Tag Archives: ಮಧ್ಯಮವರ್ಗ

ದಲಿತ ಸಂಚಿಕೆ: ಓದುಗರ ವಿಶ್ವಾಸವನ್ನು ‘ರಿಫ್ರೆಶ್’ ಮಾಡಿಕೊಳ್ಳುವ ಪ್ರಯತ್ನ

– ಶಿವರಾಮ್ ಕೆಳಗೋಟೆ

ಕಳೆದ ಎರಡು ವಾರಗಳಿಂದ ವಿಶೇಷ ದಲಿತ ಸಂಚಿಕೆಗೆ ವ್ಯಕ್ತವಾದ ಪ್ರತಿಕ್ರಿಯೆಯಿಂದ ಪ್ರಜಾವಾಣಿ ಸಂಪಾದಕರು ಮತ್ತು ಹಿರಿಯ ಸಿಬ್ಬಂದಿ ವರ್ಗ ಸಹಜವಾಗಿಯೇ ಬೀಗುತ್ತಿದ್ದಾರೆ. ಅಂತಹದೊಂದು ಪ್ರಯತ್ನ ಇದುರವರೆಗೂ ಯಾರಿಂದಲೂ ಆಗದ ಕಾರಣ  ಆ ಸಂಚಿಕೆ ಮತ್ತು ಅದನ್ನು ಹೊರತರುವಲ್ಲಿ ದುಡಿದ ಮನಸ್ಸುಗಳು ಮೆಚ್ಚುಗೆಗೆ ಅರ್ಹ. ಫೇಸ್‌ಬುಕ್ ಭಾಷೆಯಲ್ಲಿ ಹೇಳುವುದಾದರೆ ಅವರ ಶ್ರಮ ಸಾವಿರಾರು ಲೈಕುಗಳಿಗೆ ಅರ್ಹ. (ಸಂಚಿಕೆ ಹೊಸ ಆಲೋಚನೆಗಳಿಗೆ ಮತ್ತಷ್ಟು ವೈವಿಧ್ಯತೆಗೆ ವೇದಿಕೆ ಆಗಬಹುದಿತ್ತು ಎನ್ನುವುದರ ಹೊರತಾಗಿಯೂ…)

ಆ ಮೂಲಕ ಪ್ರಜಾವಾಣಿ ಪತ್ರಿಕೆ ಇತ್ತೀಚೆಗಿನ ತನ್ನ ಕೆಲ ಧೋರಣೆಗಳಿಂದ ಓದುಗ ಸಮುದಾಯದ ಒಂದು ವರ್ಗದಿಂದ ಕಳೆದುಕೊಂಡಿದ್ದ ವಿಶ್ವಾಸವನ್ನು ‘ರಿಫ್ರೆಶ್’ ಮಾಡಿಕೊಂಡಿದೆ. ದಲಿತ ಸಂಚಿಕೆ ಹೊರತರುವ ಮೂಲಕ ಮೆಚ್ಚುಗೆ ಗಳಿಸಿದೆ ಪ್ರಜಾವಾಣಿ, ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನ ಸಂದರ್ಶನವನ್ನು ಬರೋಬ್ಬರಿ ಒಂದೂವರೆ ಪುಟ (ಮುಖಪುಟ ಸೇರಿದಂತೆ) ಪ್ರಕಟಿಸಿ ಸಂಪಾದಿಸಿದ್ದು ಟೀಕೆಗಳನ್ನು, ಮೂದಲಿಕೆಗಳನ್ನು ಎನ್ನುವುದನ್ನು ಮರೆಯಬಾರದು. ಆ ಸಂದರ್ಶನವನ್ನು ಓದಿ/ನೋಡಿ ಕೆಲ ಓದುಗರಾದರೂ ಪತ್ರಿಕೆ ಸಂಪಾದಕರ ಹಾಗೂ ಸಂದರ್ಶಕರ ವೈಯಕ್ತಿಕ ನಿಷ್ಠೆ ಬಗ್ಗೆ ಅನುಮಾನ ವ್ಯಕ್ತಪಡಿಸಿದರು ಎನ್ನುವುದು ಸುಳ್ಳಲ್ಲ. ಪತ್ರಿಕೆ ಸಿಬ್ಬಂದಿ ಪ್ರಜ್ಞಾವಂತ ಓದುಗರಿಗೆ ಫೋನ್ ಮಾಡಿ (ದಲಿತ ಸಂಚಿಕೆ ರೂಪುಗೊಂಡಾಗ ಮಾಡಿದಂತೆ) ಪ್ರತಿಕ್ರಿಯೆ ಕೇಳಿದ್ದರೆ ಅದು ವಿವರವಾಗಿ ಗೊತ್ತಾಗುತ್ತಿತ್ತು.

ಅಥವಾ ದಿನೇಶ ಅಮಿನ್ ಮಟ್ಟು ಅವರು ಆ ಸಂದರ್ಶನ ಸ್ವೀಕರಿಸಿದ ಪ್ರತಿಕ್ರಿಯೆಗಳನ್ನು ಮತ್ತು ಸಂದರ್ಶನದ ಹಿಂದೆ ಸಂಪಾದಕರಿಗಿದ್ದ ಉದ್ದೇಶಗಳನ್ನು ಸ್ಪಷ್ಟಪಡಿಸುವಂತಹ ಅಂಕಣವನ್ನು (ದಲಿತ ಸಂಚಿಕೆ ಕುರಿತು ಬರೆದಂತೆ) ಬರೆದಿದ್ದರೆ ಅನುಮಾನಗಳು ಪರಿಹಾರ ಆಗುತ್ತಿದ್ದವು. ಆದರೆ ಅವರು ಹಾಗೆ ಮಾಡಲಿಲ್ಲ. (ಬಹುಶಃ ಯಡಿಯೂರಪ್ಪನ ಸಂದರ್ಶನದಲ್ಲಿ ಅವರ ಪಾತ್ರ ಇರಲಿಲ್ಲವೇನೋ. ಅಥವಾ, ‘ಪತ್ರಿಕೆಯೊಂದಿಗಿನ ಜನರ ವಿಶ್ವಾಸವನ್ನು’ ಕಾಯ್ದುಕೊಂಡು ಬರುವಂತಹ ಕೆಲಸಗಳಲ್ಲಿ ಮಾತ್ರ ಅವರ ಪಾಲ್ಗೊಳ್ಳುವಿಕೆ ಇರುತ್ತದೇನೋ?)

ಇರುವ ನಾಲ್ಕೈದು ಪತ್ರಿಕೆಗಳಲ್ಲಿ  ಹೆಚ್ಚು ವಿಶ್ವಾಸಾರ್ಹ ಪತ್ರಿಕೆ ಪ್ರಜಾವಾಣಿಯೇ, ಅನುಮಾನ ಬೇಡ. ಆದರೆ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೇ ಜನರ ವಿಶ್ವಾಸಕ್ಕೆ ಧಕ್ಕೆ ತಂದಾಗ? ಪ್ರಜಾವಾಣಿ ಯಡಿಯೂರಪ್ಪನವರ ಡಿ-ನೋಟಿಫಿಕೇಶನ್ ಕೃತ್ಯಗಳನ್ನು ವರದಿ ಮಾಡದೆ ವೃತ್ತಿ ಧರ್ಮ ಮರೆಯಿತು. ಪ್ರಜಾವಾಣಿ ಸಂಪಾದಕರು ಮತ್ತವರ ಸಿಬ್ಬಂದಿ ಡಿನೋಟಿಫಿಕೇಶನ್ ಪ್ರಕರಣಗಳನ್ನು ವರದಿ ಮಾಡುವಾಗ ಆ ಪತ್ರಿಕೆ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿತೆಂದು ಸಾರ್ವಜನಿಕವಾಗಿ ಹೇಳಲು ಸಾಧ್ಯವೇ? ಡಿನೋಟಿಫಿಕೇಶನ್ ಪ್ರಕರಣ ಕುರಿತ ದಾಖಲೆಗಳು ಮೊದಲ ಬಾರಿಗೆ ತಲುಪಿದ ಕೆಲವೇ ಕೆಲವು ಪತ್ರಿಕಾ ಕಚೇರಿಗಳಲ್ಲಿ ಪ್ರಜಾವಾಣಿಯೂ ಒಂದು ಎಂದು ಇದೇ ವೃತ್ರಿಯಲ್ಲಿರುವ ಬಹುತೇಕರಿಗೆ ಗೊತ್ತು. ಬಹುಶಃ ಈ ಸಂಗತಿ ಪ್ರಜಾವಾಣಿ ಇತಿಹಾಸದಲ್ಲಿಯೇ ಕಪ್ಪುಚುಕ್ಕೆಯಾಗಿ ಉಳಿಯುತ್ತದೆ.

ದಲಿತರ ಸಂಖ್ಯೆ:

ದಲಿತ ಸಂಚಿಕೆ ಹೊರತಂದ ನಂತರ ಪ್ರಜಾವಾಣಿ ಜವಾಬ್ದಾರಿ ಹೆಚ್ಚಿದೆ. ಇನ್ನು ಮುಂದೆ ಪತ್ರಿಕೆಯ ನಡವಳಿಕೆಯನ್ನು ಓದುಗರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಸಂಪಾದಕ ಕೆ.ಎನ್. ಶಾಂತಕುಮಾರ್ ತಮ್ಮ ಬರಹದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ಅವರ ಕಾಳಜಿಗೆ ಸಹಜವಾಗಿಯೇ ಮೆಚ್ಚುಗೆ ಇದೆ. ಅವರಾದರೂ ಪ್ರಜಾವಾಣಿಯಲ್ಲಿ ದಲಿತರ ಸಂಖ್ಯೆ ಎಷ್ಟಿದೆ ಎಂದು ಗುರುತಿಸಿ ಅವರ ಸಂಖ್ಯೆ ಹೆಚ್ಚಿಸಲು ಪ್ರಯತ್ನ ಮಾಡಬೇಕು. ಪತ್ರಿಕೋದ್ಯಮ ಕಾಲೇಜುಗಳಲ್ಲಿ ಕಲಿಯುತ್ತಿರುವ ದಲಿತ ಹುಡುಗ-ಹುಡುಗಿಯರನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ, ಅವರು ಕೂಡಾ ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಪತ್ರಿಕಾಲಯಗಳಲ್ಲಿ ಸೇರಿಸಿಕೊಳ್ಳಬೇಕು. ಪ್ರಜಾವಾಣಿ ಈ ನಿಟ್ಟಿನಲ್ಲಿ ಕೆಲಸ ಮಾಡಿ ಮೇಲ್ಪಂಕ್ತಿ ಹಾಕಬೇಕು.

ಮತ್ತೆ ಕೋಮಾ ಸ್ಥಿತಿಯಲ್ಲಿ ಲೋಕಪಾಲ ಮಸೂದೆ

-ಡಾ.ಎಸ್.ಬಿ.ಜೋಗುರ

ಕಳೆದ ವರ್ಷವಿಡೀ  ಬಿಸಿ ಬಿಸಿ ಚರ್ಚೆಗೆ ಎಡೆಮಾಡಿಕೊಟ್ಟ ಜನಲೋಕಪಾಲ್ ಮಸೂದೆ ಸಿಡಿಯದಿರುವ ಪಟಾಕಿಯಂತೆ ಟುಸ್… ಎಂದದ್ದು ಸಾರ್ವಜನಿಕ ವಲಯದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕವಾಗಿ ಮಾತನಾಡುವವರಿಗೆ ಕೊಂಚ ನಿರಾಶೆಯನ್ನುಂಟು ಮಾಡಿರುವುದು ಸ್ವಾಭಾವಿಕವೇ ಆದರೂ ರಾಜಕೀಯ ಶಕ್ತಿಗಳು ಹಗ್ಗ ಕೊಟ್ಟು ಕೈ ಕಟ್ಟಿಕೊಳ್ಳಲು ತಯಾರಿಲ್ಲ ಎನ್ನುವುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿವೆ. ಅವೇನಿದ್ದರೂ ಬಾಯಿ ಮಾತಿನ ಮೂಲಕವೇ ರಾಜಕೀಯ ವಿಪ್ಲವಗಳನ್ನು ಹುಟ್ಟುಹಾಕಬಲ್ಲವೇ ಹೊರತು ಕಾರ್ಯಾತ್ಮಕವಾಗಿ ಅಲ್ಲ. ಹಾಗಾಗಿಯೇ ರಾಜ್ಯಸಭೆಯಲ್ಲಿ ಅದಕ್ಕೆ ಗ್ರೀನ್ ಸಿಗ್ನಲ್ ಸಿಗದಿರುವುದು ನಿರೀಕ್ಷಿತವೇ ಎನ್ನುವಂತಿದೆ. ಆಳುವ ಮತ್ತು ವಿರೋಧ ಪಕ್ಷಗಳೆರಡೂ ಚುನಾವಣೆಯ ಸಂದರ್ಭದಲ್ಲಿ ಕೋಮಾ ಸ್ಥಿತಿಯಲ್ಲಿರುವ ಈ ಲೋಕಪಾಲ್ ಮಸೂದೆಯ ಬಗ್ಗೆ ತಮಗೆ ತಿಳಿದಂತೆ ಮತದಾರನ ಎದುರು ವಿವರಿಸಿ ಲಾಭ ಗಿಟ್ಟಿಸಿಕೊಳ್ಳುವ ಕಸರತ್ತಿನಲ್ಲಿದ್ದಾರೆ. ಈ ಲೋಕಪಾಲ ಬಿಲ್ ರಾಜ್ಯಸಭೆಯವರೆಗೂ ಬಂದು ಅಟಕಾಯಿಸಿಕೊಂಡಿರುವುದು ಇದೇ ಮೊದಲಂತೂ ಅಲ್ಲ. ಈ ಮುಂಚೆ ಸುಮಾರು ಹನ್ನೊಂದು ಬಾರಿ ಈ ಮಸೂದೆಯು ಸದ್ಯದ ಹಂತದವರೆಗೆ ಬಂದು ತಲುಪಿ ಯಥಾಸ್ಥಿತಿಯನ್ನು ಕಾಪಾಡಿಕೊಂಡಿರುವುದಿದೆ. 1968 ರಿಂದಲೂ ಈ ಬಗೆಯ ಮರಳಿ ಯತ್ನವ ಮಾಡುವ ಕೆಲಸ ನಿರಂತರವಾಗಿ ನಡದೇ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ಅದು ಜಾರಿಯಾಗಲಿದೆ ಎಂದೆನ್ನುವಾಗಲೇ ಅದು ಕೋಮಾ ಹಂತವನ್ನು ತಲುಪುವ ಸ್ಥಿತಿ ಮಾಮೂಲಾಗಿದೆ.

ಭ್ರಷ್ಟಾಚಾರ ವಿರೋಧಿ ಆಂದೋಲನ ಅಣ್ಣಾ ಹಜಾರೆಯವರ ನೇತೃತ್ವದಲ್ಲಿ ದೇಶವ್ಯಾಪಿಯಾದ ಒಂದು ದೊಡ್ಡ ಚಳವಳಿಯನ್ನೇ ರೂಪಿಸಿತ್ತಾದರೂ ಅವರ ಅಂತಿಮ ಉದ್ದೇಶ ಮಾತ್ರ ಸಾಕಾರಗೊಳ್ಳದಿರುವುದು ವಿಷಾದನೀಯವೇ ಹೌದು. ಜಾರಿಗೊಳಿಸುವುದಿದ್ದರೆ ಬಲಿಷ್ಟ ಜನಲೋಕಪಾಲ ಜಾರಿಗೊಳಿಸಿ, ಇಲ್ಲದಿದ್ದರೆ ಬೇಡ ಎಂದು ಪಟ್ಟು ಹಿಡಿದ ಅಣ್ಣಾ ತನ್ನ ಆರೋಗ್ಯವನ್ನು ನಿರ್ಲಕ್ಷಿಸಿಯೂ ಹೋರಾಟ, ಸತ್ಯಾಗ್ರಹವನ್ನು ಆರಂಭಿಸಿರುವುದಿತ್ತು. ಅಣ್ಣಾನ ಹೋರಾಟಕ್ಕೆ ಸಿಕ್ಕ ಬೆಂಬಲ ಆಳುವ ಪಕ್ಷದ ಸಾಮರ್ಥ್ಯವನ್ನೇ ಕೆಣಕಿದಂತಿತ್ತು. ಹೀಗಾಗಿ ಅಣ್ಣಾನನ್ನು ಬಂಧಿಸಿ ಬಿಡುಗಡೆ ಮಾಡಿಯೂ ಆಯಿತು. ನಂತರ ಬಿಡುಗಡೆ ಮಾಡಿ ಅವರ ಸತ್ಯಾಗ್ರಹಕ್ಕೆ ರಾಮಲೀಲಾದಂತಹ ಚಾರಿತ್ರಿಕವಾದ ಸ್ಥಳವನ್ನೇ ನೀಡಿತು.

ಅಣ್ಣಾ ಒಡ್ಡುವ ಶರತ್ತುಗಳನ್ನು ಒಪ್ಪಿಕೊಂಡು ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ ಸರ್ಕಾರ ರಾಜ್ಯಸಭೆಯಲ್ಲಿ ಜನಲೋಕಪಾಲ ಮಸೂದೆಯನ್ನು ಒಪ್ಪಿಕೊಳ್ಳುವುದರಿಂದ ಹಿಂದೆ ಸರಿಯುವುದರಲ್ಲಿ ಅದರದೇಯಾದ ಕೆಲ ರಾಜಕೀಯ ಕಾರಣಗಳು ಇರಬಹುದಾದರೂ ಆ ಮೂಲಕ ಪರೋಕ್ಷವಾಗಿ  ಅಣ್ಣಾ ಹೋರಾಟದ ಸತ್ವ ಕಡಿಮೆ ಮಾಡುವಲ್ಲಿಯೂ ಅವರ ರಾಜಕೀಯ ಧೋರಣೆ ಕಾರಣವಾಯಿತು. ಅದೇ ವೇಳೆಗೆ ಈ ಜನಲೋಕಪಾಲ ಮಸೂದೆಯನ್ನು ಯಾರು ವಿರೋಧಿಸಿದರು ಎನ್ನುವುದಕ್ಕಿಂತಲೂ ರಾಜಕೀಯ ಹಿತಾಸಕ್ತಿಗಳ ಗಮನವೇ ಇಲ್ಲಿ ಮುಖ್ಯವಾಗಿ ಬಲಿಷ್ಟ ಲೋಕಪಾಲ ಮಸೂದೆ ಸೊರಗುವಂತಾಯಿತು. ಅದೇ ವೇಳೆಗೆ ಅಣ್ಣಾ ಬಳಗದಲ್ಲಿಯ ಕೆಲವರ ಮಾತುಗಳಲ್ಲಿ ಗೊಂದಲಗಳು, ರಾಜಕೀಯ ಪಕ್ಷವೊಂದರ ಪರವಾದ ಮಾತುಗಳಂತೆ ಕೇಳಬರತೊಡಗಿದವು. ಪರಿಣಾಮವಾಗಿ ಕಳೆದ ಜನವರಿಯಲ್ಲಿ ಅಣ್ಣಾ ಟೀಮಿಗೆ ಇದ್ದ ನಾಯಕತ್ವದ ರಭಸ ವರ್ಷದ ಅಂತ್ಯದಲ್ಲಿ ತನ್ನ ಗಡುಸುತನವನ್ನು ಕಳೆದುಕೊಳ್ಳತೊಡಗಿತು.

ಜನತೆಗೆ ಅದರಲ್ಲೂ ದುಡಿದು ಬದುಕುವ ಸಾಮಾನ್ಯರಿಗೆ ಈ ಲೋಕಪಾಲ ಮಸೂದೆಯ ಜಾರಿಗೊಳ್ಳುವಿಕೆ, ಜಾರಿಯಾಗದಿರುವಿಕೆ ಎರಡೂ ಅಷ್ಟಾಗಿ ಬಾಧಿಸುವುದಿಲ್ಲ. ಹಾಗೆಯೇ ಭ್ರಷ್ಟಾಚಾರದ ವಿರೋಧಿ ಆಂದೋಲನವನ್ನು ನಿರಂತರವಾಗಿ ನೆನಪಿಟ್ಟು ಆ ದಿಶೆಯಲ್ಲಿ ನಡೆಯಬೇಕಾದ ನಿರಂತರ ಹೋರಾಟವನ್ನು ರೂಪಿಸುವಷ್ಟು ಇವರ ಬದುಕು ಸುಭದ್ರವಾಗಿಲ್ಲ. ಈಗ ಅದೇ ಅಣ್ಣಾ ಮತ್ತೆ ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿದರೆ ಸಾಮಾನ್ಯ ಮಧ್ಯಮವರ್ಗದ ಜನ ಮೊದಲಿನ ಹುರುಪಿನಲ್ಲಿಯೇ ಅಣ್ಣಾ ಕೂಗಿಗೆ ಸ್ಪಂದಿಸುತ್ತಾರೆ ಎಂದು ಹೇಳುವಂತಿಲ್ಲ. ಯಾಕೆಂದರೆ ಸಾಮಾನ್ಯನ ಬದುಕೇ ಹಾಗಿದೆ. ಆತ ಯಾವುದನ್ನೂ ತುಂಬಾ ದೀರ್ಘ ಕಾಲದವರೆಗೆ ನೆನಪಿಟ್ಟುಕೊಳ್ಳಲಾರ. ಜೊತೆಗೆ ಅತ್ಯಂತ ಬೇಗ ಆತ ಒಂದು ವ್ಯವಸ್ಥೆಯ ಬಗ್ಗೆ ಸಿನಿಕತನವನ್ನು ಹೊಂದುವುದೂ ಇದೆ.

ನಮ್ಮ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ರಾಜಕಾರಣಿಗಳು ತಮ್ಮ ಕರಾಳ ವ್ಯವಹಾರಗಳಿಗೆ ಕುತ್ತು ಬರುವಂತಹ ಯಾವ ನಿಯಮಗಳನ್ನೂ ಇಲ್ಲಿಯವರೆಗೆ ಒಪ್ಪಿಕೊಂಡಿರುವುದು ತೀರಾ ಅಪರೂಪ. ಅಂತಹದರಲ್ಲಿ ಪ್ರಧಾನಮಂತ್ರಿಯನ್ನೊಳಗೊಂಡು ಎಲ್ಲರೂ ಲೋಕಪಾಲ ಮಸೂದೆಗೆ ಒಳಪಡಬೇಕು ಎನ್ನುವ ಅಣ್ಣಾನ ಒತ್ತಾಸೆ ಈಡೇರುವದಾದರೂ ಹೇಗೆ..?

ಅಣ್ಣಾ ಜನಲೋಕಪಾಲ ಮಸೂದೆಯ ವಿಷಯದಲ್ಲಿ ತನ್ನ ಮಿತಿಗಳನ್ನೂ ಮೀರಿ ಹೋರಾಟ ಮಾಡಿದ. ಹಾಗೆಯೇ ಹಿಂದೆಂದೂ ಯಾರಿಗೂ ಸಿಗದ ಅಪಾರ ಪ್ರಮಾಣದ ಜನಬೆಂಬಲವೂ ಅವನಿಗೆ ದೊರೆಯಿತು. ಅಂತಿಮವಾಗಿ ಆಗಬೇಕಾದ ಮಹತ್ತರವಾದ ಕೆಲಸವೊಂದು ಹಾಗೇ ಉಳಿದುಹೋಯಿತು. ಪರೋಕ್ಷವಾಗಿ ಈ ಬಗೆಯ ಬಲಿಷ್ಟ ಲೋಕಪಾಲ ಮಸೂದೆ ಬಹುತೇಕ ರಾಜಕಾರಣಿಗಳಿಗೆ ಬೇಕಾಗದಿರುವಂತೆ, ಭ್ರಷ್ಟ ಅಧಿಕಾರಿ ಸಮೂಹಕ್ಕೂ ಬೇಕಾಗಿಲ್ಲ. ಇನ್ನು ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ ಜನಸಾಮಾನ್ಯ ಮಾತ್ರ ತನ್ನ ದೈನಂದಿನ ಕೆಲಸ ಕಾರ್ಯಗಳ ನಿರ್ವಹಣೆಯಲ್ಲಿ ಎಂದಿನಂತೆ ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಾ ಹಾಯಾಗಿದ್ದಾನೆ. ಮತ್ತೆ ಅಣ್ಣಾ ಒಂದೊಮ್ಮೆ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಕರೆ ನೀಡಿದರೆ ಭ್ರಷ್ಟಾಚಾರ ವಿಷಯದಲ್ಲಿ ಅಪಾರ ಪ್ರಮಾಣದಲ್ಲಿ ಮಾತಾಡಿ, ಆ ಬಗ್ಗೆ  ಕೇಳಿ ಯಥಾಸ್ಥಿತಿಯನ್ನೇ ಅನುಭವಿಸುವಂತಾದ ಜನ ಅದೇ ಮೊದಲಿನ ಪ್ರಮಾಣದಲ್ಲಿ ಅಣ್ಣಾಗೆ ಸಾಥ್ ನೀಡುತ್ತಾರೆಂದು ನನಗನಿಸದು.

ನೀವು ಪದವೀಧರರೇ? ನಿಮ್ಮ ಜವಾಬ್ದಾರಿ ನಿರ್ವಹಿಸಿ…

ಸ್ನೇಹಿತರೆ,

ಇದನ್ನು ನಾನು ರಾಮಚಂದ್ರ ಗೌಡ ಎಂಬ ಮಾಜಿ ಸಚಿವರ ಪ್ರಸ್ತಾಪದೊಂದಿಗೆ ಆರಂಭಿಸುತ್ತೇನೆ. ಕಾಸಗಲ ಕುಂಕುಮ ಇಟ್ಟುಕೊಂಡೇ ಜನರಿಗೆ ಕಾಣಿಸುವ ಈ ಕುಂಕುಮಧಾರಿ ನಿಮಗೆ ಗೊತ್ತಿರಲೇಬೇಕು. ರೇಣುಕಾಚಾರ್ಯ ಎಂಬ ಹಾಲಿ ಮಂತ್ರಿ ಯಡ್ಡ್‌ಯೂರಪ್ಪನವರಿಗೆ ಜೊತೆಬಿಡದಂತೆ ಕಾಣಿಸಿಕೊಳ್ಳುತ್ತಿರುವುದಕ್ಕಿಂತ ಮೊದಲು ಯಡ್ಡ್‌ಯೂರಪ್ಪನವರ ಜೊತೆಗೆ ಸದಾ ಕಾಣಿಸುತ್ತಿದ್ದವರು ಇವರು. ಒಂದೂವರೆ ವರ್ಷದ ಹಿಂದಿನ ತನಕ ಬಿಜೆಪಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದವರು.

ಪ್ರತಿ ಸರ್ಕಾರ ಬಗ್ಗೆ ಜನರಿಗೆ ಅನ್ನಿಸುತ್ತಿರುತ್ತದೆ, ‘ಇದು ಇತಿಹಾಸದಲ್ಲಿಯೇ ಕೆಟ್ಟ ಸರ್ಕಾರ,’ ಎಂದು. ಆದರೆ ಈಗಿನ ಹಾಲಿ ಬಿಜೆಪಿ ಸರ್ಕಾರದ ಬಗ್ಗೆಯಂತೂ ಆ ಮಾತನ್ನು ಪೂರ್ವಾಗ್ರಹಗಳಿಲ್ಲದೇ ಹೇಳಬಹುದು. ಇದಕ್ಕಿಂತ ಕೆಟ್ಟ ಸರ್ಕಾರ ಹಿಂದೆಂದೂ ಬಂದಿರಲಿಲ್ಲ. ಒಂದು ಕಾಲದಲ್ಲಿ ಕರ್ನಾಟಕದಲ್ಲಿ ಅತಿ ಭ್ರಷ್ಟ ಮುಖ್ಯಮಂತ್ರಿ ಎನ್ನಿಸಿದ್ದ ಬಂಗಾರಪ್ಪನವರೇ ಅವರು ತೀರಿಕೊಳ್ಳುವ ಹೊತ್ತಿಗೆ ದೇವಮಾನವರಾಗಿ ಕಾಣಿಸುತ್ತಿದ್ದರು. ಅದಕ್ಕೆ ಕಾರಣ ಬಂಗಾರಪ್ಪ ಭ್ರಷ್ಟಾಚಾರಿಗಳಲ್ಲ ಎಂದು ರುಜುವಾತಾಯಿತು ಎಂದಲ್ಲ. ಈ ಬಿಜೆಪಿ ಸರ್ಕಾರದ ಮುಂದೆ ಹಿಂದಿನ ದರೋಡೆಕೋರರು ಭ್ರಷ್ಟರು ದುಷ್ಟರೆಲ್ಲ ಸಂತರಾಗಿ ಕಾಣಿಸುತ್ತಿದ್ದಾರೆ ಎಂದು ಹೇಳಿದರೆ ಅಷ್ಟೇ ಸಾಕು. ಉಳಿದದ್ದು ತಾನಾಗಿ ಅರ್ಥವಾಗಬೇಕು.

ಇಂತಹ ಬ್ರಹ್ಮಾಂಡ ಭ್ರಷ್ಟ ಸರ್ಕಾರದಲ್ಲೂ, ಅಪಮೌಲ್ಯ ಮತ್ತು ಅನೀತಿಗಳನ್ನೆ ಹಾಸು ಹೊದ್ದು ಉಸಿರಾಡುತ್ತಿರುವ ಈ ಸರ್ಕಾರದಲ್ಲೂ ಭ್ರಷ್ಟಾಚಾರದ ವಿಚಾರಕ್ಕೆ ಒಬ್ಬ ಮಂತ್ರಿಯ ರಾಜೀನಾಮೆ ಕೇಳಿ ಪಡೆಯಲಾಯಿತು. ಅಂದರೆ ಆ ಹಗರಣ ಇನ್ನೆಷ್ಟು ಸ್ಪಷ್ಟವಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ. ಮೈಸೂರು ಮತ್ತು ಹಾಸನದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ನೇಮಕಾತಿಯಲ್ಲಿ ನಡೆದ ಭ್ರಷ್ಟ ರೀತಿನೀತಿಗಳ, ನೌಕರಿ ಮಾರಾಟದ, ಹಗರಣ ಅದು. ಅದರ ರೂವಾರಿ ಈ ರಾಮಚಂದ್ರ ಗೌಡರು. ಬಿಜೆಪಿಯಂತಹ ಬಿಜೆಪಿಗೇ, ಯಡ್ಡ್‌ಯೂರಪ್ಪನಂತಹ ಯಡ್ಡ್‌ಯೂರಪ್ಪನವರಿಗೇ ಆ ಹಗರಣವನ್ನು, ರಾಮಚಂದ್ರ ಗೌಡರನ್ನು ಸಮರ್ಥಿಸಿಕೊಳ್ಳಲಾಗಲಿಲ್ಲ. ರಾಮಚಂದ್ರ ಗೌಡರ ರಾಜೀನಾಮೆಯನ್ನು ಬಲವಂತವಾಗಿ ಪಡೆಯಬೇಕಾಯಿತು. ಗೌಡರ ಸಚಿವ ಸ್ಥಾನ ಹೋಯಿತು. ಆದರೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಸಂಪುಟದರ್ಜೆಯ ಸ್ಥಾನಮಾನ ಸಿಕ್ಕಿತು. ಆ ಹಗರಣದ ಬಗ್ಗೆ ವಿಚಾರಣೆ ನಡೆಯಲಿಲ್ಲ. ಆರೋಪ ಸುಳ್ಳು ಎಂದು ಸಾಬೀತಾಗಲಿಲ್ಲ. ಸಚಿವ ಸ್ಥಾನ ಕಿತ್ತುಕೊಂಡು ಮತ್ತೊಂದು ಸಂಪುಟ ದರ್ಜೆ ಸ್ಥಾನಮಾನ ಕೊಟ್ಟದ್ದೇ ಶಿಕ್ಷೆ ಎಂದುಕೊಳ್ಳಬೇಕಾದ ಬುದ್ದಿವಂತಿಕೆ ಜನರದ್ದು. ಇನ್ನು, ಅವರ ಶಾಸಕ ಸ್ಥಾನಕ್ಕಂತೂ ಯಾವುದೇ ಸಮಸ್ಯೆಯಾಗಲಿಲ್ಲ.

ಅಂದ ಹಾಗೆ, ಈ ರಾಮಚಂದ್ರ ಗೌಡರು ಬೆಂಗಳೂರು ನಗರ ಮತ್ತು ಜಿಲ್ಲೆಯ ಪದವೀಧರರನ್ನು ಪ್ರತಿನಿಧಿಸುತ್ತಿರುವ ವಿಧಾನಪರಿಷತ್ ಶಾಸಕ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ನಮ್ಮ ಅಕ್ಷರಸ್ತ, ವಿದ್ಯಾವಂತ, ಘನತೆವೆತ್ತ, ಬುದ್ದಿವಂತ, ಜವಾಬ್ದಾರಿಯುತ ಪದವೀಧರರು ನೇರವಾಗಿ ಮತ್ತು ಪರೋಕ್ಷವಾಗಿ ಆಯ್ಕೆ ಮಾಡಿಕೊಂಡಿರುವ ತಮ್ಮ ಪ್ರತಿನಿಧಿ.

ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಪದವೀಧರರು ಒಮ್ಮೆ ತಲೆತಗ್ಗಿಸಿದರೆ ಅದು ಅವರ ಒಳ್ಳೆಯತನವನ್ನು ತೋರಿಸುತ್ತದೆ.

ಆದರೆ ತಲೆತಗ್ಗಿಸಿದವರು ಮತ್ತು ಇಂತಹ ಕೃತ್ಯದಲ್ಲಿ ಭಾಗಿಯಾಗಬಾರದು ಎಂದುಕೊಂಡವರಿಗೆ ಒಂದು ಅವಕಾಶ ಇನ್ನು ನಾಲ್ಕು ತಿಂಗಳಿನಲ್ಲಿ ಬರಲಿದೆ. ಇದೇ ರಾಮಚಂದ್ರ ಗೌಡರು ಬಿಜೆಪಿಯಿಂದ ಬೆಂಗಳೂರಿನ ಪದವೀಧರರಿಂದ ಪುನರಾಯ್ಕೆ ಅಗಲು ಹೊರಟಿದ್ದಾರೆ.

ನೀವು ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಪದವೀಧರರಾಗಿದ್ದರೆ ಬರಲಿರುವ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಪಾಲ್ಗೊಳ್ಳಿ ಮತ್ತು ಮತ ಚಲಾಯಿಸಿ ಎಂದು ಆಗ್ರಹಿಸಿದರೆ ಅದು ಕಠಿಣವಾದ ಅಥವ ಅಹಂಕಾರದ ಆಗ್ರಹವಲ್ಲ ಎಂದು ಭಾವಿಸುತ್ತೇನೆ.

ಅಂದ ಹಾಗೆ, ಮಿಕ್ಕ ಪಕ್ಷಗಳ ಅಭ್ಯರ್ಥಿಗಳೂ ರಾಮಚಂದ್ರ ಗೌಡರಿಗಿಂತ ಉತ್ತಮರು ಎಂದೇನೂ ನಾನು ಹೇಳುವುದಿಲ್ಲ. ಆದರೆ ಅವರು ಹೊಸಬರೇ ಆಗಿರುತ್ತಾರೆ. ಕನಿಷ್ಟ “ಅನುಮಾನದ ಲಾಭ”ವಾದರೂ (Benefit of the Doubt) ಅವರಿಗೆ ಸಿಗಬೇಕು. ಮತ್ತು ನಿಲ್ಲಲಿರುವ ಅಭ್ಯರ್ಥಿಗಳಲ್ಲಿ ಇರುವುದರಲ್ಲೇ ಉತ್ತಮರನ್ನು ಆರಿಸುವ ಜವಾಬ್ದಾರಿ ನಮ್ಮದು. ಮತ್ತು ನಾವು ಈ ಭ್ರಷ್ಟರಿಗೆ ಮತ್ತು ಅಯೋಗ್ಯರಿಗೆ ವಿರುದ್ಧವಾಗಿ ಚಲಾಯಿಸುವ ಒಂದೊಂದು ಮತಕ್ಕೂ ಅವರಿಗೆ ಬೀಳುವ ಮತಕ್ಕಿಂತ ಹೆಚ್ಚಿನ ಮೌಲ್ಯ, ನೈತಿಕತೆ ಮತ್ತು ಪ್ರಾಮಾಣಿಕತೆ ಇರುತ್ತದೆ.

ಆದರೆ, ನೀವು ಪದವೀಧರರಾಗಿದ್ದರೂ ಮತ ಚಲಾಯಿಸಲು ಮೊದಲು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಅದು ಬಹಳ ಸುಲಭ. ಒಂದು ಅರ್ಜಿ ತುಂಬಬೇಕು. ಅದರಲ್ಲಿ ನಿಮ್ಮ ಹೆಸರು, ವಿಳಾಸ, ನಿಮ್ಮ ಪದವಿ ಮತ್ತು ಅದನ್ನು ಪಡೆದ ವರ್ಷ, ಇಷ್ಟೇ ತುಂಬಬೇಕಿರುವುದು. (ಅರ್ಜಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.) ಇಷ್ಟು ತುಂಬಿದ ಅರ್ಜಿಯನ್ನು ನಿಮ್ಮ ಪದವಿ ಪ್ರಮಾಣ ಪತ್ರ ಮತ್ತು ನಿಮ್ಮ ವಿಳಾಸವನ್ನು ದೃಢೀಕರಿಸುವ ದಾಖಲೆಯ ಎರಡು ಪ್ರತಿಗಳೊಂದಿಗೆ (ವೋಟರ್ ಕಾರ್ಡ್/ರೇಷನ್ ಕಾರ್ಡ್/ವಿದ್ಯುತ್ ಅಥವ ಫೋನ್ ಬಿಲ್/ಬಾಡಿಗೆ ಕರಾರು ಪತ್ರ, ಇತ್ಯಾದಿಗಳಲ್ಲಿ ಯಾವುದಾದರೂ ಒಂದು) ಸಂಬಂಧಪಟ್ಟ ಸರ್ಕಾರಿ ಕಚೇರಿಯಲ್ಲಿ ಕೊಟ್ಟರೆ ಮುಗಿಯಿತು. ಇದು ಅಸಾಧ್ಯವೂ ಅಲ್ಲ. ಮಾಡದೆ ಸುಮ್ಮನಿದ್ದುಬಿಡುವಷ್ಟು ಅಪ್ರಾಮಾಣಿಕರೂ ಪಲಾಯನವಾದಿಗಳೂ ನೀವಲ್ಲ. ಅಲ್ಲವೇ?

ಮತ್ತು, ಇದು ಕೇವಲ ಬೆಂಗಳೂರಿನ ಪದವೀಧರರಿಗಷ್ಟೇ ಸೀಮಿತವಲ್ಲ. ರಾಜ್ಯದ ಎಲ್ಲಾ ಪದವೀಧರರಿಗೂ ಸಂಬಂಧಿಸಿದ್ದು. ಪ್ರತಿಯೊಬ್ಬ ಪದವೀಧರನಿಗೂ ಒಬ್ಬ ವಿಧಾನಪರಿಷತ್ ಶಾಸಕನನ್ನು ಆಯ್ಕೆ ಮಾಡಿಕೊಳ್ಳುವ ಒಂದು ವೋಟ್ ಇದೆ. ಹೆಸರು ನೊಂದಾಯಿಸಿ. ಚುನಾವಣೆಯ ದಿನ ಯೋಗ್ಯರಿಗೆ ಮತ ಚಲಾಯಿಸಿ. ಈ ಅಸಂಗತ ಸಮಯದಲ್ಲಿ, ಅಪ್ರಾಮಾಣಿಕತೆ, ಭ್ರಷ್ಟಾಚಾರ ತಾಂಡವನೃತ್ಯ ಮಾಡುತ್ತಿರುವ ಕರ್ನಾಟಕದ ಈ ಅಸಹಾಯಕ ಪರಿಸ್ಥಿತಿಯಲ್ಲಿ ಒಂದಷ್ಟು ಯೋಗ್ಯರನ್ನು ಪ್ರಾಮಾಣಿಕರನ್ನು ಶಾಸನಸಭೆಗೆ ಕಳುಹಿಸಿ. ಹಳ್ಳಿಯ ಜನ, ಸ್ಲಮ್ಮಿನ ಜನ, ಬಡವರು, ಜಾತಿವಾದಿಗಳು, ದುಡ್ಡಿಗೆ ಮತ್ತು ಜಾತಿಗೆ ಮರುಳಾಗಿ ವೋಟ್ ಮಾಡುತ್ತಾರೆ ಅನ್ನುತ್ತೀರಲ್ಲ, ಅವರ್‍ಯಾರಿಗೂ ಅವಕಾಶ ಇಲ್ಲದ ಈ ಚುನಾವಣೆಯಲ್ಲಿ ನೀವು ಹಾಗೆ ಅಲ್ಲ ಎಂದು ನಿರೂಪಿಸಿ. ಮಾರ್ಗದರ್ಶಕರಾಗಿ. ಮುಂದಾಳುಗಳಾಗಿ. ನೀವು ಪಡೆದ ಪದವಿಗೂ ಒಂದು ಘನತೆ ಇದೆ ಎಂದು ತೋರಿಸಿ.

ನೀವು ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಪದವೀಧರರಾದರೆ, ಈ ವೆಬ್‌ಸೈಟಿನಲ್ಲಿ ನಿಮ್ಮ ತುಂಬಿದ ಅರ್ಜಿ ಮತ್ತು ಸಲ್ಲಿಸಬೇಕಾದ ಸರ್ಕಾರಿ ಕಚೇರಿ ಮತ್ತು ವಿಳಾಸ ಎಲ್ಲವೂ ಸುಲಭವಾಗಿ ಲಭ್ಯವಿದೆ. ಅದನ್ನು ಬಳಸಿಕೊಳ್ಳಿ. ನಗರದ ಹೊರಗಿರುವವರಾದರೆ, ನಿಮ್ಮ ತಾಲ್ಲೂಕಿನ ತಹಸಿಲ್ದಾರ್ ಕಚೇರಿ ಅರ್ಜಿ ತಲುಪಿಸಬೇಕಾದ ಸ್ಥಳ ಎನ್ನಿಸುತ್ತದೆ. ನಿಮ್ಮ ತಹಸಿಲ್ದಾರ್ ಕಚೇರಿಗೆ ಫೋನ್ ಮಾಡಿ ತಿಳಿದುಕೊಳ್ಳಿ.  ಕೊನೆಯ ದಿನಾಂಕ ಎಂದೆಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ಸಾಧ್ಯವಾದಷ್ಟು ಬೇಗ ಮಾಡಿ.

ಸ್ಪೈಡರ್‌ಮ್ಯಾನ್ ಸಿನೆಮಾದಲ್ಲಿ ಒಂದು ವಾಕ್ಯ ಬರುತ್ತದೆ: “With great power comes great responsibility.” ನಾವು ಪಡೆದುಕೊಳ್ಳುವ ಪದವಿಯೊಂದಿಗೆ ನಮಗೆ ಜವಾಬ್ದಾರಿಗಳೂ ಅವಕಾಶಗಳೂ ಅನುಕೂಲಗಳೂ ಬರುತ್ತವೆ. ಆ ಜವಾಬ್ದಾರಿಗಳನ್ನು ನಿಭಾಯಿಸಲು ನಾವು ಅನರ್ಹರು ಅಥವ ಆಗದವರು ಎಂದಾದರೆ ಆ ಪದವಿಗೂ ಅನುಕೂಲಗಳಿಗೂ ನಾವು ಅನರ್ಹರು. ಇನ್ನೊಬ್ಬರನ್ನು ದೂರುತ್ತ ಸಿನಿಕರಾಗುತ್ತ ಇರುವುದಕ್ಕಿಂತ ನಾವು ನಮ್ಮ ನಾಗರಿಕ ಜವಾಬ್ದಾರಿಗಳನ್ನು ನಿಭಾಯಿಸುತ್ತಿರೋಣ.

ಇಷ್ಟನ್ನು ಈ ಸಂದರ್ಭದಲ್ಲಿ ಕರ್ನಾಟಕದ ಪದವೀಧರರಿಂದ ಬಯಸುವುದು ತಪ್ಪೆಂದಾಗಲಿ ಅಪರಾಧವೆಂದಾಗಲಿ ನಾನು ಭಾವಿಸುತ್ತಿಲ್ಲ.

ನಮಸ್ಕಾರ,
ರವಿ ಕೃಷ್ಣಾರೆಡ್ಡಿ

ಭ್ರಷ್ಟಾಚಾರ ವಿರೋಧೀ ಹೋರಾಟ – ಉತ್ತರಿಸದೇ ಉಳಿದ ಪ್ರಶ್ನೆಗಳು

-ಸಂಜ್ಯೋತಿ ವಿ.ಕೆ.

ಅಣ್ಣಾ ಹಜಾರೆ, ಅವರ ಉಪವಾಸ ಸತ್ಯಾಗ್ರಹ, ಅವರ ತಂಡದ ಸದಸ್ಯರುಗಳ ತರಹೇವರಿ ಹೇಳಿಕೆಗಳು, ಕೇಂದ್ರ ಸರ್ಕಾರದ ಪ್ರತಿನಿಧಿಗಳ ಅಸಂಬದ್ಧ ಪ್ರತಿಕ್ರಿಯೆಗಳು ಇವೆಲ್ಲ “ಸ್ಫೋಟಕ  ಸುದ್ದಿ”ಗಳಾಗಿ ಎಲ್ಲಾ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಹರಿದಾಡಿದ ನೆನಪುಗಳು ಕರಗುತ್ತಿರುವ ಈ ಗಳಿಗೆಯಲ್ಲಿ ಒಂದು ಪುನರಾವಲೋಕನ…

ಹಾಲಿ ಇರುವ ಕಾನೂನುಗಳನ್ನು ಪ್ರಾಮಾಣಿಕವಾಗಿ ಮತ್ತು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸುವುದರ ಹೊರತಾಗಿಯೂ ಕೇಂದ್ರದ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಲ್ಲ ಒಂದು ಪ್ರಬಲ ಮಸೂದೆಯ ಅಗತ್ಯವಂತೂ ಖಂಡಿತವಾಗಿಯೂ ಇದೆ. ಈ  ನಿಟ್ಟಿನಲ್ಲಿ ಜವಹರಲಾಲ ನೆಹರುರವರ ಕಾಲದಲ್ಲಿಯೇ ರಚಿತವಾಗಿ ಹಲವು ದಶಕಗಳಿಂದ ನೆನಗುದಿಗೆ ಬಿದ್ದಿದ್ದ ಲೋಕಪಾಲ ಮಸೂದೆ, ವಿವಿಧ ಕೇಂದ್ರ ಸರ್ಕಾರಗಳ ಕಾಲದಲ್ಲಿ ಇಣುಕಿ, ಹಣಕಿ ಮತ್ತೆ ಧೂಳು ತಿನ್ನುತ್ತಾ ಕುಳಿತಿತ್ತು. ಕಾಂಗ್ರೆಸ್ ನೇತ್ರತ್ವದ ಯು.ಪಿ.ಎ. ಸರ್ಕಾರ ತನ್ನ “ಕನಿಷ್ಟ ಸಾಮಾನ್ಯ ಕಾರ್ಯಸೂಚಿ”ಯಲ್ಲಿ (ಕಾಮನ್ ಮಿನಿಮಮ್ ಪ್ರೋಗ್ರಾಮ್) ಇದರ ಪ್ರಸ್ತಾಪ ಮಾಡಿತ್ತಾದರೂ, ಕಾಂಗ್ರೆಸ್ ಪಕ್ಷವೂ ಸೇರಿದಂತೆ ಯು.ಪಿ.ಎ.ನ ಯಾವುದೇ ಅಂಗ ಪಕ್ಷಗಳಿಗಾಗಲಿ, ಯು.ಪಿ.ಎ. ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ದೊಡ್ಡ ದನಿಯಲ್ಲಿ ಗುಲ್ಲೆಬ್ಬಿಸುತ್ತಿರುವ ಆದರೆ ತನ್ನದೇ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣ ಕುರುಡು, ಕಿವುಡು, ಮೂಕಾಗಿರುವ ಬಿ.ಜೆ.ಪಿ.ಗಾಗಲೀ ಒಂದು ಪ್ರಬಲವಾದ ಮಸೂದೆಯನ್ನು ಮಂಡಿಸುವ ಮನಸ್ಸಿಲ್ಲ ಎಂಬುದು ಸುಸ್ಪಷ್ಟ.

ಭ್ರಷ್ಟಾಚಾರವೆಂಬ ಆಕ್ಟೋಪಸ್ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳನೆಲ್ಲಾ ವ್ಯಾಪಿಸುತ್ತಾ ತನ್ನ ಬಾಹುಗಳನ್ನು ದಶದಿಕ್ಕುಗಳಲ್ಲೂ ಚಾಚಿ ಮೇರೆ ಮೀರಿ ಬೆಳೆಯುತ್ತಿರುವಾಗ ಅಣ್ಣಾ ಹಜಾರೆ ಎಂಬ ಪ್ರಾಮಾಣಿಕ ಮನುಷ್ಯನೊಬ್ಬ ಜನಲೋಕಪಾಲ ಮಸೂದೆಗಾಗಿ ಏಪ್ರಿಲ್‌ನಲ್ಲಿ ಮೊದಲ ಬಾರಿಗೆ ಉಪವಾಸ ಕೂತಾಗ, ಬೇಸತ್ತಿದ್ದ ಜನರಿಗೆ ಇದೊಂದು ಆಶಾಕಿರಣವಾಗಿ ಕಂಡಿತ್ತು. ದೊಡ್ಡ ಸಂಖ್ಯೆಯಲ್ಲಿ ಜನ ಬಹಿರಂಗವಾಗಿ ಸೇರಲಿಲ್ಲವಾದರೂ ಒಂದು ಅವ್ಯಕ್ತ ಸಹಮತ ಬಹುಪಾಲು ಜನರಲ್ಲಿ ಇದ್ದಂತೆ ಭಾಸವಾಗುತ್ತಿತ್ತು. ಕೇಂದ್ರ ಸರ್ಕಾರದ ಗ್ರಹಿಕೆ ಏನಿದ್ದಿತೋ, ಮಸೂದೆಯ ರೂಪುರೇಷೆಗಳನ್ನು ಚರ್ಚಿಸಲು ನಾಗರಿಕ ಸಮಾಜದ ಪ್ರತಿನಿಧಿಗಳನ್ನೊಳಗೊಂಡಂತೆ ಒಂದು ಜಂಟಿ ಸಮಿತಿಯನ್ನು ರಚಿಸುವ ಇಂಗಿತ ವ್ಯಕ್ತಪಡಿಸಿತು. ಅದಕ್ಕೆ ಒಪ್ಪಿದ ಅಣ್ಣಾ ಸಹಾ “ಸಮಿತಿಯ ವತಿಯಿಂದ ಉತ್ತಮ ಮಸೂದೆಯನ್ನು ಪ್ರಸ್ತುತ ಪಡಿಸುತ್ತೇವೆ. ಅದನ್ನು ಚರ್ಚಿಸಿ ಅಂಗೀಕಾರ ಮಾಡುವ ಅಧಿಕಾರ ಸಂಸತ್ತಿನದ್ದು” ಎಂದು ಮಾಧ್ಯಮಗಳ ಮುಂದೆ ಹೇಳಿದರು. ಅಲ್ಲಿಯವರಗೆ ಎಲ್ಲವೂ ಸುಸೂತ್ರವಾಗಿತ್ತು. ಆದರೆ ಅದರ ಮುಂದಿನ ಘಟ ನಾವಳಿಗಳು ನಾಡಿನ ಬಗ್ಗೆ ನಿಜವಾದ ಕಾಳಜಿ ಹೊಂದಿರುವವರಿಗೆ, ಸಂವಿಧಾನದ ಬಗ್ಗೆ ನಂಬಿಕೆಯಿಟ್ಟ ಪ್ರತಿಯೊಬ್ಬ ಪ್ರಜ್ಞಾವಂತನಿಗೆ ಗಾಬರಿ ಹುಟ್ಟಿಸುವಂತವು.

ಈ ಹಿನ್ನೆಲೆಯಲ್ಲಿ ಅಣ್ಣಾ ಪರ ಅಥವಾ ವಿರುದ್ಧ ಎಂಬ ಪೂರ್ವಾಗ್ರಹಗಳಿಗೆ ಸಿಲುಕದೆಯೇ ಇಡೀ ಪ್ರಕರಣವನ್ನು ವಿಶ್ಲೇಷಿಸುವಾಗ ಕೆಲವು ಪ್ರಶ್ನೆಗಳನ್ನು ಎತ್ತಲೇಬೇಕಿದೆ.

ಮೊದಲಿಗೆ – ‘ನಾಗರಿಕ ಸಮಾಜದ ಪ್ರತಿನಿಧಿಗಳು’ ಎಂಬ ಅಣ್ಣಾ ತಂಡದ ಆಯ್ಕೆಯ ಮಾನದಂಡಗಳೇನು? ದೇಶದ ವಿವಿಧ ಭಾಗಗಳ, ವರ್ಗಗಳ ಪ್ರಾತಿನಿಧ್ಯವಿಲ್ಲದೆ ಇದು ಕೇವಲ ‘ಅಣ್ಣಾ ತಂಡ’ವಾಯಿತೇ ಹೊರತು ನಿಜವಾದ ಸಮಾಜದ ಪ್ರತಿನಿಧಿಗಳ ತಂಡವಾಗಲಿಲ್ಲ. ‘ಇದು ಕೇವಲ ಆಕಸ್ಮಿಕ ಅಥವಾ ಇಂತಹ ಚರ್ಚೆಗಳಲ್ಲಿ ಹೋರಾಟದ ಮೂಲ ಉದ್ದೇಶವನ್ನು ಮುಕ್ಕಾಗಿಸುವುದು ಬೇಡ’ ಎನ್ನುವ ವಾದವನ್ನು ವಾದಕ್ಕಾಗಿಯಾದರೂ ಒಪ್ಪಿಬಿಡಬಹುದಿತ್ತು- ಸಾಮಾಜಿಕ ನ್ಯಾಯದ ಬಗೆಗಿನ ಅಣ್ಣಾರ ನಿಲುವು ಸಮರ್ಪಕವಾಗಿದ್ದಿದ್ದರೆ.

Sansad_Bhavan

Sansad_Bhavan

ಪತ್ರಕರ್ತ ಮುಕುಲ್ ಶರ್ಮ ಅವರು ರಾಳೇಗಾಂವ್ ಸಿದ್ಧಿಯಲ್ಲಿನ ಅಣ್ಣಾರ ಸುಧಾರಣಾ ಕ್ರಮಗಳಿಂದ ಪ್ರಭಾವಿತರಾಗಿದ್ದರೂ, ಅವರ ‘ಬ್ರಾಹ್ಮಣಿಕೆ’ಯ ಧೋರಣೆಯನ್ನೂ ಗುರುತಿಸುತ್ತಾರೆ.  ಅಣ್ಣಾ ತಂದಿರುವ ಜಲ ಸಂರಕ್ಷಣೆ ಮತ್ತು ಸಮರ್ಪಕ ಜಲ ನಿರ್ವಹಣೆ, ಅದರಿಂದ ಹೆಚ್ಚಿದ ಬೇಸಾಯಗಾರರ ಇಳುವರಿ ಮತ್ತು ಆದಾಯ, ಪಾನ ನಿಷೇಧ ಇವೆಲ್ಲಾ ನಿಜಕ್ಕೂ ಅನುಕರಣ ಯೋಗ್ಯ. ಆದರೆ ಜೊತೆಗೇ ದಲಿತರ ಆಹಾರ ಕ್ರಮಗಳ ಬಗೆಗಿನ ಅವರ ಋಣಾತ್ಮಕ ಧೋರಣೆ ಪ್ರಶ್ನಾರ್ಹ. ಅಂತೆಯೇ “ಪ್ರತೀ ಹಳ್ಳಿಯಲ್ಲಿ ಒಬ್ಬ ಚಮ್ಮಾರ, ಕಂಬಾರ, ಝಾಡಮಾಲಿ ಇರಲೇಬೇಕು ಮತ್ತು ಅವರೆಲ್ಲಾ ತಮ್ಮ ಪಾತ್ರ, ಕಸುಬಿನಂತೆ ದುಡಿಯಬೇಕು. ಇದೇ ರಾಳೇಗಾಂವ್ ಸಿದ್ಧಿಯ ಮಾದರಿ” ಎನ್ನುವ ಅಣ್ಣಾರ ಮನಸ್ಸತ್ವ ಇಂತಹ ವಾದವನ್ನು ಒಪ್ಪುವುದನ್ನು ಅಸಾಧ್ಯವಾಗಿಸುತ್ತದೆ. ಮೀಸಲಾತಿಯನ್ನು ವಿರೋಧಿಸುವವರು ಅಣ್ಣಾರ ಹೋರಾಟದೊಡನೆ ತಮ್ಮನ್ನು ಗುರುತಿಸಿಕೊಳ್ಳುವುದು ಕಾಕತಾಳೀಯವಲ್ಲ.

ಎರಡನೆಯದು – ಸರ್ಕಾರ ಪ್ರಸ್ತಾಪಿಸಿದ ಲೋಕಪಾಲ ಮಸೂದೆ ಕೇವಲ ಕಾಗದದ ಮೇಲೂ ಘರ್ಜಿಸಲಾರದಷ್ಟು ದುರ್ಬಲವೆಂಬುದು ನಿಜ. ಆದರೆ ಅಣ್ಣಾ ತಂಡ ರಚಿಸಿದ ಜನಲೋಕಪಾಲ ಮಸೂದೆ ಅದಕ್ಕೆ ಪರ್ಯಾಯವಾಗಬಲ್ಲುದೇ?

  1.  ‘ಜನಲೋಕಪಾಲವನ್ನು ಯಥಾವತ್ತಾಗಿ ಅಂಗೀಕರಿಸಿದರೂ ಭ್ರಷ್ಟಾಚಾರವನ್ನು ಸಂಪೂರ್ಣ ತೊಲಗಿಸಿಬಿಡಲು ಸಾಧ್ಯವಿಲ್ಲ’ ಎಂಬುದನ್ನು ಅದರ ಪರವಾಗಿರುವ ಪರಿಣಿತರೇ ಒಪ್ಪುತ್ತಾರೆ.
  2. ಸಂವಿಧಾನಬದ್ಧವಾಗಿ ಪ್ರಜೆಗಳಿಂದ ಆಯ್ಕೆಯಾದ ಪ್ರಜಾಪ್ರತಿನಿಧಿಗಳೆಲ್ಲರ ಮೇಲೆ (ನ್ಯಾಯಾಂಗವನ್ನೂ ಒಳಗೊಂಡಂತೆ!) ಒಂದು ಸರ್ವತಂತ್ರ ಸ್ವತಂತ್ರವಾದ ಸರ್ವಾಧಿಕಾರಿಯನ್ನು ಸ್ಥಾಪಿಸುವುದು ಪ್ರಜಾಪ್ರಭುತ್ವದ ಮೂಲತತ್ವಕ್ಕೇ ಅಪಾಯಕಾರಿಯಾದದ್ದಲ್ಲವೇ?
  3. ಭ್ರಷ್ಟಾಚಾರವೆಂಬುದು ಮನುಕುಲದ ಇತಿಹಾಸದಷ್ಟೇ ಹಳೆಯ ವಿಷಯವಾದರೂ ಅದರ ವ್ಯಾಪ್ತಿ ಮತ್ತು ಪ್ರಮಾಣ ಇಂದು ಹಿಂದೆಂದಿಗಿಂತಲೂ ಸಹಸ್ರಾರು ಪಟ್ಟು ಹೆಚ್ಚಿದ್ದು, ಜನಸಾಮಾನ್ಯರ  ಕಲ್ಪನೆಗೂ ಮೀರಿದ್ದಾಗಿದೆ. ಇದೇ ಭ್ರಷ್ಟ ಹಣ ಚುನಾವಣೆಗಳನ್ನು ಮತದ ಮಾರುಕಟ್ಟೆಯಾಗಿ ಪರಿವರ್ತಿಸುತ್ತಿದೆ; ನ್ಯಾಯಾಂಗವನ್ನೂ ಭ್ರಷ್ಟಗೊಳಿಸುತ್ತಾ ನ್ಯಾಯವನ್ನು ಬಿಕರಿಯ ವಸ್ತುವನ್ನಾಗಿಸುವ ಧಾಷ್ಟ್ರ್ಯ  ತೋರುತ್ತಿದೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಭಷ್ಟಾಚಾರಗಳೆಲ್ಲ ಇಂದು ಒಂದೇ ಸರಪಣಿಯ ಕೊಂಡಿಗಳಾಗಿದ್ದು, ಅದರ ಮೂಲವಿರುವುದು ಕಾರ್ಪೊರೇಟ್ ಲಾಬಿ, ಕಾರ್ಪೊರೇಟ್ ಭಷ್ಟಾಚಾರದಲ್ಲಿ. ಹೀಗಿರುವಾಗ ಜನಲೋಕಪಾಲ ಮಸೂದೆ ಕಾರ್ಪೊರೇಟ್ ವಲಯವನ್ನು ತನ್ನ ಪರಿಧಿಯಿಂದ ಸಂಪೂರ್ಣ ಹೊರಗಿಟ್ಟಿರುವುದು, ಕೇವಲ ರೋಗದ ಲಕ್ಷಣಗಳನಷ್ಟೇ ಉಪಚರಿಸುತ್ತಾ ಅದರ ಮೂಲವನ್ನು ಕಡೆಗಣಿಸುವ ಕಸರತ್ತಾಗಿದೆ. ಈ ಹಿನ್ನೆಲೆಯಲ್ಲಿಯೇ ಅನಿವಾರ್ಯವಾಗಿ ಅಣ್ಣಾ ತಂಡಕ್ಕೆ ಕಾರ್ಪೊರೇಟ್ ವಲಯದ ಮತ್ತು ಮೇಲ್ಮಧ್ಯಮ ವರ್ಗದ ಕಾರ್ಪೊರೇಟ್ ನೌಕರರ ಬೆಂಬಲವನ್ನು ಅನುಮಾನಿಸಬೇಕಿದೆ. ತನ್ನ ನೌಕರರಿಗೆ ತಮ್ಮದೇ ಸಂಘಟನೆ ರೂಪಿಸಿಕೊಳ್ಳುವ, ತನ್ನ ಹಕ್ಕುಗಳಿಗಾಗಿ ಪ್ರತಿಭಟಿಸುವ ಕನಿಷ್ಟ ಹಕ್ಕನ್ನೂ ಪ್ರತ್ಯಕ್ಷ/ಪರೋಕ್ಷವಾಗಿ ನಿರಾಕರಿಸುವ ಕಾರ್ಪೊರೇಟ್ ಕಂಪನಿಗಳು ಅಣ್ಣಾ ತಂಡದ ಹೋರಾಟವನ್ನು ಬೆಂಬಲಿಸುವ ಸಲುವಾಗಿ ತನ್ನ ನೌಕರರಿಗೆ ಬಿಡುವು ಮಾಡಿಕೊಟ್ಟು ಫ್ರೀಡಂ ಪಾರ್ಕ್‌ಗೆಗೆ ಕಳಿಸುವುದು ಅರಿಯಲಾಗದ ದೊಡ್ಡ ರಹಸ್ಯವೇನಲ್ಲ. ‘ಭ್ರಷ್ಟಾಚಾರ ವಿರುದ್ಧ ಭಾರತ’ ಹೋರಾಟಕ್ಕೆ ಲಕ್ಷಾಂತರ ರೂಪಾಯಿಗಳ ದೇಣಿಗೆ ನೀಡುತ್ತಿರುವುದು ಇಂತಹ ಹಲವಾರು ಕಾರ್ಪೊರೇಟ್ ಕಂಪನಿಗಳೇ.
  4. ಈ ಜನಲೋಕಪಾಲ ಮಸೂದೆ ಸರ್ಕಾರೇತರ ಸಂಸ್ಥೆ(ಎನ್.ಜಿ.ಓ.)ಗಳನ್ನೂ ತನ್ನ ವ್ಯಾಪ್ತಿಯಿಂದ ಹೊರಗಿಡಲು ಬಯಸುತ್ತದೆ. ಎಲ್ಲೋ ಕೆಲವು ಎನ್.ಜಿ.ಓ.ಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆಯಾದರೂ ಇಂದಿನ ಮುಕ್ಕಾಲುವಾಸಿ ಎನ್.ಜಿ.ಓ.ಗಳು ದುಡ್ಡು ಮಾಡುವ ಸಲುವಾಗಿಯೇ ಹುಟ್ಟಿಕೊಳ್ಳುತ್ತವೆಂಬ ವಿಷಯ ಎಲ್ಲರಿಗೂ ತಿಳಿದಿರುವ ಒಂದು ತೆರೆದ ರಹಸ್ಯವಷ್ಟೆ. ಲಕ್ಷಾಂತರ, ಕೋಟ್ಯಾಂತರ ರೂಗಳನ್ನು ನಾನಾ ಮೂಲಗಳಿಂದ (ವಿದೇಶಿ ದೇಣಿಗೆಯೂ ಸೇರಿದಂತೆ) ಸಾರ್ವಜನಿಕ ಉದ್ದೇಶಗಳಿಗಾಗಿ ದೇಣಿಗೆಯಾಗಿ ಪಡೆವ ಈ ಸಂಸ್ಥೆಗಳಿಗೆ ಉತ್ತರದಾಯಿತ್ವವಿರಬೇಕಲ್ಲವೇ? ಎನ್.ಜಿ.ಓ.ಗಳ ಬಹುತೇಕ ದೇಣಿಗೆ ಕಾರ್ಪೊರೇಟ್ ಮೂಲಗಳಿಂದ ಬರುವುದು ಸಹಾ ಈ ಅಪವಿತ್ರ ವರ್ತುಲವನ್ನು ಹಿರಿದಾಗಿಸುತ್ತದೆ. ಅಣ್ಣಾ ತಂಡದ ಅರವಿಂದ ಕೇಜ್ರಿವಾಲ, ಕಿರಣ್ ಬೇಡಿ ತಮ್ಮದೇ ಎನ್.ಜಿ.ಓ.ಗಳನ್ನು ಹೊಂದಿರುವುದು ಮತ್ತು ಈ ತಂಡ ಎನ್.ಜಿ.ಓ.ಗಳನ್ನು ಜನಲೋಕಪಾಲದ ವ್ಯಾಪ್ತಿಗೆ ತರುವುದನ್ನು ವಿರೋಧಿಸುವುದು ಸಹಜವಾಗಿಯೇ ಅನುಮಾನಗಳಿಗೆ ಎಡೆಮಾಡಿಕೊಡುತ್ತದೆ.
  5. ಕೋಟಗಟ್ಟಲೆ ಸಾರ್ವಜನಿಕ ಹಣವನ್ನು ಕೂಡಿಟ್ಟಿರುವ ಮತ್ತು ಅನೇಕ ರಾಜಕಾರಣಿಗಳ ಕಪ್ಪು ಹಣಕ್ಕೆ ದೇಸೀ ಸ್ವಿಸ್ ಬ್ಯಾಂಕ್‌ಗಳಾಗಿರುವ ಮಠಗಳು, ಧಾರ್ಮಿಕ ಕೇಂದ್ರಗಳ ಭ್ರಷ್ಟಾಚಾರದ  ಜನಲೋಕಪಾಲದ ಕಣ್ಣಿಗೇ ಕಾಣದಿರುವುದು ಹೇಗೆ?

ಮೂರನೆಯದಾಗಿ – ಒಂದು ಗಳಿಗೆಯ ಮಟ್ಟಿಗೆ ಈ ಎಲ್ಲಾ ದೂರುಗಳನ್ನೂ, ಅನುಮಾನಗಳನ್ನೂ ಪಕ್ಕಕ್ಕಿಟ್ಟು, ಈ ಇಡೀ ಹೋರಾಟ ನಿಜಕ್ಕೂ ಭ್ರಷ್ಟಾಚಾರದ ವಿರುದ್ಧವೆಂದೂ, ಇದರಿಂದ ಭ್ರಷ್ಟಾಚಾರವನ್ನು ಸಾಕಷ್ಟು ಮಟ್ಟಿಗೆ ನಿಗ್ರಹಿಸಬಹುದೆಂದೂ ನಂಬೋಣ. ಹಾಗಿದ್ದಾಗ್ಯೂ ಈ ಹೋರಾಟದ ರೀತಿ ನಮ್ಮದೇ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಲೇವಡಿ ಮಾಡುವಂತಿದ್ದುದನ್ನು ಒಪ್ಪಬಹುದೇ?

ಜಂಟಿ ಸಮಿತಿಯ ಮೂಲಕ ಜನದನಿಯನ್ನು ನೇರವಾಗಿ ಸಂಸತ್ತಿಗೆ ತಲುಪಿಸಬಹುದಾದ ಒಂದು ಅಪರೂಪದ ಅವಕಾಶ ಅಣ್ಣಾ ಹಜಾರೆಗೆ ದೊರೆತರೂ, ತಮ್ಮ ದೂರದೃಷ್ಟಿಯ ಕೊರತೆಯಿಂದ ಅವರು ಇದನ್ನು ತುಂಬಾ ಅಪ್ರಬುದ್ಧವಾಗಿ ನಿರ್ವಹಿಸಿದಂತೆ ಕಾಣುತ್ತದೆ.

ಸಮಿತಿಯಲ್ಲಿ ಸರ್ಕಾರ ಮತ್ತು ಅಣ್ಣಾ ತಂಡದ ನಡುವೆ ಸಮನ್ವಯ ಸಾಧ್ಯವಾಗದೇ ಹೋದಾಗ ತಾನೇ ಒಂದು ಕರಡು   ಮಸೂದೆ ರಚಿಸಲು ಮುಂದಾದ ಅಣ್ಣಾ ತಂಡ, ಅದನ್ನು ನಿಜವಾದ ಅರ್ಥದಲ್ಲಿ ಜನರ ಲೋಕಪಾಲ ಮಸೂದೆಯಾಗಿ ರೂಪಿಸುವಲ್ಲಿ ಸೋತಿತೆಂದೇ ಹೇಳಬೇಕು. ಇಡೀ ದೇಶಕ್ಕೆ ಸಂಬಂಧಿಸಿದ, ಅದರಲ್ಲೂ ಭ್ರಷ್ಟಾಚಾರದಂತಾ ಆಳ ಬೇರುಗಳುಳ್ಳ ವಿಷಯದಲ್ಲಿ ಮಸೂದೆ ರಚಿಸುವಾಗ ದೇಶದ ವಿವಿಧ ಭಾಗಗಳ ಜನರ, ಪರಿಣಿತರ ಜೊತೆಗೆ ಚರ್ಚಿಸಿ ಅದನ್ನು ರೂಪಿಸಬೇಕಿತ್ತು. ಅದನ್ನು ಜನರ ನಡುವೆ ಒಯ್ದು ಸಾರ್ವಜನಿಕ ಅರಿವು ಮೂಡಿಸುವ ಬಹಿರಂಗ ಚರ್ಚೆಗೆ ಒಡ್ಡಿ, ಒಂದು ಉತ್ತಮ ಮಸೂದೆಯನ್ನಾಗಿ ಬೆಳೆಸಬೇಕಿತ್ತು. ಅಂತಹ ಒಂದು ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಚರ್ಚೆಗೆ ಇಟ್ಟಾಗ ಅದಕ್ಕೊಂದು ಸಮಗ್ರತೆ ಬರುತ್ತಿತ್ತು. ಅದು ದೇಶದ ಒಟ್ಟೂ ಜನರ ಅಭಿಪ್ರಾಯ ಮಂಡನೆಯಾಗಿರುತ್ತದಾದ್ದರಿಂದ ಸಹಜವಾಗಿಯೇ ಸರ್ಕಾರಕ್ಕೆ ಅದನ್ನು ಅನುಮೋದಿಸುವ ಒತ್ತಡವೇರ್ಪಡುತಿತ್ತು. ಇಷ್ಟಾಗಿಯೂ ಒಂದು ಪ್ರಬಲ ಮಸೂದೆ ಅಂಗೀಕಾರವಾಗದೇ ಇದ್ದಿದ್ದರೆ ತಿದ್ದುಪಡಿಗಳ ಮೂಲಕ ಅದನ್ನು ಬಲಪಡಿಸಲು ತಂತಮ್ಮ ಕ್ಷೇತ್ರದ ಜನ ಪ್ರತಿನಿಧಿಗಳ ಮೇಲೆ ಜನರೇ ಒತ್ತಡ ಹೇರುವಂತಾ ಪ್ರಜಾಸತ್ತಾತ್ಮಕ ಮಾರ್ಗದ ಬಗ್ಗೆ ಯೋಚಿಸಬಹುದಿತ್ತು. ಆದರೆ ಅಣ್ಣಾ ತಂಡಕ್ಕೆ ಇದಾವುದಕ್ಕೂ ವ್ಯವಧಾನವೇ ಇದ್ದಂತೆ ತೋರಲಿಲ್ಲ.

ಆದರೆ ಇಂತಹ ಒಂದು ಮಹತ್ವದ ವಿಷಯ ಮತ್ತು ಹೋರಾಟವನ್ನು ಹೀಗೆ ಹಾದಿ ತಪ್ಪಿಸುವಲ್ಲಿ ಪ್ರಸ್ತುತ ಕೇಂದ್ರ ಸರ್ಕಾರದ ಧೋರಣೆಗಳು ಮತ್ತು ತಿಳಿಗೇಡಿತನ, ಎಲ್ಲ ರಾಜಕೀಯ ಪಕ್ಷಗಳ ಅನುಕೂಲಸಿಂಧು ರಾಜಕಾರಣ ಮತ್ತು ಅವಕಾಶವಾದಿ, ಬೇಜವಾಬ್ದಾರಿ ಮಾಧ್ಯಮಗಳ ಪಾತ್ರವೂ ಅಷ್ಟೇ ಇದೆ.

ಒಂದು ಪ್ರಬಲ ಭ್ರಷ್ಟಾಚಾರಿ ವಿರೋಧೀ ಮಸೂದೆ ತರುವ ವಿಷಯದಲ್ಲಿ ಅಪ್ರಾಮಾಣಿಕವಾದ ಕೇಂದ್ರ ಸರ್ಕಾರ, ತನ್ನ ನ್ನು ಶಾಂತಿಯುತವಾಗಿ ಆಗ್ರಹಿಸುವುದನ್ನೂ ಸಹಿಸದೆ ಉಪವಾಸ ಕೂರುವ ಮೊದಲೇ ಅಣ್ಣಾರನ್ನು ಬಂಧಿಸಿ ತನ್ನ ದಮನಕಾರಿ ಮನೋಭಾವ ಪ್ರದರ್ಶಿಸಿತು. ಶಾಂತಿಯುತವಾಗಿ ಬೇರೆ ಬೇರೆ ಹೋರಾಟಗಳಲ್ಲಿ ತೊಢಗಿಕೊಂಡಿದ್ದವರಿಗೂ ತಮ್ಮ ಯಾವ ಹೋರಾಟಗಳಿಗೂ ಯಾವುದೇ ಸರ್ಕಾರ ಸ್ಪಂದಿಸದೇ ಇರುವುದು ಒಂದು ರೀತಿಯ ಹತಾಶೆ ಮೂಡಲು ಕಾರಣವಾಗಿತ್ತು. ಅಂತಹ ಸಂದರ್ಭದಲ್ಲಿಯೇ ನಡೆದ ಈ ಘಟನೆ ಜನರನ್ನು ‘ನಾವು ಹೀಗಲ್ಲದೆ ಮತ್ತೇನು ಮಾಡಿ ರಾಜಕಾರಣಿಗಳಿಗೆ ಚುರುಕು ಮುಟ್ಟಿಸಲು ಸಾಧ್ಯ’ ಎಂಬ ಒಂದು ತಪ್ಪಾದ ಚಿಂತನಾ ಕ್ರಮಕ್ಕೆ ದೂಡಿತು. ಕಾಂಗ್ರೆಸ್ಸಿನ ಕಪಿಲ್ ಸಿಬಾಲ್, ಮನೀಶ್ ತಿವಾರಿಯಂತಹವರು ಬಾಲಿಶ ಹೇಳಿಕೆಗಳನ್ನು ನೀಡುವುದು, ಮತ್ತದನ್ನು ಹಿಂಪಡೆಯುವುದು ಇಂತಹ ಅಪ್ರಬುದ್ಧ ನಡವಳಿಕೆಗಳು ಜನರಲ್ಲಿ ಗೊಂದಲ ಹೆಚ್ಚಿಸಿತು.

Anna_Hazare

Anna_Hazare

ಕಾಂಗ್ರೆಸ್ ಜನಲೋಕಪಾಲದ ವಿರೋಧಿ ಎಂದು ಅಣ್ಣಾ ತಂಡ ಟೀಕಿಸುತ್ತಿದ್ದಾಗ ಕಾಂಗ್ರೆಸ್‌ನ ದಮನಕಾರಿ ನಿಲುವನ್ನು ಟೀಕಿಸುವ ನೆಪದಲ್ಲಿ ರಂಗಕ್ಕಿಳಿದ ಬಿ.ಜೆ.ಪಿ. ಜನರ ಭ್ರಷ್ಟಾಚಾರೀ ವಿರೋಧವನ್ನು ಕಾಂಗ್ರೆಸ್ ವಿರೋಧವನ್ನಾಗಿಸಿ ರಾಜಕೀಯ ಲಾಭ ಗಳಿಸುವ ಹುನ್ನಾರದಲ್ಲಿ ತೊಡಗಿತು. ಅಷ್ಟಕ್ಕೂ ಯು.ಪಿ.ಎ.ಗೆ ಲೋಕಸಭೆಯಲ್ಲಿ ಬಹುಮತವಿದ್ದರೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳಿಗೆ ಬಹುಮತವಿದೆ. ಆದರೆ ಜನಲೋಕಪಾಲದ ಬಗ್ಗೆ  ವಿರೋಧ ಪಕ್ಷಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸುವ ಕೆಲಸವನ್ನು ಅಣ್ಣಾ ತಂಡ ಮಾಡಲಿಲ್ಲ. ಕೊನೆಗೆ ಟಿ. ವಿ. ವಾಹಿನಿಯೊಂದು ಜನಲೋಕಪಾಲದ ಬಗ್ಗೆ ನಿಮ್ಮ ನಿಲುವೇನೆಂದು ಬಿ.ಜೆ.ಪಿ.ಯನ್ನು ಜಗ್ಗಿಸಿ ಕೇಳಿದಾಗ “ನಮಗೂ ಜನಲೋಕಪಾಲದ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ಒಪ್ಪಿಗೆಯಿಲ್ಲ” ಎಂದು ಹೇಳಿಯೂ ಹೇಳದ ಹಾಗೆ ನುಣಿಚಿಕೊಂಡಿದ್ದನ್ನ ಗಮನಿಸಬೇಕಿದೆ.

ಎಲ್ಲೋ ಕೆಲವು ಅಪವಾದಗಳನ್ನು ಹೊರತುಪಡಿಸಿ ಮಾಧ್ಯಮಗಳು ಈ ಇಡೀ ಪ್ರಸಂಗವನ್ನು ಕಾಂಗ್ರೆಸ್ ವರ್ಸಸ್ ಅಣ್ಣಾ ಎಂಬಂತೆ ಬಾಲಿಶವಾಗಿ ( ಅಥವಾ ಪ್ರಜ್ಙಾಪೂರ್ವಕವಾಗಿ) ಚಿತ್ರಿಸಿದವು. ತಮ್ಮ ಟಿ.ಆರ್.ಪಿ. ಹೆಚ್ಚಿಸಿಕೊಳ್ಳುವ ಅಥವಾ ತಮ್ಮ ಕಾರ್ಪೊರೇಟ್ ದೊರೆಗಳ ಹಿತಕಾಯುವುದನ್ನೇ ಪರಮ ಕರ್ತವ್ಯವಾಗಿಸಿಕೊಂಡಿರುವ ಮಾಧ್ಯಮಗಳು ಈ ವಿಷಯದ ಬಗ್ಗೆ ಜನರನ್ನು ಆಳವಾದ ಚಿಂತನೆಗೆ ಹಚ್ಚುವ ಬದಲಿಗೆ, ದೇಶಭಕ್ತಿ ಎಂದರೆ ಭ್ರಷ್ಟಾಚಾರವನ್ನು ವಿರೋಧಿಸುವುದು; ಭ್ರಷ್ಟಾಚಾರವನ್ನು ವಿರೋಧಿಸುವುದೆಂದರೆ ಅಣ್ಣಾ ಟೊಪ್ಪಿ ತೊಟ್ಟು, ಮೇಣದ ಬತ್ತಿ ಹಿಡಿದು ಸಾಗುವುದು, ಎಂಬಂತ ತೆಳು ಚಿಂತನೆಗಳನ್ನೇ ಹಬ್ಬಿಸಿದವು.

ಇನ್ನು ಅಣ್ಣಾ ತಂಡ ಗಾಂಧೀಜಿಯವರ ಉಪವಾಸ ಸತ್ಯಾಗ್ರಹದಂತಹ ಅಹಿಂಸಾತ್ಮಕ ಅಸ್ತ್ರವನ್ನು ಅದರ ಪಾವಿತ್ರ್ಯತೆ, ಘನತೆಗಳ ಅರಿವೇ ಇಲ್ಲದೆ ಒಂದು ಬೆದರಿಕೆಯ ತಂತ್ರವಾಗಿ ಬಳಸುವುದು, ಚರ್ಚೆ, ಸಂವಾದಗಳ ಪ್ರಸ್ತುತತೆಯನ್ನೇ ಕಡೆಗಣಿಸಿ, ತಾನು ಪ್ರಸ್ತಾಪಿಸಿದ ಮಸೂದೆಯನ್ನೇ ಸಂಸತ್ತು ಅಂಗೀಕರಿಸಬೇಕಂದು ಆಗ್ರಹಿಸುವುದು, ಅದಕ್ಕೊಂದು ಗಡುವು ವಿಧಿಸಿ ಇಡೀ ಸಂಸತ್ತು ತನ್ನ ಅಣತಿಯಂತೆ ನಡೆಯಬೇಕೆಂದು ಸರ್ವಾಧಿಕಾರಿ ಧೋರಣೆ ತೋರುವುದು; ಇದೆಲ್ಲದರ ಒಟ್ಟಾರೆ ಪರಿಣಾಮ, ನಮ್ಮ ಸಂವಿಧಾನ, ಪ್ರಜಾಪ್ರಭುತ್ವದ ತತ್ವಗಳ ನಂಬಿಕೆಯ ತಳಪಾಯವನ್ನೇ ಅಲುಗಿಸುವ ಪ್ರಯತ್ನ. ಇದನ್ನು ಒಪ್ಪಿದರೆ ‘ಹೋರಾಟದ ಕಾರಣ ಒಳ್ಳೆಯದಿದ್ದರೆ ಆಯಿತು, ಮಾರ್ಗದ ಬಗ್ಗೆ ಚಿಂತಿಸಬೇಕಿಲ್ಲ’ ಎನ್ನುವಂತ ತಪ್ಪು ಸಂದೇಶ ರವಾನಿಸಿದಂತಲ್ಲವೇ?

ಹಾಗಾದರೆ ಭ್ರಷ್ಟಾಚಾರವನ್ನು ತೊಲಗಿಸುವುದಾದರೂ ಹೇಗೆ? ಇದು ಅಹೋರಾತ್ರಿ ಆಗಿಬಿಡುವ ಕೆಲಸವಲ್ಲ ಮತ್ತು ಸಿನಿಕರಾಗುವ ಅವಶ್ಯಕತೆಯೂ ಇಲ್ಲ. ಭ್ರಷ್ಟಾಚಾರದ ನಿರ್ಮೂಲನೆಗೆ ಒಂದು ಪ್ರಬಲ ಕಾನೂನು ರಚಿಸುವ ಜೊತೆಗೇ ಚುನಾವಣಾ ಸುಧಾರಣೆಯೂ ಆಗಬೇಕಾದ್ದು ಅವಶ್ಯ. ಅಲ್ಲದೆ ಜನ ಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸುವ ಕೆಲಸವೂ ಆಗಬೇಕಿದೆ. ಎಲ್ಲಕ್ಕಿಂತ ಮಿಗಿಲಾಗಿ “ಭ್ರಷ್ಟಾಚಾರ ಸಹಾ ಒಂದು ಮಿತಿಯಲ್ಲಿದ್ದರೆ ಒಂದು ಒಪ್ಪಿತ ಮೌಲ್ಯ” ಎಂಬ ಮನೋಭಾವ ಬದಲಾಗಬೇಕಾದುದು ಬಹು ಮುಖ್ಯ.

(ಚಿತ್ರಕೃಪೆ: ವಿಕಿಪೀಡಿಯ)

Anna_Hazare

ಅಣ್ಣಾ ಹಜಾರೆ ಹೋರಾಟ : ಇದರಿಂದ ಭ್ರಷ್ಟಾಚಾರ ನಿಲ್ಲುತ್ತದೆಯೇ?

ಪರಶುರಾಮ ಕಲಾಲ್

ಅಣ್ಣಾ ಅಂದರೆ ಇಂಡಿಯಾ ಎಂದು ನಾವೆಲ್ಲರೂ ತುಂಬಾ ಗೌರವಿಸಿದ್ದ ಕಿರಣ್ ಬೇಡಿ ಎಂಬ ಮಾಜಿ ಅಧಿಕಾರಿ ಭಾರತದ ಭಾವುಟ ಹಿಡಿದು ಕುಣಿದಾಡುವುದು. ಕೇಜ್ರಿವಾಲ ಎಂಬ ವ್ಯಕ್ತಿ ಥೇಟ್ ಸ್ವಯಂ ಸೇವಾ ಸಂಸ್ಥೆಯ ವಕ್ತಾರನಾಗಿ ಸರ್ಕಾರದ ವಿರುದ್ಧ ಕಿಡಿ ಕಾರುವುದು.

ಪ್ರತಿನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು, ಸಂಘ, ಸಂಸ್ಥೆಗಳು ಮೊಂಬತ್ತಿ ಹಿಡಿದು ಮೆರವಣಿಗೆ ತೆಗೆಯುವುದು ಜನ ಲೋಕ್‌ಪಾಲ್ ಮಸೂದೆಗೆ ಆಗ್ರಹಿಸುವುದು ನನಗೆ ತಮಾಷೆಯಾಗಿ ಕಾಣುತ್ತಿದೆ.
ಈ ಅಸಂಗತ ನಾಟಕವನ್ನು ನಾವು ದಿನ ನೋಡಬೇಕಲ್ಲ ಎಂಬ ಖೇದವೂ ಕಾಡುತ್ತದೆ.

Anna_Hazare

Anna_Hazare (Pic courtesy: wikipedia)

ಸುಮ್ಮನೆ ಹೇಳಿ ಬಿಡುತ್ತೇನೆ. ಎಲ್ಲಾ ಸಂಸದರು ಲೋಕಸಭೆಯಲ್ಲಿ ಒಮ್ಮತದಿಂದ ಒಪ್ಪಿ ಅಣ್ಣಾ ಹಜಾರೆ ತಂಡ ಪ್ರತಿಪಾದಿಸುವ ಜನ ಲೋಕ್‌ಪಾಲ್ ಮಸೂದೆಯನ್ನು ಜಾರಿಗೆ ತಂದು ಬಿಟ್ಟರು ಎಂದು ಕೊಳ್ಳೋಣ. ಭ್ರಷ್ಟಾಚಾರ ಮಾಡಿದ ಪ್ರಧಾನಿ ಅಥವಾ ಸುಪ್ರೀಂಕೋರ್ಟು ನ್ಯಾಯಮೂರ್ತಿ ಇವರನ್ನು ಈ ಲೋಕ್‌ಪಾಲ್ ಗಲ್ಲಿಗೆ ಹಾಕುತ್ತದೆ ಎಂದೇ ಭಾವಿಸೋಣ. ಇದರಿಂದ ಭ್ರಷ್ಟಾಚಾರ ನಿಲ್ಲುತ್ತದೆಯೇ? (ಇದು ಕಾರ್ಯಸಾಧುವಲ್ಲದ ಕಲ್ಪನೆ, ಆ ಮಾತು ಬೇರೆ.)

ನನ್ನ ಪ್ರಶ್ನೆ ಇಷ್ಟು? ಈ ದೇಶದಲ್ಲಿ ಸರ್ಕಾರಿ ನೌಕರರು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಸೇರಿ ಎಷ್ಟು? ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರನ್ನು ಒಳಗೊಂಡ ನೌಕರರು ಎಷ್ಟು? ನಮ್ಮ ಎಲ್ಲಾ ರಾಷ್ಟ್ರೀಯ ಹಾಗೂ ಚೋಟಾ, ಮೋಟಾ ಪ್ರಾದೇಶಿಕ ಪಕ್ಷಗಳ ಜನ ಪ್ರತಿನಿಧಿಗಳ ಸಂಖ್ಯೆ ಎಷ್ಟು? ಇವರಲ್ಲಿ ಗ್ರಾ.ಪಂ.ಸದಸ್ಯರಿಂದ ಹಿಡಿದು, ಲೋಕಸಭೆ ಸದಸ್ಯರವರೆಗೆ ಈ ಎಲ್ಲರನ್ನೂ ಒಟ್ಟು ಸೇರಿಸಿದರೆ ಈ ದೇಶದ ಶೇ.2ರಷ್ಟು ಸಂಖ್ಯೆಯನ್ನು ಇದು ದಾಟುವುದಿಲ್ಲ. ಈ ಎರಡರಷ್ಟು ಸಂಖ್ಯೆಯ ಜನರನ್ನು ತೋರಿಸಿ, ಇಡೀ ರಾಷ್ಟ್ರದ ಜ್ವಲಂತ ಸಮಸ್ಯೆ ಇದೊಂದೆ ಎನ್ನುವಂತೆ ಬಿಂಬಿಸಿ ಹೋರಾಟ ಮಾಡುತ್ತಿರುವುದು ಏನನ್ನು ಸೂಚಿಸುತ್ತದೆ?

ಸುಮ್ಮನೆ ಲೋಕಾಯುಕ್ತರ ವರದಿಯನ್ನು ಪ್ರಸ್ತಾಪಿಸುತ್ತೇನೆ. ಈ ವರದಿ ಆಕ್ರಮ ಗಣಿಗಾರಿಕೆ, ರಾಷ್ಟ್ರದ ಅತ್ಯಮೂಲ್ಯ ಸಂಪನ್ಮೂಲವನ್ನು ಕೊಳ್ಳೆ ಹೊಡೆದು ರಫ್ತು ಮಾಡಿದ್ದು, ತೀವ್ರ ಭ್ರಷ್ಟಾಚಾರ ಎಲ್ಲವನ್ನೂ ಬಯಲು ಮಾಡಿದ್ದಾರೆ. ಸಂತೋಷ ಹೆಗಡೆಯವರು ಸರ್ಕಾರಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಿದ್ದು ನನಗೆ ಇಲ್ಲಿ ಮುಖ್ಯ ಅನ್ನಿಸುತ್ತದೆ. ಸರ್ಕಾರದ ತೆರಿಗೆ ವಂಚಿಸಿದ್ದರ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು, ಈ ಹಣವನ್ನು ಸರ್ಕಾರ ವಶ ಪಡೆಸಿಕೊಳ್ಳಬೇಕು. ಕಾನೂನು ಪ್ರಕಾರ ಇದಕ್ಕಿಂತಲೂ ಬೇರೇನೂ ಮಾಡಲು ಸಾಧ್ಯವಿದೆ ಪಾಪ ಸಂತೋಷ ಹೆಗಡೆಯವರಿಗೆ.

ಇಲ್ಲಿ ಯಡಿಯೂರಪ್ಪ, ಸೋಮಣ್ಣ, ರೆಡ್ಡಿ ಬ್ರದರ್ಸ್ ಇವರೆಲ್ಲಾ ತುಂಬಾ ಭ್ರಷ್ಟರು. ಇದನ್ನೆಲ್ಲಾ ಒಪ್ಪಿಕೊಳ್ಳೋಣ. ಅವರನ್ನು ಜನ ಕ್ಯಾಕರಿಸಿ ಛೀ, ಥೂ ಎಂದು ಉಗಿಯುತ್ತಾರೋ ಬಿಡುತ್ತಾರೋ ಅದನ್ನು ಮುಂದೆ ನೋಡೋಣ.

ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ಘೋಷಿಸಿ ಸತ್ಯ ಹರಿಶ್ಚಂದ್ರರೆಂದು ವೇದಿಕೆ ಮೇಲೆ ಕಂಗೊಳಿಸುವ ಕಾರ್ಪೋರೇಟ್ ಸಂಸ್ಥೆಗಳ ಭ್ರಷ್ಟಾಚಾರದ ಬಗ್ಗೆ ಯಾರು ಮಾತನಾಡಬೇಕು?

ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಿರುವ ಭಾಗವನ್ನು ಹೇಳುವ ಮೂಲಕ ನನ್ನ ಮಾತನ್ನು ವಿಸ್ತರಿಸುವೆ. ರಾಜ್ಯ ಸರ್ಕಾರದ ಒಡೆತನ ಇರುವ ಮೈಸೂರು ಮಿನರಲ್ಸ್ ಲಿ., ಕಂಪನಿ (ಎಂಎಂ.ಎಲ್.) ಜೊತೆ ಜಿಂದಾಲ್ ಉಕ್ಕು ಕಾರ್ಖಾನೆಯು ವಿಜಯನಗರ ಮಿನರಲ್ಸ್ ಪ್ರೈ. ಲಿ., (ವಿಎಂಪಿಲ್) ಎಂಬ ಹೆಸರಿನಲ್ಲಿ ಜಂಟಿಯಾಗಿ ಸಂಡೂರಿನ ಪ್ರದೇಶದಲ್ಲಿ ತಿಮ್ಮಪ್ಪನ ಗುಡಿ ಐರನ್ ಓರ್ ಕಂಪನಿ (ಟಿಐಓಎಂ) ಗಣಿಗಾರಿಕೆ ಆರಂಭಿಸಿತು. ಕರಾರಿನಲ್ಲಿ ಮೂರನೆ ವ್ಯಕ್ತಿಗೆ ಕಬ್ಬಿಣದ ಅದಿರು ಮಾರುವಂತಿಲ್ಲ ಎಂದಿದೆ. ಸೌಥ್ ವೆಸ್ಟ್ ಮೈನಿಂಗ್ ಲಿ., ಕಂಪನಿಯು 85,022 ಮೆಟ್ರಿಕ್  ಟನ್ ಕಬ್ಬಿಣದ ಅದಿರು ರಫ್ತು ಮಾಡಿದೆ. 2003-04ರಿಂದ 2004-05ರವರೆಗೆ 3,65,594 ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದೆ.

ಜಿಂದಾಲ್ ಉಕ್ಕಿನ ಕಾರ್ಖಾನೆಯು ತನ್ನ ಅವಶ್ಯಕತೆಗೆ ಮೀರಿ ಕಬ್ಬಿಣದ ಅದಿರು ಖರೀದಿಸಿದೆ. ಮತ್ತು ಅದನ್ನು ಆಕ್ರಮವಾಗಿ ರಫ್ತು ಮಾಡಿದೆ. ತನ್ನ ಉಕ್ಕು ಉದ್ಯಮಕ್ಕೆ ಬೇಕಾಗಿದ್ದಕ್ಕಿಂತಲೂ 12,97,707 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಖರೀದಿಸಿದೆ. ಆಕ್ರಮವಾಗಿ ಇದನ್ನು ರಫ್ತು ಮಾಡಿದೆ. ಒಂದು ಟನ್ ಕಬ್ಬಿಣದ ಅದಿರಿಗೆ 2500 ರೂ. ಎಂದು ಲೆಕ್ಕ ಹಾಕಿದರೂ ಇದರ ಮೌಲ್ಯವು 324,42,52,500 ರೂ. ಆಗುತ್ತದೆ.

ಈ ಕಾರ್ಪೋರೇಟ್ ಸಂಸ್ಥೆಯ ಗಣಿದಾಹ, ಭ್ರಷ್ಟಾಚಾರದ ಬಗ್ಗೆ ಯಾರು ಮಾತನಾಡಬೇಕು?

ತನ್ನ ಹೊಲಸು ಕೈಗಳನ್ನು ರಾಜಕಾರಣಿಗಳ ಬಿಳಿ ಬಟ್ಟೆಗೆ ಹಚ್ಚಿ, ಅವರ ಜೇಬು ಹೊಲಸು ಮಾಡಿ, ನೋಡಿ ಕಳ್ಳರು ಎಲ್ಲಿದ್ದಾರೆ ಎಂದು ಹೇಳುತ್ತಾ ಭಾರತದ ಭಾವುಟ ಹಿಡಿದು, ಮೊಂಬತ್ತಿ ಹಚ್ಚಿ ತಮ್ಮ ಕರಾಳ ಮುಖ ಬಚ್ಚಿಟ್ಟುಕೊಂಡು ದೇಶಭಕ್ತರಾಗಿ ಕಾಣುವ ಇವರ ಬಗ್ಗೆ ಜನ ಲೋಕ್‌ಪಾಲ್ ಮಸೂದೆಯಲ್ಲಿ ಉತ್ತರ ಇದೆಯಾ? ನನಗೆ ಗೊತ್ತು, ನಾನು ಹುತ್ತ ಹೊಡೆದಿದ್ದೇನೆ. ಪ್ರತಿಕ್ರಿಯೆಗಳು ಬರಲಿ, ನಂತರ ನನ್ನ ಸಂವಾದ ಮುಂದುವರೆಸುವೆ.