Tag Archives: ಹೈಕೋರ್ಟ್

Karnataka High Court

ಸುಪ್ರೀಂಕೋರ್ಟಿನ ತೀರ್ಪು ಮತ್ತು ರಾಜ್ಯದ ಹೈಕೋರ್ಟಿನ ತೀರ್ಪು


– ರವಿ ಕೃಷ್ಣಾರೆಡ್ಡಿ  


ಕರ್ನಾಟಕದ ನ್ಯಾಯಾಂಗದ ಬಗ್ಗೆ ಮಾತನಾಡುವುದಕ್ಕೆ ಭಯವಾಗುತ್ತದೆ. ಇಲ್ಲಿರುವ ಭ್ರಷ್ಟತೆಯನ್ನು ಅಥವ ಅಯೋಗ್ಯತೆಯನ್ನು ಕುರಿತು ಎಷ್ಟು ಮಾತನಾಡಿದರೆ ನ್ಯಾಯಾಂಗ ನಿಂದನೆ ಆಗುವುದಿಲ್ಲ ಮತ್ತು ಆಗುತ್ತದೆ ಎನ್ನುವುದೇ ಗೊತ್ತಾಗದ ಸ್ಥಿತಿಯಲ್ಲಿದ್ದೇವೆ.

ಯಾರಿಗೆ ಯಾವ ಆಧಾರದ ಮೇಲೆ ಜಾಮೀನು ಸಿಗುತ್ತದೆ ಅಥವ ಸಿಗುವುದಿಲ್ಲ ಎನ್ನುವುದು ಗೊತ್ತಾಗುತ್ತಿಲ್ಲ. ಯಾರೊ ಯಾರೋ ಗರ್ಲ್‌ಫ್ರೆಂಡ್‌ ಜೊತೆ ಡೀಲ್ ಮಾಡಿಕೊಂಡು ಏನೋ ಮಾಡಿಸಿಕೊಂಡರಂತೆ ಎನ್ನುವ ಸುದ್ದಿಗಳೆಲ್ಲ ಹರದಾಡುತ್ತವೆ. ಇನ್ಯಾರದೋ ತೀರ್ಪಿನ ಬಗ್ಗೆ ಜನ ರಾಜ್ಯಪಾಲರಿಗೇ ನೇರ ದೂರು ನೀಡುತ್ತಾರೆ. ನನಗೆ ಇತ್ತೀಚೆಗೆ ಗೊತ್ತಾದ ಪ್ರಕಾರ ಯಾವ ಬೆಂಚಿಗೆ ತಮ್ಮ ಕೇಸು ಹಾಕಿಕೊಂಡರೆ ಕೇಸು ತಮ್ಮ ಪರ-ವಿರುದ್ಧ ಆಗುತ್ತದೆ ಎನ್ನುವ ಕಲ್ಪನೆ ವಕೀಲರಿಗೆ ಇರುತ್ತದಂತೆ. ಎಲ್ಲಿಗೆ ಹೋಯಿತು ನಮ್ಮ ನ್ಯಾಯಾಂಗದ ಘನತೆ ಮತ್ತು ಸ್ವಾತಂತ್ರ್ಯ?

ಈಗ, ನೆನ್ನೆ ತಾನೆ ಸುಪ್ರೀಮ್ ಕೋರ್ಟ್ ಕರ್ನಾಟಕ ಹೈಕೊರ್ಟ್‌ ಈ ಹಿಂದೆ ನೀಡಿದ್ದ ತೀರ್ಪನ್ನು ಮತ್ತೊಮ್ಮೆ ತಳ್ಳಿ ಹಾಕಿದೆ.

ಇದು ಪಕ್ಷೇತರರ ಅನರ್ಹತೆ ವಿಷಯಕ್ಕೆ ಸಂಬಂಧಿಸಿದ್ದು. ಕರ್ನಾಟಕದ ಈಗಿನ ಸ್ಪೀಕರ್ ಇಲ್ಲಿಯವರೆಗೆ ನಮ್ಮೆಲ್ಲರಿಗೂ ಗೌರವ ಹುಟ್ಟುವ ರೀತಿಯಲ್ಲಿ ಏನೇನೂ ನಡೆದುಕೊಂಡಿಲ್ಲ. ಬಿಜೆಪಿಯ ಹನ್ನೊಂದು ಮತ್ತು ಐವರು ಪಕ್ಷೇತರ ಶಾಸಕರ ಅನರ್ಹತೆ ವಿಷಯದಲ್ಲಿ ಸ್ಪೀಕರ್ ಹುದ್ದೆಯ ಎಲ್ಲಾ ಘನತೆ ಮತ್ತು ಸ್ವಾತಂತ್ರ್ಯವನ್ನು ಮಣ್ಣುಮುಕ್ಕಿಸಿದವರು ಅವರು. ಎಂತೆಂತಹ ಅನರ್ಹರು ಮತ್ತು ಅಯೋಗ್ಯರೆಲ್ಲ ಸ್ಪೀಕರ್ ಹುದ್ದೆಯಲ್ಲಿ ಮುಂದುವರೆಯುತ್ತಾರೆ ಮತ್ತು ಅದನ್ನು ವಿಧಾನಸಭೆಯ ಆಡಳಿತ ಮತ್ತು ವಿರೋಧ ಪಕ್ಷದವರು ಸಹಿಸಿಕೊಳ್ಳುತ್ತಾರೆ ಎನ್ನುವುದೇ ನಮ್ಮ ಹಾಲಿ ವಿಧಾನಸಭಾ ಸದಸ್ಯರ composition ಎಂತಹುದು ಎನ್ನುವುದನ್ನು ತೋರಿಸುತ್ತದೆ. ನಾಚಿಕೆಗೇಡು.

ಆದರೆ, ನ್ಯಾಯಾಲಯ? ಯಾವ ಕೋರ್ಟನ್ನು ನಂಬುವುದು? ಹೇಗೆ ಇಲ್ಲಿಯ ನ್ಯಾಯಾಲಯದ ತೀರ್ಪುಗಳ ನಿಷ್ಪಕ್ಷಪಾತವನ್ನು ಖಚಿತ ಪಡಿಸಿಕೊಳ್ಳುವುದು?

ನ್ಯಾಯಾಂಗ ಸುಧಾರಣೆಗಳನ್ನು ಆದಷ್ಟು ಬೇಗ ಸಾಧ್ಯಮಾಡಿಕೊಳ್ಳದಿದ್ದರೆ ಈ ದೇಶದ ನ್ಯಾಯವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ, ಎರಡೂ ಉಳಿಯುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಈ ಕೆಳಗಿನ ಲೇಖನ ನಾನು ಎಂಟು ತಿಂಗಳ ಹಿಂದೆ ಬರೆದದ್ದು ಮತ್ತು ಐದು ತಿಂಗಳ ಹಿಂದೆ ಇಲ್ಲಿ ವರ್ತಮಾನದಲ್ಲಿ ಪ್ರಕಟಿಸಿದ್ದು . ಇದನ್ನು ಸುಪ್ರೀಂ ಕೋರ್ಟ್‌ನ ನೆನ್ನೆಯ ತೀರ್ಪಿನ ಹಿನ್ನೆಲೆಯಲ್ಲಿ ನೋಡಿ; ಆ ತೀರ್ಪಿನ ವಿವರಗಳು ಡೆಕ್ಕನ್ ಹೆರಾಲ್ಡ್‌ನ ಈ ವರದಿಯಲ್ಲಿದೆ.

ಸುಪ್ರೀಂಕೋರ್ಟಿನ ತೀರ್ಪು ರಾಜ್ಯದ ಹೈಕೋರ್ಟನ್ನೂ ಟೀಕಿಸಿಲ್ಲವೆ

(ಈ ಲೇಖನ ಸುಮಾರು ಮೂರು ತಿಂಗಳಿನ ಹಿಂದೆ (16/05/11) ಬರೆದದ್ದು. ಕಾರಣಾಂತರಗಳಿಂದ ಇದು ಪ್ರಕಟವಾಗಬೇಕಾದ ಕಡೆ ಪ್ರಕಟವಾಗಲಿಲ್ಲ. ನೆನ್ನೆ (18/08/11) ರಾಜ್ಯಸಭೆಯಲ್ಲಿ ಬಂಗಾಳದ ಹೈಕೋರ್ಟ್ ನ್ಯಾಯಾಧೀಶರನ್ನು ಕೆಲಸದಿಂದ ವಜಾ ಮಾಡುವ ಪ್ರಕ್ರಿಯೆ ಮೇಲೆ ಚರ್ಚೆ ಮತ್ತು ಮತ ಚಲಾವಣೆ ನಡೆದು ಜಡ್ಜ್ ವಿರುದ್ದ ತೀರ್ಮಾನ ಕೈಗೊಳ್ಳಲಾಗಿದೆ. ಅದೇ ಪ್ರಕ್ರಿಯೆ ಲೋಕಸಭೆಯಲ್ಲಿ ಪೂರ್ಣಗೊಂಡಾಗ ಆ ಜಡ್ಜ್ ವಜಾ ಆಗಲಿದ್ದಾರೆ. ಆದರೆ, ನ್ಯಾಯಾಧೀಶರ ಭ್ರಷ್ಟಾಚಾರದ ವಿರುದ್ಧ ಮಾತು ಕೇಳಬರುತ್ತಿರುವುದು ಇದೇ ಮೊದಲಲ್ಲ. ಲೊಕಪಾಲ ಮಸೂದೆಯಲ್ಲಿ ನ್ಯಾಯಾಂಗವನ್ನು ಹೊರಗಿಡುವ ಬಗ್ಗೆ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಮೂರು ತಿಂಗಳ ಹಿಂದೆ ಬರೆದ ಈ ಲೇಖನ ಈಗಲೂ ಪ್ರಸ್ತುತ ಇಂದು ಇಲ್ಲಿ ಪ್ರಕಟಿಸುತ್ತಿದ್ದೇನೆ… ರವಿ…)

Karnataka High Courtಕಳೆದ ಶುಕ್ರವಾರ ( ಮೇ 13, 2011 ) ಸುಪ್ರೀಂಕೋರ್ಟ್ ಕರ್ನಾಟಕದ 16 ಶಾಸಕರ ಅನರ್ಹತೆಯನ್ನು ರದ್ದುಪಡಿಸಿ ಆದೇಶ ಹೊರಡಿಸುವುದರ ಜೊತೆಗೆ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು ರಾಜ್ಯದ ಮುಖ್ಯಮಂತ್ರಿಯನ್ನು ಕಟುಶಬ್ದಗಳಲ್ಲಿ ಟೀಕಿಸಿತು. ಆದರೆ, ಇದಕ್ಕೂ ಮುಖ್ಯವಾದುದನ್ನು ಸುಪ್ರೀಂಕೋರ್ಟ್ ನೇರವಾಗಿ ಹೇಳಲಿಲ್ಲ. ಅದೇನೆಂದರೆ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (11 ಬಿ.ಜೆ.ಪಿ. ಶಾಸಕರ ಅನರ್ಹತೆ ಮತ್ತು ಐವರು ಪಕ್ಷೇತರ ಶಾಸಕರ ಅನರ್ಹತೆ) ಕರ್ನಾಟಕ ರಾಜ್ಯದ ಉಚ್ಚನ್ಯಾಯಾಲಯ ಕೊಟ್ಟಿದ್ದ ತೀರ್ಪಿನಲ್ಲಿ ನ್ಯಾಯ ಇರಲಿಲ್ಲ ಎನ್ನುವುದು.

ಕಳೆದ ಅಕ್ಟೋಬರ್ 11ರ ವಿಶ್ವಾಸಮತ ಯಾಚನೆಯ ಹಿಂದಿನ ರಾತ್ರಿ ತರಾತುರಿಯಲ್ಲಿ ವಿಧಾನಸಭೆಯ ಸ್ಪೀಕರ್ ಮೇಲೆ ಉಲ್ಲೇಖಿಸಿದ 16 ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರು. ಅವರು ಹಾಗೆ ಮಾಡಲು ಕಾನೂನು ಮತ್ತು ನ್ಯಾಯಪಾಲನೆಗಿಂತ ಹೆಚ್ಚಾಗಿ ತಮ್ಮ ಬಿ.ಜೆ.ಪಿ. ಪಕ್ಷದ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಜಯ ಲಭಿಸುವಂತೆ ಮಾಡುವುದೇ ಆಗಿತ್ತು. ಸ್ಪೀಕರ್‌ರ ಈ ಕ್ರಮ ಅನೈತಿಕ ಮತ್ತು ಅಕ್ರಮವಾದದ್ದು ಎಂದು ಎದ್ದು ಕಾಣಿಸುವಷ್ಟು ಲಜ್ಜಾಹೀನವಾಗಿತ್ತು. ಸ್ಪೀಕರ್‌ರ ಈ ಕ್ರಮವನ್ನು ಪ್ರಶ್ನಿಸಿ ಅನರ್ಹಗೊಂಡ ಬಿ.ಜೆ.ಪಿ.ಯ 11 ಬಂಡಾಯ ಶಾಸಕರು, ಮತ್ತು ಐವರು ಪಕ್ಷೇತರ ಶಾಸಕರು ಪ್ರತ್ಯೇಕವಾಗಿ ಹೈಕೋರ್ಟ್‌ಗೆ ದೂರು ನೀಡಿದರು.

ಬಂಡಾಯ ಶಾಸಕರ ಅನರ್ಹತೆಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟಿನ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಮತ್ತು ನ್ಯಾಯಮೂರ್ತಿ ಎನ್. ಕುಮಾರ್ ಸಾಕಷ್ಟು ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಅಕ್ಟೋಬರ್ 18ರಂದು ಪರಸ್ಪರ ಒಮ್ಮತವಿಲ್ಲದ ನ್ಯಾಯತೀರ್ಮಾನಕ್ಕೆ ಬಂದರು. ನ್ಯಾ. ಖೇಹರ್ ಸ್ಪೀಕರ್ ಮಾಡಿದ್ದು ಸರಿ ಎಂದರೆ, ನ್ಯಾ. ಕುಮಾರ್ ಸ್ಪೀಕರ್‌ರ ಕ್ರಮದಲ್ಲಿ ಲೋಪವನ್ನು ಗುರುತಿಸಿದರು. ಹೀಗೆ ಒಮ್ಮತದ ತೀರ್ಪಿಲ್ಲದ ಕಾರಣವಾಗಿ ಈ ಪ್ರಕರಣವನ್ನು ಮೂರನೆ ನ್ಯಾಯಮೂರ್ತಿಯ ಅಭಿಪ್ರಾಯಕ್ಕಾಗಿ ನ್ಯಾ. ಸಭಾಹಿತರಿಗೆ ಕಳುಹಿಸಲಾಯಿತು.

ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿದ ನ್ಯಾ. ಸಭಾಹಿತರು ಅಕ್ಟೋಬರ್ 29ರಂದು ಮುಖ್ಯನ್ಯಾಯಮೂರ್ತಿ ಖೇಹರ್‌ರ ನ್ಯಾಯತೀರ್ಮಾನವನ್ನು ಅನುಮೋದಿಸಿದರು. ಇದರೊಂದಿಗೆ 2:1 ರ ಅನುಪಾತದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯ ಸ್ಪೀಕರ್‌ರ ಕ್ರಮವನ್ನು ಎತ್ತಿಹಿಡಿದು 11 ಬಂಡಾಯ ಶಾಸಕರ ಅನರ್ಹತೆಯನ್ನು ಮಾನ್ಯಗೊಳಿಸಿತು. ಈ ಇಡೀ ಪ್ರಕರಣದಲ್ಲಿ ನಾವು ಗಮನಿಸಬೇಕಾಗಿರುವ ಅತಿಮುಖ್ಯ ಸಂಗತಿ ಏನೆಂದರೆ, ಕರ್ನಾಟಕದ ಉಚ್ಚನ್ಯಾಯಾಲಯದ ದೃಷ್ಟಿಗೆ ಸ್ಪೀಕರ್ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯಲ್ಲಿ ಯಾವುದೇ ಅನೈತಿಕತೆ ಮತ್ತು ಅಕ್ರಮ ಕಾಣಿಸದೆ ಇದ್ದುದು.

ಅನರ್ಹಗೊಂಡ ಬಂಡಾಯ ಶಾಸಕರ ಜೊತೆಜೊತೆಗೆ ಅನರ್ಹಗೊಂಡ ಐವರು ಪಕ್ಷೇತರ ಶಾಸಕರೂ ಕೂಡ ಕರ್ನಾಟಕದ ಉಚ್ಚನ್ಯಾಯಾಲಯಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು. ಆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾ. ಮೋಹನ್ ಶಾಂತನಗೌಡರ್, ನ್ಯಾ. ಅಬ್ದುಲ್ ನಜೀರ್, ಮತ್ತು ನ್ಯಾ. ಎಸ್. ಬೋಪಣ್ಣನವರ ಪೀಠವು ಸುದೀರ್ಘ ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಪಕ್ಷೇತರ ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಯಾವುದೇ ದುರುದ್ದೇಶದಿಂದ ನಡೆದುಕೊಂಡಿಲ್ಲ ಮತ್ತು ಅವರ ಕ್ರಮ ಸರಿ ಎಂಬ ತೀರ್ಪನ್ನು ಫೆಬ್ರವರಿ 15ರಂದು ನೀಡಿತು. ಇಲ್ಲಿ ಒತ್ತಿಹೇಳಬೇಕಾದ ಸಂಗತಿಯೆಂದರೆ ಈ ತೀರ್ಪು ಮೂವರು ನ್ಯಾಯಮೂರ್ತಿಗಳ ಒಮ್ಮತದ ನ್ಯಾಯತೀರ್ಮಾನವಾಗಿದ್ದದ್ದು.

ಹೀಗೆ ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ಕರ್ನಾಟಕದ ಹೈಕೋರ್ಟಿನ ಆರು ನ್ಯಾಯಮೂರ್ತಿಗಳ ಪೈಕಿ ಐವರಿಗೆ ಸ್ಪೀಕರ್‌ರ ಕ್ರಮ ಮತ್ತು ನಡವಳಿಕೆಯಲ್ಲಿ ಯಾವುದೇ ಪಕ್ಷಪಾತ, ದುರುದ್ದೇಶ, ಮತ್ತು ಕಾನೂನು ಮತ್ತು ಸಂವಿಧಾನದ ಉಲ್ಲಂಘನೆ ಕಂಡಿರಲಿಲ್ಲ.

ತಮಗೆ ಸಿಕ್ಕ ನ್ಯಾಯತೀರ್ಮಾನದಿಂದ ತೃಪ್ತರಾಗದ ಎಲ್ಲಾ 16 ಅನರ್ಹ ಶಾಸಕರು ದೆಹಲಿಯ ಸುಪ್ರೀಂಕೋರ್ಟಿಗೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದರು. ಈ ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್ ಪರಿಶೀಲಿಸಿದ ಅದೇ ದಾಖಲೆಗಳನ್ನು ಪುನರ್‌ಪರಿಶೀಲಿಸಿ ಮತ್ತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾ. ಕಬೀರ್ ಮತ್ತು ನ್ಯಾ. ಜೋಸೆಫ್ ಹೈಕೋರ್ಟ್ ತೀರ್ಪಿಗೆ ಸಂಪೂರ್ಣ ವ್ಯತಿರಿಕ್ತವಾದ ಅವಳಿ ತೀರ್ಮಾನವನ್ನು ನೀಡಿದರು. ಅಷ್ಟೇ ಅಲ್ಲದೆ, “ನೈಸರ್ಗಿಕ ನ್ಯಾಯ ಮತ್ತು ನ್ಯಾಯಯುತ ನಡವಳಿಕೆಯ ಅವಳಿ ತತ್ವಗಳ ಪರೀಕ್ಷೆಯಲ್ಲಿ ಸ್ಪೀಕರ್ ಬೋಪಯ್ಯನವರ ಆದೇಶ ಪಾಸಾಗುವುದಿಲ್ಲ. ಸಂವಿಧಾನದ 10ನೇ ಷೆಡ್ಯೂಲಿನಲ್ಲಿ ಕಾಣಿಸಲಾಗಿರುವ ಸಾಂವಿಧಾನಿಕ ನಡವಳಿಕೆಗಳು ಮತ್ತು 1986ರ ಅನರ್ಹತೆ ನಿಯಮಗಳನ್ನು ಉಲಂಘಿಸುವುದಷ್ಟೇ ಅಲ್ಲದೆ ನ್ಯಾಯಯುತ ವಿಚಾರಣೆಯ ಮೂಲತತ್ವವನ್ನು ಕೂಡ ಗಾಳಿಗೆ ತೂರಿದ ಸ್ಪೀಕರ್ ಮುಂದಿದ್ದ ಏಕೈಕ ಗುರಿ ಎಂದರೆ ಯಡಿಯೂರಪ್ಪ ಸರ್ಕಾರವನ್ನು ವಿಶ್ವಾಸಮತದ ಸಂಕಟದಿಂದ ಪಾರುಮಾಡುವುದು. ಸ್ಪೀಕರ್ ಮುಂದೆ ಪರಿಶೀಲನೆಗೆ ಇಟ್ಟಿದ್ದ ಪ್ರಕರಣಕ್ಕೆ ನೇರವಾಗಿ ಸಂಬಂಧ ಪಡದೇ ಇರುವಂತಹ ಬಾಹ್ಯ ಪರಿಗಣನೆಗಳು ಸ್ಪೀಕರ್ ಆದೇಶದ ಮೇಲೆ ಎದ್ದು ಕಾಣಿಸುತ್ತಿವೆ. ಇಂತಹ ಆದೇಶವನ್ನು ತಳ್ಳಿ ಹಾಕಲೇಬೇಕು,” ಎಂದು ಸ್ಪಷ್ಟ ಮಾತುಗಳಲ್ಲಿ ಹೇಳುವ ಮೂಲಕ ಸ್ಪೀಕರ್ ಕ್ರಮವನ್ನು ತಳ್ಳಿಹಾಕಿದ್ದೇ ಅಲ್ಲದೆ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಕೂಡ ಅಮಾನ್ಯಗೊಳಿಸಿದರು.

ಇದರೊಂದಿಗೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‌ನ ವಿಶ್ವಾಸಾರ್ಹತೆ ಮತ್ತು ಅದರ ನ್ಯಾಯಮೂರ್ತಿಗಳ ಸಂವಿಧಾನವನ್ನು ಅರ್ಥೈಸುವ ಸಾಮರ್ಥ್ಯವನ್ನು ಪರೋಕ್ಷವಾಗಿ ಪ್ರಶ್ನಿಸಿದಂತಾಗಿದೆ ಎನ್ನುವ ಅಭಿಪ್ರಾಯಕ್ಕೆ ಸದ್ಯದ ವಿದ್ಯಮಾನಗಳನ್ನು ಗಂಭೀರವಾಗಿ ಗಮನಿಸುತ್ತಿರುವವರು ಬರುವ ಹಾಗೆ ಆಗಿದೆ.

ಕರ್ನಾಟಕದ ಸಮಕಾಲೀನ ರಾಜಕೀಯ ವ್ಯವಸ್ಥೆ ಅತ್ಯಂತ ಭ್ರಷ್ಟವೂ, ಅನೈತಿಕವೂ, ಸ್ವಾರ್ಥಪೂರಿತವೂ ಆಗಿರುವುದನ್ನು ಕಳೆದ ನಾಲ್ಕೈದು ವರ್ಷಗಳ ಇತಿಹಾಸ ಸಾರಿ ಹೇಳುತ್ತಿದೆ. ಈ ಅನೈತಿಕತೆ ಮತ್ತು ಭ್ರಷ್ಟತೆ ರಾಜಕೀಯ ವಲಯಕ್ಕಷ್ಟೆ ಸೀಮಿತವಾಗದೆ ಬೇರೆಲ್ಲ ಸಾರ್ವಜನಿಕ ರಂಗಗಳಿಗೂ ವ್ಯಾಪಿಸುತ್ತ ಬಂದಿದೆ. ಇಂತಹ ನಿರಾಶಾದಾಯಕ ಸಂದರ್ಭದಲ್ಲಿ ಪ್ರಾಮಾಣಿಕರಿಗೆ ಮತ್ತು ದೇಶಪ್ರೇಮಿಗಳಿಗೆ ಉಳಿದಿದ್ದ ಏಕೈಕ ಭರವಸೆ ಎಂದರೆ ಅದು ನಮ್ಮ ಭ್ರಷ್ಟವಾಗಿಲ್ಲದಿದ್ದ ಮತ್ತು ಸಾಮರ್ಥ್ಯದಿಂದ ಕೂಡಿದ್ದ ನ್ಯಾಯಸ್ಥಾನಗಳು. ಈಗ ಮೇಲೆ ಉಲ್ಲೇಖಿಸಿರುವ ಪ್ರಕರಣಗಳಿಂದ ತಾವು ಇಟ್ಟುಕೊಂಡಿದ್ದ ಆ ಒಂದು ಭರವಸೆಯ ಬಗ್ಗೆಯೂ ನಾಗರಿಕರು ಸಂಶಯಾಸ್ಪದಿಂದ ನೋಡುವಂತೆ ಆಗಿದೆ. ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವ ಸಂಶಯ ಇವೆಲ್ಲದರಿಂದ ಗಟ್ಟಿಯಾಗದೆ?

ಸುಪ್ರೀಂಕೋರ್ಟ್ ಕಂಡಂತೆ ಅಕ್ರಮ ಆದೇಶ ಹೊರಡಿಸಿದ್ದ ಸ್ಪೀಕರ್‌ರ ಕ್ರಮ ರಾಜ್ಯದ ಹೈಕೋರ್ಟ್‌ನಲ್ಲಿ ಸಕ್ರಮವಾಗಿ ಮಾನ್ಯತೆ ಪಡೆದಿದ್ದರ ಹಿಂದೆ ಇರುವ ಕಾರಣಗಳಾದರೂ ಏನು? ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿ ಜನರ ಪ್ರಜ್ಞೆಗೂ ಬಂದಿರುವ ನ್ಯಾಯಾಧೀಶರುಗಳ ಭ್ರಷ್ಟಾಚಾರವೆ? ಅಥವ, ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಳ್ಳಲಾಗದ ಅಸಮರ್ಥರೂ ನ್ಯಾಯಮೂರ್ತಿಗಳಾಗಿರುವುದೇ? ಅಥವ, ನ್ಯಾಯಮೂರ್ತಿಗಳ ವೈಯಕ್ತಿಕ ರಾಜಕೀಯ ನಿಲುವುಗಳೂ ಅವರು ಕೊಡುತ್ತಿರುವ ತೀರ್ಪಿನ ಮೇಲೆ ಪ್ರಭಾವ ಬೀರುತ್ತಿರುವುದೆ? ಅಥವ, ಅಧಿಕಾರರೂಢರ ಪರ ಇರುವುದರಿಂದ ತಮ್ಮ ಸವಲತ್ತುಗಳಲ್ಲಿ ಹೆಚ್ಚಳವಾಗುತ್ತದೆಯೆಂಬ ಸ್ವಹಿತಾಸಕ್ತಿಯೆ? ಒಟ್ಟಿನಲ್ಲಿ, ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವುದೇ?

ಈ ಪ್ರಶ್ನೆಗಳು ರಾಜ್ಯದಲ್ಲಿ ಈಗ ನಡೆಯುತ್ತಿರುವ ಎಲ್ಲಾ ರಾಜಕೀಯ ಘಟನೆಗಳಿಗಿಂತ ಮುಖ್ಯವಾಗಿ ಚರ್ಚೆಯಾಗಬೇಕಾದ ಮತ್ತು ಕೂಡಲೇ ಸರಿಪಡಿಸಬೇಕಾದ ವಿಷಯಗಳಾಗಿವೆ. ನ್ಯಾಯಸ್ಥಾನದ ಬಗ್ಗೆ ನಾಗರಿಕರ ನಂಬಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಂದಿಗೂ ನ್ಯಾಯಮೂರ್ತಿಗಳದ್ದೇ ಆಗಿದೆ. ಅಲ್ಲವೆ?

ಕೊಡಗಿನಲ್ಲಿ ಅಕ್ರಮ ಅರಣ್ಯ ಲೂಟಿಗೆ ಪಾಲುದಾರನಾದ ಸರ್ಕಾರ

ವಿ. ಪ್ರಶಾಂತ್ ಮಿರ್ಲೆ
ವಕೀಲರು

ರಾಜ್ಯದಲ್ಲಿ ಇರುವ 4,10,775 ಹೆಕ್ಟೆರ್ ಅರಣ್ಯಪ್ರದೇಶದಲ್ಲಿ ಸುಮಾರು 1/3 ರಷ್ಟು ಪ್ರದೇಶವ್ಯಾಪ್ತಿಯನ್ನು ಹೊಂದಿರುವ ಕೊಡಗು ಜಿಲ್ಲೆಯು, ನೆಚ್ಚಿನ ಪ್ರವಾಸತಾಣವಾಗಿ ನಿಸರ್ಗದ ರಸದೌತಣವನ್ನು ನೀಡುತ್ತಿದೆ. ಈ ಪ್ರದೇಶಗಳಲ್ಲಿ ಕಂಡುಬರುವ ಜಮ್ಮಾ ಮತ್ತು ಬಾಣೆ ಜಮೀನುಗಳು ಕೃಷಿ ಜಮೀನುಗಳಿಗೆ ಸುತ್ತುವರೆದ ಕಾಡು ಪ್ರದೇಶಗಳಾಗಿರುತ್ತವೆ. ಐತಿಹಾಸಿಕವಾಗಿ ಅವಲೋಕಿಸಿದಾಗ, ಹಿಂದಿನ ಕೊಡಗಿನ ಮಹಾರಾಜರು ಕಾಡುಗಳ ರಕ್ಷಣೆಯ ಹೊಣೆಯನ್ನು ಸಾಗುವಳಿದಾರರಿಗೆ ವಹಿಸಿಕೊಟ್ಟವುಗಳಾಗಿರುತ್ತವೆ, ಈ ಪ್ರದೇಶಗಳಲ್ಲಿ ನಿಯಮಗಳ ಅನುಸಾರವಾಗಿ ಸಾಗುವಳಿದಾರರಿಗೆ ತಮ್ಮ ಸ್ವಂತ ಅಥವಾ ಗೃಹಕೃತ್ಯಗಳಿಗಷ್ಟೇ ಉಪಯೋಗಿಸುವ ಅವಕಾಶವನ್ನು ಹೊರತುಪಡಿಸಿ ಅವುಗಳ ಮೇಲಿನ ಹಕ್ಕನ್ನು ಮಹಾರಾಜರೇ (ಅಂದರೆ ಸರ್ಕಾರವೇ) ಕಾಯ್ದಿರಿಸಿಕೊಂಡಿದ್ದರು. ಪ್ರತಿ ಸಾಗುವಳಿದಾರನ ಕೃಷಿ ಜಮೀನಿಗೆ ಒತ್ತಾಗಿ 50 ರಿಂದ 200 ಹೆಕ್ಟೆರ್‌ಗಳಷ್ಟು ಜಮ್ಮಾ-ಬಾಣೆ ಜಮೀನುಗಳ ಹಿಡುವಳಿಯನ್ನು ಹೊಂದಿರುತ್ತಾರೆ. ಇಮ್ದು ಇಂತಹ ಅರಣ್ಯ ಪ್ರದೇಶಗಳಲ್ಲಿ ಸುಮಾರು 30.000 ಹೆಕ್ಟೆರ್‌ಗಳಷ್ಟು ಪ್ರದೇಶವು ಕಾಫಿ ಬೆಳೆಯ ಹೆಸರಿನಲ್ಲಿ ಒತ್ತುವರಿಯಾಗಿದೆ. ಅದರಲ್ಲಿ ಸಾಕಷ್ಟು ಪ್ರದೇಶವು ಬೇರೆಯವರಿಗೆ ಪರಭಾರೆಯೂ ಆಗಿದೆ.

ಇದಕ್ಕೂ ಮಿಗಿಲಾಗಿ, ನೂರಾರು ಹೆಕ್ಟೆರ್ ಪ್ರದೇಶಗಳು ಜಮ್ಮಾ-ಬಾಣೆ ಜಮೀನಿನ ಹೆಸರಿನಲ್ಲಿ ಸಾಗುವಳಿದಾರರಿಂದಲೇ ಒತ್ತುವರಿಯಾಗಿ, ಆಸುಪಾಸಿನ ಹೇರಳ ಪ್ರಮಾಣದ ಅರಣ್ಯ ಪ್ರದೇಶವನ್ನು ಬರಿದು ಮಾಡಲು ಹೊರಟಿರುವುದು ಆಘಾತಕಾರಿ ಬೆಳವಣಿಗೆ!.

ಹಲವು ಸಂದರ್ಭಗಳಲ್ಲಿ, ಜಮ್ಮಾ-ಬಾಣೆ ಜಮೀನುಗಳ ಹಿಡುವಳಿದಾರರ ಗುಂಪಿನ ಹಕ್ಕೊತ್ತಾಯದಿಂದಾಗಿ, ಸರ್ಕಾರ ಮತ್ತು ಹಿಡುವಳಿದಾರರ ನಡುವೆ ಕಾನೂನು ಸಮರಗಳು ಏರ್ಪಟ್ಟು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಜಮ್ಮಾ-ಬಾಣೆ ಜಮೀನಿನ ಮೇಲಿನ ಸರ್ಕಾರದ ಹಕ್ಕನ್ನು ಧೃಡೀಕರಿಸಿವೆ. ಈ ತೀರ್ಪುಗಳ ಅನ್ವಯ ಸರ್ಕಾರ ಜಮ್ಮಾ-ಬಾಣೆ ಜಮೀನುಗಳ ಅಕ್ರಮಗಳನ್ನು ನಿಯಂತ್ರಿಸುವ ಸಲುವಾಗಿ ಸಾಕಷ್ಟು ಕಟ್ಟು-ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಿತು. ಆದರೂ, ಹಿಡುವಳಿದಾರರು ತಮ್ಮ ರಾಜಕೀಯ ಪ್ರಭಾವ ಬೀರಿ ಇಲಾಖೆಗಳು ಯಾವುದೇ ಕ್ರಮಕೈಗೊಳ್ಳದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ, ಪ್ರಸ್ತುತ ಸರ್ಕಾರವು ಸದರಿ ಜಮ್ಮಾ-ಬಾಣೆ ಜಮೀನುಗಳ ಹಿಡುವಳಿಯನ್ನು ಸಕ್ರಮಗೊಳಿಸಿ ಹಿಡುವಳಿದಾರರಿಗೆ ಹಕ್ಕನ್ನು ಪ್ರಾಪ್ತಿಮಾಡುವ ಹೊಸ ನಿಯಮವನ್ನು ಜಾರಿಗೆ ತರುವ ನಡೆ ಸಂಶಯಾಸ್ವದವಾಗಿದೆ. ಮುಖ್ಯವಾದ ಸಂಗತಿಗಳೆಂದರೆ, ರಾಜ್ಯದ ಭೂ ಸುಧಾರಣೆ ಕಾಯಿದೆಯ ಅಡಿಯಲ್ಲಿ ಸಾಮಾನ್ಯನು ಹೊಂದುವ ಗರಿಷ್ಟ ವ್ಯವಸಾಯದ ಭೂಮಿತಿಯು 54 ಎಕರೆಗಳು ; ಇದಕ್ಕಿಂತ ಹೆಚ್ಚಿನ ಭೂಮಿಯು ಸರ್ಕಾರಕ್ಕೆ ನಿಹಿತವಾಗುತ್ತದೆ. ಆದರೆ, 100 ಎಕರೆಗಳಿಗೂ ಹೆಚ್ಚು ಜಮೀನುಗಳನ್ನು ಹೊಂದಿರುವವರನ್ನು ಭೂಪರಿಮಿತಿಯಿಂದ ವಿನಾಯ್ತಿ ನೀಡಿ ಸಕ್ರಮಗೊಳಿಸುವ ಸರ್ಕಾರದ ಪ್ರಯತ್ನ ಎಷ್ಟು ಸರಿ?. ಜಮ್ಮಾ-ಬಾಣೆ ಪ್ರದೇಶಗಳನ್ನು ಪ್ಲಾಂಟೇಶನ್ ಹೆಸರಿನಲ್ಲಿ ಸಕ್ರಮ ಮಾಡುವುದಾದರೆ ಇದಕ್ಕೆ ಕಾನೂನಿನ ಮಾನ್ಯತೆ ಇದೆಯೇ? ಇದು ಸರ್ಕಾರ ಉಳ್ಳವರ ಪರವಾದ ಧೋರಣೆ ಅಲ್ಲವೇ? ಯಾವುದೇ ಅಕ್ರಮ-ಸಕ್ರಮಗೊಳಿಸುವಲ್ಲಿ ಸೂಕ್ತ ಮಾನದಂಡಗಳು, ಪರಿಸರ ಕಾಳಜಿ ನಿಯಮಗಳನ್ನು ಅಳವಡಿಸಿಕೊಳ್ಳದಿದ್ದಲ್ಲಿ ಮಾಲಿನ್ಯಕ್ಕೆ ಸರ್ಕಾರವೇ ಕುಮ್ಮಕ್ಕು ಕೊಟ್ಟಂತಾಗುತ್ತದೆ. ಇದಕ್ಕೆ ಸರ್ಕಾರದ ಉತ್ತರವೇನು?

ಹಿಂದಿನ ಮಹಾರಾಜರಿಂದ ಇಂದಿನ ಸರ್ಕಾರಗಳು ತಮ್ಮ ಸ್ವಾಮ್ಯಕ್ಕೆ ಒಳಪಟ್ಟ ಅರಣ್ಯ ಪ್ರದೇಶಗಳನ್ನು ಜನರ ಅವಶ್ಯಕತೆಗಳನ್ನು ಮೀರಿ ದುರ್ಬಳಕೆ ಮಾಡದಂತೆ ತಡೆಯುವುದಕ್ಕಾಗಿ ಹಲವು ನಿಯಮಗಳನ್ನು ಜಾರಿಗೆ ತಂದಿವೆ. ಪ್ರಾದೇಶಿಕವಾಗಿ ತಮ್ಮ ಕೃಷಿ ಜಮೀನುಗಳಿಗೆ ಸುತ್ತುವರೆದ ಕಾಡು ಪ್ರದೇಶಗಳನ್ನು ಗುರ್ತಿಸಿ ಸೀಮಿತ ನಿರ್ಬಂಧಿತ ಹಕ್ಕುಗಳೊಂದಿಗೆ, ಅಂದರೆ 1) ಕಂದಾಯ ಮುಕ್ತವಾಗಿ,  2) ಜಾನುವಾರುಗಳ ಮೇವಿಗಾಗಿ,, 3) ಮರಗಳಿಂದ  ಎಲೆ ಗೊಬ್ಬರವನ್ನು  ತೆಗೆದುಕೊಳ್ಳಲು, 4) ಕೃಷಿ ಉತ್ಪನ್ನ  ಮತ್ತು ಗೃಹ ಉಪಯೋಗಕ್ಕಾಗಿ ಕಟ್ಟಿಗೆ  ಮತ್ತು  ಮರ ಮುಟ್ಟುಗಳನ್ನು  ತೆಗೆದುಕೊಳ್ಳುಲು ಕೃಷಿಕರಿಗೆ ಅವಕಾಶ, ಇವನ್ನು ಹೊರತುಪಡಿಸಿ ಅವುಗಳ ಮೇಲಿನ ಹಕ್ಕನ್ನು ಸರ್ಕಾರವೇ ಕಾಯ್ದಿರಿಸಿಕೊಂಡಿರುತ್ತದೆ. ಇಂತಹ  ಅರಣ್ಯ ಪ್ರದೇಶಗಳನ್ನು ನಮ್ಮ ರಾಜ್ಯದಲ್ಲಿ  ಪ್ರಾದೇಶಿಕವಾಗಿ ಭಿನ್ನ ಹೆಸರುಗಳಿಂದ ಕರೆಯಲಾಗುತ್ತದೆ. ಅವುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮ್ಕಿ, ಕಾನೆ ಮತ್ತು ಬಾಣೆ ಜಮೀನುಗಳೆಂತಲು; ಉತ್ತರ ಕನ್ನಡ  ಜಿಲ್ಲೆಯಲ್ಲಿ ಹಾಡಿ ಮತ್ತು ಬೆಟ್ಟದ ಜಮೀನು  ಜಮೀನುಗಳೆಂತಲೂ; ಮೈಸೂರು ಪ್ರದೇಶದಲ್ಲಿ ಕಾನೆ ಮತ್ತು ಸೊಪ್ಪಿನ ಬೆಟ್ಟದ ಜಮೀನುಗಳೆಂತಲೂ; ಕೊಡಗು ಜಿಲ್ಲೆಯಲ್ಲಿ ಜಮ್ಮಾ ಮತ್ತು ಬಾಣೆ ಜಮೀನುಗಳೆಂತಲೂ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಮೋತ್ಸಾಲ್ ಜಮೀನುಗಳೆಂತಲೂ ಅನ್ನುತ್ತಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ-1964ರ ಕಲಮು 79(2)ರ ಅಡಿಯಲ್ಲಿ ಈ ಅರಣ್ಯ ಪ್ರದೇಶಗಳ ಮೇಲಿನ ನಿಬಂಧಿತ ಉನ್ಮುಕ್ತಿಗಳ ಅನುಭೋಗವನ್ನು ಮಾನ್ಯಮಾಡಿದೆ.

ಪ್ರಸ್ತುತದಲ್ಲಿ, ರಾಜ್ಯದಲ್ಲಿ ಇರುವ 4,10,775 ಹೆಕ್ಟೆರ್ ಅರಣ್ಯಪ್ರದೇಶದಲ್ಲಿ ಸುಮಾರು 1/3 ರಷ್ಟು ಪ್ರದೇಶವ್ಯಾಪ್ತಿಯನ್ನು ಕೊಡಗು ಜಿಲ್ಲೆಯೇ ಹೊಂದಿದೆ. ಐತಿಹಾಸಿಕವಾಗಿ ಅವಲೋಕಿಸಿದಾಗ, ಹಿಂದಿನ ಕೊಡಗಿನ ಮಹಾರಾಜರು ಕಾಡುಗಳ ರಕ್ಷಣೆಯ ಹೊಣೆಯನ್ನು ಜಮ್ಮಾ ಸೇವಕರಿಗೆ, ಕೆಲಸದಾಳುಗಳಿಗೆ ನಂತರದ ಕಾಲದಲ್ಲಿ ಬ್ರಿಟಿಷರ ಆಡಳಿತದಲ್ಲಿ ತಮ್ಮ ಸೈನ್ಯದಲ್ಲಿ ಸೇವೆ ಸಲ್ಲಿಸಿದವರಿಗೆ ದಾನವಾಗಿ ಅಥವಾ ಉಂಬಳಿಯಾಗಿ ಸಾಗು ಭೂಮಿಯನ್ನು ನೀಡಿ, ಅದರಲ್ಲೂ ಮುಖ್ಯವಾಗಿ ಸಾಗುವಳಿಗೆ (ಕೃಷಿಗೆ) ಒಳಪಟ್ಟ ಜಮೀನಿಗೆ ಒತ್ತಾಗಿ ಸುತ್ತುವರೆದಿರುವ ಕಾಡು ಪ್ರದೇಶವನ್ನು ಆಯಾ ಸಾಗುವಳಿದಾರರಿಗೆ ಮೇಲ್ವಿಚಾರಣೆ ನೀಡಿ ಆ ಪ್ರದೇಶಗಳನ್ನು ತಮ್ಮ ಸ್ವಂತ ಅಥವಾ ಗೃಹಕೃತ್ಯಗಳಿಗಷ್ಟೇ ಬಳಸಿಕೊಳ್ಳುವ ಅವಕಾಶವನ್ನು ಹೊರತುಪಡಿಸಿ ಮಿಕ್ಕ ಹಕ್ಕುಗಳನ್ನು  ಮಹಾರಾಜರೇ ಕಾಯ್ದಿರಿಸಿಕೊಂಡಿದ್ದರು. ಇಂದಿಗೂ ಸಹ ಇವುಗಳ ಹಕ್ಕುಗಳನ್ನು (ಸಾರ್ವಭೌಮಿಕೆಯನ್ನು) ಸರ್ಕಾರವೇ ಕಾಯ್ದಿರಿಸಿಕೊಂಡಿದೆ.

ಆದರೇ, ಇತ್ತೀಚಿನ ದಿನಗಳಲ್ಲಿ ಕಾಫಿ ಅಥವಾ ಕಾರ್ಡಮಾಮ್ (ಏಲಕ್ಕಿ) ಅಥವಾ ಇತರೇ ಬೆಳೆಗಳನ್ನು ಬೆಳೆಯುವ ಅತೀ ಆಸೆಯಿಂದ ತಮ್ಮ ಕೃಷಿ ಜಮೀನಿಗೆ ಸುತ್ತುವರೆದ ಜಮ್ಮಾ-ಬಾಣೆ ಪ್ರದೇಶಗಳನ್ನು ಸಾಗುವಳಿಗೆ ಪರಿವರ್ತಿಸುವ ಕಾರಣ ನೀಡಿ ಕಂದಾಯ ಇಲಾಖೆಯಿಂದ ಅಕ್ರಮವಾಗಿ ಪ್ರಮಾಣ ಪತ್ರಗಳನ್ನು (ಸಿ.ಆರ್.ಸಿ ಮತ್ತು ಸಿ.ಡಿ.ಆರ್.ಸಿ) ಪಡೆದು ಕರನಿರ್ಧರಣೆಗೆ ಒಳಪಡಿಸಿ ಕಂದಾಯ ಪಾವತಿಸುವ ಮೂಲಕ ಹಕ್ಕು ಸಾಧಿಸುವುದು ಮತ್ತು ಮಾರಾಟ ಮಾಡುವುದನ್ನು ಮಾಡಲಾಗಿದೆ. (ಕಾನೂನುಬದ್ದವಾಗಿ ಈ ಬಾಣೆ ಜಮೀನುಗಳನ್ನು ವರ್ಗಾಯಿಸುವಂತಿಲ್ಲ). ಹಲವುಬಾರಿ ಇಂತಹ ಅಕ್ರಮಗಳ ವಿರುದ್ದ ಪರಿಸರವಾದಿಗಳ ಪ್ರತಿಭಟನೆಗಳು ನಡೆದೂ ಇದ್ದವು.

ಕಾರಣ, ಜಮ್ಮಾ-ಬಾಣೆ ಜಮೀನುಗಳು ಸೇರಿದಂತೆ ಸುಮಾರು 1,34,657 ಹೆಕ್ಟೆರ್ ವಿಸ್ತೀರ್ಣದಷ್ಟು ಅರಣ್ಯ ಪ್ರದೇಶವನ್ನು ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಜಮ್ಮಾ-ಬಾಣೆಗಳ ಹಿಡುವಳಿದಾರರಿಂದ ಸುಮಾರು 30.000 ಹೆಕ್ಟೆರ್‌ಗಳಷ್ಟು ಪ್ರದೇಶ ಅರಣ್ಯಪ್ರದೇಶದ ಕಾಫಿ ಬೆಳೆಯ ಹೆಸರಿನಲ್ಲಿ ಒತ್ತುವರಿಯಾಗಿದೆ. ಹಲವು ಸಂದರ್ಭಗಳಲ್ಲಿ, ಜಮ್ಮಾ-ಬಾಣೆ ಜಮೀನುಗಳ ಹಿಡುವಳಿಯ ಅಕ್ರಮ-ಸಕ್ರಮ ಮಾಡಿಸಿಕೊಳ್ಳುವ ಪ್ರಯತ್ನದಿಂದ, ಸರ್ಕಾರ ಮತ್ತು ಹಿಡುವಳಿದಾರರ ನಡುವೆ ಕಾನೂನು ಸಮರಗಳು ಏರ್ಪಟ್ಟು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಜಮ್ಮಾ-ಬಾಣೆ ಜಮೀನಿನ ಮೇಲಿನ ಸರ್ಕಾರದ ಹಕ್ಕನ್ನು ಧೃಡೀಕರಿಸಿವೆ. ಈ ತೀರ್ಪುಗಳ ಅನ್ವಯ ಸರ್ಕಾರ ಜಮ್ಮಾ-ಬಾಣೆ ಜಮೀನುಗಳ ಅಕ್ರಮಗಳನ್ನು ನಿಯಂತ್ರಿಸುವ ಸಲುವಾಗಿ ಸಾಕಷ್ಟು ಕಟ್ಟು-ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಿತು. ಉದಾಹರಣೆಗೆ ದಿನಾಂಕ 31.10.2006ರಲ್ಲಿ ಕಂದಾಯ ಇಲಾಖೆಯ ಪ್ರದಾನ ಕಾರ್ಯದರ್ಶಿಗಳು ಸುತ್ತೋಲೆಯನ್ನು ಹೊರಡಿಸಿ, “ಕೊಡಗು ಜಿಲ್ಲೆಯಲ್ಲಿನ ಬಾಣೆ  ಜಮೀನುಗಳ ಬಗ್ಗೆ ನೀಡಿರುವ ವಿಶೇಷಾಧಿಕಾರ ಸೀಮಿತವಾಗಿದ್ದು, ಈ ಜಮೀನುಗಳ ಪರಿವರ್ತನೆಗೆ ಅವಕಾಶವಿಲ್ಲ. ಆದ್ದರಿಂದ, ಈ ಜಮೀನುಗಳನ್ನು ಪರಿವರ್ತನೆಗಳನ್ನು ಕೋರಿ ಬರುವ ಪ್ರಸ್ತಾವನೆಗಳನ್ನು ಪರಿಗಣಿಸದಿರುವಂತೆ,” ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಆ ಜಿಲ್ಲೆಯ ಎಲ್ಲಾ ಸಂಬಂಧಿತ ಕಂದಾಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬಾಣೆ ಜಮೀನುಗಳಿಗೆ ಈಗಾಗಲೇ ಅನುಮತಿಯನ್ನು ನೀಡಿದ್ದಲ್ಲಿ ಅದನ್ನು ರದ್ದುಪಡಿಸಿ ಆ ಜಮೀನುಗಳನ್ನು ಬಾಣೆ ಜಮೀನುಗಳನ್ನಾಗಿಯೆ ಮುಂದುವರೆಸಲೂ ಸಹ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದರು.

Karnataka High Court

Karnataka High Court

ಇಷ್ಟಲ್ಲದೆ, ಕರ್ನಾಟಕದ ಉಚ್ಛ ನ್ಯಾಯಾಲಯ ದಿನಾಂಕ 22-10-1993ರಂದು ನೀಡಿದ  ತೀರ್ಪನ್ನು ಉಲ್ಲೇಖಿಸುತ್ತಾ, ಜಮ್ಮಾ ಬಾಣೆ ಜಮೀನನ್ನು ಹೊದಿರುವವರು ಅದರ ಒಡೆಯರಾಗಲು ಸಾಧ್ಯವಿಲ್ಲ. ಆದ್ದರಿಂದ, ಅವರು ಬರೀ ವಿಶೇಷಾಧಿಕಾರಗಳಿಗೆ ಮಾತ್ರ ಅರ್ಹರು ಮತ್ತು ಸದರಿ ಬಾಣೆ ಜಮೀನನ್ನು ಮಾರಾಟ ಮಾಡುವ ಹಕ್ಕು ಅವರಿಗಿರುವುದಿಲ್ಲ. ಕರ್ನಾಟಕ ಭೂಕಂದಾಯ ಅಧಿನಿಯಮದ ಪರಿಛ್ಛೇದ 79 ರಲ್ಲಿಯೂ ಈ ವಿಶೇಷಾಧಿಕಾರಗಳನ್ನು ರಕ್ಷಿಸಲಾಗಿದ್ದು ಅನುಭವದಾರರು ಬಾಣೆ ಜಮೀನಿನ ಮಾಲೀಕತ್ವದ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಇದು ಕರ್ನಾಟಕದ ಉಚ್ಛ ನ್ಯಾಯಾಲಯದ ಪೂರ್ಣಪೀಠದ ತೀರ್ಪಾಗಿದ್ದು. ಇದನ್ನು ಯಾರೂ ಪ್ರಶ್ನಿಸಿಲ್ಲವಾದ್ದರಿಂದ ಇಂದಿಗೂ ನಿರ್ಣಾಯಕವಾಗಿದೆ ಎಂದು ಹೇಳಲಾಗಿತ್ತು.

ಆದರೂ, ಹಿಡುವಳಿದಾರರು ತಮ್ಮ ರಾಜಕೀಯ ಪ್ರಭಾವ ಬೀರಿ ಇಲಾಖೆಗಳು ಯಾವುದೇ ಕ್ರಮಕೈಗೊಳ್ಳದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.

ಇದೇ ಸಮಯವನ್ನರಿತ ಕೆಲವು ಕೊಡವ ರಾಜಕಾರಣಿಗಳು ಈ ವಿಷಯವನ್ನು ರಾಜಕೀಯಗೊಳಿಸಿದರು. ಕೆಲವು ರಾಜಕಾರಣಿಗಳು ಕೊಡಗನ್ನು ಅರಣ್ಯ ಪ್ರದೇಶವಾಗಿ ಗುರ್ತಿಸಿ ಅಮೇರಿಕಾಗೆ ಮಾರಾಟ ಮಾಡಲು ಹೊರಟ್ಟಿದ್ದಾರೆ ಎಂದು ತರ್ಕಕ್ಕೆ ನಿಲ್ಲದ ಹೇಳಿಕೆ ನೀಡಿ ಜನತೆಯನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರೆ, ಇನ್ನೂ ಕೆಲವರು ಪ್ರತ್ಯೇಕ ರಾಜ್ಯದ ಬೇಡಿಕೆಗಳಿಗೆ ಈ ವಿಷಯವನ್ನೇ ಬಂಡವಾಳ ಮಾಡಿಕೊಳ್ಳಲು ಪ್ರಯತ್ನಿಸಿದರು, ಮತ್ತು ಈಗಲೂ ಪ್ರಯತ್ನಿಸುತ್ತ ಇದ್ದಾರೆ. ಇವುಗಳ ಪರಿಣಾಮವೆ ಕೊಡಗಿನಲ್ಲಿ 2006ನೇ ಇಸವಿಯ ನವೆಂಬರ್ ಒಂದರಂದು ನಡೆದ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಘಟಿಸಿದ ಅನುಚಿತ ಘಟನೆಗಳು.

ಆದರೆ ಹಾಲಿ ಸರ್ಕಾರವು ಸಮಯಸಾಧಕನಂತೆ ತನ್ನ ಆಡಳಿತ ಅವಧಿಯ ಪ್ರಾರಂಭದಲ್ಲಿ ಕೊಡಗು ಜಿಲ್ಲೆಯಲ್ಲಿರುವ ಜಮ್ಮಾ ಬಾಣೆಗೆ ಜಮೀನಿನ ಒಡೆತನ ಸರ್ಕಾರಕ್ಕೆ ಸೇರಿದೆ ಎಂದು ಹೊರಡಿಸಲಾಗಿರುವ ಸುತ್ತೋಲೆಯನ್ನು ರದ್ದುಗೊಳಿಸಿ ದಿನಾಂಕ 31.10.2006ಕ್ಕಿಂತ ಮುಂಚಿತವಾಗಿ ಪರಿವರ್ತಿಸಲ್ಪಟ್ಟ ಜಮೀನುಗಳಿಗೆ ಹಕ್ಕು ಪ್ರಾಪ್ತಿ ಮಾಡಿ ಸಕ್ರಮಗೊಳಿಸಿತ್ತು. ಈಗ, ಮತ್ತೂ ಮುಂದುವರಿದು ದಿನಾಂಕ 04.11.2011ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮ್ಮಾ ಬಾಣೆ ಅರಣ್ಯ ಇಲಾಖೆಗೆ ಸೇರಿದ್ದಲ್ಲ: ಬದಲಿಗೆ ಹಿಡುವಳಿದಾರರಿಗೆ ಸೇರಿದ್ದು ಎಂದು ನಿಯಮಗಳಿಗೆ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ಈ ನಡೆ ಹಲವು ಸಂಶಯಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿಯವರು ಕೊಡಗಿನ ಬೆ.ಜೆ.ಪಿ.ಯ ಶಾಸಕರ ಮತ್ತು ಅವರ ಬೆಂಬಲಿತ ಜಮ್ಮಾ ಬಾಣೆ ಹಿಡುವಳಿದಾರರ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು, ತಮ್ಮ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನಕ್ಕೆ ಎಳ್ಳು-ನೀರು ಬಿಟ್ಟಿದ್ದು, ಇದು ಸಂಪೂರ್ಣವಾಗಿ ಭೂಮಾಲೀಕರ ಹಿತಕಾಯುವ ವಿವೇಚನೆಯಿಲ್ಲದ ಕ್ರಮವಾಗಿದೆ. ಅರಣ್ಯ ರಕ್ಷಣೆಯ ಜವಾಬ್ದಾರಿ ಹೊತ್ತ ಸರ್ಕಾರ ಸ್ವಷ್ಟ ಕಾರಣವಿಲ್ಲದೆ ಕೇವಲ ತಮ್ಮ ಬೆಂಬಲಿತ ಮತದಾರರ ಹಿತಕಾಯುವುದು, ಅದೂ ಅಕ್ರಮವೆಂದು ತೋರಿದ ಕ್ರಮದಿಂದ, ಎಷ್ಟು ಸರಿ?

ಇಲ್ಲಿ ಈಗ ಮುಖ್ಯವಾಗಿ, ಕಂದಾಯ ದಾಖಲೆಗಳಲ್ಲಿ ತೋರಿಸಿರುವ ವಿಸ್ತೀರ್ಣಕ್ಕಿಂತ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಅರಣ್ಯ ಪ್ರದೇಶದ ಹಿಡಿತವನ್ನು ತಪ್ಪಿಸಿ, ಅದರ ದುರ್ಬಳಕೆಯನ್ನು ರಕ್ಷಿಸಬೇಕಾಗಿದೆ. ಹಾಗೂ ಮುಖ್ಯ ಹೆದ್ದಾರಿಗಳಿಗೆ ಹೊಂದಿಕೊಂಡಂತಿರುವ ಬಾಣೆ ಜಮೀನುಗಳನ್ನು ಅಥವಾ ಅರಣ್ಯ ಪ್ರದೇಶಗಳನ್ನು ರೆಸಾರ್ಟ್‌ಗಳಿಗಾಗಿ, ಅಪಾರ್ಟ್‌ಮೆಂಟ್‌ಗಳಿಗಾಗಿ, ನಿವೇಶನಗಳಿಗಾಗಿ ಮತ್ತು ವಿಲ್ಲಾಸ್‌ಗಳಿಗಾಗಿ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಕ್ರಮವಾಗಿ ಸ್ವಾಧೀನ ಪಡಿಸಿಕೊಳ್ಳುತ್ತಿದ್ದಾರೆ ಮತ್ತು ಕೆಲವು ಜಾಗಗಳಲ್ಲಿ ಅಕ್ರಮವಾಗಿ ಗಣಿಗಾರಿಕೆಯನ್ನೂ ನೆಡೆಸುತ್ತಿದ್ದಾರೆ. ಇವುಗಳನ್ನು ಸಹ ನಿಯಂತ್ರಿಸಬೇಕಿದೆ.

ಎಲ್ಲದಕ್ಕಿಂತ ಮುಖ್ಯವಾಗಿ, ನಮ್ಮ ರಾಜ್ಯದಲ್ಲಿ ವ್ಯಕ್ತಿಯೊಬ್ಬ ಹೊಂದಿರಹುದಾದ ಕೃಷಿಭೂಮಿಯ ಭೂಮಿತಿಯು ಗರಿಷ್ಟ 54 ಎಕರೆಗಳನ್ನು ಮೀರುವಂತಿಲ್ಲ. ಆದರೆ, ಕೊಡಗಿನ ಪ್ರದೇಶದಲ್ಲಿ ಪ್ರತಿ ಸಾಗುವಳಿದಾರು ತನ್ನ ಕೃಷಿ ಜಮೀನಿಗೆ (ಕೃಷಿ ಜಮೀನನ್ನು ಹೊರತುಪಡಿಸಿ) ಒತ್ತಾಗಿ 50 ರಿಂದ 200 ಹೆಕ್ಟೆರ್‌ಗಳಿಗಿಂತ ಮಿಗಿಲಾಗಿ (ಅಂದರೆ 100 ರಿಂದ 500 ಎಕರೆಗಳಿಗೂ ಮಿಗಿಲಾಗಿ) ಜಮ್ಮಾ-ಬಾಣೆ ಜಮೀನುಗಳ ಹಿಡುವಳಿಯನ್ನು ಹೊಂದಿರುತ್ತಾರೆ. ಈ ಹಿಡುವಳಿಯನ್ನು ಕಾನೂನುಬದ್ದಗೊಳಿಸಿದಾಗ ನಿಯಮಬದ್ಧನಾಗಿ ರಾಜ್ಯದಲ್ಲಿ ಸಾಮಾನ್ಯನ ಹಿಡುವಳಿ ಹೊಂದುವ ಭೂಮಿಯ ಪ್ರಮಾಣಕ್ಕಿಂತ ಹೆಚ್ಚಾಗಿ ಇರುವುದರಿಂದ ಬಾಣೆ ಜಮೀನಿನ ಒಡೆತನ ಕಾನೂನಿಗೇ ವಿರುದ್ಢವಾಗಿರುತ್ತದೆ.

ಈ ಎಲ್ಲಾ ಕಾರಣಗಳಿಂದಲೇ, 100 ಎಕರೆಗಳಿಗೂ ಹೆಚ್ಚು ಜಮೀನುಗಳನ್ನು ಹೊಂದಿರುವವರನ್ನು ಭೂಪರಿಮಿತಿಯಿಂದ ವಿನಾಯ್ತಿ ನೀಡಿ ಸಕ್ರಮಗೊಳಿಸುವ ಸರ್ಕಾರದ ಪ್ರಯತ್ನ ಎಷ್ಟು ಸರಿ?. ಜಮ್ಮಾ-ಬಾಣೆ ಪ್ರದೇಶಗಳನ್ನು ಪ್ಲಾಂಟೇಶನ್ ಹೆಸರಿನಲ್ಲಿ ಸಕ್ರಮ ಮಾಡುವುದಾದರೆ ಇದಕ್ಕೆ ಕಾನೂನಿನ ಮಾನ್ಯತೆ ಇದೆಯೇ? ಯಾವುದೇ ಅಕ್ರಮ-ಸಕ್ರಮಗೊಳಿಸುವಲ್ಲಿ ಸೂಕ್ತ ಮಾನದಂಡಗಳನ್ನು, ನಿಯಮಗಳನ್ನು, ಪರಿಸರ ಸಂಬಂಧಿ ವಿಷಯಗಳನ್ನು ಅಳವಡಿಸಿಕೊಳ್ಳದಿದ್ದಲ್ಲಿ ಈ ಎಲ್ಲಾ ಅಕ್ರಮಗಳಿಗೆ  ಸರ್ಕಾರವೇ ಕುಮ್ಮಕ್ಕು ಕೊಟ್ಟಂತಾಗುತ್ತದೆ. ಇದು ಸರಿಯೇ?

(ಚಿತ್ರಕೃಪೆ: ವಿಕಿಪೀಡಿಯ)

Karnataka High Court

ನಿಂತ ನೀರಾಗಿ ಕೊಳೆತವರು

ಕಳೆದ ವಾರ ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಭವಿಸಿದ ಆಘಾತಕಾರಿ ಸಂಗತಿ ಯಾವುದೇ ಕನ್ನಡ ಮಾಧ್ಯಮಗಳಲ್ಲಿ ಸುದ್ಧಿಯಾಗಲಿಲ್ಲ. ಆದರೆ, ಎಲ್ಲಾ ಇಂಗ್ಲೀಷ್ ಪತ್ರಿಕೆಗಳು ಇದನ್ನು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿ ಜೊತೆಗೆ ಸಂಪಾದಕೀಯ ಬರೆದು ಆತಂಕ ವ್ಯಕ್ತಪಡಿಸಿದವು.

ಕರ್ನಾಟಕದಲ್ಲಿ ಖಾಲಿ ಇರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಹೈಕೋರ್ಟ್, ಏಳು ವರ್ಷ ಸೇವೆ ಸಲ್ಲಿಸಿರುವ ವಕೀಲರಿಗಾಗಿ ಅರ್ಹತೆ ಪರೀಕ್ಷೆಯೊಂದನ್ನು ಕಳೆದ ವಾರ ಏರ್ಪಡಿಸಿತ್ತು. 518 ಮಂದಿ ವಕೀಲರು ಪಾಲ್ಗೊಂಡಿದ್ದ ಈ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಒಬ್ಬ ವಕೀಲ ಮಾತ್ರ. ಉಳಿದ 517 ಮಂದಿ ವಿಫಲರಾಗಿರುವುದು ಇವರ ವಕೀಲಿ ವೃತ್ತಿ ಬಗೆಗಿನ ಬದ್ಧತೆ ಮತ್ತು ಅಧ್ಯಯನದ ಕೊರತೆಯನ್ನು ಅನಾವರಣಗೊಳಿಸಿದೆ.

ಈ ಕುರಿತಂತೆ ಆತಂಕ ವ್ಯಕ್ತಪಡಿಸಿರುವ ಬಹುತೇಕ ಸುದ್ದಿ ಮಾಧ್ಯಮಗಳು, ದೇಶದ ಅತ್ಯಂತ ಪ್ರತಿಷ್ಠಿತ ಕಾನೂನು ಕಾಲೇಜು ಇರುವ ಬೆಂಗಳೂರಿನಲ್ಲಿ ಇಂತಹ ಸಂಗತಿ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸುವುದರ ಜೊತೆಗೆ, ಇಂದಿಗೂ ಭಾರತದ ಅನೇಕ ಕೆಳಹಂತದ ನ್ಯಾಯಾಲಯಗಳಲ್ಲಿ ಸಂಕ್ಷಿಪ್ತವಾಗಿ ತೀರ್ಪು ಬರೆಯಲಾರದ ನ್ಯಾಯಾಧೀಶರುಗಳಿದ್ದಾರೆ ಎಂದು ವ್ಯಂಗ್ಯವಾಡಿವೆ.

ಇಂದು ಕಾನೂನು ಜ್ಞಾನಶಿಸ್ತುಗಳಲ್ಲಿ ಒಂದಾಗಿದ್ದು ಹಲವು ಶಾಖೆಗಳಾಗಿ ಕವಲೊಡೆದಿದೆ. ಕಾನೂನು ಪದವಿಯ ಸಂದರ್ಭದಲ್ಲಿ ಹನ್ನೆರಡಕ್ಕೂ ಮೇಲ್ಪಟ್ಟ ವಿವಿಧ ವಿಷಯಗಳ ಕಾನೂನನ್ನು ಅಧ್ಯಯನ ಮಾಡುವುದು ಕಡ್ಡಾಯ. ಪದವಿಯ ನಂತರ ಯಾವುದೇ ವ್ಯಕ್ತಿ ವೃತ್ತಿಯ ಸಂದರ್ಭದಲ್ಲಿ ತನಗೆ ಇಷ್ಟವಾದ ಕಾನೂನು ಶಾಖೆಯೊಂದನ್ನು ಮುಂದುವರಿಸಿಕೊಂಡು ಹೋಗುತ್ತಾನೆ. ಇದು ಕಾನೂನು ಪರಿಣಿತಿಯಲ್ಲಿ ಅವಶ್ಯ ಕೂಡ ಹೌದು. ಹಾಗಾಗಿ ಇಂದು ನಾವು ಎಲ್ಲೆಡೆ ಕ್ರಿಮಿನಲ್ ಲಾ, ಸಿವಿಲ್ ಲಾ, ಕಂಪನಿ ಲಾ, ಅಂತಾರಾಷ್ಟ್ರೀಯ ಕಾನೂನು, ಹಿಂದೂ ಕಾನೂನು ಹೀಗೆ ಈ ವಿಷಯಗಳಲ್ಲಿ ಪರಿಣಿತ ಹಾಗೂ ತಜ್ಞ ವಕೀಲರನ್ನು ನಾವು ಕಾಣುತ್ತಿದ್ದೇವೆ. ಹಾಗೆಂದ ಮಾತ್ರಕ್ಕೆ ಪರಿವರ್ತನಾ ಮತ್ತು ಚಲನಶೀಲವಾದ ಸಮಾಜದಲ್ಲಿ ಕಾಲಕ್ಕೆ ತಕ್ಕಂತೆ ಪರಿಷ್ಕರಣೆಗೆ ಒಳಗಾಗುತ್ತಿರುವ ಕಾನೂನುಗಳ ಬಗ್ಗೆ ವಕೀಲಿ ವೃತ್ತಿಯಲ್ಲಿ ತೊಡಗಿಸಿಕೊಂಡವರು ಅಧ್ಯಯನ ಮಾಡುವುದು ಅಗತ್ಯ.ವಿಲ್ಲ ಎಂದು ಭಾವಿಸುವುದು ಅವಿವೇಕತನದ ಪರಮಾವಧಿಯಾಗುತ್ತದೆ.

ವರ್ತಮಾನದ ವಕೀಲಿ ವೃತ್ತಿ ಆಶಾದಾಯಕ ವೃತ್ತಿಯಾಗಿಲ್ಲ. ಆದರೂ ಕಾನೂನು ಅಧ್ಯಯನಕ್ಕೆ ಯುವ ಜನಾಂಗ ಆಸಕ್ತಿ ತೋರುತ್ತಿದ್ದು, ಪದವಿಯ ನಂತರ ಸ್ವತಂತ್ರ ವೃತ್ತಿಗಿಂತ ಬಹುರಾಷ್ಟ್ರೀಯ ಕಂಪನಿಗಳಲ್ಲಿ ದೊರೆಯುತ್ತಿರುವ ಉದ್ಯೋಗದತ್ತ ಒಲವು ತೋರುತ್ತಿದ್ದಾರೆ. ಆದರೆ ದಶಕಗಳ ಹಿಂದೆ ಕಾನೂನು ಪದವಿ ಮುಗಿಸಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ನಮ್ಮ ವಕೀಲರಿಗೆ ವೃತ್ತಿ ಮತ್ತು ಅದರ ಘನತೆಗಿಂತ ಸಂಘಟನೆ ಮತ್ತು ರಾಜಕೀಯ ಮುಖ್ಯವಾಗಿದೆ.

Karnataka High Court

Karnataka High Court

ಕರ್ನಾಟಕದಲ್ಲಿ ಇಂದು ವಕೀಲರ ಸಂಘ, ವಕೀಲರ ಪರಿಷತ್ ಹೀಗೆ ಹಲವು ಬಣಗಳು ಹುಟ್ಟಿಕೊಂಡು ಇವುಗಳ ಚುನಾವಣೆ ಮತ್ತು ಚುನಾವಣೆಯ ಸಂದರ್ಭದಲ್ಲಿ ವಕೀಲರ ವರ್ತನೆ ಯಾವ ರಾಜಕೀಯ ಪಕ್ಷಕ್ಕೂ ಕಡಿಮೆ ಇಲ್ಲ. ತಮ್ಮ ವೃತ್ತಿಯ ಘನತೆ ತೊರೆದು ರಾಜಕೀಯ ಪಕ್ಷಗಳೊಂದಿಗೆ ಹಲವು ವಕೀಲರು ಗುರುತಿಸಿಕೊಂಡಿದ್ದರೆ, ಮತ್ತಷ್ಟು ವಕೀಲರು ಯಾವ ಅಳುಕೂ ಇಲ್ಲದೆ ಕೋಮುವಾದಿ ಪಕ್ಷಗಳೊಂದಿಗೆ ಕೈ ಜೋಡಿಸಿ ಬೀದಿಗಿಳಿದು ಪ್ರತಿಭಟಿಸುವುದು, ರಸ್ತೆತಡೆ ಮಾಡುವುದನ್ನು ನಾವು ಕಾಣುತ್ತಿದ್ದೇವೆ.

ಇವರೆಲ್ಲರೂ ಒಮ್ಮೆ ತಮ್ಮ ಅರ್ಹತೆಯ ಬಗ್ಗೆ ತಮ್ಮ ತಮ್ಮ ಆತ್ಮಸಾಕ್ಷಿಗೆ ಪ್ರಶ್ನೆ ಹಾಕಿಕೊಳ್ಳುವುದು ಒಳಿತು. ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡ ಪ್ರತಿ ಮೂರು ವರ್ಷಕ್ಕೊಮ್ಮೆ ಇವರಿಗೆಲ್ಲಾ ಕಡ್ಡಾಯವಾಗಿ ಪರೀಕ್ಷೆ ನಡೆಸಿ ವಕೀಲಿ ವೃತ್ತಿಗೆ ಅನುಮತಿ ನೀಡುವುದನ್ನು ಚಾಲನೆಗೆ ತಂದರೆ ನಮ್ಮ ನ್ಯಾಯಾಂಗ ವ್ಯವಸ್ಥೆ ಒಂದಿಷ್ಟು ಸುಧಾರಣೆ ಕಾಣಬಹುದು. ಇಂತಹ ದುರ್ಗತಿ ಕೇವಲ ವಕೀಲ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ.

ಕಳೆದ ಆಗಸ್ಟ್ 15ರಂದು ಸ್ವತಂತ್ರ ದಿನಾಚರಣೆಯ ಸಂದರ್ಭದಲ್ಲಿ ಖಾಸಗಿ ಚಾನಲ್ ಒಂದು ನಮ್ಮ ಸರಕಾರಿ ಶಾಲಾ ಶಿಕ್ಷಕರಿಗೆ, ಸ್ವತಂತ್ರ ಬಂದು ಎಷ್ಟು ವರ್ಷಗಳಾದವು?, ಮಹಾತ್ಮಗಾಂಧಿಯ ಪೂರ್ಣ ಹೆಸರೇನು?, ನೆಹರು ಪುತ್ರಿ ಯಾರು?, ಜಲಿಯನ್ ವಾಲಾಬಾಗ್ ಎಲ್ಲಿದೆ? ಎಂಬ ಪ್ರಶ್ನೆಗಳನ್ನು 50ಕ್ಕೂ ಹೆಚ್ಚು ಶಿಕ್ಷಕರ ಎದುರು ಇಟ್ಟಿತ್ತು. ಇವುಗಳಿಗೆ ಒಂದಿಬ್ಬರು ಹೊರತುಪಡಿಸಿದರೆ ಉಳಿದವರೆಲ್ಲಾ ಕ್ಯಾಮೆರಾ ಎದುರು ತಮ್ಮ ಅಜ್ಞಾನವನ್ನು ಪ್ರದರ್ಶಿಸಿದರು. ಇವರೆಲ್ಲಾ ನಮ್ಮ ಸಮಾಜದ ಭಾಗವಾಗಿರುವುದು ವರ್ತಮಾನದ ದುರಂತಗಳಲ್ಲಿ ಒಂದು.

– ಡಾ.ಎನ್.ಜಗದೀಶ್ ಕೊಪ್ಪ

Karnataka High Court

ಸುಪ್ರೀಂಕೋರ್ಟಿನ ತೀರ್ಪು ರಾಜ್ಯದ ಹೈಕೋರ್ಟನ್ನೂ ಟೀಕಿಸಿಲ್ಲವೆ?

(ಈ ಲೇಖನ ಸುಮಾರು ಮೂರು ತಿಂಗಳಿನ ಹಿಂದೆ (16/05/11) ಬರೆದದ್ದು. ಕಾರಣಾಂತರಗಳಿಂದ ಇದು ಪ್ರಕಟವಾಗಬೇಕಾದ ಕಡೆ ಪ್ರಕಟವಾಗಲಿಲ್ಲ. ನೆನ್ನೆ (18/08/11) ರಾಜ್ಯಸಭೆಯಲ್ಲಿ ಬಂಗಾಳದ ಹೈಕೋರ್ಟ್ ನ್ಯಾಯಾಧೀಶರನ್ನು ಕೆಲಸದಿಂದ ವಜಾ ಮಾಡುವ ಪ್ರಕ್ರಿಯೆ ಮೇಲೆ ಚರ್ಚೆ ಮತ್ತು ಮತ ಚಲಾವಣೆ ನಡೆದು ಜಡ್ಜ್ ವಿರುದ್ದ ತೀರ್ಮಾನ ಕೈಗೊಳ್ಳಲಾಗಿದೆ. ಅದೇ ಪ್ರಕ್ರಿಯೆ ಲೋಕಸಭೆಯಲ್ಲಿ ಪೂರ್ಣಗೊಂಡಾಗ ಆ ಜಡ್ಜ್ ವಜಾ ಆಗಲಿದ್ದಾರೆ. ಆದರೆ, ನ್ಯಾಯಾಧೀಶರ ಭ್ರಷ್ಟಾಚಾರದ ವಿರುದ್ಧ ಮಾತು ಕೇಳಬರುತ್ತಿರುವುದು ಇದೇ ಮೊದಲಲ್ಲ. ಲೊಕಪಾಲ ಮಸೂದೆಯಲ್ಲಿ ನ್ಯಾಯಾಂಗವನ್ನು ಹೊರಗಿಡುವ ಬಗ್ಗೆ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಮೂರು ತಿಂಗಳ ಹಿಂದೆ ಬರೆದ ಈ ಲೇಖನ ಈಗಲೂ ಪ್ರಸ್ತುತ ಇಂದು ಇಲ್ಲಿ ಪ್ರಕಟಿಸುತ್ತಿದ್ದೇನೆ… ರವಿ…)

Karnataka High Courtಕಳೆದ ಶುಕ್ರವಾರ ( ಮೇ 13, 2011 )  ಸುಪ್ರೀಂಕೋರ್ಟ್ ಕರ್ನಾಟಕದ 16 ಶಾಸಕರ ಅನರ್ಹತೆಯನ್ನು ರದ್ದುಪಡಿಸಿ ಆದೇಶ ಹೊರಡಿಸುವುದರ ಜೊತೆಗೆ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು ರಾಜ್ಯದ ಮುಖ್ಯಮಂತ್ರಿಯನ್ನು ಕಟುಶಬ್ದಗಳಲ್ಲಿ ಟೀಕಿಸಿತು. ಆದರೆ, ಇದಕ್ಕೂ ಮುಖ್ಯವಾದುದನ್ನು ಸುಪ್ರೀಂಕೋರ್ಟ್ ನೇರವಾಗಿ ಹೇಳಲಿಲ್ಲ. ಅದೇನೆಂದರೆ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (11 ಬಿ.ಜೆ.ಪಿ. ಶಾಸಕರ ಅನರ್ಹತೆ ಮತ್ತು ಐವರು ಪಕ್ಷೇತರ ಶಾಸಕರ ಅನರ್ಹತೆ) ಕರ್ನಾಟಕ ರಾಜ್ಯದ ಉಚ್ಚನ್ಯಾಯಾಲಯ ಕೊಟ್ಟಿದ್ದ ತೀರ್ಪಿನಲ್ಲಿ ನ್ಯಾಯ ಇರಲಿಲ್ಲ ಎನ್ನುವುದು.

ಕಳೆದ ಅಕ್ಟೋಬರ್ 11ರ ವಿಶ್ವಾಸಮತ ಯಾಚನೆಯ ಹಿಂದಿನ ರಾತ್ರಿ ತರಾತುರಿಯಲ್ಲಿ ವಿಧಾನಸಭೆಯ ಸ್ಪೀಕರ್ ಮೇಲೆ ಉಲ್ಲೇಖಿಸಿದ 16 ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರು. ಅವರು ಹಾಗೆ ಮಾಡಲು ಕಾನೂನು ಮತ್ತು ನ್ಯಾಯಪಾಲನೆಗಿಂತ ಹೆಚ್ಚಾಗಿ ತಮ್ಮ  ಬಿ.ಜೆ.ಪಿ. ಪಕ್ಷದ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಜಯ ಲಭಿಸುವಂತೆ ಮಾಡುವುದೇ ಆಗಿತ್ತು. ಸ್ಪೀಕರ್‌ರ ಈ ಕ್ರಮ ಅನೈತಿಕ ಮತ್ತು ಅಕ್ರಮವಾದದ್ದು ಎಂದು ಎದ್ದು ಕಾಣಿಸುವಷ್ಟು ಲಜ್ಜಾಹೀನವಾಗಿತ್ತು. ಸ್ಪೀಕರ್‌ರ ಈ ಕ್ರಮವನ್ನು ಪ್ರಶ್ನಿಸಿ ಅನರ್ಹಗೊಂಡ ಬಿ.ಜೆ.ಪಿ.ಯ 11 ಬಂಡಾಯ ಶಾಸಕರು, ಮತ್ತು ಐವರು ಪಕ್ಷೇತರ ಶಾಸಕರು ಪ್ರತ್ಯೇಕವಾಗಿ ಹೈಕೋರ್ಟ್‌ಗೆ ದೂರು ನೀಡಿದರು.

ಬಂಡಾಯ ಶಾಸಕರ ಅನರ್ಹತೆಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟಿನ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಮತ್ತು ನ್ಯಾಯಮೂರ್ತಿ ಎನ್. ಕುಮಾರ್ ಸಾಕಷ್ಟು ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಅಕ್ಟೋಬರ್ 18ರಂದು ಪರಸ್ಪರ ಒಮ್ಮತವಿಲ್ಲದ ನ್ಯಾಯತೀರ್ಮಾನಕ್ಕೆ ಬಂದರು. ನ್ಯಾ. ಖೇಹರ್ ಸ್ಪೀಕರ್ ಮಾಡಿದ್ದು ಸರಿ ಎಂದರೆ, ನ್ಯಾ. ಕುಮಾರ್ ಸ್ಪೀಕರ್‌ರ ಕ್ರಮದಲ್ಲಿ ಲೋಪವನ್ನು ಗುರುತಿಸಿದರು. ಹೀಗೆ ಒಮ್ಮತದ ತೀರ್ಪಿಲ್ಲದ ಕಾರಣವಾಗಿ ಈ ಪ್ರಕರಣವನ್ನು ಮೂರನೆ ನ್ಯಾಯಮೂರ್ತಿಯ ಅಭಿಪ್ರಾಯಕ್ಕಾಗಿ ನ್ಯಾ. ಸಭಾಹಿತರಿಗೆ ಕಳುಹಿಸಲಾಯಿತು.

ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿದ ನ್ಯಾ. ಸಭಾಹಿತರು ಅಕ್ಟೋಬರ್ 29ರಂದು ಮುಖ್ಯನ್ಯಾಯಮೂರ್ತಿ ಖೇಹರ್‌ರ ನ್ಯಾಯತೀರ್ಮಾನವನ್ನು ಅನುಮೋದಿಸಿದರು. ಇದರೊಂದಿಗೆ 2:1 ರ ಅನುಪಾತದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯ ಸ್ಪೀಕರ್‌ರ ಕ್ರಮವನ್ನು ಎತ್ತಿಹಿಡಿದು 11 ಬಂಡಾಯ ಶಾಸಕರ ಅನರ್ಹತೆಯನ್ನು ಮಾನ್ಯಗೊಳಿಸಿತು. ಈ ಇಡೀ ಪ್ರಕರಣದಲ್ಲಿ ನಾವು ಗಮನಿಸಬೇಕಾಗಿರುವ ಅತಿಮುಖ್ಯ ಸಂಗತಿ ಏನೆಂದರೆ, ಕರ್ನಾಟಕದ ಉಚ್ಚನ್ಯಾಯಾಲಯದ ದೃಷ್ಟಿಗೆ ಸ್ಪೀಕರ್ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯಲ್ಲಿ ಯಾವುದೇ ಅನೈತಿಕತೆ ಮತ್ತು ಅಕ್ರಮ ಕಾಣಿಸದೆ ಇದ್ದುದು.

ಅನರ್ಹಗೊಂಡ ಬಂಡಾಯ ಶಾಸಕರ ಜೊತೆಜೊತೆಗೆ ಅನರ್ಹಗೊಂಡ ಐವರು ಪಕ್ಷೇತರ ಶಾಸಕರೂ ಕೂಡ ಕರ್ನಾಟಕದ ಉಚ್ಚನ್ಯಾಯಾಲಯಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು. ಆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾ. ಮೋಹನ್ ಶಾಂತನಗೌಡರ್, ನ್ಯಾ. ಅಬ್ದುಲ್ ನಜೀರ್, ಮತ್ತು ನ್ಯಾ. ಎಸ್. ಬೋಪಣ್ಣನವರ ಪೀಠವು ಸುದೀರ್ಘ ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಪಕ್ಷೇತರ ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಯಾವುದೇ ದುರುದ್ದೇಶದಿಂದ ನಡೆದುಕೊಂಡಿಲ್ಲ ಮತ್ತು ಅವರ ಕ್ರಮ ಸರಿ ಎಂಬ ತೀರ್ಪನ್ನು ಫೆಬ್ರವರಿ 15ರಂದು ನೀಡಿತು. ಇಲ್ಲಿ ಒತ್ತಿಹೇಳಬೇಕಾದ ಸಂಗತಿಯೆಂದರೆ ಈ ತೀರ್ಪು ಮೂವರು ನ್ಯಾಯಮೂರ್ತಿಗಳ ಒಮ್ಮತದ ನ್ಯಾಯತೀರ್ಮಾನವಾಗಿದ್ದದ್ದು.

ಹೀಗೆ ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ಕರ್ನಾಟಕದ ಹೈಕೋರ್ಟಿನ ಆರು ನ್ಯಾಯಮೂರ್ತಿಗಳ ಪೈಕಿ ಐವರಿಗೆ ಸ್ಪೀಕರ್‌ರ ಕ್ರಮ ಮತ್ತು ನಡವಳಿಕೆಯಲ್ಲಿ ಯಾವುದೇ ಪಕ್ಷಪಾತ, ದುರುದ್ದೇಶ, ಮತ್ತು ಕಾನೂನು ಮತ್ತು ಸಂವಿಧಾನದ ಉಲ್ಲಂಘನೆ ಕಂಡಿರಲಿಲ್ಲ.

ತಮಗೆ ಸಿಕ್ಕ ನ್ಯಾಯತೀರ್ಮಾನದಿಂದ ತೃಪ್ತರಾಗದ ಎಲ್ಲಾ 16 ಅನರ್ಹ ಶಾಸಕರು ದೆಹಲಿಯ ಸುಪ್ರೀಂಕೋರ್ಟಿಗೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದರು. ಈ ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್ ಪರಿಶೀಲಿಸಿದ ಅದೇ ದಾಖಲೆಗಳನ್ನು ಪುನರ್‌ಪರಿಶೀಲಿಸಿ ಮತ್ತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾ. ಕಬೀರ್ ಮತ್ತು ನ್ಯಾ. ಜೋಸೆಫ್ ಹೈಕೋರ್ಟ್ ತೀರ್ಪಿಗೆ ಸಂಪೂರ್ಣ ವ್ಯತಿರಿಕ್ತವಾದ ಅವಳಿ ತೀರ್ಮಾನವನ್ನು ನೀಡಿದರು. ಅಷ್ಟೇ ಅಲ್ಲದೆ, “ನೈಸರ್ಗಿಕ ನ್ಯಾಯ ಮತ್ತು ನ್ಯಾಯಯುತ ನಡವಳಿಕೆಯ ಅವಳಿ ತತ್ವಗಳ ಪರೀಕ್ಷೆಯಲ್ಲಿ ಸ್ಪೀಕರ್ ಬೋಪಯ್ಯನವರ ಆದೇಶ ಪಾಸಾಗುವುದಿಲ್ಲ. ಸಂವಿಧಾನದ 10ನೇ ಷೆಡ್ಯೂಲಿನಲ್ಲಿ ಕಾಣಿಸಲಾಗಿರುವ ಸಾಂವಿಧಾನಿಕ ನಡವಳಿಕೆಗಳು ಮತ್ತು 1986ರ ಅನರ್ಹತೆ ನಿಯಮಗಳನ್ನು ಉಲಂಘಿಸುವುದಷ್ಟೇ ಅಲ್ಲದೆ ನ್ಯಾಯಯುತ ವಿಚಾರಣೆಯ ಮೂಲತತ್ವವನ್ನು ಕೂಡ ಗಾಳಿಗೆ ತೂರಿದ ಸ್ಪೀಕರ್ ಮುಂದಿದ್ದ ಏಕೈಕ ಗುರಿ ಎಂದರೆ ಯಡಿಯೂರಪ್ಪ ಸರ್ಕಾರವನ್ನು ವಿಶ್ವಾಸಮತದ ಸಂಕಟದಿಂದ ಪಾರುಮಾಡುವುದು. ಸ್ಪೀಕರ್ ಮುಂದೆ ಪರಿಶೀಲನೆಗೆ ಇಟ್ಟಿದ್ದ ಪ್ರಕರಣಕ್ಕೆ ನೇರವಾಗಿ ಸಂಬಂಧ ಪಡದೇ ಇರುವಂತಹ ಬಾಹ್ಯ ಪರಿಗಣನೆಗಳು ಸ್ಪೀಕರ್ ಆದೇಶದ ಮೇಲೆ ಎದ್ದು ಕಾಣಿಸುತ್ತಿವೆ. ಇಂತಹ ಆದೇಶವನ್ನು ತಳ್ಳಿ ಹಾಕಲೇಬೇಕು,” ಎಂದು ಸ್ಪಷ್ಟ ಮಾತುಗಳಲ್ಲಿ ಹೇಳುವ ಮೂಲಕ ಸ್ಪೀಕರ್ ಕ್ರಮವನ್ನು ತಳ್ಳಿಹಾಕಿದ್ದೇ ಅಲ್ಲದೆ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಕೂಡ ಅಮಾನ್ಯಗೊಳಿಸಿದರು.

ಇದರೊಂದಿಗೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‌ನ ವಿಶ್ವಾಸಾರ್ಹತೆ ಮತ್ತು ಅದರ ನ್ಯಾಯಮೂರ್ತಿಗಳ ಸಂವಿಧಾನವನ್ನು ಅರ್ಥೈಸುವ ಸಾಮರ್ಥ್ಯವನ್ನು ಪರೋಕ್ಷವಾಗಿ ಪ್ರಶ್ನಿಸಿದಂತಾಗಿದೆ ಎನ್ನುವ ಅಭಿಪ್ರಾಯಕ್ಕೆ ಸದ್ಯದ ವಿದ್ಯಮಾನಗಳನ್ನು ಗಂಭೀರವಾಗಿ ಗಮನಿಸುತ್ತಿರುವವರು ಬರುವ ಹಾಗೆ ಆಗಿದೆ.

ಕರ್ನಾಟಕದ ಸಮಕಾಲೀನ ರಾಜಕೀಯ ವ್ಯವಸ್ಥೆ ಅತ್ಯಂತ ಭ್ರಷ್ಟವೂ, ಅನೈತಿಕವೂ, ಸ್ವಾರ್ಥಪೂರಿತವೂ ಆಗಿರುವುದನ್ನು ಕಳೆದ ನಾಲ್ಕೈದು ವರ್ಷಗಳ ಇತಿಹಾಸ ಸಾರಿ ಹೇಳುತ್ತಿದೆ. ಈ ಅನೈತಿಕತೆ ಮತ್ತು ಭ್ರಷ್ಟತೆ ರಾಜಕೀಯ ವಲಯಕ್ಕಷ್ಟೆ ಸೀಮಿತವಾಗದೆ ಬೇರೆಲ್ಲ ಸಾರ್ವಜನಿಕ ರಂಗಗಳಿಗೂ ವ್ಯಾಪಿಸುತ್ತ ಬಂದಿದೆ. ಇಂತಹ ನಿರಾಶಾದಾಯಕ ಸಂದರ್ಭದಲ್ಲಿ ಪ್ರಾಮಾಣಿಕರಿಗೆ ಮತ್ತು ದೇಶಪ್ರೇಮಿಗಳಿಗೆ ಉಳಿದಿದ್ದ ಏಕೈಕ ಭರವಸೆ ಎಂದರೆ ಅದು ನಮ್ಮ ಭ್ರಷ್ಟವಾಗಿಲ್ಲದಿದ್ದ ಮತ್ತು ಸಾಮರ್ಥ್ಯದಿಂದ ಕೂಡಿದ್ದ ನ್ಯಾಯಸ್ಥಾನಗಳು. ಈಗ ಮೇಲೆ ಉಲ್ಲೇಖಿಸಿರುವ ಪ್ರಕರಣಗಳಿಂದ ತಾವು ಇಟ್ಟುಕೊಂಡಿದ್ದ ಆ ಒಂದು ಭರವಸೆಯ ಬಗ್ಗೆಯೂ ನಾಗರಿಕರು ಸಂಶಯಾಸ್ಪದಿಂದ ನೋಡುವಂತೆ ಆಗಿದೆ. ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವ ಸಂಶಯ ಇವೆಲ್ಲದರಿಂದ ಗಟ್ಟಿಯಾಗದೆ?

ಸುಪ್ರೀಂಕೋರ್ಟ್ ಕಂಡಂತೆ ಅಕ್ರಮ ಆದೇಶ ಹೊರಡಿಸಿದ್ದ ಸ್ಪೀಕರ್‌ರ ಕ್ರಮ ರಾಜ್ಯದ ಹೈಕೋರ್ಟ್‌ನಲ್ಲಿ ಸಕ್ರಮವಾಗಿ ಮಾನ್ಯತೆ ಪಡೆದಿದ್ದರ ಹಿಂದೆ ಇರುವ ಕಾರಣಗಳಾದರೂ ಏನು? ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿ ಜನರ ಪ್ರಜ್ಞೆಗೂ ಬಂದಿರುವ ನ್ಯಾಯಾಧೀಶರುಗಳ ಭ್ರಷ್ಟಾಚಾರವೆ? ಅಥವ, ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಳ್ಳಲಾಗದ ಅಸಮರ್ಥರೂ ನ್ಯಾಯಮೂರ್ತಿಗಳಾಗಿರುವುದೇ? ಅಥವ, ನ್ಯಾಯಮೂರ್ತಿಗಳ ವೈಯಕ್ತಿಕ ರಾಜಕೀಯ ನಿಲುವುಗಳೂ ಅವರು ಕೊಡುತ್ತಿರುವ ತೀರ್ಪಿನ ಮೇಲೆ ಪ್ರಭಾವ ಬೀರುತ್ತಿರುವುದೆ? ಅಥವ, ಅಧಿಕಾರರೂಢರ ಪರ ಇರುವುದರಿಂದ ತಮ್ಮ ಸವಲತ್ತುಗಳಲ್ಲಿ ಹೆಚ್ಚಳವಾಗುತ್ತದೆಯೆಂಬ ಸ್ವಹಿತಾಸಕ್ತಿಯೆ? ಒಟ್ಟಿನಲ್ಲಿ, ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವುದೇ?

ಈ ಪ್ರಶ್ನೆಗಳು ರಾಜ್ಯದಲ್ಲಿ ಈಗ ನಡೆಯುತ್ತಿರುವ ಎಲ್ಲಾ ರಾಜಕೀಯ ಘಟನೆಗಳಿಗಿಂತ ಮುಖ್ಯವಾಗಿ ಚರ್ಚೆಯಾಗಬೇಕಾದ ಮತ್ತು ಕೂಡಲೇ ಸರಿಪಡಿಸಬೇಕಾದ ವಿಷಯಗಳಾಗಿವೆ. ನ್ಯಾಯಸ್ಥಾನದ ಬಗ್ಗೆ ನಾಗರಿಕರ ನಂಬಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಂದಿಗೂ ನ್ಯಾಯಮೂರ್ತಿಗಳದ್ದೇ ಆಗಿದೆ. ಅಲ್ಲವೆ?

ರವಿ ಕೃಷ್ಣಾ ರೆಡ್ಡಿ