Category Archives: ಮಾಧ್ಯಮ

ಸಮೂಹ ಮಾಧ್ಯಮಕ್ಕೆ ಸಂಬಂಧಿಸಿದ ಲೇಖನಗಳು, ವಿಡಿಯೋಗಳು…

ಮಲೆನಾಡಿನ ಮಹಾಮಳೆ

– ಪ್ರಸಾದ್ ರಕ್ಷಿದಿ

ಈ ವರ್ಷ ಮಲೆನಾಡಿಗೆ ಆಪತ್ತು ತಂದು ಮಳೆ “ಶತಮಾನದ ಮಳೆ” ಎಂದೇ ಪ್ರಖ್ಯಾತವಾಯಿತು. ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಅನಾಹುತ ತಂದ ಈ ಮಳೆಗಾಲದಲ್ಲಿ ಅತಿ ಹೆಚ್ಚು ತೊಂದರೆಯಾದದ್ದು ಕೊಡಗಿಗೆ, ನಂತರ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೆಲವು ಭಾಗಗಳು ಮತ್ತು ಅಲ್ಲಲ್ಲಿ ಕೆಲವು ಕಡೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ. (ಕೇರಳದ ವಿಚಾರವನ್ನು ನಾನಿಲ್ಲಿ ಪ್ರಸ್ತಾಪಿಸುತ್ತಿಲ್ಲ)

ಕಾಫಿ ನಾಡಿನಲ್ಲಿ ಮಳೆಯನ್ನು ಅಳೆಯುವ ಪದ್ಧತಿ ಬ್ರಿಟಿಷರ ಕೊಡುಗೆ. ಹಾಗಾಗಿ ಇಲ್ಲಿ ಅನೇಕ ಕಡೆಗಳಲ್ಲಿ ಮಳೆ ಅಳೆಯುವುದು ಒಂದು ನಿತ್ಯವಿಧಿಯಾಗಿದ್ದು ಕೆಲವು ಕಾಫಿ ಎಸ್ಟೇಟುಗಳಲ್ಲಿ ಒಂದು ಶತಮಾನಕ್ಕೂ ಹೆಚ್ಚುಕಾಲದ ಮಳೆ ದಾಖಲೆ ದೊರೆಯುತ್ತದೆ.

ಕಳೆದ ಮೂರು ವರ್ಷಗಳು ಅತಿ ಕಡಿಮೆ ಮಳೆಯ ವರ್ಷಗಳು. ಈ ವರ್ಷವೂ ಅದೇ ರೀತಿ ಮುಂದುವರೆದಿದ್ದರೆ ಅನೇಕ ಕಡೆಗಳಲ್ಲಿ ಕಾಫಿ ಮತ್ತು ಮೆಣಸಿನ ಬೆಳೆ ಬೆಳೆಯುವುದು ಅಸಾಧ್ಯವೆನ್ನುವ ಸ್ಥಿತಿ ಬರುತ್ತಿತ್ತು, ಬೇಸಗೆಯಲ್ಲಿ ತೋಟಕ್ಕೆ ನೀರು ಹನಿಸುವುದಿರಲಿ, ಕುಡಿಯಲೂ ನೀರಿಲ್ಲದ ಸ್ಥಿತಿ ಮಲೆನಾಡಿನ ಹಲವು ಕಡೆಗಳಲ್ಲಿ ಇತ್ತು. ಹಾಗಾಗಿ ಈ ವರ್ಷವಾದರೂ ಒಳ್ಳೆಯ ಮಳೆಯಾಗಲಿ ಎಂದು ಎಲ್ಲರೂ ಹಾರೈಸಿದ್ದರು.

ವರ್ಷಕ್ಕೆ ಸುಮಾರು ಸರಾಸರಿ ನೂರಾ ಹತ್ತು ಇಂಚುಗಳಷ್ಟು ಮಳೆ ಬೀಳುವ ನಮ್ಮೂರಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಂಬತ್ತು ಇಂಚು ದಾಟಿರಲಿಲ್ಲ. ಕಳೆದ ಒಂದು ಶತಮಾನದ ದಾಖಲೆಯಂತೆ ನಮ್ಮೂರಿನಲ್ಲಿ ಅತಿ ಹೆಚ್ಚು ಮಳೆಯಾದದ್ದೆಂದರೆ ಒಂದು ವರ್ಷಕ್ಕೆ ನೂರಾ ಅರುವತ್ತೆರಡು ಇಂಚುಗಳು(1962ರಲ್ಲಿ) ಆಗಲೂ ಈ ದಿನಾಂಕಕ್ಕೆ ಈ ವರ್ಷ ಬಂದಷ್ಟು ಮಳೆಯಾಗಿರಲಿಲ್ಲವೆನ್ನುವುದಷ್ಟೇ ಮತ್ತು ಮಧ್ಯೆ ಮಧ್ಯೆ ಮಳೆ ಬಿಡುವನ್ನು ಕೂಡಾ ಕೊಟ್ಟಿತ್ತು. ಈ ವರ್ಷ 10/9//2018 ರವರೆಗೆ ಒಟ್ಟು ನೂರಾ ನಲುವತ್ತೆರಡು ಇಂಚು ಮಳೆಯಾಗಿದೆ. (ಈಗ ಒಂದು ವಾರದಿಂದ ಬಿಸಿಲಿದೆ) ಮತ್ತು ಈ ವರ್ಷದ ಮಳೆಗಾಲ ಜೂನ್ ಮೂರನೇ ತಾರೀಖಿನಿಂದ ಪ್ರಾರಂಭವಾಗಿ ಎಂಬತ್ತೊಂಬತ್ತು ದಿನಗಳ ಕಾಲ ಬಿಡದೆ ಸುರಿದಿದೆ.

ಒಂದು ಇಂಚು ಮಳೆಯೆಂದರೆ ಒಂದು ಎಕರೆಯ ಮೇಲೆ ಸುಮಾರು ಒಂದು ಲಕ್ಷದ ಎಂಟುಸಾವಿರ ಲೀಟರ್ ನೀರು. ಅಂದರೆ ಈವರ್ಷ ಇದುವರೆಗೆ ನಮ್ಮೂರಿನಲ್ಲಿ ಬಿದ್ದ ನೀರಿನ ಪ್ರಮಾಣ ಒಂದು ಎಕರೆಯ ಮೇಲೆ ಸುಮಾರು ಒಂದೂವರೆ ಕೋಟಿ ಲೀಟರ್ ಗಳಷ್ಟು ನೀರು! ಈ ಪ್ರಮಾಣದ ಮಳೆಯಾಗಿಯೂ ನಮ್ಮೂರಿನಲ್ಲಿ ಭೂಕುಸಿತ ಆಗಿಲ್ಲ. ನಾವೊಂದಷ್ಟು ಜನ ಗೆಳೆಯರೊಡಗೂಡಿ, ಭೂಕುಸಿತ ಉಂಟಾಗಿರುವ ಕೊಡಗು

ಹಾಗೂ ಸಕಲೇಶಪುರ ತಾಲ್ಲೂಕಿನ ಹಲವು ಸ್ಥಳಗಳಿಗೆ, ಇದುವರೆಗೆ ಮೂರು ನಾಲ್ಕು ಬಾರಿ ಹೋಗಿ ಬಂದೆವು. ಈ ವರ್ಷದ ಅನಾಹುತಗಳ ಬಗ್ಗೆ ಅನೇಕ ಅಭಿಪ್ರಾಯಗಳು, ವರದಿಗಳು ಹೇಳಿಕೆಗಳು, ಬಂದಿವೆ ವಾಗ್ವಾದಗಳು ನಡೆದಿವೆ, ವಿಜ್ಞಾನಿಗಳು, ರೈತರು, ರಾಜಕಾರಣಿಗಳು ಹೀಗೆ ಬೇರೆ ಬೇರೆ ಜನರು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಈ ಎಲ್ಲವನ್ನೂ ಗಮನಿಸಿ ನಾನು, ನನ್ನ ಅನುಭವಗಳನ್ನು ಇಲ್ಲಿದಾಖಲಿಸಿದ್ದೇನೆ.

ಈ ವರ್ಷ ಮಲೆನಾಡಿನಲ್ಲಿ ಆದ ಅನಾಹುತಗಳಿಗೆ ಕಾರಣವನ್ನು ಹುಡುಕುತ್ತ, ಸೂಕ್ಷ್ಮವಾಗಿ ಗಮನಿಸುತ್ತ ಹೋದರೆ. ಮುಖ್ಯವಾಗಿ ಎರಡು ವಿಧದ ಕಾರಣಗಳನ್ನು ಕಾಣಬಹುದು. ಮೊದಲನೆಯದು ಪ್ರಾಕೃತಿಕ. ಮುಖ್ಯವಾಗಿ ನಿರಂತರವಾಗಿ ಸುರಿದ ಮಳೆ, ಹಾಗೂ ಅನೇಕರು ಹೇಳಿದಂತೆ ಭೂಕಂಪ, ಅಥವಾ ಭೂಮಿಯ ಒಳಗಡೆಯಿಂದಾದ ಯಾವುದೋ ಬದಲಾವಣೆ. ಎರಡನೆಯದ್ದು ಮಾನವ ನಿರ್ಮಿತ ಕಾರಣಗಳು. ಅರಣ್ಯನಾಶ, ಗುಡ್ಡಗಳ ನೆತ್ತಿಯವರೆಗಿನ ಕೃಷಿ, ಹೈವೇಗಳ ನಿರ್ಮಾಣ, ಅಣೆಕಟ್ಟುಗಳು ,ವಿದ್ಯುತ್ ಯೋಜನೆಗಳು, ರೈಲ್ವೇ ಮುಂತಾದ ನೂರಾರು ಅಭಿವೃದ್ಧಿ ಕಾರ್ಯಗಳು. ಜೆ.ಸಿ.ಬಿಗಳಿಂದ ಗುಡ್ಡಗಳನ್ನು ಕಡಿದು ರಸ್ತೆ ಮಾಡಿರುವುದು, ಮನೆ-ರೆಸಾರ್ಟು ಹೋಮ್ ಸ್ಟೇಗಳ ನಿರ್ಮಾಣ,ಹಲವು ಕಡೆಗಳಲ್ಲಿ ಗುಡ್ಡದ ಮೇಲೂ ನಿರ್ಮಿಸಿರುವ ಕೆರೆಗಳು ಮುಂತಾದವುಗಳು.

ಗುಡ್ಡದ ಮೇಲಿನ ಕೆರೆಗಳ ನಿರ್ಮಾಣಕ್ಕೆ ಕಳೆದ ಕೆಲವು ವರ್ಷಗಳಿಂದ ಕಡಿಮೆ ಮಳೆಯಾದ ಕಾರಣ ಅನೇಕ ಕಡೆಗಳಲ್ಲಿ ಗುಡ್ಡದ ಮೇಲೆ ಎತ್ತರದ ಸ್ಥಳಗಳಲ್ಲಿ ಕೆರೆಗಳನ್ನು ನಿರ್ಮಿಸತೊಡಗಿದರು. ಇದಕ್ಕೆ ಸರ್ಕಾರದ ಕೃಷಿಹೊಂಡ ಯೋಜನೆಯೂ ನೆರವಿಗೆ ಬಂತು. ಇಲ್ಲಿ ಸಂಗ್ರಹವಾದ ನೀರಿನಿಂದ ಬೇಸಗೆಯಲ್ಲಿ ಗುರುತ್ವ ಶಕ್ತಿಯಿಂದ ತೋಟಕ್ಕೆ ನೀರಾವರಿ ಮಾಡುವುದು, ಸಾಧ್ಯವಾದರೆ ಮಳೆಗಾಲದಲ್ಲಿ ಸಣ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದು ಇದರ ಉದ್ದೇಶ.

ಹತ್ತು ಸಾವಿರ ಚದರಡಿ ಯಿಂದ ಹಿಡಿದು ಒಂದು ಎಕರೆಯಷ್ಟು ವಿಸ್ತಾರದ ಆರರಿಂದ ಏಂಟು ಅಡಿ ಆಳದವರೆಗಿನ ಈ ಕೆರೆಗಳು. ಎರಡು ಲಕ್ಷ ಲೀಟರ್ ನಿಂದ ಹಿಡಿದು ಒಂದು ಕೋಟಿ ಲೀಟರ್ ನಷ್ಟು ನೀರನ್ನು ಸಂಗ್ರಹಿಸಬಲ್ಲವು. ಅಂದರೆ ಹತ್ತುಸಾವಿರ ಚದರಡಿಯ ಕೃಷಿ ಹೊಂಡದಲ್ಲಿಎರಡು ಸಾವಿರ ಟನ್ ತೂಕದ ನೀರು ಸಂಗ್ರಹವಾದರೆ,ಒಂದು ಎಕರೆ ಕೆರೆಯಲ್ಲಿ ಹತ್ತುಸಾವಿರ ಟನ್ ತೂಕದ ನೀರು. ಈ ನೀರಿಗೆ ಘನ ವಸ್ತುವಿನಂತೆ ಬರಿಯ ತೂಕವಲ್ಲದೆ ಹರಿಯುವ ಗುಣ. ಜಿನುಗಿ ತೂರಿಹೋಗುವ ಶಕ್ತಿ ಮತ್ತು ಎಲ್ಲದಿಕ್ಕಿಗೆ ಒತ್ತುವ “ಹೈಡ್ರೋ ಡೈನಮಿಕ್ ಪ್ರೆಷರ್” ಇರುತ್ತದೆ. ಅದು ಎತ್ತರದಲ್ಲಿ ಭೂಮಿಯ ಮೇಲೆ ವರ್ತಿಸುವ ರೀತಿ ಮತ್ತು ಶಕ್ತಿಯನ್ನುಪರಿಗಣಿಸಬೇಕು.

ಮಳೆಯೊಂದರಿಂದಲೇ ಇಷ್ಟೆಲ್ಲ ಅನಾಹುತಗಳು ಆಗಿದ್ದರೆ, ವ್ಯಾಪಕವಾಗಿ ಎಲ್ಲ ಕಡೆಯೂ ಆಗಬೇಕಿತ್ತು. ಭೂಕುಸಿತವಾದ ಅನೇಕ ಕಡೆಗಳಲ್ಲೂ ಮಧ್ಯೆ ಒಂದೆರಡುಬಾರಿ ಮಳೆ ವಾರದ ಬಿಡುವು ಕೊಟ್ಟಿತ್ತೆಂದು ಅಲ್ಲಿ ವಾಸವಿದ್ದವರೇ ಹೇಳುತ್ತಾರೆ. ನಿರಂತರ ಮಳೆಯಾದ ಹಲವು ಸ್ಥಳಗಳಲ್ಲಿ ಭೂಕುಸಿತವಾಗಿಲ್ಲ. ಇನ್ನು ಭೂಕುಸಿತಕ್ಕೆ ಭೂಕಂಪವೇ ಕಾರಣವಾಗಿದ್ದರೆ. ಈಗ ವರದಿಯಾಗಿರುವ ರಿಕ್ಟರ್ ಸ್ಕೇಲ್ 3.4 ರ ಭೂಕಂಪ ಮಲೆನಾಡಿನಲ್ಲಿ ಅನೇಕ ಬಾರಿ ಆಗಿದೆ. ಹಾಗೇನಾದರೂ ಭೂಕಂಪದಿಂದ ಭೂಕುಸಿತ ಅಥವಾ ಮನೆಗಳ ನಾಶ ಈಗ ಆಗಿರುವುದಕ್ಕಿಂತ ಎಷ್ಟೋ ಪಾಲು ಹೆಚ್ಚಿರುತ್ತಿತ್ತು. ಈಗ ಕುಸಿದ ಮನೆಗಳಿಗಿಂತ ಇನ್ನೂ ಅಪಾಯವೆನಿಸುವ ನೂರಾರು ಸ್ಥಳಗಳಲ್ಲಿ ಏನೂ ಆಗಿಲ್ಲ. ಮತ್ತು ಭೂಕಂಪದ ಪರಿಣಾಮ ಅಲ್ಲೊಂದು ಇಲ್ಲೊಂದು ಕಡೆಗಳಲ್ಲಿ ಬೊಟ್ಟುಮಾಡಿದಂತಿರದೆ, ವ್ಯಾಪಕವಾಗಿರುತ್ತದೆ. ಹಾಗಾಗಿ ಈ ಭೂಕಂಪ ಮಳೆಯೊಂದಿಗೆ ಸೇರಿ ಭೂಕುಸಿತ ಮುಂತಾದ ವಿದ್ಯಮಾನಗಳ ಪರಿಣಾಮವನ್ನು ಹೆಚ್ಚಿಸಿರಬಹುದಷ್ಟೇ ಹೊರತು ಅದೇ ಕಾರಣವಲ್ಲ.

ಪ್ರತಿ ವರ್ಷ ಬೀಳುವ ಒಟ್ಟು ಮಳೆಯ ಅಳತೆಯ ದಾಖಲೆಯನ್ನಿಟ್ಟುಕೊಂಡು, ಈ ವರ್ಷ ಹೆಚ್ಚು ಮಳೆಯಾಗಿದೆ. ಆದ್ದರಿಂದ ಹೆಚ್ಚು ನೀರಿದೆ. ಆಥವಾ ಭೂಮಿಯಲ್ಲಿ ಇರುವ ತೇವಾಂಶ ಮತ್ತು ಒರತೆಯ ಪ್ರಮಾಣ ಎಷ್ಟಿದೆ ಎಂದೋ, ಹಾಗೆಯೇ ಇದರಿಂದ ಬೆಳೆಗೆ ಅನುಕೂಲ-ಅನಾನುಕೂಲವಿದೆಯೇ ಎಂದೋ ನಿರ್ಧರಿಸಲು ಸಾಧ್ಯವಿಲ್ಲ. ಯಾಕೆಂದರೆ ಪ್ರತಿ ವರ್ಷದ ಮಳೆಗಾಲವೂ ಒಂದು ಬೇರೆಯೇ ವಿದ್ಯಮಾನ.
ಉದಾಹರಣೆಗೆ ಕಾಫಿ ಬೆಳೆಯಲ್ಲಿ ಫೆಬ್ರವರಿ ಮಾರ್ಚ್ ತಿಂಗಳ ಬೀಳುವ “ಹೂವಿನ ಮಳೆ” ಆ ವರ್ಷದ ಪೂರ್ಣ ಫಸಲಿನ ಪ್ರಮಾಣವನ್ನು ನಿರ್ಧರಿಸಿ ಬಿಡುತ್ತವೆ. ನಂತರ ವರ್ಷವಿಡೀ ಬೀಳುವ ಮಳೆಯ ಮಾದರಿ ಆ ವರ್ಷದ ಬೆಳೆಯ ಸ್ಥಿತಿಯನ್ನು ನಿರ್ಧರಿಸುತ್ತದೆ. ಅಂದರೆ ಬಿಡುವು ಕೊಟ್ಟು ಬರುತ್ತದೆಯೇ ಇಲ್ಲ ಒಂದೇ ಸಮನೆ ಸುರಿದು ಬೆಳೆಯನ್ನು ನಾಶ ಮಾಡುತ್ತದೆಯೇ, ಆಥವಾ ಉದ್ದಕ್ಕೂಸೋನೆ ಮಳೆಯಾಗಿ ಒಟ್ಟು ಮಳೆಯ ಪ್ರಮಾಣ ಕಡಿಮೆ ಇದ್ದರೂ ತೋಟವೆಲ್ಲ ರೋಗಕ್ಕೆ ತುತ್ತಾಗುವಂತೆ ಮಾಡಿ ಫಸಲನ್ನು ನಾಶಮಾಡಿದೆಯೇ ಎಂದು ಗಮನಿಸಬೇಕು. ಅದೇ ರೀತಿ ಆ ವರ್ಷ ಗಾಳಿಬೀಸಿದ ವೇಗ ಎಷ್ಟು. ಒಟ್ಟು ಎಷ್ಟು ದಿನಗಳ ಕಾಲ ಗಾಳಿ ಬೀಸಿದೆ ಎನ್ನುವುದನ್ನೂ ಗಮನಿಸಬೇಕು. ಯಾಕೆಂದರೆ ಗಾಳಿಯ ಜೊತೆಗೂಡಿದ ಮಳೆ ಭೂಮಿಯನ್ನು ಇನ್ನಷ್ಟು ತಂಪಾಗಿದೆ ಶೀತವೇರಿಸುತ್ತದೆ. ಈ ವರ್ಷದ ಮಹಾಮಳೆಯಲ್ಲಿ ಗಾಳಿಬೀಸಿದ ವೇಗವೂ ಹೆಚ್ಚಾಗಿರಲಿಲ್ಲ ಮತ್ತು ಗಾಳಿಬೀಸಿದ ದಿನಗಳ ಸಂಖ್ಯೆಯೂ ಕಡಿಮೆ. ಹಾಗೇನಾದರೂ ವಾಡಿಕೆಯಂತೆ ಕೆಲವು ವರ್ಷಗಳಲ್ಲಿ ಬೀಸುವ ಮಳೆಗಾಲದ ಗಾಳಿ ಈ ಬಾರಿ ಬೀಸಿದ್ದರೆ, ಈ ವರ್ಷದ ಅನಾಹುತ ಇನ್ನೂ ಹೆಚ್ಚಾಗುತ್ತಿತ್ತು. ಆದ್ದರಿಂದ ನಾವು,ಭೂಮಿಯಲ್ಲಿ ಇಂಗಿರಬಹುದಾದ ನೀರು, ಜಲಮೂಲಗಳ ಪರಿಸ್ಥಿತಿ ಎಲ್ಲವೂ ಸೇರಿದಂತೆ ಯಾವುದೇ ಒಂದು ವರ್ಷ ಮಳೆಯಿಂದಾದ ಪರಿಣಾಮವನ್ನು ತೀರ್ಮಾನಿಸಬೇಕಾದರೆ ಆ ವರ್ಷ ಬಿದ್ದ ಮಳೆಯ ಪ್ರಮಾಣವೊಂದೇ ಅಲ್ಲ, ಮಳೆ ಬಿದ್ದ ಮಾದರಿ. ಮಧ್ಯೆ ಕೊಟ್ಟಂತಹ ಬಿಡುವಿನ ಮತ್ತು ಬಿಸಿಲಿನ ದಿನಗಳು. ಬೀಸಿದ ಗಾಳಿಯ ವೇಗ ಮತ್ತು ಪ್ರಮಾಣ, ಉಷ್ಣಾಂಶವೂ ಸೇರಿದಂತೆ ಹಲವು ವಿಷಯಗಳನ್ನು ಗಮನಿಸಬೇಕಾಗುತ್ತದೆ.

 

ಇನ್ನು ಮಾನವ ನಿರ್ಮಿತ ಕಾರಣಗಳನ್ನು ಪರಿಶೀಲಿಸಿದರೆ, ಹೈವೇಗಳ ಕುಸಿತ. ರಸ್ತೆಗಳೇ ಕೊಚ್ಚಿಹೋಗಿರುವುದು. ಯಾರೆಷ್ಟೇ ಮುಚ್ಚಿಟ್ಟರೂ ಎತ್ತಿನಹೊಳೆಯೋಜನೆ. ಮತ್ತು ಜಲವಿದ್ಯುತ್ ಯೋಜನೆಗಳ ಸ್ಥಳಗಳಲ್ಲಿ ಉಂಟಾಗಿರುವ ವ್ಯಾಪಕ ಹಾನಿ ಎದ್ದು ಕಾಣುತ್ತಿದೆ.ಅರಣ್ಯ ಪ್ರದೇಶದಲ್ಲಿ ಮಾಡುವ ಯಾವುದೇ ಯೋಜನೆಯಿರಲಿ, ಹೊಸ ರಸ್ತೆಗಳ ನಿರ್ಮಾಣ ಅನಿವಾರ್ಯವಾಗುತ್ತದೆ. ಈ ರಸ್ತೆಗಳು ಆ ಯೋಜನೆಯ ಸಮಯದಲ್ಲಿ ಮಾತ್ರವಲ್ಲ ಮುಗಿದ ನಂತರವೂ, ಮ

ರಗಳ್ಳತನ, ಪ್ರಾಣಿಗಳಬೇಟೆ. ನದಿ ಮೂಲದ ವರೆಗೂ ಮರಳು ಗಣಿಗಾರಿಕೆಗೆ ಅನುಕೂಲ ಮಾಡಿಕೊಟ್ಟು ಮತ್ತಷ್ಟು ವಿನಾಶಕ್ಕೆ ಆರಣವಾಗುತ್ತದೆ. ಪ್ರತಿಯೊಂದು ಅಭಿವೃದ್ಧಿಯೋಜನೆಗಳ ಜೊತೆಯಲ್ಲೇ ಆಗಿರುವ ಅರಣ್ಯನಾಶವೂ ಕಣ್ಣಿಗೆ ಗೋಚರಿಸುತ್ತದೆ. ಆದರೆ ಕಣ್ಣಿಗೆ ಕಾಣದ ಅರಣ್ಯನಾಶ ಇನ್ನೊಂದು ಬಗೆಯದ್ದಿದೆ. ಇದು ಖಾಸಗಿ ವಲಯದ್ದು. ವ್ಯಾಪಕವಾದ ಕೃಷಿ, ಅದೂ ಗುಡ್ಡಗಳ ಮೇಲೆ-ಗುಡ್ಡಗಳ ನೆತ್ತಿಯ ತನಕ ನಡೆದಿದೆ, ಗುಡ್ಡದ ನೆತ್ತಿಯಲ್ಲಿ ಇರಬೇಕಾ ಶೋಲಾ ಅರಣ್ಯ ಮತ್ತು ಹುಲ್ಲುಗಾವಲುಗಳು ಅನೇಕ ಕಡೆಗಳಲ್ಲಿ ತೋಟಗಳಾಗಿವೆ. ಇದರಲ್ಲಿ ಸರ್ಕಾರಿ ಜಮೀನಿನ ಒತ್ತುವರಿ ಎಷ್ಟುಸಾವಿರ ಎಕರೆಗಳು ಎಂದು ಸರ್ಕಾರವೇ ಹೇಳಬೇಕು. ಆದರೆ ಅಲ್ಲೆಲ್ಲ ಇದ್ದ ನೈಸರ್ಗಿಕ ಅರಣ್ಯ ನಾಶವಾಗಿದೆ.

ಈ ಬಾರಿ ಅನಾಹುತಗಳಾದ ಪ್ರದೇಶಗಳಲ್ಲಿರುವುದು ಮುಖ್ಯವಾಗಿ ಕಾಫಿ ಬೆಳೆ. ಇದು ಇಂದು ನಾನಾ ಬಗೆಯ ಸಂಕಷ್ಟಗಳಿಂದ ನರಳುತ್ತಿದೆ. ಹವಾಮಾನದಲ್ಲಾದ ವೈಪರೀತ್ಯ ಮತ್ತು ಉಷ್ಣಾಂಶ ಹೆಚ್ಚಳದಿಂದಾಗಿ ಅರೇಬಿಕಾ ಕಾಫಿ ಬೆಳೆಯಲಾಗುತ್ತಿಲ್ಲ. ಹೆಚ್ಚಿನ ತೋಟಗಳಲ್ಲಿ ರೋಬಸ್ಟ ಬೆಳೆ ಬೆಳೆಯಲು ಪ್ರಾರಂಭಿಸಿದ್ದಾರೆ. ಇದರಿಂದಾಗಿಯೂ ತೋಟಗಳಲ್ಲಿನ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮೆಣಸಿನ ಬೆಳೆ ನಿರಂತರ ರೋಗಕ್ಕೆ ತುತ್ತಾಗುತ್ತಿದೆ. ಅರಣ್ಯಗಳಲ್ಲಿ ಅಭಿವೃದ್ಧಿ ಯೋಜನೆಗಳಿಂದ ತೋಟಗಳಲ್ಲಿ ಕಾಡು ಪ್ರಾ

ಣಿಗಳ ಕಾಟ ಹೆಚ್ಚಾಗಿ. ಆದಾಯವಿಲ್ಲದ ಕಾಫಿಬೆಳೆಗಾರರರು ಕಳೆದ ಇಪ್ಪತ್ತು ವರ್ಷಗಳಲ್ಲಿ ಸಾಕಷ್ಟು ರೆಸಾರ್ಟು -ಹೋಮ್ ಸ್ಟೇಗಳನ್ನು ನಿರ್ಮಿಸಿಕೊಂಡು ಒಂದಷ್ಟು ಆದಾಯ ಗಳಿಸತೊಡಗಿದರು. ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆ

ತು. ನೂರಾರು ಜನರಿಗೆ ಉದ್ಯೋಗವೂ ದೊರೆಯುವಂತಾಯಿತು. ಆದರೆ ಇದರಲ್ಲಿ ಲಾಭವಿದೆಯೆಂದು ಕಂಡುಕೊಂಡ ರಾಜಕಾರಣಿಗಳು, ಉದ್ಯಮಿಗಳು, ಎಲ್ಲಾರೀತಿಯ ದಂಧೆಕೋರರು ಇತ್ತ ನುಗ್ಗಿದರು.ಇದರಿಂದಾಗಿರುವ ಸಾಮಾಜಿಕ, ಹಾಗೂ ಪರಿಸರ ಸಮಸ್ಯೆಗಳು ಬೇರೆಯೇ ಇವೆ.

ಈ ರೀತಿಯ ನೂರಾರು ರೆಸಾರ್ಟುಗಳು, ಅರಣ್ಯದ ಅಂಚಿನಲ್ಲಿ, ಸರ್ಕಾರಿ ಭೂಮಿಯ ಒತ್ತುವರಿಯಲ್ಲಿ ಇವೆ. ಗುಡ್ಡಗಳನ್ನು ಕಡಿದು ರಸ್ತೆಗಳನ್ನು ಮಾಡಿದ್ದಾರೆ. ಇವೆಲ್ಲದರ ಜೊತೆ ವಸತಿಗಾಗಿ ಹೆಚ್ಚಿದ ಒತ್ತಡದಿಂದ ಗುಡ್ಡಗಳನ್ನು ಕಡಿದು ಮೆಟ್ಟಿಲು ಮೆಟ್ಟಿಲುಗಳಾಗಿ ಮನೆಗಳನ್ನು ಕಟ್ಟಲಾಗಿದೆ. ಇವೆಲ್ಲವೂ ಭೂ ಮೇಲ್ಮೈಯನ್ನು ಬದಲಿಸಿವೆ. ರಸ್ತೆಗಳಿರಲಿ. ಹೆದ್ದಾರಿಗಳಿರಲಿ ನಗರ ಪ್ರದೇಶವಿರಲಿ ಸರಿಯಾಗಿ ನೀರು ಹರಿದು ಹೋಗುವ ವ್ಯವಸ್ಥೆಯೇ ಇಲ್ಲ.ಹೆದ್ದಾರಿಗಳನ್ನುಳಿದು, ಅನೇಕ ರಸ್ತೆಗಳಲ್ಲಿ ಕೇವಲ ಕಿಲೋಮೀಟರಿಗೊಂದರಂತೆ ಮೋರಿಗಳಿವೆ.

ಈ ಎಲ್ಲ ವಿದ್ಯಮಾನಗಳಿಂದ ಆದಂತ ಭೂಸವಕಳಿ. ಭೂವಿನ್ಯಾಸದ ಬದಲಾವಣೆಗಳು ಪ್ರಾಕೃತಿಕ ವಿಕೋಪದ ಜೊತೆ ಸೇರಿಯೇ ಈ ರೀತಿಯ ಅನಾಹುತಗಳು ಉಂಟಾಗಿವೆ. ಆದರೆ ಇದುವರೆಗಿನ ಎಲ್ಲ ಅಭಿಪ್ರಾಯ ಮತ್ತು ಹೇಳಿಕೆಗಳು, ಬಹುಷಃ ಆರು ಜನ ಕುರುಡರು ಆನೆಯನ್ನು ವರ್ಣಿಸಿದ ಕತೆಯಂತೆ ಕಂಡುಬರುತ್ತಿದೆ.

ಆದರೆ ರಾಜಕಾರಣಿಗಳು. ಮತ್ತು ಸಮಾಜದ ಕೆಲವು ವರ್ಗಗಳ ಜನ ಈಗಿನ ಎಲ್ಲ ಅನಾಹುತಗಳನ್ನು ಭೂಕಂಪ ಇಲ್ಲವೇ “ಶತಮಾನದ ಮಳೆ”ಯ ತಲೆಗೆ ಕಟ್ಟುವ ಹುನ್ನಾರದಲ್ಲಿದ್ದಾರೆ. ಯಾಕೆಂದರೆ ಯಾವುದೇ ರೀತಿಯ “ಅಭಿವೃಧ್ಧಿ” ಕಾರ್ಯಕ್ರಮಗಳೇ ರಾಜಕಾರಣಿಗಳಿಗೆ. ಗುತ್ತಿಗೆದಾರರಿಗೆ, ದಂಧೆಕೋರರಿಗೆ ಸದಾ ಹಾಲುಕರೆಯುವ ಹಸು. ಇದರೊಂದಿಗೆ ಈಗ ರೆಸಾರ್ಟ್ ಉದ್ಯಮವೂ ಸೇರಿದೆ.ಇದೀಗ ಮತ್ತೆ ಕೊಡಗಿನ ಮೂಲಕ ಕೇರಳಕ್ಕೆ ಪವರ್ ಟ್ರಾನ್ಸ್ ಮಿಷನ್ ಲೈನ್ ಹಾಗೂ ರೈಲ್ವೇ ಸಂಪರ್ಕಕ್ಕೆ ಕೇರಳ ಸರ್ಕಾರ

ದ ಒತ್ತಡವೂ ಹೆಚ್ಚಿದೆ. ಇದರಿಂದ ಸಿಗಬಹುದಾದ ರಾಜಕೀಯ ಮತ್ತು ಆರ್ಥಿಕಲಾಭವನ್ನು ಪಡೆಯಲು ಎಲ್ಲರೂ ಪಕ್ಷಾತೀತರಾಗಿ ಸಿದ್ಧರಾಗುತ್ತಿದ್ದಾರೆ.  ಹಾಗಾದರೆ ಈ ಮಳೆಯಿಂದ ಏನೂ ತೊಂದರೆ ಆಗಿಲ್ಲವೇ ಎಂದರೆ ಖಂಡಿತ ಆಗಿದೆ. ಕಳೆದ ಕೆಲವು ವರ್ಷಗಳಂತೆ ಈ

 ಭಾಗದಲ್ಲಿ ಈ ವರ್ಷವೂ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ ಬಹುಷಃ ಯಾವುದೇ ಅನಾಹುತ ಸಂಭವಿಸುತ್ತಿರಲಿಲ್ಲ ಎನಿಸುತ್ತದೆ. ನಾವು ನಮ್ಮ ಎಲ್ಲ ಪ್ರಕೃತಿ ವಿರೋಧಿ ಕೆಲಸಗಳನ್ನು ಇನ್ನಷ್ಟು ಉಗ್ರವಾಗಿ ಮುಂದುವರೆಸುತ್ತಿದ್ದೆವು ಆದರೆ ಮುಂದೆ ಒಂದು ದಿನ ಇದಕ್ಕಿಂತ ಹೆಚ್ಚಿನ ದುರಂತ ಖಂಡಿತ ಕಾದಿರುತ್ತಿತ್ತು.

ಇಷ್ಟು ಮಳೆಯಾದ ಪ್ರದೇಶಗಳನ್ನು ನೋಡುತ್ತ ಬಂದರೆ ಒಂದು ವಿಷಯ ಮನದಟ್ಟಾಗುತ್ತದೆ. ಈಗ ಭೂಕುಸಿತ ಉಂಟಾಗಿರುವ ಪ್ರದೇಶಗಳೆಲ್ಲ ಜಲದ ಕಣ್ಣುಗಳು. ಈ ವರ್ಷ ಸುರಿದ ಮಳೆಗೆ ಭೂಮಿಯ ಒಳಭಾಗದಲ್ಲಿ ಸಂಗ್ರಹವಾಗಿ ನಿರಂತರ ಹೊಳೆ ಹಳ್ಳಗಳಿಗೆ ನೀರೂಡುತ್ತಿದ್ದ ಅಂತರ್ಜಲ ಸಂಗ್ರಹಾಗಾರಗಳು ಒಡೆದು ಛಿದ್ರವಾಗಿವೆ ಮತ್ತು ಬಸಿದು ಹೋಗಿವೆ. ಇದರಿಂದಾಗಿ ಕೇವಲ ಒಂದು ವಾರದ ಬಿಸಿಲಿಗೆ ಹಳ್ಳಗಳಲ್ಲಿ ನೀರು ಬರಿದಾದಂತೆ ಕಾಣುತ್ತಿದೆ. ಯಾಕೆಂದರೆ ಸಂಗ್ರಹಾಗಾರಗಳು ಬರಿದಾದಂತಿವೆ.

ನಾವು ಇತ್ತೀಚಿಗೆ ನೋಡಿದ ಹೆಚ್ಚಿನ ಎಲ್ಲ ಭೂಕುಸಿತವಾಗಿರುವುದು ಸ್ವಾಭಾವಿಕ ಒರತೆಗಳಿದ್ದ ಪ್ರದೇಶಗಳಲ್ಲಿ ಭೂಕುಸಿತದ ಸ್ಥಳಗಳ ಜನರ ಅನುಭವದಂತೆ, ಭೂಕುಸಿತವಾಗುವ ಹಿಂದಿನ ದಿನವೇ ಅದರೆ ಕೆಲವು ಲಕ್ಷಣಗಳು ಕಂಡಿವೆ. ಅಂದರೆ ಭೂಮಿ ಬಿರುಕು ಬಿಟ್ಟಿರುವುದು, ಏನೋ ಶಬ್ದ ಕೇಳಿಸಿದ್ದು ಇತ್ಯಾದಿ. ಆದರೆ ಭೂಕುಸಿತವಾಗುವ ಮೊದಲು ಸುಮಾರಾಗಿ ಬೆಟ್ಟದ ಮಧ್ಯ ಭಾಗದಲ್ಲಿ ಫ್ರೆಷರ್ ಕುಕ್ಕರ್ ನ ವಾಲ್ವ್ ತೆರದುಕೊಂಡಂತೆ ಅಪಾರ ಒತ್ತಡದಿಂದ ಸುಮಾರು ಹತ್ತರಿಂದ ಹದಿನೈದು ಅಡಿಗಳಷ್ಟು ವ್ಯಾಸದ ದೊಡ್ಡ ಗಾತ್ರದ ನೀರು ಇಪ್ಪತ್ತರಿಂದ ಮೂವತ್ತು ಅಡಿಗಳಷ್ಟು ಎತ್ತರಕ್ಕೆ ಚಿಮ್ಮತೊಡಗಿದೆ. ಅಲ್ಲಿಂದ ಪ್ರಾರಂಭವಾದ ಭೂಮಿಯ ಜಾರುವಿಕೆ ಮರ ಮಣ್ಣು ಕಲ್ಲು ಎಲ್ಲವನ್ನೂ ಕೆಳಕ್ಕೆ ತಳ್ಳುತ್ತಾ ಪ್ರಪಾತವನ್ನೇ ನಿರ್ಮಿಸುತ್ತಾ ಕೆಳಗೆ ಬಂದು ತಗ್ಗಿನಲ್ಲಿ ಬಯಲು ಅಥವಾ ಹೊಳೆ ಸಿಗುವವರೆಗೂ ಸಾಗಿದೆ.

ಈ ವಿದ್ಯಮಾನ ಕೊಡಗಿನ ಸೋಮವಾರಪೇಟೆ ಸಮೀಪದ ಕಿರಗಂದೂರು ಮುಂತಾದ ಹಲವು ಕಡೆಗಳಲ್ಲಿ ಹಗಲೇ ನಡೆದಿದ್ದರೆ. ಮಡಿಕೇರಿ ಮಂಗಳೂರು ರಸ್ತೆಯ ಜೋಡುಪಾಲದಂತಹ ಸ್ಥಳಗಳಲ್ಲಿ ರಾತ್ರಿಯ ವೇಳೆ ನಡೆದಿದೆ. ಈಗ ಸ್ಥಳಗಳಲ್ಲಿ ಇಡೀ ಗುಡ್ಡವನ್ನು ಮೇಲಿನಿಂದ ಕೆಳಕ್ಕೆ ಉದ್ದಕ್ಕೆ ಸೀಳಿ ತುಂಡೊಂದನ್ನು ಹೊರಕ್ಕೆ ತೆಗೆದಂತೆ ಕಾಣುತ್ತದೆ. ಈ ಬಗೆಯ ಕುಸಿತವೇ ಹೆಚ್ಚಾಗಿ ಎಲ್ಲ ಕಡೆಗಳಲ್ಲಿ ಕಂಡುಬರುವುದು. ಈ ವರ್ಷದ ನಿರಂತರ ಮಳೆಯಿಂದಾಗಿ ಭೂಮಿಯ ಒಳಭಾಗದಲ್ಲಿ ಸಂಗ್ರವಾದ ಅಪಾರ ಜಲರಾಶಿ ಒತ್ತಡದಿಂದ ಒಡೆದು ಹೊರಬಂದಂತೆ ತೋರುತ್ತದೆ. ಹೀಗೆ ಒಡೆದು ಹೊರಬರುವ ಮುಂಚೆ ಅದು ಭೂಮಿಯ ಒಳಭಾಗದಲ್ಲೂ ಅನೇಕ ಬದಲಾವಣೆ ಕುಸಿತಗಳನ್ನು ಮಾಡಿರಬಹುದು, ಈ ಪ್ರದೇಶದ ಭೂರಚನೆಯೂ ಅದಕ್ಕೆ ಅನುಗುಣವಾಗಿಯೇ ಇದೆ. ಹಾಗಾಗಿ ಬೆಟ್ಟಗಳು ಮೇಲಿನಿಂದ ಕೆಳಗಿನ ವರೆಗೆ ಸೀಳುಬಿಟ್ಟು ನೀರು ಅಪಾರಪ್ರಮಾಣದಲ್ಲಿ ಒಂದೇಬಾರಿ ಸೋರಿಹೋಗಿ ದೊಡ್ಡ ಪ್ರಮಾಣದ ಪ್ರವಾಹ ಉಂಟಾಯಿತಲ್ಲದೆ. ಮಳೆ ನಿಂತ ತಕ್ಷಣ ಪಾತ್ರೆ ಬರಿದಾದಂತೆ ಹೊರಗೆ ಹರಿಯುವ ನೀರಿನ ಪ್ರಮಾಣ ಒಮ್ಮೆಲೆ ಕುಸಿದಿರಬೇಕು. (ಇತ್ತೀಚಿನ ಡ್ರೋನ್ ಚಿತ್ರಗಳು ಇದನ್ನೇ ಸೂಚಿಸುತ್ತವೆ) ಆದರೆ ಭೂಕುಸಿತವಾಗದ ಸ್ಥಳಗಳಲ್ಲೂ ಅಂದರೆ ಇತರ ಕಡೆಗಳ ಹೊಳೆಗಳಲ್ಲೂ ನೀರೇಕೆ ಕಡಿಮೆಯಾಯಿತು.

ಇದರೊಂದಿಗೆ ಇನ್ನೊಂದು ಪ್ರಮುಖ ವಿಚಾರವನ್ನು ಗಮನಿಸಬೇಕು. ಅದು ಮರಳುಗಣಿಗಾರಿಕೆ. ಇಂದು ಮರಳು ಗಣಿಗಾರಿಕೆ, ನದಿಗಳು ಸಮುದ್ರ ಸೇರುವ ಅಳಿವೆಯಿಂದ ಪ್ರಾರಂಭವಾಗಿ ನದೀ ಮೂಲದವರೆಗೂ ನಡೆದಿದೆ.ಈ ಮರಳು ಲೂಟಿ ನದೀ ತಳವನ್ನೇ ಬಗೆದು ಖಾಲಿಮಾಡಿದೆ. ಕಳೆದ ವರ್ಷಗಳಲ್ಲಿ ಬಿದ್ದ ಅತಿಕಡಿಮೆ ಮಳೆಯಿಂದಾಗಿ ಇಡೀ ವರ್ಷವೇ ಹೊಳೆ ಹಳ್ಳಗಳಲ್ಲಿ ಹರಿಯುತ್ತಿದ್ದ ನೀರಿನ ಪ್ರಮಾಣವೂ ಕಡಿಮೆಯೇ ಇತ್ತು. ಈ ವರ್ಷ ಮಳೆ ಹೆಚ್ಚು ಬೀಳುತ್ತಿದ್ದ ಕಾಲದಲ್ಲಿ ತುಂಬಿ ಹರಿದು ಮಳೆನೀಂತ ಕೂಡಲೇ ಕಡಿಮೆಯಾಗಲು ಕಾರಣ ನದೀತಳ ಮತ್ತು ಪಾತ್ರಗಳಲ್ಲಿ ನೀರನ್ನು ಹಿಡಿದಿಟ್ಟುಕೊಂಡು ನಿಧಾನವಾಗಿ ನದಿಗೆ ಮರು ಪೂರಣ ಮಾಡುತ್ತಿದ್ದ ಮರಳು ಮಾಯವಾಗಿರುವುದು. ಇದರಿಂದಾಗಿ ನಮಗೆ ಈ ವರ್ಷ ಎಲ್ಲಕಡೆಗಳಲ್ಲೂ ಇದ್ದಕ್ಕಿದ್ದಂತೆ ನೀರು ಕಡಿಮೆಯಾದಂತೆ ಕಾಣಿಸುತ್ತಿದೆ. ಈ ವರ್ಷವಂತೂ ಆ ಸ್ಥಳಗಳಲ್ಲಿ ಕೆಸರು ಹೂಳು ತುಂಬಿ ನೀರು ಹಿಡಿದಿಡುವ ಶಕ್ತಿ ಇನ್ನಷ್ಟು ಕಡಿಮೆಯಾಗಿದೆ. ಹೂಳಿನ ಮೇಲೆ ಬಿಸಿಲು ಬಿದ್ದಕೂಡಲೇ ನೀರು ಆವಿಯಾಗಿ ಒಣಗಿ ಗಟ್ಟಿಯಾಗುತ್ತದೆ. ಮರಳಿನಂತೆ ಒಳಭಾಗದಲ್ಲೇ ನೀರನ್ನು ಹಿಡಿದಿಟ್ಟುಕೊಳ್ಳುವುದಿಲ್ಲ.

ಆದರೆ ಇತ್ತೀಚೆಗೆ ಪತ್ರಿಕೆಗಳಲ್ಲಿ “ಈ ವರ್ಷ ಒಂದೇ ಬಾರಿಗೆ ದೊಡ್ಡ ಪ್ರಮಾಣದ ಮಳೆ ಬಂದಿದ್ದರಿಂದ ನೀರು ಭೂಮಿಯಲ್ಲಿ ಇಂಗದೆ ಹರಿದು ಹೋಗಿರುವುದು ಹೀಗೆ ಬೇಗ ನೀರಿನ ಹರಿವು ಕಡಿಮೆಯಾಗಲು ಕಾರಣ” ಎಂದು ಕೆಲವರು ಭೂವಿಜ್ಞಾನಿಗಳು ಹೇಳಿದರೆಂದು ವರದಿಯಾಗಿದೆ. ಈ ಮಾತು ಅವಲೋಕನ ,ಅಧ್ಯಯನಗಳಿಲ್ಲದ ಬೀಸು ಹೇಳಿಕೆಯಷ್ಟೆ. ಆ ರೀತಿಯಲ್ಲಿ ನೀರು ಹರಿದು ಹೋಗಲು ಸಾಧ್ಯವಿಲ್ಲ ಯಾಕೆಂದರೆ ಸುಮಾರು ಎಂಬತ್ತು ದಿನಗಳ ಕಾಲ ನಿರಂತರವಾಗಿ ಸುರಿದ ಮಳೆ, ಪ್ರತಿವರ್ಷ ನೀರಿನ ಒರತೆಯಾಗುವ ಸ್ಥಳಗಳಲ್ಲದೆ ಅನೇಕ ಹೊಸ ಒರತೆಗಳೂ ಸೃಷ್ಟಿಯಾಗಿದ್ದವು. ಇವೆಲ್ಲ ಪ್ರತಿ ವರ್ಷಕ್ಕಿಂತ 

ಹೆಚ್ಚು ಪ್ರಮಾಣದ ನೀರು ಭೂಮಿಯಲ್ಲಿ ಇಂಗಿರುವುದಕ್ಕೆ ಸಾಕ್ಷಿಯಾಗಿದ್ದವು.ಜಲದ ಕಣ್ಣುಗಳು ಒತ್ತಡದಿಂದ ಸಿಡಿದು ಭೂಮಿಯನ್ನು ತೊಡೆದುಹಾಕಿ ಮಾಡಿರುವ ಅನಾಹುತದಲ್ಲಿ ನಮ್ಮ ಪಾಲೂ ಖಂಡಿತ ಇದೆ. ಇನ್ನು ಮುಂದಾದರೂ ಪ್ರಕೃತಿಯೊಡನೆ ಸಹಬಾಳ್ವೆ ನಡೆಸಲು ನಾವು ಕಲಿಯದಿದ್ದರೆ ಮುಂದೆಯೂ ಕೂಡಾ ಇಂಥದ್ದು ಆಗದಂತೆ ತಡೆಯಲು ಸಾಧ್ಯವಿಲ್ಲ.

 

(20/09/2018)

ತ್ರಿಪುರಾದಲ್ಲಿ ಸಿಪಿಐಎಂ ಮತ್ತು ಬುಡಕಟ್ಟು ಪ್ರತ್ಯೇಕತಾವಾದಿಗಳ ಸಂಘರ್ಷ ! ಐಪಿಎಫ್ ಟಿ ನೆರಳಲ್ಲಿ ಬಿಜೆಪಿ !

                                                                                                                  – ನವೀನ್ ಸೂರಿಂಜೆ

 

ತಕರ್ಜಾಲಕ್ಕೆ ದಾರಿ ಎಂಬ ಬೋರ್ಡ್ ಕಾಣಿಸುತ್ತಿದ್ದಂತೆ ಮಿಲಿಟರಿ ಪಡೆ ಮರಳು ಮೂಟೆಯ ಹಿಂದೆ ಶಸ್ತ್ರಸಜ್ಜಿತರಾಗಿ ನಿಂತ ದೃಶ್ಯ ಕಾಣಿಸುತ್ತದೆ. ಯಾವುದೋ ದೇಶದ ಗಡಿ ಭಾಗಕ್ಕೆ ಬಂದಿದ್ದೇವೆಯೇನೊ ಅನ್ನಿಸುವಷ್ಟರ ಮಟ್ಟಿಗೆ ಇಲ್ಲಿ ಮಿಲಿಟರಿ ಆಡಳಿತವಿದೆ. AFSPA  ಸಶಸ್ತ್ರಕಾಯ್ದೆಯನ್ನು ತ್ರಿಪುರಾ ಸರಕಾರ ಹಿಂಪಡೆದ ಬಳಿಕವೂ ತಕರ್ಜಾಲಕ್ಕೆ ಮಿಲಿಟರಿ ಭದ್ರತೆ ಒದಗಿಸಲಾಗಿದೆ.

ನಾವು ತ್ರಿಪುರಾಕ್ಕೆ ಬಂದಿಳಿದ ಮರುದಿನವೇ ತಕರ್ಜಾಲದ ಅಮರೇಂದ್ರ ನಗರದಲ್ಲಿ ಗಲಭೆಯಾಗಿ ಸಿಪಿಐಎಂ ಕಚೇರಿ ದ್ವಂಸ ಮಾಡಲಾಗಿದೆ ಎಂಬ ಸುದ್ದಿ ದೊರಕಿತು. ನೇರ ತಕರ್ಜಾಲಕ್ಕೆ ತೆರಳಿದೆವು. ಕೃಷಿ ಮತ್ತು ಕಾಡನ್ನು ನಂಬಿಕೊಂಡ ಬುಡಕಟ್ಟುಗಳೇ ಇರುವ ಪ್ರದೇಶ ತಕರ್ಜಾಲ. ಇಲ್ಲಿ 41 ಸಾವಿರ ಮತದಾರರಿದ್ದಾರೆ. ಅದರಲ್ಲಿ ಶೇಕಡಾ 95 ರಷ್ಟು ಬುಡಕಟ್ಟು ಸಮುದಾಯ. ಉಳಿದಂತೆ 5 ಶೇಕಡಾ ಮುಸ್ಲೀಮರು ಮತ್ತು ಬೆಂಗಾಲಿಗಳು. 

ತ್ರಿಪುರಾ ಭಾರತದಿಂದ ಪ್ರತ್ಯೇಕವಾಗಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಬಾಂಗ್ಲಾದೇಶದಿಂದ ನಿರ್ವಹಣೆ ಮಾಡಲಾಗುತ್ತಿರುವ ಭಯೋತ್ಪಾದಕ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರಾ (ಎನ್ಎಲ್ಎಫ್ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್)  ತಕರ್ಜಾಲದಲ್ಲಿ ಪ್ರಾಬಲ್ಯವನ್ನು ಹೊಂದಿದೆ. ಇದೇ ಕಾರಣದಿಂದ ಪ್ರತ್ಯೇಕ ತ್ರಿಪರ್ಲ್ಯಾಂಡ್ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ಐಪಿಎಫ್ ಟಿ (ಇಂಡಿಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ) ಕೂಡಾ ಬಲವಾಗಿ ನೆಲೆಯೂರಿದೆ. ಇದಲ್ಲದೆ ಐಎನ್ ಪಿಟಿ ( ಇಂಡಿಜಿನಿಯಸ್ ನ್ಯಾಶನಲಿಸ್ಟ್ ಪಾರ್ಟಿ ಆಫ್ ತ್ರಿಪುರಾ), ಟಿ ಎಸ್ ಪಿ ( ತ್ರಿಪರ್ಲ್ಯಾಂಡ್ ಸ್ಟೇಟ್ ಪಾರ್ಟಿ) ಕೂಡಾ ಅಸ್ತಿತ್ವದಲ್ಲಿದೆ. ಈ ರೀತಿ ಬುಡಕಟ್ಟು ಪ್ರದೇಶವೊಂದರಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪ್ರತ್ಯೇಕತಾವಾದಿಗಳು ನೆಲೆಯೂರಲು ಸಿಪಿಐಎಂ ಪಾತ್ರ ಇಲ್ಲವೇ ಇಲ್ಲ ಎಂದರೆ ಸುಳ್ಳಾಗುತ್ತದೆ.

 

ತ್ರಿಪುರಾದಲ್ಲಿರುವ ಬಹುತೇಕ ಬುಡಕಟ್ಟು ಸಮುದಾಯಗಳು ತಕರ್ಜಾಲದಲ್ಲಿ ಕಾಣಸಿಗುತ್ತಾರೆ. ದೆಬ್ಬರ್ಮಾ, ಜೊಮಾಟಿಯಾ, ಮಲ್ಸಾಮ್, ಕೈಪಂಗ್, ಮೊರಾಂಕಲ್, ರೂಪಾನಿ, ರಿಯಾಂಗ್, ಗಾರೋ, ಮುಂಡಾ, ಕೊಲಾಯ್, ರುವಾಟಿಯಾ ಬುಡಕಟ್ಟು ಸಮುದಾಯಗಳು ಇವೆ. ಈ ಎಲ್ಲಾ ಬುಡಕಟ್ಟು ಸಮುದಾಯದ ಮಧ್ಯೆ ಕೇಡರ್ ಬೇಸ್ಡ್ ಪೊಲಿಟಿಕ್ಸ್ ಮಾಡಿಕೊಂಡಿದ್ದ ಸಿಪಿಐಎಂ ಇತ್ತಿಚ್ಚಿನ ವರ್ಷಗಳಲ್ಲಿ ಈ ಬುಡಕಟ್ಟು ಗ್ರಾಮಗಳನ್ನು ನಿರ್ಲಕ್ಷ್ಯ ಮಾಡಿದೆ ಎಂಬ ಆರೋಪಗಳು ಇದೆ. ಹೆಚ್ಚಿನ ಬುಡಕಟ್ಟು ಹಾಡಿಗಳನ್ನು ನೋಡಿದಾಗ ಅದು ಡಾಳಾಗಿ ಕಾಣಿಸುತ್ತದೆ. ಶೌಚಾಲಯವೂ ಇಲ್ಲದ, ರಸ್ತೆಯೂ ಇಲ್ಲದ, ನೀರಿನ ಸಂಪರ್ಕವೂ ಇಲ್ಲದ ಬುಡಕಟ್ಟು ಕಾಲನಿಗಳೇ ಬಹುತೇಕ ಇವೆ. ನಮ್ಮನ್ನು ಸರಕಾರಗಳು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಧೋರಣೆ ಬರಲು ಇದು ಕಾರಣವಾಗಿದೆ.

 

 “ನಾನೂ ಹಿಂದೆ ಸಿಪಿಐಎಂ ಜೊತೆ ಇದೆ. ಮೂವತ್ತು ವರ್ಷಗಳಿಂದ ಸರಕಾರ ನಮಗಾಗಿ ಏನೇನೂ ಮಾಡಿಲ್ಲ. ನಮಗೆ ಸಿಪಿಐಎಂ ಕಲಿಸಿಕೊಟ್ಟ ಸಂಘರ್ಷದ ಮಾರ್ಗವನ್ನು ಸಿಪಿಐಎಂ ವಿರುದ್ದವೇ ಮಾಡಬೇಕಿದೆ” ಎನ್ನುತ್ತಾನೆ ಪ್ರಮೀಸ್ ದೆಬ್ಬರ್ಮಾ.
ತಕರ್ಜಾಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರತ್ಯೇಕತಾವಾದಿ ಐಪಿಎಫ್ ಟಿಯ ರಾಜ್ಯಾಧ್ಯಕ್ಷ ನರೇಂದ್ರ ಚಂದ್ರ ದೆಬ್ಬರ್ಮಾ ಸ್ಪರ್ಧೆ ಮಾಡುತ್ತಿದ್ದಾರೆ. ಆದ್ದರಿಂದ ಇದು ತ್ರಿಪುರಾ ಪ್ರತ್ಯೇಕತಾವಾದಿಗಳಿಗೆ ಪ್ರತಿಷ್ಟೆ ಮತ್ತು ಅಸ್ತಿತ್ವದ ಪ್ರಶ್ನೆ. ಇಲ್ಲಿ ನಿರಂತರವಾಗಿ ಗೆದ್ದು ಬರುತ್ತಿದ್ದ ಸಿಪಿಐಎಂನ ಹಾಲಿ ಶಾಸಕ ನಿರಂಜನ ದೆಬ್ಬರ್ಮಾಗೆ ಈ ಬಾರಿ ಸಿಪಿಐಎಂ ಟಿಕೆಟ್ ನೀಡಿಲ್ಲ. ನಿರಂಜನ್ ದೆಬ್ಬರ್ಮಾರ ಕಳಪೆ ಸಾಧನೆ, ಬುಡಕಟ್ಟುಗಳ ಮದ್ಯೆ ಸಂಘಟನೆ ಮಾಡದಿರುವುದು, ಬುಡಕಟ್ಟುಗಳ ಅಭಿವೃದ್ದಿಗೆ ಒತ್ತು ನೀಡದಿರುವುದು ನಿರಂಜನ್ ದೆಬ್ಬರ್ಮಾಗೆ ಟಿಕೆಟ್ ನಿರಾಕರಿಸಲು ಕಾರಣಗಳು. ಈ ಬಾರಿ ಸಿಪಿಐಎಂ ನಿಂದ ರಮೀಂದ್ರ ದೆಬ್ಬರ್ಮಾ ಸ್ಪರ್ಧೆ ನಡೆಸುತ್ತಿದ್ದಾರೆ. ಆಟಕ್ಕುಂಟು ಲೆಕ್ಕಕ್ಕಿಲ್ಲದ ಕಾಂಗ್ರೆಸ್ ನಿಂದ ಸ್ಯಾಮ್ಸಂಗ್ ದೆಬ್ಬರ್ಮಾ, ಐಎನ್ ಪಿಟಿಯಿಂದ ಓಮಿಯಾ ಕುಮಾರ್ ದೆಬ್ಬರ್ಮಾ, ಟಿಎಸ್ ಪಿಯಿಂದ ಚಿತ್ತರಂಜನ್ ದೆಬ್ಬರ್ಮಾ ಕಣದಲ್ಲಿದ್ದಾರೆ. ಪ್ರತ್ಯೇಕತಾವಾದಿಗಳೇ ಆಗಿರುವ ಐಎನ್ ಪಿಟಿ ಮತ್ತು ಟಿಎಸ್ ಪಿ ಬುಡಕಟ್ಟುಗಳ ಮತ ಸೆಳೆದಷ್ಟೂ ಆಡಳಿತರೂಢ ಸಿಪಿಐಎಂಗೆ ಲಾಭವಾಗಲಿದೆ. ಇಲ್ಲದೇ ಇದ್ದಲ್ಲಿ ತಕರ್ಜಾಲದಲ್ಲಿ ಐಪಿಎಫ್ ಟಿ ರಾಜ್ಯಾಧ್ಯಕ್ಷ ನರೇಂದ್ರ ಚಂದ್ರ ದೆಬ್ಬರ್ಮಾ ಸುಲಭದಲ್ಲಿ ಗೆಲುವು ಸಾಧಿಸಲಿದ್ದಾರೆ.
ತಿಪುರಾದಲ್ಲಿ ತಕರ್ಜಾಲವೇ ಪ್ರತಿಷ್ಟೆಯ ಕಣವಾಗಿದೆ. ಇಡೀ ತ್ರಿಪುರಾದ ರಾಜಕೀಯ ಚಿತ್ರಣವನ್ನು ತಕರ್ಜಾಲ ನೀಡುತ್ತದೆ. ತ್ರಿಪುರಾದಲ್ಲಿ ಎದ್ದ ಪ್ರತ್ಯೇಕತಾವಾದಿಗಳ ಕೂಗು, ಸರಕಾರದ ಸ್ಪಂದನೆ, AFSPA ಕಾಯ್ದೆ, ಅಟಾನಮಸ್ ಡಿಸ್ಟ್ರಿಕ್ಟ್ ಕೌನ್ಸಿಲ್ ನ ಕಾರ್ಯವೈಖರಿ ಮತ್ತು ಇವೆಲ್ಲದರ ಪರಿಣಾಮದ ಇಂದಿನ ತ್ರಿಪುರಾದ ಬದಲಾದ ರಾಜಕಾರಣವನ್ನು ಇದೊಂದೇ ಕ್ಷೇತ್ರದಲ್ಲಿ ನೋಡಿಬಿಡಬಹುದು.
ನಾವು ತಕರ್ಜಾಲ ವಿಧಾನಸಭಾ ಕ್ಷೇತ್ರದ ನಬಚಂದ್ರಪರ ಬುಡಕಟ್ಟು ಗ್ರಾಮಕ್ಕೆ ತೆರಳಿದೆವು. ಅಲ್ಲಿ ಫೆಬ್ರವರಿ 11 ರ ರವಿವಾರ ಸಿಪಿಐಎಂ ರ‌್ಯಾಲಿ ಆಯೋಜಿಸಿತ್ತು. ಬೂತ್ ಕಚೇರಿಯಿಂದ ಇನ್ನೇನು ರ‌್ಯಾಲಿ ಹೊರಡಬೇಕು ಅನ್ನುವಷ್ಟರಲ್ಲಿ ಕಲ್ಲು, ದೊಣ್ಣೆಗಳಿಂದ ಸಿಪಿಐಎಂ ಕಚೇರಿ ಮೇಲೆ ಐಪಿಎಫ್ ಟಿ ಕಾರ್ಯಕರ್ತರು ದಾಳಿ ನಡೆಸಿದರು. ನಾಲ್ಕು ಜನ ಸಿಪಿಐಎಂ ಕಾರ್ಯಕರ್ತರಿಗೆ ಗಾಯಗಳಾದವು. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇಬ್ಬರು ಐಪಿಎಫ್ ಟಿ ಕಾರ್ಯಕರ್ತರಿಗೂ ಗಾಯಗಳಾದವು.
ಸಿಪಿಐಎಂ ಕಚೇರಿಯ ಮೇಲೆ ದಾಳಿ ನಡೆಸಿದ ಐಪಿಎಫ್ ಟಿ ತಂಡದ ಪ್ರಮುಖನಾಗಿದ್ದ ಅರಬಿಂದೋ ದೆಬ್ಬರ್ಮಾರನ್ನು ಮಾತನಾಡಿಸಿದ್ವಿ. “ಇನ್ನೂ ಎಷ್ಟು ದಿನ ಅಂತ ನೋಡೋದು ? ದಾಳಿ ಮಾಡಿದ್ವಿ. ಇನ್ನೂ ಮಾಡ್ತೀವಿ. ಇನ್ನು  ಸುಮ್ಮನಿರೋಕೆ ಆಗಲ್ಲ” ಎಂದರು.

 

“ಸಿಪಿಐಎಂ ಅಭ್ಯರ್ಥಿಯೇ ನೇರವಾಗಿ ನಮ್ಮ ಐಪಿಎಫ್ ಟಿ ಕಚೇರಿ ಎದುರು ಬಂದು ಕಾರು ನಿಲ್ಲಿಸಿದ್ರು. ಕಾರಿನಿಂದ ಇಳಿದ ಸಿಪಿಐಎಂ ಕಾರ್ಯಕರ್ತರು ನೇರ ಕಚೇರಿಗೆ ನುಗ್ಗಿದ್ರು. ಕಚೇರಿಯಿಂದ ನಾವು ಹೊರಬರಲೂ ಸಾಧ್ಯವಾಗಲಿಲ್ಲ. ಇನ್ನಷ್ಟೂ ಜನ ಬಂದು ಐಪಿಎಫ್ ಟಿ ಕಚೇರಿ ದ್ವಂಸ ಮಾಡಿದ್ರು. ನಮ್ಮ ಕಚೇರಿ ದ್ವಂಸವಾದ ಬಳಿಕವಷ್ಟೇ ನಾವು ಸಿಪಿಐಎಂ ಕಚೇರಿಗೆ ದಾಳಿ ಮಾಡಿದ್ವಿ” ಎನ್ನುತ್ತಾರೆ ಶೊಮಂತೊ ದೆಬ್ಬರ್ಮಾ. ಪ್ರತ್ಯೇಕತಾವಾದಿ ಐಪಿಎಫ್ ಟಿ ಯಾವ ಪ್ರಚೋದನೆಯೂ ಇಲ್ಲದೆ ನಮ್ಮ‌ ಮೇಲೆ ದಾಳಿ ನಡೆಸಿತು. ಈ ಹಿಂದಿನಿಂದಲೂ ಉಗ್ರವಾದಿ ಚಟುವಟಿಕೆ ನಡೆಸುತ್ತಿರುವ ಐಪಿಎಫ್ ಟಿ ಗೆ ಈ ಬಾರಿ ಸಿಪಿಐಎಂ ಮೇಲೆ ದಾಳಿ ನಡೆಸಲೆಂದೇ ಬಿಜೆಪಿಯಿಂದ ಹಣ ಹರಿದು ಬಂದಿದೆ ಎನ್ನುತ್ತಾರೆ ಸ್ಥಳೀಯ ಸಿಪಿಐಎಂನ  ಧೀರೆಂದ್ರ ದೆಬ್ಬಾರ್ಮಾ.

 

ಐಪಿಎಫ್ ಟಿ ಪಕ್ಷವು ಬಿಜೆಪಿಯ ಮೈತ್ರಿಯೊಂದಿಗೆ 9 ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಐಎನ್ ಪಿಟಿ ಪಕ್ಷವು ಕಾಂಗ್ರೆಸ್ ಮೈತ್ರಿಯಲ್ಲಿ ಸ್ಪರ್ಧೆ ನಡೆಸಿತ್ತು. ಈ ಬಾರಿ ಐಪಿಎಫ್ ಟಿ ಪಕ್ಷದ ಮೂಲಕ ತ್ರಿಪುರಾದ ಕಾಡಿನ  ಗ್ರಾಮಗಳಿಗೆ ಬಿಜೆಪಿ ಪ್ರವೇಶ ಮಾಡಿದೆ. ತ್ರಿಪುರಾದ ಬುಡಕಟ್ಟು ಮಕ್ಕಳು ಮೋದಿ ಮುಖವಾಡ ಧರಿಸಿ ಆಟವಾಡುವ ದೃಶ್ಯಗಳು ಗುಡ್ಡಗಾಡು ಬುಡಕಟ್ಟು ಕಾಲನಿಯಲ್ಲಿ ಕಾಣಸಿಗುತ್ತಿದೆ. ಇದು ಭವಿಷ್ಯದ ತ್ರಿಪುರಾದ ಸೂಚನೆಯೇ ಎಂಬ ಪ್ರಶ್ನೆಗಳು ಮೂಡುತ್ತವೆ.

 

(ಪತ್ರಕರ್ತ ನವೀನ್ ಸೂರಿಂಜೆ ಗೆಳೆಯರೊಂದಿಗೆ ಚುನಾವಣೆ ಸಮಯದಲ್ಲಿರುವ ತ್ರಿಪುರ ಪ್ರವಾಸದಲ್ಲಿದ್ದಾರೆ.)

ಕಲ್ಯಾಣ ಕರ್ನಾಟಕದಲ್ಲೊಂದು ಜ್ಞಾನ ದಾಸೋಹ

-ಶ್ರೀಧರ ಪ್ರಭು

ಈಗಿನ ದಿನಮಾನದಲ್ಲಿ ಒಂದೊಳ್ಳೆ ಮೌಲಿಕ ಕಾರ್ಯಕ್ರಮ ಸಂಘಟಿಸುವುದಕ್ಕಿಂತ ಹೆಚ್ಚು ಕಷ್ಟದ ಕೆಲಸ ಇನ್ನೊಂದಿಲ್ಲ. ನೂರು ಜನ ಬರಬಹುದು ಎಂದುಕೊಂಡ ಕಡೆ ಇಪ್ಪತ್ತು ಜನ ಬಂದಿರುತ್ತಾರೆ. ಸರಕಾರದ ಕಾರ್ಯಕ್ರಮವಾಗಿದ್ದರಂತೂ ಹೆಚ್ಚಿನ ಜನ ಬರುವುದು ಪ್ರಯಾಣ ಭತ್ಯೆಗಾಗಿ. ಒಂದು ಬಾರಿ ಹೆಸರು ನೋಂದಾಯಿಸಿ ಹೋದವರು ಗೋಷ್ಠಿಗಳ ಕಡೆಗೆ ತಲೆಯಿಟ್ಟೂ ಮಲಗುವುದಿಲ್ಲ. ಇನ್ನು ಈ ಗೋಷ್ಠಿಗಳು ಬಿಸಿಲು ನಾಡಿನಲ್ಲಿದ್ದರಂತೂ ಯಾವ ನರಪಿಳ್ಳೆಯೂ ಇತ್ತ ಸುಳಿಯುವುದಿಲ್ಲ.

ಇದೆಲ್ಲ ನನಗೆನಿಸಿದ್ದು ಮೊನ್ನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ೮ ಮತ್ತು ೯ ನೇ ತಾರೀಕು ಬಾಬಾ ಸಾಹೇಬರ ವಿಚಾರಗಳ ಕುರಿತು ಎರಡು ದಿನಗಳ ವಿಚಾರ ಗೋಷ್ಠಿಗೆ ನನ್ನನ್ನು ಆಹ್ವಾನಿಸಿದಾಗ.

ಹೆಚ್ಚೆಂದರೆ ಹತ್ತಿಪ್ಪತ್ತು ಜನ ಕಾಟಾಚಾರಕ್ಕೆಂದು ಸೇರಿರುತ್ತಾರೆ. ಆದರೂ ಅವರ ಉತ್ಸಾಹಕ್ಕೆ ಭಂಗ ಬರಬಾರದು ಎಂದುಕೊಂಡು ಸ್ವಲ್ಪ ಮಟ್ಟಿನ ಅನಾರೋಗ್ಯವನ್ನೂ ಕಡೆಗಣಿಸಿ ರಣ ಬಿಸಿಲಿನ ಹೆದರಿಕೆಯನ್ನೂ ಮೆಟ್ಟಿನಿಂತು ಜೇವರ್ಗಿಗೆ ಬಂದಿಳಿದಿದ್ದೆ.

ಜೇವರ್ಗಿಯ ಯುವ ಪ್ರಾಧ್ಯಾಪಕರಾದ ಡಾ. ಕರಿಗುಳೇಶ್ವರ ಮತ್ತು ಅಲ್ಲಿನ ಗ್ರಂಥಾಲಯದ ವಿಜ್ಞಾನದ ಮುಖ್ಯಸ್ಥರಾದ ವಿನೋದ್ ಕುಮಾರ್ ಮತ್ತಿತರರ ಯುವಜನರ ತಂಡ ಜೇವರ್ಗಿಯಲ್ಲಿ ವಿಚಾರ ಸಂಕಿರಣವನ್ನು ನಿಜವಾಗಲೂ ರಾಷ್ಟ್ರ ಮಟ್ಟಕ್ಕೇರಿಸಿದ್ದರು. ಪ್ರತಿನಿಧಿಗಳ ಪ್ರಯಾಣ ವ್ಯವಸ್ಥೆ, ಊಟ, ಉಪಚಾರ, ವಸತಿsridhar prabhuಯಿಂದ ಮೊದಲ್ಗೊಂಡು ವಿಷಯ ಮಂಡನೆಯವರೆಗೆ ಯಾವ ವಿಚಾರದಲ್ಲಿ ಪರಿಗಣಿಸಿದರೂ ಇದನ್ನೊಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣವೆಂದು ಖಚಿತವಾಗಿ ಹೇಳಬಹುದಿತ್ತು.

ಎರಡು ದಿನ ಮುಂಚಿತವಾಗಿ ಸ್ವಯಂ ಚಾಲಿತ ಎಸ್ ಎಂ ಎಸ್ ಅಲರ್ಟ್ ವ್ಯವಸ್ಥೆ ಮಾಡಲಾಗಿ ಎಲ್ಲರಿಗೂ ಏಕ ಕಾಲಕ್ಕೆ ಸಂಕಿರಣದ ವೇಳಾಪಟ್ಟಿ ಲಭ್ಯವಿತ್ತು. ಹಾಗೆಯೆ, ಒಂದು ವೆಬ್ಸೈಟಿಗೆ ಸಹ ಚಾಲನೆ ನೀಡಿ ಆನ್ಲೈನ್ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. ಪ್ರಿಂಟರ್, ಪ್ರೊಜೆಕ್ಟರ್ ಮತ್ತು ಧ್ವನಿಮುದ್ರಕ ವ್ಯವಸ್ಥೆ ಜೊತೆಗೆ ವಾತಾನುಕೂಲ ಪಂಖೆಗಳು ನಮ್ಮ ಸ್ವಾಗತಕ್ಕೆ ಕಾದಿದ್ದವು. ಪ್ರಮುಖವಾಗಿ, ಯಾವ ಗೋಷ್ಠಿಯೂ ಸಮಯವನ್ನು ಮೀರಲಿಲ್ಲ. ಎಲ್ಲಾ ಗೋಷ್ಠಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಪಾಲ್ಗೊಂಡು ಪ್ರಬಂಧ ಮಂಡಿಸಿದರು.

ಪ್ರಬಂಧಮಂಡನೆಯಿಂದ ಮೊದಲ್ಗೊಂಡು ಇಡೀ ವಿಚಾರಗೋಷ್ಠಿಯನ್ನು ಆಂಗ್ಲಭಾಷೆಯಲ್ಲೇ ನಡೆಸಿಕೊಡಲಾಗಿತ್ತು. ನನ್ನಂಥವರು ಕೆಲವರು ಕನ್ನಡದಲ್ಲಿ ಮಾತಾಡಿದ್ದು ಬಿಟ್ಟರೆ ಹೈದರಾಬಾದ್ ಕರ್ನಾಟಕ ಹಳ್ಳಿಗಾಡಿನಿಂದ ಬಂದ ಬಹುತೇಕ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸುಲಲಿತ ಇಂಗ್ಲಿಷ್ ಭಾಷೆಯಲ್ಲೇ ಪ್ರಬಂಧ ಮಂಡಿಸಿದರು. ನಾನಿಲ್ಲಿ ಹೇಳಿದ್ದು ಕೇವಲ ೩೦-೪೦% ವಿಚಾರಗಳನ್ನು ಮಾತ್ರ. ಹೆಚ್ಚಿನದನ್ನೂ ನಾನೇ ಕಣ್ಣಾರೆ ನೋಡಿದ್ದೆನಾದರೂ ನಂಬಿಸಿಕೊಳ್ಳಲು ನನಗೇ ಸಾಧ್ಯವಾಗುತ್ತಿಲ್ಲ! ಹೆಚ್ಚು ಹೇಳಲು ಹೋದರೆ ನೀವು ಉತ್ಪ್ರೇಕ್ಷೆಯೆಂದುಕೊಂಡು ಬಿಡುವ ಸಂಭವವಿದೆ!

ಜೇವರ್ಗಿಯ ಜನಸಂಖ್ಯೆ ಹೆಚ್ಚೆಂದರೆ ಇಪ್ಪತ್ತೈದು ಸಾವಿರವಿರಬಹುದು. ಇಲ್ಲಿನ ಈ ಸರಕಾರಿ ಕಾಲೇಜಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಕಾಲೇಜಿನ ಅತ್ಯುನ್ನತ ಗುಣಮಟ್ಟದಿಂದಾಗಿ ಇಲ್ಲಿ ಯಾವುದೇ ಖಾಸಗಿ ಕಾಲೇಜು ಸಹ ನಡೆಯುತ್ತಿಲ್ಲ. ಯಾರೂ ಖಾಸಗಿ ಕಾಲೇಜುಗಳತ್ತ ಮೂಸಿಯೂ ನೋಡುತ್ತಿಲ್ಲ. ಅತ್ಯಂತ ಕಡಿಮೆ ಮಾನವ ಮತ್ತು ಆರ್ಥಿಕ ಸಂಪನ್ಮೂಲಗಳನ್ನಿಟ್ಟುಕೊಂಡು ಕಾಲೇಜು ನಡೆಸುತ್ತಿರುವ ಪ್ರಾಚಾರ್ಯರು ಸಿಬ್ಬಂದಿಗೆ ಎಲ್ಲ ರೀತಿಯ ಸ್ವಾತಂತ್ರ್ಯವನ್ನೂ ಕೊಟ್ಟಿದ್ದಾರೆ. ಸಿಬ್ಬಂದಿಯಲ್ಲಿ ಈರ್ಷೆ ಮತ್ತು ಕೀಳು ಭಾವನೆಗಳಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸಮಾಡುತ್ತಿದ್ದಾರೆ. ಬಾಬಾ ಸಾಹೇಬರ ಕಾರ್ಯಕ್ರಮಗಳಲ್ಲಿ ಎಲ್ಲಾ ಜಾತಿ ಮತ್ತು ಧರ್ಮಗಳವರು ಆಸಕ್ತಿಯಿಂದ ಪಾಲ್ಗೊಂಡು ದುಡಿಯುತ್ತಿದ್ದಾರೆ

ಹೈದರಾಬಾದ್ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಮಿಯನ್ ಆದಿತ್ಯ ಬಿಸ್ವಾಸ್ ಸಾಕಷ್ಟು ಆರ್ಥಿಕ ಸಹಕಾರ ನೀಡಿದ್ದಾರೆ ಮತ್ತು ಸ್ಥಳೀಯ ಮುಖಂಡರು ಊಟದ ವ್ಯವಸ್ಥೆಯನ್ನೂ ಕಲ್ಪಿಸಿಕೊಟ್ಟಿದ್ದಾರೆ. ಇವೆಲ್ಲವಕ್ಕೂ ಹೆಚ್ಚಾಗಿ ಅಲ್ಲಿನ ವಿದ್ಯಾರ್ಥಿಗಳು ಹಗಲಿರುಳೂ ದುಡಿದು ವಿಚಾರ ಸಂಕಿರಣಕ್ಕೆ ಅದ್ಭುತ ಯಶಸ್ಸು ದೊರಕಿಸಿದ್ದಾರೆ.

ಇದೆಲ್ಲವನ್ನೂ ನೋಡಿದರೆ ಕಲ್ಯಾಣ ಕರ್ನಾಟದ ಕನಸು ಇಲ್ಲಿಂದಲೇ ನಿಜವಾಗುವಂತೆ ಭಾಸವಾಗುತ್ತದೆ!

ಅಂದ ಹಾಗೆ ನಿಮಗೊಂದು ವಿಶೇಷ ಗೊತ್ತಿರಲಿ. ಕಲಬುರಗಿ ಮತ್ತು ಜೇವರ್ಗಿಯ ದಾರಿಯಲ್ಲಿರುವ ಕಿರಣಗಿ ಎಂಬ ಪುಟ್ಟ ಗ್ರಾಮದ ಬಗ್ಗೆ ೧೯೬೨ ರಲ್ಲಿ ನಮ್ಮ ದೇಶದ ಮೇಲೆ ಚೀನಾ ಅಕ್ರಮಣವಾದಾಗ ನಿಜಲಿಂಗಪ್ಪನವರ ಸರಕಾರದಲ್ಲಿದ್ದ ಯುವ ಸಚಿವ ವೀರೇಂದ್ರ ಪಾಟೀಲರು ಈ ಗ್ರಾಮಕ್ಕೆ ಭೇಟಿಯಿತ್ತು ದೇಶಕ್ಕೆ ಸಹಾಯ ಮಾಡುವಂತೆ ಗ್ರಾಮಸ್ಥರನ್ನು ಕೋರಿದಾಗ, ಈ ಗ್ರಾಮದ ಪ್ರತಿಯೊಬ್ಬರೂ ತಮ್ಮ ಬಳಿಯಲ್ಲಿದ್ದ ಚಿನ್ನವೆಲ್ಲವನ್ನೂ ದೇಶಕ್ಕೆ ಧಾರೆಯೆರೆದು ಕೊಟ್ಟಿದ್ದರು!! ಹೀಗೆ ಈ ಒಂದೇ ಗ್ರಾಮದಿಂದ ನೂರು ತೊಲ ಬಂಗಾರವನ್ನು ದೇಶಕ್ಕಾಗಿ ನೀಡಿದ ಕೀರ್ತಿಗಾಗಿ ಕಿರಣಗಿಯನ್ನು ಅಂದಿನಿಂದ ಹೊನ್ನ ಕಿರಣಗಿ ಎಂದು ಕರೆಯಲಾಗುತ್ತದೆ!

ಅಣ್ಣ ಬಸವಣ್ಣನ ಅನುಭವ ಮಂಟಪದ ಖನಿ, ಬಂದೇನವಾಜರ ಕಾರುಣ್ಯದ ಬೀಡು, ವಿಜ್ಞಾನೇಶ್ವರನ ಜ್ಞಾನಸ್ಥಾನ, ಅಮೋಘವರ್ಷರ ವೈಭವದ ನಾಡು ಇನ್ನೆಷ್ಟು ಅದ್ಭುತಗಳನ್ನು ತನ್ನ ಗರ್ಭದಲ್ಲಿಟ್ಟು ಸಲಹುತ್ತಿದೆಯೋ ಬಲ್ಲವರ್ಯಾರು!!

“ನಾವು ಇದುವರೆಗೆ 29 ಚುನಾವಣೆ ಗೆದ್ದಿದ್ದೇವೆ”

ಆಕ್ಟಿವಿಸಂ ಮತ್ತು ಚುನಾವಣಾ ರಾಜಕಾರಣ

-ಪ್ರಸಾದ್ ರಕ್ಷಿದಿ

ಚುನಾವಣೆಗಳಲ್ಲಿ ಆಕ್ಟಿವಿಸ್ಟರುಗಳ ಸೋಲಿನ ಬಗ್ಗೆ ಎಲ್ಲ ಪತ್ರಿಕೆಗಳಲ್ಲೂ ನಿರಾಶೆ ಹಾಗು ಮತದಾರರ ಸಿನಿಕತನದ ಬಗ್ಗೆ ಲೇಖನಗಳು ಹೇಳಿಕೆಗಳು ಬರುತ್ತಿವೆ. ‘ಚುನಾವಣಾ ರಾಜಕೀಯವೇ ಬೇರೆ’ ಎಂಬ ಮಾತನ್ನು ಉದಾಹರಿಸಿ, ಆ raxidiಧೋರಣೆಯೇ ತಪ್ಪು ಅವಕಾಶವಾದಿಗಳದ್ದು ಎಂಬ ಟೀಕೆಯೂ ನಡೆಯುತ್ತಿದೆ. ಇದೆಲ್ಲದರ ಹಿಂದೆ ಆಕ್ಟಿವಿಸ್ಟರು ಜನರಿಗಾಗಿ ಕೆಲಸ ಮಾಡುತ್ತಾರೆ. ಆದ್ದರಿಂದ ಜನ ಅರಿತು ಅವರಿಗೆ ಮತನೀಡಬೇಕೆಂಬ ಆಗ್ರಹವಿದೆ.

 
ಆದರೆ ಈ ರೀತಿ ಬರೆಯುವ ಹೆಚ್ಚಿನ ಬರಹಗಾರರರು ಅಕಡೆಮಿಕ್ ವಲಯದವರು. ಮತ್ತು ಇವರು ಹೆಚ್ಚೆಂದರೆ ಭಾಷಣದ ಮೂಲಕ ಮತಯಾಚನೆ ಮಾಡುವವವರು. ಅದಕ್ಕಿಂತ ಮುಂದೆಹೋಗಿ ಮತದಾರನ ನೇರ ಸಂಪರ್ಕಕ್ಕೆ ಬರುವುದೇ ಕಡಿಮೆ. ಬಂದರೂ ನಗರ ಪ್ರದೇಶಗಳಲ್ಲಿ ಬಂದಾರೇ ಹೊರತು ಹಳ್ಳಿಗಳತ್ತ ಅವರು ಮುಖಮಾಡಿದ್ದು ಇಲ್ಲ. ಹಾಗಾಗಿ ಇವರು ಒಂದು ರೀತಿಯ ದೂರ ವಿಶ್ಲೇಷಕರು. ಈಗ ಇರೋಮ್ ಶರ್ಮಿಲಾ ವಿಚಾರದಲ್ಲೂ ಇಂಥದ್ದೇ ಲೇಖನಗಳು ಹಲವು ಬಂದಿವೆ. (ಮಣಿಪುರ ಪರಿಸ್ಥಿತಿ ನನಗೆ ಗೊತ್ತಿಲ್ಲ ಆದರೆ ಪತ್ರಿಕೆ ನೋಡಿ ಬರೆಯುವವರಿಗಿಂತ ಅಲ್ಲಿನವರ ಅಭಿಪ್ರಾಯ ಮುಖ್ಯ)

 
ನಮ್ಮಲ್ಲಿ ಸಾಮಾನ್ಯವಾದ ನಿಲುವಿದೆ. ಅದು ಆಕ್ಟಿವಿಸಂ ಎಂದರೆ “ಸರ್ಕಾರದ ವಿರುದ್ಧ” ಎಂದು. ಇದು ಒಂದು ರೀತಿ ‘ಖಾಯಂ ವಿರೋಧ ಪಕ್ಷದಲ್ಲಿರು’ ಎಂದ ಹಾಗೆ. ಆದರೆ ಆಕ್ಟಿವಿಸಂ ಹಾಗೆಯೇ ಇರಬೇಕಾಗಿಲ್ಲ ಮತ್ತು ಇರಬಾರದು ಕೂಡಾ. ಈ ವಿಚಾರಕ್ಕೆ ಮುಂದೆ ಬರುತ್ತೇನೆ.
ನಾವೊಂದಷ್ಟು ಜನ (ಆಗ ಬೆರಳೆಣಿಕೆಯಷ್ಟು) ಗೆಳೆಯರು 1976-77 ಒಂದು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕರ್ತರಾಗಿ ಕೆಲಸ ಪ್ರಾರಂಭಿಸಿದೆವು. ನಾವು ಕೆಲಸ ಆರಂಭಿಸಿದ್ದು ಜೆ.ಪಿ.ಯವರ ಸಂಪೂರ್ಣ ಕ್ರಾಂತಿಯ ಕರೆಯನ್ನು ನಂಬಿ. ಆಗ ನಮ್ಮಲ್ಲಿ ಓಟಿನ ಹಕ್ಕೂ ಬಂದಿರಲಿಲ್ಲ. ನಮ್ಮ ಗುಂಪು ನಮ್ಮ ಸುತ್ತಲಿನ ಗ್ರಾಮಗಳ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದವು. ಅದು ರೈತ-ಕಾರ್ಮಿಕ-ದಲಿತ ಹೋರಾಟಗಳು, ಇನ್ನಿತರ ಜಮೀನು- ಕುಟುಂಬ ವಿವಾದಗಳು, ಊರಜಗಳ ಹೊಡೆದಾಟಗಳು, ಗಣಪತಿ,ಚೌಡಿ ಉತ್ಸವ, ಉರುಸ್ ಎಲ್ಲದರಲ್ಲೂ ನಮ್ಮ ಬಳಗವರಿರುತ್ತಿದ್ದರು. ಹಾಗೇ ನಾಟಕ, ಕಲೆ. ಯಕ್ಷಗಾನ, ಕ್ರೀಡೆ. ಸಾಕ್ಷರತಾ ಆಂದೋಲನ, ಊರಿನ, ಶಾಲೆ ಆಸ್ಪತ್ರೆಗಾಗಿ ಪ್ರಯತ್ನಗಳು, ಕುಡಿಯುವ ನೀರಿಗಾಗಿ ಹೋರಾಟ, ವಸತಿ ಯೋಜನೆಗಳು, ಜನರ ದಿನ ನಿತ್ಯದ ಸಮಸ್ಯೆಗಳು, ಎಲ್ಲದರಲ್ಲೂ ನಾವಿದ್ದೆವು. ಆದರೆ ನಮ್ಮ ಹೋರಾಟ ಕೆಲವುಬಾರಿ ಸರ್ಕಾರದ ವಿರುದ್ಧವೂ ಕೆಲವು ಬಾರಿ ಸರ್ಕಾರದ್ದೇ ಯೋಜನೆಗಳ ಅನುಷ್ಟಾನಕ್ಕಾಗಿಯೂ ಇರುತ್ತಿತ್ತು. (ಉದಾ: ಅರಣ್ಯೀಕರಣದ ವಿಷಯಬಂದಾಗ ರೈತ ಚಳುವಳಿಯಲ್ಲಿದ್ದ ನಾವು ರೈತ ಸಂಘದ ನಿಲುವಿಗೆ ವಿರುದ್ಧವಾಗಿ ಅರಣ್ಯ ಇಲಾಖೆಗೆ ನಮ್ಮೂರಿನಲ್ಲಿ ನೂರಾರು ಎಕರೆ ಅರಣ್ಯೀಕರಣಕ್ಕೆ ಬೆಂಬಲವಾಗಿ ನಿಂತಿದ್ದೆವು, ನಮ್ಮ ಪಂಚಾಯತಿ ವ್ಯಾಪ್ತಿಯಲ್ಲೇ ಏಳುನೂರು ಎಕರೆಗೂ ಹೆಚ್ಚು ಈ ರೀತಿಯ ಅರಣ್ಯವಿದೆ)

 
ನಮ್ಮ ಬಳಗ 77ರಲ್ಲೇ ಚುನಾವಣಾ ರಾಜಕೀಯಕ್ಕೆ ಇಳಿದಿತ್ತು. ಇಂದಿರಾಗಾಂಧಿ ವಿರುಧ್ಧ. ಆದರೆ ಪ್ರಥಮ ಗೆಲುವನ್ನು ಕಂಡದ್ದು ಸುಮಾರು ಆರು ವರ್ಷಗಳನಂತರ ಪಂಚಾಯತ್ ಚುನಾವಣೆಯಲ್ಲಿ. ಅಲ್ಲಿಂದೀಚೆ ಇಂದಿನವರೆಗೆ ನಾವು ಪಂಚಾಯತಿಯಿಂದ ಪಾರ್ಲಿಮೆಂಟಿನವರೆಗೆ ಅಂದರೆ ಎಲ್ಲ ಮಂಡಲ, ತಾಲ್ಲೂಕು, ಜಿಲ್ಲೆ, ಎ.ಪಿ.ಎಂ.ಸಿಗಳೂ ಸೇರಿ 37 ಚುನಾವಣೆಗಳನ್ನು ಎದುರಿಸಿದ್ದೇವೆ. ಇಂದಿನವರೆಗೆ 29 ಚುನಾವಣೆಗಳನ್ನು ಗೆದ್ದಿದ್ದೇವೆ! ಅಂದರೆ ಸಣ್ಣ ಚುನಾವಣೆಗಳಲ್ಲಿ ನಮ್ಮ ಅಭ್ಯರ್ಥಿಗಳೇ ನೇರವಾಗಿ ಗೆದ್ದಿದ್ದಾರೆ. ವಿಧಾನ ಸಭೆ, ಅಥವಾ ಲೋಕ ಸಭಾ ಚುನಾವಣೆಯಲ್ಲಿ ಸೋತಾಗಲೂ ನಮ್ಮೂರಿನಲ್ಲಿ ಮುನ್ನಡೆ ಉಳಿಸಿಕೊಂಡಿದ್ದೇವೆ. ಆದರೆ ಇದರಲ್ಲಿ ಬಹಳ ಮುಖ್ಯವಾಗಿ ಗಮನಿಸಬೇಕಾದ ವಿಷಯವೆಂದರೆ, ನಮ್ಮ ಬಳಗದ ಸದಸ್ಯರಲ್ಲಿ ಆಕ್ಟಿವಿಸಂನ ಮುಂಚೂಣಿಯಲ್ಲಿದ್ದವರು ಯಾರೂ ಯಾವುದೇ ಚುನಾವಣೆ ಎದುರಿಸಲೇ ಇಲ್ಲ. ನಾವು ನಮ್ಮ ಗೆಳೆಯರಲ್ಲೇ ಆದಷ್ಟು ಉತ್ತಮರನ್ನು ಅಭ್ಯರ್ಥಿಯನ್ನಾಗಿಸುತ್ತಿದ್ದೆವು. (ಅವರಲ್ಲೂ ಕೆಲವರು ಗೆದ್ದನಂತರ ಏನೇನೋ ಮಾಡಿದ ಉದಾಹರಣೆ ಇದೆ!) ಇದರಿಂದ ಮತಯಾಚನೆಯೂ ಸುಲಭವಾಗುತ್ತಿತ್ತು. “ಇವರನ್ನು ಗೆಲ್ಲಿಸಿ ಕೊಡಿ ಇವರಲ್ಲಿ ನಾವು ಕೆಲಸಮಾಡಿಸಿಕೊಡುತ್ತೇವೆ ಒಂದುವೇಳೆ ಇವರು ಮಾಡಲೇ ಇಲ್ಲ ಅಂದ್ಕೊಳಿ ನಾವು ನಿಮ್ ಜೊತೆ ಇದ್ದೇ ಇರ್ತೀವಲ್ಲ” ಎನ್ನುತ್ತಿದ್ದೆವು. ಜನ ನಮ್ಮನ್ನು ಬಿಟ್ಟುಕೊಡಲಿಲ್ಲ. ನಮ್ಮ ಗ್ರಾಮಪಂಚಾಯತಿ ನಿರಂತರ ಇಪ್ಪತೈದು ವರ್ಷಗಳ ಕಾಲ ನಮ್ಮ ಬಳಗದ ಕೈಯಲ್ಲಿತ್ತು. ಈಗ ಎರಡು ಚುನಾವಣೆಗಳಲ್ಲಿ ನಾವು (ಹಿರಿಯರು)ನೇರವಾಗಿ ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದೇವೆ.

 
ಇಷ್ಟು ವರ್ಷಗಳಲ್ಲಿ ನಾವು ಗಮನಿಸಿದ ಸಂಗತಿಯೆಂದರೆ, ಚುನಾವಣೆಗೆ ನಿಲ್ಲುವ ಇತರರು ಮಾಡುವ ಭ್ರಷ್ಟಾಚಾರವನ್ನು (ತೀರಾ ತೊಂದರೆ ಮಾಡುವಂತವರನ್ನು ಬಿಟ್ಟು) ಮನ್ನಿಸುತ್ತಾರೆ ಆದರೆ ಒಬ್ಬ ಆಕ್ಟಿವಿಸ್ಟ್ ಭ್ರಷ್ಟನಾಗುವುದನ್ನು ಒಪ್ಪುವುದಿಲ್ಲ. ಇನ್ನೊಂದು ವಿಷಯವೆಂದರೆ ಸ್ಥಳೀಯ ಚುನಾವಣೆಗಳಲ್ಲಿ ಒಂದು ಸ್ಥಾನಕ್ಕೆ ನಿಂತಿರುವ ಅಭ್ಯರ್ಥಿಯ ಜಾತಿಪ್ರಶ್ನೆ ಬಂದಾಗ, ನಿಂತಿರುವ ಎಲ್ಲರೂ ಒಳ್ಳೆಯವರೇ ಅದರೆ, ಜನ ಹೆಚ್ಚಾಗಿ ಅವರವರ ಜಾತಿಯವನಿಗೆ ಮತನೀಡುತ್ತಾರೆ. ಒಂದು ವೇಳೆ ಎಲ್ಲರೂ ಕೆಟ್ಟವರಾದರೂ ಹಾಗೇ ಮಾಡುತ್ತಾರೆ. ಆದರೆ ಒಬ್ಬ ಯೋಗ್ಯನಿದ್ದು ಉಳಿದವರು ಅಯೋಗ್ಯರಾದರೆ ಜಾತಿಯನ್ನು ಮೀರಿಯೇ ಯೋಗ್ಯನಿಗೆ ಮತದಾನ ಮಾಡುತ್ತಾರೆ.

ಹಾಗೆಯೇ ಹಣ ಹಂಚುವುದರಿಂದ ಆಗುವ ಪರಿಣಾಮವೂ ಅಷ್ಟೆ ಹಣ ಪಡೆದವರಲ್ಲಿ ಹೆಚ್ಚಿನವರು ಅವರಿಗೆ ಬೇಕಾದವರಿಗೇ ಮತ ನೀಡುತ್ತಾರೆ. ಕೆಲವೇ ಕೆಲವರು ಮಾತ್ರ ಹಣಕ್ಕೆ ಮತ ನೀಡುತ್ತಾರೆ. ಆದೆ ನೆಕ್ ಟು ನೆಕ್ ಅನ್ನುವ ಸ್ಪರ್ಧೆಯಿದ್ದಲ್ಲಿ ಇದು ಫಲಿತಾಂಶವನ್ನು ಉಲ್ಟಾ ಮಾಡಬಲ್ಲುದು. ಸೋಲುವ ಭಯವೇ ಅಭ್ಯರ್ಥಿಯನ್ನು ಹಣ ಹಂಚುವ ಯೋಚನೆಗೆ ತಳ್ಳುತ್ತದೆ. ಕಳೆದ ಪಂಚಾಯತ ಚುನಾವಣೆಯಲ್ಲಿ ನಮ್ಮ ಬಳಗದ ಸದಸ್ಯರೊಬ್ಬರು ನಾನು ಯಾವಕಾರಣಕ್ಕೂ ಹಣ ಹಂಚುವುದಿಲ್ಲ ಎಂದು ಹೇಳಿಯೇ ಕೆಲವರು ಯುವಕರನ್ನು ಕರೆದುಕೊಂಡು ಮನೆಮನೆಗೆ ತಿರುಗಿ ಮತಯಾಚನೆ ಮಾಡಿದರು. ಅವರು ಗೆದ್ದರು. ಅವರುಗಳಿಸಿದ ಒಟ್ಟು ಮತಗಳು ಅವರೆದುರಿಗಿದ್ದ ಉಳಿದ ಎಲ್ಲಾ ಅಭ್ಯರ್ಥಿಗಳ ಮತಗಳ ಮೊತ್ತವನ್ನು ಮೀರಿತ್ತು! ಆದರೆ ಇತ್ತೀಚಿನ ಪಂಚಾಯತ ಚುನಾವಣೆಗಳಲ್ಲಿ ಒಂದೇ ಕ್ಷೇತ್ರದಲ್ಲಿ ಬೇರೆಬೇರೆ ಮೀಸಲಾತಿಯ ಒಂದಕ್ಕಿಂತ ಹೆಚ್ಚು ಸ್ಥಾನಗಳಿದ್ದಾಗ ಜನ ಎಲ್ಲಾ ಮತಗಳನ್ನು ಅವರವರ ಜಾತಿಯವರಿಗೇ ಹಾಕುತ್ತಾರೆ. ಅಂತಹ ಅವಕಾಶ ಇಲ್ಲದಲ್ಲಿ ಮಾತ್ರ ಇನ್ನಿತರ ಆದ್ಯತೆಯ ಮೇಲೆ ಚಲಾಯಿಸ ತೊಡಗಿದ್ದಾರೆ.

ಆದರೆ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಇದು ಅನ್ವಯಿಸುವುದಿಲ್ಲ. ಆದರೆ ಚುನಾವಣೆಗಳಲ್ಲಿ ಯಾವುದೇ ಒಂದು ಅಲೆ ಇದ್ದಾಗ ಸ್ಥಳೀಯ ಆಕ್ಟಿವಿಸಂ ಕೆಲಸ ಮಾಡುವುದಿಲ್ಲ. ಜನ ಅಲೆಯಲ್ಲಿ ಕೊಚ್ಚಿಹೋಗುವುದೇ ಹೆಚ್ಚು. ಹಣವಿದ್ದರೆ ಏನು ಬೇಕಾದರೂ ಮಾಡಬಹುದು, ಏನ್ನನ್ನಾದರೂ ಗಳಿಸಬಹುದು ಎನ್ನುವ ಈ ಸಂದರ್ಭದಲ್ಲಿಯೂ, ಸ್ಥಳೀಯ ಚುನಾವಣೆಗಳನ್ನುಯಾವುದೇ ಹಣ ಆಮಿಷಗಳ ನೆರವಿಲ್ಲದೆ ಗೆಲ್ಲಲು, ನಿಜವಾದ ಆಕ್ಟಿವಿಸ್ಟ್ ಗುಂಪುಗಳಿಗೆ, ತುಂಬ ಅವಕಾಶ ಇದೆ. ಅಲ್ಲದೆ ಅವರು ಅದಕ್ಕೆ ಬೇಕಾದ ಸ್ಥಳೀಯ ರಾಜಕಾರಣದ ಚಾಕಚಕ್ಯತೆಯನ್ನು ಕೂಡಾ ಗಳಿಸಿಕೊಂಡಿರುತ್ತಾರೆ.
ಯಾವುದಾದರೂ ಭಾವನಾತ್ಮಕ ವಿಷಯಗಳಿದ್ದರೆ, ಅದರ ಮೇಲೆ ಸವಾರಿ ಮಾಡುವುದು, ಇನ್ನೂ ಹೆಚ್ಚು ತತ್ಕಾಲದ ಲಾಭವನ್ನು ತಂದುಕೊಡುತ್ತದೆ ಎನ್ನುವುದನ್ನು ಇಂದು ಎಲ್ಲ ಪಕ್ಷಗಳೂ ಕಂಡುಕೊಂಡಿವೆ. ಹಾಗಾದಾಗ ಚುನಾವಣೆಗಳಲ್ಲಿ ಬೇರೆಲ್ಲ ನಿಜ ಸಮಸ್ಯೆಗಳು ಪಕ್ಕಕ್ಕೆ ಸರಿದು ಹೋಗುತ್ತವೆ. “ಜಲ್ಲಿ ಕಟ್ಟು” ವಿಚಾರದಲ್ಲಿ ತಮಿಳಿನಾಡಿನಲ್ಲಿ ಎಲ್ಲರೂ ಪಕ್ಷಬೇಧ ಮರೆತು ಹೋರಾಡಲು ಕಾರಣ “ಜಲ್ಲಿಕಟ್ಟು” ಬೇಕು ಎನ್ನುವುದಕ್ಕಿಂತ, ಹೆಚ್ಚಾಗಿ ನಾವು ದೂರ ನಿಂತರೆ ವಿರೋಧಿಗಳು ಅದರ ರಾಜಕೀಯ ಲಾಭ ಪಡೆಯುತ್ತಾರೆ ಎನ್ನುವುದೇ ಆಗಿದೆ.

ಇನ್ನೂ ಒಂದು ಕಾರಣವಿದೆ ನಮ್ಮ ಆಕ್ಟಿವಿಸಂ ಕೆಲವೇ ಅಥವಾ ಒಂದರೆಡು ವಿಷಯಗಳಿಗೆ ಸೀಮಿತವಾಗಿದ್ದರೆ ಅದು ಚುನಾವಣೆಯಲ್ಲಿ ನಮಗೆ ಯಾವುದೇ ಪ್ರತಿಫಲವನ್ನು ನೀಡಲಾರದು. ಉದಾ: ನಮ್ಮ ತಾಲ್ಲೂಕಿನಲ್ಲಿ ಪ್ರಮುಖ ವಿಷಯವಾದ ಪರಿಸರನಾಶದ ಬಗ್ಗೆ ನಿರಂತರವಾಗಿ ಹೋರಾಡುವ ಯಾವ ವ್ಯಕ್ತಿಯೂ ಇಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಯಾಕೆಂದರೆ ಈ ಸಮಸ್ಯೆ ನಿಜವಾದದ್ದೇ ಆದರೂ ಜನರ ಬದುಕಿನಲ್ಲಿ ಬೇರೆ ಬೇರೆ ರೀತಿ ತಳುಕುಹಾಕಿಕೊಂಡಿದೆ. ಆದ್ದರಿಂದ ಒಬ್ಬ ಪರಿಸರ ಹೋರಾಟಗಾರ ಇಲ್ಲಿ ಏಕಕಾಲಕ್ಕೆ ಕೆಲವರ ಮೆಚ್ಚಿನ ವ್ಯಕ್ತಿಯೂ. ಇನ್ನುಕೆಲವರ ವಿರೋಧಿಯೂ ಹಲವರಿಗೆ ಅನುಪಯುಕ್ತನೂ, ಮತ್ತೂ ಕೆಲವರಿಗೆ ಅನುಮಾನಾಸ್ಪದನೂ ಆಗಿರುತ್ತಾನೆ. ಇದು ಸುಮಾimagesರಾಗಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರರಿಗೂ ಅನ್ವಯಿಸುತ್ತದೆ. ಹಿಂದೆ ರೈತಸಂಘ ಚುನಾವಣೆಗಳಲ್ಲಿ ಹೆಚ್ಚು ಯಶಸ್ಸು ಗಳಿಸಲಾಗದಿರಲು ಇದೂ ಒಂದು ಕಾರಣ.

ಹಾಗಾಗಿ ಅಕ್ಟಿವಿಸಂ ನಮೂಲಕ ಚುನಾವಣೆಯನ್ನೆದುರಿಸುವ ಉದ್ದೇಶವಿದ್ದರೆ, ಜನರ ನಿತ್ಯದ ಹಲವು ಸಮಸ್ಯೆಗಳನ್ನೊಳಗೊಂಡ ಬಹುಮುಖಿ ಕಾರ್ಯಕ್ರಮಗಳ, ಕಾರ್ಯಕರ್ತರ ಪಡೆ ಅಗತ್ಯವಾಗುತ್ತದೆ. ರಾಜಕೀಯ ಪಕ್ಷಗಳಿಗೆ ಈ ಸಮಸ್ಯೆ ಇಲ್ಲ. ಮತದಾರ ಯಾವಾಗಲೂ ಯಾವುದಾದರೊಂದು ಪಕ್ಷವನ್ನು ಆರಿಸುವ ಅನಿವಾರ್ಯ ಪರಿಸ್ಥಿತಿಯಲ್ಲಿ ಇರುತ್ತಾನೆ. ಆದರೆ ಆಕ್ಟಿವಿಸಂ ಮೂಲಕ ರಾಜಕೀಯ ಅಧಿಕಾರ ಪಡೆಯಬಯಸುವವರು ಎಲ್ಲವನ್ನೂ ಶೂನ್ಯದಿಂದ ಪ್ರಾರಂಬಿಸಬೇಕಾದ್ದರಿಂದ, ಅದಕ್ಕೆ ಬೇಕಾಗುವ ದೊಡ್ಡ ಪಡೆಯನ್ನು ಕಟ್ಟುವುದು ಕಷ್ಟದ ಕೆಲಸ.
ನಮ್ಮ ತಾಲ್ಲೂಕಿನಲ್ಲಿ ಒಬ್ಬರು ಹಿರಿಯ ಗಾಂಧಿವಾದಿಯಿದ್ದರು. ಅವರು ಕಂದಾಯ ಇಲಾಖೆಯಲ್ಲಿ ದುಡಿದು ನಿವೃತ್ತರಾದವರು. ನಂತರ ಸಕಲೇಶಪುರ ಮತ್ತು ಆಲೂರು ವಿಧಾನಸಭಾಕ್ಷೇತ್ರದ ಎರಡೂ ತಾಲ್ಲೂಕುಗಳಲ್ಲಿ ತಾಲ್ಲೂಕು ಕಛೇರಿಯ ಮುಂದೆ ನಿಂತು ಅಲ್ಲಿಗೆ ಬರುವ ಬಡವರ, ಮತ್ತು ರೈತರ ಕೆಲಸಗಳನ್ನು ಲಂಚವಿಲ್ಲದೆ ಮಾಡಿಸಿಕೊಡುತ್ತಿದ್ದರು. ಮಧ್ಯಾಹ್ನ ಯಾರಾದರೊಬ್ಬರು ಅವರಿಗೆ ಊಟ ಹಾಕಿಸುತ್ತಿದ್ದರು, ಸಂಜೆಯ ವೇಳೆಗೆ ಇನ್ನೊಬ್ಬರಿಂದ ಬಸ್ ಚಾರ್ಜು ಮಾತ್ರ ಕೇಳಿಪಡೆದು ಊರಿಗೆ ಮರಳುವುದು ಅವರ ಪದ್ಧತಿ. ಇದು ಅನೇಕ ವರ್ಷಗಳ ಕಾಲ ನಡೆಯಿತು. ತಾಲ್ಲೂಕು ಕಚೇರಿಯ ದಲ್ಲಾಳಿಗಳಿಂದ ಒಂದೆರಡು ಬಾರಿ ಅವರ ಮೇಲೆ ಹಲ್ಲೆಯೂ ನಡೆಯಿತು.

ಅವರು ಅನೇಕ ಬಾರಿ ವಿಧಾನಸಭೆಗೆ ಸ್ಪರ್ಧಿಸಿದರು. ಪ್ರತಿ ಚುನಾವಣೆಯಲ್ಲಿ, ಮತದಾರನ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಕರಪತ್ರವೊಂದು ಮುದ್ರಿಸಿಕೊಂಡು ಮನೆಮನೆಗೆ ಹೋಗಿ ಮತಯಾಚನೆ ಮಾಡುತ್ತಿದ್ದರು. ಮೊದಲಬಾರಿ ಅವರು ಸ್ಪರ್ಧಿಸಿದ್ದಾಗ ಒಂದರೆಡು ಸಾವಿರ ಮತ ಗಳಿಸಿದ್ದರು. ಅವರ ಕೊನೆಯ ಚುನಾವಣೆಯಲ್ಲಿ ಅವರು ಗಳಿಸಿದ ಮತ ನೂರಕ್ಕೂ ಕಡಿಮೆ. ಹಾಗೆಂದು ಈಗಲೂ ಅವರನ್ನು ಕೊಂಡಾಡುವ, ಅಂತವರು ಗೆಲ್ಲಬೇಕೆಂದು ಹೇಳುವವವರ ಸಂಖ್ಯೆ ಬಹಳ ದೊಡ್ಡದೇ. ಆದರೆ ಚುನಾವಣೆ ಬಂದಾಗ ತಾವು ಅವರಿಗೆ ನೀಡುವ ಮತ ಮತ್ತೊಬ್ಬನ ಗೆಲುವಿಗೆ ಕಾರಣವಾದೀತೆಂಬ, ಜನರ ಲೆಕ್ಕಾಚಾರವೇ ಅಂತವರಿಗೆ ಮುಳುವಾಗುತ್ತದೆ.

 

ಇಂದು ನೂರಾರು ಸಂಘ ಸಂಸ್ಥೆಗಳಿವೆ. ಹೋರಾಟದ ಗುಂಪುಗಳಿವೆ. ನಾನಾರೀತಿಯ ಹೋರಾಟಗಳೂ ಇವೆ. ನಾನಾ ತರದ ಜನ ಅದರಲ್ಲಿ ತೊಡಗಿಕೊಂಡಿರುತ್ತಾರೆ. ಎಲ್ಲ ಹೋರಾಟಗಳೂ ಒಂದೇ ಬಗೆಯವಾಗಿರುವುದಿಲ್ಲ. ಒಂದು ಹೋರಾಟಕ್ಕೆ ಸ್ಥಳೀಯವಾಗಿ ಒಂದು ಅಭಿಪ್ರಾಯವಿದ್ದರೆ ಹೊರಗೆ ಇನ್ನೊಂದು ಅಭಿಪ್ರಾಯವಿರುತ್ತದೆ. ನಿಜವಾದ ಹೋರಾಟಗಾರರು, ಸ್ವಹಿತಾಸಕ್ತಿಯಿಂದ ಬಂದವರು, ರಾಜಕೀಯ ಲಾಭಕ್ಕಾಗಿ ಬಂದವರು. ದೂರದಲ್ಲಿ ಕುಳಿತು ಹೋರಾಟ ರೂಪಿಸುವವರು, ಇತ್ಯಾದಿಗಳೂ ಇರುತ್ತಾರೆ.

ರೈತರ ಪರ ಹೋರಾಟದಲ್ಲಿ ಸಂತ್ರಸ್ತನಾಗಿ ಭಾಗಿಯಾಗಿರುವಾತ ಹಳ್ಳಿಯಲ್ಲಿ ಮೀಟರ್ ಬಡ್ಡಿ ಸಂಗ್ರಾಹಕನೂ ಆಗಿರುತ್ತಾನೆ! ಇದು ಪತ್ರಿಕೆಗಳಲ್ಲಿ ಬರೆಯುವ ಸೆಮಿನಾರುಗಳಲ್ಲಿ ಮಾತನಾಡುವವರಿಗೆ ತಿಳಿದೇ ಇರುವುದಿಲ್ಲ. ಇಂತಹ ಸಂಕೀರ್ಣ ಪರಿಸ್ಥಿತಿಯಲ್ಲಿ ಜನರಿಗೆ ಈ ಹೋರಾಟಗಾರರಿಗಿಂತ ಕಷ್ಟಕ್ಕೆ ಆಗುವ ಅಥವಾ ಕಾಸು ಕೊಡುವ ರಾಜಕಾರಣಿಯೇ ಯೋಗ್ಯನಾಗಿ ಕಾಣುತ್ತಾನೆ. ಸಿದ್ಧಾಂತಗಳು ತಲೆಕೆಳಗಾಗುತ್ತವೆ. ಹೋರಾಟಗಾರರು ಗೆಲ್ಲಲಿಲ್ಲ ಎಂದು ವಿಷಾದಿಸುವಾಗ ಅವರ ಗೆಲುವಿಗೆ ಸಾಧ್ಯತೆಯೇ ಇರಲಿಲ್ಲ ಎಂಬುದನ್ನು ಮರೆಯುತ್ತಾರೆ. ಇರೋಮ್ ಶರ್ಮಿಳಾರನ್ನು ಗೆಲ್ಲಿಸಲು ಬೇಕಾದ ಕಾರ್ಯಕ್ರಮವಾಗಲೀ.. ಕಾರ್ಯಪಡೆಯಾಗಲೀ ಇತ್ತೇ?

ಅಚ್ಚೇದಿನ್: ಎಚ್ಚರ, ನಿಮ್ಮ ಖಾತೆಗಳೇ ಕ್ಯಾಶಲೆಸ್!

ಅಚ್ಚೇದಿನಗಳ ಕನಸು ಕಂಡು ನೋಟು ರದ್ದತಿ ಬೆಂಬಲಿಸಿದವರಲ್ಲಿ ವಿಷಾದದ ಮೌನ

– ಪ್ರದೀಪ್ ಮಾಲ್ಗುಡಿ

ಬ್ಯಾಂಕ್ಗಳಲ್ಲಿನ ಹಣಕಾಸು ವಹಿವಾಟು ಇದ್ದಕ್ಕಿದ್ದಂತೆ ದೊಡ್ಡ ಸುದ್ದಿಯಾಗಿದೆ. ನಮ್ಮ ದುಡ್ಡನ್ನು ಖಾತೆಗೆ ಜಮಾ ಮಾಡಲು, ಹಣ ಹಿಂತೆಗೆದುಕೊಳ್ಳಲು ಕೂಡ ದುಬಾರಿ ಮೊತ್ತವನ್ನು ಗ್ರಾಹಕರು ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇನ್ನು ಕನಿಷ್ಠ ಮೊತ್ತವನ್ನು ಖಾತೆಯಲ್ಲಿ ಇಡಲಾಗದ ಗ್ರಾಹಕರ ಮೇಲೆ ಕೂಡ ಎಸ್ಬಿಐ ಕೆಂಗಣ್ಣು ಬೀರಿದೆ.

 

patna-atmಹಣಕಾಸಿನ ವಹಿವಾಟಿಗೆ ದೊಡ್ಡ ಮೊತ್ತದ ಶುಲ್ಕವನ್ನು ವಿಧಿಸೋಕೆ ಬ್ಯಾಂಕ್ಗಳು ಮುಂದಾಗಿವೆ. ಇದಕ್ಕೆ ಮುನ್ನುಡಿ ಬರೆದದ್ದು ಎಚ್ಡಿಎಫ್ಸಿ. ಅನಂತರ ಎಸ್ಬಿಐ ಕೂಡ ಅನೇಕ ಹಂತಗಳಲ್ಲಿ ಶುಲ್ಕ ವಿಧಿಸೋಕೆ ಮುಂದಾಗಿದೆ. ಕೆಲವೇ ದಿನಗಳಲ್ಲಿ ಇದೇ ದಾರಿಯನ್ನು ದೇಶದ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ಗಳು ಕೂಡ ಹಿಡಿಯಬಹುದು.
ಎಸ್ಬಿಐ ಇತ್ತೀಚೆಗೆ ಮಾಡಿರುವ ಹೊಸ ನಿಯಮಗಳು ಗ್ರಾಹಕರು ಇನ್ನು ಮುಂದೆ ಬ್ಯಾಂಕ್ ಸುತ್ತ ಕೂಡ ಸುಳಿಯದೇ ಇರುವಂತೆ ಎಚ್ಚರಿಕೆ ನೀಡಿವೆ. ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇರಲೇಬೇಕು, ಮಿನಿಮಮ್ ಬ್ಯಾಲೆನ್ಸ್ ಇಲ್ಲದಿದ್ರೆ ಭಾರಿ ದಂಡ ವಿಧಿಸುವುದು, ಉಳಿತಾಯ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಭಾರಿ ದಂಡ, ಪಿನ್ ನಂಬರ್ ಚೇಂಚ್, ಬ್ಯಾಲೆನ್ಸ್ ಚೆಕ್ ಮಾಡಿದ್ರೂ ಶುಲ್ಕ ತೆರಬೇಕು. ಮೆಟ್ರೋ ಸಿಟಿಯ ಗ್ರಾಹಕರ ಖಾತೆಯಲ್ಲಿ 5000 ರೂಪಾಯಿ, ನಗರ ಪ್ರದೇಶದ ಗ್ರಾಹಕರ ಖಾತೆಯಲ್ಲಿ 3000 ರೂಪಾಯಿ, ಉಪನಗರ ಪ್ರದೇಶದ ಗ್ರಾಹಕರ ಖಾತೆಯಲ್ಲಿ 2000 ರೂಪಾಯಿ, ಗ್ರಾಮೀಣ ಪ್ರದೇಶದ ಗ್ರಾಹಕರ ಖಾತೆಯಲ್ಲಿ 1000 ರೂಪಾಯಿ ಇರಲೇಬೇಕು. ಇಲ್ಲದಿದ್ದಲ್ಲಿ ದಂಡ ಕಟ್ಟಿ ಅಂತ ಎಸ್ಬಿಐ ಹೇಳಿದೆ. ಏಪ್ರಿಲ್ 1ರಿಂದಲೇ ಎಸ್ಬಿಐನಿಂದ ಈ ಹೊಸ ನಿಮಯ ಜಾರಿಯಾಗುತ್ತೆ.

 
ಗ್ರಾಹಕರ ಖಾತೆಗಳನ್ನೇ ಕ್ಯಾಶ್ಲೆಸ್ ಮಾಡೋ ಇನ್ನೊಂದು ನಿಯಮವನ್ನು ಕೂಡ ಎಸ್ಬಿಐ ರೂಪಿಸಿದೆ. ಅದರ ಪ್ರಕಾರ, ಮೆಟ್ರೋ ಸಿಟಿ ಗ್ರಾಹಕರ ಖಾತೆಯಲ್ಲಿ ಶೇ.50ಕ್ಕಿಂತ ಕಡಿಮೆ ಇದ್ರೆ 50 ರೂ., ಶೇ. 50ರಿಂದ 70ರಷ್ಟು ಕಡಿಮೆಯಾದ್ರೆ 75 ರೂ., ಶೇ. 75ಕ್ಕಿಂತ ಕಡಿಮೆಯಾದ್ರೆ 100 ರೂ. ದಂಡ ವಿಧಿಸಲಾಗುತ್ತೆ. ಇನ್ನು ಗ್ರಾಮೀಣ ಗ್ರಾಹಕರ ಖಾತೆಯಲ್ಲಿ ಶೇ. 50ಕ್ಕಿಂತ ಕಡಿಮೆಯಾದ್ರೆ 20 ರೂಪಾಯಿ, ಶೇ. 50ರಿಂದ 75ರಷ್ಟು ಕಡಿಮೆಯಾದ್ರೆ 30 ರೂ., ಶೇ. 75ರ ಮೇಲೆ ಕಡಿಮೆಯಾದ್ರೆ 50 ರೂ. ದಂಡ ಕಟ್ಟಬೇಕಾಗುತ್ತದೆ. ಇದಲ್ಲದೇ ದಂಡದ ಜೊತೆಗೆ ಸೇವಾ ತೆರಿಗೆ ಕೂಡ ಕಟ್ಟಬೇಕಾಗುತ್ತದೆ.
ಮೊದಲು ಹಣಕಾಸು ವಹಿವಾಟಿನ ಮೇಲೆ ಶೇ. 0.50ರಷ್ಟು ದರ ವಿಧಿಸೋದಾಗಿ ಹೇಳಲಾಗಿತ್ತು. ಕಡೆಗೆ ಪ್ರತಿ ತಿಂಗಳಲ್ಲಿ 4 ವಹಿವಾಟಿನ ನಂತರ ಪ್ರತಿ ವಹಿವಾಟಿಗೆ 150 ರೂ. ಶುಲ್ಕ ಪಾವತಿಸಬೇಕು ಎಂದು ಎಚ್ಡಿಎಫ್ಸಿ ಹೇಳಿದೆ. ಐಸಿಐಸಿಐ ಕೂಡ ಇದೇ ರೀತಿಯಲ್ಲಿ ಶೇ. 0.58 ಶುಲ್ಕವನ್ನು ವಿಧಿಸ್ತಿದೆ. ಕೆಲವು ವೇಳೆ ವಹಿವಾಟಿಗೆ ಉಚಿತ ಆಫರ್ ಕೂಡ ನೀಡುತ್ತಿದೆ.

 

demonetisationಇನ್ನು ಕೇಂದ್ರ ಸರ್ಕಾರದ ಕ್ಯಾಶ್ಲೆಸ್ ಎಕಾನಮಿ ಕರೆಗೆ ಓಗೊಟ್ಟಿರೋದಾಗಿ ಹೇಳಿದ್ದ ಕೆಲವು ಬ್ಯಾಂಕ್ಗಳು ಉಚಿತ ವಹಿವಾಟು ನೀಡೋದಾಗಿ ಘೋಷಿಸಿದ್ದವು. ಆದರೆ, ಎಚ್ಡಿಎಫ್ಸಿ, ಎಸ್ಬಿಐ ಬ್ಯಾಂಕ್ಗಳು ಮಾತ್ರ ಕ್ಯಾಶ್ಲೆಸ್ ಕರೆಯನ್ನು ಬಡ, ಕೂಲಿ, ಕಾರ್ಮಿಕ ವರ್ಗದವರ ಖಾತೆಯನ್ನೇ ಕ್ಯಾಶ್ಲೆಸ್ ಮಾಡೋ ಹುನ್ನಾರ ನಡೆಸಿವೆ.

 
ಎಚ್ಡಿಎಫ್ಸಿ ಪ್ರತಿ ವಹಿವಾಟಿಗೆ 150 ಶುಲ್ಕ ವಿಧಿಸುತ್ತೆ. ಕೆಲವು ಬ್ಯಾಂಕ್ಗಳು 50, ಇನ್ನು ಕೆಲವು 1000ಕ್ಕೆ 5 ರೂ. ಶುಲ್ಕ ವಸೂಲಿ ಮಾಡ್ತಿವೆ. ಒಂದೊಂದು ಬ್ಯಾಂಕ್ಗಳು ಒಂದೇ ವಹಿವಾಟಿಗೆ ತಮ್ಮ ಮನಸಿಗೆ ತೋರಿದಷ್ಟು ಶುಲ್ಕವನ್ನು ವಿಧಿಸೋದು ಯಾವ ಸೀಮೆಯ ನ್ಯಾಯ? ಹೀಗೆ ಮನಸೋ ಇಚ್ಚೆ ಗ್ರಾಹರಕರನ್ನು ಬ್ಯಾಂಕ್ಗಳು ಲೂಟಿ ಮಾಡ್ತಿವೆ. ಆದರೆ, ಆರ್ಬಿಐ ಮಾತ್ರ ಏನೊಂದನ್ನೂ ನೋಡದೆ, ಕೇಳದೆ ಸುಮ್ಮನೆ ಕುಳಿತಿದೆ.

 
ಆಕ್ಸಿಸ್ ಬ್ಯಾಂಕ್ ಬೇರೆ ಶಾಖೆಯ ಖಾತೆಗಳ ವಹಿವಾಟಿಗೆ ಶುಲ್ಕ ವಿಧಿಸುತ್ತೆ. ದೇಶದಲ್ಲಿ ಡಿಜಿಟಲ್ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ. ಆದರೆ, ಬ್ಯಾಂಕ್ಗಳು ಮಾತ್ರ ಡಿಜಿಟಲ್ ನೆಟ್ವರ್ಕ್ ಇದ್ದರೂ, ಕಳ್ಳದಾರಿಯಲ್ಲಿ ಗ್ರಾಹಕರಿಂದ ಹಣ ಸುಲಿಯುತ್ತಿವೆ.

 
ಇವೆಲ್ಲಕ್ಕಿಂತ ಇನ್ನೊಂದು ಪ್ರಮುಖ ಸಂಗತಿ ಎಂದರೆ, ಪಾರದರ್ಶಕ ವಹಿವಾಟಿಗಾಗಿ ಎಲ್ಲೆಡೆ ಬಿಲ್ ನೀಡುವುದನ್ನು ಕಡ್ಡಾಯಗೊಳಿಸಿ ಕಾನೂನನ್ನೂ ರೂಪಿಸಲಾಗಿದೆ. ಆದರೆ, ದೇಶದ ಹಣಕಾಸಿನ ವಹಿವಾಟು ನಡೆಸುವ ಬ್ಯಾಂಕ್ಗಳೇ ಇದುವರೆಗೆ ಬಿಲ್ ನೀಡಿ, ಹಣ ಪಡೆಯುವ ಕ್ರಮವನ್ನು ಪಾಲಿಸಿಲ್ಲ. ಎಸ್ಬಿಐ ರೂಪಿಸಿರುವ ಹೊಸ ನಿಮಯಗಳು ಜಾರಿಯಾದರೆ, ನಿಮ್ಮ ಖಾತೆಯನ್ನು ರಾಜಾರೋಷವಾಗಿ ದೋಚುವ ಕೆಲಸ ಇನ್ನಷ್ಟು ಜೋರಾಗಿಯೇ ನಡೆಯುತ್ತೆ. ಶೇಕಡಾವಾರು ಆಧಾರದಲ್ಲಿ ಶುಲ್ಕ, ಹೆಚ್ಚುವರಿ ವಹಿವಾಟಿಗೆ ಶುಲ್ಕ, ಮಿನಿಮಮ್ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸಿದರೆ, ಬಡವರ, ಮಧ್ಯಮವರ್ಗದವರ, ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ ದುಡ್ಡಿಗೆ ಕತ್ತರಿ ಬೀಳೋದಂತೂ ನಿಶ್ಚಿತವಾದಂತಾಗಿದೆ.

 
ಗ್ರಾಹಕರಿಗೆ ನಿಮ್ಮ ಖಾತೆಯಿಂದ ಹಣವನ್ನು ಹಿಂತೆಗೆದುಕೊಳ್ಳಲಾಗಿದೆ ಎಂಬ ಕನಿಷ್ಠ ವಿಷಯವನ್ನೂ ತಿಳಿಸದೇ ಬ್ಯಾಂಕ್ಗಳು ಗ್ರಾಹಕರನ್ನು ಸುಲಿಯುತ್ತಿವೆ. ಈ ಸುಲಿಗೆಯ ಯಾಗಕ್ಕೆ ಮುಂಬರುವ ಮೂರ್ಖರ ದಿನಕ್ಕಾಗಿ ಮುಹೂರ್ತವನ್ನು ಕೂಡ ನಿಗದಿಗೊಳಿಸಲಾಗಿದೆ. ಇಷ್ಟೆಲ್ಲ ಆದರೂ ಆರ್ಬಿಐ ಮೌನವಾಗಿದೆ. ಈ ಮೂಲಕ ಅದರ ಅಸ್ತಿತ್ವದ ಮೇಲೆ ಅನುಮಾನ ಕೂಡ ಮೂಡಿದೆ. ಏನಾದರೂ ಆಗಲಿ ಅಚ್ಚೇದಿನ್ ಬಂದವೇ ಎಂದು ಮಾತ್ರ ಯಾರೂ ಕೇಳಬಾರದು. ಕೇಳಿದರೆ ಪಾಕಿಸ್ತಾನಕ್ಕೆ ಒನ್ ವೇ ಟಿಕೆಟ್ ಕಳುಹಿಸಲಾಗುತ್ತೆ.

ಚಿತ್ರಕೃಪೆ;  Indian Express, Business Standard