Tag Archives: ಕನ್ನಡ ವಿಶ್ವವಿದ್ಯಾಲಯ

ವಿಶ್ರಾಂತ ಕುಲಪತಿ ಡಾ.ಮುರಿಗೆಪ್ಪರವರಿಗೆ ಕೆಲವು ಪ್ರಶ್ನೆಗಳು…


– ಪರಶುರಾಮ ಕಲಾಲ್


ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿ ಒಂದುವರ್ಷ ಹೆಚ್ಚುವರಿಯಾಗಿ ರಾಜ್ಯಪಾಲರಿಂದ ಅವಕಾಶ ಪಡೆದು, ಒಟ್ಟು ನಾಲ್ಕು ವರ್ಷ ಅವಧಿಪೂರ್ಣಗೊಳಿಸಿ, ಡಾ.ಎ. ಮುರಿಗೆಪ್ಪ ಈಗ ವಿಶ್ರಾಂತ ಕುಲಪತಿಗಳಾಗಿದ್ದಾರೆ. ಪ್ರಭಾರಿ ಕುಲಪತಿಯಾಗಿ ಡಾ.ಹಿ.ಚಿ.ಬೋರಲಿಂಗಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.

ಡಾ.ಹಿ.ಚಿ.ಬೋರಲಿಂಗಯ್ಯ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು, ಅವರ ಮೇಲೆ ತನಿಖೆ ನಡೆಸಬೇಕೆಂದು ಸಿಂಡಿಕೇಟ್ ಸಭೆ ತೀರ್ಮಾನಿಸಿದೆ. ಈ ತನಿಖೆ ಇನ್ನೂ ನಡೆಯುತ್ತಿರುವಾಗಲೇ ಈಗ ಪ್ರಭಾರಿ ಕುಲಪತಿಗಳಾಗಿಯೇ ಡಾ.ಹಿ.ಚಿ.ಬೋರಲಿಂಗಯ್ಯ ಕೆಲಸ ನಿರ್ವಹಿಸಬೇಕಿದೆ. ಇದು ಆಡಳಿತಾತ್ಮಕವಾಗಿ ಎಷ್ಟು ಸರಿ ಎಂಬ ಪ್ರಶ್ನೆಯು ಹುಟ್ಟಿಕೊಂಡಿದೆ.

ವಿಶ್ರಾಂತ ಕುಲಪತಿ ಡಾ.ಎ.ಮುರಿಗೆಪ್ಪ ಬುಧವಾರ ಕನ್ನಡ ವಿವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಾಲ್ಕು ವರ್ಷದ ಆಡಳಿತದಲ್ಲಿ ಸಂಕಷ್ಟದ ದಿನಗಳನ್ನು ಹೀಗೆ ನೆನಪಿಸಿಕೊಂಡಿದ್ದಾರೆ:

  1. ಹಂಪಿ ಕನ್ನಡ ವಿಶ್ವವಿದ್ಯಾಲಯದ 80 ಏಕರೆ ಭೂಮಿಯನ್ನು ವಿಜಯನಗರ ಪುನಃಶ್ಚೇತನ ಟ್ರಸ್ಟ್‌ಗೆ ಥೀಮ್ ಪಾರ್ಕ್‌ಗಾಗಿ ನೀಡಲು ನನ್ನನ್ನು ಅಂದಿನ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಿದರು ಎಂದಿದ್ದಾರೆ. ಥೀಮ್ ಪಾರ್ಕ್ ಅನ್ನು ಕನ್ನಡ ವಿವಿ ಪಕ್ಕ ಮಾಡುತ್ತೇವೆ. ಕನ್ನಡ ವಿವಿಯ 80 ಏಕರೆಯಲ್ಲಿ ರಿಸರ್ಚ್ ಸೆಂಟರ್ ಬಿಲ್ಡಿಂಗ್ ಕಟ್ಟಿ ಕನ್ನಡ ವಿವಿ.ಗೆ ಬಿಟ್ಟುಕೊಡುತ್ತೇನೆ ಎಂದು ಹೇಳಿ ಆ ಮೇಲೆ ಈ ಮಾತಿಗೆ ವಿರುದ್ಧವಾಗಿ ನಡೆದುಕೊಂಡರು. ದಾರಿ ತಪ್ಪಿಸಿದರು.
  2. ಯು.ಆರ್. ಅನಂತಮೂರ್ತಿ ಅವರನ್ನು ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಿದಾಗ, “ಅವರಿಗೆ ಯಾಕೆ ನಾಡೋಜ ಗೌರವ ಪದವಿ ನೀಡುತ್ತೀರಿ. ಅದನ್ನು ಕೈ ಬಿಡಿ, ಬೇರೆಯವರನ್ನು ಆಯ್ಕೆ ಮಾಡಿ, ಇಲ್ಲವಾದರೆ ನುಡಿಹಬ್ಬದಲ್ಲಿ ಗಲಾಟೆ ಮಾಡಿಸಬೇಕಾಗುತ್ತದೆ,” ಎಂದು ಸಚಿವರಾದ ಜಿ.ಜನಾರ್ಧನ ರೆಡ್ಡಿ, ಬಿ.ಶ್ರೀರಾಮುಲು, ಶಾಸಕ ಆನಂದ್ ಸಿಂಗ್ ಒತ್ತಾಯಿಸಿದರು. ಅವರಿಗೆ ಸಮರ್ಪಕ ಉತ್ತರ ಹೇಳಿ ನಿಭಾಯಿಸಿದೆ.
  3. ನಾಡೋಜ ಗೌರವ ಪದವಿಯನ್ನು ತಾವು ಸೂಚಿಸಿದವರಿಗೆ ಕೊಡಬೇಕೆಂದು ರಾಜ್ಯಪಾಲ ಹಂಸರಾಜ ಭಾರದ್ವಾಜ, ಉನ್ನತ ಶಿಕ್ಷಣ ಸಚಿವ ವಿ.ಎಸ್.ಆಚಾರ್ಯ ಬೇರೆ ಬೇರೆ ಹೆಸರನ್ನು ಸೂಚಿಸಿದರು. ಅದನ್ನು ಪರಿಗಣಿಸಲಿಲ್ಲ. ಇದರಿಂದ ಕುಲಾಧಿಪತಿಯಾಗಿದ್ದ ರಾಜ್ಯಪಾಲರು, ಸಮ ಕುಲಾಧಿಪತಿಗಳಾದ ಉನ್ನತ ಶಿಕ್ಷಣ ಸಚಿವ ವಿ.ಎಸ್.ಆಚಾರ್ಯ ನುಡಿಹಬ್ಬ ಘಟಿಕೋತ್ಸವಕ್ಕೆ ಬರಲಿಲ್ಲ.
  4. ಸಿಂಡಿಕೇಟ್ ಸದಸ್ಯರಾದವರಿಗೆ ದೂರದೃಷ್ಠಿ ಇರಬೇಕು. ಕನಸು ಇರಬೇಕು. ಅದು ಇಲ್ಲದವರು ಸದಸ್ಯರಾದರೆ ಸಮಸ್ಯೆ ಸೃಷ್ಠಿಯಾಗುತ್ತದೆ. (ಹೀಗೆ ಹೇಳುವ ಮೂಲಕ ಸಿಂಡಿಕೇಟ್ ಸದಸ್ಯರ ಆಯ್ಕೆ ಸರಿ ಇರಲಿಲ್ಲ ಎಂದು ಹೇಳಿದಂತಾಯಿತು. ಅಲ್ಲವೆ?)

ಈ ಸಂದರ್ಭಗಳಲ್ಲಿ ಕುಲಪತಿಗಳಾಗಿ ಡಾ.ಎ.ಮುರಿಗೆಪ್ಪ ಯಾವ ರೀತಿ ದಿಟ್ಟಕ್ರಮ ಕೈಗೊಂಡರು?
ಯಾಕೆ ಈ ಕುರಿತಂತೆ ತಮ್ಮ ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿಲ್ಲ?
ಎಲ್ಲರನ್ನೂ ಸರಿದೂಗಿಸುವ ಪ್ರಯತ್ನ ನಡೆಸುವ ಅಗತ್ಯ ಏನಿತ್ತು? ಇದು ಸರಿಯಾದ ಕ್ರಮವೇ?

ಇಂತಹ ಪ್ರಶ್ನೆಗಳು ಬರುವುದು ಸಹಜ. ಕಠಿಣವಾಗಿಯೇ ನಡೆದುಕೊಂಡೆ ಎಂದೇ ಈಗ ಡಾ.ಎ.ಮುರಿಗೆಪ್ಪ ಹೇಳುತ್ತಾರೆ. ಕನ್ನಡ ವಿವಿಯ ಬೆಳವಣಿಗೆಯನ್ನು ಹತ್ತಿರದಿಂದ ನೋಡಿದವರು, ಅವರೂ ಏನನ್ನೂ ಮಾಡಲಿಲ್ಲ, ಎಲ್ಲದಕ್ಕೂ ಬೆಂಡಾದರು ಎಂದೇ ಹೇಳುತ್ತಾರೆ.

ಕನ್ನಡ ವಿವಿ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಮೊಟ್ಟ ಮೊದಲು ಕುವೆಂಪು ಅವರಿಗೆ ಮರಣೋತ್ತರವಾಗಿ ಕೊಡುವ ಮೂಲಕ ಆರಂಭವಾಯಿತು. ಕನ್ನಡ ನಾಡು, ನುಡಿಗೆ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ಕೊಡಬೇಕೆನ್ನುವುದು ಇದರ ಉದ್ದೇಶವಾಗಿತ್ತು. ಇದು ಬರುತ್ತಾ ಹಿಗ್ಗಿಸಿಕೊಂಡು ಏರುತ್ತಾ ಹೋಗಿ ರಾಜ್ಯೋತ್ಸವ ಪ್ರಶಸ್ತಿಯಂತೆ ಅಗ್ಗವಾಗಿ ಬಿಟ್ಟಿತು. ಜಾತಿ, ಪ್ರದೇಶವಾರು ಗುರುತಿಸಲು ಆರಂಭವಾಯಿತು. ನಾ ಎಂಬ ಡೋಜು ಹೆಚ್ಚಾದವರಿಗೆ ಈ ನಾಡೋಜ ಎಂಬ ಅನ್ವರ್ಥನಾಮಕ್ಕೆ ತಿರುಗಿ ಬಿಟ್ಟಿತು. ಹೀಗಾಗಿ ಕಳೆದ ವರ್ಷ ಯೋಗಪಟು ಒಬ್ಬರಿಗೆ ನಾಡೋಜ ದೊರೆಯಿತು. ಜ್ಯೋತಿಷಿಗಳಿಗೆ ಮುಂದಿನ ವರ್ಷ ಕೊಟ್ಟರೂ ಕೊಡಬಹುದು ಎನ್ನುವಲ್ಲಿಗೆ ಬಂದಿದೆ.

ಈ ಗೌರವ ಪದವಿಗೆ ಗೌರವ ಸಿಗುವಂತೆ ಮಾಡಬೇಕಿದೆ.

ಕನ್ನಡ ವಿವಿ ಕುಲಪತಿಗಳಾಗಲು ದೊಡ್ಡ ಲಾಬಿಯೇ ಪ್ರಾರಂಭಗೊಂಡಿದೆ. ಈಗಾಗಲೇ 14 ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಆಯ್ಕೆ ಸಮಿತಿಯಲ್ಲಿ ಯುಜಿಸಿ ಒಬ್ಬ ಸದಸ್ಯರ ಹೆಸರನ್ನು ಸೂಚಿಸಿಲ್ಲವಾದ್ದರಿಂದ ಇನ್ನೂ ಆಯ್ಕೆ ಸಮಿತಿ ಪೂರ್ಣಗೊಂಡಿಲ್ಲ. ಸಮಿತಿ ರಚನೆಯಾದ ಮೇಲೆ ಅರ್ಜಿ ಸಲ್ಲಿಸುವ ಇನ್ನಷ್ಟು ಅಕಾಂಕ್ಷಿಗಳು ಇದ್ದಾರೆ.

ಕನ್ನಡ ವಿಶ್ವವಿದ್ಯಾಲಯ ಈಗ ಸಂಕಷ್ಟದಲ್ಲಿದೆ. ಜಡವಾಗಿದೆ. ಅಲ್ಲಿ ಗುಂಪುಗಾರಿಕೆಗೆ ಹೆಚ್ಚಾಗಿ ಪರಸ್ಪರ ಟೀಕೆ, ಅಪಸ್ಪರಗಳು ಹೊರ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಕನ್ನಡ ವಿವಿಯನ್ನು ಸಾಂಸ್ಕೃತಿಕವಾಗಿ, ಸಂಶೋಧನಾತ್ಮಕವಾಗಿ, ಆಡಳಿತಾತ್ಮಕವಾಗಿ ಮುನ್ನೆಡೆಸುವ ಛಾತಿ ಇರುವವರು ಕುಲಪತಿಗಳಾಗಿ ಬರಬೇಕಿದೆ. ಕನ್ನಡ ವಿವಿ.ಗೆ ಹೊಸ ಸ್ವರೂಪ ಕೊಟ್ಟ ಮೊದಲಿನ ಉತ್ಸಾಹ, ಕನ್ನಡ ನಾಡು-ನುಡಿ ಕಟ್ಟುವ ಕೆಲಸ ಆರಂಭವಾಗಬೇಕಿದೆ. ಇದನ್ನು ಮಾಡಬೇಕಾದವರು ಯಾರು? ಇದು ಪ್ರಶ್ನೆಯಾಗಿಯೇ ಇದೆ.

ಟಿ.ಆರ್.ಸಿ ಅಮಾನತು: ಯಾರ ಮಸಲತ್ತು?

-ಪರುಶುರಾಮ ಕಲಾಲ್
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಾಕ್ಷಿ ಪ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದ್ದವರಲ್ಲಿ ಟಿ.ಆರ್. ಚಂದ್ರಶೇಖರ್ ಒಬ್ಬರು. ಅವರನ್ನು ಈಗ ತಾಂತ್ರಿಕ ಕಾರಣವೊಂದರ ನೆಪದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕಾರ್ಯಕಾರಿ  ಅಮಾನತ್ತುಗೊಳಿಸಿದೆ. ಕನ್ನಡ ವಿವಿಯಲ್ಲಿ ಇದೊಂದು ಕೆಟ್ಟ ಬೆಳವಣಿಗೆ. ಕುತ್ಸಿತ ಮನಸ್ಸುಗಳು ಹಾಗೂ ವಿಘ್ನ ಸಂತೋಷಿಗಳು ಮಾತ್ರ ಇಂತಹ ನಿರ್ಣಯ ಕೈಗೊಳ್ಳಬಲ್ಲರು.

ರಾಯಚೂರು ಜಿಲ್ಲಾ ಪಂಚಾಯತ್ ಹಾಗು ಯುನಿಸೆಫ್ ಜಂಟಿಯಾಗಿ ನಡೆಸಿದ ಅಭಿವೃದ್ಧಿ ಯೋಜನೆಯಲ್ಲಿ ವಿಶ್ವವಿದ್ಯಾಲಯದ ಅನುಮತಿ ಪಡೆಯದೆ ಚಂದ್ರಶೇಖರ್ ಅವರು ನೋಡಲ್ ಅಧಿಕಾರಿಯಾಗಿ ಕೆಲಸ ಮಾಡಿರುವುದು ತಪ್ಪೆಂದು ತೀರ್ಮಾನಿಸಿ, ಕನ್ನಡ ವಿಶ್ವವಿದ್ಯಾಲಯ ಕಾರ್ಯ ಕಾರಿ ಸಮಿತಿ ಅಮಾನತ್ತುಗೊಳಿಸಿದೆ. ವಾಸ್ತವವೆಂದರೆ ಅದನ್ನು ಯಾರ ಗಮನಕ್ಕೂ ತಂದಿಲ್ಲ ಎನ್ನುವುದು ಮಾತ್ರ ಅಪ್ಪಟ ಸುಳ್ಳಾಗಿದೆ.
ರಾಯಚೂರು ಜಿಲ್ಲಾ ಪಂಚಾಯತ್ ಹಾಗು ಯುನಿಸೆಫ್ ಜಂಟಿಯಾಗಿ ನಡೆಸಲು ಉದ್ದೇಶಿಸಿದ ಯೋಜನೆ (ಟುವರ್ಡ್ಸ್ ಎ ಚೈಲ್ಡ್ ಫ್ರೆಂಡ್ಲಿ ಡಿಸ್ಟಿಕ್ಟ್-ವಿಲೇಜ್ ಲೆವೆಲ್ ಮೈಕ್ರೋ ಪ್ಲಾನಿಂಗ್ ಅಂಡ್ ಕನ್ವರ್ಜೆಂಟ್ ಮಾನಿಟರಿಂಗ್ ಆಫ್ ಬೇಸಿಕ್ ಸರ್ವೇಸ್ ಇನ್ ರಾಯಚೂರು ಡಿಸ್ಟಿಕ್) ಈ ಯೋಜನೆಯಲ್ಲಿ ಪಾಲ್ಗೊಳ್ಳುವ ತಮ್ಮ ಇರಾದೆಯನ್ನು ಪ್ರಸ್ತಾಪವೊಂದರ ಮೂಲಕ ವಿಭಾಗದ ಗಮನಕ್ಕೆ ತಂದಿದ್ದಾರೆ. 2008 ನವೆಂಬರ್ 26ರಂದು ನಡೆದ ವಿಭಾಗದ ಸಭೆಯಲ್ಲಿ ಈ ಪ್ರಸ್ತಾವನೆ ಕುರಿತು ಚರ್ಚಿಸಲಾಗಿದೆ. ಈ ಯೋಜನೆಯ ಬಗ್ಗೆ ವಿಭಾಗದ ಅನುಮತಿಯನ್ನು ಪಡೆದಿದ್ದಾರೆ. ಈ ಸಭೆಯ ನಡಾವಳಿಯ ಪ್ರತಿಯನ್ನು ಆಡಳಿತಾಂಗಕ್ಕೂ ಕಳಿಸಲಾಗಿದೆ.
2008-09ರಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಿ ಅದೇ ವರ್ಷ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ವಾರ್ಷಿಕ ವರದಿಯಲ್ಲಿ ಯೋಜನೆ ಪೂರ್ಣಗೊಳಿಸಿರುವುದನ್ನು ವಿವಿ ಗಮನಕ್ಕೆ ತಂದಿದ್ದಾರೆ. ವಿವಿ ಗಮನಕ್ಕೆ ತರದೇ ಈ ಯೋಜನೆಯ ಜವಾಬ್ದಾರಿ ನಿರ್ವಹಿಸುವ ಉದ್ದೇಶ ಟಿ.ಆರ್. ಚಂದ್ರಶೇಖರ್ ಅವರಿಗಿದ್ದರೆ ಯೋಜನೆ ಪ್ರಸ್ತಾವನೆಯನ್ನೇ ವಿಭಾಗಕ್ಕೆ ಸಲ್ಲಿಸುತ್ತಿರಲಿಲ್ಲ. ವಾರ್ಷಿಕ ವರದಿಯಲ್ಲಿ ಇದನ್ನು ದಾಖಲಿಸುತಲೂ ಇರಲಿಲ್ಲ.
ತಪ್ಪಿತಸ್ಥ ವ್ಯಕ್ತಿ ಮುಂದೆ ನಡೆಯಲಿರುವ ತನಿಖೆಯನ್ನು ಪ್ರಭಾವಿಸಬಹುದೆನ್ನುವ ಕಾರಣಕ್ಕಾಗಿ ತನಿಖೆಗೆ ಮುನ್ನ ವ್ಯಕ್ತಿಯನ್ನು ಸೇವೆಯಿಂದ ಅಮಾನತ್ತುಗೊಳಿಸುವ ಕ್ರಮವಿದೆ. ಟಿ.ಆರ್. ಚಂದ್ರಶೇಖರ್ ಅವರು ವಿವಿ ಆಡಳಿತಾಂಗದ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಅವರು ಅಧ್ಯಾಪಕರು ಮಾತ್ರ. ತನಿಖೆ ನಡೆಸಿ, ತಪ್ಪಿತಸ್ಥರೆಂದು ತೀರ್ಮಾನವಾಗುವ ಮುಂಚೆಯೇ ಅಮಾನತ್ತು ಮಾಡಿರುವುದರ ಹಿಂದಿನ ಉದ್ದೇಶ ಏನು?
1996ರಲ್ಲಿ ಕನ್ನಡ ವಿವಿಯಲ್ಲಿ ಅಭಿವೃದ್ಧಿ ಅಧ್ಯಯನ ವಿಭಾಗ ಸ್ಥಾಪನೆಗೊಂಡಾಗ ವಿಭಾಗದ ಉದ್ದೇಶವೇ ಅಭಿವೃದ್ಧಿ ಸಿದ್ಧಾಂತ ಮತ್ತು ಆಚರಣೆಯನ್ನು ಅಧ್ಯಯನ ಮಾಡುವುದು. ಅಭಿವೃದ್ಧಿ ಪಾಲುದಾರರಿಗೆ ತರಬೇತಿ ನೀಡುವುದು. ಅಭಿವೃದ್ಧಿ ತಜ್ಞರ ರೂಪದಲ್ಲಿ ವಿವಿಧ ಸಂಘ, ಸಂಸ್ಥೆಗಳಿಗೆ ನೆರವು ನೀಡುವುದೇ ಆಗಿತ್ತು. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಮತ್ತು ಮುಂಬಯಿ ಕರ್ನಾಟಕದ  ಪ್ರದೇಶಗಳ ಜಿಲ್ಲಾ ಪಂಚಾಯತ್ಗಳೊಂದಿಗೆ ಸೇರಿಕೊಂಡು ಅಭಿವೃದ್ಧಿ ಕಾರ್ಯಕ್ರಮಗಳ ಮೌಲ್ಯಮಾಪನ, ಜನಯೋಜನೆ ಸಿದ್ದಪಡಿಸುವುದು, ಅಭಿವೃದ್ಧಿ ಪಾಲುದಾರರಿಗೆ ತರಬೇತಿ ನೀಡುವುದು ಇತ್ಯಾದಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಇಲ್ಲೂ ಕೂಡ ವಿಭಾಗದ ಉದ್ದೇಶದ ಭಾಗವಾಗಿಯೇ ಡಾ. ಟಿ.ಆರ್. ಚಂದ್ರಶೇಖರ್ ಯುನಿಸೆಫ್ ಯೋಜನೆಯಲ್ಲಿ ಪಾಲ್ಗೊಂಡಿದ್ದರು. ಯುನಿಸೆಫ್ ಮತ್ತು ಜಿಲ್ಲಾ ಪಂಚಾಯ್ತಿಯು ಜಂಟಿಯಾಗಿ ಕೈಗೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವು ಎರಡೂ ಸರ್ಕಾರಿ  ಸಂಸ್ಥೆಗಳೇ ಆಗಿವೆ. ಲೆಕ್ಕಪತ್ರಗಳನ್ನು ಐ.ಎ.ಎಸ್. ಅಧಿಕಾರಿಗಳು ಧೃಢೀಕರಿಸಿದ್ದಾರೆ. ಅವರು ಯಾವ ಆರೋಪವನ್ನೂ ಸಹ ಮಾಡಿಲ್ಲ. ಟಿ.ಆರ್.ಚಂದ್ರಶೇಖರ್ ಅವರೇ ಸಲ್ಲಿಸಿದ ವಾರ್ಷಿಕ  ವರದಿಯನ್ನು ಉಲ್ಲೇಖಿಸಿಯೇ ಅಮಾನತ್ತು ಶಿಕ್ಷೆ ನೀಡಲಾಗಿದೆ.
ಯೊಜನೆಗಳ ನಿರ್ವಹಣೆಗಾಗಿ ವಿಶ್ವವಿದ್ಯಾಲಯದ ಧನ ಸಹಾಯ ಪಡೆದುಕೊಂಡು ಯೋಜನೆಯನ್ನು ಪೂರ್ಣಗೊಳಿಸದಿರುವ, ಯೋಜನೆಗಾಗಿ ಪಡೆದ ಹಣದ ಹೊಂದಾಣಿಕೆಯನ್ನು ವರ್ಷಾನುಗಟ್ಟಲೆ ಮಾಡದಿರುವ ಹಲವಾರು ಪ್ರಕರಣಗಳು ಕನ್ನಡ ವಿವಿಯಲ್ಲಿ ಇವೆ. ಈ ಬಗ್ಗೆ ಹಲವಾರು ಬಾರಿ ಕನ್ನಡ ವಿವಿ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆಗಳೂ ಆಗಿವೆ. ಇವುಗಳ ಬಗ್ಗೆ ವಿವಿ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಎನ್ಜಿಓಗಳೊಂದಿಗೆ ಯೋಜನೆಯನ್ನು ಹಂಚಿಕೊಂಡು ಅಲ್ಲೂ ಇಲ್ಲೂ ಲಾಭ ಮಾಡಿಕೊಂಡವರೂ  ವಿ.ವಿ.ಯಲ್ಲಿ ಇದ್ದಾರೆ. ಸರ್ಕಾರಿ ಸಾರ್ವಜನಿಕ ಸಂಸ್ಥೆಯೊಂದರ ಸಹಭಾಗಿತ್ವದಲ್ಲಿ ಯೋಜನೆ ಪೂರ್ಣಗೊಳಿಸಿದವರಿಗೆ ಮಾತ್ರ ಈ ಶಿಕ್ಷೆ ನೀಡಲಾಗಿದೆ.
ಟಿ.ಆರ್. ಚಂದ್ರಶೇಖರ್ ಅವರ ಪ್ರಜಾವಾಣಿಯಲ್ಲಿ ಬರೆಯುತ್ತಿದ್ದ ಸಮಾಜೋಮುಖಿ ಅಭಿವೃದ್ಧಿ ಬರಹಗಳು ಸರ್ಕಾರದ ಆರ್ಥಿಕ ನೀತಿಯ ವಿರುದ್ಧ ನೇರ ಟೀಕೆಯಿಂದ ಕೂಡಿರುತ್ತಿದ್ದವು. ಅವರು ಕನ್ನಡ ವಿವಿಯ 80 ಏಕರೆ ಭೂಮಿಯ ಪರಭಾರೆ ವಿರುದ್ಧ ಹೋರಾಟದ ಮಂಚೂಣಿಯಲ್ಲಿದ್ದರು. ಆಡಳಿತಾಂಗದ ನಿರ್ಣಯವನ್ನು ಸದಸ್ಯರಾಗಿ ತಡೆ ಹಿಡಿಯುವ ಕೆಲಸ ಮಾಡಿದರು. ಆತ್ಮ ಸಾಕ್ಷಿಯಂತೆ ಕೆಲಸ ಮಾಡಿದ್ದ ಅವರ ನಿಲುವಿನಿಂದಾಗಿ ಭಗ್ನಗೊಂಡಿದ್ದ ಮನಸ್ಸುಗಳು ತಾಂತ್ರಿಕ ಕಾರಣವನ್ನು ಹೆಕ್ಕಿ ತೆಗೆದು, ಅವರ 17 ವರ್ಷದ ವಿವಿಯ ಸೇವೆಯನ್ನು ಪರಿಗಣಿಸಿದೇ ಅಮಾನತ್ತು ಎನ್ನುವ ಘೋರ ಶಿಕ್ಷೆಯನ್ನು ನೀಡಿ ಕೇಕೇ ಹಾಕಿ ನಕ್ಕಿವೆ. ಕನ್ನಡ ವಿವಿಯಲ್ಲಿ ಚೂರುಪಾರು ಮಾನ ಮರ್ಯಾದೆಯಿಂದ ಕೂಡಿದವರು ಕನ್ನಡ ವಿವಿಯ ಗೌರವ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಅಂತವರ ಮನಸ್ಸುಗಳನ್ನು ಜಡಗೊಳಿಸಿ, ಅಧ್ಯಾಪಕರನ್ನು  ಗುಮಾಸ್ತರನ್ನಾಗಿ ಮಾಡಿ ಹಾಕಲಿದೆ ಈ ಅಮಾನತ್ತು ಎಂಬ ನಿರ್ಣಯ. ಇದೊಂದು ಯಕಶ್ಚಿತ ಘಟನೆ ಎಂಬಂತೆ ವಿಶ್ವವಿದ್ಯಾಲಯದ ಅಧ್ಯಾಪಕರು ಯೋಚಿಸುತ್ತಿದ್ದಾರೆ. ಅವರು ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ಬಲಿಗಳು ಅವರೇ ಆಗಲಿದ್ದಾರೆ.
ಕನ್ನಡ ವಿಶ್ವವಿದ್ಯಾಲಯ  ಕಾರ್ಯಕಾರಿ ಸಮಿತಿಯು ಕೂಡಲೇ ಅಮಾನತ್ತು ಹಿಂತೆಗೆದುಕೊಳ್ಳುವ ಮೂಲಕ ವಿವಿಯ ಘನತೆ ಉಳಿಸಿಕೊಳ್ಳಬೇಕು.