭವಿಷ್ಯದ ಬಗ್ಗೆ ಆಸೆ ಬಿಟ್ಟಿದ್ದವರಿಗೆ ಇದು ಆಶಾವಾದದ ವಸಂತಕಾಲ.

ಈ ಕೆಳಗಿನ ಲೇಖನ ಸುಮಾರು ನಾಲ್ಕು ವರ್ಷಗಳ ಹಿಂದೆ (2007ರ ಅಕ್ಟೋಬರ್‌ನಲ್ಲಿ) ಬರೆದದ್ದು. ನಾವು ಅನುಭವಿಸುತ್ತಾ ಬಂದ ಹತಾಶ ಸ್ಥಿತಿ ಕೇವಲ ಇತ್ತೀಚಿನದ್ದಲ್ಲ ಮತ್ತು ಈಗ ಆಗುತ್ತಿರುವ ಬಂಧನ/ವಿಚಾರಣೆಗಳಲ್ಲಿ ಕೆಲವು ನಾಲ್ಕು ವರ್ಷಗಳ ಹಿಂದೆಯೇ ಆಗಬೇಕಿತ್ತು ಎಂದು ಹೇಳುವುದಕ್ಕೆ, ಮತ್ತು ಹೀಗಾದ ನಂತರವೂ ಜನಸಾಮಾನ್ಯರ ಪ್ರತಿಕ್ರಿಯೆ ಹೇಗಿತ್ತು ಎಂದು ನೆನಪಿಸಿಕೊಳ್ಳುವುದಕ್ಕೆ ಈ ಲೇಖನ ಸಹಾಯ ಮಾಡುತ್ತದೆ. ಆ ಬಂಧನಗಳು ಆಗಲೇ ಆಗಿದ್ದಿದ್ದರೆ ರಾಜ್ಯ ಕಳೆದ ಮೂರೂವರೆ ವರ್ಷಗಳಿಂದ ಕಂಡ ಸುಲಿಗೆ, ದುರಾಡಳಿತ, ಭ್ರಷ್ಟಾಚಾರ, ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ. ಕರ್ನಾಟಕದ ರಾಜಕೀಯವೂ ಇಷ್ಟು ಹದಗೆಡುತ್ತಿರಲಿಲ್ಲ. ಯಾರೆಲ್ಲಾ ಇದಕ್ಕೆ ಕಾರಣ?

ರವಿ ಕೃಷ್ಣಾ ರೆಡ್ಡಿ


ಬಹಿರಂಗ ಕಾಮಕೇಳಿಯಲ್ಲಿ ಜನ ಮತ್ತು ರಾಜಕಾರಣಿಗಳು – ಛೇ… ಛೀ… ಥೂ… ಅಯ್ಯೋ

ಕಳೆದ ಹಲವಾರು ವಾರಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕಾರಣ ಕೇವಲ ಅರೆಮಬ್ಬಿನ ಕೋಣೆಯಲ್ಲಷ್ಟೆ ಕಾಣಸಿಗುವ ವಿಕೃತ ರಂಜನೆಯನ್ನು ಜನರಿಗೆ ಬಹಿರಂಗವಾಗಿ ನೀಡುತ್ತಿದೆ. ಆದರೆ ತಾವು ನೋಡುತ್ತಿರುವ ಈ ವ್ಯಭಿಚಾರದ ನಾಟಕ ತಾವೆ ಸೃಷ್ಟಿಸಿದ ಒಂದು ಅಂಕ ಮತ್ತು ಅದರಲ್ಲಿ ತಾವು, ತಮ್ಮ ಮನೆಯವರು, ತಮ್ಮ ಮುಂದಿನ ಪೀಳಿಗೆಯವರೂ ಪಾಲ್ಗೊಂಡಿದ್ದಾರೆ ಎನ್ನುವುದನ್ನು ಆ ಕ್ಷಣಿಕ ಉದ್ರೇಕೋನ್ಮತ್ತ ಸ್ಥಿತಿಯಲ್ಲಿ ಜನ ಮರೆತಿದ್ದಾರೆ.

ಯಾವ ಪಕ್ಷಕ್ಕೂ ಬಹುಮತ ನೀಡದೆ, “ನೀನು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಲು ಯೋಗ್ಯ” ಎಂಬ ಸಂದೇಶವನ್ನು ಜನ ಯಾವೊಬ್ಬನಿಗೂ ನೀಡದೆ ಇದ್ದಾಗ ಕರ್ನಾಟಕದ ಎಲ್ಲಾ ನಾಚಿಕೆಗೆಟ್ಟ ರಾಜಕಾರಣಿಗಳೆಲ್ಲ ತಾನೆ ಮುಖ್ಯಮಂತ್ರಿಯಾಗಲು ಯೋಗ್ಯ ಎಂದು ಮುಂದೆ ಬಂದುಬಿಟ್ಟರು. ಇಂತಹ ಬಹುಮತವಿಲ್ಲದ ಸ್ಥಿತಿಯಲ್ಲಿ ಮಂತ್ರಿಯೊ ಮುಖ್ಯಮಂತ್ರಿಯೊ ಆಗುವಾಗ ಇರಬೇಕಾದ ಕನಿಷ್ಠ ನಾಚಿಕೆಯೂ ಇಲ್ಲದೆ ಈ ಭಂಢರು ಎಗ್ಗುಸಿಗ್ಗಿಲ್ಲದೆ ಅದಕ್ಕೆ ಜನಾಭಿಪ್ರಾಯ, ಸಿದ್ಧಾಂತ ಅಂತೆಲ್ಲ ಘೋಷಿಸಿ ಬಿಟ್ಟರು. ಜನ ಸುಮ್ಮನೆ ನೋಡುತ್ತ ನಿಂತರು.

ಲೇಖನದ ವಿಡಿಯೊ ಪ್ರಸ್ತುತಿ – ಭಾಗ 1

ತನ್ನ ಕ್ಷೇತ್ರದ ಹೊರಗೆ ಮತ್ತೊಬ್ಬ ಕಾಂಗ್ರೆಸ್ಸಿಗನನ್ನು ಗೆಲ್ಲಿಸಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್‌ನ ಅನೇಕ ಮುಖಂಡರು 224 ಶಾಸಕರನ್ನು ಪ್ರತಿನಿಧಿಸಬೇಕಾದ ಮುಖ್ಯಮಂತ್ರಿ ಹುದ್ದೆಯನ್ನು ಕೇವಲ ತಮ್ಮ ಸೀನಿಯಾರಿಟಿ ಮತ್ತು ಕಾಲು ನೆಕ್ಕುವ ನಿರ್ಲಜ್ಜ ಯೋಗ್ಯತೆಯ ಆಧಾರದ ಮೇಲೆ ತಮಗೂ ಹಕ್ಕಿದೆ ಎಂದು ಸಾಧಿಸುತ್ತಾರೆ. ಪಕ್ಷಾವಾರು ಲೆಕ್ಕಾಚಾರದಲ್ಲಿ ಜೆಡಿಎಸ್ ಶಾಸನಸಭೆಯಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಅದರ ನಾಯಕನಿಗೆ ತಾನೆ ಮುಖ್ಯಮಂತ್ರಿಯಾಗಬೇಕು. ತನ್ನ ಪಕ್ಷ ಮೊದಲೆರಡು ಸ್ಥಾನದಲ್ಲಿ ಇಲ್ಲದಿದ್ದರೂ ಅವರ ಪ್ರಕಾರ ತನ್ನನ್ನು ಮುಖ್ಯಮಂತ್ರಿ ಮಾಡದ ಜನ ಮತ್ತು ಪಕ್ಷ ವಿಶ್ವಾಸದ್ರೋಹಿಗಳು. ಪಕ್ಷ ಬಿಟ್ಟ ಅವರ ಹಿಂದೆ ಹೋಗಿದ್ದು ಕೇವಲ ಏಳು ಜನ ಮಾತ್ರ. ನಲವತ್ತು ಶಾಸಕರನ್ನು ಬೆನ್ನ ಹಿಂದೆ ಇಟ್ಟುಕೊಂಡವರೆಲ್ಲ ಸಮಗ್ರ ಕರ್ನಾಟಕದ ಪರಮೋಚ್ಚ ಪ್ರತಿನಿಧಿ. ಜಾತ್ಯತೀತ, ಕೋಮುವಾದ, ಭ್ರಷ್ಟಾಚಾರ, ಪ್ರಜಾಪ್ರಭುತ್ವ ಇವೆಲ್ಲ ತಮಗೆ ಬೇಕೆಂದಾಗ ಬದಲಾಯಿಸಿಕೊಳ್ಳಬಲ್ಲ ಆಟದ ನಿಯಮಗಳು. ಕಾಮಾತುರದಲ್ಲಿ ಮೂತಿಮುಖ ನೋಡದೆ ಸಂಗ ಮಾಡಿಬಿಟ್ಟು, ತೀಟೆ ತೀರಿದ ನಂತರ, “ಅಯ್ಯೋ, ನೀನು ‘ಕುಂಕುಮ’ ಇಟ್ಟುಕೊಂಡ ಹೊಲಸು ಎಂದು ಗೊತ್ತೇ ಇರಲಿಲ್ಲ,” ಎಂದು ಹೇಳುವ ಸಮಯಸಾಧಕರೆಲ್ಲ “ಹಿಂದಿನ ಅರವತ್ತು ವರ್ಷಗಳಲ್ಲಿ ಯಾರೂ ಮಾಡಿರದಷ್ಟು ಕೆಲಸ ಮಾಡಿರುವ ಮಹಾನ್ ಸಾಧಕರು!” ನೈತಿಕತೆಯ ವಿಷಯಕ್ಕೆ ಬಂದರೆ, ಅದು ನಿಜವೆ.

ಅದು 1999 ರ ವಿಧಾನಸಭಾ ಚುನಾವಣೆಯ ಸಮಯ. ತಾನೆ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿಯ ಆ ಕುಂಕುಮಧಾರಿ ರಾಜ್ಯದಲ್ಲೆಲ್ಲ ತಮ್ಮನ್ನು ಬಿಂಬಿಸಿಕೊಂಡು ಬಂದರು. ವಿಶೇಷವಾದ ಸೂಟುಗಳನ್ನು ಸಹ ಹೊಲಿಸಿಕೊಂಡು ಬಿಟ್ಟಿದ್ದಾರೆ ಎಂಬ ಪುಕಾರಿತ್ತು. ನೋಡಿದರೆ ಅವರ ಕ್ಷೇತ್ರದ ಜನರೆ ಆ ಬಾರಿ ಅವರನ್ನು ಶಾಸಕರನ್ನಾಗಿ ಮಾಡಲಿಲ್ಲ. ಅವರ ಪಕ್ಷಕ್ಕೆ ಸಿಕ್ಕಿದ್ದು ಕೇವಲ 44 ಸ್ಥಾನಗಳು. 2004 ರ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಮೊದಲ ಸ್ಥಾನವೇನೊ ಬಂತು. ಆದರೆ ಅದು ಕೇವಲ ಮೂರನೆ ಒಂದು ಭಾಗದಷ್ಟು ಸ್ಥಾನಗಳು ಮಾತ್ರ. “ಮುಖ್ಯಮಂತ್ರಿ ಸ್ಥಾನ ಬೇಡ, ಕೊನೆಗೆ ಮಂತ್ರಿ ಸ್ಥಾನ ಕೊಟ್ಟರೂ ಪರವಾಗಿಲ್ಲ, ನಿಮ್ಮ ಪಕ್ಷಕ್ಕೆ ಬಂದುಬಿಡುತ್ತೇನೆ,” ಎಂದು ಕೇವಲ ಇಪ್ಪತ್ತು ತಿಂಗಳ ಹಿಂದಷ್ಟೆ ಕಾಂಗ್ರೆಸ್ ಮತ್ತು ಜನತಾದಳಗಳೆರಡರ ಕಾಲಿಗೂ ಬಿದ್ದಿದ್ದರು. ಈಗಲೂ ವಂಚನೆ, ವಚನಭ್ರಷ್ಟತೆ ಎಂದೆಲ್ಲ ಹಾರಾಡುತ್ತ ತುಮಕೂರಿನಲ್ಲಿ ಭಾಷಣ ಬಿಗಿಯಲು ಕುಳಿತಿದ್ದರು. “ನಿಮ್ಮನ್ನೆ ಮುಖ್ಯಮಂತ್ರಿ ಮಾಡುತ್ತೇವೆ, ಬನ್ನಿ” ಎಂದದ್ದೆ ಬೆಂಗಳೂರಿನಿಂದ ಕೇವಲ 70 ಕಿ.ಮಿ. ದೂರದಲ್ಲಿರುವ ತುಮಕೂರಿನಿಂದ ಹೆಲಿಕಾಪ್ಟರ್‌ನಲ್ಲಿ ಓಡೋಡಿ ಬಂದರು. ತಮ್ಮ ನಾಲಿಗೆಯಿಂದ ಹೊರಳಿದ ವಾಕ್ಯವನ್ನು ಕೇಳಿರುವ ಲಕ್ಷಾಂತರ ಜನರಿಗೆ “ನನ್ನ ಮಾತನ್ನು ಮಾಧ್ಯಮದವರು ತಿರುಚಿದ್ದಾರೆ, ನಾನು ಹಾಗೆ ಹೇಳಿಯೆ ಇಲ್ಲ,” ಎನ್ನುವವರಿಗೆಲ್ಲ ಇನ್ನೊಬ್ಬರ ವಚನಭ್ರಷ್ಟತೆಯ ಬಗ್ಗೆ, ವಿಶ್ವಾಸದ್ರೋಹದ ಬಗ್ಗೆ ಮಾತನಾಡುವಷ್ಟು ನಿರ್ಲಜ್ಜತೆ, ಅಹಂಕಾರ, ನೈತಿಕ ಹಕ್ಕು!

ಕ್ಷುದ್ರಮತಿಗಳ ಮತೀಯ ಸಂಘರ್ಷವನ್ನು ತಮ್ಮ ರಾಜಕಾರಣಕ್ಕೆ ಉಪಯೋಗಿಸುವ ಧರ್ಮಭ್ರಷ್ಟ ಪಕ್ಷದ ಬಗ್ಗೆ ಇನ್ನೊಂದು ಮಾತು. ಜನಾರ್ದನ ರೆಡ್ಡಿಯನ್ನು ಅಮಾನತು ಮಾಡಿದ್ದೇವೆ ಅನ್ನುತ್ತಾರೆ; ಮೊನ್ನೆಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಪಕ್ಷದ ಮುಖಂಡತ್ವ ರೆಡ್ಡಿಯದೆ. ತನ್ನ ವ್ಯಭಿಚಾರದಿಂದಾಗಿ ಟೀವಿ ನೋಡುವ ಕನ್ನಡನಾಡಿನ ಚಿಕ್ಕಮಕ್ಕಳಿಗೂ ತಾನು ನಟಿಸಿರುವ ಬ್ಲೂಫಿಲಂ ಚಿತ್ರಗಳನ್ನು ತೋರಿಸಿದ ರೇಣುಕಾಚಾರ್ಯ ಎಂಬ ಕಾಮುಕಾಚಾರ್ಯರನ್ನು ತಮ್ಮ ಧಾರ್ಮಿಕ ಪಕ್ಷದಿಂದ ಅಮಾನತು ಮಾಡಿದ್ದೇವೆ ಅಂದಿದ್ದರು; ಆದರೆ ವಾರದ ಹಿಂದೆ ಅಧಿಕಾರದಾಹಿ ಯಡಿಯೂರಪ್ಪ ನಿಮಿಷಕ್ಕೊಂದು ಮಾತು ಹೇಳುತ್ತ ಟೀವಿಯವರ ಮುಂದೆ ಕಾಣಿಸಿಕೊಳ್ಳುತ್ತಿದ್ದಾಗ ಪ್ರತಿಸಲವೂ ಅವರ ಹಿಂದೆ ಬಾಡಿಗಾರ್ಡ್ ತರಹ ಕಾಣಿಸಿಕೊಳ್ಳುತ್ತಿದ್ದದ್ದು ಅದೇ ರೇಣುಕಾಚಾರ್ಯ. ಐದೂವರೆ ಕೋಟಿ ಜನರಿಗೆ ಹೀಗೆ ಹಿಮಾಲಯ ಗಾತ್ರದ ವಚನವಂಚನೆ ಮಾಡುತ್ತಿರುವ, ಅದನ್ನು ಸಮರ್ಥಿಸಿಕೊಳ್ಳುತ್ತಿರುವ ಈ ಜನರಿಗೆ ರಾಮನ ಬಗ್ಗೆ, ಬಸವಣ್ಣನ ಬಗ್ಗೆ, ವಚನಪರಿಪಾಲನೆ ಬಗ್ಗೆ ಮಾತನಾಡುವ ಪ್ರಾಥಮಿಕ ಯೋಗ್ಯತೆ ಇದೆಯೆ?

ಕೊಳಕರಿಗೆಲ್ಲ ಆರತಿ ಎತ್ತುವ ಹೆಂಗಸರು:

ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಹಿಂದೆಂದಿಗಿಂತಲೂ ಹೆಚ್ಚು ಹಣವನ್ನು ಕರ್ನಾಟಕದ ಜನ ನೋಡುತ್ತಿದ್ದಾರೆ. ಅದೇ ಮೂಲಕಾರಣವಾಗಿ, ಹಣದ ಹೊರತಾಗಿ ಮಿಕ್ಕ ಯಾವ ಯೋಗ್ಯತೆಯೂ ಇಲ್ಲದ ಸ್ಕೌಂಡ್ರಲ್‌ಗಳು, ರೋಗ್‌ಗಳೆಲ್ಲ ತಮ್ಮ ವೈಯಕ್ತಿಕ ಐಡೆಂಟಿಟಿಗಾಗಿ ಚುನಾವಣೆಗೆ ಇಳಿಯುತ್ತಿದ್ದಾರೆ. ಚುನಾವಣೆ ಬಂತು ಎಂದರೆ ಜನರಿಗೆ ಊರಹಬ್ಬ. ಅನೇಕರ ಮನೆಗಳು ಗುಂಡಿನ ಗಡಂಗುಗಳಾಗಿ ಬದಲಾಗಿ ಬಿಡುತ್ತವೆ. ಗಂಡಸರಿಗೆ ಯಥೇಚ್ಚವಾಗಿ ಗುಂಡು ತುಂಡಿನ ಸರಬರಾಜು. ಓಟಿನ ಭಿಕ್ಷೆ ಬೇಡುತ್ತ ಬರುವವನಿಗಾಗಿ ಕಾಯುತ್ತ ಕುಳಿತ ಗರತಿಯರು ಕೊಳಕರಿಗೆಲ್ಲ ಆರತಿ ಎತ್ತುತ್ತಾರೆ. ತಟ್ಟೆಯಲ್ಲಿ ಅವನು ಹಾಕಿದ ನೋಟು ನೂರು ರೂಪಾಯಿಯದೊ ಐದುನೂರು ರೂಪಾಯಿಯದೊ ಎಂಬ ಚಿಂತೆ ಈ ನಾರಿಯರಿಗೆ. 

ತನ್ನ ಗಂಡ ರಾಜ್ಯದ ಮುಖ್ಯಮಂತ್ರಿಯಾಗಿದ್ದರೆ ನಡುಬೀದಿಯಲ್ಲಿ ಓಟು ಕೇಳುವ ಮತ್ತು ಆರತಿ ತಟ್ಟೆಗಳಿಗೆ ನೋಟು ಹಾಕುವ ತಲೆಹಿಡುಕ ಕೆಲಸ ರಾಜ್ಯದ ಮುಖ್ಯಮಂತ್ರಿಯ ಹೆಂಡತಿಯೆ ಮಾಡುತ್ತಿರುತ್ತಾಳೆ.

ಸುಮಾರು ನಲವತ್ತು ವರ್ಷದ ಹಿಂದೆ ಆಗಿದ್ದು ಇದು. ನನ್ನೂರಿನ ಆ ಹಿರಿಯರು ಸ್ವಾತಂತ್ರ್ಯದ ಸಮಯದಲ್ಲಿಯೆ ಕ್ರಿಯಾಶೀಲರಾಗಿದ್ದವರು. ತಮ್ಮ ಮುವ್ವತ್ತರ ವಯಸ್ಸಿಗೆಲ್ಲ ನಮ್ಮ ತಾಲ್ಲೂಕಿನಲ್ಲಿ ಹೆಸರುವಾಸಿಯಾಗಿದ್ದವರು. ಅವರಿಗೆ ಕೊಡಬೇಕಿದ್ದ ಎಂ.ಎಲ್.ಎ. ಸೀಟನ್ನು ಕಾಂಗ್ರೆಸ್ ಪಕ್ಷ ಪಕ್ಕದ ರಾಜ್ಯದ ಮುಖ್ಯಮಂತ್ರಿಯ ಅಳಿಯನಿಗೆ ಕೊಟ್ಟುಬಿಟ್ಟಿತು. ಇವರು ಪಕ್ಷೇತರರಾಗಿ ನಿಂತರು. ಜಿದ್ದಾಜಿದ್ದಿಯ ಚುನಾವಣೆ ಅದು. ಕಾಂಗ್ರೆಸ್‌ನಿಂದ ಏನನ್ನು ನಿಲ್ಲಿಸಿದರೂ ಗೆಲ್ಲುತ್ತಿದ್ದ ಆ ಸಮಯದಲ್ಲಿ ಇವರು ಕಾಂಗ್ರೆಸ್‌ಗೆ ಸೋತಿದ್ದು ಕೇವಲ ಮೂರಂಕಿಯ ಮತಗಳ ಅಂತರದಿಂದ. ಆಗ ಗೆದ್ದ ಅಭ್ಯರ್ಥಿ ನನ್ನ ಕ್ಷೇತ್ರದ ಜನರನ್ನು ಕುರಿತು ಒಂದು ಮಾತು ಹೇಳಿದನಂತೆ: “ಈ ಕ್ಷೇತ್ರದವರು ದುಡ್ಡು ಕೊಟ್ಟರೆ ಹೆಂಡತಿಯರನ್ನು ಬೇಕಾದರೂ ಕೊಟ್ಟುಬಿಡುತ್ತಾರೆ.”

ಹತ್ತು ತಿಂಗಳ ಹಿಂದೆ ಕರ್ನಾಟಕದಲ್ಲಿ ಒಂದು ಶಾಸಕ ಸ್ಥಾನಕ್ಕೆ ಚುನಾವಣೆ ಆಯಿತು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಅದು. ಸಿದ್ಧರಾಮಯ್ಯ ಹಲವಾರು ವರ್ಷಗಳಿಂದ ರಾಜಕೀಯದಲ್ಲಿರುವವರು. ಶುರುವಿನಲ್ಲಿ ಇವರದು ಹೋರಾಟದ ರಾಜಕೀಯವೆ. ಮಂತ್ರಿಯಾಗಿ ಹಲವಾರು ವರ್ಷ “ಸೇವೆ”ಯನ್ನೂ ಸಲ್ಲಿಸಿದ್ದಾರೆ. ಒಂದು ವರ್ಷಕ್ಕೂ ಹೆಚ್ಚಿನ ಕಾಲ ಉಪಮುಖ್ಯಮಂತ್ರಿ ಆಗಿದ್ದವರು. ಕರ್ನಾಟಕದ ಶಾಸನಸಭೆಯಲ್ಲಿ ಇವರಿಗಿಂತ ನೀಚರೂ, ಭ್ರಷ್ಟರೂ, ದುಷ್ಟರೂ, ಅವಿವೇಕಿಗಳೂ, ಅಜ್ಞಾನಿಗಳೂ, ಅನರ್ಹರೂ ಶಾಸಕರಾಗಿರುವಾಗ ಇವರೂ ಒಬ್ಬ ಶಾಸಕರಾಗಿ ಅಲ್ಲಿದ್ದರೆ ನಾಡಿಗೆ ಸ್ವಲ್ಪಮಟ್ಟಿಗೆ ಕ್ಷೇಮವೆ. ಆದರೆ, ಕೇವಲ ಜಾತಿಬಲದಿಂದ, ದುಡ್ಡಿನ ಬಲದಿಂದ, ಅಧಿಕಾರಪಕ್ಷ ಬಲದಿಂದ ಇವರೆದುರು ಚುನಾವಣೆಗೆ ನಿಂತ ಶಿವಬಸಪ್ಪನವರಿಗೆ ಸಂವಿಧಾನದತ್ತ ಹಕ್ಕಿನ ಯೋಗ್ಯತೆ ಬಿಟ್ಟರೆ ಶಾಸಕರಾಗಲು ಸಿದ್ಧರಾಮಯ್ಯನವರಿಗಿಂತ ಇನ್ಯಾವ ತರಹದ ಹೆಚ್ಚಿನ ಯೋಗ್ಯತೆ ಇತ್ತು ಎನ್ನುವುದು ಉತ್ತರವಿಲ್ಲದ ಪ್ರಶ್ನೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ಹತ್ತಾರು ಕೋಟಿ ರೂಪಾಯಿಗೂ ಹೆಚ್ಚಿನ ಹಣ ಹರಿಯಿತು ಎನ್ನುವ ಆ ಉಪಚುನಾವಣೆಯಲ್ಲಿ ಸಿದ್ಧರಾಮಯ್ಯ ಕೇವಲ 257 ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರೆ ಆ ಕ್ಷೇತ್ರದ ಜನ ಇನ್ನೆಂತಹ ಪ್ರಲೋಭನೆಗೆ, ನೈತಿಕ ಭ್ರಷ್ಟತೆಗೆ, ತಲೆಹಿಡುಕತನಕ್ಕೆ ಒಳಗಾಗಿರಬೇಡ? ಇಲ್ಲಿ ಸಿದ್ಧರಾಮಯ್ಯನವರೇನೂ ಕಮ್ಮಿ ಇಲ್ಲ. ಕಾಂಗ್ರೆಸ್‌ನಲ್ಲಿರುವ ಜಾತಿಬಲದ, ಹಣಬಲದ ಲೂಟಿಕೋರ ಭ್ರಷ್ಟರನ್ನೆಲ್ಲ ತಮ್ಮ ಕ್ಷೇತ್ರಕ್ಕೆ ಕರೆತಂದು ತಮ್ಮ ಪರ ಕೋಟ್ಯಾಂತರ ರೂಪಾಯಿ ಚೆಲ್ಲಲು ದಾರಿಮಾಡಿಕೊಡುತ್ತಾರೆ. ಕಾಂಗ್ರೆಸ್ಸಿನ ರಾಜ್ಯಘಟಕದ ಅಧ್ಯಕ್ಷರೆ ಕಾರಿನಲ್ಲಿ ಹತ್ತಾರು ಲಕ್ಷ ಕ್ಯಾಷ್‌ನೊಂದಿಗೆ ಸಿಕ್ಕಿ ಬೀಳುತ್ತಾರೆ. ವಾರೆವ್ಹಾ. ಜನರನ್ನು ಭ್ರಷ್ಟರನ್ನಾಗಿಸಲು ಸಮಬಲದ ಪೈಪೋಟಿ! ಅಷ್ಟೆಲ್ಲ ಕೋಟಿ ಹಣ ಆ ಒಂದೇ ಒಂದು ಕ್ಷೇತ್ರದಲ್ಲಿ ಹರಿಯಿತು ಅಂದರೆ ಆ ಕ್ಷೇತ್ರದ ಜನರಿಗೆ ಈ ತಲೆಹಿಡುಕರು ಎಷ್ಟೊಂದು ಸಲ ತಲೆ ನೀವಿರಬೇಡ? ಬಹುಶಃ ಅಲ್ಲಿ ಸೋತವರು ಕೊನೆಯಲ್ಲಿ ಹೀಗೆಯೂ ಹೇಳಿರಬಹುದಲ್ಲವೆ: “ಈ ಕ್ಷೇತ್ರದ ಜನ ತಮ್ಮ ಮನೆಯವರನ್ನು ಹರಾಜಿಗೆ ಇಟ್ಟು ಯಾರು ಹೆಚ್ಚಿಗೆ ದುಡ್ಡು ಕೊಡುತ್ತಾರೊ ಅವರಿಗೆ ಮಾತ್ರ ಕೊಡುತ್ತಾರೆ. ಮುಂದಿನ ಸಲ ಇನ್ನೂ ಹೆಚ್ಚಿನ ದುಡ್ಡಿನೊಂದಿಗೆ ಬಂದು ನಾವೆ ಮಜಾ ಮಾಡೋಣ!”

ಛೇ. ಇದನ್ನೆಲ್ಲ ನೋಡಿದರೆ ನಮ್ಮ ನಾಡಿನ ಅನೇಕ ಸಜ್ಜನರ ಮನೆಗಳು ಮನೆಯವರೆಲ್ಲ ವ್ಯಭಿಚಾರಕ್ಕೆ ಇಳಿದ ವೇಶ್ಯಾಗೃಹಗಳಾಗಿ ಪರಿವರ್ತನೆಯಾಗಿ ಬಿಟ್ಟಿವೆ ಎಂದರೆ ಅದು ಅಪಚಾರವೆ?

ಜೈಲಿಗೆ ಹೋಗದ ಗಣಿ ರೆಡ್ಡಿ ಅಂಡ್ ಕೊ ಅಥವ ಕುಮಾರಸ್ವಾಮಿ ಅಂಡ್ ಕೊ.:

ನಮ್ಮ ಪತ್ರಿಕೆಯ (ವಿಕ್ರಾಂತ ಕರ್ನಾಟಕ) ಸೆಪ್ಟೆಂಬರ್ 29, 2006 ರ ಸಂಚಿಕೆಯಲ್ಲಿನ ನನ್ನ ಅಂಕಣ ಲೇಖನದ ಶೀರ್ಷಿಕೆ, “ಗೃಹಖಾತೆ ಎನ್ನುವುದು ಒಂದಿದೆಯೆ?” ಅದರಲ್ಲಿ ಆಗ ತಾನೆ ಹೊರಗೆ ಬಂದಿದ್ದ ಗಣಿ ಹಗರಣವನ್ನು ಕುರಿತು ಹೀಗೆ ಬರೆದಿದ್ದೆ: “(ಗಣಿ ಹಗರಣದ ವಿಡಿಯೊ ಸೀಡಿಗಳಲ್ಲಿರುವುದು) ನಿಜವಾದ ವಿಡಿಯೊ ಚಿತ್ರವೊ ಇಲ್ಲಾ ಕೃತಕವಾಗಿ ತಯಾರಿಸಿದ್ದೊ ಎಂದು ನಮ್ಮ ಪೋಲಿಸ್ ಇಲಾಖೆ ಇಲ್ಲಿಯವರೆಗೆ ತಿಳಿದುಕೊಳ್ಳಲಾಗಲಿಲ್ಲ ಎಂದರೆ ಇಂತಹ ಅನಾದಿಕಾಲದ ತಂತ್ರಜ್ಞಾನ ಹೊಂದಿರುವವರ ಕೈಯಲ್ಲಿ ನಮ್ಮ ಭವಿಷ್ಯದ ಸುರಕ್ಷತೆಯನ್ನು ಕನಸುವುದಕ್ಕಿಂತ ಹಗಲು ಕನಸು ಬೇರೊಂದಿಲ್ಲ. ಅವು ಕೃತಕವೇ ಆಗಿರಲಿ, ಇಲ್ಲವೆ ನೈಜದ್ದೆ ಆಗಿರಲಿ, ಅವುಗಳ ಮೂಲ ಎಲ್ಲಿಯದು ಎನ್ನುವುದನ್ನು ಪೋಲಿಸ್ ಇಲಾಖೆ ಇಷ್ಟೊತ್ತಿಗೆ ಕಂಡು ಹಿಡಿದು ಜನಕ್ಕೆ ತಿಳಿಸಬೇಕಿತ್ತು. ಅದು ಕೃತಕವೇ ಆಗಿದ್ದಲ್ಲಿ ಈ ಸೀಡಿ ಪ್ರಕರಣ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಕಂಡ ಅತಿ ದೊಡ್ಡ ವಂಚನೆ. ಹಾಗಿದ್ದ ಪಕ್ಷದಲ್ಲಿ ಜನಾರ್ದನ ರೆಡ್ಡಿ ಬಳ್ಳಾರಿಯ ಮನೆಯಲ್ಲಲ್ಲ, ಅಲ್ಲಿನ ಜೈಲಿನಲ್ಲಿ ಕಂಬಿ ಎಣಿಸಬೇಕು. ಸೀಡಿಯಲ್ಲಿರುವುದು ನಿಜವೇ ಆಗಿದ್ದಲ್ಲಿ ಚೆನ್ನಿಗಪ್ಪ, ಪ್ರಕಾಶ್, ಕುಮಾರಸ್ವಾಮಿಯಾದಿಯಾಗಿ ಹತ್ತಾರು ಜನ ತಮ್ಮ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಪ್ರಯಕ್ತ ಬೆಂಗಳೂರಿನ ವಿಧಾನಸೌಧದಲ್ಲಲ್ಲ, ಪರಪ್ಪನ ಅಗ್ರಹಾರದ ಕಾರಾಗೃಹದ ಕತ್ತಲು ಕೋಣೆಯಲ್ಲಿ ತಮ್ಮ ಕೊನೆಗಾಲದ ತನಕ ಕಾಲ ತಳ್ಳಬೇಕು. ಇವೆರಡರಲ್ಲಿ ಒಂದು ಆಗಲೇಬೇಕು. ಇಲ್ಲದಿದ್ದಲ್ಲಿ ಕರ್ನಾಟಕದಲ್ಲಿ ಕಾನೂನು, ನ್ಯಾಯ, ಆಡಳಿತ, ನೈತಿಕತೆ ಸತ್ತಿದೆ ಎಂದೇ ಅರ್ಥ. ನೀವು ಈ ಮಾತಿಗೆ ನಗುತ್ತಿರುವಿರಿ ಎಂದಾದರೆ, ಇವೆಲ್ಲ ನಮ್ಮಲ್ಲಿ ಎಂದೋ ಸತ್ತಿವೆ ಮತ್ತು ನಮಗೆ ಅವುಗಳ ಅವಶ್ಯಕತೆಯಿಲ್ಲ ಹಾಗೂ ನಾನು ಅಸಾಧ್ಯವನ್ನು ಬಯಸುವ ಹಗಲುಗನಸಿನ ಆಶಾವಾದಿ ಎಂದರ್ಥ, ಅಲ್ಲವೆ?”

ಈ ಹಗರಣ ಬಯಲಿಗೆ ಬಂದು ಈಗ ಒಂದು ವರ್ಷಕ್ಕೂ ಮೇಲಾಗಿದೆ. ಕುಮಾರಸ್ವಾಮಿ/ಚೆನ್ನಿಗಪ್ಪ/ಪ್ರಕಾಶ್ ಗುಂಪಿನ ಯಾರೊಬ್ಬರಿಗೂ ಮತ್ತು ಜನಾರ್ದನ ರೆಡ್ಡಿಯ ಗುಂಪಿನ ಯಾರೊಬ್ಬರೂ ಜೈಲಿನಲ್ಲಿಲ್ಲ. ಯಾವ ತರಹದ ಕಾನೂನು, ಧರ್ಮ ಮತ್ತು ನೈತಿಕತೆಯ ಪಾಠವನ್ನು ನಾವು ನಮ್ಮ ಮಕ್ಕಳಿಗೆ ಮಾಡುತ್ತಿದ್ದೇವೆ ಎಂಬ ಕಿಂಚಿತ್ ನೋವೂ ಜನಮಾನಸದಲ್ಲಿ ಇದ್ದಂತಿಲ್ಲ. ಇದ್ದರೂ ಅದು ಸಾಂಘಿಕವಾಗಿ ಪ್ರಕಟವಾಗಿಲ್ಲ.

ಮಠಾಧೀಶರಿಗೆ ಈ ಅಧಿಕಾರ ಕೊಟ್ಟವರು ಯಾರು?

ಕರ್ನಾಟಕದ ಯಾವೊಬ್ಬ ಮೇಲ್ಜಾತಿಯ ಮಠಾಧೀಶರಾಗಲಿ ಇಲ್ಲಿಯವರೆಗೂ ಓಟು ಹಾಕಿರುವುದು ಸಂಶಯದ ವಿಚಾರ. ಜನಾಡಳಿತದ ಮೂಲಭೂತ ಪ್ರಕ್ರಿಯೆಯಲ್ಲಿಯೇ ಪಾಲ್ಗೊಳ್ಳದ ಇವರಿಗೆ ಹಸ್ತಾಂತರದ ಬಗ್ಗೆ ಮಾತನಾಡಲು ಯಾವ ಹಕ್ಕಿದೆ? ಒಂದೆರಡು ಜಾತಿಗಳ ಜನರಲ್ಲಿ ಜನವಿರೋಧಿ ಜಾತಿಭಾವನೆ ಪೋಷಿಸುವ, ಜಾತಿಮೂಲ ಹಿಡಿದು ಜನವಿಭಜನೆ ಮಾಡುವ ಇವರಿಗೆ ಸಮಗ್ರ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೇಳುವ ಹಕ್ಕು ಬಂದಿದ್ದಾದರೂ ಹೇಗೆ? ಯಡಿಯೂರಪ್ಪನವರಿಗಾದ ಸ್ಥಿತಿ ಸಿದ್ಧರಾಮಯ್ಯನವರಿಗೊ, ಖರ್ಗೆಗೊ ಆಗಿದ್ದರೆ ಅವರು ಈ ರೀತಿ ಮಾತನಾಡುತ್ತಿದ್ದರೆ? “ನೀವು ಮಾಡಿದ್ದು ನನಗಿಷ್ಟವಾಗಿಲ್ಲ” ಎಂದು ನೇರವಾಗಿ ಹೇಳಲಾಗದ ಸಿದ್ಧಗಂಗಾ ಸ್ವಾಮಿಗಳು ಯಡಿಯೂರಪ್ಪನವರ ಸ್ಥಾನದಲ್ಲಿ ಕೆ.ಎಸ್. ಈಶ್ವರಪ್ಪ ಇದ್ದಿದ್ದರೆ ಧರ್ಮಯಾತ್ರೆ ಎಂಬ ಭೀಕರ ಜೋಕ್‌ಗೆ ಆಶೀರ್ವಾದ ಮಾಡುತ್ತಿದ್ದರೆ? ದಸರಾ ಉದ್ಘಾಟನೆಯನ್ನು ನಿರಾಕರಿಸುವುದಕ್ಕೆ ಈ ಶತಾಯುಷಿಗಳು ರಾಜಕಾರಣಿಗಳ ತರಹ ಆರೋಗ್ಯದ ಕಾರಣ ನೀಡುತ್ತಿದ್ದರೆ? ಕುಮಾರಸ್ವಾಮಿಯ ಬದಲಿಗೆ ಒಕ್ಕಲಿಗನಲ್ಲದ ಮತ್ತೊಬ್ಬ ಮುಖ್ಯಮಂತ್ರಿ ಆಗಿದ್ದಿದ್ದರೆ ಬಾಲಗಂಗಾಧರ ಸ್ವಾಮಿಗಳು ಇಷ್ಟೆಲ್ಲ ರಾದ್ಧಾಂತಗಳ ನಡುವೆ ದಸರಾ ಉದ್ಘಾಟನೆಗೆ ಒಪ್ಪಿಕೊಳ್ಳುತ್ತಿದ್ದರೆ?

ಕರ್ನಾಟಕದ ಜನಸಂಖ್ಯೆಯಲ್ಲಿ ಲಿಂಗಾಯತರ ಸಂಖ್ಯೆ ಮುಕ್ಕಾಲು ಕೋಟಿಯ ಆಸುಪಾಸು ಎನ್ನುತ್ತದೆ ಆಗೀಗ ಪ್ರಕಟಗೊಳ್ಳುವ ಜಾತಿವಾರು ಸಂಖ್ಯೆ. ಆದರೆ ಈ ಮಧ್ಯೆ ಕೆಲವು ಲಿಂಗಾಯತ ಮುಖಂಡರು ಎರಡೂವರೆ ಕೋಟಿ ಲಿಂಗಾಯತರಿಗೆ ಮೋಸ, ಮೂರೂವರೆ ಕೋಟಿ ಲಿಂಗಾಯತರಿಗೆ ಮೋಸ ಎನ್ನುತ್ತಿದ್ದಾರೆ. ಆ ಅಸಂಬದ್ಧ ಸುಳ್ಳುಹೇಳಿಕೆಗಳನ್ನು ಕೆಲವು ಪತ್ರಿಕೆಗಳು ಪ್ರಕಟಿಸಿಯೂ ಬಿಟ್ಟಿವೆ. ಜಾತಿಜಾತಿ ಎನ್ನುವ ಈ ಸಂಕುಚಿತ ಕೋಮುವಾದಿಗಳಿಗೆ ಕನಿಷ್ಟ ತಮ್ಮ ಜಾತಿಯ ಜನ ಈಗ ಎಷ್ಟಿದ್ದಾರೆ ಎನ್ನುವ ಸಾಮಾನ್ಯಜ್ಞಾನವೂ ಇಲ್ಲ. ಇನ್ನು ಇವರಿಗೆ ನಿಜಕ್ಕೂ 800 ವರ್ಷಗಳ ಹಿಂದಿನ ಬಸವಣ್ಣನ ಬಗ್ಗೆ ಗೊತ್ತಿದೆಯೆ? ಹೋಗಲಿ, “ಹುಸಿಯ ನುಡಿಯಲು ಬೇಡ” ಎಂದ ಆತನ ಬಗ್ಗೆ ಕನಿಷ್ಟ ಗೌರವವಾದರೂ ಈ ಬಸವದ್ರೋಹಿಗಳಿಗೆ ಇದೆಯೆ?

ಹೀನ ಸಂದರ್ಭದಲ್ಲಿ ನಾವು:

ಈಗ ಒಂದು ನಿಮಿಷ ಯೋಚನೆ ಮಾಡೋಣ. ಈ ಪರಿಸ್ಥಿತಿಯನ್ನು ಕೇವಲ ಕರ್ನಾಟಕಕ್ಕೆ ಸೀಮಿತಗೊಳಿಸಿಕೊಳ್ಳದೆ ಭಾರತದ ಹಿನ್ನೆಲೆಯಲ್ಲಿಯೇ ನೋಡೋಣ. ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲದ, ರಾಷ್ಟ್ರೀಯತೆಯ ಪರಿಕಲ್ಪನೆಯೇ ಇಲ್ಲದ, ಸ್ವರಾಜ್ಯದ ಹೊಣೆಯೇ ಬೇಕಿಲ್ಲದ ಬಹುಸಂಖ್ಯಾತ ಸ್ವಾರ್ಥ ಜಾತಿವಾದಿ ಜನಸಮೂಹ ನಮ್ಮದು ಎಂದರೆ ಅದು ತಪ್ಪಾಗುತ್ತದೆಯೆ? ಇಡೀ ಪ್ರಪಂಚದ ಯಾವ ಪ್ರಬುದ್ಧ ಪ್ರಜಾಪ್ರಭುತ್ವದಲ್ಲಿ ನಿಮಗೆ ಈ ಮಟ್ಟದ ನೀಚ, ಲಜ್ಜೆಗೇಡಿ, ನಿರ್ಲಜ್ಜ, ಸ್ವಾರ್ಥ, ಜವಾಬ್ದಾರಿಹೀನ, ಜಾತಿವಾದಿ, ಕೋಮುವಾದಿ ರಾಜಕಾರಣಿಗಳು ಮತ್ತು ಅವರನ್ನು ಚುನಾಯಿಸುವ ಜನರು ಕಾಣ ಸಿಗುತ್ತಾರೆ? ಹೌದು. ನಮಗಿಂತ ಕೆಟ್ಟ ವ್ಯವಸ್ಥೆಗಳು ಇವೆ. ಅನೇಕ ದೇಶಗಳಲ್ಲಿ ಈಗಲೂ ಸರ್ವಾಧಿಕಾರಗಳಿವೆ; ಮಿಲಿಟರಿ ಆಡಳಿತಗಳಿವೆ; ಕಮ್ಯುನಿಸ್ಟ್ ಆಡಳಿತಗಳಿವೆ; ರಾಜಸತ್ತೆಗಳು ಇವೆ. ಆದರೆ ಪ್ರಶ್ನೆ ಅವುಗಳ ಬಗ್ಗೆ ಅಲ್ಲ. ಬೆದರಿಕೆಯಿಲ್ಲದ, ತಮಗೆ ಬೇಕಾದವರನ್ನು ಮುಕ್ತವಾಗಿ ಚುನಾಯಿಸುವ ಸ್ವಾತಂತ್ರ್ಯ ಇರುವ ನಮ್ಮಂತಹ ಎಷ್ಟು ದೇಶಗಳಲ್ಲಿ ರಾಜಕಾರಣಿಗಳು ನಮ್ಮವರಂತೆ ನಿರ್ಲಜ್ಜರೂ, ಭ್ರಷ್ಟರೂ, ಅನೈತಿಕ ಕ್ರಿಮಿಗಳೂ ಆಗಿರುತ್ತಾರೆ?

ಲೇಖನದ ವಿಡಿಯೊ ಪ್ರಸ್ತುತಿ – ಭಾಗ 2

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ, ನಮ್ಮನ್ನು ನಾವು ಆಳಿಕೊಳ್ಳಲಾಗದ, ವಸಾಹತುಶಾಹಿಯ ಸಂಕೇತವಾದ ರಾಷ್ಟ್ರಪತಿ ಆಳ್ವಿಕೆಗೆ ಕಳೆದ ಮುವ್ವತ್ತಾರು ವರ್ಷಗಳಲ್ಲಿ ನಾಲ್ಕು ಸಲ (1971/1977/1989/2007) ಕರ್ನಾಟಕ ಒಳಗಾಗಿದೆ. ಈ ಸತ್ಯ ನಾವು ನಿಜಕ್ಕೂ ಸ್ವರಾಜ್ಯಕ್ಕೆ ಅರ್ಹರೆ ಎನ್ನುವ ಪ್ರಶ್ನೆಯನ್ನು ಪದೇಪದೆ ಎತ್ತುತ್ತದೆ. ಇದರಷ್ಟೆ ಗಂಭೀರ ಸ್ಥಿತಿ ಇನ್ನೊಂದಿದೆ. ಅದು, ನಾವು ಆರಿಸಿ ಕಳುಹಿಸುವ ಜನರು ನೀಡುವ ಆಡಳಿತಕ್ಕಿಂತ ಅವರಿಲ್ಲದ ಈ ರಾಷ್ಟ್ರಪತಿ ಆಡಳಿತವೆ ಕಡಿಮೆ ಭ್ರಷ್ಟಾಚಾರದ, ಅಷ್ಟಿಷ್ಟು ಸಜ್ಜನಿಕೆ ಉಳ್ಳಆಡಳಿತ ಎನ್ನಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳೂ ಇವೆ. ಹಾಗೆಯೆ, ಮುಂದಿನ ವರ್ಷದ ಚುನಾವಣೆಯಲ್ಲಿ ಜನರಿಗೆ ಉತ್ತಮ ಪರ್ಯಾಯವೂ ಇಲ್ಲ ಎಂದರೆ ಅದು ದುರ್ದೈವ ಮಾತ್ರವಲ್ಲ ವಾಸ್ತವವೂ ಹೌದು. ಛೇ. ಆಧುನಿಕ ಶಿಕ್ಷಣದ ಹಾಗೂ ಮುಂದುವರೆದ ಸಮಾಜ ಮತ್ತು ದೇಶಗಳ ಹಿನ್ನೆಲೆಯಲ್ಲಿ ಹೇಳುವುದಾದರೆ ನಾವು ನಿಜಕ್ಕೂ ಒಂದು ಹೀನ ಸಂದರ್ಭದಲ್ಲಿ ಬದುಕುತ್ತಿದ್ದೇವೆ ಮತ್ತು ಅದಕ್ಕೆ ನಾವೆ ಕಾರಣರು ಎಂದರೆ ಅದು ತಪ್ಪಾಗುತ್ತದೆಯೆ?

ದಕ್ಷಿಣ ಆಫ್ರಿಕಾದ ವರ್ಣಭೇದ ಸಮಾಜದ ಹಿನ್ನೆಲೆಯಲ್ಲಿ ರಚಿತವಾದ ಒಂದು ಅಸಾಮಾನ್ಯ ಕಾದಂಬರಿಯ ಹೆಸರು “Cry, The Beloved Country”. ಅದರದೆ ಗುಂಗಿನಲ್ಲಿರುವ ನನಗೆ ಈಗ ಅನ್ನಿಸುತ್ತಿರುವುದು, “Cry, The Beloved Karnataka”.

Anna_Hazare

ಭ್ರಷ್ಟಾಚಾರ ವಿರೋಧಿ ಆಂದೋಳನ : ಹೊರಗಿನವರ ಹಸ್ತಕ್ಷೇಪ ಎಂಬ ಅಸಾಂದರ್ಭಿಕ ಭಯ

ಈಗಿನ ಭ್ರಷ್ಛಾಚಾರ ವಿರೋಧಿ ಆಂದೋಳನ ನಮ್ಮ ಸಮಾಜದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಸರ್ಕಾರ ಮತ್ತು ಆಡಳಿತದಲ್ಲಿನ ಭ್ರಷ್ಟಾಚಾರದ ಬಗ್ಗೆಯೇ ಹೆಚ್ಚು ಮಾತನಾಡುತ್ತಿರುವುದು. ಮತ್ತು ಈ ಮೂಲಕ ಈ ಆಂದೋಳನ ಕೇಳಿದ್ದು ಒಂದು ಮಸೂದೆಯನ್ನು. ಆದರೆ ಈ ಪರಿಸ್ಥಿತಿಯ ಮತ್ತು ಸಮಸ್ಯೆಯ ಮೂಲ ಇರುವುದು ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಮತ್ತು ನಾವು ಆರಿಸಿಕೊಳ್ಳುತ್ತಿರುವ ಜನರ ಅರ್ಹತೆಯಲ್ಲಿ. ಹಾಗಾಗಿ ಇದು ಕೊನೆಗೂ ಮುಟ್ಟುವುದು ಆ ಬೇರಿಗೇ. ಅದನ್ನೇ ಅಣ್ಣಾ ಹಜಾರೆ ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತ ಚುನಾವಣಾ ಸುಧಾರಣೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಈ ಕೆಳಗಿನ ಲೇಖನವನ್ನು ನಾನು ಬರೆದಿದ್ದು ಕಳೆದ ಜೂನ್ 15, 2011ರ ಸಮಯದಲ್ಲಿ. ಬಹುಶಃ ಅದೇ ವಾರದ ಒಂದು ದಿನ ಅದು “ವಿಜಯ ಕರ್ನಾಟಕ”ದಲ್ಲಿ ಪ್ರಕಟವಾಗಿತ್ತು. ಅಲ್ಲಿ ನಾನು ಅಂತಿಮವಾಗಿ ಹೇಳಬಯಸಿದ್ದು, ‘ನಮ್ಮ ರಾಜಕೀಯ ನಾಯಕರನ್ನು ಯೋಗ್ಯರಾಗುವ ಮತ್ತು ಪ್ರಾಮಾಣಿಕರಾಗುವ ರೀತಿಯಲ್ಲಿ ರೂಪಿಸುವುದೆ ಈ ಚಳವಳಿಯ ಪರೋಕ್ಷವಾದ ಆದರೆ ಬಹುಮುಖ್ಯವಾದ ಸಾಧನೆಯಾಗುತ್ತದೆ.’ ಅದು ಬಹುಶಃ ಒಂದಷ್ಟು ಮಟ್ಟಿಗೆ ನಿಜವಾಗುವ ಸಾಧ್ಯತೆಗಳು ಈಗಾಗಲೆ ಕಾಣಿಸುತ್ತಿವೆ. ಆ ಲೇಖನದ ಪೂರ್ಣಭಾಗ ಇದು:

ಭ್ರಷ್ಟಾಚಾರ ವಿರೋಧಿ ಆಂದೋಳನ : ಹೊರಗಿನವರ ಹಸ್ತಕ್ಷೇಪ ಎಂಬ ಅಸಾಂದರ್ಭಿಕ ಭಯ

ಇವತ್ತು ಭ್ರಷ್ಟಾಚಾರದ ಸುತ್ತ ಚಳವಳಿ ಮಟ್ಟದ ಕಾರ್ಯಕ್ರಮಗಳು ರೂಪುಗೊಳ್ಳುತ್ತಿವೆ. ಇದಕ್ಕೆ ಇತ್ತೀಚಿನ ದಿನಗಳ ಮುಖ್ಯ ಪ್ರೇರಣೆ ಎಂದರೆ ನಮ್ಮ ಜನಪ್ರತಿನಿಧಿಗಳು ಅನೈತಿಕ ಕಾರ್ಯಗಳಿಂದ ಭ್ರಷ್ಟಾಚಾರದ ಹಗರಣಗಳಲ್ಲಿ ತೊಡಗಿರುವುದು ಜನಕ್ಕೆ ಮಾಧ್ಯಮಗಳ ಮೂಲಕ ನೇರಾನೇರವಾಗಿ ಗೊತ್ತಾಗುತ್ತಿರುವುದು. ದೇಶದ ಜನಕ್ಕೆ ತಾವು ತಮ್ಮ ದೈನಂದಿನ ಕೆಲಸದಲ್ಲಿ ನಿತ್ಯ ಕಾಣುವ ಮತ್ತು ಅನುಭವಿಸುವ ಭ್ರಷ್ಟಾಚಾರಕ್ಕಿಂತ ಹೆಚ್ಚಾಗಿ ರಾಜಕಾರಣಿಗಳ ಭ್ರಷ್ಟಾಚಾರ ಮತ್ತು ಸಾರ್ವಜನಿಕ ಜೀವನದಲ್ಲಿನ ಅಧ:ಪತನ ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದಿನ ಚಳವಳಿ ಒಂದು ಮಟ್ಟದ ಅಧಿಕೃತತೆ ಪಡೆದುಕೊಂಡಿರುವುದು ಸುಳ್ಳಲ್ಲ. ಹೀಗಾಗಿ ಶಾಸಕರು-ಸಂಸದರು ರಚಿಸಬೇಕಾದ, ಮಂಡಿಸಬೇಕಾದ ಕಾನೂನು-ಮಸೂದೆಗಳನ್ನು ಅವರಿಗಾಗಿ ಕಾಯದೆ ಈ ರಾಜಕೀಯೇತರ ಸಾಮಾಜಿಕ ನಾಯಕರೆ ರಚಿಸಲು ಮುಂದಾಗುತ್ತಿದ್ದಾರೆ. ಅವುಗಳ ಮಂಡನೆ ಮತ್ತು ಅಂಗೀಕಾರಕ್ಕೆ ಎಲ್ಲಾ ರೀತಿಯ ಒತ್ತಡಗಳನ್ನು ಹಾಕುತ್ತಿದ್ದಾರೆ. ಈ ಪರಿಸ್ಥಿತಿಗೆ ಭ್ರಷ್ಟಾಚಾರದಲ್ಲಿ ನಿರತರಾದ ಶಾಸಕರು, ಸಂಸದರು, ಅಧಿಕಾರರೂಢರಷ್ಟೇ ಕಾರಣರಾಗಿದ್ದರೆ ಮತ್ತು ಅವರ ಪ್ರಮಾಣ ಅಲ್ಪಪ್ರಮಾಣದಲ್ಲಿ ಇದ್ದಿದ್ದರೆ ಈ ಶಾಸನಸಭೆಯ ಹೊರಗಿನವರ ಮಧ್ಯಪ್ರವೇಶ ಪ್ರಜಾಪ್ರಭುತ್ವದಲ್ಲಿ ಗಂಭೀರ ವಿಷಯವೆ ಆಗಿರುತ್ತಿತ್ತು. ಆದರೆ ನಮ್ಮ ಇಂದಿನ ಬಹುಪಾಲು ಜನಪ್ರತಿನಿಧಿಗಳು ತಮ್ಮ ಮೂಲಭೂತ ಕರ್ತವ್ಯಗಳಾದ ಕಾನೂನು ರಚನೆ ಮತ್ತು ತಿದ್ದುಪಡಿ, ಮತ್ತು ಕಾನೂನಿನ ಅನುಷ್ಠಾನದ ಉಸ್ತುವಾರಿಯಲ್ಲಿ ಇಂದು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಇದಕ್ಕೆ ನಿದರ್ಶನವಾಗಿ ಕರ್ನಾಟಕದ ಉದಾಹರಣೆಯನ್ನೇ ತೆಗೆದುಕೊಳ್ಳಿ. ತೀರಾ ಇತ್ತೀಚಿನ ವಿಧಾನಮಂಡಲ ಅಧಿವೇಶನ ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲೇ ಜರುಗಿತು. ಇದರಿಂದಾಗಿ ವಿಧಾನಸಭಾ ಕಲಾಪವನ್ನು ಬಹಳ ದಿನ ನಡೆಸಲಾಗದೆ ತರಾತುರಿಯಲ್ಲಿ ಅಧಿವೇಶನವನ್ನು ಮೊಟಕುಗೊಳಿಸಿ ಮುಂದೂಡಲಾಯಿತು. ಆದರೆ ಮುಂದೂಡುವುದಕ್ಕೆ ಕೆಲವು ಗಂಟೆಗಳ ಮೊದಲು ಐದು ಮಸೂದೆಗಳನ್ನು ಯಾವುದೇ ಚರ್ಚೆ ಇಲ್ಲದೆಯೇ ಅಂಗೀಕರಿಸಲಾಯಿತು. ಶಾಸನಸಭೆಯಲ್ಲಿ ಮಂಡಿಸುವ ಮಸೂದೆಗಳ ಕುರಿತು ಶಾಸಕರಿರಲಿ, ತಮ್ಮ ಇಲಾಖೆಯ ಅಧಿಕಾರಿಗಳು ಸಿದ್ಧಪಡಿಸಿದ ಮಸೂದೆಗಳನ್ನು ಮಂಡಿಸುವ ಸಚಿವ ಮಹಾಶಯರಿಗೂ ಅವುಗಳ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇರುವುದು ಸಂಶಯಾಸ್ಪದ. ಇನ್ನು ಆ ಕಾನೂನುಗಳು ಯಾವ ರೀತಿ ಜನಪರವಾಗಿರಬಲ್ಲವು? ಅವುಗಳಲ್ಲಿ ಯಾರ ಹಿತಾಸಕ್ತಿಗಳು ಮೇಲುಗೈ ಸಾಧಿಸಿರಬಹುದು? ಇನ್ನು ಮೇಲುನೋಟಕ್ಕಾದರೂ ತಮ್ಮ ಭ್ರಷ್ಟ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವ ಕಾನೂನುಗಳ ಅನುಷ್ಠಾನದ ವಿಚಾರದಲ್ಲಿ ಯಾವ ಸ್ವಾರ್ಥಿಗಳು ತಾನೆ ಆಸಕ್ತಿ ತಾಳುತ್ತಾರೆ? ಇದು ಕೇವಲ ಕರ್ನಾಟಕದ್ದಷ್ಟೇ ಕತೆಯಲ್ಲ. ಭಾರತದ ಬಹುಪಾಲು ವಿಧಾನಸಭೆಗಳು ಮತ್ತು ಸಂಸತ್ತಿನಲ್ಲೂ ಇಂತಹುದೇ ಪರಿಸ್ಥಿತಿ ಇದೆ.

ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಾಗುವುದು ಪ್ರಬುದ್ಧವಾದ, ಪ್ರಬಲವಾದ ಕಾನೂನುಗಳಿಂದ ಮತ್ತು ಅವುಗಳ ಅನುಷ್ಠಾನದಿಂದ. ಹೊಸ ಕಾನೂನುಗಳ ರಚನೆ ಮಾಡುವುದು ಮತ್ತು ಈಗಾಗಲೇ ಇದ್ದಿರುವ ಕಾನೂನುಗಳಲ್ಲಿ ಇದ್ದಿರಬಹುದಾದ ಲೋಪದೋಷಗಳಿಗೆ ಸೂಕ್ತ ತಿದ್ದುಪಡಿ ಮಾಡುವುದು ಶಾಸಕರ-ಸಂಸದರ ಕರ್ತವ್ಯ. ಇಂದಿನ ಬಹುತೇಕ ಜನಪ್ರತಿನಿಧಿಗಳಿಗೆ ಈ ಕರ್ತವ್ಯದ ಅರಿವೇ ಇಲ್ಲ. ಅದಕ್ಕೆ ಬೇಕಾದ ಶೈಕ್ಷಣಿಕ ಅರ್ಹತೆಯೂ ಅವರಿಗಿಲ್ಲ. ವಿದ್ಯಾರ್ಹತೆಯ ಮಾತು ಒಂದೆಡೆ ಇರಲಿ; ನ್ಯಾಯಪರವಾಗಿರಬೇಕು, ನೀತಿಪರವಾಗಿರಬೇಕು ಎಂಬ ಮೂಲ ನೈತಿಕ ಪಾಠವೂ ಇಂದಿನ ಜನಪ್ರತಿನಿಧಿಗಳಿಗೆ ಇಲ್ಲ. ಅನೈತಿಕ ಮತ್ತು ಅಕ್ರಮ ಮಾರ್ಗಗಳಿಂದ ಹಣ ಮಾಡಿರುವವರೆ ಇಂದು ಚುನಾವಣೆಗಳಲ್ಲಿ ಹಣದ ಹೊಳೆ ಹರಿಸಿ ಬಹುಸಂಖ್ಯೆಯಲ್ಲಿ ಗೆದ್ದುಬರುತ್ತಿದ್ದಾರೆ. ಹೀಗಿರುವಾಗ ಇವರಿಂದ ಕಾಲಕಾಲಕ್ಕೆ ವ್ಯವಸ್ಥೆಯಲ್ಲಿನ ಭ್ರಷ್ಟತೆಯನ್ನು ತಡೆಗಟ್ಟುವಂತಹ ಕಾನೂನುಗಳನ್ನು ಅಪೇಕ್ಷಿಸುವುದು ಕಡುಮೂರ್ಖತನ. ಇವರು ಭ್ರಷ್ಟತೆಯಲ್ಲಿ ಪಾಲುದಾರರಷ್ಟೇ ಅಲ್ಲ, ಅದರ ಪೋಷಕರೂ ಕೂಡಾ ಹೌದು.

ಆದರೆ ಈ ನಾಡನ್ನು ಪ್ರೀತಿಸುವ, ಭಾರತದ ಜನಸಮುದಾಯ ನೈತಿಕತೆಯ ತಳಹದಿಯ ಮೇಲೆ ವಿಕಾಸಗೊಳ್ಳಬೇಕು ಮತ್ತು ಅದು ವಿಶ್ವದ ಸ್ವಾತಂತ್ರ್ಯಪ್ರೇಮಿಗಳಿಗೆ ಮತ್ತು ಪ್ರಜಾಪ್ರಭುತ್ವವಾದಿಗಳಿಗೆ ಆಶಾಕಿರಣವಾಗಿ ಆಸರೆಯಾಗಿ ಇರಬೇಕು ಎಂದು ಬಯಸುವ ಜನರೂ ಈ ದೇಶದಲ್ಲಿದ್ದಾರೆ. ನಮ್ಮ ಸಮಾಜ ತನ್ನ ಮೌಲ್ಯಗಳನ್ನು ಕಳೆದುಕೊಂಡು ಅಧ:ಪತನದತ್ತ ನಡೆಯುವಾಗಲೆಲ್ಲ ಇಂತಹವರು ಧ್ವನಿ ಎತ್ತುತ್ತಾರೆ. ಈಗ ಆಗುತ್ತಿರುವುದೂ ಅದೇ. ಇದರಲ್ಲಿ ಚಿತ್ತಶುದ್ಧಿಯಿಲ್ಲದ ಮತ್ತು ಈ ಚಳವಳಿಯಿಂದ ರಾಜಕೀಯ ಲಾಭ ಮಾಡಿಕೊಳ್ಳುವ ಆಸೆಯುಳ್ಳ ಸ್ವಾರ್ಥಿಗಳೂ ಹಲವರಿರಬಹುದು. ಆದರೆ ಈಗಿನ ಎಲ್ಲ ವಿರೋಧಕ್ಕೂ ಮತ್ತು ಚಳವಳಿಯ ಆರಂಭಕ್ಕೆ ಪ್ರೇರಕರಾದವರು ಮಾತ್ರ ಇಂದಿನ ಅಧ:ಪತನವನ್ನು ಕಾಣಬಲ್ಲವರು ಮತ್ತು ಅದರ ಸುತ್ತ ಜನಾಭಿಪ್ರಾಯವನ್ನು ರೂಪಿಸುವ ಇಚ್ಚೆಯುಳ್ಳವರು. ಈ ಹಿನ್ನೆಲೆಯಲ್ಲಿ ನಾಡಿನ ಜನತೆ ಇಂದಿನ ಭಷ್ಟಾಚಾರ ವಿರೋಧಿ ಆಂದೋಲನವನ್ನು ಅದರ ಸದುದ್ದೇಶಗಳಿಗಾದರೂ ಬೆಂಬಲಿಸಬೇಕಿದೆ.

ನಮ್ಮ ಈಗಿನ ಗಣರಾಜ್ಯ ವ್ಯವಸ್ಥೆಯನ್ನು ಹತ್ತಿರದಿಂದ ಮತ್ತು ಕಾಳಜಿಯಿಂದ ನೋಡಬಲ್ಲಂತಹ ಕೆಲವರು, ಈ ಚಳವಳಿ ನಮ್ಮ ಜನಪ್ರತಿನಿಧಿಗಳನ್ನು ಮತ್ತು ಪಾರ್ಲಿಮೆಂಟನ್ನು ನಿಷ್ಪ್ರಯೋಜಕಗೊಳಿಸಿ ಪ್ರಜಾಪ್ರಭುತ್ವಕ್ಕೆ ಕೇಡು ಮಾಡುತ್ತದೆ, ಎನ್ನುತ್ತಿದ್ದಾರೆ. ಜನಪ್ರತಿನಿಧಿಗಳಾಗಿ ಆಯ್ಕೆಯಾಗಿಲ್ಲದ ಸಾಮಾಜಿಕ ನಾಯಕರು ಸಂವಿಧಾನೇತರ ಶಕ್ತಿಗಳಾಗಿ ಹೊಮ್ಮುತ್ತಿದ್ದಾರೆ ಎನ್ನುತ್ತಿದ್ದಾರೆ. ಅವರ ಈ ಮಾತಲ್ಲಿ ಸತ್ಯಾಂಶವಿದೆ. ಆದರೆ ಇವತ್ತಿನ ವಾಸ್ತವ ಏನೆಂದರೆ, ಜನಪ್ರತಿನಿಧಿಗಳು ನಿಭಾಯಿಸಬೇಕಾದ ಜವಾಬ್ದಾರಿಗಳು ಈಗಾಗಲೇ ಸಂಪೂರ್ಣವಾಗಿ ಕುಸಿದುಹೋಗಿವೆ. ರಸ್ತೆಗಳಲ್ಲಿ ರಕ್ತ ಹರಿಯುತ್ತಿಲ್ಲ ಎನ್ನುವುದನ್ನು ಬಿಟ್ಟರೆ, ನಮ್ಮದು ಇಂದು ಮೌಲ್ಯಗಳಿಲ್ಲದ, ಕಾನೂನುಗಳಿಲ್ಲದ, ವ್ಯವಸ್ಥೆಯನ್ನು ಕೊಂಡುಕೊಳ್ಳಬಲ್ಲ ತಾಕತ್ತಿನವರ ಅವ್ಯವಸ್ಥಿತ ರಾಜಕೀಯ ಪರಿಸ್ಥಿತಿ. ಒಂದು ಕೋನದಿಂದ ಈ ಅವ್ಯವಸ್ಥಿತ ಅರಾಜಕ ಅಸ್ಥಿರತೆಯೂ ಒಂದು ರೀತಿಯ ಸ್ಥಿರ ವ್ಯವಸ್ಥೆಯಾಗಿ ಕಾಣಿಸುತ್ತದೆ ಅಷ್ಟೇ. ಅದು ಮರಳುಗಾಡಿನ ಮರೀಚಿಕೆ. ಹಾಗಾಗಿಯೇ ಈಗಿನ ಚಳವಳಿ, ಈಗ ಆಗಿರುವ ಪ್ರಜಾಪ್ರಭುತ್ವದ ಅವಹೇಳನ ಮತ್ತು ನಿರ್ವಿಯತೆಗಿಂತ ಇನ್ನೂ ಹೆಚ್ಚಿನ ನಿರ್ವಿಯತೆಯನ್ನೇನೂ ಉಂಟು ಮಾಡುವುದಿಲ್ಲ. ಮಾಡುವುದಿದ್ದರೆ ಅದು ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಬೇರುಮಟ್ಟದ ಪಸರಿಸುವಿಕೆಗೆ ಸಹಾಯ ಮಾಡೀತೆ ಹೊರತು ಅದರ ದಮನಕ್ಕಲ್ಲ. ಈ ಬಗ್ಗೆ ಭಯ ಪಡುವುದಕ್ಕಿಂತ ನಮ್ಮ ರಾಜಕೀಯ ನಾಯಕರ ಕುತಂತ್ರ ಮತ್ತು ಅಯೋಗ್ಯತೆಯತ್ತ ನಮ್ಮ ಗಮನ ಇರಬೇಕು. ಅವರನ್ನು ಯೋಗ್ಯರಾಗುವ ಮತ್ತು ಪ್ರಾಮಾಣಿಕರಾಗುವ ರೀತಿಯಲ್ಲಿ ರೂಪಿಸುವುದೆ ಈ ಚಳವಳಿಯ ಪರೋಕ್ಷವಾದ ಆದರೆ ಬಹುಮುಖ್ಯವಾದ ಸಾಧನೆಯಾಗುತ್ತದೆ.

ಚಿತ್ರಕೃಪೆ: ವಿಕಿಪೀಡಿಯ

ರವಿ ಕೃಷ್ಣಾ ರೆಡ್ಡಿ