Tag Archives: ಭ್ರಷ್ಟಾಚಾರ

Deccan Herald - Mining Payments

ಬಿ.ಎಸ್.ವೈ. ಹಫ್ತಾ ಪಟ್ಟಿ? ಬೆವರುತ್ತಿರುವ ಪತ್ರಕರ್ತರು?

– ನವೀನ್ ಸೂರಿಂಜೆ

ಗಣಿ ಹಗರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆ ತೀವ್ರಗೊಂಡಿರುವಂತೆಯೇ ಯಡಿಯೂರಪ್ಪ ಬೆವರುವ ಬದಲಾಗಿ ಕರ್ನಾಟಕದ ಪತ್ರಕರ್ತರಲ್ಲಿ ನಡುಕ ಶುರುವಾಗಿದೆ. ಯಡಿಯೂರಪ್ಪರಿಂದ ತಿಂಗಳ ಲೆಕ್ಕದಲ್ಲಿ ಹಫ್ತಾ ಪಡೆಯುತ್ತಿದ್ದ ಪತ್ರಕರ್ತರ ಪಟ್ಟಿ ಯಡಿಯೂರಪ್ಪ ಡೈರಿಯಿಂದ ಸಿಬಿಐಗೆ ಸಿಕ್ಕಿದೆ ಎಂಬ ಸುದ್ದಿ ಕೆಲವೊಂದು ಪತ್ರಕರ್ತರ ನಿದ್ದೆಗೆಡಿಸಿದೆ. ಪಟ್ಟಿ ಈಗಾಗಲೇ ಬಯಲಾಗಿದ್ದು, ಪತ್ರಕರ್ತರ ವಲಯದಲ್ಲಿ ಒಂದು ದೊಡ್ಡ ಸುದ್ಧಿಯೇ ಆಗಿದೆ.

Deccan Herald - Mining Payments
Mining Payments listed in Lokayukta Report: courtesy:Deccan Herald (19/08/11)

ಸಿಬಿಐಗೆ ಯಡಿಯೂರಪ್ಪ ಮನೆಯಲ್ಲಿ ಸಿಕ್ಕಿದೆ ಎನ್ನಲಾದ ಪಟ್ಟಿ ನಮ್ಮ ಬಳಿಯೂ ಇದೆ. ರಾಜ್ಯದ ವಿವಿದ ಜಿಲ್ಲೆಗಳ ಪತ್ರಕರ್ತರ ಹೆಸರುಗಳು ಇದರಲ್ಲಿ ನಮೂದಾಗಿದೆ. ‘ಮೇ 16 ರಂದು ಸಿಬಿಐ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ನಗರದ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ನಿವಾಸದ ಮೇಲೆ ನಡೆಸಿದ ದಾಳಿಯ ವೇಳೆ ಮಹತ್ವದ ವಿಷಯಗಳನ್ನೊಳಗೊಂಡ ಯಡಿಯೂರಪ್ಪನವರ ಪರ್ಸನಲ್ ಡೈರಿ ಸಿಕ್ಕಿದೆ, ಅದರಲ್ಲಿ ಅವರಿಂದ ನಿಯಮಿತವಾಗಿ ಹಣ ಪಡೆಯುತ್ತಿದ್ದ ಪತ್ರಕರ್ತರ ಹೆಸರುಗಳ ಪ್ರಸ್ತಾಪವಿದೆ,’ ಎಂಬ ಸುದ್ದಿ ಪತ್ರಕರ್ತರ ವಲಯದಲ್ಲಿದೆ. ಮಂಗಳೂರಿನ ಕೆಲವೊಂದು ಪತ್ರಿಕೆಗಳು ಇದನ್ನು ಸುದ್ಧಿಯಾಗಿಯೂ ಪ್ರಕಟಿಸಿತ್ತು. ವಾಸ್ತವವಾಗಿ ಇದು ಸಿಬಿಐ ಯಡಿಯೂರಪ್ಪರಿಂದ ವಶಪಡಿಸಿಕೊಂಡ ಪಟ್ಟಿಯೇ ಅಲ್ಲ.

ಏನಿದು ಪತ್ರಕರ್ತರ ಪಟ್ಟಿ?

ಮೇ 16 ರಂದು ಯಡಿಯೂರಪ್ಪನವರ ಮನೆಯಿಂದ ಸಿಬಿಐ ಅಧಿಕಾರಿಗಳು ಪತ್ರಕರ್ತರ ಹೆಸರುಳ್ಳ ಡೈರಿಯನ್ನು ವಶಪಡಿಸಿಕೊಂಡರು ಎಂದು ಹೇಳಲಾಗುತ್ತದೆ. ಆದರೆ ನನಗೆ ಈ ಪಟ್ಟಿಯನ್ನು ಮೇ 16 ಕ್ಕೂ ಮೊದಲೇ ಬೆಂಗಳೂರಿನ ನನ್ನ ಆತ್ಮೀಯ ಪತ್ರಕರ್ತ ಮಿತ್ರ ಓದಿ ಹೇಳಿದ್ದ. ಅದೇ ಹೆಸರುಗಳುಳ್ಳ, ಅದರೆ ಕೆಲವೊಂದು ಹೆಸರುಗಳನ್ನು ಡಿಲೀಟ್ ಮಾಡಿದ ಒಂದು ಪಟ್ಟಿ ಮೇ 20 ರಂದು ನನ್ನ ಈಮೇಲ್‌ಗೆ ಬೇರೊಬ್ಬ ಪತ್ರಕರ್ತ ಮಿತ್ರ ರವಾನಿಸಿದ್ದ. ಅದೇ ಹೆಸರುಗಳು ಉಳ್ಳ ಪಟ್ಟಿ ಮೇ 16 ಕ್ಕೂ ಮೊದಲು ಬಹಿರಂಗಗೊಂಡಿತ್ತು. ಮತ್ತು ಅದು ಬಿಜೆಪಿ ಕಚೇರಿಯಿಂದ ಹೋಗುತ್ತಿದ್ದ ಹಫ್ತಾದ ಫಲಾನುಭವಿ ಪತ್ರಕರ್ತರ ಪಟ್ಟಿ ಎಂಬ ಸುದ್ಧಿ ಚಾಲ್ತಿಯಲ್ಲಿತ್ತು. ಯಾವಾಗ ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆ ಪ್ರಾರಂಭ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿತೋ ಆಗಲೇ “ಯಡಿಯೂರಪ್ಪ ಬಳಿ ಇದ್ದ ಪತ್ರಕರ್ತರ ಹಫ್ತಾ ಫಲಾನುಭವಿಗಳ ಪಟ್ಟಿ”ಯಾಗಿ ಮಾಪರ್ಾಡಾಗಿತ್ತು. ಇಷ್ಟಕ್ಕೂ ಸಿಬಿಐಗೆ ದೊರೆತ ದಾಖಲೆಯನ್ನು ಎರಡು ಮೂರು ದಿನದಲ್ಲಿ ಬಹಿರಂಗ ಮಾಡಲು ಅಥವಾ ತುರಾತುರಿಯಲ್ಲಿ ಪತ್ರಕರ್ತರಿಗೆ ನೀಡಲು ಅದೇನು ಅನ್ವರ್ ಮಾನಿಪ್ಪಾಡಿ ಆಧ್ಯಕ್ಷತೆಯ ಆಯೋಗವೇ?

ಪತ್ರಕರ್ತರ ಪಟ್ಟಿ ನಿಜವೇ?

ಗಣಿ ಹಪ್ತಾ ಪಡೆದುಕೊಂಡಿರುವ ಪತ್ರಕರ್ತರ ಪಟ್ಟಿ ಇರುವುದು ನಿಜ. ಗಣಿ ಹಗರಣ ತನಿಖೆಯ ಲೋಕಾಯುಕ್ತ ವರದಿಯಲ್ಲೂ ಪತ್ರಕರ್ತರ ಹೆಸರು ಉಲ್ಲೇಖವಾಗಿತ್ತು. ಆನಂತರ ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಸಿಬಿಐ ಮಾಡಿದ ತನಿಖೆಯಲ್ಲಿ ಇನ್ನಷ್ಟೂ ಪತ್ರಕರ್ತರ ಹೆಸರು ಸಿಬಿಐಗೆ ಕಂಡು ಬಂದಿತ್ತು. ಇದು ಲೋಕಾಯುಕ್ತ ವರದಿಯಲ್ಲಿದ್ದ ಪತ್ರಕರ್ತರ ನಡುಕಕ್ಕೆ ಕಾರಣವಾಗಿತ್ತು. ಹಾಗೆಂದು ಪತ್ರಕರ್ತರನ್ನು ಅರೆಸ್ಟ್ ಮಾಡುತ್ತಾರೆ ಎಂದು ಅವರು ಹೆದರಿಕೊಂಡಿದ್ದಾರೆ ಎಂದರೆ ಬಾಲಿಶವಾಗುತ್ತದೆ. ಜನಾರ್ದನ ರೆಡ್ಡಿಯ ಸಿಬಿಐ ಪ್ರಕರಣಕ್ಕೂ ಯಡಿಯೂರಪ್ಪ ಸಿಬಿಐ ಪ್ರಕರಣಕ್ಕೂ ಸಂಬಂಧ ಇರುವುದರಿಂದ ಲೋಕಾಯುಕ್ತ ವರದಿಯಲ್ಲಿ ಪ್ರಸ್ತಾಪವಾದ ಹೆಸರುಗಳು ಮತ್ತು ಜನಾರ್ದನ ರೆಡ್ಡಿ ತನಿಖೆಯಲ್ಲಿ ಪ್ರಸ್ತಾಪವಾದ ಹೆಸರುಗಳು ಮತ್ತೆ ಯಡಿಯೂರಪ್ಪ ವಿರುದ್ಧದ ಸಿಬಿಐ ವರದಿಯಲ್ಲಿ ಉಲ್ಲೇಖವಾಗುವ ಸಾಧ್ಯತೆ ಇದೆ. ಇದು ಕಾನೂನು ಸಮಸ್ಯೆಗಿಂತಲೂ ಪತ್ರಕರ್ತರ ಮಾನದ ಪ್ರಶ್ನೆಯಾಗಿರುತ್ತದೆ. ಇದನ್ನು ತಪ್ಪಿಸಲೆಂದೇ ಕೆಲವೊಂದು ಪ್ರಾಮಾಣಿಕರ ಹೆಸರನ್ನೂ ಸೇರಿಸಿ  ಪಟ್ಟಿಯನ್ನು  ಯಾರೋ ಸೃಷ್ಠಿಸಿ ಪಸರಿಸಿದ್ದಾರೆ.

ಪ್ರಾಮಾಣಿಕರ ಹೆಸರೂ ಯಡ್ಡಿ ಹಫ್ತಾ ಲಿಸ್ಟ್‌ನಲ್ಲಿ:

ರಾಜ್ಯದ ಕೆಲವೊಂದು ಪ್ರಾಮಾಣಿಕ ಪತ್ರಕರ್ತರ ಹೆಸರನ್ನೂ ಈಗ ಬಹಿರಂಗಗೊಂಡ ಪಟ್ಟಿಯಲ್ಲಿ ಸೇರಿಸಲಾಗಿದೆ. ಲೋಕಾಯುಕ್ತ ವರದಿ ಮತ್ತು ಜನಾರ್ದನ ರೆಡ್ಡಿ ವಿರುದ್ಧದ ತನಿಖಾ ವರದಿಯಲ್ಲಿ ಉಲ್ಲೇಖವಾದ ಪತ್ರಕರ್ತರ ಹೆಸರಿನ ಮಧ್ಯೆ ರಾಜ್ಯದ ಸಭ್ಯ ಪತ್ರಕರ್ತರ ಹೆಸರನ್ನೂ ಸೇರಿಸಿದರೆ ಒಂದೋ “ಆ ವರದಿಯೇ ಸುಳ್ಳು” ಎಂದು ಎಲ್ಲರೂ ವರದಿಯನ್ನು ತಳ್ಳಿ ಹಾಕಬಹುದು. ಅಥವಾ “ಎಲ್ಲಾ ಪತ್ರಕರ್ತರೂ ಹಣ ಮಾಡುವವರೇ. ಅವರು ಇವರು ಅಂತ ಯಾಕೆ ಒಬ್ಬೊಬ್ಬರನ್ನು ಟಾರ್ಗೆಟ್ ಮಾಡೋದು” ಅಂತ ಸುಮ್ಮನಿರಬಹುದು. ಈ ಎರಡೂ ಸಾಧ್ಯತೆಗಳು ಭ್ರಷ್ಠ ಪತ್ರಕರ್ತರಿಗೆ ವರದಾನವಾಗಿ ಪರಿಣಮಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಾಯುಕ್ತ ಪಟ್ಟಿಯಲ್ಲಿದ್ದ ಹಪ್ತಾ ಪಡೆಯುತ್ತಿದ್ದ ಪತ್ರಕರ್ತರು ಇಂತಹುದೊಂದು ಪಟ್ಟಿಯಲ್ಲಿ ತಮ್ಮ ಹೆಸರನ್ನು ಸಭ್ಯ ಪತ್ರಕರ್ತರ ಜೊತೆ ಸೇರಿಸಿ ಪಟ್ಟಿ ಮಾಡಿರಬಹುದು ಎನ್ನಲಾಗುತ್ತಿದೆ. ಲೋಕಾಯುಕ್ತ ಹೆಸರಿಸಿದ ಮತ್ತು ಪತ್ರಿಕಾ ಲೋಕಕ್ಕೆ ಗೊತ್ತಿರುವ ಭ್ರಷ್ಠ ಪತ್ರಕರ್ತರ ಹೆಸರಗಳು ಪಟ್ಟಿಯಲ್ಲಿ ಇರುವುದರ ಜೊತೆ ಪತ್ರಿಕಾ ಕ್ಷೇತ್ರ ಗುರುತಿಸಿದಂತಹ ಕೆಲವೊಂದು ಪ್ರಾಮಾಣಿಕರ ಹೆಸರನ್ನೂ ಪಟ್ಟಿ ಮಾಡಿರುವುದರಿಂದ ಇದು ಸಿಬಿಐ ಕೈಯಲ್ಲಿರುವ ಪಟ್ಟಿ ಅಲ್ಲ ಎನ್ನಬೇಕಾಗುತ್ತದೆ ಮತ್ತು ಅದು ಅಧಿಕೃತ ಎನ್ನುವುದಕ್ಕೆ ಯಾವ ದಾಖಲೆಗಳೂ ಇಲ್ಲವಾಗಿದೆ. ರಾಜ್ಯವನ್ನು ಲೂಟಿ ಹೊಡೆದಿರುವ ಭ್ರಷ್ಠ ರಾಜಕಾರಣಿಗಳ ಜೊತೆ ಕೈ ಜೋಡಿಸಿರೋ ಭ್ರಷ್ಠ ಪತ್ರಕರ್ತರು ಬಚಾವ್ ಆಗೊದಕ್ಕೆ ಏನೆಲ್ಲಾ ಕಸರತ್ತು ಮಾಡುತ್ತಿದ್ದಾರೆ ಎನ್ನುವುದಷ್ಟೆ ಈ ಉದಾಹರಣೆಗಳ ಮೂಲಕ ಗೊತ್ತಾಗುತ್ತದೆ.


[ಸ್ನೇಹಿತರೆ,  ನವೀ‌ನ್‌ರವರು ಮೇಲೆ ಹೇಳಿರುವಂತೆ ಈ ಪಟ್ಟಿ ಪತ್ರಕರ್ತರ ವಲಯದಲ್ಲಿ ಹರಿದಾಡುತ್ತಿದೆ ಮತ್ತು ಅದೇ ಸಮಯದಲ್ಲಿ ಅದು ಸಿಬಿಐ ವಶಪಡಿಸಿಕೊಂಡ ಡೈರಿಯ ಪ್ರತಿ ಎನ್ನುವುದಕ್ಕೆ ಅಧಿಕೃತ ದಾಖಲೆ ಇಲ್ಲವಾಗಿದೆ. ಹಾಗಾಗಿ ನಾವು ಪಟ್ಟಿ ಲಭ್ಯವಿದ್ದರೂ ಅದನ್ನು ಪ್ರಕಟಿಸುವುದು ಸಮಂಜಸವಲ್ಲ. ಆದರೆ ಹೀಗೊಂದು ಪಟ್ಟಿ ಇರುವುದು ನಿಜವೇ ಆಗಿದ್ದು ಮತ್ತು ಅದು ಅಧಿಕೃತವೆಂದು ಗೊತ್ತಾಗಿದ್ದೇ ಆದರೆ ಅದನ್ನು ವರ್ತಮಾನ.ಕಾಮ್‌ನಲ್ಲಿ ಖಂಡಿತ ಪ್ರಕಟಿಸುತ್ತೇವೆ. ರಾಜಕಾರಣಿಗಳ ಭ್ರಷ್ಟತೆಗಿಂತ ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವವರ ಭ್ರಷ್ಟತೆ ನೀಚವೂ ಸಮಾಜಕ್ಕೆ ಹೆಚ್ಚು ಹಾನಿಕಾರಿಯಾಗಿಯೂ ಸಾಗುತ್ತಿದೆ. ಮತ್ತು ಈ ಭ್ರಷ್ಟರು ಸಿಕ್ಕಿಹಾಕಿಕೊಳ್ಳುವ ಹಾಗೂ ನ್ಯಾಯಾಲಯದಲ್ಲಾಗಲಿ, ಜನತಾ ನ್ಯಾಯಾಲಯದಲ್ಲಾಗಲಿ ಶಿಕ್ಷೆಗೆ ಒಳಗಾಗುವ ಸಾಧ್ಯತೆಯೂ ಇಲ್ಲವಾಗಿದೆ. ಹೀಗಿರುವಾಗ ಮಾಧ್ಯಮದ, ಅದರಲ್ಲೂ ಕನ್ನಡ ಮಾಧ್ಯಮಲೋಕದ ಭ್ರಷ್ಟತೆಯನ್ನು ತಡೆಯಲು ನಮ್ಮ ಕೈಲಾಗುವ ಎಲ್ಲವನ್ನೂ ನಾವು ಈ ಮೂಲಕ ಮುಂದುವರೆಸುತ್ತೇವೆ. – ರವಿ ಕೃಷ್ಣಾರೆಡ್ಡಿ]

ಬೆತ್ತಲಾದರು, ನಮ್ಮ ಕರ್ನಾಟಕದ ನಕಲಿ ಬಸವಣ್ಣ


– ಡಾ.ಎನ್. ಜಗದೀಶ್ ಕೊಪ್ಪ


 

ನಮ್ಮ ಕರ್ನಾಟಕ ಸರ್ಕಾರದ ಘನವೆತ್ತ ಅಬಕಾರಿ ಸಚಿವರಾದ ಸಿ.ರೇಣುಕಾಚಾರ್ಯರಿಂದ, ಬಾಡಿಗೆ ಜನರ ಸಮಾವೇಶಗಳಲ್ಲಿ, ದೇವರಾಜ ಅರಸುವಿನಿಂದ ಹಿಡಿದು, ಗಾಂಧಿ, ಬುದ್ಧ, ಅಂಬೇಡ್ಕರ್‌ವರೆಗೆ ಹೋಲಿಕೆಯಾಗಿ, ನಂತರ ಒಮ್ಮೊಮ್ಮೆ ಒಳಗಿರುವ ಪರಮಾತ್ಮ ಹೆಚ್ಚಾದಾಗ, ಕರ್ನಾಟಕದ ಬಸವೇಶ್ವರ ಎಂದೆಲ್ಲಾ ಹಾಡಿ ಹೊಗಳಿಸಿಕೊಂಡಿದ್ದ, ಲಿಂಗಾಯತ ಸಮುದಾಯದ ಮಹಾನ್ ನಾಯಕ(?) ಯಡಿಯೂರಪ್ಪಗೆ ಸಿ.ಬಿ.ಐ. ನೇಣಿನ ಕುಣಿಕೆ ಹತ್ತಿರವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಸಿ.ಇ.ಸಿ. ತನ್ನ ವರದಿಯನ್ನ ಸುಪ್ರೀಮ್ ಕೋರ್ಟ್‌ಗೆ ಸಲ್ಲಿಸುತ್ತಿದ್ದಂತೆ, ಯಡಿಯೂರಪ್ಪನವರ ರಾಜಕೀಯದ ಅಂತಿಮ  ಅಧ್ಯಾಯ ಆರಂಭಗೊಂಡಿದೆ.

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂತಹ ಅಧ್ವಾನದ, ಭ್ರಷ್ಟಾಚಾರದ ಶಿಖರದಂತಿರುವ ಮುಖ್ಯಮಂತ್ರಿಯನ್ನು ಯಾರೂ ನೋಡಿರಲಿಲ್ಲ. ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಯಾವ ಅಳುಕು ಇಲ್ಲದೆ, ಭಂಡತನದಿಂದ ಜಾತಿ ಮತ್ತು ಧರ್ಮದ ರಾಜಕೀಯ ಮಾಡಿದ ಮುಖ್ಯಮಂತ್ರಿ ಎಂದರೆ, ಅದು ಯಡಿಯೂರಪ್ಪ ಮಾತ್ರ.

ಲೋಕಾಯುಕ್ತ ವರದಿಯ ಹಿನ್ನೆಲೆಯಲ್ಲಿ ಅಧಿಕಾರ ಕಳೆದುಕೊಂಡು ಜೈಲು ಸೇರಿದ ಕರ್ನಾಟಕದ ಪ್ರಪ್ರಥಮ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಒಳಗಾದ ಈ ವ್ಯಕ್ತಿಗೆ ಇನ್ನಾದರೂ ಬುದ್ಧಿ ಬರಬಹುದು ಎಂದು ಜನತೆ ನಿರೀಕ್ಷಿಸಿದ್ದರು. ಆದರೆ, ಈ ಮನುಷ್ಯ ಮಾಡಿದ್ದೇನು? ಜೈಲಿನಿಂದ ಹೊರಬರುವಾಗಲೇ, ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಜೈಲು ಸೇರಿ ನಂತರ ಬಿಡುಗಡೆಗೊಂಡಂತೆ ತನ್ನ ಎರಡು ಬೆರಳು ಎತ್ತಿ ತೋರಿಸಿಕೊಂಡು ಹೊರಬಂದ ಬಗೆಯನ್ನು ಗಮನಿಸಿದ ಕರ್ನಾಟಕದ ಜನತೆ ಅಂದೇ ತೀರ್ಮಾನಿಸಿಬಿಟ್ಟಿತು, ಇದೊಂದು ಅವಿವೇಕತನದ ಪರಕಾಷ್ಟೆ ಮತ್ತು ರಿಪೇರಿಯಾಗದ ಗಿರಾಕಿ  ಎಂದು.

ಪರಪ್ಪನ ಅಗ್ರಹಾರದ ಜೈಲು ಪಾಲಾಗುತಿದ್ದಂತೆ, ಇಲ್ಲಸಲ್ಲದ ರೋಗದ ನೆಪದಲ್ಲಿ ಜಯದೇವ ಆಸ್ಪತ್ರೆ, ನಂತರ ಬೆಡ್‌ಶೀಟ್ ಮರೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಸೇರಿ ನಾಟಕವಾಡಿದ ಇದೇ ಯಡಿಯೂರಪ್ಪ, ಬಿಡುಗಡೆಯ ನಂತರ ಮುಖ್ಯಮಂತ್ರಿ ಕುರ್ಚಿಗಾಗಿ, ಇಡೀ ದೇಶ ಮತ್ತು ರಾಜ್ಯವನ್ನು ಹುಚ್ಚುನಾಯಿ ಕಡಿದ ವ್ಯಕ್ತಿಯಂತೆ ತಿರುಗುವುದನ್ನು ಗಮನಿಸಿದರೆ, ಈ ವ್ಯಕ್ತಿಯ ಆಕಾಂಕ್ಷೆ, ಅಧಿಕಾರದ ಲಾಲಸೆ ಯಾವ ಮಟ್ಟದಲ್ಲಿದೆ ಎಂಬುದನ್ನ ನೀವೇ ಊಹಿಸಬಹುದು.

ಅಧಿಕಾರದ ಚುಕ್ಕಾಣಿ ಹಿಡಿದ ಯಾವುದೇ ನಾಯಕನ ಸುತ್ತ ಒಳ್ಳೆಯ ಅಧಿಕಾರಿಗಳ ವರ್ಗ, ಅಥವಾ ಸಹೋದ್ಯೋಗಿಗಳು ಇರಬೇಕು. ಆದರೆ, ಯಡಿಯೂರಪ್ಪನವರ ಬಳಿ ಇದ್ದವರ ಪಟ್ಟಿಯನ್ನ ಒಮ್ಮೆ ಹಾಗೇ ಗಮನಿಸಿ ನೋಡಿ, ಕೃಷ್ಣಯ್ಯಶೆಟ್ಟಿ, ಕಟ್ಟಾ ಸುಬ್ಯಮಣ್ಯ ನಾಯ್ಡು, ಹರತಾಳು ಹಾಲಪ್ಪ, ಲಕ್ಷಣ ಸವಡಿ, ಸಿ.ಸಿ.ಪಾಟೀಲ್, ಕೃಷ್ಣ ಪಾಲೇಮರ್, ಜನಾರ್ಧನ ರೆಡ್ಡಿ,… ಇವರುಗಳ ಪುರಾಣವನ್ನು ನಿಮಗೆ ಬಿಡಿಸಿ ಹೇಳಬೇಕಿಲ್ಲ. ಹೋಗಲಿ ಒಳ್ಳೆಯ ರಾಜಕೀಯ ಸಲಹೆಗಾರರು ಇದ್ದರೆ? ಅದೂ ಇಲ್ಲ. ಯಡ್ಡಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಬಿ.ಜೆ. ಪುಟ್ಟಸ್ವಾಮಿ ಎಂಬ ಆಸಾಮಿ ತನ್ನ ಹುದ್ದೆಯ ಜವಾಬ್ದಾರಿಯನ್ನು ಮರೆತು ಯಡಿಯೂರಪ್ಪನ ಪರವಾಗಿ ದೇವೇಗೌಡರ ಕುಟುಂಬದ ವಿರುದ್ಧ ಬೊಗಳುವ ನಾಯಿಯಾಗಿ ಕೆಲಸ ಮಾಡಿದ್ದೇ ಹೆಚ್ಚು. ಈತನ ಪುರಾಣ ಕೂಡ ರೋಚಕವಾದುದು, ಜೊತೆಗೆ ಅದೊಂದು ದೊಡ್ಡ ಅಧ್ಯಾಯ.

ಈತ ಮಂಡ್ಯ ಜಿಲ್ಲೆ ಮದ್ದೂರು ತಾಲೋಕಿನ ಪ್ರಮುಖ ಹೋಬಳಿ ಕೇಂದ್ರವಾದ ನನ್ನೂರಾದ ಕೊಪ್ಪ ಗ್ರಾಮದಿಂದ ಐದು ಕಿ.ಮಿ. ದೂರವಿರುವ ಬೆಕ್ಕಳಲೆ ಗ್ರಾಮದವನು. ಮಂಡ್ಯ ಹಾಗೂ ತುಮಕೂರು ಜಿಲ್ಲೆಯನ್ನು ಬೇರ್ಪಡಿಸುವ ಶಿಂಷಾ ನದಿ ತೀರದ ಕಟ್ಟಕಡೆಯ ಆ ಗ್ರಾಮದಿಂದ ಬಂದ ಈ ವ್ಯಕ್ತಿ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದು, 1966ರಲ್ಲಿ ಬೆಂಗಳೂರಿನ ಸಿಟಿ ಇಂಪ್ರೂವ್‌ಮೆಂಟ್ ಟ್ರಸ್ಟ್ ಬೋರ್ಡ್ ( ಈಗಿನ ಬಿ.ಡಿ.ಎ.) ನಲ್ಲಿ ಕಿರಿಯ ಇಂಜಿನಿಯರ್ ಆಗಿ ಸೇವೆಗೆ ಸೇರಿದವನು. 1976ರಲ್ಲಿ ತಾನೇ ನಾಯಕನಾಗಿ ನಟಿಸಿ, ನಿರ್ಮಿಸಿದ ಕನ್ನಡ ಚಿತ್ರವೊಂದರ ಮೂಲಕ ಬರೋಬ್ಬರಿ 36 ಲಕ್ಷ ಕಳೆದುಕೊಂಡವನು (ಜಯಂತಿ ಈ ಚಿತ್ರದ ನಾಯಕಿ). ನಿವೃತ್ತಿಯ ದಿನ ಹತ್ತಿರವಾಗುತಿದ್ದಂತೆ ತನ್ನ ಗಾಣಿಗ ಜಾತಿಸಮುದಾಯವನ್ನು ರಾಜ್ಯಾದ್ಯಂತ ಸಂಘಟಿಸಿ, ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣರ ಬೆಂಬಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡು  ಎಂ.ಎಲ್.ಸಿ. ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷನಾಗಿ ಅಧಿಕಾರದ ರುಚಿ ಕಂಡವನು. ಹತ್ತು ವರ್ಷದ ಹಿಂದೆ ಬೃಹತ್ ಉದ್ದಿಮೆದಾರನಾಗಲು ಹೊರಟು, ಮೈಸೂರಿನ ವಿಮಾನ ನಿಲ್ದಾಣದ ಎದುರು (ನಂಜನಗೂಡು ರಸ್ತೆಯ ಮಂಡಕಳ್ಳಿ ಬಳಿ) ಪ್ಲಾಸ್ಟಿಕ್ ಚೀಲ ತಯಾರಿಸುವ ಫ್ಯಾಕ್ಟರಿ ತೆಗೆದು ಮುಚ್ಚಿದವನು ( ಬಿ.ಜೆ.ಪಿ. ಸ್ಯಾಕ್ಸ್ ಪ್ರೈ ಲಿಮಿಟೆಡ್). ಇದಕ್ಕಾಗಿ ಕೆ.ಎಸ್.ಎಫ್.ಸಿ.ಯಿಂದ ಮಾಡಿದ ಸಾಲ ಒಂದೂವರೆ ಕೋಟಿ ರೂಪಾಯಿಗೂ ಅಧಿಕ. ಈಗ ಅಂದಾಜು ಮೂರು ಕೋಟಿ ರೂ ದಾಟಿರಬಹುದು. ಸಾಲ ತೀರಿಸಲಾಗದೇ, ಯಡಿಯೂರಪ್ಪನ ಮೊರೆ ಹೊಕ್ಕ ಈತ ಸುದ್ದಿಗೋಷ್ಟಿಯಲ್ಲಿ ಸತ್ಯ ಹರಿಶ್ಚಂದ್ರನ ತುಂಡಿನಂತೆ ಮಾತನಾಡುವುದನ್ನು ನೀವೆಲ್ಲಾ ಗಮನಿಸಿದ್ದೀರಿ.

ಈವರೆಗೆ ಯಡಿಯೂರಪ್ಪ ಮಾಡಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಕೇವಲ ಕರ್ನಾಟಕದಲ್ಲಿ ಮಾತ್ರ ಸುದ್ಧಿಯಾಗುತಿತ್ತು. ಈಗ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿ ರಾಷ್ಟ್ರಮಟ್ಟದ ಚರ್ಚೆಯಾಗಿ ಮಾರ್ಪಟ್ಟು ಕರ್ನಾಟಕದ ಜನತೆ ತಲೆತಗ್ಗಿಸುವಂತಾಗಿದೆ. ಇಷ್ಟೆಲ್ಲಾ ಅಪರಾಧ ಮಾಡಿಯೂ, ಯಡಿಯೂರಪ್ಪ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳುವ ದಾಟಿ ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಹನ್ನೆರೆಡು ವರ್ಷ ಅನ್ನ ಕಾಣದ ವ್ಯಕ್ತಿ ಭಕ್ಷಭೋಜನದ ತಟ್ಟೆಯ ಎದರು ಕುಳಿತು ತಿನ್ನುವಂತೆ, ಮುಖ್ಯಮಂತ್ರಿಯ ಗಾದಿಯಲ್ಲಿ ಕುಳಿತು, ದೇಣಿಗೆ ಹೆಸರಿನಲ್ಲಿ, ತಾನು, ತನ್ನ ಮಕ್ಕಳು, ಅಳಿಯ ಸೇರಿ ಎಂಜಲು ಕಾಸಿಗೆ ಕೈಯೊಡ್ಡಿದ ರೀತಿ ನಿಜಕ್ಕೂ ಸಾರ್ವಜನಿಕವಾಗಿ ಅಸಹ್ಯ ಮೂಡಿಸುವಂತಹದ್ದು.

ಇಡೀ ಯಡಿಯೂರಪ್ಪನವರ ಕುಟುಂಬವನ್ನು ದಾರಿ ತಪ್ಪಿಸಿದ್ದು ಮಾಲೂರಿನ ಶಾಸಕ ಕೃಷ್ಣಯ್ಯ ಶೆಟ್ಟಿ ಎಂಬಾತ. ಸದಾ ತಿರುಪತಿ ತಿಮ್ಮಪ್ಪನ ಧ್ಯಾನದಲ್ಲಿರುವ ಈತ ಕೈಯಲ್ಲಿ ಉಂಡೆನಾಮ ಹಿಡಿದು ತಿರುಗುವ ಆಸಾಮಿ. ನೀವು ಯಾಮಾರಿದರೆ, ಹಣೆಗೆ ಮಾತ್ರವಲ್ಲ, ಮುಕುಳಿಗೂ ನಾಮ ಬಳಿಯುವಲ್ಲಿ ನಿಸ್ಸೀಮ.

ತನ್ನ ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆ ಪಡೆದರೆ ತಪ್ಪೇನು ಎಂದು ವಾದಿಸುವ ಯಡಿಯೂರಪ್ಪನವರಿಗೆ ನಮ್ಮ ಪ್ರಶ್ನೆ ಇಷ್ಟೆ: ನಲವತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು, ಶಾಸಕನಾದಾಗ, ವಿರೋಧಪಕ್ಷದ ನಾಯಕನಾದಾಗ, ಅಥವಾ ಉಪಮುಖ್ಯಮಂತ್ರಿಯಾಗಿದ್ದಾಗ ಬಾರದ ದೇಣಿಗೆ ಮುಖ್ಯಮಂತ್ರಿಯಾದಾಗ ಹೇಗೆ ಬಂತು?

ದೇಣಿಗೆ ಪಡೆದದ್ದು ಸತ್ಯವೇ ಆಗಿದ್ದರೆ, ಸುದ್ದಿ ಬಹಿರಂಗವಾಗುತಿದ್ದಂತೆ ರಾತ್ರೋರಾತ್ರಿ ಬೆಂಗಳೂರಿನ ರಾಜಮಹಲ್ ವಿಲಾಸ ಬಡಾವಣೆಯ ಮೈಸೂರು ಬ್ಯಾಂಕಿನಿಂದ 20 ಕೋಟಿ ಹಣವನ್ನು ತೆಗೆದು ಖಾತೆ ಮುಚ್ಚಿದ್ದು ಏಕೆ? ಅಕ್ರಮಗಳ ಕುರಿತು ಧಾರವಾಡದ ಎಸ್.ಆರ್. ಹಿರೇಮಠ ಸಿ.ಇ.ಸಿ.ಗೆ ದಾಖಲೆ ಸಲ್ಲಿಸುತಿದ್ದಂತೆ ಗಣಿ ಉದ್ಯಮಿ ಪ್ರವೀಣ್ ಚಂದ್ರ ಎಂಬುವರಿಂದ ಪಡೆದ ಐದು ಕೋಟಿ ದೇಣಿಗೆ ಹಣವನ್ನು ಈಗ ಸಾಲ ಎಂದು ವಾದಿಸುತ್ತಿರುವುದಾದರು ಏಕೆ? 

ಕರ್ನಾಟಕದ ಜನತೆಯನ್ನು ಯಡಿಯೂರಪ್ಪ ಕಿವಿಗೆ ಹೂ ಮುಡಿಯುವ ಗಿರಾಕಿಗಳು ಎಂದು ಭಾವಿಸಿದಂತಿದೆ.

ತಾನು ಹಂಚಿದ ಎಂಜಲು ಪ್ರಸಾದ ತಿಂದು, ಬಹುಪರಾಕು ಹೇಳುವ ಕೆಲವು ಮಾನಗೆಟ್ಟ ಮಠಾಧೀಶರು ಮತ್ತು ಲಿಂಗಾಯುತ ನಾಯಕರಿಂದ ಆಧುನಿಕ ಬಸವೇಶ್ವರ ಎಂದು ಹಾಡಿ ಹೊಗಳಿಸಿಕೊಳ್ಳುವ ಯಡಿಯೂರಪ್ಪ ಒಮ್ಮೆ ಗಾಲಿ ಜನಾರ್ಧನ ರೆಡ್ಡಿಯನ್ನು ನೆನಪಿಸಿಕೊಳ್ಳುವುದು ಒಳಿತು. ತಾನು ಅಪ್ಪಟ 24 ಕ್ಯಾರೆಟ್ ಚಿನ್ನ ಎಂದು ಘೋಷಿಸಿಕೊಂಡಿದ್ದ ಈ ಗಣಿಕಳ್ಳ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಾ, ತುಕ್ಕುಹಿಡಿಯುವ ಕಬ್ಬಿಣವಾಗಿದ್ದಾನೆ. ಈತನ ಅಮೇದ್ಯ ತಿಂದು ಬಳ್ಳಾರಿಯ ಬೀದಿ, ಬೀದಿಯಲ್ಲಿ ಆಧುನಿಕ ಕೃಷ್ಣದೇವರಾಯ ಎಂದು ಹಾಡಿ ಹೊಗಳಿದ ನಾಯಿ ನರಿಗಳೆಲ್ಲಾ ಈಗ ಚೆಲ್ಲಾಪಿಲ್ಲಿಯಾಗಿವೆ.

ತಾನು ಎಸಗಿರುವ ಅಕ್ಷಮ್ಯ ಅಪರಾಧಗಳಿಗೆ ಯಾವ ಯಜ್ಞವಾಗಲಿ, ದೇವರಾಗಲಿ ರಕ್ಷಣೆಗೆ ಬರಲಾರವು. ಈ ಸತ್ಯವನ್ನು ಅರಿತು, ಕಾನೂನಿನ ಮುಂದೆ ತಲೆಬಾಗಿ, ಸಾರ್ವಜನಿಕವಾಗಿ ಮತ್ತು ರಾಜಕೀಯವಾಗಿ ನಿವೃತ್ತಿಯಾಗುವುದೊಂದೇ ಈಗ ಯಡಿಯೂರಪ್ಪನವರ ಪಾಲಿಗೆ ಉಳಿದಿರುವ ಏಕೈಕ ಮಾರ್ಗ. ಅದನ್ನು ಹೊರತು ಪಡಿಸಿ, ನನ್ನ ಈ ಅವಸ್ಥೆಗೆ ವಿರೋಧ ಪಕ್ಷಗಳು ಕಾರಣ, ನನ್ನ ಪಕ್ಷದ ಹಿತಶತ್ರುಗಳು ಕಾರಣ ಎಂದು ಬೊಬ್ಬಿರಿದರೆ, ಅದನ್ನು ಜಾಣತನವೆಂದು ಕರೆಯುವುದಿಲ್ಲ. ಬದಲಿಗೆ, ಹುಚ್ಚುತನ ಎಂದು ಕರೆಯಲಾಗುತ್ತದೆ.


ಕಳೆದ ಶುಕ್ರವಾರ Central Empowered Committee ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿ ನಮ್ಮ ಓದುಗರಿಗೆ ಇಲ್ಲಿ ಲಭ್ಯವಿದೆ.

ವಂಶವಾಹಿ ಪ್ರಜಾಪ್ರಭುತ್ವ – ಕಾರಣಗಳು ಮತ್ತು ಪರಿಹಾರ

-ಆನಂದ ಪ್ರಸಾದ್

ಭಾರತದಲ್ಲಿ ಸ್ವಾತಂತ್ರ್ಯದ ನಂತರ ವಂಶವಾಹಿ ಪ್ರಜಾಪ್ರಭುತ್ವ ಬೆಳೆದು ನಿಂತಿದೆ. ಆರಂಭದಲ್ಲಿ ಇದು ಕಾಂಗ್ರೆಸ್ ಪಕ್ಷಕ್ಕೆ ಸೀಮಿತವಾಗಿತ್ತು. ನಂತರ ಇದು ಎಲ್ಲ ರಾಜಕೀಯ ಪಕ್ಷಗಳಲ್ಲೂ ಬೆಳೆದಿದ್ದು ಹಿಂದಿದ್ದ ರಾಜರ ಆಳ್ವಿಕೆಯನ್ನೇ ಹೋಲುತ್ತಿದೆ. ನೆಪಮಾತ್ರಕ್ಕೆ ಐದು ವರ್ಷಗಳಿಗೊಮ್ಮೆ (ಅಥವಾ ಅವಧಿಪೂರ್ವ) ಚುನಾವಣೆಗಳು ನಡೆಯುತ್ತಿದ್ದರೂ ಹೆಚ್ಚಿನ ಬದಲಾವಣೆ ಏನೂ ಕಂಡು ಬರುತ್ತಿಲ್ಲ. ತಮಿಳುನಾಡಿನಲ್ಲಿ ಜಯಲಲಿತಾ ಮತ್ತು ಕರುಣಾನಿಧಿ ಕುಟುಂಬ, ಕರ್ನಾಟಕದಲ್ಲಿ ದೇವೇಗೌಡ ಕುಟುಂಬ, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು, ಒರಿಸ್ಸಾದಲ್ಲಿ ನವೀನ ಪಾಟ್ನಾಯಕ್, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದಲ್ಲಿ ಮಾಯಾವತಿ ಮತ್ತು ಮುಲಾಯಂ ಸಿಂಗ್, ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲ, ಮಹಾರಾಷ್ಟ್ರದಲ್ಲಿ ಶರದ್ ಪವಾರ್, ಬಾಳ್ ಠಾಕ್ರೆ, ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ಹೀಗೆ ವ್ಯಕ್ತಿ ಕೇಂದ್ರಿತ ಅಥವಾ ಕುಟುಂಬ ಕೇಂದ್ರಿತ ಪಕ್ಷಗಳು ಬೆಳೆದು ನಿಂತಿವೆ. ಕುಟುಂಬ ಅಥವಾ ವ್ಯಕ್ತಿ ಕೇಂದ್ರಿತ ನೆಲೆಯನ್ನು ಮೀರಿ ಏಕೆ ಭಾರತದಲ್ಲಿ ರಾಜಕೀಯ ಪಕ್ಷಗಳು ಯಶಸ್ವಿಯಾಗುತ್ತಿಲ್ಲ, ಇದಕ್ಕೆ ಏನು ಕಾರಣ ಎಂಬ ಬಗ್ಗೆ ಭಾರತದಲ್ಲಿ ಚಿಂತನೆ ನಡೆಯುತ್ತಿಲ್ಲ.

ಪ್ರಜಾಪ್ರಭುತ್ವದ ಯಶಸ್ಸಿಗೆ ಮತ್ತು ಬೆಳವಣಿಗೆಗೆ ಸೈದ್ದಾಂತಿಕ ನೆಲೆಯಲ್ಲಿ ಪಕ್ಷಗಳು ಸಂಘಟಿತವಾಗಬೇಕು. ಎಲ್ಲ ಪಕ್ಷಗಳು ಸೈದ್ಧಾಂತಿಕ ನೆಲೆಯಲ್ಲಿ ತಮ್ಮ ಪಕ್ಷಗಳು ರೂಪುಗೊಂಡಿವೆ ಎಂದು ಹೇಳುತ್ತಿದ್ದರೂ ಆಂತರಿಕ ಪ್ರಜಾಪ್ರಭುತ್ವವನ್ನು ತಮ್ಮ ಪಕ್ಷಗಳಲ್ಲಿ ಅಳವಡಿಸಿಕೊಂಡಿಲ್ಲ. ಕೆಲವು ಪಕ್ಷಗಳಲ್ಲಿ ಕಾಟಾಚಾರಕ್ಕಾಗಿ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ನಡೆದರೂ ಒಬ್ಬ ವ್ಯಕ್ತಿಯೇ ಅಥವಾ ಒಂದು ಕುಟುಂಬದ ಸದಸ್ಯರು ಮಾತ್ರವೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಭಾರತದ ರಾಜಕೀಯ ಪಕ್ಷಗಳ ದೌರ್ಬಲ್ಯ. ಇದಕ್ಕೆ ಆ ಕುಟುಂಬದ ಸದಸ್ಯರೇ ಕಾರಣ ಎಂದು ಹೇಳುವಂತಿಲ್ಲ. ಇದಕ್ಕೆ ಒಟ್ಟು ಭಾರತೀಯರ ಮನಸ್ಥಿತಿಯೇ ಕಾರಣ ಎನಿಸುತ್ತದೆ.

ಭಾರತೀಯ ರಾಜಕಾರಣಿಗಳಲ್ಲಿ ಅಧಿಕಾರದ ಲಾಲಸೆ ಹಾಗೂ ಗುಂಪುಗಾರಿಕೆ ತುಂಬಿಕೊಂಡಿರುವುದು ಇದಕ್ಕೆ ಕಾರಣವೆನಿಸುತ್ತದೆ. ಒಂದು ಕುಟುಂಬದ ವ್ಯಕ್ತಿ ಅಧ್ಯಕ್ಷನಾಗಿರದ ಪಕ್ಷದಲ್ಲಿ ಆ ಪಕ್ಷವು ಚೂರು ಚೂರಾಗುವುದು ಭಾರತದ ರಾಜಕಾರಣದ ದುರಂತ. ಉದಾಹರಣೆಗೆ ಸೋನಿಯಾ ಗಾಂಧಿ, ರಾಜೀವ ಗಾಂಧಿ ನಿಧನದ ನಂತರ ರಾಜಕೀಯಕ್ಕೆ ಕೆಲ ವರ್ಷಗಳು ಬಂದಿರಲಿಲ್ಲ. ನೆಹರೂ ಕುಟುಂಬದ ಸದಸ್ಯರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವು ಚೂರು ಚೂರಾಗುವ ಭೀತಿ ಉಂಟಾಗಿತ್ತು ಮತ್ತು ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿರದ ಪಕ್ಷದಲ್ಲಿ ಕಾಂಗ್ರೆಸ್ ಪಕ್ಷವು ಒಂದಾಗಿ ಇರುತ್ತಿರಲಿಲ್ಲ. ನೆಹರೂ ಕುಟುಂಬದ ಸದಸ್ಯ ನಾಯಕ ಸ್ಥಾನದಲ್ಲಿದ್ದರೆ ಮಾತ್ರ ಕಾಂಗ್ರೆಸ್ ಒಟ್ಟಾಗಿ ಉಳಿಯುತ್ತದೆ ಇಲ್ಲದೆ ಹೋದ ಪಕ್ಷದಲ್ಲಿ, ಪಕ್ಷದಲ್ಲಿ ಆಂತರಿಕ ಕಚ್ಚಾಟ ತಾರಕಕ್ಕೇರಿ ಚೂರು ಚೂರಾಗುವ ಪರಿಸ್ಥಿತಿ ಇದೆ. ಇದಕ್ಕೆ ನಮ್ಮ ರಾಜಕಾರಣಿಗಳ ಅಧಿಕಾರದಾಹವೇ ಕಾರಣ.

ಇದೇ ಪರಿಸ್ಥಿತಿ ಇಂದು ಭಾರತೀಯ ಜನತಾ ಪಕ್ಷದಲ್ಲೂ ಇದೆ. ಅಲ್ಲಿ ಯಜಮಾನಿಕೆಯ ಸ್ಥಾನವನ್ನು ಸಂಘ ಪರಿವಾರ ಎಂಬ ಸಂವಿಧಾನಬಾಹಿರ ಶಕ್ತಿ ಪಡೆದುಕೊಂಡಿದೆ. ಸಂಘವು ತೇಪೆ ಹಾಕುತ್ತಿರುವ ಕಾರಣ ಬಿಜೆಪಿ ಎಂಬ ಪಕ್ಷವು ಒಂದಾಗಿ ಉಳಿದಿದೆ ಇಲ್ಲದೆ ಹೋದರೆ ಅದು ಕೂಡ ಚೂರು ಚೂರಾಗಿ ಹೋಗುತ್ತದೆ. ಇನ್ನು ಉಳಿದ ಪ್ರಾದೇಶಿಕ ಪಕ್ಷಗಳ ಸ್ಥಿತಿಯೂ ಅಷ್ಟೇ. ಅಲ್ಲಿಯೂ ಒಂದು ಕುಟುಂಬದ ಕೈಯಲ್ಲಿ ಇರುವ ಪಕ್ಷ ಒಂದಾಗಿ ಉಳಿದಿದೆ ಮತ್ತು ಆ ಕುಟುಂಬಕ್ಕೆ ತಗ್ಗಿ ಬಗ್ಗಿ ನಡೆಯುವ ವ್ಯಕ್ತಿಗಳಿಗೆ ಮಾತ್ರ ಮಣೆ. ಇದಕ್ಕೆ ಅಪವಾದವಾಗಿ ಇರುವುದು ಇಂದು ಎಡ ಪಕ್ಷಗಳು ಮಾತ್ರ. ಆದರೆ ಎಡ ಪಕ್ಷಗಳಿಗೆ ಬಂಗಾಲ, ಕೇರಳ ಹೊರತುಪಡಿಸಿದರೆ ಹೆಚ್ಚಿನ ಅಸ್ತಿತ್ವ ಇಲ್ಲ. ಕಾಂಗ್ರೆಸ್ಸೇತರ ಪಕ್ಷವಾಗಿ ಅಧಿಕಾರ ಹಿಡಿದ ಜನತಾ ಪಕ್ಷವು ಅಧಿಕಾರದ ಕಚ್ಚಾಟದಿಂದಾಗಿಯೇ ಚೂರುಚೂರಾಗಿದೆ. ಸ್ವಾತಂತ್ರ್ಯ ದೊರೆತು ಆರು ದಶಕಗಳು ಸಂದರೂ ನಮ್ಮ ರಾಜಕಾರಣಿಗಳಿಗೆ ಒಂದಾಗಿ ದೇಶದ ಹಿತಕ್ಕಾಗಿ ಕೆಲಸ ಮಾಡುವ ಮನೋಭಾವ ಇಲ್ಲ.

ರಾಜಕೀಯಕ್ಕೆ ಬರುವವರಿಗೆ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳು ಅರ್ಥವಾಗದೆ ಇರುವುದು ಮತ್ತು ಸಂವಿಧಾನದ ಆಶೋತ್ತರಗಳ ಬಗ್ಗೆ ತಿಳುವಳಿಕೆ ಇಲ್ಲದಿರುವುದು ಕಂಡು ಬರುತ್ತದೆ. ಸೈದ್ಧಾಂತಿಕ ನೆಲೆಯಲ್ಲಿ ರಾಜಕೀಯ ಪಕ್ಷಗಳನ್ನು ರೂಪಿಸಿ ಗಟ್ಟಿಯಾಗಿ ಸೈದ್ದಾಂತಿಕ ದೃಢತೆಯನ್ನು ಕಾಪಾಡಿಕೊಂಡು ಬರದಿರುವುದೆ ಇಂಥ ಪರಿಸ್ಥಿತಿಗೆ ಕಾರಣ. ಸೈದ್ಧಾಂತಿಕ ನೆಲೆಯಲ್ಲಿ ಒಂದುಗೂಡಿ ಕೆಲಸ ಮಾಡುವುದು ಭಾರತೀಯ ರಾಜಕಾರಣಿಗಳಿಗೆ ಗೊತ್ತೇ ಇಲ್ಲ. ಅದು ಗೊತ್ತಿದ್ದರೆ ಅಧಿಕಾರಕ್ಕಾಗಿ ಕಚ್ಚಾಡುವ, ಪಕ್ಷವನ್ನೇ ಚೂರು ಚೂರು ಮಾಡುವ ಪರಿಸ್ಥಿತಿ ಬರುತ್ತಿರಲಿಲ್ಲ. ಇಂಥ ಪರಿಸ್ಥಿತಿಯಲ್ಲಿ ಪರಿಹಾರವಾದರೂ ಏನು? ಪಕ್ಷಕ್ಕೆ ವ್ಯಕ್ತಿಗಳನ್ನು ಸೇರಿಸಿಕೊಳ್ಳುವಾಗ ಪಕ್ಷದ ಸಿದ್ಧಾಂತವನ್ನು ವಿವರಿಸಿ ಸಿದ್ಧಾಂತವನ್ನು ಮೀರಿದರೆ ಪಕ್ಷದಿಂದ ಹೊರಹಾಕುವ ಸ್ಪಷ್ಟ ಧೋರಣೆಗಳನ್ನು ರಾಜಕೀಯ ಪಕ್ಷಗಳು ಹೊಂದಿದರೆ ಇಂಥ ಪರಿಸ್ಥಿತಿಯನ್ನು ಬಹುತೇಕ ತಡೆಯಬಹುದು. ಹೀಗೆ ಮಾಡಬೇಕಾದರೆ ರಾಜಕೀಯ ಪಕ್ಷಗಳಿಗೆ ಸ್ಪಷ್ಟವಾದ ಸಿದ್ಧಾಂತ ಇರಬೇಕಾಗುತ್ತದೆ. ಈಗ ಇರುವ ಯಾವ ರಾಜಕೀಯ ಪಕ್ಷಗಳಿಗೂ (ಎಡ ಪಕ್ಷಗಳನ್ನು ಹೊರತು ಪಡಿಸಿ) ಸ್ಪಷ್ಟ ಸಿದ್ಧಾಂತವೇ ಇಲ್ಲದಿರುವುದು ಭಾರತದ ಸಮಕಾಲೀನ ರಾಜಕೀಯದ ದುರಂತ. ಅಧಿಕಾರಕ್ಕಾಗಿ ಸಿದ್ಧಾಂತಗಳನ್ನು ಬಲಿಕೊಡುವ ರಾಜಕೀಯ ಪಕ್ಷಗಳೇ ಇರುವಾಗ ಪ್ರಜಾಪ್ರಭುತ್ವ ವ್ಯವಸ್ಥೆ ಬೆಳೆಯುವುದಾದರೂ ಹೇಗೆ?

ಭಾರತದ ರಾಜಕೀಯಕ್ಕೆ ತೃತೀಯ ರಂಗವೊಂದರ ಅವಶ್ಯಕತೆ ಇದೆಯೇ ಎಂದರೆ ಅಂಥ ಒಂದು ಅವಶ್ಯಕತೆ ಇದೆ ಎನಿಸುತ್ತದೆ. ಆದರೆ ಅಂಥ ತೃತೀಯ ರಂಗವೊಂದು ಸ್ಪಷ್ಟವಾದ ಸೈದ್ಧಾಂತಿಕ ಧೋರಣೆ ಹೊಂದಿರಬೇಕು ಮತ್ತು ಎಲ್ಲರಿಗೂ ಒಪ್ಪಿಗೆಯಾಗುವ ಒಂದು ದೀರ್ಘಕಾಲೀನ ಪ್ರಣಾಳಿಕೆ ಹೊಂದಿರಬೇಕು. ಹಾಗಿರದೆ ಬರಿಯ ಅಧಿಕಾರಕ್ಕಾಗಿ ರೂಪುಗೊಳ್ಳುವ ತೃತೀಯ ರಂಗ ಯಶಸ್ವಿಯಾಗುವುದಿಲ್ಲ ಮತ್ತು ಹೆಚ್ಚು ಸಮಯ ಬಾಳುವುದಿಲ್ಲ. ತೃತೀಯ ರಂಗದಲ್ಲಿ ಒಟ್ಟುಗೂಡುವ ಪಕ್ಷಗಳಿಗೆ ದೀರ್ಘಕಾಲೀನ ಸೈದ್ದಾಂತಿಕ ಬದ್ಧತೆ ಇಲ್ಲದೆ ಹೋಗುವುದು, ಅಧಿಕಾರಕ್ಕಾಗಿ ಸಿದ್ಧಾಂತವನ್ನೂ ಮೀರಿ ತಮಗೆ ಒಪ್ಪಿಗೆಯಾಗದ ಸಿದ್ಧಾಂತದ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಅವಕಾಶವಾದಿ ಪ್ರವೃತ್ತಿ ತೋರುವುದೇ ಸಂಭಾವ್ಯ ತೃತೀಯ ರಂಗದ ಪಕ್ಷಗಳ ದೊಡ್ಡ ದೌರ್ಬಲ್ಯವಾಗಿದೆ. ಅವು ಆ ದೌರ್ಬಲ್ಯವನ್ನು ಮೀರಿ ನಿಂತರೆ ಅಂಥ ಒಂದು ತೃತೀಯ ರಂಗ ರೂಪುಗೊಳ್ಳಬಹುದು, ತನ್ನ ಅವಧಿಪೂರ್ಣ ಆಡಳಿತ ನೀಡಲು ಸಾಧ್ಯ. ದ್ವಿಪಕ್ಷೀಯ ಆಡಳಿತಕ್ಕಿಂತ ಇನ್ನೂ ಒಂದು ಪರ್ಯಾಯ ಇರುವುದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಏಕೆಂದರೆ ದ್ವಿಪಕ್ಷೀಯ ವ್ಯವಸ್ಥೆ ಇದ್ದರೆ ಹೇಗಿದ್ದರೂ ಆಡಳಿತ ವಿರೋಧಿ ಅಲೆಯಿಂದ ಮುಂದಿನ ಸಾರಿ ತನಗೆ ಆಡಳಿತ ಸಿಗುತ್ತದೆ ಎಂಬ ನಿರ್ಲಕ್ಷ್ಯ ರಾಜಕೀಯ ಪಕ್ಷಗಳಲ್ಲಿ ಬೆಳೆಯುತ್ತದೆ ಮತ್ತು ತಮ್ಮನ್ನು ಬಿಟ್ಟರೆ ಬೇರೆ ಗತಿಯಿಲ್ಲ ಎಂಬ ಅಹಂಕಾರವೂ ಬೆಳೆಯುತ್ತದೆ. ತ್ರಿಪಕ್ಷೀಯ ವ್ಯವಸ್ಥೆ ಇದ್ದರೆ ರಾಜಕೀಯ ಪಕ್ಷಗಳು ಸ್ವಲ್ಪ ಎಚ್ಚರಿಕೆಯಿಂದ ಇರಲು ಸಾಧ್ಯ.

ಸದ್ಯದ ಭಾರತೀಯ ರಾಜಕೀಯವನ್ನು ಅವಲೋಕಿಸಿದರೆ ಆರೋಗ್ಯಕರ ಸೈದ್ದಾಂತಿಕ ನೆಲೆಗಟ್ಟಿನ ರಾಜಕೀಯ ಸ್ವಾತಂತ್ರ್ಯ ನಂತರದ ಆರು ದಶಕಗಳಲ್ಲಿ ಬೆಳೆಸುವಲ್ಲಿ ನಾವು ವಿಫಲರಾಗಿದ್ದೇವೆ. ಇಂಥ ಒಂದು ಆರೋಗ್ಯಕರ ಸೈದ್ದಾಂತಿಕ ರಾಜಕೀಯ ಜಾಗೃತಿ ಬೆಳೆಯಲು ಇನ್ನು ಎಷ್ಟು ದಶಕಗಳು ಅಥವಾ ಶತಮಾನಗಳು ಬೇಕೋ ಊಹಿಸಲಾಗುವುದಿಲ್ಲ. ಭಾರತೀಯರು  ಜಡ   ಪ್ರವೃತ್ತಿಯವರಾಗಿರುವುದರಿಂದ ಮತ್ತು ಇಲ್ಲಿ ಯಾವುದೇ ಹೊಸ ಚಿಂತನೆಗಳಿಗೆ ಸ್ಥಾನ ಇಲ್ಲದಿರುವುದರಿಂದ ಯಾವುದೇ ಕ್ಷೇತ್ರದಲ್ಲೂ ಹೊಸತನ ತರುವುದು ಬಹಳ ಕಷ್ಟವಾಗಿದೆ. ಹೀಗಾಗಿ ಉಳಿದ ಕ್ಷೇತ್ರಗಳಂತೆ ರಾಜಕೀಯ ಕ್ಷೇತ್ರದಲ್ಲೂ ವಂಶವಾಹಿ ಪ್ರಜಾಪ್ರಭುತ್ವದಿಂದ ನಿಜವಾದ ಪ್ರಜಾಪ್ರಭುತ್ವದೆಡೆಗೆ ನಮ್ಮ ದೇಶ ಯಾವಾಗ ಪರಿವರ್ತನೆಯಾಗುವುದೋ ಹೇಳಲಾಗದು. ಅಲ್ಲಿಯವರೆಗೆ ವಂಶವಾಹಿ ಪ್ರಜಾಪ್ರಭುತ್ವದಲ್ಲೇ ಹೊಸತನ ತರಲು ಸಾಧ್ಯವಿದೆ.

ಆಧುನಿಕ ವೈಜ್ಞಾನಿಕ ಚಿಂತನೆಯವರು ಈಗಿರುವ ವಂಶವಾಹಿ ಪ್ರಜಾಪ್ರಭುತ್ವ ಕುಟುಂಬಗಳಲ್ಲೇ ರೂಪುಗೊಂಡರೆ ಅಂಥ ಸಾಧ್ಯತೆ ಇದೆ. ಈಗಿರುವ ವಂಶವಾಹಿ ಪ್ರಜಾಪ್ರಭುತ್ವದಲ್ಲೇ ಹೊಸ ಚಿಂತನೆಗಳನ್ನು ತರಲು ಸಾಕಷ್ಟು ಅವಕಾಶ ಇದೆ ಏಕೆಂದರೆ ಪಕ್ಷಗಳಲ್ಲಿ ಕುಟುಂಬದ ವ್ಯಕ್ತಿಗಳಲ್ಲೇ ಅಧಿಕಾರ ಕೇಂದ್ರೀಕೃತವಾಗಿರುವುದರಿಂದ ಅವರು ತೆಗೆದುಕೊಳ್ಳುವ ಪ್ರಗತಿಪರ ನಿರ್ಧಾರಗಳಿಗೆ ಪಕ್ಷದೊಳಗೆ ಅಷ್ಟಾಗಿ ವಿರೋಧ ಬರುವ ಸಾಧ್ಯತೆ ಇಲ್ಲ. ಹೀಗಿದ್ದರೂ ಪ್ರಗತಿಪರ ನಿರ್ಧಾರಗಳನ್ನು ತೆಗೆದುಕೊಳ್ಳಲು ಕುಟುಂಬ ಪ್ರಭುತ್ವಗಳಿಗೆ ಸಾಧ್ಯವಾಗದೆ ಇರಲು ಅವರಲ್ಲಿ ರಾಜಕೀಯ ಚಿಂತನೆ ಹಾಗೂ ವ್ಯಾಪಕ ಓದಿನ ಕೊರತೆ ಇರುವುದೇ ಕಾರಣ. ವಂಶವಾಹಿ ಪ್ರಭುತ್ವ ಇರುವ ಕುಟುಂಬಗಳ ಹೊಸ ತಲೆಮಾರುಗಳು ಹೆಚ್ಚು ಹೆಚ್ಚು ಪ್ರಗತಿಶೀಲ ಚಿಂತನೆ ಅಳವಡಿಸಿಕೊಳ್ಳಲು ವ್ಯಾಪಕ ಅಧ್ಯಯನದ ಅವಶ್ಯಕತೆ ಇದೆ ಹಾಗೂ ದೇಶದ ಪರ್ಯಟನೆ ಮಾಡಿ ಹೆಚ್ಚಿನ ತಿಳುವಳಿಕೆ ಪಡೆದುಕೊಳ್ಳಬೇಕಾದ ಅವಶ್ಯಕತೆ ಇದೆ. ಇದು ವಂಶವಾಹಿ ಪ್ರಭುತ್ವದ ಹೊಸ ತಲೆಮಾರಿಗೆ ಅಸಾಧ್ಯವೇನೂ ಅಲ್ಲ.

ಮತ್ತೆ ಕೋಮಾ ಸ್ಥಿತಿಯಲ್ಲಿ ಲೋಕಪಾಲ ಮಸೂದೆ

-ಡಾ.ಎಸ್.ಬಿ.ಜೋಗುರ

ಕಳೆದ ವರ್ಷವಿಡೀ  ಬಿಸಿ ಬಿಸಿ ಚರ್ಚೆಗೆ ಎಡೆಮಾಡಿಕೊಟ್ಟ ಜನಲೋಕಪಾಲ್ ಮಸೂದೆ ಸಿಡಿಯದಿರುವ ಪಟಾಕಿಯಂತೆ ಟುಸ್… ಎಂದದ್ದು ಸಾರ್ವಜನಿಕ ವಲಯದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕವಾಗಿ ಮಾತನಾಡುವವರಿಗೆ ಕೊಂಚ ನಿರಾಶೆಯನ್ನುಂಟು ಮಾಡಿರುವುದು ಸ್ವಾಭಾವಿಕವೇ ಆದರೂ ರಾಜಕೀಯ ಶಕ್ತಿಗಳು ಹಗ್ಗ ಕೊಟ್ಟು ಕೈ ಕಟ್ಟಿಕೊಳ್ಳಲು ತಯಾರಿಲ್ಲ ಎನ್ನುವುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿವೆ. ಅವೇನಿದ್ದರೂ ಬಾಯಿ ಮಾತಿನ ಮೂಲಕವೇ ರಾಜಕೀಯ ವಿಪ್ಲವಗಳನ್ನು ಹುಟ್ಟುಹಾಕಬಲ್ಲವೇ ಹೊರತು ಕಾರ್ಯಾತ್ಮಕವಾಗಿ ಅಲ್ಲ. ಹಾಗಾಗಿಯೇ ರಾಜ್ಯಸಭೆಯಲ್ಲಿ ಅದಕ್ಕೆ ಗ್ರೀನ್ ಸಿಗ್ನಲ್ ಸಿಗದಿರುವುದು ನಿರೀಕ್ಷಿತವೇ ಎನ್ನುವಂತಿದೆ. ಆಳುವ ಮತ್ತು ವಿರೋಧ ಪಕ್ಷಗಳೆರಡೂ ಚುನಾವಣೆಯ ಸಂದರ್ಭದಲ್ಲಿ ಕೋಮಾ ಸ್ಥಿತಿಯಲ್ಲಿರುವ ಈ ಲೋಕಪಾಲ್ ಮಸೂದೆಯ ಬಗ್ಗೆ ತಮಗೆ ತಿಳಿದಂತೆ ಮತದಾರನ ಎದುರು ವಿವರಿಸಿ ಲಾಭ ಗಿಟ್ಟಿಸಿಕೊಳ್ಳುವ ಕಸರತ್ತಿನಲ್ಲಿದ್ದಾರೆ. ಈ ಲೋಕಪಾಲ ಬಿಲ್ ರಾಜ್ಯಸಭೆಯವರೆಗೂ ಬಂದು ಅಟಕಾಯಿಸಿಕೊಂಡಿರುವುದು ಇದೇ ಮೊದಲಂತೂ ಅಲ್ಲ. ಈ ಮುಂಚೆ ಸುಮಾರು ಹನ್ನೊಂದು ಬಾರಿ ಈ ಮಸೂದೆಯು ಸದ್ಯದ ಹಂತದವರೆಗೆ ಬಂದು ತಲುಪಿ ಯಥಾಸ್ಥಿತಿಯನ್ನು ಕಾಪಾಡಿಕೊಂಡಿರುವುದಿದೆ. 1968 ರಿಂದಲೂ ಈ ಬಗೆಯ ಮರಳಿ ಯತ್ನವ ಮಾಡುವ ಕೆಲಸ ನಿರಂತರವಾಗಿ ನಡದೇ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ಅದು ಜಾರಿಯಾಗಲಿದೆ ಎಂದೆನ್ನುವಾಗಲೇ ಅದು ಕೋಮಾ ಹಂತವನ್ನು ತಲುಪುವ ಸ್ಥಿತಿ ಮಾಮೂಲಾಗಿದೆ.

ಭ್ರಷ್ಟಾಚಾರ ವಿರೋಧಿ ಆಂದೋಲನ ಅಣ್ಣಾ ಹಜಾರೆಯವರ ನೇತೃತ್ವದಲ್ಲಿ ದೇಶವ್ಯಾಪಿಯಾದ ಒಂದು ದೊಡ್ಡ ಚಳವಳಿಯನ್ನೇ ರೂಪಿಸಿತ್ತಾದರೂ ಅವರ ಅಂತಿಮ ಉದ್ದೇಶ ಮಾತ್ರ ಸಾಕಾರಗೊಳ್ಳದಿರುವುದು ವಿಷಾದನೀಯವೇ ಹೌದು. ಜಾರಿಗೊಳಿಸುವುದಿದ್ದರೆ ಬಲಿಷ್ಟ ಜನಲೋಕಪಾಲ ಜಾರಿಗೊಳಿಸಿ, ಇಲ್ಲದಿದ್ದರೆ ಬೇಡ ಎಂದು ಪಟ್ಟು ಹಿಡಿದ ಅಣ್ಣಾ ತನ್ನ ಆರೋಗ್ಯವನ್ನು ನಿರ್ಲಕ್ಷಿಸಿಯೂ ಹೋರಾಟ, ಸತ್ಯಾಗ್ರಹವನ್ನು ಆರಂಭಿಸಿರುವುದಿತ್ತು. ಅಣ್ಣಾನ ಹೋರಾಟಕ್ಕೆ ಸಿಕ್ಕ ಬೆಂಬಲ ಆಳುವ ಪಕ್ಷದ ಸಾಮರ್ಥ್ಯವನ್ನೇ ಕೆಣಕಿದಂತಿತ್ತು. ಹೀಗಾಗಿ ಅಣ್ಣಾನನ್ನು ಬಂಧಿಸಿ ಬಿಡುಗಡೆ ಮಾಡಿಯೂ ಆಯಿತು. ನಂತರ ಬಿಡುಗಡೆ ಮಾಡಿ ಅವರ ಸತ್ಯಾಗ್ರಹಕ್ಕೆ ರಾಮಲೀಲಾದಂತಹ ಚಾರಿತ್ರಿಕವಾದ ಸ್ಥಳವನ್ನೇ ನೀಡಿತು.

ಅಣ್ಣಾ ಒಡ್ಡುವ ಶರತ್ತುಗಳನ್ನು ಒಪ್ಪಿಕೊಂಡು ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ ಸರ್ಕಾರ ರಾಜ್ಯಸಭೆಯಲ್ಲಿ ಜನಲೋಕಪಾಲ ಮಸೂದೆಯನ್ನು ಒಪ್ಪಿಕೊಳ್ಳುವುದರಿಂದ ಹಿಂದೆ ಸರಿಯುವುದರಲ್ಲಿ ಅದರದೇಯಾದ ಕೆಲ ರಾಜಕೀಯ ಕಾರಣಗಳು ಇರಬಹುದಾದರೂ ಆ ಮೂಲಕ ಪರೋಕ್ಷವಾಗಿ  ಅಣ್ಣಾ ಹೋರಾಟದ ಸತ್ವ ಕಡಿಮೆ ಮಾಡುವಲ್ಲಿಯೂ ಅವರ ರಾಜಕೀಯ ಧೋರಣೆ ಕಾರಣವಾಯಿತು. ಅದೇ ವೇಳೆಗೆ ಈ ಜನಲೋಕಪಾಲ ಮಸೂದೆಯನ್ನು ಯಾರು ವಿರೋಧಿಸಿದರು ಎನ್ನುವುದಕ್ಕಿಂತಲೂ ರಾಜಕೀಯ ಹಿತಾಸಕ್ತಿಗಳ ಗಮನವೇ ಇಲ್ಲಿ ಮುಖ್ಯವಾಗಿ ಬಲಿಷ್ಟ ಲೋಕಪಾಲ ಮಸೂದೆ ಸೊರಗುವಂತಾಯಿತು. ಅದೇ ವೇಳೆಗೆ ಅಣ್ಣಾ ಬಳಗದಲ್ಲಿಯ ಕೆಲವರ ಮಾತುಗಳಲ್ಲಿ ಗೊಂದಲಗಳು, ರಾಜಕೀಯ ಪಕ್ಷವೊಂದರ ಪರವಾದ ಮಾತುಗಳಂತೆ ಕೇಳಬರತೊಡಗಿದವು. ಪರಿಣಾಮವಾಗಿ ಕಳೆದ ಜನವರಿಯಲ್ಲಿ ಅಣ್ಣಾ ಟೀಮಿಗೆ ಇದ್ದ ನಾಯಕತ್ವದ ರಭಸ ವರ್ಷದ ಅಂತ್ಯದಲ್ಲಿ ತನ್ನ ಗಡುಸುತನವನ್ನು ಕಳೆದುಕೊಳ್ಳತೊಡಗಿತು.

ಜನತೆಗೆ ಅದರಲ್ಲೂ ದುಡಿದು ಬದುಕುವ ಸಾಮಾನ್ಯರಿಗೆ ಈ ಲೋಕಪಾಲ ಮಸೂದೆಯ ಜಾರಿಗೊಳ್ಳುವಿಕೆ, ಜಾರಿಯಾಗದಿರುವಿಕೆ ಎರಡೂ ಅಷ್ಟಾಗಿ ಬಾಧಿಸುವುದಿಲ್ಲ. ಹಾಗೆಯೇ ಭ್ರಷ್ಟಾಚಾರದ ವಿರೋಧಿ ಆಂದೋಲನವನ್ನು ನಿರಂತರವಾಗಿ ನೆನಪಿಟ್ಟು ಆ ದಿಶೆಯಲ್ಲಿ ನಡೆಯಬೇಕಾದ ನಿರಂತರ ಹೋರಾಟವನ್ನು ರೂಪಿಸುವಷ್ಟು ಇವರ ಬದುಕು ಸುಭದ್ರವಾಗಿಲ್ಲ. ಈಗ ಅದೇ ಅಣ್ಣಾ ಮತ್ತೆ ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿದರೆ ಸಾಮಾನ್ಯ ಮಧ್ಯಮವರ್ಗದ ಜನ ಮೊದಲಿನ ಹುರುಪಿನಲ್ಲಿಯೇ ಅಣ್ಣಾ ಕೂಗಿಗೆ ಸ್ಪಂದಿಸುತ್ತಾರೆ ಎಂದು ಹೇಳುವಂತಿಲ್ಲ. ಯಾಕೆಂದರೆ ಸಾಮಾನ್ಯನ ಬದುಕೇ ಹಾಗಿದೆ. ಆತ ಯಾವುದನ್ನೂ ತುಂಬಾ ದೀರ್ಘ ಕಾಲದವರೆಗೆ ನೆನಪಿಟ್ಟುಕೊಳ್ಳಲಾರ. ಜೊತೆಗೆ ಅತ್ಯಂತ ಬೇಗ ಆತ ಒಂದು ವ್ಯವಸ್ಥೆಯ ಬಗ್ಗೆ ಸಿನಿಕತನವನ್ನು ಹೊಂದುವುದೂ ಇದೆ.

ನಮ್ಮ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ರಾಜಕಾರಣಿಗಳು ತಮ್ಮ ಕರಾಳ ವ್ಯವಹಾರಗಳಿಗೆ ಕುತ್ತು ಬರುವಂತಹ ಯಾವ ನಿಯಮಗಳನ್ನೂ ಇಲ್ಲಿಯವರೆಗೆ ಒಪ್ಪಿಕೊಂಡಿರುವುದು ತೀರಾ ಅಪರೂಪ. ಅಂತಹದರಲ್ಲಿ ಪ್ರಧಾನಮಂತ್ರಿಯನ್ನೊಳಗೊಂಡು ಎಲ್ಲರೂ ಲೋಕಪಾಲ ಮಸೂದೆಗೆ ಒಳಪಡಬೇಕು ಎನ್ನುವ ಅಣ್ಣಾನ ಒತ್ತಾಸೆ ಈಡೇರುವದಾದರೂ ಹೇಗೆ..?

ಅಣ್ಣಾ ಜನಲೋಕಪಾಲ ಮಸೂದೆಯ ವಿಷಯದಲ್ಲಿ ತನ್ನ ಮಿತಿಗಳನ್ನೂ ಮೀರಿ ಹೋರಾಟ ಮಾಡಿದ. ಹಾಗೆಯೇ ಹಿಂದೆಂದೂ ಯಾರಿಗೂ ಸಿಗದ ಅಪಾರ ಪ್ರಮಾಣದ ಜನಬೆಂಬಲವೂ ಅವನಿಗೆ ದೊರೆಯಿತು. ಅಂತಿಮವಾಗಿ ಆಗಬೇಕಾದ ಮಹತ್ತರವಾದ ಕೆಲಸವೊಂದು ಹಾಗೇ ಉಳಿದುಹೋಯಿತು. ಪರೋಕ್ಷವಾಗಿ ಈ ಬಗೆಯ ಬಲಿಷ್ಟ ಲೋಕಪಾಲ ಮಸೂದೆ ಬಹುತೇಕ ರಾಜಕಾರಣಿಗಳಿಗೆ ಬೇಕಾಗದಿರುವಂತೆ, ಭ್ರಷ್ಟ ಅಧಿಕಾರಿ ಸಮೂಹಕ್ಕೂ ಬೇಕಾಗಿಲ್ಲ. ಇನ್ನು ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ ಜನಸಾಮಾನ್ಯ ಮಾತ್ರ ತನ್ನ ದೈನಂದಿನ ಕೆಲಸ ಕಾರ್ಯಗಳ ನಿರ್ವಹಣೆಯಲ್ಲಿ ಎಂದಿನಂತೆ ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಾ ಹಾಯಾಗಿದ್ದಾನೆ. ಮತ್ತೆ ಅಣ್ಣಾ ಒಂದೊಮ್ಮೆ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಕರೆ ನೀಡಿದರೆ ಭ್ರಷ್ಟಾಚಾರ ವಿಷಯದಲ್ಲಿ ಅಪಾರ ಪ್ರಮಾಣದಲ್ಲಿ ಮಾತಾಡಿ, ಆ ಬಗ್ಗೆ  ಕೇಳಿ ಯಥಾಸ್ಥಿತಿಯನ್ನೇ ಅನುಭವಿಸುವಂತಾದ ಜನ ಅದೇ ಮೊದಲಿನ ಪ್ರಮಾಣದಲ್ಲಿ ಅಣ್ಣಾಗೆ ಸಾಥ್ ನೀಡುತ್ತಾರೆಂದು ನನಗನಿಸದು.

ರಾಮಕೃಷ್ಣ ಹೆಗ್ಡೆಯ ನುಡಿಗಳು ಮತ್ತು ಯಡಿಯೂರಪ್ಪನ ನಡೆಗಳು


– ಡಾ.ಎನ್.ಜಗದೀಶ್ ಕೊಪ್ಪ


 

ಇದು 2003ರ ಡಿಸೆಂಬರ್ ತಿಂಗಳ ಒಂದು ಘಟನೆ. ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ದಿನಪತ್ರಿಕೆ, ಸುಧಾ ಮೂರ್ತಿಯವರ ಪ್ರವಾಸಕಥನ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರ ನಿರಾಕರಣೆ ಚಳುವಳಿ ಕುರಿತ ಎರಡು ಕೃತಿಗಳನ್ನು ಪ್ರಕಟಿಸಿ, ಬಿಡುಗಡೆಗಾಗಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಡೆಯವರನ್ನು ಆಹ್ವಾನಿಸಿತ್ತು. ಅಂದಿನ ದಿನಗಳಲ್ಲಿ ಮಾಧ್ಯಮ ಪ್ರತಿನಿಧಿಗಳ ಹಾವಳಿ ಈಗಿನ ಹಾಗೆ ಇರಲಿಲ್ಲ. ನಾಲ್ಕು ದಿನಪತ್ರಿಕೆ ಹಾಗೂ ಎರಡು ಚಾನಲ್‌ಗಳು ಮಾತ್ರ ಇದ್ದವು.

ಸಂಜೆ 6 ಗಂಟೆಗೆ ಪತ್ರಿಕೆಕೆಯ ಹುಬ್ಬಳ್ಳಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾವು ಆರು ಮಂದಿ ಪತ್ರಕರ್ತರು ಸುಮಾರು 5:30ರ ವೇಳೆಗೆ ಕಾರ್ಯಕ್ರಮಕ್ಕೆ ಹಾಜರಾದಾಗ ಪತ್ರಿಕೆಯ ಟ್ರಸ್ಟ್ ಅಧ್ಯಕ್ಷರ ಕಚೇರಿಯಲ್ಲಿ ಲಘು ಉಪಹಾರ ಏರ್ಪಡಿಸಲಾಗಿತ್ತು. ಆ ವೇಳೆಗಾಗಲೇ ಆಗಮಿಸಿದ್ದ ರಾಮಕೃಷ್ಣ ಹೆಗ್ಡೆ ನಮ್ಮೊಂದಿಗೆ ತಿಂಡಿ ತಿನ್ನುತ್ತಾ ಇದ್ದಕ್ಕಿದ್ದಂತೆ ತಮ್ಮ ಒಂದು ಬಾಲ್ಯದ ಅನುಭವವನ್ನು ನಮ್ಮ ಮುಂದೆ ಬಿಚ್ಚಿಟ್ಟರು. ಅವರ ಮಾತಿನ ಲಹರಿ ಹೀಗಿತ್ತು:

ನನಗಾಗ ಕೇವಲ ಆರು ಅಥವಾ ಏಳು ವರ್ಷವಿರಬಹುದು. ಸಿದ್ದಾಪುರದ ಗದ್ದೆಯ ನಡುವೆ ಇದ್ದ ನಮ್ಮ ಮನೆ ಆ ಕಾಲಕ್ಕೆ ಬ್ರಿಟೀಷರ ವಿರುದ್ಧ ಹೋರಾಡುತಿದ್ದ ಸ್ವಾತಂತ್ರ್ಯ ಹೋರಾಟಗಾರರಿಗೆ ಒಂದು ರೀತಿಯಲ್ಲಿ ತಂಗುದಾಣವಾಗಿತ್ತು. ಶಿವಮೊಗ್ಗ ಮತ್ತು ಉತ್ತರ ಕನ್ನಡ ಗಡಿಭಾಗದಲ್ಲಿದ್ದ ನಮ್ಮ ಮನೆ ಸ್ವಾತಂತ್ರ್ಯ ಹೋರಾಟಗಾರರು ಪೋಲಿಸರಿಂದ ತಪ್ಪಿಸಿಕೊಳ್ಳಲು ಹೇಳಿ ಮಾಡಿಸಿದಂತಹ ಸ್ಥಳವಾಗಿತ್ತು.

ಶಿವಮೊಗ್ಗ ಪೋಲಿಸರಿಂದ ತಪ್ಪಿಸಿಕೊಳ್ಳಲು ಬೇಲಿ ನೆಗೆದು ನಮ್ಮ ಮನೆಗೆ ಬಂದರೆ ಹಿಡಿಯುವಂತಿರಲಿಲ್ಲ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆ ಪೋಲಿಸರು ಬಂದರೆ ಸಲೀಸಾಗಿ ಬೇಲಿ ನೆಗೆದು ಶಿವಮೊಗ್ಗ ಗಡಿಪ್ರದೇಶಕ್ಕೆ ತೆರಳಬಹುದಾಗಿತ್ತು. ಮೂಲತಃ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಮಹಾಬಲೇಶ್ವರ ಹೆಗಡೆ ಯಾರೇ ನಮ್ಮ ಮನೆಗೆ ಬಂದರೂ ಜಾತಿ ಧರ್ಮ ಬೇಧವಿಲ್ಲದೆ ಆತಿಥ್ಯ ನೀಡುತಿದ್ದರು. ನನ್ನ ತಾಯಿ ಸರಸ್ವತಿ ಹೆಗಡೆ ಕೂಡ ಅಕ್ಷರಶಃ ಅನ್ನಪೂರ್ಣೆಯಂತೆ ನಡೆದುಕೊಳ್ಳುತಿದ್ದರು.

ನಮ್ಮ ಮನೆ ಬ್ರಿಟೀಷರಿಗೆ ತಲೆನೋವಾದ ಕಾರಣ ಸರ್ಕಾರ ಗದ್ದೆಯ ಬಯಲಿನಲ್ಲಿ ಇದ್ದ ನಮ್ಮ ಮನೆಯನ್ನು ಧ್ವಂಸ ಮಾಡುವಂತೆ ಪೋಲಿಸರಿಗೆ ಆದೇಶ ಜಾರಿ ಮಾಡಿತು. ಒಂದು ಬೆಳಗಿನ ಜಾವ ಮನೆಗೆ ಬಂದ ಪೋಲಿಸರು ನಮ್ಮ ಹೆಂಚಿನ ಮನೆ, ಅದರೊಳಗೆ ಅತಿಥಿಗಳಿಗಾಗಿ ನಿರ್ಮಿಸಿದ್ದ ಅಟ್ಟ, ಪಾತ್ರೆ, ದಿನಸಿ ಸಾಮಾನುಗಳನ್ನು ನಾಶ ಮಾಡಿ ಹೊರಟು ಹೋಯಿತು.

ನನ್ನ ಅಪ್ಪ, ಅಮ್ಮ, ನಾನು, ನನ್ನ ಸಹೋದರ ಎಲ್ಲರೂ ಬಯಲಿಗೆ ಬಿದ್ದೆವು. ದೃತಿಗೆಡೆದ ನನ್ನಪ್ಪ ನನ್ನನ್ನು ತಮ್ಮ ಹೆಗಲ ಮೇಲೆ ಕೂರಿಸಿಕೊಂಡು ಸಿದ್ದಾಪುರದ ಸಂತೆಗೆ ಹೋಗಿ ಒಂದಿಷ್ಟು ಮಡಕೆಗಳನ್ನು ಕೊಂಡು ತಂದರು. ನಾವು ಸಂತೆಯಿಂದ ಬರುವ ವೇಳೆಗೆ ನಮ್ಮೂರಿನ ಸುತ್ತ ಮುತ್ತಲಿನ ಜನ ಅಕ್ಕಿ, ಬೇಳೆ, ಉಪ್ಪು, ಮೆಣಸಿನಕಾಯಿ, ಸಾಂಬಾರ್ ಪುಡಿ ಹೀಗೆ ಹಲವು ವಸ್ತುಗಳನ್ನು ಅಮ್ಮನ ಬಳಿ ಕೊಟ್ಟು ಹೋಗಿದ್ದರು. ಆ ದಿನ ನನ್ನಮ್ಮ ಬಯಲಿನಲ್ಲಿ ಕಲ್ಲುಗಳನ್ನು ಇಟ್ಟು ಅಡುಗೆ ಮಾಡಿ ನಮಗೆ ಬಡಿಸಿದಳು. ಆದಿನ ನಾನು ನನ್ನ ಕುಟುಂಬ ತಿಂದ ಅನ್ನ, ಬೇಳೆ ಅಥವಾ ಉಪ್ಪು ಯಾರ ಮನೆಯದು, ಯಾರ ಜಾತಿಯದು, ಯಾವ ಧರ್ಮದ್ದೆಂದು ನಾವ್ಯಾರು ಕೇಳಲಿಲ್ಲ. ಎಲ್ಲಾ ಧರ್ಮದ, ಎಲ್ಲ ಜಾತಿಯ ಋಣ ನನ್ನ ರಕ್ತದಲ್ಲಿ ಹರಿಯುತ್ತಿದೆ. ಹಾಗಾಗಿ ನಾನು ಇವುಗಳ ಬಗ್ಗೆ ಎಂದೂ ವಕಾಲತ್ತು ವಹಿಸಲಾರೆ.

ಅತ್ಯಂತ ತಾಳ್ಮೆಯಿಂದ ಯಾವುದೇ ಭಾವೋದ್ರೇಕವಿಲ್ಲದೆ, ತಣ್ಣನೆಯ ದನಿಯಲ್ಲಿ ಅವರು ಮಾತನಾಡುತ್ತಿದ್ದಾಗ ಅವರ ಕಣ್ಣುಗಳಿಂದ ಧಾರಾಕಾರವಾಗಿ ಹರಿಯುತ್ತಿದ್ದ ನೀರು ಅವರ ಕುರುಚಲು ಗಡ್ಡದಲ್ಲಿ ಲೀನವಾಗುತಿತ್ತು. ಅವರ ಮಾತುಗಳನ್ನು ಕೇಳುತ್ತಿದ್ದ ನಮ್ಮ ಕಣ್ಣುಗಳು ಸಹ ಒದ್ದೆಯಾಗಿದ್ದವು.

ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿಯ ಕುರ್ಚಿ ಬಿಟ್ಟು ಬೇರೆಲ್ಲೂ ನನ್ನ ಅಂಡು ಸ್ಥಳವೂರಲಾರದು ಎಂಬಂತೆ ವರ್ತಿಸುತ್ತ ಹಲವು ಅವತಾರಗಳನ್ನು ತಾಳುತ್ತಿರುವ ಯಡಿಯೂರಪ್ಪ ಎಂಬ ಅವಿವೇಕಿ ಮತ್ತು ಜಾತಿಯ ಹೆಸರಿನಲ್ಲಿ ಅವನ ಭಟ್ಟಂಗಿಗಳು ಮತ್ತು ಚೇಲಾಗಳು ಕರ್ನಾಟಕದಲ್ಲಿ ನಡೆಸುತ್ತಿರುವ ರಾಜಕೀಯ ವರಸೆ ನೋಡಿ ಏಕೋ ಏನೋ ರಾಮಕೃಷ್ಣ ಹೆಗ್ಡೆ ನೆನಪಾದರು.