Category Archives: ಸರಣಿ-ಲೇಖನಗಳು

ಎಂದೂ ಮುಗಿಯದ ಯುದ್ಧ (ನಕ್ಸಲ್ ಕಥನ-3)


– ಡಾ.ಎನ್.ಜಗದೀಶ್ ಕೊಪ್ಪ


 

ಬರ್ದಾನ್ ಜಿಲ್ಲೆಯ ಸಮಾವೇಶದಿಂದ ಸಿಲಿಗುರಿಗೆ ಹಿಂತಿರುಗಿದ ಚಾರು ಮುಜಂದಾರ್ ಮತ್ತು ಅವನ ಸಂಗಡಿಗರು, ತಾವು ಕಮ್ಯೂನಿಷ್ಟ್ ಪಕ್ಷದ ಮುಂದೆ ಇರಿಸಿದ್ದ ಪ್ರಸ್ತಾವನೆಗಳನ್ನು ಕಾರ್ಯರೂಪಕ್ಕೆ ತರಲು ತಕ್ಷಣವೇ ಮುಂದಾದರು. ಇದೊಂದು ರೀತಿಯಲ್ಲಿ ಎಲ್ಲಾ ಅಸಮಾನತೆ, ದೌರ್ಜನ್ಯಗಳ ವಿರುದ್ಧ ಯುದ್ಧ ಘೋಷಿಸುವ ಮನಸ್ಥಿತಿಯಲ್ಲಿ ಇದ್ದಂತೆ ತೋರುತ್ತಿತ್ತು.

ಚಾರು ಯೋಜಿಸಿದ್ದ ಕನಸಿನ ರೂಪುರೇಷೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕನುಸನ್ಯಾಲ್ ಮತ್ತು ಜಂಗಲ್ ಸಂತಾಲ್, ಮುಂದಾಗಿ ಸಿಲಿಗುರಿ ಪ್ರಾಂತ್ಯದಲ್ಲಿ ಆದಿವಾಸಿಗಳನ್ನು ಸಂಘಟಿಸತೊಡಗಿದರು. ಜಂಗಲ್ ಸಂತಾಲ್ ಮೂಲತಃ ಸಂತಾಲ್ ಬುಡಕಟ್ಟು ಜನಾಂಗದಿಂದ ಬಂದವನಾದ್ದರಿಂದ ಸಂಘಟಿಸುವ ಕೆಲಸ ಅವನಿಗೆ ಕಷ್ಟವೆನಿಸಲಿಲ್ಲ. ಏಕೆಂದರೆ, ಜಮೀನ್ದಾರರ ಬಳಿ ಇರುವ ಹೆಚ್ಚುವರಿ ಭೂಮಿ ಹಾಗೂ ಸರ್ಕಾರ ಶ್ರೀಮಂತ ಜಮೀನ್ದಾರರಿಂದ ವಶಪಡಿಸಿಕೊಂಡಿರುವ ಭೂಮಿ ಈ ನೆಲದ ಭೂಹೀನರಿಗೆ ಸಲ್ಲಬೇಕು ಎಂಬ ಈ ಮೂವರ ಘೋಷಣೆ ಆದಿವಾಸಿಗಳನ್ನು ಸಮ್ಮೋಹನಗೊಳಿಸಿತು.

ಕಿಸಾನ್‌ಸಭಾ ಸಂಘಟನೆಗೆ ಸದಸ್ಯರಾಗ ಬಯಸುವವರು, ನಾಲ್ಕಾಣೆ (25ಪೈಸೆ) ನೀಡಿ ಸದಸ್ಯತ್ವ ಪಡೆಯಬೇಕಿತ್ತು. ಕಾಡಿನ ನಡುವೆ ಭೂಮಿಯ ಬಗ್ಗೆಯಾಗಲಿ, ಬೇಸಾಯದ ಬಗ್ಗೆಯಾಗಲಿ ಎಂದೂ ಕನಸು ಕಾಣದೆ ಬದುಕಿದ್ದ ಸಂತಾಲ್ ಮತ್ತು ರಾಜ್ಬನ್ಸಿ ಎಂಬ ಬುಡಕಟ್ಟು ಜನಾಂಗಕ್ಕೆ ಕಣ್ಣಮುಂದೆ ಬೃಹತ್ತಾದ ಆಶಾಗೋಪುರ ನಿರ್ಮಾಣವಾಗತೊಡಗಿತು. ಕೇವಲ ಎರಡು ತಿಂಗಳ ಅವಧಿಯಲ್ಲಿ ಸದಸ್ಯರ ಸಂಖ್ಯೆ 40 ಸಾವಿರ ಮುಟ್ಟಿತು. ಈ ಸಮಯದಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೇಸ್ ಮತ್ತು ಕಮ್ಯುನಿಷ್ಟ್ ಪಕ್ಷಗಳ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿತ್ತು. ತನ್ನ ರಾಜ್ಯದ ಉತ್ತರ ಭಾಗದಲ್ಲಿ ಆದಿವಾಸಿಗಳು, ಜಮೀನ್ದಾರರ ವಿರುದ್ಧ ಸಂಘಟಿತರಾಗುತ್ತಿದ್ದಾರೆ ಎಂಬ ಸುಳಿವು ಸರ್ಕಾರಕ್ಕೆ ಇತ್ತಾದರೂ ಅನಿರೀಕ್ಷಿತ ಕ್ರಾಂತಿಯ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ.

1967 ರ ಮಾರ್ಚ್ ತಿಂಗಳಿನಿಂದ ಮೇ ತಿಂಗಳವರೆಗೆ ಸಂಘಟಿತರಾದ ಆದಿವಾಸಿ ರೈತರು, ಮತ್ತು ಕಾರ್ಮಿಕರು ತಮ್ಮ ಬಿಲ್ಲು ಬಾಣಗಳೊಂದಿಗೆ ಜಮೀನ್ದಾರರ ಮನೆಗೆ ದಾಳಿ ಇಟ್ಟು ಅವರ ಮನೆಯಲ್ಲಿದ್ದ ಭೂದಾಖಲೆಗಳು. ದವಸಧಾನ್ಯ ಮತ್ತು ಬಂದೂಕಗಳನ್ನು ವಶಪಡಿಸಿಕೊಂಡರು. ಶ್ರೀಮಂತರ ಮನೆಯಲ್ಲಿ ವಶಪಡಿಸಿಕೊಂಡಿದ್ದ ಅಪಾರ ಪ್ರಮಾಣದ ಭತ್ತ ಹಾಗೂ ಇತರೆ ದವಸಧಾನ್ಯಗಳನ್ನು ಎಲ್ಲರೂ ಸಮನಾಗಿ ಹಂಚಿಕೊಂಡು ಉಳಿದುದ್ದನ್ನು ಕಿಸಾನ್ ಸಂಘಟನೆಯ ಸದಸ್ಯರಲ್ಲದವರಿಗೆ ಅತ್ಯಂತ ಕಡಿಮೆ ಬೆಲೆಗೆ ಮಾರಿದರು. ಮೂರು ತಿಂಗಳ ಅವಧಿಯಲ್ಲಿ ನೂರಕ್ಕೂ ಹೆಚ್ಚು ದಾಳಿಗಳು ನಡೆದವು. ಈ ಎಲ್ಲಾ ದಾಳಿಗಳು ಚಾರು ಮುಜಂದಾರ್ ರೂಪಿಸಿದ್ದ ಮಾದರಿಯಲ್ಲಿ ಕನುಸನ್ಯಾಲ್ ಮತ್ತು ಜಂಗಲ್ ಸಂತಾಲ್ ನೇತೃತ್ವದಲ್ಲಿ ನಡೆದವು. ಈ ಅನಿರೀಕ್ಷಿತ ಪ್ರತಿಭಟನೆ ಮತ್ತು ದಾಳಿಯಿಂದ ಕಂಗಾಲಾದ ಸಿಲಿಗುರಿ ಜಿಲ್ಲಾಡಳಿತ ಸರ್ಕಾರದ ಮಾರ್ಗದರ್ಶನಕ್ಕಾಗಿ ಕೊಲ್ಕತ್ತಾದತ್ತ ಮುಖ ಮಾಡಿಕುಳಿತುಬಿಟ್ಟಿತ್ತು.

ಹಿಂಸಾಚಾರ ಮತ್ತು ಪ್ರತಿಭಟನೆಗೆ ಕಾರಣರಾದವರನ್ನು ಬಂಧಿಸುವ ಸ್ಥೈರ್ಯ ಜಿಲ್ಲಾಡಳಿತಕ್ಕೆ ಇರಲಿಲ್ಲ. ಅಂತಿಮವಾಗಿ ಪಶ್ಚಿಮ ಬಂಗಾಳ ಸರ್ಕಾರ ಕಂದಾಯ ಇಲಾಖೆ ಸಚಿವ ಹರಿಕೃಷ್ಣಕೊನರ್‌ನನ್ನು ಸಿಲಿಗುರಿಗೆ ಕಳಿಸಿಕೊಟ್ಟಿತು. ಸರ್ಕಾರ ಮತ್ತು ಪ್ರತಿಭಟನಾಗಾರರ ನಡುವೆ ಹಲವು ಸುತ್ತಿನ ಸಂಧಾನದ ಮಾತುಕತೆಯ ನಂತರ ಮೇ 17 ರಂದು ಸುಕ್ನಾ ಅರಣ್ಯದ ಪ್ರದೇಶದ ಅತಿಥಿಗೃಹದಲ್ಲಿ ಸಚಿವನನ್ನು ಪ್ರತಿಭಟನಾಗಾರರ ಪರವಾಗಿ ಕನುಸನ್ಯಾಲ್ ಭೇಟಿಯಾಗುವುದು ಎಂಬ ಒಡಂಬಡಿಕೆಗೆ ಬರಲಾಯಿತು. ಇದಕ್ಕೂ ಮುನ್ನ ಎರಡು ಬಣಗಳ ನಡುವೆ ಹಲವು ಒಪ್ಪಂದಕ್ಕೆ ಬರಲಾಗಿತ್ತು. ಅವುಗಳಲ್ಲಿ ಸಂಧಾನದ ವೇಳೆ ಕಿಸಾನ್ ಸಭಾ ಘಟಕಗಳಿಂದ ಯಾವುದೇ ದಾಳಿ, ಲೂಟಿ, ಹಿಂಸಾಚಾರ ನಡೆಯಕೂಡದು, ಅದೇ ರೀತಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಕನುಸನ್ಯಾಲ್‌ನನ್ನು ಬಂಧಿಸಕೂಡದು. ಎಂಬ ಅಂಶಗಳು ಮುಖ್ಯವಾಗಿದ್ದವು.

ಕನುಸನ್ಯಾಲ್ ಬಂಗಾಳದ ಕಂದಾಯ ಸಚಿವನನ್ನು ಭೇಟಿಯಾದಾಗ, ಸರ್ಕಾರದ ಪರವಾಗಿ, ವಿಷಯಗಳನ್ನು ಪ್ರಸ್ತಾಪಿಸಿದ ಸಚಿವ ಹರೆಕೃಷ್ಣಕೊನರ್, ನಿಗದಿತ ದಿನದೊಳಗೆ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಕನುಸನ್ಯಾಲ್ ಮತ್ತು ಜಂಗಲ್ ಸಂತಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎದುರು ಶರಣಾಗಬೇಕು ಮತ್ತು ಪೊಲೀಸ್ ನೀಡುವ ಪಟ್ಟಿಯಲ್ಲಿ ಹೆಸರಿರುವ ಆದಿವಾಸಿ ಮುಖಂಡರನ್ನು ಪೊಲೀಸರ ವಶಕ್ಕೆ ಒಪ್ಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟ. ತಕ್ಷಣಕ್ಕೆ ಇವುಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಕನುಸನ್ಯಾಲ್ ಸಂಗಡಿಗರೊಂದಿಗೆ ಈ ಕುರಿತು ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಹೇಳಿ ಸಂಧಾನದ ಸಭೆಯಿಂದ ಎದ್ದು ಬಂದ.

ನಂತರ ಚಾರು ಮುಜುಂದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಬೇಡಿಕೆಗಳಿಗೆ ಕಿಸಾನ್‌ಸಭಾ ನಾಯಕರಿಂದ ಮತ್ತು ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರದ ಬೇಡಿಕೆಗಳನ್ನು ಸಾರಾಸಗಟಾಗಿ ತಿರಸ್ಕರಿಸಲಾಯಿತು. ಶರಣಾಗತಿಗೆ ಸರ್ಕಾರ ನೀಡಿದ್ದ ಎರಡು ದಿನಗಳ ಗಡುವು ಮುಕ್ತಾಯಗೊಂಡ ಹಿನ್ನಲೆಯಲ್ಲಿ , ಸಿಲಿಗುರಿಯ ಜಿಲ್ಲಾಡಳಿತ ಹೆಚ್ಚುವರಿ ಪೊಲೀಸ್ ಪಡೆಗಳ ನೆರವಿನಿಂದ ನಕ್ಸಲ್‌ಬಾರಿ ಹಳ್ಳಿಯ ಮೇಲೆ ದಾಳಿ ಮಾಡಿ ನಾಯಕರನ್ನು ಬಂಧಿಸಲು ಮುಂದಾಯಿತು.

ಮೇ 23 ರಂದು ಪೊಲೀಸ್ ಅಧಿಕಾರಿ ಸೊನಮ್‌ವಾಂಗಡಿ ನೇತೃತ್ವದ ತಂಡ ಹಳ್ಳಿಗೆ ಆಗಮಿಸುತ್ತಿದೆ ಎಂಬ ಸುಳಿವು ದೊರೆತ ಕೂಡಲೇ ಹಳ್ಳಿಯ ಗಂಡಸರು ತಮ್ಮ ಬಿಲ್ಲು ಬಾಣಗಳ ಸಹಿತ ಹಳ್ಳಿಯನ್ನು ತೊರೆದು ಪಕ್ಕದ ಗುಡ್ಡ ಗಾಡಿನ ಪೊದೆಗಳಲ್ಲಿ ಅವಿತು ಕುಳಿತರು. ಹಳ್ಳಿಯಲ್ಲಿ ಯಾವೊಬ್ಬ ಪುರುಷನೂ ಇಲ್ಲದ್ದನ್ನು ಮನಗಂಡ ಅಧಿಕಾರಿ ವಾಂಗಡಿ ನಕ್ಸಲ್‌ಬಾರಿಯ ಬೀದಿಯಲ್ಲಿ ನಿಂತು, ಮಹಿಳೆಯರಿಗೆ, ನಿಮ್ಮ ಗಂಡಂದಿರನ್ನು ಶರಣಾಗಲು ಮನವೊಲಿಸಿ, ಇಲ್ಲದಿದ್ದರೆ, ನಿಮ್ಮನ್ನು ಬಂಧಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದಾಗಲೇ ದೂರದ ಪೊದೆಯ ಮರೆಯಿಂದ ತೂರಿ ಬಂದ ಮೂರು ವಿಷಪೂರಿತ ಬಾಣಗಳು ಅವನ ದೇಹವನ್ನು ಹೊಕ್ಕವು ಕ್ಷಣಾರ್ಧದಲ್ಲಿ ಆತ ಸ್ಥಳದಲ್ಲೇ ಕುಸಿದು ಮೃತಪಟ್ಟ. ತಮ್ಮ ಹೆಂಗಸರನ್ನು ಪೊಲೀಸರು ಎಳೆದೊಯ್ಯುತ್ತಿದ್ದಾರೆ ಎಂಬ ತಪ್ಪು ಕಲ್ಪನೆ ಮತ್ತು ತಿಳುವಳಿಕೆಯಿಂದ ಆದಿವಾಸಿಗಳು ಸೊನಮ್‌ವಾಂಗಡಿಯ ಮೇಲೆ ಬಾಣ ಪ್ರಯೋಗ ಮಾಡಿದ್ದರು.

ಸ್ಥಳೀಯರ ದಾಳಿಯಿಂದ ಬೆಚ್ಚಿಬಿದ್ದ ಪೊಲೀಸರು ಮತ್ತಷ್ಟು ಹೆಚ್ಚುವರಿ ಪಡೆಯನ್ನು ಕರೆಸಿಕೊಂಡು ಮಾರನೇದಿನ ಮತ್ತೇ ನಕ್ಸಲ್‌ಬಾರಿ ಹಳ್ಳಿ ಮೇಲೆ ಮುಗಿಬಿದ್ದರು. ಆ ದಿನ ನಕ್ಸಲ್‌ಬಾರಿ ಎಂಬ ಪುಟ್ಟ ಹಳ್ಳಿ ಅಕ್ಷರಶಃ ರಣರಂಗವಾಗಿ ಹೋಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ 1500 ಪೊಲೀಸರು ಇಡೀ ಹಳ್ಳಿಯನ್ನು ನಾಲ್ಕು ದಿಕ್ಕಿನಿಂದ ಸುತ್ತುವರಿದು ಗ್ರಾಮದೊಳಕ್ಕೆ ಪ್ರವೇಶ ಮಾಡಿದಾಗ, ಸ್ಥಳೀಯ ಆದಿವಾಸಿ ಜನಗಳ ಬಿಲ್ಲಿನ ಬಾಣಗಳನ್ನು ಎದುರಿಸಲಾರದೆ. ಗುಂಡು ಹಾರಿಸಿದಾಗ ಹತ್ತು ಮಂದಿ ಬಲಿಯಾದರು ಇವರಲ್ಲಿ ಆರು ಮಂದಿ ಆದಿವಾಸಿ ಮಹಿಳೆಯರು ಸೇರಿದ್ದರು. ಈ ಘಟನೆಯಿಂದ ಆ ಕ್ಷಣಕ್ಕೆ ನಕ್ಸಲ್‌ಬಾರಿಯಲ್ಲಿ ಪ್ರತಿಭಟನೆ ತಣ್ಣಗಾದರೂ ಪ್ರತಿಭಟನೆಯ ಕಿಚ್ಚು ಇತರೆಡೆ ಆವರಿಸಿತು.

ನೂರೈವತ್ತು ಸಂತಾಲ್ ಆದಿವಾಸಿಗಳ ಗುಂಪು ಜೂನ್ 10 ರಂದು ನಕ್ಸಲ್‌ಬಾರಿ ಸಮೀಪದ ಖಾರಿಬಾರಿ ಎಂಬ ಹಳ್ಳಿಯಲ್ಲಿ ನಾಗೆನ್ ರಾಯ್‌ಚೌಧುರಿ ಎಂಬ ಜಮೀನ್ದಾರನ ಮನೆಗೆ ನುಗ್ಗಿ ಭತ್ತದ ಚೀಲಗಳು, ಜೋಡುನಳಿಕೆಯ ಬಂದೂಕ, ಮತ್ತು ಆಭರಣಗಳನ್ನು ದೋಚಿತು. ಈ ಗುಂಪಿನ ಎಲ್ಲಾ ಸದಸ್ಯರು ತಮ್ಮ ಕೈಯಲ್ಲಿ ಆಯುಧ ಮತ್ತು ಕೆಂಪು ಬಾವುಟ ಹಿಡಿದು ವ್ಯವಸ್ಥಿತವಾಗಿ ದಾಳಿ ನಡೆಸಿದ್ದರು. ಜೊತೆಗೆ ನಾಗೆನ್ ರಾಯ್‌ಚೌಧುರಿಯನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕೊಂಡೊಯ್ದರು. ಅಲ್ಲಿ ಕನುಸನ್ಯಾಲ್ ಅಧ್ಯಕ್ಷತೆಯಲ್ಲಿ ನಡೆದ ಪಂಚಾಯತ್ ಸಭೆಯಲ್ಲಿ ಜಮೀನ್ದಾರ ಚೌಧುರಿ ಆವರೆಗೆ ನಡೆಸಿದ್ದ ಮಹಿಳೆಯರ ಮೇಲಿನ ಆತ್ಯಾಚಾರ, ಬಡವರ ಶೋಷಣೆ, ದಬ್ಬಾಳಿಕೆ ಈ ಕುರಿತಂತೆ ವಿಚಾರಣೆ ನಡೆಸಿ, ಆತನಿಗೆ ಮರಣದಂಡನೆ ವಿಧಿಸಲಾಯಿತು. ಅಲ್ಲದೆ, ಸಾರ್ವಜನಿಕವಾಗಿ ಆತನನ್ನು ನೇಣು ಹಾಕಲಾಯಿತು. ಇದೇ ದಿನ ಮತ್ತೊಂದು ಗುಂಪು ಬರಮನಿಜೋಟೆ ಎಂಬ ಹಳ್ಳಿಯ ಜೈನಂದನ್ ಸಿಂಗ್ ಎಂಬ ಜಮೀನ್ದಾರನ ಮನೆಯ ಮೇಲೆ ದಾಳಿ ನಡೆಸಿ, ದವಸ, ಧಾನ್ಯಗಳ ಜೊತೆಗೆ ಬಂದೂಕ ಹಾಗೂ 25 ಸುತ್ತುಗಳಿಗೆ ಬೇಕಾಗುವಷ್ಟು ಮದ್ದುಗುಂಡುಗಳನ್ನು ದೋಚಿತು.

ಸಿಡಿದೆದ್ದ ಆದಿವಾಸಿಗಳು, ಮತ್ತು ರೈತರು ಮತ್ತು ಕೂಲಿಕಾರ್ಮಿಕರ ದಾಳಿ, ಹತ್ಯೆ, ಹಿಂಸಾಚಾರ ಇವುಗಳಿಂದ  ಆಘಾತಕ್ಕೊಳಗಾದ ಬಂಗಾಳ ಸರ್ಕಾರ ತನ್ನ ಇತರೆ ಚಟುವಟಿಕೆಗಳನ್ನು ಬದಿಗೊತ್ತಿ ಹಲವು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಹತೋಟಿಗೆ ತರಲು ಶ್ರಮಿಸಿತು. ರಾಜ್ಯದ ನಾನಾ ಭಾಗಗಳಿಂದ ಪೋಲೀಸ್ ತುಕಡಿಗಳನ್ನು ಸಿಲಿಗುರಿ ಜಿಲ್ಲೆಗೆ ರವಾನಿಸಿ 700 ಕ್ಕೂ ಹೆಚ್ಚು ಮಂದಿ ಚಳವಳಿಗಾರರನ್ನು ಬಂಧಿಸುವುದರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಯಿತು. ಆಗಸ್ಟ್ 10ರ ವೇಳೆಗೆ ಜಂಗಲ್‌ಸಂತಾಲ್ ಮತ್ತು ಕನುಸನ್ಯಾಲ್ ಇವರ ಬಂಧನದೊಂದಿಗೆ ಸಿಲಿಗುರಿಯ ರೈತರು ಮತ್ತು ಕೃಷಿಕೂಲಿ ಕಾರ್ಮಿಕರ ಪ್ರತಿಭಟನೆಯ ಮೊದಲ ಅಧ್ಯಾಯ ಪೂರ್ಣಗೊಂಡಿತು. ಚಳವಳಿಯನ್ನು ಮುಂದುವರಿಸುವ ದೃಷ್ಟಿಯಿಂದ ಆದಿವಾಸಿ ನಾಯಕ ಜಂಗಲ್‍ಸಂತಾಲ್ ಎರಡು ದಿನಗಳ ಅನ್ನ ನೀರು ಇಲ್ಲದೆ, ಪೊಲೀಸರ ಕಣ್ತಪ್ಪಿಸಿ ಕಾಡಿನೆಲ್ಲೆಡೆ ಅಲೆದಾಡಿ ಕೊನೆಗೆ ಶರಣಾಗತನಾಗಿದ್ದ. ನಕ್ಸಲ್‍ಬಾರಿಯ ಈ ಹೋರಾಟ ಅಂದಿನ ದಿನಗಳಲ್ಲಿ ವಿಶ್ವ ಮಟ್ಟದಲ್ಲಿ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.

(ಮುಂದುವರಿಯುವುದು)

ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ -16)


– ಡಾ.ಎನ್.ಜಗದೀಶ್ ಕೊಪ್ಪ


 

ನರಭಕ್ಷಕ ಹುಲಿ ಸತ್ತು ಬಿದ್ದಿದ್ದ ಸ್ಥಳದ ಸುತ್ತ ಆವರಿಸಿಕೊಂಡ ಹಳ್ಳಿಯ ಜನ ಕುಣಿದು ಕುಪ್ಪಳಿಸಿ ಕೇಕೆ ಹಾಕಿ, ಒಬ್ಬರಿಗೊಬ್ಬರು ಅಪ್ಪಿಕೊಂಡು ತಮ್ಮ ಸಂತಸ ಹಂಚಿಕೊಂಡರು. ಕಾರ್ಬೆಟ್ ತನ್ನ ಸೇವಕರಿಗೆ ಹುಲಿಯನ್ನು ಪ್ರವಾಸಿ ಮಂದಿರಕ್ಕೆ ಹೊತ್ತೊಯ್ದು ಚರ್ಮ ಸುಲಿಯುವಂತೆ ಆದೇಶಿದ. ಕೂಡಲೇ ಹಳ್ಳಿಯ ಜನರೆಲ್ಲಾ ತಾವು ಈ ನರಭಕ್ಷಕನನ್ನು ಸುತ್ತ ಮುತ್ತಲಿನ ಹಳ್ಳಿಯಲ್ಲಿ ಮೆರವಣಿಗೆ ಮಾಡಲು ಅವಕಾಶ ನೀಡಬೇಕೆಂದು ಬೇಡಿಕೊಂಡಾಗ ಕಾರ್ಬೆಟ್‍ಗೆ ಬೇಡವೆನ್ನಲು ಮನಸ್ಸಾಗದೆ ಸಮ್ಮತಿಸಿದ.

ಚಂಪಾವತ್ ಹಳ್ಳಿಯ ಜನ ಬಿದಿರಿನ ಬೊಂಬುಗಳಲ್ಲಿ ನಿರ್ಮಿಸಿದ ತಡಿಕೆಯಲ್ಲಿ ನರಭಕ್ಷಕ ಹುಲಿಯ ಶವವನ್ನು ಹೊತ್ತು ತಮಟೆ, ನಗಾರಿಗಳ ಜೊತೆ ಹಳ್ಳಿಗಳಲ್ಲಿ ಮೆರವಣಿಗೆ ಮಾಡಿದರು. ನರಭಕ್ಷಕನಿಗೆ ಬಲಿಯಾದ ವ್ಯಕ್ತಿಗಳ ಮನೆ ಮುಂದೆ ನಿಲ್ಲಿಸಿ, ಕುಟುಂಬದ ಸದಸ್ಯರಿಗೆ ಅದನ್ನು ತೋರಿಸಿ ಮುಂದುವರಿಯುತ್ತಿದ್ದರು. ರಾತ್ರಿ ದೀಪದ ಬೆಳಕಿನಲ್ಲಿ ನರಭಕ್ಷಕ ಹುಲಿಯ ಚರ್ಮವನ್ನು ಸೀಳಿ, ಹೊಟ್ಟೆಯನ್ನು ಬಗೆದಾಗ, ಅದು ಕಡೆಯ ಬಾರಿ ಬಲಿ ತೆಗೆದುಕೊಂಡಿದ್ದ ಯುವತಿಯ ಬಳೆಗಳು ದೊರೆತವು. ಯುವತಿಯ ಕುಟುಂಬದವರು ಅಂತಿಮ ಸಂಸ್ಕಾರಕ್ಕಾಗಿ ಅವುಗಳನ್ನು ಪಡೆದು, ಬೇಟೆಯ ಸಂದರ್ಭದಲ್ಲಿ ದೊರೆತ್ತಿದ್ದ ಆಕೆಯ ತಲೆ ಬುರುಡೆಯ ಜೊತೆ ಶವ ಸಂಸ್ಕಾರದ ವಿಧಿ ವಿಧಾನಗಳನ್ನು ಪೂರೈಸಿದರು.

ಈ ಘಟನೆ ನಡೆದ ಒಂದು ತಿಂಗಳಿನಲ್ಲಿ ಬ್ರಿಟಿಷ್ ಸರ್ಕಾರದ ಪರವಾಗಿ ತಹಸಿಲ್ದಾರ್ ತನ್ನ ಕಚೇರಿ ಸಿಬ್ಬಂದಿಯೊಂದಿಗೆ ನೈನಿತಾಲ್‍ಗೆ ಬಂದು ಪಟ್ಟಣದಲ್ಲಿ ಕಾರ್ಬೆಟ್‍ನನ್ನು ಸಾರ್ವಜನಿಕವಾಗಿ ಸನ್ಮಾನಿಸಿದ. ಕಾರ್ಬೆಟ್ ಸರ್ಕಾರದಿಂದ ಹಣ ತೆಗೆದುಕೊಳ್ಳಲು ಮೊದಲೇ ನಿರಾಕರಿಸಿದ್ದರಿಂದ ಅಂದಿನ ಬ್ರಿಟಿಷ್ ಸರ್ಕಾರದ ಲೆಪ್ಟಿನೆಂಟ್ ಜನರಲ್ ಸರ್ ಜೆ.ಪಿ.ಹೆವಿಟ್ ಕೊಡುಗೆಯಾಗಿ ನೀಡಿದ ಆತ್ಯಾಧುನಿಕ ಹಾಗೂ ಇಂಗ್ಲೆಂಡ್‍ನಲ್ಲಿ ತಯಾರಾದ ಬಂದೂಕವನ್ನು ಕಾರ್ಬೆಟ್‍ಗೆ ಕಾಣಿಕೆಯಾಗಿ ಅರ್ಪಿಸಲಾಯಿತು.

ಈ ನರಭಕ್ಷಕನ ಬೇಟೆಯ ನಂತರ ಜಿಮ್ ಕಾರ್ಬೆಟ್ ತಾನು ಕೆಲಸ ಮಾಡುತ್ತಿದ್ದ ಮೊಕಮೆಘಾಟ್‍ಗೆ ಹೋಗಿ ಮತ್ತೇ ನೈನಿತಾಲ್‍ಗೆ ಹಿಂತಿರುಗಿ ಬರುವುದರೊಳಗೆ, ನೈನಿತಾಲ್ ಮತ್ತು ಅಲ್ಮೋರಾ ಪಟ್ಟಣಗಳ ನಡುವೆ ಇರುವ ಮುಕ್ತೇಶ್ವರ ಎಂಬ ಹಳ್ಳಿಯಲ್ಲಿ ಮತ್ತೊಂದು ನರಭಕ್ಷಕ ಹುಲಿ ಕಾಣಿಸಿಕೊಂಡು ಮೂವರನ್ನು ಬಲಿತೆಗೆದುಕೊಂಡಿತು. ಉತ್ತರ ಭಾರತದ ಹಿಮಾಲಯ ಪ್ರಾಂತ್ಯದಲ್ಲಿ ಹುಲಿ ಮತ್ತು ಚಿರತೆಗಳ ಹಾವಳಿಗೆ ಅಮಾಯಕ ಜೀವಗಳು ಬಲಿಯಾಗುತ್ತಿರುವ ಬಗ್ಗೆ ಬ್ರಿಟನ್ನಿನ ಪಾರ್ಲಿಮೆಂಟ್‍ನಲ್ಲೂ ಕೂಡ ಚರ್ಚೆಯಾಗಿ, ಭಾರತದಲ್ಲಿನ ಸರ್ಕಾರದ ವೈಫಲ್ಯವನ್ನು ಖಂಡಿಸಲಾಯಿತು. ಇದರಿಂದ ಒತ್ತಡಕ್ಕೆ ಸಿಲುಕಿದ ಭಾರತದ ವೈಸ್‍ರಾಯ್, ಮತ್ತು ಬ್ರಿಟಿಷ್ ಸರ್ಕಾರ ನೈನಿತಾಲ್‍ನ ಜಿಲ್ಲಾಧಿಕಾರಿ ಸರ್. ಬರ್ಥ್‍ಹುಡ್ ಮೂಲಕ ಕಾರ್ಬೆಟ್‍ಗೆ ನರಭಕ್ಷಕನನ್ನು ಕೊಲ್ಲಲು ಮನವಿ ಮಾಡಿಕೊಂಡಿತು. ಆದರೆ ನೈನಿತಾಲ್‍ನಲ್ಲಿದ್ದ ತನ್ನ ರಿಯಲ್‍ಎಸ್ಟೇಟ್ ವ್ಯವಹಾರ ಹಾಗೂ ಮೊಕಮೆಘಾಟ್‍ಗೆ ರೈಲ್ವೆ ಇಲಾಖೆಯ ಕೆಲಸದಿಂದಾಗಿ ತಕ್ಷಣ ಬೇಟೆಗೆ ಹೊರಡಲು ಕಾರ್ಬೆಟ್ ನಿರಾಕರಿಸಿದ.

15 ದಿನಗಳ ನಂತರ ಸರ್ಕಾರದ ಮನವಿಗೆ ಸ್ಪಂದಿಸಿ ಕಾರ್ಬೆಟ್ ಮತ್ತೆ ತನ್ನ ಬಂದೂಕಗಳನ್ನು ಹೆಗಲಿಗೇರಿಸಿ, ಸಹಾಯಕರೊಡನೆ ಮುಕ್ತೇಶ್ವರಕ್ಕೆ ಹೊರಟು ನಿಂತ. ಆದರೆ ಕಾರ್ಬೆಟ್ ಮುಕ್ತೇಶ್ವರ ಹಳ್ಳಿಗೆ ಭೇಟಿ ನೀಡುವುದರೊಳಗೆ ನರಭಕ್ಷಕ ಹುಲಿ 24 ಮಂದಿಯನ್ನು ಬಲಿತೆಗೆದುಕೊಂಡಿತ್ತು. ಪ್ರಾರಂಭದಲ್ಲಿ ಕಾಡಿನಲ್ಲಿ ಸೌದೆ ಅರಸುತ್ತಿದ್ದ ಹೆಂಗಸಿನ ಮೇಲೆ ಎರಗಿ ಬಲಿತೆಗೆದು ಕೊಂಡಿದ್ದ ಈ ಹುಲಿ, ತನ್ನ ಎರಡನೇ ಬಲಿಯನ್ನು ಸಹ ಅದೇ ರೀತಿ, ತಾನು ವಿಶ್ರಮಿಸುತ್ತಿದ್ದ ಪೊದೆಯ ಬಳಿ ಅರಿಯದೇ ಬಂದ ಮತ್ತೊಬ್ಬ ಹೆಂಗಸನ್ನು ದಾಳಿ ನಡೆಸಿ ಕೊಂದುಹಾಕಿತ್ತು. ಈ ಎರಡು ದಾಳಿಗಳ ನಂತರ ಮನುಷ್ಯನ ರಕ್ತದ ರುಚಿ ಹುಲಿಯನ್ನು ನರಭಕ್ಷಕನನ್ನಾಗಿ ಪರಿವರ್ತಿಸಿತ್ತು. ಮೊದಲು ತನ್ನ ಬಳಿ ಸುಳಿದವರನ್ನು ಬೇಟೆಯಾಡುತ್ತಿದ್ದ ಈ ಹುಲಿ ನಂತರದ ದಿನಗಳಲ್ಲಿ ಮನುಷ್ಯರನ್ನೇ ಅರಸುತ್ತಾ ಅಲೆಯತೊಡಗಿತು.

ಕಾರ್ಬೆಟ್ ಮುಕ್ತೇಶ್ವರ ಹಳ್ಳಿಗೆ ಬರುವ ಹಿಂದಿನ ದಿನದ ಸಂಜೆ ಎರಡು ಹೋರಿಗಳನ್ನು ಮೇಯಿಸಲು ಹೋಗಿದ್ದ ಪುತ್ಲಿ ಎಂಬ ಬಾಲಕಿಯ ಮೇಲೆ ಎರಗಲು ಪ್ರಯತ್ನಿಸಿ ವಿಫಲವಾಗಿ ಅಂತಿಮವಾಗಿ ಹೋರಿಯೊಂದನ್ನು ಕೊಂದು ಹಾಕಿತ್ತು. ಕಾರ್ಬೆಟ್ ಆ ಬಾಲಕಿಯನ್ನು ಕರೆದುಕೊಂಡು ದಾಳಿ ನಡೆದ ಸ್ಥಳಕ್ಕೆ ಹೋದಾಗ ಬಿಳಿ ಬಣ್ಣದ ಹೋರಿಯ ಶವ ಅಲ್ಲೇ ಇತ್ತು. ನರಭಕ್ಷಕ ಹುಲಿ ಹೋರಿಯ ತೊಡೆಯ ಭಾಗವನ್ನು ಮಾತ್ರ ತಿಂದುಹೋಗಿತ್ತು ಈ ದಿನ ರಾತ್ರಿ ನರಭಕ್ಷಕ ಮತ್ತೇ ಬರುವುದು ಖಚಿತ ಎಂಬ ನಿರ್ಧಾರಕ್ಕೆ ಬಂದ ಕಾರ್ಬೆಟ್ ಮರದ ಮೇಲೆ ಕುಳಿತು ಬೇಟೆಯಾಡಲು ನಿರ್ಧರಿಸಿದ. ಆದರೆ, ಹೋರಿಯ ಶವವಿದ್ದ ಜಾಗದಲ್ಲಿ ಮಚ್ಚಾನು ಕಟ್ಟಿ ಕುಳಿತುಕೊಳ್ಳಲು ಯಾವುದೇ ಮರವಿರಲಿಲ್ಲ. ಕೇವಲ ಎಂಟು ಅಡಿಯಿದ್ದ ಕಾಡು ಹೂಗಳ ಪುಟ್ಟ ಮರವೊಂದಿತ್ತು. ಮಚ್ಚಾನು ಕಟ್ಟುವ ಬದಲು ಅದರಮೇಲೆ ಕುಳಿತಿಕೊಳ್ಳಲು ನಿರ್ಧರಿಸಿ, ಅ ಹಳ್ಳಿಯಲ್ಲಿ ಪರಿಚಿತನಾಗಿದ್ದ ಬದ್ರಿ ಎಂಬಾತನ ನೆರವಿನಿಂದ ಟೊಂಗೆಯ ಮೇಲೆ ಹಸಿರು ಎಲೆಗಳನ್ನು ಹೊದಿಸಿ ಗೂಡನ್ನು ನಿರ್ಮಿಸಿಕೊಂಡ. ವಾಪಸ್ ಮುಕ್ತೇಶ್ವರ ಹಳ್ಳಿಗೆ ಬಂದ ಕಾರ್ಬೆಟ್, ಬೇಟೆಗೆ ಬೇಕಾದ ಜೋಡು ನಳಿಕೆಯ ಬಂದೂಕ, ಚಾಕು, ಟಾರ್ಚ್, ಬೆಂಕಿಪೊಟ್ಟಣ, ಸಿಗರೇಟ್, ಒಂದಿಷ್ಟು ಬ್ರೆಡ್ ಮತ್ತು ಬಿಸ್ಕೇಟ್ ಹಾಗೂ ನೀರಿನೊಂದಿಗೆ ಮರದ ಬಳಿ ಬಂದ ಕಾರ್ಬೆಟ್, ಅತ್ತ ಬಾನಿನಲ್ಲಿ  ಸೂರ್ಯ ಮುಳುಗುತ್ತಿದ್ದಂತೆ ಕತ್ತಲಾಗುವ ಮುನ್ನವೇ ಮರವೇರಿ ಕುಳಿತ.

ಅರಣ್ಯದ ಸುತ್ತೆಲ್ಲಾ ಕತ್ತಲು ಆವರಿಸಕೊಳ್ಳುತ್ತಿದ್ದಂತೆ, ಎಲ್ಲೆಡೆ ಮೌನ ಮನೆ ಮಾಡತೊಡಗಿತು. ಸುಮಾರು ಏಳುಗಂಟೆ ಸಮಯಕ್ಕೆ ಸರಿಯಾಗಿ ಕಾರ್ಬೆಟ್ ಕುಳಿತ್ತಿದ್ದ ಜಾಗದಿಂದ ಸುಮಾರು 200 ಅಡಿ ದೂರದಲ್ಲಿ ಜಿಂಕೆಗಳ ಓಟ, ಮರದ ಮೇಲಿದ್ದ ಮಂಗಗಳ ಕಿರುಚಾಟ ಕೇಳಿಬರತೊಡಗಿತು. ಇದು ನರಭಕ್ಷಕ ಬರುವ ಸೂಚನೆ ಎಂಬುದನ್ನು ಅರಿತ ಕಾರ್ಬೆಟ್ ಬಂದೂಕ ಸಿದ್ಧಪಡಿಸಿಕೊಂಡು ಜಾಗರೂಕನಾದ. ಆಕಾಶದಲ್ಲಿ ದಟ್ಟ ಮೋಡಗಳು ಕವಿದ ಪರಿಣಾಮ ಅವನ ಕಣ್ಣಿಗೆ ನರಭಕ್ಷಕ ಗೋಚರವಾಗುತ್ತಿರಲಿಲ್ಲ. ಓಣಗಿದ ತರಗೆಲೆಗಳ ಮೇಲೆ ಅದು ನಡೆದು ಬರುತ್ತಿರುವ ಸದ್ದನ್ನು ಆಲಿಸತೊಡಗಿದ.

ಕಾರ್ಬೆಟ್ ಕುಳಿತ್ತಿದ್ದ ಜಾಗದ ಸುಳಿವು ಸಿಗದ ಕಾರಣ ನರಭಕ್ಷಕ ನೇರವಾಗಿ ಮರದ ಬಳಿ ಬಂದು ಕಾರ್ಬೆಟ್ ಕುಳಿತ ಜಾಗದಿಂದ ಕೇವಲ ಹತ್ತು ಅಡಿ ದೂರದಲ್ಲಿ ಬಂದು ವಿಶ್ರಮಿಸಿತು. ಅಪರಿಮಿತ ಕತ್ತಲಿನಲ್ಲಿ ಬಿಳಿಯ ಬಣ್ಣದ ಹೋರಿಯ ಕಳೇಬರ ಕೂಡ ಅವನ ಕಣ್ಣಿಗೆ ಕಾಣದಾಗಿತ್ತು. ನರಭಕ್ಷಕ ತಾನು ಕುಳಿತ ಜಾಗದಿಂದ ಎದ್ದು ನಡೆದು ಹೋರಿಯ ಕಳೇಬರದತ್ತ ತೆರಳಿ ಅದನ್ನು ತಿನ್ನಲು ಶುರು ಮಾಡಿತು. ಇಡೀ ಅದರ ಚಲನವನ್ನು ತರಗೆಲೆಗಳ ಮೇಲಿನ ಶಬ್ಧದಿಂದ ಗ್ರಹಿಸಿದ ಕಾರ್ಬೆಟ್ ಇಪ್ಪತ್ತು ಅಡಿ ದೂರದಲ್ಲಿದ್ದ ನರಭಕ್ಷನಿಗೆ ಅಂದಾಜಿನ ಮೇಲೆ ಗುಂಡು ಹಾರಿಸಿದ. ಎರಡು ನಿಮಿಷಗಳ ಕಾಲ ಗುಂಡಿನ ಸದ್ದು ಪ್ರತಿಧ್ವನಿಸಿದ್ದರಿಂದ ಏನೂ ಕಾಣದಾಯಿತು ಹಾಗೂ ಕೇಳದಾಯ್ತು. ಆನಂತರ ನರಭಕ್ಷಕ ಹುಲಿ ಘರ್ಜನೆ ಮತ್ತು ಆರ್ಭಟ ಅವನು ಕುಳಿತ ಮರದ ಸುತ್ತಾ ಮುಂದುವರಿಯಿತು. ಇದರಿಂದ ತಾನು ಗುಂಡು ಗುರಿತಪ್ಪಿದ್ದನ್ನು ಕಾರ್ಬೆಟ್ ಖಾತರಿಪಡಿಸಿಕೊಂಡ. ಅವನು ಕುಳಿತ ಮರಕೂಡ ಚಿಕ್ಕದಾಗಿದ್ದ ಕಾರಣ ಕಾರ್ಬೆಟ್ ಕುಳಿತ್ತಿದ್ದ ಮರದ ಟೊಂಗೆಗಳು ಅವನ ಭಾರಕ್ಕೆ ನೆಲದತ್ತ ಬಾಗತೊಡಗಿದವು. ಒಮ್ಮೆಯಂತು ನರಭಕ್ಷಕ ಮರದ ಕೆಳಕ್ಕೆ ಬಂದು ಅವನ್ನು ಹಿಡಿಯಲು ಪ್ರಯತ್ನಿಸಿತು. ಕೂಡಲೇ ಮತ್ತೊಂದು ಟೊಂಗೆಗೆ ನೆಗೆದ ಅವನು ಅದರ ಮೇಲೆ ಕುಕ್ಕರಗಾಲಿನಲ್ಲಿ ಕುಳಿತ.

ಅತ್ಯಂತ ಒತ್ತಡಕ್ಕೆ ಸಿಲುಕಿದ ಕಾರ್ಬೆಟ್ ಜೇಬಿನಿಂದ ಸಿಗರೇಟು ತೆಗೆದು ಬಾಯಿಗಿಟ್ಟು ಬೆಂಕಿಕಡ್ಡಿ ಗೀಚಿದಾಗ ತಕ್ಷಣ ಹೊತ್ತಿಕೊಂಡ ಬೆಂಕಿಯ ಬೆಳಕಿಗೆ ಹೆದರಿದ ನರಭಕ್ಷಕ ದೂರ ಸರಿಯಿತು. ರಾತ್ರಿ ಹತ್ತು ಗಂಟೆಯವರೆಗೆ ನಿರಂತರ ಐದು ಸಿಗರೇಟು ಸೇದಿದ ನಂತರ ಅವನ ಮನಸ್ಸು ಸ್ವಲ್ಪ ಮಟ್ಟಿಗೆ ತಹಬದಿಗೆ ಬಂದಿತು . ಆದರೆ, ಬೆಳಗಿನ ಜಾವ ಆರು ಗಂಟೆಯವರೆಗೆ ಮರದ ಮೇಲೆ ಜೀವಭಯದಲ್ಲಿ ಒಂದೇ ಸ್ಥಿತಿಯಲ್ಲಿ ಕೂರಬೇಕಾದ ದುಸ್ಥಿತಿ ಕಾರ್ಬೆಟ್‍ಗೆ ಒದಗಿಬಂತು. ಅದೇ ವೇಳೆಗೆ ಸಣ್ಣಗೆ ಶುರವಾದ ಮಳೆ, ನಂತರ ಆಕಾಶವೇ ಹರಿದು ಹೋದಂತೆ ರಾತ್ರಿಯಿಂದ ಬೆಳಗಿನ ಜಾವ ನಾಲ್ಕು ಗಂಟೆಯವರೆಗೆ ಎಡ ಬಿಡದೆ ಜೋರಾಗಿ ಸುರಿಯಿತು. ಕಾರ್ಬೆಟ್‍ನ ಬಲಿಗಾಗಿ ಕಾದು ಕುಳಿತ್ತಿದ್ದ ನರಭಕ್ಷಕ ಕೂಡ ಮಳೆಯ ಆರ್ಭಟಕ್ಕೆ ಹೆದರಿ ರಕ್ಷಣೆಗಾಗಿ ಪೊದೆಗಳ ಮೊರೆ ಹೋಯಿತು.

ಬೆಳಗಿನ ಜಾವ ಆರು ಗಂಟೆ ಸಮಯಕ್ಕೆ ಸಹಾಯಕ ಬದ್ರಿ ಕಾರ್ಬೆಟ್‍ಗೆ ಚಹಾ ತೆಗೆದುಕೊಂಡು ಬಂದಾಗ, ಮಳೆ ಮತ್ತು ಚಳಿ ಹಾಗೂ ಒಂದೇ ಸ್ಥಿತಿಯಲ್ಲಿ ಮರದ ಮೇಲೆ ಕುಳಿತ ಕಾರ್ಬೆಟ್ ಅಕ್ಷರಶಃ ಜೀವಂತ ಶವವಾಗಿ ಹೋಗಿದ್ದ. ಅವನ ಕೈ ಕಾಲುಗಳು ಮರಗಟ್ಟುಕೊಂಡು ಸೆಟೆದು ಬಿಗಿದುಕೊಂಡಿದ್ದವು, ಬದ್ರಿ ಕಾರ್ಬೆಟ್‍ನನ್ನು ಮರದಿಂದ ಜೋಪಾನವಾಗಿ ಕೆಳಕ್ಕೆ ಇಳಿಸಿ ಹೆಗಲ ಮೇಲೆ ಹೊತ್ತುಕೊಂಡು ಪ್ರವಾಸಿ ಮಂದಿರಕ್ಕೆ ತಂದು ಕೈಕಾಲುಗಳಿಗೆ ಎಣ್ಣೆಯಿಂದ ಮಸಾಜು ಮಾಡಿ ಬಿಸಿ ನೀರಿನಿಂದ ಸ್ನಾನ ಮಾಡಿಸಿದ. ಕಾರ್ಬೆಟ್‍ನ ಶಿಕಾರಿ ಅನುಭವದಲ್ಲಿ ಆ ರಾತ್ರಿ ಮರೆಯಲಾಗದ ಕರಾಳ ಅನುಭವವಾಯಿತು.

(ಮುಂದುವರಿಯುವುದು)

ಎಂದೂ ಮುಗಿಯದ ಯುದ್ಧ (ನಕ್ಸಲ್ ಕಥನ-2)


– ಡಾ.ಎನ್.ಜಗದೀಶ್ ಕೊಪ್ಪ


ಕಮ್ಯೂನಿಷ್ಟ್ ವಿಚಾರಧಾರೆಯಲ್ಲಿ ತಮ್ಮ ವ್ಯಕ್ತಿತ್ವಗಳನ್ನು ರೂಪಿಸಿಕೊಂಡಿದ್ದ ಚಾರು ಮುಜಂದಾರ್, ಕನು ಸನ್ಯಾಲ್ ಗೆಳೆಯರಾದ ಮೇಲೆ ಕೃಷಿ ಕೂಲಿಕಾರ್ಮಿಕರ ಹೋರಾಟಕ್ಕೆ ಹೊಸರೂಪ ಕೊಡಲು ನಿರ್ಧರಿಸಿದರು. ಹತ್ತಾರು ವರ್ಷ ಕೇವಲ ಪ್ರತಿಭಟನೆ ಮತ್ತು ಪೊಲೀಸರ ಬಂಧನದಿಂದ ದುಡಿಯುವ ವರ್ಗಕ್ಕೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಮನಗಂಡ ಈ ಇಬ್ಬರು ಗೆಳೆಯರು ನೇರಕಾರ್ಯಾಚರಣೆ (Direct Action) ನಡೆಸಲು ತೀರ್ಮಾನಿಸಿದರು. ಚಾರು ಪ್ರತಿಭಟನೆ ಮತ್ತು ಹೋರಾಟಗಳಿಗೆ ಯೋಜನೆ ರೂಪಿಸುವಲ್ಲಿ ಪರಿಣಿತನಾದರೆ, ಕನುಸನ್ಯಾಲ್  ಸಂಘಟನೆಗೆ ಜನರನ್ನು ಒಗ್ಗೂಡಿಸುವ ವಿಷಯದಲ್ಲಿ ಅದ್ಭುತ ಕ್ರಿಯಾಶೀಲ ವ್ಯಕ್ತಿಯಾಗಿದ್ದ. ಹಾಗಾಗಿ ಈ ಎರಡು ಪ್ರತಿಭೆಗಳ ಸಂಗಮ ಕೃಷಿಕರ ಮತ್ತು ಕೃಷಿಕೂಲಿ ಕಾರ್ಮಿಕರ ಹೋರಾಟಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿತು.  ಮೂಲಭೂತವಾಗಿ ಈ ಹೋರಾಟ ಹಿಂಸೆಯನ್ನು ಒಳಗೊಳ್ಳುವ ಆಲೋಚನೆಯಿಂದ ಕೂಡಿರಲಿಲ್ಲ. ಆದರೆ, ನಕ್ಸಲ್‍ಬಾರಿ ಹಳ್ಳಿಯ ಪ್ರಥಮ ಪ್ರತಿಭಟನೆ ಒಂದು ಕೆಟ್ಟ ಗಳಿಗೆಯಲ್ಲಿ ಅನಿರೀಕ್ಷಿತವಾಗಿ ತೆಗೆದುಕೊಂಡ ತಿರುವಿನಿಂದಾಗಿ ಇವರೆಲ್ಲರನ್ನು ಹಿಂಸೆಯ ಹಾದಿಯಲ್ಲಿ ಶಾಶ್ವತವಾಗಿ ನಡೆಯುವಂತೆ ಮಾಡಿದ್ದು ಭಾರತದ ಸಾಮಾಜಿಕ ಹೋರಾಟಗಳ ದುರಂತದ ಅಧ್ಯಾಯಗಳಲ್ಲಿ ಒಂದು.

1967 ರ ಮಾರ್ಚ್ ಮೂರರಂದು, ಲಪ, ಸಂಗು, ರೈತ ಎಂಬ ಮೂವರು ಸಣ್ಣ ಹಿಡುವಳಿದಾರರು ನೂರೈವತ್ತುಕ್ಕೂ ಹೆಚ್ಚು ಮಂದಿ ಇದ್ದ ಕಮ್ಯೂನಿಷ್ಟ್ ಕಾರ್ಯಕರ್ತರ ಬೆಂಬಲದಿಂದ ನಕ್ಸಲ್‍ಬಾರಿಯ ಜಮೀನುದಾರನ ಮನೆಗೆ ಬಿಲ್ಲು, ಬಾಣ, ಭರ್ಜಿ ಮುಂತಾದ ಆಯುಧಗಳೊಂದಿಗೆ ದಾಳಿ ಇಟ್ಟು ಮುನ್ನೂರು ಭತ್ತದ ಚೀಲಗಳನ್ನು ಹೊತ್ತೊಯ್ದು ಎಲ್ಲರೂ ಸಮನಾಗಿ ಹಂಚಿಕೊಂಡರು. ಈ ಸಣ್ಣ ಘಟನೆ ಕಮ್ಯೂನಿಷ್ಟ್ ಚಳವಳಿಗೆ ಭಾರತದಲ್ಲಿ ಪ್ರಥಮಬಾರಿಗೆ ಹೊಸ ಆಯಾಮ ನೀಡಿತು.

ನಕ್ಸಲ್‍ಬಾರಿ ಹಳ್ಳಿಯಲ್ಲಿ ನಡೆದ ರೈತರ ಪ್ರತಿಭಟನೆ ಕಮ್ಯೂನಿಷ್ಟ್ ಪಕ್ಷಕ್ಕೆ ವಿನೂತನವಾಗಿ ಕಂಡರೂ ಇದಕ್ಕೂ ಮೊದಲು ಪಕ್ಷದ ಕಾರ್ಯಕರ್ತರು  ರೈತರ ಪರವಾಗಿ ಧ್ವನಿಯೆತ್ತಿದ್ದರು. ಪಶ್ಚಿಮ ಬಂಗಾಳದ ದಿನಜಪುರ್ ಮತ್ತು ರಂಗ್ಪುರ್ ಜಿಲ್ಲೆಗಳಲ್ಲಿ ಜಮೀನುದಾರರು ಗೇಣಿದಾರರಿಗೆ ಬೇಳೆಯುವ ಫಸಲಿನಲ್ಲಿ ಅರ್ಧದಷ್ಟು ಪಾಲು ಕೊಡಬೇಕೆಂದು ಒತ್ತಾಯಿಸಿ ನಡೆಸಿದ ಹೋರಾಟ, ಬಂಗಾಳದ ಉತ್ತರ ಭಾಗದಿಂದ ದಕ್ಷಿಣದ 24 ಪರಗಣ ಜಿಲ್ಲೆಯವರೆಗೆ ಹಬ್ಬಿತ್ತು. ಇದಕ್ಕಾಗಿ ಕಮ್ಯೂನಿಷ್ಟ್ ಪಕ್ಷದಲ್ಲಿ ಕಿಸಾನ್‍ಸಭಾ ಎಂಬ ಘಟಕವನ್ನು ರಚಿಸಿಕೊಂಡು ಕಾರ್ಯಕರ್ತರು 1946 ರಿಂದ ಸತತ ಹೋರಾಟ ನಡೆಸುತ್ತಾ ಬಂದಿದ್ದರು.

ನೆರೆಯ ಆಂಧ್ರ ಪ್ರದೇಶದಲ್ಲಿಯೂ ಕೂಡ ತೆಲಂಗಾಣ ಪ್ರಾಂತ್ಯದಲ್ಲಿ ಕಮ್ಯೂನಿಷ್ಟ್ ಕಾರ್ಯಕರ್ತರ ಬೆಂಬಲದೊಂದಿಗೆ ನಿಜಾಮನ ಶೋಷಣೆಯ ವಿರುದ್ಧ ಸ್ಥಳೀಯ ರೈತರು ದಂಗೆಯೆದ್ದರು. ನಿಜಾಮನ ಆಳ್ವಿಕೆ ಹಾಗೂ ಅವನ ಆಡಳಿತದ ಅರಾಜಕತೆಯಿಂದ ಬೇಸತ್ತ ಅಲ್ಲಿನ ಜನತೆ 1946 ರಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಕಾಡ್ಗಿಚ್ಚು ಆ ಪ್ರಾಂತ್ಯದ ಮೂರು ಸಾವಿರ ಹಳ್ಳಿಗಳಿಗೆ ಹರಡಿ ಪ್ರತಿಯೊಂದು ಹಳ್ಳಿಯೂ ಸ್ವಯಂ ಸ್ವತಂತ್ರ ಘಟಕದಂತೆ ನಡೆಯಲು ಪ್ರಾರಂಭಿಸಿದವು. ಕೇವಲ ಎರಡು ವರ್ಷಗಳ ಅವಧಿಯಲ್ಲಿ, ಸ್ವಾತಂತ್ರ್ಯಾನಂತರದ ಭಾರತದ ಸೇನೆ ಆಂಧ್ರಪ್ರದೇಶಕ್ಕೆ ಧಾವಿಸಿ ಬಂದು, ಹೈದರಾಬಾದ್ ಪ್ರಾಂತ್ಯವನ್ನು ನಿಜಾಮನಿಂದ ಕಿತ್ತುಕೊಳ್ಳುವವರೆಗೂ ನಾಲ್ಕುಸಾವಿರ ಮಂದಿ ರೈತರು ನಿಜಾಮನ ದಬ್ಬಾಳಿಕೆಯಲ್ಲಿ ಹೋರಾಟದ ಹೆಸರಿನಲ್ಲಿ ಮೃತಪಟ್ಟಿದ್ದರು. (ಹೈದರಾಬಾದ್ ನಿಜಾಮ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕನಂತರ ಹೈದರಾಬಾದ್ ಅನ್ನು ವಿಲೀನಗೊಳಿಸಲು ನಿರಾಕರಿಸಿ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದ್ದನು).

ಕಮ್ಯೂನಿಷ್ಟ್ ಪಕ್ಷದ ಅಂಗವಾದ ಕಿಸಾನ್‍ಸಭಾ ಘಟಕದ ಹೋರಾಟಕ್ಕೆ ನಿಜವಾದ ಹೊಸ ಆಯಾಮ ತಂದುಕೊಟ್ಟವರು ನಕ್ಸಲ್‍ಬಾರಿ ಗ್ರಾಮದ ರೈತರು ಮತ್ತು ಕೃಷಿಕೂಲಿ ಕಾರ್ಮಿಕರು. ಇವರಿಗೆ ಆಧಾರವಾಗಿ ನಿಂತವರು, ಚಾರು ಮುಜಂದಾರ್, ಕನುಸನ್ಯಾಲ್, ಮತ್ತು ಸ್ಥಳೀಯ ಆದಿವಾಸಿ ನಾಯಕ ಜಂಗಲ್ ಸಂತಾಲ್ ಎಂಬಾತ. ನಕ್ಸಲ್‍ಬಾರಿ ಘಟನೆ ಮೇಲು ನೋಟಕ್ಕೆ ಒಂದು ಸಣ್ಣ ಘಟನೆಯಂತೆ ಕಂಡು ಬಂದರೂ ಅದು ಕಮ್ಯೂನಿಷ್ಟ್ ಪಕ್ಷ ತಾನು ನಂಬಿಕೊಂಡು ಬಂದಿದ್ದ ವಿಚಾರ ಮತ್ತು ತಾತ್ವಿಕ ಸಿದ್ಧಾಂತಕ್ಕೆ ಅತಿ ದೊಡ್ಡ ಸವಾಲನ್ನು ಎಸೆದಿತ್ತು. ಅದು ಅನಿರೀಕ್ಷಿತವಾಗಿ ಸ್ಪೋಟಗೊಂಡರೂ ಸಹ ಅದರ ಹಿನ್ನಲೆಯಲ್ಲಿ ಅನೇಕ ರೈತರ, ಸಿಟ್ಟು, ಸಂಕಟ ಮತ್ತು ನೋವು ಹಿಂಸಾಚಾರದ ಮೂಲಕ ವ್ಯಕ್ತವಾಗಿತ್ತು.

ಇದಕ್ಕೆ ಭಾರತ ಸರ್ಕಾರ 1955 ರಲ್ಲಿ ಜಾರಿಗೆ ತಂದ ಭೂಮಿತಿ ಕಾಯ್ದೆ ಕೂಡ ಪರೋಕ್ಷವಾಗಿ ಕಾರಣವಾಗಿತ್ತು. ಪ್ರತಿಯೊಬ್ಬ ವ್ಯಕ್ತಿ 15 ಎಕರೆ ಕೃಷಿಭೂಮಿ, 25 ಎಕರೆ ಕೃಷಿಗೆ ಯೋಗ್ಯವಲ್ಲದ ಭೂಮಿ ಮತ್ತು ಮನೆ ಹಾಗೂ ಇನ್ನಿತರೆ ಬಳಕೆಗಾಗಿ 5 ಎಕರೆ, ಈಗೆ ಒಟ್ಟು 45 ಎಕರೆಯನ್ನು ಮಾತ್ರ ಹೊಂದಬಹುದಾಗಿತ್ತು. ಆದರೆ, ಪಶ್ಚಿಮ ಬಂಗಾಳ, ಆಂಧ್ರ ಸೇರಿದಂತೆ ದೇಶಾದ್ಯಂತ ಅನೇಕ ಜಮೀನುದಾರರು ಸಾವಿರಾರು ಎಕರೆ ಭೂಮಿ ಹೊಂದಿದ್ದರು. ಸರ್ಕಾರದ ಕಣ್ಣು ಒರೆಸುವ ಸಲುವಾಗಿ ತಮ್ಮ ಭೂಮಿಯನ್ನು ಮುಗ್ದ ರೈತರ ಹೆಸರಿಗೆ ವರ್ಗಾಯಿಸಿ, ಅವುಗಳ ದಾಖಲೆ ಪತ್ರಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದರು. ಭೂಮಿಯ ಒಡೆಯರಾಗಿದ್ದರೂ ಕೂಡ ರೈತರು ಜಮೀನ್ದಾರರಿಗೆ ಹಾಗೂ ಅವರು ಸಾಕಿಕೊಂಡಿದ್ದ ಗೂಂಡಗಳಿಗೆ ಹೆದರಿ ಗೇಣಿದಾರರಾಗಿ ದುಡಿಯುತ್ತಾ ತಾವು ಬೆಳೆದ ಫಸಲಿನ ಮುಕ್ಕಾಲು ಪಾಲು ಅವರಿಗೆ ನೀಡಿ, ಉಳಿದ ಕಾಲು ಪಾಲನ್ನು ತಾವು ಅನುಭವಿಸುತ್ತಿದ್ದರು.

ಈ ಅಸಮಾನತೆಯ ವಿರುದ್ಧ ನಕ್ಸಲ್‍ಬಾರಿ ಪ್ರದೇಶದಲ್ಲಿ ಸಣ್ಣ ಹಿಡುವಳಿದಾರರು, ಗೇಣಿದಾರರು ಮತ್ತು ಕೃಷಿ ಕೂಲಿಕಾರ್ಮಿಕರ ಪರವಾಗಿ ಕಿಸಾನ್‍ಸಭಾ ಸಂಘಟನೆ 1959 ರಲ್ಲಿ ಪ್ರಥಮ ಬಾರಿಗೆ ಪ್ರತಿಭಟನೆಯ ಬಾವುಟ ಹಾರಿಸಿತ್ತು. ಆದರೆ, ಈ ಹೋರಾಟ 1962 ರವರೆಗೆ ಮುಂದುವರಿದು ಕೆಲವು ನಾಯಕರ ಬಂಧನದೊಂದಿಗೆ ವಿಫಲತೆಯನ್ನು ಅನುಭವಿಸಿತು. ಇಂತಹ ಸೋಲಿನ ಹಿನ್ನಲೆಯಲ್ಲಿ ಹೋರಾಟವನ್ನು ಯಾವ ಮಾರ್ಗದಲ್ಲಿ ಕೊಂಡೊಯ್ಯಬೇಕು ಎಂಬುದರ ಬಗ್ಗೆ ನಾಯಕರಲ್ಲಿ ಜಿಜ್ಙಾಸೆ ಮೂಡಿಸಿತು. ಪಕ್ಷದ ನಾಯಕರಲ್ಲಿ ಕೆಲವರಿಗೆ ರೈತರ ಸಮಸ್ಯೆಗಳಿಗೆ ಸೈದ್ಧಾಂತಿಕ ನೆಲೆಗಟ್ಟಿನ ಹೋರಾಟದಲ್ಲಿ ಪರಿಹಾರ ಕಂಡುಕೊಳ್ಳುವ ಹಂಬಲವಿತ್ತು. ಆದರೆ, ಈ ಸೌಮ್ಯವಾದಿಗಳ ನಿರ್ಧಾರ ಕೆಲವು ತೀವ್ರವಾದಿ ಮನಸ್ಸಿನ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಒಪ್ಪಿಗೆಯಾಗಲಿಲ್ಲ. ಇವರಲ್ಲಿ ಚಾರು ಮತ್ತು ಕನುಸನ್ಯಾಲ್, ನಾಗಭೂಷಣ್ ಪಟ್ನಾಯಕ್, ಕೊಂಡಪಲ್ಲಿ ಸೀತಾರಾಮಯ್ಯ ಪ್ರಮುಖರು.

1966 ರ ಅಕ್ಟೋಬರ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಬರ್ದಾನ್ ಜಿಲ್ಲೆಯ ಸಟ್‍ಗಚಿಯ ಎಂಬಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಿತು. ಅವರೆಗೂ ಮಾರ್ಕ್ಸ್ ಹಾಗೂ ಲೆನಿನ್ ವಿಚಾರಧಾರೆಯನ್ನು ಅನುಕರಿಸಿಕೊಂಡು ಬಂದಿದ್ದ ಪಕ್ಷಕ್ಕೆ ಹೊಸದಾಗಿ ಚೀನಾದ ಮಾವೋತ್ಸೆ ತುಂಗನ ಕ್ರಾಂತಿಕಾರಕ ವಿಚಾರಗಳನ್ನು ಅಳವಡಿಸಿಕೊಳ್ಳುವ ಸಂದಿಗ್ದತೆ ಎದುರಾಯಿತು. ಈ ಸಮಾವೇಶಕ್ಕೆ ಸಿಲುಗುರಿ ಪ್ರಾಂತ್ಯದಿಂದ ಚಾರು ಮುಜಂದಾರ್, ಕನುಸನ್ಯಾಲ್, ಜಂಗಲ್ ಸಂತಲ್ ಸೇರಿದಂತೆ ಎಂಟು ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು. ಇವರೆಲ್ಲರೂ 1965 ರ ಏಪ್ರಿಲ್ ತಿಂಗಳಿನಲ್ಲಿ ಮುದ್ರಿಸಿದ್ದ ಕರಪತ್ರವೊಂದನ್ನು ಜೊತೆಯಲ್ಲಿ ತಂದಿದ್ದರು. ಕರಪತ್ರದಲ್ಲಿ ರೈತರು, ಗೇಣಿದಾರರು ಮುಂದೆ ಬಂದು ಬಲತ್ಕಾರವಾಗಿ ಜಮೀನ್ದಾರರಿಂದ ಭೂಮಿಯನ್ನು ಕಿತ್ತುಕೊಳ್ಳಲು ಕರೆನೀಡಲಾಗಿತ್ತು. ಅಲ್ಲದೆ, ಸಮಾವೇಶಕ್ಕೆ ಮುನ್ನ ಎರಡು ತಿಂಗಳ ಮುಂಚೆ ಅಂದರೆ, ಆಗಸ್ಟ್ ತಿಂಗಳಿನಲ್ಲಿ ಮುದ್ರಿಸಲಾಗಿದ್ದ ಕರಪತ್ರವನ್ನು ಸಹಾ ಸಿಲಿಗುರಿ ಪ್ರಾಂತ್ಯದ ಪ್ರತಿನಿಧಿಗಳು, ಕಾರ್ಯಕರ್ತರಿಗೆ ಹಂಚಿದರು.

ಕರಪತ್ರದಲ್ಲಿ ಹಳ್ಳಿಗಳಲ್ಲಿ ವಾಸವಾಗಿರುವ ರೈತರು ಹಾಗೂ ಕೃಷಿಕೂಲಿ ಕಾರ್ಮಿಕರು ಸಂಘಟಿತರಾಗಲು ಕರೆ ನೀಡಲಾಗಿತ್ತು, ಎರಡನೇದಾಗಿ ದುರಂಕಾರದ ಜಮೀನ್ದಾರರು, ಮತ್ತು ಅವರ ಗೂಂಡಾ ಪಡೆಯನ್ನು ಸಮರ್ಥವಾಗಿ ಎದುರಿಸಲು ಬಿಲ್ಲು, ಬಾಣಗಳಿಂದ ಸಿದ್ಧರಾಗಲು ವಿನಂತಿಸಿಕೊಳ್ಳಲಾಗಿತ್ತು, ಮೂರನೇದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಬಡವರು ಮತ್ತು ಕೂಲಿಕಾರರು, ಅಸಹಾಯಕ ಗೇಣಿದಾರರು ನೆಮ್ಮದಿಯಿಂದ ಬದುಕಬೇಕಾದರೆ, ಕೊಬ್ಬಿದ ಜಮೀನ್ದಾರರನ್ನು ಮಟ್ಟ ಹಾಕುವುದು ಅನಿವಾರ್ಯ ಎಂಬ ನಿರ್ಧಾರಕ್ಕೆ ಬರಲಾಗಿತ್ತು. ಇದೇ ವಿಚಾರಗಳನ್ನು ಪಕ್ಷದ ಸಮಾವೇಶದಲ್ಲಿ ಚಾರು ಮತ್ತು ಅವನ ಸಂಗಡಿಗರು ಬಲವಾಗಿ ಸಮರ್ಥಿಸಿಕೊಂಡು, ಪಕ್ಷ ಶೀಮಂತ ಜಮೀನ್ದಾರರ ಬಗ್ಗೆ ಕಠಿಣ ನಿಲುವು ತಳೆಯಬೇಕೆಂದು ಆಗ್ರಹಸಿದರು. ಕಮ್ಯೂನಿಷ್ಟ್ ಪಕ್ಷದ ಧುರೀಣರು ಚಾರು ಮತ್ತು ಅವನ ಸಂಗಡಿಗರು ಎತ್ತಿದ ಪ್ರಶ್ನೆಗಳಿಗೆ ಯಾವುದೇ ಸಮಜಾಯಿಸಿ ನೀಡಲು ಸಾಧ್ಯವಾಗದೇ ಮೌನಕ್ಕೆ ಶರಣಾದರು. ಇದು ಪರೋಕ್ಷವಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ತಾವು ನಂಬಿಕೊಂಡು ಬಂದಿದ್ದ ತಾತ್ವಿಕ ಸಿದ್ಧಾಂತಗಳಿಗಾಗಿ ಅಂಟಿಕೊಳ್ಳುವ ಅನಿವಾರ್ಯತೆ ಎದುರಾಯಿತು. ಒಟ್ಟಾರೆ, 1966 ರ ಈ ಸಮಾವೇಶ, ಕಮ್ಯೂನಿಷ್ಟ್ ಸಿದ್ಧಾಂತಗಳ ಸಂಘರ್ಷದಿಂದಾಗಿ ಹೋಳಾಗುವ ಸ್ಥಿತಿ ತಲುಪಿತು. ಕೆಲವರು ಮಾರ್ಕ್ಸ್ ಮತ್ತು ಲೆನಿನ್ ಸಿದ್ಧಾಂತಕ್ಕೆ ಅಂಟಿಕೊಂಡರೆ, ಮತ್ತೇ ಕೆಲವರು ತೀವ್ರಗಾಮಿ ಎನಿಸಿದ ಮಾವೋನ ವಿಚಾರಗಳಿಂದ ಪ್ರೇರಿತರಾಗಿ ಮಾವೋನನ್ನು ಆರಾಧಿಸತೊಡಗಿದರು.

(ಮುಂದುವರಿಯುವುದು)

ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ -15)


– ಡಾ.ಎನ್.ಜಗದೀಶ್ ಕೊಪ್ಪ


 

ಜಿಮ್ ಕಾರ್ಬೆಟ್ ಆದಿನ ಇಡೀ ರಾತ್ರಿ ನರಭಕ್ಷಕ ಹುಲಿಗಾಗಿ ಕಾದಿದ್ದು ಏನೂ ಪ್ರಯೋಜನವಾಗಲಿಲ್ಲ. ನರಭಕ್ಷಕ ತನ್ನ ಅಡಗುತಾಣವನ್ನು ಬದಲಾಯಿಸಿರಬಹುದು ಎಂಬ ಸಂಶಯ ಕಾರ್ಬೆಟ್‍ಗೆ ಕಾಡತೊಡಗಿತು. ಬೆಳಿಗ್ಗೆ ಸ್ನಾನ ಮಾಡಿದ ಅವನು ಏನಾದರೂ ಸುಳಿವು ಸಿಗಬಹುದೇ ಎಂಬ ನಿರೀಕ್ಷೆಯಿಂದ ನರಭಕ್ಷಕ ದಾಳಿ ಮಾಡಿದ್ದ ಮನೆಯೊಂದಕ್ಕೆ ಭೇಟಿ ನೀಡಿದ. ಕೇವಲ ಒಂದು ವಾರದ ಹಿಂದೆ ಮನೆಯ ಹಿತ್ತಲಲ್ಲಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯೊಬ್ಬಳನ್ನು ನರಭಕ್ಷಕ ಹುಲಿ ಕೊಂಡೊಯ್ದಿತ್ತು. ಮನೆಯ ಸುತ್ತಾ ಅದರ ಹೆಜ್ಜೆ ಗುರುತಿಗಾಗಿ ಕಾರ್ಬೆಟ್ ಹುಡುಕಾಡಿದರೂ ಯಾವುದೇ ಸುಳಿವು ಸಿಗಲಿಲ್ಲ.

ಜಿಮ್ ಕಾರ್ಬೆಟ್‍ಗೆ ಹುಲಿಗಳ ಹೆಜ್ಜೆ ಗುರುತಿನ ಮೇಲೆ ಅವುಗಳ ವಯಸ್ಸನ್ನು ಅಂದಾಜಿಸಬಲ್ಲ ಶಕ್ತಿಯಿತ್ತು. ಅಷ್ಟೇ ಅಲ್ಲ ಸಾಮಾನ್ಯವಾಗಿ ಹುಲಿಗಳು ನಡೆಯುವಾಗ ಅವುಗಳ ಹಿಂದಿನ ಕಾಲುಗಳ ಹೆಜ್ಜೆ ಗುರುತುಗಳು ನೆಲದ ಮೇಲೆ ಮೂಡತ್ತವೆ ಎಂಬುದನ್ನು ಅವನು ಅರಿತ್ತಿದ್ದ. ಹುಲಿಗಳು ಪ್ರಾಣ ಭಯ ಅಥವಾ ಇನ್ನಿತರೆ ಕಾರಣಗಳಿಂದ ವೇಗವಾಗಿ ಓಡುವಾಗ ಮಾತ್ರ ಅವುಗಳ ಮುಂದಿನ ಕಾಲುಗಳ ಬಲವಾದ ಹೆಜ್ಜೆಯ ಗುರುತು ಮೂಡುತ್ತವೆ ಎಂಬುದು ಅವನ ಶಿಕಾರಿ ಅನುಭವದಲ್ಲಿ ಮನದಟ್ಟಾಗಿತ್ತು.

ಪಾಲಿಹಳ್ಳಿಯಲ್ಲಿ ಎರಡು ಹಗಲು, ಎರಡು ರಾತ್ರಿ ಕಳೆದರೂ ನರಭಕ್ಷಕನ ಸುಳಿವು ಸಿಗದ ಕಾರಣ, ಅದು ತನ್ನ ವಾಸ್ತವ್ಯ ಬದಲಾಯಿಸಿದೆ ಎಂಬ ತೀರ್ಮಾನಕ್ಕೆ ಬಂದ ಕಾರ್ಬೆಟ್ ತನ್ನ ಸೇವಕರೊಡನೆ ನೈನಿತಾಲ್‍ಗೆ ಹಿಂತಿರುಗಲು ಸಿದ್ಧನಾದ. ಆ ದಿನಗಳಲ್ಲಿ ನರಭಕ್ಷಕ ಆ ಪ್ರಾಂತ್ಯದಲ್ಲೇ ಸುಳಿದಾಡುತ್ತಿದ್ದರಿಂದ ಹಗಲಿನ ವೇಳೆಯಲ್ಲಿ ದಾರಿಯಲ್ಲಿ ಅತ್ಯಂತ ಎಚ್ಚರಿಕೆಯಿಂದ ನಡೆಯಬೇಕಾಗಿತ್ತು. ಕಾರ್ಬೆಟ್ ಬೆಟ್ಟ ಗುಡ್ಡ ಹತ್ತಿ, ಇಳಿದು. ನೈನಿತಾಲ್‍ಗೆ ಸಾಗುತ್ತಿದ್ದ ವೇಳೆ ಪಾಲಿಹಳ್ಳಿಯಿಂದ 20 ಕಿಲೋ ಮೀಟರ್ ದೂರದ ಚಂಪಾವತ್ ಎಂಬ ಹಳ್ಳಿಯಲ್ಲಿ ನರಭಕ್ಷಕ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿತೆಗೆದುಕೊಂಡ ಸುದ್ದಿ ಕಾರ್ಬೆಟ್ ತಂಡಕ್ಕೆ ತಲುಪಿತು. ವಿಷಯ ತಿಳಿಯುತ್ತಿದ್ದಂತೆ ಕಾರ್ಬೆಟ್ ನೈನಿತಾಲ್ ಮಾರ್ಗವನ್ನು ತೊರೆದು ಚಂಪಾವತ್ ಹಳ್ಳಿಯತ್ತ ಹೊರಟ.

ಆ ಹಳ್ಳಿಯಲ್ಲಿ ಡಾಕ್ ಬಂಗ್ಲೆ ಎಂದು ಆ ಕಾಲದಲ್ಲಿ ಕರೆಯುತ್ತಿದ್ದ ಪ್ರವಾಸಿ ಮಂದಿರವಿದ್ದುದರಿಂದ ಕಾರ್ಬೆಟ್ ಮತ್ತು ಅವನ ಸಂಗಡಿಗರಿಗೆ ವಸತಿ ವ್ಯವಸ್ಥೆಗೆ ಯಾವುದೇ ತೊಂದರೆಯಾಗಲಿಲ್ಲ. ಚಂಪಾವತ್ ಹಳ್ಳಿಯ ಹೊರಭಾಗದಲ್ಲಿದ್ದ ಆ ಪ್ರವಾಸಿ ಮಂದಿರಕ್ಕೆ ಆಗಾಗ್ಗೆ ಸರ್ಕಾರದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡುತ್ತಿದ್ದರಿಂದ ಅಲ್ಲಿ ಒಬ್ಬ ಸೇವಕನನ್ನು ಸರ್ಕಾರ ನೇಮಕ ಮಾಡಿತ್ತು ಆತ ಅಲ್ಲಿಗೆ ಬರುವ ಅತಿಥಿಗಳ ಊಟೋಪಚಾರ, ವಸತಿ ವ್ಯವಸ್ಥೆ ಎಲ್ಲವನ್ನು ನೋಡಿಕೊಳ್ಳುತ್ತಿದ್ದ. ಬೆಳಗಿನ ಜಾವ ಪ್ರವಾಸಿ ಮಂದಿರಕ್ಕೆ ಬಂದ ಕಾರ್ಬೆಟ್ ಚಹಾ ಕುಡಿದು, ಸ್ನಾನ ಮುಗಿಸುವಷ್ಟರಲ್ಲಿ ಆ ಪ್ರದೇಶದ ತಹಸಿಲ್ದಾರ್  ಅಲ್ಲಿಗೆ ಬಂದು ಕಾರ್ಬೆಟ್‍ನನ್ನು ಪರಿಚಯಿಸಿಕೊಂಡ. ಇಬ್ಬರೂ ಉಪಹಾರ ಸೇವಿಸುತ್ತಾ ನರಭಕ್ಷಕ ಹುಲಿಯ ಬಗ್ಗೆ ಚರ್ಚೆ ಮಾಡುತ್ತಿರುವಾಗಲೇ ಹಳ್ಳಿಯಿಂದ ಯುವಕನೊಬ್ಬ ಓಡೋಡಿ ಬರುತ್ತಲೇ ಹುಲಿ ಯುವತಿಯೊಬ್ಬಳನ್ನು ಆಹುತಿ ತೆಗೆದುಕೊಂಡು ಕಾಡಿನತ್ತ ಕೊಂಡೊಯ್ದ ಸುದ್ದಿಯನ್ನು ಮುಟ್ಟಿಸಿದ. ತಮ್ಮ ಚರ್ಚೆಯನ್ನು ಅರ್ಧಕ್ಕೆ ನಿಲ್ಲಿಸಿದ ಇಬ್ಬರೂ ಬಂದೂಕಿನೊಂದಿಗೆ ಹಳ್ಳಿಯತ್ತ ತೆರಳಿದರು.

ಕಾರ್ಬೆಟ್ ಮತ್ತು ತಹಸಿಲ್ದಾರ್ ಚಂಪಾವತ್ ಗ್ರಾಮದ ಮಧ್ಯ ಇದ್ದ ದೇವಸ್ಥಾನದ ಬಳಿ ಬರುವುದರೊಳಗೆ ಹಳ್ಳಿ ಜನರೆಲ್ಲಾ ಆತಂಕ ಮತ್ತು ಭಯದೊಂದಿಗೆ ಗುಂಪುಗೂಡಿ ಚರ್ಚಿಸುತ್ತಾ ನಿಂತಿದ್ದರು. ಅವರಿಂದ ವಿವರಗಳನ್ನು ಪಡೆದ ಕಾರ್ಬೆಟ್, ಜನರೊಂದಿಗೆ ನರಭಕ್ಷಕ ಹುಲಿ ದಾಳಿ ನಡೆಸಿದ ಸ್ಥಳದತ್ತ ತೆರಳಿದ. ಇಲ್ಲಿಯೂ ಕೂಡ ನರಭಕ್ಷಕ ಹುಲಿ ಬಯಲಿನಲ್ಲಿ ಹಲವಾರು ಮಹಿಳೆಯರ ಜೊತೆ ಕಟ್ಟಿಗೆ ಸಂಗ್ರಹಿಸುತ್ತಿದ್ದ ಯುವತಿಯೊಬ್ಬಳ ಮೇಲೆ ಎರಗಿ ದಾಳಿ ನಡೆಸಿತ್ತು. ದಾಳಿ ನಡೆದ ಸ್ಥಳದಲ್ಲಿ ರಕ್ತದ ಕೋಡಿ ಹರಿದು ಹೆಪ್ಪುಗಟ್ಟಿದ್ದರಿಂದ, ಹುಲಿ ನೇರವಾಗಿ ಯುವತಿಯ ಕುತ್ತಿಗೆಗೆ ಬಾಯಿ ಹಾಕಿ ಸ್ಥಳದಲ್ಲೇ ಕೊಂದಿದೆ ಎಂದು ಕಾರ್ಬೆಟ್ ಊಹಿಸಿದ.

ಹುಲಿ ಯುವತಿಯನ್ನು ಹೊತ್ತೊಯ್ದ ಜಾಡು ಹಿಡಿದು ಸಾಗಿದಾಗ, ದಾರಿಯುದ್ದಕ್ಕೂ ಯುವತಿಯ ತಲೆ ನೆಲಕ್ಕೆ ತಾಗಿದ ಪರಿಣಾಮ ಆಕೆಯ ತಲೆ ಬುರುಡೆ ಒಡೆದು ಹೋಗಿ, ಅಲ್ಲಲ್ಲಿ ನೆಲದ ಮೇಲೆ, ಗಿಡಗಳ ಮೇಲೆ ರಕ್ತದ ಕಲೆಗಳು ಕಾಣಿಸಿದವು. ನರಭಕ್ಷ ಹುಲಿ ಯುವತಿಯ ಶವವನ್ನು ದಾಳಿ ನಡೆಸಿದ ಸ್ಥಳದಿಂದ ಸುಮಾರು ಒಂದೂವರೆ ಕಿಲೊಮೀಟರ್ ದೂರದ ಕಾಡಿನೊಳಗೆ 300 ಅಡಿಯಷ್ಟು ಆಳವಿದ್ದ ತಗ್ಗಿನ ಪ್ರದೇಶದ ಪೊದೆಗೆ ಕೊಂಡೊಯ್ದಿತ್ತು.

ಜಿಮ್ ಕಾರ್ಬೆಟ್ ತನ್ನೊಂದಿಗೆ ಬಂದಿದ್ದ ಜನರನ್ನು ಅಲ್ಲೇ ತಡೆದು, ತನ್ನ ಮೂವರು ಸೇವಕರ ಜೊತೆ, 300 ಅಡಿ ಆಳದ ಕಣಿವೆಗೆ ಇಳಿಯತೊಡಗಿದ. ದಾಳಿ ಅನಿರೀಕ್ಷಿತವಾಗಿ ನಡೆದಿದ್ದರಿಂದ ಶಿಕಾರಿಗೆ ಅವಶ್ಯವಿದ್ದ ಉಡುಪುಗಳನ್ನಾಗಲಿ, ಬೂಟುಗಳನ್ನಾಗಲಿ ಕಾರ್ಬೆಟ್ ಧರಿಸಿರಲಿಲ್ಲ. ಮಂಡಿಯುದ್ದಕ್ಕೂ ಧರಿಸುತ್ತಿದ್ದ ಕಾಲುಚೀಲ ಮತ್ತು ಕ್ಯಾನವಾಸ್ ಬೂಟುಗಳನ್ನು ಮಾತ್ರ ತೊಟ್ಟಿದ್ದ. ಅವುಗಳಲ್ಲೇ ಅತ್ಯಂತ ಜಾಗರೂಕತೆಯಿಂದ ಹಳ್ಳಕ್ಕೆ ಇಳಿಯತೊಡಗಿದ್ದ.

ಹಳ್ಳದಲ್ಲಿ ಒಂದು ಸರೋವರವಿದ್ದುದರಿಂದ ನರಭಕ್ಷಕ ಯುವತಿಯ ಕಳೇಬರವನ್ನು ಸರೋವರದ ಮಧ್ಯೆ ಮಂಡಿಯುದ್ದದ ನೀರಿನಲ್ಲಿ ಎಳೆದೊಯ್ದು ಆಚೆಗಿನ ಪೊದೆಯಲ್ಲಿ ಬೀಡು ಬಿಟ್ಟಿತ್ತು ಸರೋವರದ ನೀರು ರಕ್ತ ಮತ್ತು ಕೆಸರಿನಿಂದ ರಾಡಿಯಾಗಿತ್ತು, ಕಾರ್ಬೆಟ್ ತನ್ನ ಇಬ್ಬರು ಸೇವಕರನ್ನು ಹತ್ತಿರದಲ್ಲಿ ಇದ್ದ ಕಲ್ಲು ಬಂಡೆಯ ಮೇಲೆ ಕೂರಿಸಿ, ಸರೋವರದ ಬಳಿ ತೆರಳುತ್ತಿದ್ದಂತೆ, ಮನುಷ್ಯ ವಾಸನೆಯನ್ನು ಗ್ರಹಿಸಿದ ನರಭಕ್ಷಕ ಪೊದೆಯಿಂದಲೇ ಘರ್ಜಿಸತೊಡಗಿತು.

ಜಿಮ್ ಕಾರ್ಬೆಟ್ ಕ್ಯಾನ್ವಾಸ್ ಬೂಟುಗಳನ್ನು ಧರಿಸಿದ್ದರಿಂದ ನೀರಿಗೆ ಇಳಿಯಲು ಸಾದ್ಯವಾಗಲಿಲ್ಲ. ಒದ್ದೆಯಾದ ನೆಲದ ಮೇಲೆ ಮೂಡಿದ್ದ ನರಭಕ್ಷಕನ ಹೆಜ್ಜೆಯ ಗುರುತುಗಳನ್ನು ಪರಿಶೀಲಿಸಿ ಇದೊಂದು ವಯಸ್ಸಾದ ಹುಲಿ ಎಂಬ ತೀರ್ಮಾನಕ್ಕೆ ಬಂದ. ಸರೋವರದ ದಕ್ಷಿಣದ ತುದಿಯಲ್ಲಿ ನಿಂತು, ಅತ್ತ, ಇತ್ತ ತಿರುಗಾಡುತ್ತಾ ಆ ಬದಿಯಲ್ಲಿದ್ದ ನರಭಕ್ಷಕನ್ನು ಪ್ರಚೋದಿಸಲು ಪ್ರಯತ್ನಿಸಿದ. ಪೊದೆಯಿಂದ ಹೊರಬಂದು ಮುಖಮುಖಿಯಾದರೆ, ಗುಂಡಿಟ್ಟು ಕೊಲ್ಲಲು ಕಾರ್ಬೆಟ್ ಹವಣಿಸಿದ್ದ. ಆದರೆ, ನಿರಂತರ ನಾಲ್ಕು ಗಂಟೆಗಳು ಕಾರ್ಬೆಟ್ ಪ್ರಯತ್ನ ಪಟ್ಟರೂ, ಪೊದೆಯಿಂದ ನರಭಕ್ಷಕ ಹುಲಿಯ ಘರ್ಜನೆ ಸದ್ದು ಮಾತ್ರ ಹೊರಬರುತ್ತಿತ್ತು.

ಕೊನೆಗೆ ಕಾರ್ಬೆಟ್‍ನ ಧೈರ್ಯಕ್ಕೆ ಹೆದರಿದಂತೆ ಕಂಡ ನರಭಕ್ಷಕ ಯುವತಿಯ ಕಳೇಬರವನ್ನು ಅಲ್ಲೇ ಬಿಟ್ಟು ಕಣಿವೆಯ ಮೇಲ್ಭಾಗಕ್ಕೆ ಚಲಿಸತೊಡಗಿತು. ಅದು ಯಾವ ದಿಕ್ಕಿನತ್ತ ಚಲಿಸುತ್ತಿದೆ ಎಂಬುದು ಗಿಡಗೆಂಟೆಗಳ ಅಲುಗಾಡುವಿಕೆಯಿಂದ ತಿಳಿದು ಬರುತಿತ್ತು. ಅಂತಿಮವಾಗಿ ಕಣಿವೆಯಿಂದ ಮೇಲಕ್ಕೆ ಬಂದ ನರಭಕ್ಷಕ ಸಣ್ಣ ಸಣ್ಣ ಬಂಡೆಗಳು ಮತ್ತು ಕುರಚಲು ಗಿಡ ಮತ್ತು ಹುಲ್ಲುಗಾವಲು ಇದ್ದ ಬಯಲಿನಲ್ಲಿ ಅಡಗಿಕೊಂಡಿತು. ಅದನ್ನು ಅಲ್ಲಿಯೆ ಬಿಟ್ಟು ಸಂಗಡಿಗರೊಂದಿಗೆ ವಾಪಸ್ ಹಳ್ಳಿಗೆ ಬಂದ ಕಾರ್ಬೆಟ್ ಹೊಸ ಯೋಜನೆಯೊಂದನ್ನು ರೂಪಿಸಿದ.

ಸಾಮಾನ್ಯವಾಗಿ ಹುಲಿಗಳು ತಾವು ಬೇಟೆಯಾಡಿದ ಪ್ರಾಣಿಗಳನ್ನು ಒಂದು ಸ್ಥಳದಲ್ಲಿರಿಸಿಕೊಂಡು ಎರಡು ಅಥವಾ ಮೂರು ದಿನ ಆಹಾರವಾಗಿ ಬಳಸುವುದನ್ನು ಅರಿತಿದ್ದ ಜಿಮ್ ಕಾರ್ಬೆಟ್ ನರಭಕ್ಷಕ ಹುಲಿ ಯುವತಿಯ ಕಳೇಬರವನ್ನು ತಿಂದು ಮುಗಿಸದೇ ಬೇರೆ ದಾಳಿಗೆ ಇಳಿಯುವುದಿಲ್ಲ ಎಂದು ಅಂದಾಜಿಸಿದ. ಮಾರನೇ ದಿನ ಹಳ್ಳಿಯ ಜನರ ಜೊತೆಗೂಡಿ ಅದನ್ನು ಬಯಲು ಪ್ರದೇಶದಿಂದ ಮತ್ತೇ ಕಣಿವೆಗೆ ಇಳಿಯುವಂತೆ ಮಾಡುವುದು, ಕಣಿವೆಯ ದಾರಿಯಲ್ಲಿ ಅಡಗಿ ಕುಳಿತು ನರಭಕ್ಷಕ ಹುಲಿಯನ್ನು ಕೊಲ್ಲುವುದು ಎಂಬ ತನ್ನ ಯೋಜನೆಯನ್ನು ತಹಸಿಲ್ದಾರ್ ಮುಂದಿಟ್ಟ, ಕೂಡಲೆ ಒಪ್ಪಿಗೆ ಸೂಚಿಸಿದ ತಹಸಿಲ್ದಾರ್ ಮರುದಿನ, ನಡು ಮಧ್ಯಾಹ್ನದ ಹೊತ್ತಿಗೆ 298 ಗ್ರಾಮಸ್ತರನ್ನು ಹುಲಿ ಬೆದರಿಸುವುದಕ್ಕಾಗಿ ಸಜ್ಜುಗೊಳಿಸಿದ.

ಮಚ್ಚು, ಕೊಡಲಿ, ದೊಣ್ಣೆ ಹಾಗೂ ತಮ್ಮ ತಮ್ಮ ಮನೆಗಳಲ್ಲಿ ಇದ್ದ ನಾಡ ಬಂದೂಕಗಳೊಂದಿಗೆ ಹಾಜರಾದ ಹಳ್ಳಿಯ ಜನರನ್ನು ಕರೆದುಕೊಂಡು ಬಯಲು ಪ್ರದೇಶಕ್ಕೆ ಬಂದ ಕಾರ್ಬೆಟ್, ನರಭಕ್ಷಕ ಅಡಗಿದ್ದ ಬಯಲು ಪ್ರದೇಶದಲ್ಲಿ ಕಣಿವೆಗೆ ತೆರಳಲು ಇದ್ದ ಮಾರ್ಗವನ್ನು ಹೊರತುಪಡಿಸಿ, ಉಳಿದ ಜಾಗದಲ್ಲಿ ಎಲ್ಲರನ್ನು ಇಂಗ್ಲಿಷ್ ಯು ಅಕ್ಷರದ ಆಕಾರದಲ್ಲಿ ನಿಲ್ಲಿಸಿ, ನಾನು ಸೂಚನೆ ನೀಡಿದಾಗ ಜೋರಾಗಿ ಗದ್ದಲವೆಬ್ಬಿಸಿ, ಗಾಳಿಯಲ್ಲಿ ಗುಂಡು ಹಾರಿಸುತ್ತಾ ಕಣಿವೆಯ ದಾರಿಯತ್ತಾ ಬರಬೇಕೆಂದು ಸೂಚಿಸಿದ. ಬಯಲು ಪ್ರದೇಶದ ಕಾಡಿನಂಚಿನಿಂದ ಕಣಿವೆಗೆ ಇಳಿಯುವ ದಾರಿಯಲಿ ತಗ್ಗಿನ ಪ್ರದೇಶದಲ್ಲಿ ಕಾರ್ಬೆಟ್ ಅಡಗಿ ಕುಳಿತ. ಅಲ್ಲದೇ . ತಾನು ಕುಳಿತ ಸ್ಥಳದಿಂದ 100 ಅಡಿ ಎತ್ತರದ ಬಲಭಾಗದಲ್ಲಿ ತಹಸಿಲ್ದಾರ್  ಕೈಗೆ ಪಿಸ್ತೂಲ್ ಕೊಟ್ಟು ಬಂಡೆಯೊಂದರ ಮೇಲೆ ಹುಲಿ ಬರುವ ಬಗ್ಗೆ ಸುಳಿವು ಕೊಡುವ ಉದ್ದೇಶದಿಂದ ಅವನನ್ನು ಕೂರಿಸಿದ.

ಕಾರ್ಬೆಟ್ ಸೂಚನೆ ನೀಡಿದ ಕೂಡಲೆ ಗ್ರಾಮಸ್ಥರು ಕೇಕೆ ಹಾಕುತ್ತಾ, ಚಪ್ಪಾಳೆ ತಟ್ಟುತ್ತಾ, ಗಾಳಿಯಲ್ಲಿ ಗುಂಡು ಹಾರಿಸುತ್ತ ಜೋರಾಗಿ ಗದ್ದಲವೆಬ್ಬೆಸಿ ಬರತೊಡಗಿದರು. ಕಾರ್ಬೆಟ್‍ನ ನಿರೀಕ್ಷೆ ಸುಳ್ಳಾಗಲಿಲ್ಲ. ಬಯಲು ಪ್ರದೇಶದ ಹುಲ್ಲಿನೊಳಗೆ ಅಡಗಿ ಕುಳಿತಿದ್ದ ನರಭಕ್ಷಕ ಜನರ ಸದ್ದಿನ ಭಯದಿಂದ ಕಣಿವೆಗೆ ಇಳಿಯಲು ವೇಗವಾಗಿ ಧಾವಿಸುತ್ತಿತ್ತು. ಎರಡರಿಂದ ಮೂರು ಅಡಿ ಎತ್ತರಕ್ಕೆ ಹುಲ್ಲು ಬೆಳದಿದ್ದರಿಂದ ಕಾರ್ಬೆಟ್ ಕಣ್ಣಿಗೆ ಹುಲಿ ಕಾಣುತ್ತಿರಲಿಲ್ಲ. ಅದರೆ, ಹುಲ್ಲಿನ ಬಾಗುವಿಕೆಯಿಂದ ನರಭಕ್ಷಕ ಯಾವ ದಿಕ್ಕಿನಲಿ, ಬರುತ್ತಿದೆ ಎಂಬುದು ಕಾರ್ಬೆಟ್‍ಗೆ ಗೋಚರವಾಗುತ್ತಿತ್ತು. ತಾನು ಕುಳಿತ ಸ್ಥಳಕ್ಕೆ 50 ಅಡಿ ಹತ್ತಿರಕ್ಕೆ ಬರುತಿದ್ದಂತೆ ಕಾರ್ಬೆಟ್ ಹುಲ್ಲು ಅಲುಗಾಡುವಿಕೆಯನ್ನು ಗುರಿಯಾಗಿರಿಸಿಕೊಂಡು ಎರಡು ಗುಂಡು ಹಾರಿಸಿದ. ಆ ಕ್ಷಣಕ್ಕೆ ಅವುಗಳು ನರಭಕ್ಷಕನಿಗೆ ತಾಗಿದ ಬಗ್ಗೆ ಯಾವ ಸೂಚನೆ ಕಾಣಲಿಲ್ಲ. ಸ್ವಲ್ಪ ಹೊತ್ತು ಎಲ್ಲೆಡೆ ಮೌನ ಆವರಿಸಿತು. ನರಭಕ್ಷಕ ಗದ್ದಲವೆಬ್ಬಿಸುತ್ತಿರುವ ಗ್ರಾಮಸ್ತರ ಮೇಲೆ ಎರಗಲು ವಾಪಸ್ ಬಯಲಿನತ್ತ ತೆರಳುತ್ತಿರಬೇಕು ಎಂದು ಕಾರ್ಬೆಟ್ ಊಹಿಸಿದ್ದ.

ಆದರೆ, ಅದು ಅವನ ಸನಿಹಕ್ಕೆ ಕೇವಲ 30ನ ಅಡಿ ಹತ್ತಿರಕ್ಕೆ ಬಂದು ಒಮ್ಮೆ ಹುಲ್ಲಿನಿಂದ ತಲೆಯನ್ನು ಹೊರಚಾಚಿ ಕಾರ್ಬೆಟ್‍ನನ್ನು ನೋಡಿ ಗರ್ಜಿಸಿತು. ಕಾರ್ಬೆಟ್‍ಗೆ ಅಷ್ಟು ಸಾಕಾಗಿತ್ತು ಅವನು ಸಿಡಿಸಿದ ಮೂರನೇ ಗುಂಡು ನೇರವಾಗಿ ನರಭಕ್ಷನ ಎದೆಯ ಬಲಭಾಗಕ್ಕೆ ತಗುಲಿತು. ಆದರೂ ಕಾರ್ಬೆಟ್‍ಗೆ  ನಂಬಿಕೆ ಬಾರದೆ, ತಹಸಿಲ್ದಾರ್ ಬಳಿ ಓಡಿ ಹೋಗಿ ಅವನ ಬಳಿ ಇದ್ದ ಪಿಸ್ತೂಲ್ ಅನ್ನು ಕಸಿದು ತಂದು ಅದರಿಂದ ನರಭಕ್ಷಕ ಕಾಣಿಸಿಕೊಂಡ ಜಾಗದತ್ತ ಗುಂಡಿನ ಮಳೆಗರೆದ. ಸುಮಾರು ಒಂದು ಗಂಟೆಯವರೆಗೂ ನರಭಕ್ಷಕ ಹುಲಿಯ ನರಳುವಿಕೆಯಾಗಲಿ, ಘರ್ಜನೆಯಾಗಲಿ, ಕೇಳಬರದಿದ್ದರಿಂದ ಅತ್ಯಂತ ಜಾಗರೂಕತೆಯಿಂದ ತನ್ನ ಸಹಚರರ ಜೊತೆ ನಿಧಾನವಾಗಿ ಗುಂಡು ಹಾರಿಸಿದ ಸ್ಥಳಕ್ಕೆ ಬಂದ ಕಾರ್ಬೆಟ್ ನೋಡಿದ ದೃಶ್ಯ, ಸ್ವತಃ ಅವನಿಗೇ ಅಚ್ಚರಿ ಮೂಡಿಸಿತು. ಏಕೆಂದರೆ, ನೇಪಾಳದಲ್ಲಿ 200  ಹಾಗೂ ಭಾರತದಲ್ಲಿ 206 ಮಂದಿಯನ್ನು ಬಲಿತೆಗೆದುಕೊಂಡಿದ್ದ ವಯಸ್ಸಾದ ನರಭಕ್ಷಕ ಹೆಣ್ಣು ಹುಲಿ ಅಲ್ಲಿ ತಣ್ಣಗೆ ನೆಲಕ್ಕೊರಗಿ ಮಲಗಿತ್ತು.

    ( ಮುಂದುವರಿಯುವುದು) 

ಎಂದೂ ಮುಗಿಯದ ಯುದ್ಧ (ನಕ್ಸಲ್‍ ಕಥನ -1)


– ಡಾ.ಎನ್.ಜಗದೀಶ್ ಕೊಪ್ಪ


 

“ನಕ್ಸಲಿಯರು ಹಿಂಸೆಯ ಮೂಲಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಆಂತರೀಕ ಭದ್ರತೆಗೆ ಅತಿದೊಡ್ಡ ಸವಾಲಾಗಿದ್ದಾರೆ.” ಇದು ಪ್ರಧಾನ ಮಂತ್ರಿಯ ಮನದಾಳದ ಮಾತು. ಸ್ವತಃ ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾಗಿರುವ ಡಾ. ಮನಮೋಹನಸಿಂಗ್, ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಬಲ್ಲವರು. ಹಾಗಾಗಿ  ಅವರ ಈ ಮಾತು ನೂರರಷ್ಟು ಸತ್ಯಕೂಡ ಹೌದು.

ಸ್ವಾತಂತ್ರ್ಯ ನಂತರ ಭಾರತದ ಒಡಲೊಳಗೆ ಒಂದು ಗಾಯದ ಹುಣ್ಣಿನಂತೆ ಹುಟ್ಟಿಕೊಂಡು ಕ್ಯಾನ್ಸರ್ ರೋಗದಂತೆ ಎಲ್ಲೆಡೆ ಹಬ್ಬುತ್ತಿರುವ ನಕ್ಸಲ್ ಹಿಂಸಾಚಾರದ ಚಳವಳಿಯ ಬೆಳವಣಿಗೆಗೆ ಪರೋಕ್ಷವಾಗಿ ಕಾರಣವಾದವರೆಂದರೆ, ಈ ದೇಶದ ಜನಪ್ರತಿನಿಧಿಗಳು, ಪೊಲೀಸರು, ಅಧಿಕಾರಿಗಳು, ಮತ್ತು ಜಮೀನುದಾರರು. ಇವರೆಲ್ಲರ ದಿವ್ಯ ನಿರ್ಲಕ್ಷ್ಯ, ಅಮಾನವೀಯತೆಯ ನಡುವಳಿಕೆ, ಹಾಗೂ ಬಡವರು ಮತ್ತು ಕೂಲಿಕಾರ್ಮಿಕರುಗಳ ಬಗ್ಗೆ ಇವರುಗಳು ಹೊಂದಿದ್ದ ತಿರಸ್ಕಾರ ಭಾವನೆಗೆ ಪ್ರತಿಯಾಗಿ ತಲೆ ಎತ್ತಿರುವ ಇವತ್ತಿನ ಹಿಂಸೆಗೆ ನಾವೆಲ್ಲಾ ಮೂಕ ಸಾಕ್ಷಿಯಾಗಬೇಕಿದೆ.

1967 ರ ಮಾರ್ಚ್ ತಿಂಗಳ ಮೂರರಂದು ಪಶ್ಚಿಮ ಬಂಗಾಳದ ಉತ್ತರಭಾಗದ ನಕ್ಸಲ್‍ಬಾರಿ ಎಂಬ ಪುಟ್ಟ ಹಳ್ಳಿಯಲ್ಲಿ ಸ್ಪೋಟಗೊಂಡ ಪ್ರತಿಭಟನೆಯ ಅಗ್ನಿಜ್ವಾಲೆ ಈಗ ನಕ್ಸಲ್ ಚಳವಳಿಯ ಹೆಸರಿನಲ್ಲಿ ಆರದೆ ಇಂದಿಗೂ ಉರಿಯುತ್ತ ದೇಶದೆಲ್ಲೆಡೆ ಕಾಡ್ಗಿಚ್ಚಿನಂತೆ ವ್ಯಾಪಿಸುತ್ತಿದೆ. ಈ ಅಗ್ನಿ ದೀವಿಗೆಯನ್ನು ಹೊತ್ತಿಸಿ ಎತ್ತಿ ಹಿಡಿದವರು ಚಾರು ಮುಜಂದಾರ್ ಮತ್ತು ಕನುಸನ್ಯಾಲ್ ಎಂಬ ಎಡಪಂಥೀಯ ವಿಚಾರೆಧಾರೆಗಳಿಂದ ಪ್ರಭಾವಿತರಾದ ಇಬ್ಬರು ನಾಯಕರು. ಉತ್ತರಕ್ಕೆ ನೇಪಾಳ. ಪೂರ್ವಕ್ಕೆ ಇಂದಿನ ಬಂಗ್ಲಾ ದೇಶಗಳ ಗುಡ್ಡಗಾಡು ಪ್ರದೇಶಗಳಿಂದ ಸುತ್ತುವರಿದಿರುವ ನಕ್ಸಲ್‍ಬಾರಿ ಹಳ್ಳಿಯ ಕೃಷಿ ಕೂಲಿಕಾರ್ಮಿಕರಿಂದ ಪ್ರಾರಂಭವಾದ ಪ್ರತಿಭಟನೆ ಒರ್ವ ಪೋಲಿಸ್ ಅಧಿಕಾರಿ ಹಾಗೂ ಹತ್ತು ಮಂದಿ ಚಳವಳಿಗಾರರ ಸಾವಿನೊಂದಿಗೆ (ಇವರಲ್ಲಿ ಆರು ಮಂದಿ ಮಹಿಳೆಯರು) ಹಿಂಸೆಯ ಅಧ್ಯಾಯಕ್ಕೆ ನಾಂದಿ ಹಾಡಿತು. ನಕ್ಸಲ್ ಚಳವಳಿ ಭಾರತದಲ್ಲಿ ದಿಡೀರನೆ ಹುಟ್ಟಿಕೊಂಡ ಹಿಂಸಾತ್ಮಕ ಚಳವಳಿಯಲ್ಲ. ಅದಕ್ಕೊಂದು ಸುದೀರ್ಘ ಇತಿಹಾಸವಿದೆ.

ಈ ಹಿಂದೆ ನಡೆದ ಭಾರತದ ರೈತರ ಮತ್ತು ಕೃಷಿ ಕೂಲಿಕಾರ್ಮಿಕರ ಪ್ರತಿಭಟನೆಯ ಇತಿಹಾಸ ಇದರ ಬೆನ್ನುಲುಬಾಗಿದೆ. ನಕ್ಸಲ್ ಹೋರಾಟ ಎಂದರೆ, ಹಿಂಸೆಯ ಪ್ರತಿರೂಪ ಎಂಬ ಇಂದಿನ ಉಢಾಪೆ ಮಾತು ಮತ್ತು ಹೇಳಿಕೆಗಳ ನಡುವೆ ಅದರ ಇತಿಹಾಸವನ್ನು ಕೂಲಂಕುಷವಾಗಿ ಮುಕ್ತ ಮನಸ್ಸಿನಿಂದ ಪರಾಮರ್ಶಿಸುವ ಅಗತ್ಯವಿದೆ. ಭಾರತದ ಇದೇ ಪಶ್ಚಿಮ ಬಂಗಾಳದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ನೀಲಿ ಬೆಳೆ ಬೆಳೆಯಲು ನಿರಾಕರಿಸಿ ಪ್ರತಿಭಟಿಸಿದ ರೈತರು, ಕೇರಳದಲ್ಲಿ ಮಾಪಿಳ್ಳೆಗಳು ನಡೆಸಿದ ಹೋರಾಟ, ಆಂಧ್ರದ ತೆಲಂಗಾಣದಲ್ಲಿ ಸರ್ಕಾರ ಮತ್ತು ಜಮೀನುದಾರರ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರ ಪ್ರತಿಭಟನೆ ಇವೆಲ್ಲವೂ ನಕ್ಸಲ್ ಚಳವಳಿಯ ಪೂರ್ವ ಇತಿಹಾಸದ ಭಾಗಗಳೇ ಆಗಿವೆ. ಹಾಗಾಗಿ ನಕ್ಸಲ್ ಚಳವಳಿಯ ಅಧ್ಯಯನಕ್ಕೆ 1919 ರಲ್ಲಿ ಕಾಲಿಟ್ಟ ಕಮ್ಯೂನಿಷ್ಟ್ ವಿಚಾರಧಾರೆಯಿಂದ ಹಿಡಿದು ಇಂದಿನ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳ ಅರಾಜಕತೆಯ ಕೂಲಂಕುಷ ಅಧ್ಯಯನದ ಅವಶ್ಶಕತೆ ಇದೆ.

ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಇಂಗ್ಲಿಷರ ವಸಾಹಿತುಶಾಹಿ ಆಳ್ವಿಕೆಯಲ್ಲಿ ಮೊದಲ ಬಾರಿಗೆ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸುಧಾರಣೆ ಮತ್ತು ಕ್ರಾಂತಿಯಾದದ್ದು ಪಶ್ಚಿಮ ಬಂಗಾಳದಲ್ಲಿ. ಹಾಗಾಗಿ ದುಡಿಯುವ ವರ್ಗದ ಆರಾಧ್ಯ ದೈವ ಕಾರ್ಲ್ ಮಾರ್ಕ್ಸ್‌ನ ವಿಚಾರಧಾರೆಯ ಬೀಜಗಳು ಇದೇ ನೆಲದಲ್ಲಿ  ಮೊಳಕೆ ಹೊಡೆದವು. ನಕ್ಸಲ್ ಹೋರಾಟದ ಇತಿಹಾಸ ಅರಿಯಲು, ಪಶ್ಚಿಮ ಬಂಗಾಳದಲ್ಲಿ ಸ್ವಾತಂತ್ರ್ಯ ಪೂರ್ವದ ಸುಧಾರಣಾವಾದಿಗಳ ಬದುಕು, ಮತ್ತು ಅವರ ಹೋರಾಟ, ಹಾಗೂ 1919 ರಲ್ಲಿ ತಳವೂರಿ ನಂತರ ಹಲವು ಸಂಘಟನೆಗಳಾಗಿ ವಿಭಜನೆಗೊಂಡ ಕಮ್ಯೂನಿಷ್ಟ್ ಪಕ್ಷದ ಇತಿಹಾಸವನ್ನು ನೋಡಬೇಕಾಗಿದೆ. ಅದೇ ರೀತಿ. ಆಂಧ್ರದಲ್ಲಿ ನಿಜಾಮನ ಆಳ್ವಿಕೆಯ ದೌರ್ಜನ್ಯ, ಅರಾಜಕತೆ, ಸ್ವಾತಂತ್ರ್ಯ ಪೂರ್ವದಲ್ಲಿ ಆಂಧ್ರದಲ್ಲಿ ಸೃಷ್ಟಿಯಾದ “ದೇಸಕೋಸಂ (ದೇಶಕೊಸ್ಕರ)”, “ಈ ದಾರಿ ಎಕ್ಕಡಿಕಿ (ಈ ದಾರಿ ಎಲ್ಲಿಗೆ)”, “ಜ್ವಾಲಾತೋರಣಂ (ಬೆಂಕಿಯ ತೋರಣ)”, “ಕೊಳ್ಳಮುಗಟ್ಟಿತೆ ಏಮಿ (ತುಂಡು ಉಡುಗೆ ಉಟ್ಟರೇನು?)” ಮುಂತಾದ ವೈಚಾರಿಕ ಕಾದಂಬರಿಗಳು, ಮತ್ತು ಈ ಕೃತಿಗಳು ಅಂದಿನ ತಲೆಮಾರಿನ ಯುವಕರ ಮೇಲೆ ಬೀರಿದ ಪ್ರಭಾವ, ಹಾಗೂ ಆಂಧ್ರ ಪ್ರದೇಶದ ಹೊಲೆ ಮಾದಿಗರ ದಾರುಣ ಬದುಕನ್ನು ತೆರೆದಿಡುವ ವೈ.ಬಿ. ಸತ್ಯನಾರಾಣರ “ನನ್ನ ಅಪ್ಪ ಬಲಿಯ” ಎಂಬ ಆತ್ಮ ಕಥನ, ಕೇರಳದ ತಿರುವಾಂಕೂರು ರಾಜನ ತಲೆತಿರುಕುತನದ ಇತಿಹಾಸ ಇವೆಲ್ಲವನ್ನು ನಾವು ಅರಿಯಬೇಕಾಗಿದೆ.

ಭಾರತದ ನಿಜವಾದ ಬಡತನದ ಮುಖವನ್ನು ಕಾಣಬೇಕಾದರೆ, ಫ್ರೆಂಚ್ ಲೇಖಕ ಡಾಮಿನಿಕ್ಯೂ ಲಾಪಿಯರ್ರೆ‍ರವರ “ಸಿಟಿ ಆಫ್ ‍ಜಾಯ್” ಕಾದಂಬರಿ, ಇಲ್ಲಿನ ಆದಿವಾಸಿಗಳ ನೋವಿನ ಜಗತ್ತನ್ನು ಅರಿಯಬೇಕಾದರೆ ಎಸ್.ಕೆ. ಚೌಧುರಿಯವರ “ಇಂಡಿಯನ್ ಟ್ರೈಬ್ಸ್ ಅಂಡ್ ಮೆಯಿನ್‍ಸ್ಟ್ರೀಮ್ ಹಾಗೂ ಟ್ರೈಬಲ್ ಐಡೆಂಟಿಟಿ” ಕೃತಿಗಳನ್ನು ಓದಬೇಕು. ಇವೆಲ್ಲಕ್ಕಿಂತ ಹೆಚ್ಚಾಗಿ ಈ ಭೂಮಿಯ ಬಹುಭಾಗವನ್ನು ಹಲವು ಶತಮಾನಗಳು ಆಕ್ರಮಿಸಿಕೊಂಡು ಆಳಿದ ಬ್ರಿಟಿಷರು ಈ ನೆಲದ ಅನಕ್ಷರಸ್ತ, ಅಮಾಯಕ ಜನರ ಮೇಲೆ ನಡೆಸಿದ ಮಾನಸಿಕ ಹಾಗೂ ಬೌದ್ಧಿಕ ದೌರ್ಜನ್ಯವನ್ನು ತಿಳಿಯಬೇಕಾದರೆ, ಫ್ರಾನ್ಸ್ ಮೂಲದ ವೈದ್ಯ ಪ್ರಾಂಟ್ಜ್ ಪಾನನ್ ಬರೆದ “ದ ವ್ರೆಚ್ಚಡ್ ಆಪ್ ದ ಅರ್ಥ್ (ಭೂಮಿಯ ವಿಕೃತಿ)” ಹಾಗೂ ಎಲ್ಲೆಕೆಬೊಯಿಚ್ಮಿರ್ ಬರೆದ “ಕಲೋನಿಯಲ್ ಅಂಡ್ ಪೋಸ್ಟ್ ಕಲೋನಿಯಲ್ ಲಿಟ್‌ರೇಚರ್” ಕೃತಿಗಳನ್ನು ನಾವು ಅವಲೋಕಿಸಬೇಕಾಗಿದೆ. ಏಕೆಂದರೆ, ಇವತ್ತಿನ ಭಾರತದ ಗರ್ಭಗುಡಿ ಸಂಸ್ಕೃತಿಯಿಂದ ಬಂದ ತಲೆ ಮಾಸಿದ ಕೆಲವರು ನಕ್ಸಲ್ ಚಳವಳಿಯ ಬಗ್ಗೆ ನೀಡುವ ಬೀಸು ಹೇಳಿಕೆಯನ್ನು ಗಮನಿಸಿದಾಗ ಈ ರಕ್ತಸಿಕ್ತ ಹೋರಾಟಕ್ಕೆ ಹಲವು ಮುಖಗಳಿವೆ ಎಂಬುದನ್ನು ಮನದಟ್ಟು ಮಾಡಿಕೊಡಬೇಕಾಗಿದೆ.

ನಕ್ಸಲ್ ಚಳವಳಿಯನ್ನು ಹುಟ್ಟು ಹಾಕಿದ ಚಾರು ಮುಜಂದಾರ್, ಕನು ಸನ್ಯಾಲ್, ಮತ್ತು ಕೊಂಡಪಲ್ಲಿ ಸೀತರಾಮಯ್ಯ ಇವರುಗಳ ಬದುಕಿನ ಹೋರಾಟ ಮತ್ತು ದಾರುಣ ಅಂತ್ಯ, ನಕ್ಸಲ್ ಹೋರಾಟಕ್ಕೆ ಮನಸೋತು ಆತ್ಮಹತ್ಯೆಯ ದಾರಿ ಹಿಡಿದಿರುವ ಇಂದಿನ ಯುವಕರಿಗೆ ಎಚ್ಚರಿಕೆಯ ಗಂಟೆಯಾಗಬಲ್ಲದು. ನಕ್ಸಲ್ ಹೋರಾಟದ ಪಿತಾಮಹಾರೆಂದು ಗುರುತಿಸಿಕೊಂಡಿವ ಚಾರುಮುಜಂದಾರ್ ಮತ್ತು ಕನುಸನ್ಯಾಲ್ ಇವರ ಬದುಕು ಒಂದು ರೀತಿಯ ದುರಂತ ಕಥನವೆಂದರೆ ತಪ್ಪಾಗಲಾರದು. ಚಾರು ಮುಜಂದಾರ್ ಸಿಲಿಗುರಿಯ ಶ್ರೀಮಂತ ಜಮೀನ್ದಾರರ ಕುಟುಂಬದಲ್ಲಿ ಜನಿಸಿದವನು. (1918) ಅವನ ತಂದೆ ಬೀರೆಶ್ವರ್ ಮುಜಂದಾರ್ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರ ಮನೋಭಾವವುಳ್ಳ ವ್ಯಕ್ತಿಯಾಗಿದ್ದರು.

ಬಾಲ್ಯದಿಂದಲೂ ಬಡವರು ಮತ್ತು ಬಡ ಕೂಲಿಕಾರ್ಮಿಕರ ಬಗ್ಗೆ ಅನುಕಂಪ ಹೊಂದಿದ್ದ ಚಾರುಮುಜಂದಾರ್ ಸಿಲಿಗುರಿಯಲ್ಲಿ ಪ್ರೌಢ ಶಿಕ್ಷಣ ಪಡೆದು ನಂತರ ಈಗ ಬಂಗ್ಲಾದೇಶಕ್ಕೆ ಸೇರಿಹೋಗಿರುವ ಪಾಬ್ನಾ ಪಟ್ಟಣದಲ್ಲಿನ ಎಡ್ವಡ್ ಕಾಲೇಜಿಗೆ ಸೇರ್ಪಡೆಯಾಗಿದ್ದ. ಆದರೆ, ತನ್ನ ಹರೆಯದಲ್ಲೇ ಕಾಲೇಜು ಶಿಕ್ಷಣಕ್ಕೆ ತಿಲಾಂಜಲಿ ಇತ್ತು ಚಹಾ ತೋಟದ ಕಾರ್ಮಿಕರ ಬಗ್ಗೆ ದನಿಯೆತ್ತಿದ್ದ. ಕಾರ್ಲ್ ಮಾರ್ಕ್ಸ್ ದುಡಿಯುವ ವರ್ಗದ ಬಗ್ಗೆ ಹೊಂದಿದ್ದ ಕಾಳಜಿಯಿಂದ ಪ್ರೇರಿತನಾದ ಚಾರು ತನ್ನ ಕಣ್ಣ ಮುಂದೆ ನಡೆಯುತ್ತಿದ್ದ ದೌರ್ಜನ್ಯಗಳನ್ನು ಗಮನಿಸತೊಡಗಿದ. ಡಾರ್ಜಿಲಿಂಗ್ ಸುತ್ತ ಮುತ್ತ ಇದ್ದ ಆಂಗ್ಲರ ಚಹಾ ತೋಟಗಳಲ್ಲಿ ಕಾರ್ಮಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗುತಿತ್ತು. ಇದನ್ನು ಸಹಿಸಲಾಗದೆ, ಕಾರ್ಮಿಕರನ್ನು ಸಂಘಟಿಸಿ, ಅವರಿಗೆ ಗೌರಯುತವಾದ ಜೀವನ ಮತ್ತು ಶ್ರಮಕ್ಕೆ ತಕ್ಕಂತೆ ಕೂಲಿ ದೊರಕಿಸಿಕೊಡುವಲ್ಲಿ ಯಶಸ್ವಿಯಾದನು.

ಈ ಒಂದು ಹೋರಾಟದ ಯಶಸ್ವಿನ ನಂತರ ಬಡ ಗೇಣಿದಾರರ ಬವಣೆಯತ್ತ ಗಮನ ಹರಿಸಿದ ಚಾರು ಆ ಪ್ರಾಂತ್ಯದ ಶ್ರೀಮಂತ ಜಮೀನುದಾರರ ವಿರುದ್ಧ ಹೋರಾಟಕ್ಕೆ ಅಣಿಯಾದನು. ಶ್ರೀಮಂತರಿಂದ ಭೂಮಿಯನ್ನು ಗುತ್ತಿಗೆ ಪಡೆದ ಬಡ ರೈತರು ತಾವೇ ಬಿತ್ತನೆ ಬೀಜ, ಗೊಬ್ಬರ ತಂದು ಉತ್ತಿ ಬಿತ್ತಿ ಬೆಳೆ ತೆಗೆದ ನಂತರ ಮಾಲಿಕರಿಗೆ ಮೂರು ಭಾಗದ ಫಸಲು ನೀಡಿ ಉಳಿದ ಕಾಲು ಭಾಗ ಫಸಲನ್ನು ತಾವು ಪಡೆಯುತ್ತಿದ್ದರು. ಇದೊಂದು ರೀತಿಯಲ್ಲಿ ಕೂತು ಉಣ್ಣುವವರು ಬೇರೆ, ದುಡಿಯುವವರು ಬೇರೆ ಎಂಬಂತಾಗಿತ್ತು ಇಂತಹ ಅಸಮಾನತೆಯ ವಿರುದ್ಧ ಬಂಡೆದ್ದ ಚಾರು ಮುಜಂದಾರ್, ದುಡಿಯುವ ರೈತರಿಗೆ ಮೂರು ಭಾಗ ಫಸಲು ಸೇರಬೇಕೆಂದು 1942 ರಿಂದ 1946 ರವರೆಗೆ ನಿರಂತರವಾಗಿ ಪ್ರತಿಭಟಿಸಿ ಹಲವಾರು ಬಾರಿ ಜೈಲು ಸೇರಬೇಕಾಯಿತು. ಇಂತಹ ಒಂದು ಸಂದರ್ಭದಲ್ಲಿ ಚಾರುಗೆ ಕನುಸನ್ಯಾಲ್ ಭೇಟಿಯಾದನು.

ಕನುಸನ್ಯಾಲ್ ಕೂಡ ಸಿಲುಗುರಿ ಸಮೀಪದ ಸೆಪ್ತುಲ್ಲಜ್ಯೂಟ್ ಎಂಬ ಹಳ್ಳಿಯಲ್ಲಿ 1919 ರಲ್ಲಿ ಜನಿಸಿದವನು. ತನ್ನ ಹರೆಯದಲ್ಲಿ ಎಡಪಂಥೀಯ ವಿಚಾರಧಾರೆಗೆ ಒಲಿದು ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತನಾಗಿದ್ದಕೊಂಡು, ಕಾಲೇಜು ಶಿಕ್ಷಣದ ನಂತರ ಸಿಲುಗುರಿಯ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕಾರ್ಯನಿರ್ವಹಿಸುತಿದ್ದವನು. ಒಮ್ಮೆ ಪಶ್ಚಿಮ ಬಂಗಾಳದ ಸರ್ಕಾರ ಕಮ್ಯೂನಿಷ್ಟ್ ಪಕ್ಷವನ್ನು ನಿಷೇಧಿಸಿದಾಗ ಸರ್ಕಾರದ ನಿಲುವನ್ನು ಪ್ರತಿಭಟಿಸಿ ಜೈಲು ಸೇರಿದ ಕನುಸನ್ಯಾಲ್, ಜಲುಪಗುರಿಯ ಸೆರೆಮನೆಯಲ್ಲಿ ಚಾರು ಮುಜಂದಾರ್‌ನನ್ನು ಭೇಟಿಯಾಗುವುದರ ಮೂಲಕ ನಕ್ಸಲ್ ಹೋರಾಟದ ಇತಿಹಾಸಕ್ಕೆ ಹೊಸ ಆಯಾಮವೊಂದನ್ನು ಒದಗಿಸಿದ.

(ಮುಂದುವರಿಯುವುದು)