– ರವಿ ಕೃಷ್ಣಾರೆಡ್ಡಿ
ಇಂದಿಗೆ ನವೀನ್ ಸೂರಿಂಜೆ ಜೈಲಿಗೆ ಹೋಗಿ ನಾಲ್ಕು ತಿಂಗಳಾಯಿತು. ಒಬ್ಬ ಅಯೋಗ್ಯ ಮತ್ತು ನ್ಯಾಯಪ್ರಜ್ಞೆ ಇಲ್ಲದ ಮುಖ್ಯಮಂತ್ರಿಯ ಕಾರಣದಿಂದಾಗಿ ಸೂರಿಂಜೆ ಇನ್ನೂ ಬಿಡುಗಡೆ ಆಗಿಲ್ಲ. ಅಮೇಧ್ಯದಲ್ಲಿ ಅಧಿಕಾರ ಮತ್ತು ದುಡ್ಡು ಸಿಕ್ಕರೂ ಅದನ್ನು ನಾಲಿಗೆಯಲ್ಲಿ ನೆಕ್ಕಿ ಬಾಚಿಕೊಳ್ಳುವವರೆಲ್ಲ ನಮ್ಮ ರಾಜಕೀಯ ನಾಯಕರಾಗಿರುವಾಗ ಬಹುಶಃ ಇದಕ್ಕಿಂತ ಬೇರೆಯದನ್ನು ನಿರೀಕ್ಷಿಸುವುದು ಅಸಮಂಜಸವೇನೊ.
ಇದೇ ಸಮಯದಲ್ಲಿ ರಾಜ್ಯದ ಪತ್ರಕರ್ತರ ಸಂಘಟನೆಗಳೂ ಮಾಡಬೇಕಾದಷ್ಟು ಮಾಡಲೇ ಇಲ್ಲ. ನಾಯಕತ್ವ ತೆಗೆದುಕೊಳ್ಳುವುದಕ್ಕೆ ಸಿದ್ದರಿಲ್ಲದವರೇ ಅಲ್ಲಿ ತುಂಬಿಕೊಂಡಿರುವಾಗ ಇನ್ನೇನನ್ನು ನಿರೀಕ್ಷಿಸಬಹುದು? ಹಾಗೆಂದು ಇವರ್ಯಾರಿಗೂ ಅಧಿಕಾರ ಇಲ್ಲವೆಂದಾಗಲಿ, ಸಂಪರ್ಕಜಾಲ ಇಲ್ಲವೆಂದಾಗಲಿ ಅಲ್ಲ. ಈ ಸಂಘಟನೆಗಳ ಅಧಿಕಾರ ಸ್ಥಾನದಲ್ಲಿರುವ ಬಹುತೇಕರು ಬಹಳ ಶಕ್ತಿಶಾಲಿಗಳು, ನೇರವಾಗಿ ಒಬ್ಬ ಮಂತ್ರಿ ಅಥವ ಮುಖ್ಯಮಂತ್ರಿಯ ಬಳಿಗೆ ಹೋಗಿ ತಮಗೆ ಬೇಕಾದ ಕೆಲಸ ಮಾಡಿಸಿಕೊಂಡು ಬರುವವರು. ಆದರೆ, ತಮ್ಮವನೇ ಆದ ಒಬ್ಬ ಪತ್ರಕರ್ತ ನಿರಪರಾಧಿಯಾಗಿದ್ದರೂ ಜೈಲಿನಲ್ಲಿ ಕೊಳೆಯುತ್ತಿರುವಾಗ, ಆತನ ಮೇಲಿನ ಸುಳ್ಳು ಆರೋಪಗಳನ್ನು ಕ್ಯಾಬಿನೆಟ್ ಕೈಬಿಡುವ ನಿರ್ಧಾರ ಮಾಡಿದ ಮೇಲೂ ಮುಖ್ಯಮಂತ್ರಿ ಅದಕ್ಕೆ ನಾಮಕಾವಸ್ಥೆ ಸಹಿ ಮಾಡುವುದನ್ನು ಮಾಡದೇ ಇರುವಾಗ ಈ ಸಂಘಟನೆಗಳಿಗೆ ಮುಖ್ಯಮಂತ್ರಿಯ ಮೇಲೆ ಒತ್ತಡ ತರಲಾಗುವುದಿಲ್ಲ ಎಂದರೆ, ಅದು ಅವರಿಗೆ ಬೇಕಾಗಿಲ್ಲ ಎಂದೇ ಅರ್ಥ. ನಮ್ಮ ಸಮಾಜದಲ್ಲಿ ರಾಜಕೀಯ ಕ್ಷೇತ್ರ ಮಾತ್ರವೇ ಕೆಟ್ಟಿಲ್ಲ. ಸಮಾಜದ ಪ್ರತಿಯೊಂದು ವಿಭಾಗದಲ್ಲೂ ಅರ್ಬುದ ರೋಗ ಒಳಗಿನಿಂದಲೇ ಕೊಲ್ಲುತ್ತಿದೆ.
ಹಾಸನದ “ದಿ ಹಿಂದೂ” ಪತ್ರಿಕೆಯ ವರದಿಗಾರರಾದ ಸತೀಶ ಜಿ.ಟಿ. ನನಗೆ ವೈಯಕ್ತಿವಾಗಿಯೂ ಪರಿಚಿತರು. ಸಾಮಾಜಿಕ ಕಳಕಳಿಯುಳ್ಳ ಪ್ರಾಮಾಣಿಕ ಮತ್ತು ಆದರ್ಶವಾದಿ ಪತ್ರಕರ್ತ. ಈ ಹಿಂದೆ ಅವರು ಡೆಕ್ಕನ್ ಹೆರಾಲ್ಡ್ನಲ್ಲಿದ್ದಾಗ ಬಿಡಿಎದ ಅಕ್ರಮ ಜಿ-ಕೆಟಗರಿ ಸೈಟುಗಳ ಬಗ್ಗೆ, ಮನೆ-ಸೈಟು ಇರುವ ಶಾಸಕ-ಸಂಸದರೆಲ್ಲ ನಮಗೆ ಬೆಂಗಳೂರಿನಲ್ಲಿ ಮನೆ-ಸೈಟಿಗೆ ಗತಿ ಇಲ್ಲ ಎಂದು ಅಕ್ರಮ ಅಫಿಡವಿಟ್ ಸಲ್ಲಿಸಿ ನಾಲ್ಕೈದು ಕೋಟಿ ರೂಪಾಯಿ ಬೆಲೆಯ ಸೈಟುಗಳನ್ನು ಏಳೆಂಟು ಲಕ್ಷಗಳಿಗೆ ಹೊಡೆದುಕೊಂಡಿದ್ದರ ಬಗ್ಗೆ ವಿಸ್ತೃತವಾಗಿ ವರದಿ ಮಾಡಿದ್ದರು. ನಾಲ್ಕು ವರ್ಷದ ಹಿಂದೆ ಉತ್ತರ ಕರ್ನಾಟಕದಲ್ಲಿ ಅಸಾಮಾನ್ಯವಾದ ಮಳೆ ಬಂದು ಪ್ರವಾಹ ಉಕ್ಕೇರಿ ಜನರ ಬದುಕುಗಳು ನೆರೆಯಲ್ಲಿ ಕೊಚ್ಚಿ ಹೋದಾಗ ಅದರ ಬಗ್ಗೆ ವಾರಗಟ್ಟಲೆ ಪ್ರವಾಸ ಮಾಡಿ ವರದಿ ಮಾಡಿದ್ದರು. ಈಗ ಸುಮಾರು ಎರಡು ವರ್ಷಗಳಿಂದ ಈ ಪ್ರತಿಭಾವಂತ ಪತ್ರಕರ್ತ ಹಾಸನದಲ್ಲಿದ್ದಾರೆ. ಇಂತಹ ಒಬ್ಬ ಪತ್ರಕರ್ತ ತಮ್ಮ ನಡುವೆ ಇರುವುದೇ ಒಂದು ಹೆಮ್ಮೆ ಎಂದು ಭಾವಿಸದ ಅಲ್ಲಿನ ಪತ್ರಕರ್ತರ ಸಂಘ ಮತ್ತು ಅದರ ಅಧ್ಯಕ್ಷರು ಸತೀಶ್ ತಮ್ಮ ವಿರುದ್ದ ಸಕಾರಣವಾಗಿ ನೀಡಿದ ದೂರಿನ ಕಾರಣಕ್ಕೆ ವೈಯಕ್ತಿಕ ದ್ವೇಷದಿಂದ ಸಂಘವನ್ನು ದುರುಪಯೋಗಪಡಿಸಿಕೊಂಡು ನೋಟಿಸ್ ಕೊಡುತ್ತಾರೆ. ಸತ್ಯ ಹೇಳಿದ್ದಕ್ಕೆ ಬೇಷರತ್ತಾಗಿ ಕ್ಷಮೆ ಕೇಳಬೇಕು ಎನ್ನುತ್ತಾರೆ. ಒಬ್ಬ ಪತ್ರಕರ್ತನಿಗೆ ಪತ್ರಿಕಾಗೋಷ್ಟಿಗೆ ಬರಬೇಡಿ ಎನ್ನುವ ಅಹಂಕಾರ ಮತ್ತು ದರ್ಪ ತೋರಿಸುತ್ತಾರೆ. ಬಹಿಷ್ಕಾರದ ಮಾತನ್ನಾಡುತ್ತಾರೆ. ಇವರೆಂತಹ ಪತ್ರಕರ್ತರು? ಈ ಮನೋಭಾವವೊಂದೇ ಸಾಕು ಈ ಅಧ್ಯಕ್ಷೆ ಪ್ಯಾಕೇಜ್-ನ್ಯೂಸ್, ಪೇಯ್ಡ್ ನ್ಯೂಸ್ನಲ್ಲಿ ಮುಂದಿದ್ದಾರೆ ಎಂದು ಭಾವಿಸಿಕೊಳ್ಳಲು. ಅಷ್ಟೇ ಅಲ್ಲ, ಇವರಿಗೆ ಕನಿಷ್ಟ ಸಾಮಾನ್ಯ ಜ್ಞಾನವೂ ಇದ್ದಂತಿಲ್ಲ. ತಪ್ಪು ಮಾಡಿ ಸಿಕ್ಕಿಹಾಕಿಕೊಂಡಾಗ ಅದನ್ನು ಮತ್ತಷ್ಟು ಬಯಲುಗೊಳಿಸಿಕೊಳ್ಳದೇ ಪಶ್ಚಾತ್ತಾಪದ ಮೂಲಕವೇ ಸರಿಪಡಿಸಿಕೊಳ್ಳೋಣ ಎನ್ನುವ ಜ್ಞಾನವಿಲ್ಲದ ಮತಿಹೀನರೆಲ್ಲ ಸಂಘಗಳ ಮುಖ್ಯಸ್ಥರಾಗಿಬಿಡುತ್ತಾರೆ, ಪದಾಧಿಕಾರಿಗಳಾಗಿಬಿಡುತ್ತಾರೆ.
ಇನ್ನು ಈ ಹಾಸನದ ಪತ್ರಕರ್ತರ ಸಂಘದ ಉಳಿದ ಪದಾಧಿಕಾರಿಗಳಾದರೂ ಎಂತಹವರು? ಅವರೂ ತಮ್ಮ ಅಧ್ಯಕ್ಷೆಯ ಅಭಿಪ್ರಾಯವನ್ನು ಅನುಮೋದಿಸುವವರೇ ಆದರೆ, ಅವರೂ ನಾಚಿಕೆಪಟ್ಟುಕೊಳ್ಳಬೇಕು. ಹಾಗೆಯೇ, ಆ ಸಂಘದ ಸದಸ್ಯರು ಕಟು ಪ್ರತಿಭಟನೆಯ ಮೂಲಕ ಸಂಘದ ಅಯೋಗ್ಯ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಂದ ರಾಜೀನಾಮೆ ಕೊಡಿಸಿ ತಮ್ಮ ಪ್ರಾಮಾಣಿಕತೆ, ವೃತ್ತಿಪರತೆ, ನ್ಯಾಯಪರತೆಯನ್ನು ನಿರೂಪಿಸಬೇಕು. ಆ ಜವಾಬ್ದಾರಿ ಅಲ್ಲಿಯ ಸಂಘದ ಸದಸ್ಯರ ಮೇಲೆಯೇ ಇದೆ.
ಇನ್ನು, ವಿಷುಯಲ್ ಮೀಡಿಯಾದ ಪತ್ರಕರ್ತರ ಬಗ್ಗೆ. ನಮ್ಮ ಭಾಷೆಯ ಅನೇಕ ಟಿವಿ ನಿರೂಪಕರು ಅಹಂಕಾರಿಗಳು, ಅಜ್ಞಾನಿಗಳು, ಭ್ರಷ್ಟರು. ಇದು ಬಹುತೇಕರಿಗೆ ಗೊತ್ತಿರುವ ವಿಚಾರವೇ. ಆದರೆ ಇದಿಷ್ಟೇ ಅಲ್ಲ. ಇವರಲ್ಲಿ ಕೆಲವರು ಕೊಲೆ ಮಾಡಿಸಲು ಸುಪಾರಿ ಕೊಡುವಂತಹ ಕ್ರಿಮಿನಲ್ಗಳೂ ಇದ್ದಾರೆ. ಈ ವಿಚಾರ ನೆನ್ನೆಯ “ದಿ ಹಿಂದೂ” ಪತ್ರಿಕೆಯಲ್ಲಿ ಬಂದಿದೆ. ಅವರು ಆ ವ್ಯಕ್ತಿಯ ಹೆಸರು ಮತ್ತು ಆತ ಕೆಲಸ ಮಾಡುತ್ತಿದ್ದ ಚಾನಲ್ನ ಬಗ್ಗೆ ಹೇಳಿಲ್ಲ. ಆದರೆ ಈ ವಿಷಯ ಬಹುಶಃ ಕನ್ನಡದ ಯಾವುದೇ ಪತ್ರಿಕೆಯಲ್ಲಿ ಬಂದ ಹಾಗೆ ಕಾಣುವುದಿಲ್ಲ. ನಮ್ಮ ಕನ್ನಡ ಪತ್ರಿಕೆಗಳಿಗೆ ಏಕಿಷ್ಟು ಭಯವೋ ಅರ್ಥವಾಗುತ್ತಿಲ್ಲ.
ನನಗೆ ಗೊತ್ತಾದ ಹಾಗೆ ಆ ಕ್ರಿಮಿನಲ್ ಪತ್ರಕರ್ತನ ಕ್ರೌರ್ಯದ ಕೈಗಳು ಬಹಳ ಉದ್ದವಿವೆ. ಆತನಿಗೆ ಮಾಜಿ ಮುಖ್ಯಮಂತ್ರಿ, ಹಾಲಿ ಮಂತ್ರಿಗಳೆಲ್ಲ ಆಪ್ತರಂತೆ. ಈತನ ಅಪ್ಪನಿಗೆ ಈ ಪತ್ರಕರ್ತ ತಮ್ಮ ಚೇಲಾ ಎಂಬ ಕಾರಣಕ್ಕೆ, ತನ್ನ ಜಾತಿಯವ ಎನ್ನುವ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಜಿ-ಕೆಟಗರಿ ಸೈಟು ಕೊಟ್ಟು ಪುರಸ್ಕರಿಸಿದ್ದಾರಂತೆ. ಇಲ್ಲೆಲ್ಲ ನಾನು “ಅಂತೆ” ಎಂದು ಬರೆಯುತ್ತಿದ್ದರೂ ಇವೆಲ್ಲ ಅಂತೆಕಂತೆಗಳೇನೂ ಅಲ್ಲ. ಇಂತಹ ಕ್ರಿಮಿನಲ್ ಪತ್ರಕರ್ತ ನಮ್ಮ ರಾಜ್ಯದ ನಂಬರ್ ಒನ್ ಚಾನಲ್ನಲ್ಲಿ ಮುಖ್ಯ ನಿರೂಪಕನಾಗಿ ಕಾಣಿಸಿಕೊಳ್ಳುತ್ತಾನೆ ಎಂದರೆ ಅದು ನಮ್ಮ ಮಾಧ್ಯಮಲೋಕದ ಅಧೋಗತಿಗೆ ಸಾಕ್ಷಿ. ಈತ ಇಷ್ಟರಲ್ಲೇ ಸೆರೆ ಆಗಬಹುದು ಎನ್ನುತ್ತವೆ ಮೂಲಗಳು. ಆದರೆ ಆತ ಬಚಾವಾಗಲೂಬಹುದು, ಅಷ್ಟು ಪ್ರಭಾವಶಾಲಿ ಎನ್ನುತ್ತಾರೆ ನನಗೆ ತಿಳಿದವರು.
ನಮ್ಮ ರಾಜಕೀಯ ಕ್ಷೇತ್ರದ ಬಹುಶಃ ಇನ್ನೊಂದು ಐದು-ಹತ್ತು ವರ್ಷಗಳಲ್ಲಿ ಶುದ್ಧವಾಗಬಹುದು ಎನ್ನುವ ನಂಬಿಕೆ ನನಗಿದೆ. ಆದರೆ, ರಾಜ್ಯದ ಮಾಧ್ಯಮಲೋಕ ಶುದ್ದವಾಗುತ್ತದೆ ಎನ್ನುವ ನಂಬಿಕೆ ಇಲ್ಲ. ಬಹುಶಃ ಇಲ್ಲಿಯೇ ವರ್ತಮಾನ.ಕಾಮ್ನ ಹೆಚ್ಚುವರಿ ಜವಾಬ್ದಾರಿ ಇದೆ ಎನ್ನಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಮಾಧ್ಯಮ ಲೋಕದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ನಮ್ಮಷ್ಟು ಕನ್ನಡಿ ಹಿಡಿದವರು ಯಾರೂ ಇರಲಿಕ್ಕಿಲ್ಲ. ಪ್ರಾಮಾಣಿಕ ಪತ್ರಕರ್ತರು ಸಾಂಘಿಕವಾಗಿ ಈ ಕೆಲಸಕ್ಕೆ ಕೈಜೋಡಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ. ನೀಚ ಪತ್ರಕರ್ತರನ್ನು ವ್ಯವಸ್ಥೆಯಿಂದ ನಿವಾರಿಸಿಕೊಳ್ಳುವ ಅನಿವಾರ್ಯತೆ ಈ ಸಮಾಜಕ್ಕೆ ಸೃಷ್ಟಿಯಾಗಿದೆ.